Wednesday, August 5, 2020

ರಾಮಮಂದಿರ ಶಿಲಾನ್ಯಾಸ : ಹಿಂದೂಪರ ಸಂಘಟನೆಗಳಿಂದ ಸಂಭ್ರಮಾಚರಣೆ

ಕರಸೇವಕರಿಗೆ ಸನ್ಮಾನ, ವಿವಿಧೆಡೆ ಸಿಹಿ ಹಂಚಿಕೆ 

ಭದ್ರಾವತಿಯಲ್ಲಿ ಕರಸೇವಕರ ತಂಡದ ಶ್ರಮ ಸಾರ್ಥಕತೆ ಮಿಲನ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ವಿಶ್ವ ಹಿಂದೂ ಪರಿಷತ್ ತಾಲೂಕು ಶಾಖೆ ವತಿಯಿಂದ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಜರುಗಿತು. 
ಭದ್ರಾವತಿ, ಆ. ೫: ದೇಶದ ಬಹುಸಂಖ್ಯಾತರ ಬಹಳ ವರ್ಷಗಳ ಕನಸು ನನಸಾಗಿಸುವ ನಿಟ್ಟಿನಲ್ಲಿ ಶ್ರೀರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇನ್ನಿತರ ಗಣ್ಯರು ಶಿಲಾನ್ಯಾಸ ನೆರವೇರಿಸಿದ ಹಿನ್ನಲೆಯಲ್ಲಿ ನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಸಂಭ್ರಮಾಚರಣೆ ನಡೆಸಲಾಯಿತು. 
ವಿವಿಧೆಡೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಅಲ್ಲದೆ ನಗರದ ಬಿಜೆಪಿ ಪಕ್ಷದ ತಾಲೂಕು ಎಸ್.ಸಿ ಮೋರ್ಚಾ ಬಜರಂಗದಳ, ಕೇಸರಿಪಡೆ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳಿಂದ ಸಿಹಿ ಹಂಚಲಾಯಿತು. 
ಕರ ಸೇವಕರಿಗೆ ಸನ್ಮಾನ : 
೧೯೯೨ರಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ನೇತೃತ್ವದಲ್ಲಿ ಸುಮಾರು ೮೮ ಕರಸೇವಕರು ಆಯೋಧ್ಯೆಗೆ ತೆರಳಿ ಕರ ಸೇವೆಯಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನಲೆಯಲ್ಲಿ ಕರಸೇವಕರ ತಂಡದ ಶ್ರಮ ಸಾರ್ಥಕತೆ ಮಿಲನ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ವಿಶ್ವ ಹಿಂದೂ ಪರಿಷತ್ ತಾಲೂಕು ಶಾಖೆ ವತಿಯಿಂದ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಜರುಗಿತು. 
ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯಸ್ವಾಮಿ ದೇವಸ್ಥಾನದ ಶ್ರೀ ಮುರುಗೇಶ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಪ್ರಮುಖರಾದ  ರಾಘವೇಂದ್ರಚಾರ್, ಎಂ. ಪ್ರಭಾಕರ್, ಶಿವರಾಜ್, ಯಶೋಧ ವೀರಭದ್ರಪ್ಪ, ಜಿ. ಆನಂದಕುಮಾರ್, ಕೆ.ಎನ್ ಶ್ರೀಹರ್ಷ, ಎಚ್.ಎಲ್ ವಿಶ್ವನಾಥ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಬಿ.ಕೆ ಶ್ರೀನಾಥ್, ಕೆ.ಆರ್ ಸತೀಶ್, ಕಾ.ರಾ ನಾಗರಾಜ್, ಟಿ. ವೆಂಕಟೇಶ್, ನರಸಿಂಹಚಾರ್, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. 
ಹಿಂದೂ ಮಹಾಸಭಾ ಹಿಂದೂರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಭವನದಲ್ಲಿ ಸಾರ್ವಜನಿಕರಿಗೆ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಣೆಗೆ ಎಲ್‌ಸಿಡಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. 
ಶಿಲಾನ್ಯಾಸ ವೀಕ್ಷಣೆಗೆ ವ್ಯವಸ್ಥೆ: 
ಹಿಂದೂ ಮಹಾಸಭಾ ಹಿಂದೂರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಭವನದಲ್ಲಿ ಸಾರ್ವಜನಿಕರಿಗೆ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಣೆಗೆ ಎಲ್‌ಸಿಡಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. 
ಕಾರ್ಯಕ್ರಮದ ನೇತೃತ್ವವನ್ನು ಸಮಿತಿ ಅಧ್ಯಕ್ಷ, ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ವಹಿಸಿದ್ದರು. ಪ್ರಮುಖರಾದ ತಾ.ಪಂ. ಸದಸ್ಯ ಕೆ. ಮಂಜುನಾಥ್, ಮಣಿ ಎಎನ್‌ಎಸ್, ಮಂಗೋಟೆರುದ್ರೇಶ್, ಜಿ. ಆನಂದಕುಮಾರ್, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ, ಶೋಭಾ, ಲತಾ ಚಂದ್ರಶೇಖರ್, ಕೇಸರಿಪಡೆ ಗಿರೀಶ್, ಬಿ.ಎಸ್ ಶ್ರೀನಾಥ ಆಚಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

Tuesday, August 4, 2020

ಬಿಎಸ್‌ವೈ ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿ ವಿವಿಧೆಡೆ ಧಾರ್ಮಿಕ ಕಾರ್ಯಕ್ರಮ

ಶ್ರಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಭದ್ರಾವತಿ ಹೊಸಮನೆ ಶ್ರೀ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗು ಹಣ ಹೋಮ ಮತ್ತು ವಿಶೇಷ ಪೂಜೆ ಜರುಗಿತು. 
ಭದ್ರಾವತಿ, ಆ. ೪: ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶೀಘ್ರವಾಗಿ ಗುಣಮುಖರಾಗಿ ಚೇತರಿಸಿಕೊಳ್ಳುವ ಮೂಲಕ ನಾಡಿನ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಪ್ರಾರ್ಥಿಸಿ ತಾಲೂಕಿನ ಹಲವೆಡೆ ವಿವಿಧ ಸಂಘಟನೆಗಳಿಂದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. 
ಶ್ರಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಶ್ರೀ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗು ಹಣ ಹೋಮ ಮತ್ತು ವಿಶೇಷ ಪೂಜೆ ಜರುಗಿತು. 
ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಕದಿರೇಶ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್, ಮುಖಂಡರಾದ ವಿಶ್ವನಾಥ ಕೋಠಿ, ಜಿ. ಆನಂದಕುಮಾರ್, ಎಂ. ಮಂಜುನಾಥ್, ಬಿ.ಎಸ್ ಶ್ರೀನಾಥ್ ಆಚಾರ್, ಹೇಮಾವತಿ, ಸುನೀತಾ, ಮಂಜುಳಾ, ಸರಸ್ವತಿ, ಅನ್ನಪೂರ್ಣ ಸಾವಂತ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು. 
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ವಿವಿಧ ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬಿ.ಎಸ್ ಯಡಿಯೂರಪ್ಪ ಶ್ರೀಘವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. 
ಕೂಡ್ಲಿಗೆರೆ ಗ್ರಾಮದಲ್ಲಿ ವಿಶೇಷ ಪೂಜೆ: 
ತಾಲೂಕಿನ ಕೂಡ್ಲಿಗೆರೆ ಗ್ರಾಮದ ವಿವಿಧ ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬಿ.ಎಸ್ ಯಡಿಯೂರಪ್ಪ ಶ್ರೀಘವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. 
ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಆರ್.ಎನ್ ರುದ್ರೇಶ್, ಪ್ರದೀಪ್, ಮಂಜುನಾಥ್, ತಿರುಮಲೈ, ರುದ್ರಮುನಿ, ಜಯಣ್ಣ, ವೆಂಕಟೇಶ್, ಬಸವರಾಜ್, ಚೇತನ್, ಮಹೇಶ್ವರಪ್ಪ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು. 
ಭದ್ರಾವತಿಯಲ್ಲಿ ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ  ಶ್ರೀ ಜಗದ್ಗುರು ರೇಣುಕಾಚಾರ್ಯ, ಶ್ರೀ ವೀರಭದ್ರೇಶ್ವರ ಸ್ವಾಮಿ ಹಾಗೂ ಶ್ರೀ ಚೌಡೇಶ್ವರಿ ದೇವಿಗೆ ರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಳಾರತಿ, ವಿಶೇಷ ಪೂಜೆ ನೆರವೇರಿಸಲಾಯಿತು. 
ಬಿಳಿಕಿ ಮಠದಲ್ಲಿ ರುದ್ರಾಭಿಷೇಕ: 
ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ಶ್ರೀ ಜಗದ್ಗುರು ರೇಣುಕಾಚಾರ್ಯ, ಶ್ರೀ ವೀರಭದ್ರೇಶ್ವರ ಸ್ವಾಮಿ ಹಾಗೂ ಶ್ರೀ ಚೌಡೇಶ್ವರಿ ದೇವಿಗೆ ರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಳಾರತಿ, ವಿಶೇಷ ಪೂಜೆ ನೆರವೇರಿಸಲಾಯಿತು. 
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ನ್ಯಾಯವಾದಿ ಸುಕುಮಾರ್, ಲೋಕೇಶ್‌ರಾವ್, ಅರ್ಜುನ್‌ರಾವ್, ಪ್ರಕಾಶ್, ಅನಂತಸ್ವಾಮಿ, ಗುರುಪ್ರಸಾದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಬಂಗಾರದ ಸರ ಕಿತ್ತುಕೊಂಡು ಪರಾರಿ

ಭದ್ರಾವತಿ, ಆ. ೪: ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ನೌಕರನೊಬ್ಬನ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. 
ಸುಮಾರು ೨೩ ವರ್ಷದ ಶಿವಮೊಗ್ಗ ವಿನೋಬನಗರ ನಿವಾಸಿ ಕೆ.ಪಿ ಪ್ರತೀಕ್ ಮಾಚೇನಹಳ್ಳಿಯಲ್ಲಿರುವ ಶಾಂತಲ ಸ್ಟೀರೋ ಕಾಸ್ಟಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ಮಿಷನ್ ಆಪರೇಟರ್ ಕೆಲಸ ಮಾಡುತ್ತಿದ್ದು, ಆ.೧ರ ರಾತ್ರಿ ಎರಡನೇ ಪಾಳಿ ಅಂದರೆ ಮಧ್ಯಾಹ್ನ ೩ ಗಂಟೆಯಿಂದ ರಾತ್ರಿ ೧೧ ಗಂಟೆ ವರೆಗೆ ಕೆಲಸ ನಿರ್ವಹಿಸಿ ಮನೆಗೆ ತೆರಳುತ್ತಿದ್ದಾಗ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕೆಇಬಿ ಕಛೇರಿ ಬಳಿ ೪ ಮಂದಿ ಅಪರಿಚಿತ ವ್ಯಕ್ತಿಗಳು ಈತನ ಕುತ್ತಿಗೆಯಲ್ಲಿದ್ದ ಸುಮಾರು ೧೬ ಗ್ರಾಂ ತೂಕದ ಸುಮಾರು ೩೩ ಸಾವಿರ ರು. ಮೌಲ್ಯದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. 
ಈ ಸಂಬಂಧ ನ್ಯೂಟೌನ್ ಪೊಲೀಸ್  ಠಾಣೆಯಲ್ಲಿ ಆ.೩ರ ಸೋಮವಾರ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

ಸೂಕ್ತ ಅಧಿಕಾರಿ ಇಲ್ಲದೆ ಮಾಜಿ ಸೈನಿಕರಿಗೆ ಸಂಕಷ್ಟ

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸೈನಿಕರ ಸಂಘ ಆರೋಪ 

ಭದ್ರಾವತಿಯಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್, ಕಾರ್ಯದರ್ಶಿ ವಿನೋದ್‌ಪೂಜಾರಿ, ಗಿರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಭದ್ರಾವತಿ, ಆ. ೪: ಮಾಜಿ ಸೈನಿಕರ ಪುನರ್ ವಸತಿ ಇಲಾಖೆಗೆ ಸಂಬಂಧಪಟ್ಟ ಮಾಹಿತಿಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸರಿಯಾದ ಮಾಹಿತಿ ಲಭ್ಯವಾಗದೆ ಇರುವುದರಿಂದ ಮಾಜಿ ಸೈನಿಕರು ಹಾಗೂ ಸೈನಿಕರ ವಿಧವಾ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ತಾಲೂಕು ಮಾಜಿ ಸೈನಿಕರ ಸಂಘ ಆರೋಪಿಸಿದೆ. 
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸೈನಿಕರು, ಸಂಘದ ಅಡಿಯಲ್ಲಿ ತಾಲೂಕಿನಲ್ಲಿ ಸುಮಾರು ೪೦೦ ಮಂದಿ ಸೇರಿದಂತೆ ಜಿಲ್ಲೆಯಲ್ಲಿ(ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಒಳಗೊಂಡು) ಒಟ್ಟು ೨೩೨೩ ಮಂದಿ ಮಾಜಿ ಸೈನಿಕರು ಹಾಗೂ ಸೈನಿಕರ ವಿಧವಾ ಕುಟುಂಬಗಳಿವೆ. ರಾಜ್ಯದಲ್ಲಿ ಸುಮಾರು ೧ ಲಕ್ಷವಿದ್ದು, ಇವರ ಕುಂದು-ಕೊರತೆಗಳಿಗೆ ಸ್ಪಂದಿಸಲು ಯಾರು ಸಹ ಇಲ್ಲದಂತಾಗಿದೆ. ಜಿಲ್ಲಾ ಮಾಜಿ ಸೈನಿಕರ ಕಲ್ಯಾಣ ಮಂಡಳಿಯಿಂದ ಯಾವುದೇ ಸೌಲಭ್ಯಗಳು ಲಭಿಸುತ್ತಿಲ್ಲ. ಉಪನಿರ್ದೇಶಕರ ಹುದ್ದೆಗೆ ಸೈನಿಕ ಇಲಾಖೆಗೆ ಸಂಬಂಧಪಡದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದರಿಂದಾಗಿ ಸಮಸ್ಯೆಗಳು ಸರಿಯಾಗಿ ಇತ್ಯರ್ಥವಾಗುತ್ತಿಲ್ಲ ಎಂದು ದೂರಿದರು. 
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಾರ್ಷಿಕ ಸುಮಾರು ೧೦ ರಿಂದ ೧೫ ಕೋ. ರು. ಅನುದಾನ ಬಿಡುಗಡೆಯಾಗುತ್ತಿದ್ದು, ಆದರೆ ಮಂಡಳಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗದೆ ಸರ್ಕಾರಕ್ಕೆ ಹಿಂದಿರುಗಿಸಲಾಗುತ್ತಿದೆ. ಅಲ್ಲದೆ ಸೈನಿಕರ ಶಿಷ್ಯ ವೇತನ ಸುಮಾರು ೨ ಕೋ. ರು. ಬಿಡುಗಡೆಯಾಗಿದ್ದು, ಈ ಅನುದಾನ ಸಹ ಹಿಂದಿರುಗಿಸಲಾಗಿದೆ. ಇದುವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಯಾರಿಗೂ ಬಂದಿಲ್ಲ. ಈ ಕುರಿತು ಸಂಬಂಧಪಡದ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸೂಕ್ತ ಉತ್ತರ ನೀಡುತ್ತಿಲ್ಲ. ಇದರಿಂದಾಗಿ ಮಾಜಿ ಸೈನಿಕರು, ಸೈನಿಕರ ವಿಧವಾ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದರು. 
ಸೈನಿಕ ಮಂಡಳಿಗೆ ಅನುಭವ ಹೊಂದಿರುವ ಮಾಜಿ ಸೈನಿಕ ಅಧಿಕಾರಿಯನ್ನು ನೇಮಿಸಬೇಕೆಂದು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಆದರೂ ಸಹ ಯಾವುದೇ ಕ್ರಮ ಇದುವರೆಗೂ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು. 
ಸಂಘದ ಅಧ್ಯಕ್ಷ ಅಶೋಕ್, ನಿರ್ದೇಶಕ ಗಿರಿ, ಕಲಾವತಿ, ಆಶಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಆಯೋಧ್ಯೆ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ನಗರದಲ್ಲಿ ಸಂಭ್ರಮಾಚರಣೆಗೆ ಸಿದ್ದತೆ

ಭದ್ರಾವತಿ, ಆ. ೫: ದೇಶದ ಬಹುಸಂಖ್ಯಾತರ ಬಹಳ ವರ್ಷಗಳ ಕನಸು ಶ್ರೀರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ನನಸಾಗುತ್ತಿರುವ ಹಿನ್ನಲೆಯಲ್ಲಿ ನಗರದ ವಿವಿಧ ಹಿಂದೂಪರ ಸಂಘಟನೆಗಳಿಂದ ಆ.೫ರಂದು ಸಂಭ್ರಮಾಚರಣೆಗೆ ಸಿದ್ದತೆಗಳು ನಡೆದಿವೆ. 
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರುತ್ತಿರುವುದು ದೇಶದ ಇತಿಹಾಸದ ಸಂಭ್ರಮದ ದಿನವಾಗಿದ್ದು, ಈ ಹಿನ್ನಲೆಯಲ್ಲಿ ನಗರದ ಹೊಸ ಸೇತುವೆ ಬಳಿ ಸಿಹಿ ಹಂಚಿಕೆ ಕಾರ್ಯಕ್ರಮ ಬಿಜೆಪಿ ಪಕ್ಷದ ತಾಲೂಕು ಎಸ್.ಸಿ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದೆ. 
ಕರ ಸೇವಕರಿಗೆ ಸನ್ಮಾನ : 
೧೯೯೨ರಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ನೇತೃತ್ವದಲ್ಲಿ ಸುಮಾರು ೮೮ ಕರಸೇವಕರು ಆಯೋಧ್ಯೆಗೆ ತೆರಳಿ ಕರ ಸೇವೆಯಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನಲೆಯಲ್ಲಿ ಕರಸೇವಕರ ತಂಡದ ಶ್ರಮ ಸಾರ್ಥಕತೆ ಮಿಲನ ಹಾಗೂ ರಕ್ಷಾ ಬಂಧನ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ತಾಲೂಕು ಶಾಖೆ ವತಿಯಿಂದ ಬೆಳಿಗ್ಗೆ ೧೦ ಗಂಟೆಗೆ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
ಬಜರಂಗದಳದಿಂದ ೩ ಸಾವಿರ ಲಾಡು ವಿತರಣೆ: 
ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಹಿನ್ನಲೆಯಲ್ಲಿ ನಗರದಲ್ಲಿ ಬಜರಂಗದಳ ವತಿಯಿಂದ ಸಾರ್ವಜನಿಕರಿಗೆ ೩ ಸಾವಿರ ಲಾಡು ವಿತರಿಸಲು ವ್ಯವಸ್ಥೆ ಕೈಗೊಳ್ಳಲಾಗಿದೆ. 

Monday, August 3, 2020

ಪುನಃ ೨೯ ಸೋಂಕು ಪತ್ತೆ : ಉಕ್ಕಿನ ನಗರದಲ್ಲಿ ಹೆಚ್ಚಿದ ಆತಂಕ

ಭದ್ರಾವತಿ, ಆ. ೩: ತಾಲೂಕಿನಲ್ಲಿ ಕೊರೋನಾ ಸೋಂಕು ಪುನಃ ಹೆಚ್ಚಳವಾಗಿದ್ದು, ಸೋಮವಾರ ೨೯ ಪ್ರಕರಣಗಳು ಪತ್ತೆಯಾಗಿವೆ. 
ಭಾನುವಾರ ಒಂದೇ ಒಂದು ಪ್ರಕರಣ ಪತ್ತೆಯಾಗಿತ್ತು. ಇದೀಗ ನಗರಸಭೆ ವ್ಯಾಪ್ತಿಯಲ್ಲಿ ೧೯ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ೧೦ ಪ್ರಕರಣಗಳು ಪತ್ತೆಯಾಗಿವೆ.
ನಗರಸಭೆ ವ್ಯಾಪ್ತಿಯ ಗಣೇಶ್ ಕಾಲೋನಿಯ ಒಂದೇ ಕುಟುಂಬದ ೪೦ ಹಾಗೂ ೬೬ ವರ್ಷದ ಇಬ್ಬರು ಪುರುಷರು ಮತ್ತು ೬೦ ವರ್ಷದ ಮಹಿಳೆ ಸೇರಿ ೩ ಮಂದಿಗೆ, ಗಾಂಧಿನಗರದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರಿಗೆ, ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯೊಬ್ಬರಿಗೆ ಹಾಗೂ ಹೊಸಮನೆ ಶಿವಾಜಿ ಸರ್ಕಲ್ ಬಳಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ, ಸಿದ್ಧರೂಢ ನಗರದಲ್ಲಿ ಒಬ್ಬ ವ್ಯಕ್ತಿಗೆ, ಶಂಕರ ಮಠ ಬಳಿ ವ್ಯಕ್ತಿಯೊಬ್ಬರಿಗೆ,  ಬಿ.ಎಚ್ ರಸ್ತೆ ೭ನೇ ಕ್ರಾಸ್‌ನಲ್ಲಿ ವ್ಯಕ್ತಿಯೊಬ್ಬರಿಗೆ, ಹೊಸಮನೆ ಭಾಗದಲ್ಲಿ ಸೇಂಟ್ ಮೇರಿಸ್ ಶಾಲೆ ಬಳಿ ೭೪ ವರ್ಷದ ವೃದ್ಧನಿಗೆ, ಹೊಸಮನೆ ಚಾನಲ್ ಬಳಿ ಯುವಕನೊಬ್ಬನಿಗೆ ಹಾಗೂ ವಿಜಯನಗರದಲ್ಲಿ ೨೬ ವರ್ಷದ ಯುವಕನಿಗೆ, ಹುತ್ತಾಕಾಲೋನಿ ಒಕ್ಕಲಿಗರ ಸಮುದಾಯ ಭವನದ ಬಳಿ ೩೩ ವರ್ಷದ ವ್ಯಕ್ತಿಗೆ, ವೇಲೂರು ಶೆಡ್‌ನಲ್ಲಿ ೫೫ ವರ್ಷದ ಮಹಿಳೆ ಹಾಗೂ ೨೩ ವರ್ಷದ ಯುವತಿಗೆ, ವಿಶ್ವೇಶ್ವರಾಯ ನಗರದಲ್ಲಿ ೨೯ ವರ್ಷದ ಪುರುಷನಿಗೆ, ಎಂಎಂ ಕಾಂಪೌಂಡ್‌ನಲ್ಲಿ ೪೨ ವರ್ಷದ ವ್ಯಕ್ತಿಗೆ ಹಾಗೂ ಕಬಳಿಕಟ್ಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಹಾಗೂ ಹಳೇನಗರದ ಬ್ರಾಹ್ಮಣರ ಬೀದಿಯಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದೆ.   
ಉಳಿದಂತೆ ಗ್ರಾಮಾಂತರ ವ್ಯಾಪ್ತಿಯಲ್ಲಿ ಅರಳಿಹಳ್ಳಿ ಗ್ರಾಮದಲ್ಲಿ ೬೬ ವರ್ಷದ ವ್ಯಕ್ತಿಗೆ, ಆನವೇರಿ ಶ್ರೀನಿವಾಸಪುರದಲ್ಲಿ ೩೦ ವರ್ಷದ ಪುರುಷನಿಗೆ, ಆಗರದಹಳ್ಳಿಯಲ್ಲಿ ೨೩, ೨೪ ಮತ್ತು ೪೭ ವರ್ಷದ ೩ ಮಂದಿ ಪುರುಷರಿಗೆ, ಬಂಡಿಗುಡ್ಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಮತ್ತು ದೇವರನರಸೀಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದೆ. 
ಬ್ಯಾಂಕ್ ಸಿಬ್ಬಂದಿಗೆ ಸೋಂಕು : ೨ ದಿನ ಬಂದ್ 
ನಗರದ ಬಿ.ಎಚ್ ರಸ್ತೆ ಸೌತ್ ಇಂಡಿಯನ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಹಿನ್ನಲೆಯಲ್ಲಿ ೨ ದಿನ ಮಂಗಳವಾರ ಮತ್ತು ಬುಧವಾರ ಬ್ಯಾಂಕ್ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದೆ. ಮುನ್ನಚ್ಚರಿಕೆ ಕ್ರಮವಾಗಿ ಬ್ಯಾಂಕ್‌ನಲ್ಲಿ ಸ್ಯಾನಿಟೈಜರ್ ಕೈಗೊಳ್ಳಲಾಗಿದೆ.   
ಸೋಂಕಿತ ತಿರುಗಾಟ : ಸ್ಥಳೀಯರಲ್ಲಿ ಆತಂಕ 
ಹೊಸಮನೆ ವ್ಯಾಪ್ತಿಯ ೪ನೇ ಕ್ರಾಸ್‌ನಲ್ಲಿ ಕೊರೋನಾ ಸೋಂಕಿಗೆ ಒಳಗಾಗಿರುವ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎಲ್ಲಿಬೇಕೆಂದರಲ್ಲಿ ತಿರುಗಾಡುತ್ತಿದ್ದಾನೆಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿಯಿಂದ ಸಮುದಾಯಕ್ಕೆ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 
    ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ನಗರಸಭೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ.


ಪತ್ರಕರ್ತರಿಂದ ಸಮಾಜದಲ್ಲಿ ಎಚ್ಚರಿಸುವ ಕಾರ್ಯ ಶ್ಲಾಘನೀಯ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಳೇನಗರದ ಪತ್ರಿಕಾಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
ಭದ್ರಾವತಿ, ಆ. ೩: ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವವರ ಶ್ರಮ ಅಪಾರವಾಗಿದ್ದು, ಪತ್ರಕರ್ತರು ಸಮಾಜದಲ್ಲಿ ಎಲ್ಲರನ್ನು ಎಚ್ಚರಿಸುವಂತಹ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
ಅವರು ಸೋಮವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಳೇನಗರದ ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ಪತ್ರಕರ್ತರು ಸಮಾಜದಲ್ಲಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳಲು ಸಹಕಾರಿಯಾಗಿದ್ದಾರೆ ಎಂದರು. 
ಪತ್ರಕರ್ತರ ಸಂಘಟನೆಯ ಫಲವಾಗಿ ನಗರದಲ್ಲಿ ಸುಸಜ್ಜಿತವಾದ ಪತ್ರಿಕಾಭವನ ನಿರ್ಮಾಣಗೊಂಡಿದ್ದು, ಇದನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಮೂಲಕ ಸಮಾಜಕ್ಕೆ ಇದರ ಸೇವೆ ಇನ್ನಷ್ಟು ಲಭಿಸುವಂತಾಗುವ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು. 
ಕರ್ನಾಟಕ ರಾಜ್ಯ ಕಾರ್ಯನಿರತಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್ ಮಾತನಾಡಿ, ಪತ್ರಕರ್ತರ ಕಾರ್ಯ ವೈಖರಿ ಹಾಗೂ ಪತ್ರಕರ್ತರ ಮಹತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆ ವಿವರಿಸುವ ಜೊತೆಗೆ ಪ್ರಸ್ತುತ ಸಂಘಟನೆ ಎದುರಿಸುವ ಸವಾಲುಗಳನ್ನು ಮನವರಿಕೆ ಮಾಡಿದರು. 
ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಮಾತನಾಡಿ,  ಪತ್ರಿಕಾ ಭವನ ನಿರ್ಮಾಣ ಹಾಗೂ ಎದುರಾಗಿರುವ ಸಮಸ್ಯೆಗಳನ್ನು ವಿವರಿಸಿ ಸದಸ್ಯರು ಇನ್ನೂ ಹೆಚ್ಚಿನ ಸಹಕಾರ ನೀಡುವ ಜೊತೆಗೆ ಕಾಮಗಾರಿ ಪೂರ್ಣಗೊಳ್ಳಲು ಶಾಸಕರು ನೆರವಾಗಬೇಕೆಂದು ಮನವಿ ಮಾಡಿದರು. 
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ ಹಾಗೂ ಎನ್. ರವಿಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಸಿದ್ದರು. 
ಪ್ರಧಾನ ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿದರು. ಸಹಕಾರ್ಯದರ್ಶಿ ಫಿಲೋಮಿನಾ ನಿರೂಪಿಸಿದರು. ಖಜಾಂಚಿ ಅನಂತಕುಮಾರ್ ವಂದಿಸಿದರು. 
ಹಿರಿಯ ಪತ್ರಕರ್ತರಾದ ಗಣೇಶ್‌ರಾವ್ ಸಿಂಧ್ಯಾ, ಶಿವಶಂಕರ್, ಟಿ.ಎಸ್ ಆನಂದಕುಮಾರ್, ನಾರಾಯಣ, ರವೀಂದ್ರನಾಥ್(ಬ್ರದರ್), ಸುದರ್ಶನ್, ಶೈಲೇಶ್ ಕೋಠಿ, ಮೋಹನ್‌ಕುಮಾರ್, ವ್ಯವಸ್ಥಾಪಕ ಸುಬ್ರಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.