Sunday, August 23, 2020

ಕೊರೋನಾ ಭೀತಿ ನಡುವೆಯೂ ಗೌರಿ-ಗಣೇಶ ಹಬ್ಬ ಯಶಸ್ವಿ

ಪ್ರಮುಖ ಸಂಘಟನೆಗಳಿಂದ ಮಾತ್ರ ಮೂರ್ತಿ ಪ್ರತಿಷ್ಠಾಪನೆ

ಭದ್ರಾವತಿ ಹೊಸಮನೆಯಲ್ಲಿ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.

ಭದ್ರಾವತಿ ಹೊಸಮನೆ ಶಿವಾಜಿ ವೃತ್ತದಲ್ಲಿ ಓಂ ಹಿಂದೂ ಕೋಟೆ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಭದ್ರಾವತಿ ಮಾಧವಚಾರ್ ಹುತ್ತಾದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು.

ಭದ್ರಾವತಿ  ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದ ಸಂಜಯ ಕಾಲೋನಿಯ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.


ಭದ್ರಾವತಿ ಕಾಗದನಗರದ ೬ನೇ ವಾರ್ಡಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಘಂಟೆ ಗಣಪತಿ ಆಕರ್ಷಕವಾಗಿ ಕಂಡು ಬಂದಿತು.


ಭದ್ರಾವತಿ ಎನ್‌ಎಂಸಿ ಸಂತೆ ಮೈದಾನದ ಬಳಿ ಯುವಕರ ಸಂಘಟನೆಯೊಂದು ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿ.


ಭದ್ರಾವತಿ ಹೊಸಮನೆ ಮುಖ್ಯರಸ್ತೆಯಲ್ಲಿ ಭೋವಿ ಕಾಲೋನಿ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಭಾರಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.


ಭದ್ರಾವತಿ ಹಳೇನಗರದ ಶ್ರೀ ಕೋಟೆ ಬಸವಣ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಮ್ಮ ಭಕ್ತರ ಗಮನ ಸೆಳೆಯಿತು.


ಭದ್ರಾವತಿ ಜೆಪಿಎಸ್ ಕಾಲೋನಿಯಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.


ಭದ್ರಾವತಿ ಕಾಗದನಗರದ ಶ್ರೀರಾಮ ದೇವಾಲಯದ ಮುಂಭಾಗದಲ್ಲಿ ವಿನಾಯಕ ಸೇವಾ ಸಮಿತಿವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.

     ಭದ್ರಾವತಿ: ಕೊರೋನಾ ಭೀತಿ ನಡುವೆಯೂ ಈ ಬಾರಿ ನಗರದಲ್ಲಿ ಗೌರಿ-ಗಣೇಶ ಹಬ್ಬ ಯಶಸ್ವಿಯಾಗಿ ಜರುಗಿತು.
     ಕೊರೋನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ದಿನ ದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದೆಡೆ ಆತಂಕದ ವಾತಾರಣ ನಿರ್ಮಾಣಗೊಂಡಿದ್ದು, ಮತ್ತೊಂದೆಡೆ ದೈನಂದಿನ ಬದುಕು ಯಥಾಸ್ಥಿತಿಗೆ ಬಾರದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಹಬ್ಬ ಹರಿದಿನಗಳು ಆಡಂಬರವಿಲ್ಲದೆ ಬಂದು ಹೋಗುತ್ತಿವೆ.
    ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ಗೌರಿ-ಗಣೇಶ ಹಬ್ಬ ಈ ಬಾರಿ ಸದ್ದು-ಗದ್ದಲವಿಲ್ಲದೆ ನಡೆದು ಹೋಗಿದೆ. ರಾಜ್ಯ ಸರ್ಕಾರ ಹಬ್ಬ ಆಚರಣೆಗೆ ಅನುಮತಿ ನೀಡಿದ ನಂತರ ಅದರಲ್ಲೂ ಸಾರ್ವಜನಿಕ .,ಳಗಳಲ್ಲಿ ಈ ಬಾರಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ನಂತರ ತರಾತುರಿಯಲ್ಲಿ ಪ್ರತಿಷ್ಠಾಪನೆ ನಡೆದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
   ಕೊರೋನಾ ಸೋಂಕು ವ್ಯಾಪಕವಾಗಿ ಹರಡದಂತೆ ಮುನ್ನಚ್ಚರಿಕೆ ಹಿನ್ನಲೆಯಲ್ಲಿ ಹಲವು ಮಾರ್ಗಸೂಚಿಗಳೊಂದಿಗೆ ಗೌರಿ-ಗಣೇಶ ಹಬ್ಬಕ್ಕೆ ಸರ್ಕಾರ ಕೊನೆ ಘಳಿಗೆಯಲ್ಲಿ ಅನುಮತಿ ನೀಡಿದ ಹಿನ್ನಲೆಯಲ್ಲಿ ಬಹಳಷ್ಟು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡದೆ ಈ ಬಾರಿ ಆಚರಣೆಯಿಂದ ಹಿಂದೆ ಸರಿದಿರುವುದು ಕಂಡು ಬಂದಿತು. ಕೆಲವು ಪ್ರತಿಷ್ಠಿತ ಸಂಘಟನೆಗಳು ಮಾತ್ರ ಮೂರ್ತಿ ಪ್ರತಿಷ್ಠಾಪನೆ ಮಾಡಿ ರಾತ್ರಿ ವೇಳೆಗೆ ವಿಸರ್ಜನೆಯೊಂದಿಗೆ ಆಚರಣೆ ಮುಕ್ತಾಯಗೊಳಿಸಿದವು. ಪ್ರತಿ ವರ್ಷ ತಾಲೂಕಿನಲ್ಲಿ ಸುಮಾರು ೩೦೦ ರಿಂದ ೪೦೦ ಮೂರ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಅತಿ ಕಡಿಮೆ ಸಂಖ್ಯೆಯಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
   ಹೊಸಮನೆ ಭಾಗದಲ್ಲಿ ಬಹುಮುಖ್ಯ ಸಂಘಟನೆಗಳಾದ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ, ಬೋವಿಕಾಲೋನಿ ವಿನಾಯಕ ಸೇವಾ ಸಮಿತಿ, ಶಿವಾಜಿ ವೃತ್ತದಲ್ಲಿ ಓಂ ಹಿಂದೂ ಕೋಟೆ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.
    ಉಳಿದಂತೆ ಮಾಧವಚಾರ್ ವೃತ್ತದಲ್ಲಿ ವಿನಾಯಕ ಸೇವಾ ಸಮಿತಿ, ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದ ಸಂಜಯ ಕಾಲೋನಿಯ ವಿನಾಯಕ ಸೇವಾ ಸಮಿತಿ, ಜನ್ನಾಪುರ ಭಾಗದಲ್ಲಿ ರಾಮರಾಜ್ಯ ಸಂಘಟನೆ ಹಾಗು ವಿದ್ಯಾಮಂದಿರ ಬಳಿ ಶ್ರೀರಾಮ ಹಿಂದೂ ವಿನಾಯಕ ಸೇವಾ ಸಮಿತಿ, ಎಸ್‌ಎವಿ ವಿದ್ಯಾಸಂಸ್ಥೆ ಬಳಿ ಶ್ರೀರಾಮ ವಿನಾಯಕ ಸೇವಾ ಸಮಿತಿ, ಜೆಪಿಎಸ್ ಕಾಲೋನಿ ಶ್ರೀ ಮಹಾಗಣಪತಿ ದೇವಸ್ಥಾನ ಸಮಿತಿ, ಕಾಗದನಗರದ ೬ನೇ ವಾರ್ಡ್ ಮತ್ತು ಶ್ರೀರಾಮ ದೇವಾಲಯದ ಮುಂಭಾಗದಲ್ಲಿ ವಿನಾಯಕ ಸೇವಾ ಸಮಿತಿವತಿಯಿಂದ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.
    ಮನೆ ಮನೆಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಪ್ರತಿವರ್ಷದಂತೆ ಈ ಬಾರಿ ಸಹ ಮೂರ್ತಿಗಳನ್ನು ಮಾರುಕಟ್ಟೆಗಳಿಗೆ ಬಂದು ಖರೀದಿಸಿ ಕೊಂಡ್ಯೊಯ್ದರು. ಆಯಾಕಟ್ಟಿನ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಶಿಕ್ಷಣ ಕ್ಷೇತ್ರಕ್ಕೆ ವಿಇಎಸ್ ವಿದ್ಯಾಸಂಸ್ಥೆ ಕೊಡುಗೆ ಅನನ್ಯ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯ ಕೆ. ಶಾಮಣ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿದ್ದರು.

ಸಂಸ್ಥಾಪಕ ಸದಸ್ಯ ಕೆ. ಶಾಮಣ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಶಾಸಕ ಸಂಗಮೇಶ್ವರ್ ಪ್ರಶಂಸೆ

ಭದ್ರಾವತಿ, ಆ. ೨೩: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಈ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಕೆ. ಶಾಮಣ್ಣರವರ ಪರಿಶ್ರಮ ಹೆಚ್ಚಿನದಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
      ಅವರು ಕೆ. ಶಾಮಣ್ಣರವರ ೮೦ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಮಣ್ಣರವರು ತಮ್ಮ ವೃತ್ತಿ ಬದುಕಿನಲ್ಲಿ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ವಿಇಎಸ್ ವಿದ್ಯಾಸಂಸ್ಥೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಪ್ರಸ್ತುತ ವಿದ್ಯಾಸಂಸ್ಥೆ ಸದೃಢವಾಗಿ ಬೆಳೆಯಲು ಕಾರಣಕರ್ತರಾಗಿದ್ದಾರೆ ಎಂದರೆ ತಪ್ಪಾಗಲಾರದು. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನದ ಮಾಡುವ ಮೂಲಕ ಸಾರ್ಥಕತೆ ಕಂಡುಕೊಂಡಿದ್ದಾರೆ ಎಂದರು.
      ವಿದ್ಯಾಸಂಸ್ಥೆಯ ಮಹಾಪೋಷಕರಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್  ಷಡಾಕ್ಷರಿಯವರು ವಿದ್ಯಾಸಂಸ್ಥೆಯ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದಿಂದ ೧ ಕೋ. ರು. ಅನುದಾನ ಮಂಜೂರು ಮಾಡಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ವಿದ್ಯಾಸಂಸ್ಥೆಗೆ ಸೇರಿದ ನಗರದ ಅನ್ವರ್ ಕಾಲೋನಿಯಲ್ಲಿರುವ  ೩ ಎಕರೆ ಜಮೀನಿನ ಸುಮಾರು ೧೦ ವರ್ಷದ ಹಿಂದಿನ ಮಾರಾಟ ಪ್ರಕ್ರಿಯೆಯನ್ನು ರದ್ದುಪಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಉಳಿಸಿಕೊಳ್ಳುವ ನಿರ್ಧಾರ ಕೈಗೊಂಡಿರುವುದು ಉತ್ತಮ ಬೆಳವಣಿಗೆ ಎಂದರು.
       ಕೆ. ಶಾಮಣ್ಣ ಮಾತನಾಡಿ, ವಿಇಎಸ್ ವಿದ್ಯಾಸಂಸ್ಥೆ ಸ್ಥಾಪನೆಗೆ ಸಂಸ್ಥಾಪಕ ಸದಸ್ಯರುಗಳು ಕೈಗೊಂಡ ಪರಿಶ್ರಮಗಳನ್ನು ನೆನಪು ಮಾಡಿಕೊಂಡರು. ಪ್ರಸ್ತುತ ವಿದ್ಯಾಸಂಸ್ಥೆ ರಾಜ್ಯದಲ್ಲಿಯೇ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವುದು ಹೆಮ್ಮಯ ವಿಚಾರವಾಗಿದೆ ಎಂದರು.
      ಕಳೆದ ಸುಮಾರು ೧೦ ವರ್ಷಗಳ ಹಿಂದೆ ವಿದ್ಯಾಸಂಸ್ಥೆ ಖರೀದಿ ಮಾಡಿದ್ದ ಜಮೀನಿನ ಮಾರಾಟ ಪ್ರಕ್ರಿಯೆ ನಡೆಯುವಾಗ ಅಂದು ಆಡಳಿತ ಮಂಡಳಿ ಛೇರ‍್ಮನ್ ಆಗಿದ್ದ ತಮಗೆ ಹಾಗು ಸಂಸ್ಥಾಪಕ ಸದಸ್ಯರುಗಳಿಗೆ ಇಷ್ಟವಿರಲಿಲ್ಲ. ಸರ್ಕಾರ ಬೇರೆ ಕೆಲಸಗಳಿಗೆ ಡಿನೋಟಿಫಿಕೇಷನ್ ಮಾಡುವ ಆತಂಕದಲ್ಲಿ ಜಮೀನು ಕೈತಪ್ಪಿ ಹೋಗುವ ಹಿನ್ನಲೆಯಲ್ಲಿ ಹಾಗು ಆಡಳಿತ ಮಂಡಳಿಯ ಬಹುಮತದ ತೀರ್ಮಾನಕ್ಕೆ ಬದ್ಧರಾಗಿ ಒಪ್ಪಿಗೆ ಸೂಚಿಸುವ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ನಮ್ಮ ಅಂದಿನ ಪರಿಶ್ರಮಕ್ಕೆ ವಿದ್ಯಾಸಂಸ್ಥೆ ಆಡಳಿತ ಮಂಡಳಿಯಲ್ಲಿ ಕೆಲವರಿಂದ ಇಂದು ಕೆಟ್ಟ ಹೆಸರು ಬರುವಂತಾಗಿದೆ. ಈ ನಡುವೆ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್ ಷಡಾಕ್ಷರಿಯವರ ಭವಿಷ್ಯದ ಕಾಳಜಿ ಹಾಗು ತಾಲೂಕಿನ ಸಮಸ್ತ ಸರ್ಕಾರಿ ನೌಕರರ ಒತ್ತಾಸೆಯಿಂದಾಗಿ ಮಾರಾಟ ಪ್ರಕ್ರಿಯೆ ತಡೆದು ಜಮೀನನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವುದು ಹೆಮ್ಮಯ ವಿಚಾರವಾಗಿದೆ ಎಂದರು.
       ವಿದ್ಯಾಸಂಸ್ಥೆ ಛೇರ‍್ಮನ್ ಬಿ.ಎಲ್ ರಂಗಸ್ವಾಮಿ, ಮಾಜಿ ಛೇರ‍್ಮನ್ ಡಾ. ಜಿ.ಎಂ ನಟರಾಜ್, ಸಂಘದ ಉಪಾಧ್ಯಕ್ಷ ನೀಲೇಶ್ ರಾಜ್, ರಾಜ್ಯ ಪರಿಷತ್ ಸದಸ್ಯ ಸಿದ್ದಬಸಪ್ಪ, ಶಿಕ್ಷಕರ ಸಂಘದ ಮುಖಂಡರಾದ ಎಸ್. ಕೂಬಾನಾಯ್ಕ, ಲೋಹಿತೇಶ್ವರಪ್ಪ, ಧನಂಜಯ, ಯು. ಮಹಾದೇವಪ್ಪ, ಎಂ.ಎಸ್ ಮಲ್ಲಿಕಾರ್ಜುನ್, ಎಂ.ಆರ್ ರೇವಣಪ್ಪ, ಬಸವಂತರಾವ್ ದಾಳೆ, ಲೋಕೇಶ್, ಶಿವಾನಂದ ಕಾಂಬಳೆ, ವೇಣುಗೋಪಾಲ್, ರಮೆಶ್, ಚಂದ್ರಶೇಖರಪ್ಪ ಚಕ್ರಸಾಲಿ, ಜಗದೀಶ್, ಇಂಡಿ ಮಂಜುನಾಥ್, ರಾಜಾನಾಯ್ಕ್ ದೇವರಾಜ್ ನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




Saturday, August 22, 2020

ನಿವೃತ್ತ ಪ್ರಾಂಶುಪಾಲ ಕೆ.ಎಂ ಮೇಘರಾಜ್ ನಿಧನ

ಕೆ.ಎಂ ಮೇಘರಾಜ್
ಭದ್ರಾವತಿ, ಆ. ೨೨: ಹಳೇನಗರ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಎಂ ಮೇಘರಾಜ್(೬೦) ನಿಧನ ಹೊಂದಿದರು.
      ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಬಂಧು-ಬಳಗ ಬಿಟ್ಟಗಲಿದ್ದಾರೆ. ಮೇಘರಾಜ್‌ರವರು ಮೂಲತಃ ವಿದ್ಯಾರ್ಥಿ ಸಂಘಟನೆಯಿಂದ ಬೆಳೆದು ಬಂದಿದ್ದು, ಎಬಿವಿಪಿ ಸಂಘಟನೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ್ದರು. ನಗರದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜುಗಳಲ್ಲಿ ಹಲವು ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಮಾರ್ಚ್ ತಿಂಗಳಿನಲ್ಲಿ ನಿವೃತ್ತಿ ಹೊಂದಿದ್ದರು. ಹಲವು ವರ್ಷಗಳಿಂದ ತಾಲೂಕು ಗೊಲ್ಲ ಯಾದವ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
      ಮೃತರ ನಿಧನಕ್ಕೆ ಗೊಲ್ಲ ಯಾದವ ಸಮಾಜ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೋರ್ವನ ಮೇಲೆ ಕರಡಿ ದಾಳಿ : ತೀವ್ರ ಗಾಯ

ಭದ್ರಾವತಿ ತಾಲೂಕಿನ ದೊಡ್ಡೇರಿ ಬಾಳೆಕಟ್ಟೆ ಗ್ರಾಮದ ನಿವಾಸಿ ಜಾನು ಎಂಬುವರು ಕರಡಿಯಿಂದ ತೀವ್ರವಾಗಿ ಗಾಯಗೊಂಡಿರುವುದು.
ಭದ್ರಾವತಿ, ಆ. ೨೨: ತಾಲೂಕಿನ ದೊಡ್ಡೇರಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಕರಡಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.
ದೊಡ್ಡೇರಿ ಬಾಳೆಕಟ್ಟೆ ಗ್ರಾಮದಲ್ಲಿ ಬಯಲು ಬಹಿರ್ದೆಸೆಗೆ ತೆರಳಿದ್ದ ಜಾನು ಎಂಬುವರ ಮೇಲೆ ಕರಡಿ ದಾಳಿ ನಡೆಸಿದ್ದು, ಮುಖದ ಒಂದು ಭಾಗ ತೀವ್ರ ಗಾಯಗೊಂಡಿದೆ. ಅಲ್ಲದೆ ಇತರೆಡೆ ಸಹ ಗಾಯಗಳಾಗಿದ್ದು, ಇವರನ್ನು ತಕ್ಷಣ ಅಂಬ್ಯುಲೆನ್ಸ್ ಮೂಲಕ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭಾಗದಲ್ಲಿ ಕರಡಿಗಳು ಹೆಚ್ಚಾಗಿದ್ದು, ಹಲವು ಬಾರಿ ಸ್ಥಳೀಯರು ಕರಡಿ ದಾಳಿಗೆ ತುತ್ತಾಗಿದ್ದಾರೆ. ಅಲ್ಲದೆ ದಾಳಿಯಿಂದ ಮೃತಪಟ್ಟಿರುವ ಘಟನೆಗಳು ಸಹ ನಡೆದಿವೆ.  ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಆರೋಪಗಳು ಕೇಳಿ ಬರುತ್ತಿವೆ.

Friday, August 21, 2020

ಕೊರೋನಾ ಭೀತಿ ನಡುವೆ ಗೌರಿ-ಗಣೇಶ ಹಬ್ಬ : ಮೂರ್ತಿ ಪ್ರತಿಷ್ಠಾಪನೆ ಮಾಹಿತಿಯೇ ಇಲ್ಲ

ಭದ್ರಾವತಿ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿ ಗೌರಿ-ಗಣೇಶ ಮೂರ್ತಿಗಳ ಖರೀದಿ ಭರ್ಜರಿಯಾಗಿ ನಡೆಯುತ್ತಿರುವುದು.
ಭದ್ರಾವತಿ, ಆ. ೨೧: ಈ ಬಾರಿ ಗೌರಿ-ಗಣೇಶ ಹಬ್ಬ ಆಚರಣೆ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅನುಮತಿ ನೀಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಈ ಬಾರಿ ಎಲ್ಲೆಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂಬ ಮಾಹಿತಿ ಯಾರಿಗೂ ಸರಿಯಾಗಿ ಲಭ್ಯವಾಗುತ್ತಿಲ್ಲ.
     ಕಳೆದ ೪ ದಿನಗಳ ಹಿಂದೆಯಷ್ಟೆ ಹಲವು ಷರತ್ತುಗಳೊಂದಿಗೆ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅನುಮತಿ ನೀಡಿರುವುದರಿಂದ ಹಲವು ಸಂಘಟನೆಗಳು ಗೊಂದಲಕ್ಕೆ ಒಳಗಾಗಿವೆ. ಅದರಲ್ಲೂ ಒಂದೇ ಒಂದು ದಿನ ಪ್ರತಿಷ್ಠಾಪಿಸುವ ಗೋಜಿಗೆ ಯಾವ ಸಂಘಟನೆಗಳು ಮುಂದಾಗುತ್ತಿಲ್ಲ. ಬೆಳಿಗ್ಗೆ ಪ್ರತಿಷ್ಠಾಪನೆ ಮಾಡಿ ಸಂಜೆ ವಿಸರ್ಜನೆ ಮಾಡುವ ಬದಲು ಈ ಬಾರಿ ಆಚರಣೆಯಿಂದ ಹಿಂದೆ ಸರಿಯುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬದ್ಧವಾಗಿರುವಂತೆ ಕಂಡು ಬರುತ್ತಿದೆ.
    ಕಾಲಾವಕಾಶ ಕಡಿಮೆ ಇರುವುದರಿಂದ ಯಾವುದೇ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲು ಸಂಘಟನೆಗಳಿಗೆ ಸಾಧ್ಯವಾಗಿಲ್ಲ. ಅಲ್ಲದೆ ವಿವಿಧ ಇಲಾಖೆಗಳಿಂದ ಪ್ರತಿಷ್ಠಾಪನೆಗೆ ಅನುಮತಿ ಬೇಕಾಗಿದೆ. ಒಂದೇ ಕಡೆ ಎಲ್ಲಾ ಇಲಾಖೆಗಳ ಅನುಮತಿ ಲಭಿಸುವ ವ್ಯವಸ್ಥೆ ಈ ಬಾರಿ ಕೈಗೊಂಡಿಲ್ಲ. ಪ್ರತಿ ವರ್ಷ ತಾಲೂಕಿನಲ್ಲಿ ಸುಮಾರು ೩೦೦ ರಿಂದ ೪೦೦ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಅದರಲ್ಲೂ ಪೊಲೀಸ್ ಇಲಾಖೆ ಆಯಾ ಪ್ರದೇಶಗಳ ವ್ಯಾಪ್ತಿಯಲ್ಲಿ ಸಾಮಾನ್ಯ, ಸೂಕ್ಷ್ಮ, ಅತಿ ಸೂಕ್ಷ್ಮ ಎಂಬ ಗುಂಪುಗಳಾಗಿ ಗುರುತಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆಗೆ ಮುಂದಾಗುವಂತೆ ನೋಡಿಕೊಳ್ಳುತ್ತಿತ್ತು.  ಆದರೆ ಈ ಬಾರಿ ಯಾವುದೇ ಮಾಹಿತಿ ಇಲಾಖೆಗೆ ಲಭ್ಯವಾಗುತ್ತಿಲ್ಲ.


  ಈ ನಡುವೆ ಮನೆ ಮನೆಗಳಲ್ಲಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಮಾರುಕಟ್ಟೆಯಲ್ಲಿ ಮೂರ್ತಿಗಳ ಖರೀದಿ ಭರ್ಜರಿಯಾಗಿ ನಡೆಯುತ್ತಿದೆ. ಶುಕ್ರವಾರ ಸಂಜೆಯೇ ಮನೆಗಳಿಗೆ ಮೂರ್ತಿಗಳನ್ನು ಕೊಂಡೊಯ್ಯುತ್ತಿರುವುದು ಕಂಡು ಬಂದಿತು.
      ಭರ್ಜರಿ ವ್ಯಾಪಾರ:
   ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಕಳೆದ ೩ ದಿನಗಳಿಂದ ಜನದಟ್ಟಣೆ ಅಧಿಕವಾಗುತ್ತಿದೆ. ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯುತ್ತಿದ್ದು, ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಖರೀದಿಯಲ್ಲಿ ತೊಡಗಿರುವುದು ಕಂಡು ಬಂದಿತು.

ವಿಐಎಸ್‌ಎಲ್‌ಗೆ ೧೯ ಕೋ.ರು. ಬಿಡುಗಡೆಗೆ ಒತ್ತಾಯಿಸಿ ಉಸ್ತುವಾರಿ ಸಚಿವರಿಗೆ ಮನವಿ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ೧೯ ಕೋ. ರು. ಅನುದಾನ ಬಿಡುಗಡೆಗೊಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೧: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ೧೯ ಕೋ. ರು. ಅನುದಾನ ಬಿಡುಗಡೆಗೊಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
         ಕಾರ್ಖಾನೆಯ ಆಕ್ಸಿಜನ್ ಪ್ಲಾಂಟ್ ವೀಕ್ಷಣೆಗೆ ಆಗಮಿಸಿದ್ದ ಸಚಿವರಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಪ್ರಸ್ತುತ ಕಾರ್ಖಾನೆಯಲ್ಲಿ ಯಂತ್ರಗಳು ಚಾಲನೆಯಲ್ಲಿರಲು ಕಚ್ಛಾ ಸಾಮಗ್ರಿ ಆಮದು, ನಿರ್ವಹಣೆ ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸುಮಾರು ೧೯ ಕೋ. ರು. ಅಗತ್ಯವಿದೆ. ಈಗಾಗಲೇ ಈ ಸಂಬಂಧ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ, ಸಂಬಂಧಪಟ್ಟ ಸಚಿವರಿಗೆ, ಶಿವಮೊಗ್ಗ ಲೋಕಸಭಾ ಸದಸ್ಯರಿಗೆ ಮನವಿ ಮಾಡಿ ಒತ್ತಾಯಿಸಲಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಮೂಲಕ ತಕ್ಷಣ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಜಿ.ಪಂ. ಸದಸ್ಯ ಕೆ.ಇ ಕಾಂತೇಶ್, ಸ್ಥಳೀಯ ಮುಖಂಡರಾದ ಜಿ. ಧರ್ಮಪ್ರಸಾಧ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಣೇಶ್‌ರಾವ್ ಹಾಗು ಕಾರ್ಮಿಕ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿ ಆಕ್ಸಿಜನ್ ಪ್ಲಾಂಟ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ : ಪರಿಶೀಲನೆ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಒಳಭಾಗದಲ್ಲಿರುವ ಎಂಎಸ್‌ಡಿ ಆಕ್ಸಿಜನ್ ಉತ್ಪಾದನಾ ಘಟಕ ಹಾಗೂ ಹೊರಭಾಗದಲ್ಲಿ ಎಂಪಿಎಂ ಕಾರ್ಖಾನೆ ರಸ್ತೆಯಲ್ಲಿರುವ ದಿ ಸದರನ್ ಗ್ಯಾಸ್ ಲಿಮಿಟೆಡ್‌ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಕ್ಸಿಜನ್ ಕೊರತೆ ಎದುರಾಗದಂತೆ ಮುನ್ನಚ್ಚರಿಕೆ ಹಿನ್ನಲೆಯಲ್ಲಿ ಉತ್ಪಾದನೆ ಕುರಿತು ಅಧಿಕಾರಿಗಳಿಂದ ಮಾಹಿತಿ

ಭದ್ರಾವತಿ, ಆ. ೨೧: ಜಿಲ್ಲೆಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಒಳಭಾಗದಲ್ಲಿರುವ ಎಂಎಸ್‌ಪಿಎಲ್ ಆಕ್ಸಿಜನ್ ಉತ್ಪಾದನಾ ಘಟಕ ಹಾಗೂ ಹೊರಭಾಗದಲ್ಲಿ ಎಂಪಿಎಂ ಕಾರ್ಖಾನೆ ರಸ್ತೆಯಲ್ಲಿರುವ ದಿ ಸದರನ್ ಗ್ಯಾಸ್ ಲಿಮಿಟೆಡ್‌ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರಿಂದ ಇದುವರೆಗೂ ಹೆಚ್ಚಿನ ಸಹಕಾರ ಲಭಿಸಿದೆ. ಮುಂದೆ ಸಹ ಇದೆ ರೀತಿ ಸಹಕಾರ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಲ್ಲಿ ಆಕ್ಸಿಜನ ಕೊರತೆ ಇಲ್ಲ. ಆದರೂ ಸಹ ಮುನ್ನಚ್ಚರಿಕೆ ಕ್ರಮವಾಗಿ ತುರ್ತು ಅನಿವಾರ್ಯ ಸಂದರ್ಭದಲ್ಲಿ ಆಕ್ಸಿಜನ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಆಕ್ಸಿಜನ್ ಪ್ಲಾಂಟ್‌ಗಳ ವೀಕ್ಷಣೆ ನಡೆಸಿದ್ದು, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ ಎಂದರು. 
ಆಕ್ಸಿಜನ್ ಉತ್ಪಾದನಾ ಕಂಪನಿಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಈ ನಿಟ್ಟಿನಲ್ಲಿ ಕಂಪನಿಯವರಿಗೆ ಭರವಸೆ ನೀಡುತ್ತಿದ್ದು, ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸೋಂಕು ವಾಪಕವಾಗಿ ಹರಡುತ್ತಿದ್ದು, ಕಂಪನಿಗಳು ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು. 


     ಇದಕ್ಕೂ ಮೊದಲು ವಿಐಎಸ್‌ಎಲ್ ಅಥಿತಿ ಗೃಹದಲ್ಲಿ ಜಿಲ್ಲೆಯ ವಿವಿದೆಡೆ ಇರುವ ಆಕ್ಸಿಜನ್ ಪ್ಲಾಂಟ್‌ಗಳ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡರು. 
ಎಂಎಸ್‌ಪಿಎಲ್ ಗ್ಯಾಸ್ ಲಿಮಿಟೆಡ್: 
ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಕಬ್ಬಿಣ ಮತ್ತು ಉಕ್ಕು ಉತ್ಪಾದನೆಯ ವಿವಿಧ ಘಟಕಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು ಎರಡು ಆಕ್ಸಿಜನ್ ಘಟಕಗಳಿದ್ದು, ಈ ಪೈಕಿ ಒಂದು ಕಾರ್ಖಾನೆಗೆ ಸೇರಿದೆ.  ಇದರ ಜೊತೆಗೆ ೨೦೦೬ರಲ್ಲಿ ಎಂಎಸ್‌ಪಿಎಲ್ ಗ್ಯಾಸ್ ಲಿಮಿಟೆಡ್ ಖಾಸಗಿ ಕಂಪನಿಗೆ ಕಾರ್ಖಾನೆ ಒಳಭಾಗದಲ್ಲಿ ಮತ್ತೊಂದು ಘಟಕ ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಅನಿಲ ರೂಪದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಕಾರ್ಖಾನೆಯಲ್ಲಿ ಉತ್ಪಾದನೆ ಇಲ್ಲದೆ ವಿವಿಧ ಘಟಕಗಳು ಮುಚ್ಚಲ್ಪಟ್ಟಿವೆ. ಈ ಹಿನ್ನಲೆಯಲ್ಲಿ ೨ ವರ್ಷಗಳಿಂದ ಈ ಕಂಪನಿ ಸಹ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ. ಪ್ರಸ್ತುತ ಸುಮಾರು ೩೦೦ ಸಿಲಿಂಡರ್‌ಗಳು ಸಂಗ್ರಹದಲ್ಲಿದ್ದು, ಈ ಸಿಲಿಂಡರ್‌ಗಳನ್ನು ವೈದ್ಯಕೀಯ ಬಳಕೆಗೆ ದ್ರವರೂಪಕ್ಕೆ ಬದಲಿಸಬೇಕಾಗಿದೆ. ಅಗತ್ಯಬಿದ್ದಲ್ಲಿ ಈ ಕಾರ್ಖಾನೆಯನ್ನು ಪುನಃ ಆರಂಭಿಸಲು ಸಂಬಂಧಪಟ್ಟ ಘಟಕದ ಆಡಳಿತ ಮಂಡಳಿಯ ಅನುಮತಿ ಪಡೆಯಬೇಕಾಗಿದೆ. ಜೊತೆಗೆ ಸಿಲಿಂಡರ್‌ಗಳನ್ನು ಸಾಗಾಣೆ ಮಾಡಲು ವಾಹನ ಪರವಾನಗಿ ನೀಡಬೇಕಾಗಿದೆ. 
ದಿ ಸದರನ್ ಗ್ಯಾಸ್ ಲಿಮಿಟೆಡ್ : 
ಈ ಘಟಕವನ್ನು ವಿಐಎಸ್‌ಎಲ್ ಕಾರ್ಖಾನೆಯ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಎಂಪಿಎಂ ಕಾರ್ಖಾನೆಯ ಸಮೀಪದಲ್ಲಿ ಸ್ಥಾಪಿಸಲಾಗಿದೆ. ಸುಮಾರು ೫ ದಶಕಗಳಿಗೂ ಹಳೇಯದಾದ ಘಟಕ ಇದಾಗಿದ್ದು, ಇದರ ಕೇಂದ್ರ ಕಛೇರಿ ಗೋವಾದಲ್ಲಿದೆ. ಈ ಘಟಕ ಸ್ಥಳೀಯವಾಗಿ ಅಗತ್ಯವಿರುವ ಆಕ್ಸಿಜನ್ ಗ್ಯಾಸ್ ಪೂರ‍್ಯಕೆಯಲ್ಲಿ ತೊಡಗಿಸಿಕೊಂಡಿದೆ. ಇಲ್ಲಿ ಆಕ್ಸಿಜನ್ ದ್ರವ ರೂಪದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ವೈದ್ಯಕೀಯ ಬಳಕೆಗೆ ಸೂಕ್ತವಾಗಿದೆ. 
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿ.ಪಂ. ಸದಸ್ಯ ಕೆ.ಇ ಕಾಂತೇಶ್, ತಹಸೀಲ್ದಾರ್ ಎಚ್.ಸಿ ಯೋಗೇಶ್, ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್, ಹಿರಿಯ ಅಧಿಕಾರಿ ಬಿ. ವಿಶ್ವನಾಥ್, ಸ್ಥಳೀಯ ಮುಖಂಡರಾದ ಜಿ. ಧರ್ಮಪ್ರಸಾಧ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

     ೧೨ ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಸಂಗ್ರಹ ಘಟಕ: 

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಪ್ರಸ್ತುತ ೧೨ ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡು ಕಾರ್ಯಾಂಭಗೊಳ್ಳಲಿದೆ. ಇದೀಗ ಅಗತ್ಯವಿರುವ ಆಕ್ಸಿಜನ್ ಬಳ್ಳಾರಿಯಿಂದ ಪೂರೈಕೆಯಾಗುತ್ತಿದ್ದು, ಹೆಚ್ಚಿನ ಅಗತ್ಯ ಕಂಡು ಬಂದಲ್ಲಿ ವಿಐಎಸ್‌ಎಲ್ ಎಂಎಸ್‌ಪಿಎಲ್ ಹಾಗೂ ಸದರನ್ ಗ್ಯಾಸ್ ಲಿಮಿಟೆಡ್‌ಗಳಿಂದ ಪೂರೈಕೆ ಮಾಡಿಕೊಳ್ಳಲಾಗುವುದು. 
                                                                - ಕೆ.ಬಿ ಶಿವಕುಮಾರ್, ಜಿಲ್ಲಾಧಿಕಾರಿ, ಶಿವಮೊಗ್ಗ