Saturday, September 5, 2020

ಜನರ ಸಂಕಷ್ಟಗಳಿಗೆ ಮಿಡಯುವ ಹೃದಯವಂತಿಕೆಯ ಜನಪ್ರತಿನಿಧಿ

ಎಂ.ಜೆ ಅಪ್ಪಾಜಿ ಸಂತಾಪ ಸೂಚಕ ಸಭೆಯಲ್ಲಿ ಕೆ.ಟಿ ಗಂಗಾಧರ್

ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ೩ ದಿನಗಳ ಹಿಂದೆ ನಿಧನ ಹೊಂದಿದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೫: ಜನರ ಸಂಕಷ್ಟಗಳಿಗೆ ಮಿಡಿಯುವ ಹೃದಯವಂತಿಕೆಯ ಗುಣ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೊಂದಿದ್ದರು. ಈ ಹಿನ್ನಲೆಯಲ್ಲಿ ಅವರು ಜನಾನುರಾಗಿಯಾಗಿ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವರಿಷ್ಠ ಕೆ.ಟಿ ಗಂಗಾಧರ್ ಬಣ್ಣಿಸಿದರು.
    ಅವರು ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಪ್ಪಾಜಿಯವರಿಗೆ ಶ್ರದ್ದಾಂಜಲಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
    ಜನಪ್ರತಿನಿಧಿಯಾಗಿ ಚುನಾಯಿತಗೊಂಡ ಅಪ್ಪಾಜಿಯವರು ಯಾವುದೇ ಪಕ್ಷಕ್ಕೆ ಅಂಟಿಕೊಳ್ಳದೆ, ಯಾರ ಹಿಡಿತಕ್ಕೂ ಒಳಗಾಗದೆ ಜನ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರಲ್ಲಿನ ರೈತಪರ, ಕಾರ್ಮಿಕರಪರ, ಬಡವರಪರ ಕಾಳಜಿ, ಬದ್ಧತೆಗಳು, ವಿಧಾನಸಭೆಯಲ್ಲಿ ಅವರ ಚರ್ಚೆಗಳು ಎಲ್ಲವೂ ಮೆಚ್ಚುಗೆ ತರುತ್ತವೆ. ಅವರಲ್ಲಿ ಸಾಮಾಜವಾದಿ ಗುಣಗಳು ಕಂಡು ಬರುತ್ತಿದ್ದವು. ಈ ಹಿನ್ನಲೆಯಲ್ಲಿ ಅವರ ಅಗಲಿಕೆ ಸಮಾಜಕ್ಕೆ ತುಂಬಾ ನಷ್ಟವನ್ನುಂಟು ಮಾಡಿದೆ ಎಂದರು.
     ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸರ್ಕಾರ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಎಚ್ಚರವಹಿಸಬೇಕು. ಈ ಸೋಂಕಿನಿಂದ ಬಡವರನ್ನು ರಕ್ಷಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
       ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಮಾತನಾಡಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
    ಸಂಘದ ತಾಲೂಕು ಶಾಖೆ ಅಧ್ಯಕ್ಷ ಎಚ್.ಪಿ ಹಿರಿಯಣ್ಣಯ್ಯ, ಪ್ರಧಾನ ಕಾರ್ಯದರ್ಶಿ ರಾಮಚಂದ್ರರಾವ್ ಘೋರ್ಪಡೆ, ರೈತ ಮುಖಂಡ  ಮಂಜಪ್ಪ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಪ್ಪಾಜಿ ಕುಟುಂಬಕ್ಕೆ ಬಿ.ವೈ ರಾಘವೇಂದ್ರ ಸಾಂತ್ವಾನ

ಭದ್ರಾವತಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿವಾಸಕ್ಕೆ ಶನಿವಾರ ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡಿ ಅಪ್ಪಾಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಭದ್ರಾವತಿ, ಸೆ. ೫: ಕಳೆದ ೩ ದಿನಗಳ ಹಿಂದೆ ನಿಧನ ಹೊಂದಿದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿವಾಸಕ್ಕೆ ಸಂಸದ ಬಿ.ವೈ ರಾಘವೇಂದ್ರ ಶನಿವಾರ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದರು.
     ಅಪ್ಪಾಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಂಸದರು ಗೌರವ ಸೂಚಿಸಿದರು. ಶಾರದ ಅಪ್ಪಾಜಿ, ಪುತ್ರ ಎಂ.ಎ ಅಜಿತ್ ಹಾಗು ಕುಟುಂಬ ವರ್ಗದವರಿಗೆ ಸಾಂತ್ವಾನ ತಿಳಿಸಿದರು.
    ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮುಖಂಡರಾದ ಎಸ್. ದತ್ತಾತ್ರಿ, ವಿ. ಕದಿರೇಶ್, ಜಿ. ಆನಂದಕುಮಾರ್, ಮಂಗೋಟೆ ರುದ್ರೇಶ್, ಜಿ. ಧರ್ಮಪ್ರಸಾದ್, ಎಂ. ಪ್ರಭಾಕರ್, ಹನುಮಂತನಾಯ್ಕ, ಸಂತೋಷ್ ಬಳ್ಳೇಕೆರೆ, ಕಾಮತ್, ಮೋಹನ್, ಸುನಿಲ್‌ಗಾಯಕ್‌ವಾಡ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡಿ : ಮನವಿ

ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರಿಡಲು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೫: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ಶನಿವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
       ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೩೦ ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡುವ ಮೂಲಕ ದೀನ ದಲಿತರ, ಬಡವರ ಆಶಾಕಿರಣವಾಗಿದ್ದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ನೆನಪು ಜನಮಾನಸದಲ್ಲಿ ಉಳಿದಿದ್ದು, ಅವರ ಸೇವೆಯನ್ನು ಸ್ಮರಿಸುವ ಮೂಲಕ ಅವರಿಗೆ ಗೌರವ ಸೂಚಿಸುವ ಹಿನ್ನಲೆಯಲ್ಲಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
       ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕಾರ್ಯಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಉಪಾಧ್ಯಕ್ಷರಾದ ಎಂ.ವಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಕ್ರಂಖಾನ್ , ಸಂಚಾಲಕರಾದ ಗಾಯಕ್‌ವಾಡ್, ಸುಬ್ಬೇಗೌಡ, ಸೀನಪ್ಪ, ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, September 4, 2020

ಶಿಕ್ಷಕರ ದಿನಾಚರಣೆ : ೩ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

ಚಂದ್ರಶೇಖರಪ್ಪ ಚಕ್ರಸಾಲಿ

ಭದ್ರಾವತಿ, ಸೆ. ೪: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಶಿಕ್ಷಕರ ದಿನಾಚರಣೆ ಸರಳವಾಗಿ ನಡೆಯುತ್ತಿದ್ದು, ಈ ನಡುವೆ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿರುವ ತಾಲೂಕಿನ ೩ ಶಿಕ್ಷಕರಿಗೆ ಈ ಬಾರಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
      ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ಹನುಮಂತನಗರ ಎ.ಕೆ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರಪ್ಪ ಚಕ್ರಸಾಲಿಯವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಚಕ್ರಸಾಲಿಯವರು ಮೂತಃ ಹಿರೇಕೆರೆ ತಾಲೂಕಿನ ರಟ್ಟೇಹಳ್ಳಿ ಗ್ರಾಮದವರಾಗಿದ್ದಾರೆ. ಕುಂಬಾರಿಕೆ ವೃತ್ತಿ ಕುಟುಂಬದಲ್ಲಿ ಹುಟ್ಟಿ ಬೆಳೆದ ಇವರು ಬಡತನದಲ್ಲಿ ವಿದ್ಯಾಭ್ಯಾಸ ಪೂರೈಸಿ ೧೯೯೮ರಲ್ಲಿ ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡರು. ಆರಂಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
        ಶಿಕ್ಷಕ ವೃತ್ತಿ ಜೊತೆಗೆ ಜಾನಪದ ಕಲೆಯನ್ನು ಪ್ರವೃತ್ತಿಯನ್ನಾಗಿಸಿಕೊಂಡಿದ್ದು, ಗೀಗೀ ಪದ, ಭಜನಾ ಪದ, ಡೊಳ್ಳು ಕುಣಿತ, ನಾಟಕ ಸೇರಿದಂತೆ ಇನ್ನಿತರ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಸಕ್ತಿ ಹೊಂದಿದ್ದಾರೆ.  ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬಿ. ಮಂಜಪ್ಪ

      ಹಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಾಲೂಕಿನ ಕಾಳಿಂಗನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯೋಪಾಧ್ಯಾಯ ಬಿ. ಮಂಜಪ್ಪರವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಮಂಜಪ್ಪರವರು ೧೯೮೫ರಲ್ಲಿ ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ೧೯೮೫ ರಿಂದ ೧೯೯೩ರವರೆಗೆ ಕರ್ತವ್ಯ ನಿರ್ವಹಿಸಿದ್ದು, ನಂತರ ೧೯೯೩ ರಿಂದ ಇಲ್ಲಿಯವರೆಗೆ ಭದ್ರಾವತಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
       ಇವರು ಚಿತ್ರಕಲೆ, ಸಂಗೀತ, ರಂಗಕಲೆ, ಕ್ರೀಡೆಗಳಲ್ಲಿ ಆಸಕ್ತಿ ಹೊಂದಿದ್ದು, ಬೆಂಗಳೂರಿನ ಪ್ರತಿಭಾ ಪರಿಷತ್ ವತಿಯಿಂದ ೨೦೧೦ರಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ, ೨೦೦೩ರಲ್ಲಿ ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ, ಜನಗಣತಿ ಸೇವೆಗಾಗಿ ೨೦೦೧ರಲ್ಲಿ ರಜತ ಪದಕ, ೨೦೧೦ರಲ್ಲಿ ರಾಜ್ಯಮಟ್ಟದ ಕನಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
      

   ಕೆ. ಜ್ಯೋತಿ
ಪ್ರೌಢಶಾಲಾ ವಿಭಾಗದಲ್ಲಿ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕಿ ಕೆ. ಜ್ಯೋತಿಯವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ.  ಜ್ಯೋತಿಯವರು ೨೦೦೯ರಲ್ಲಿ ಈ ಶಾಲೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಇವರು ಉತ್ತಮ ಕ್ರೀಡಾಪಟು ಆಗಿದ್ದು,  ೨೦೦೦ ರಿಂದ ೨೦೦೩ರ ವರೆಗೆ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ನಾಯಕಿಯಾಗಿದ್ದರು. ೮ ರಾಷ್ಟ್ರಮಟ್ಟದ, ೧೫ ರಾಜ್ಯಮಟ್ಟದ ಮತ್ತು ೨೫ ಜಿಲ್ಲಾ ಮಟ್ಟದ ಪ್ರಶಸ್ತಿ ಹಾಗು ೩ ವಿಶ್ವ ವಿದ್ಯಾನಿಲಯ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಇವರು ಈ ಶಾಲೆಯಲ್ಲಿ ಕರ್ತವ್ಯ ಆರಂಭಿಸಿದ ನಂತರ ಮಕ್ಕಳನ್ನು ಹೆಚ್ಚಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಮೂಲಕ ೩ ರಾಷ್ಟ್ರಮಟ್ಟದ, ೧೫ ರಾಜ್ಯಮಟ್ಟದ ಹಾಗೂ ೩೦ ಜಿಲ್ಲಾಮಟ್ಟದ ಹಾಗು ೫೦ಕ್ಕೂ ಹೆಚ್ಚು ತಾಲೂಕು ಮಟ್ಟದ ಪ್ರಶಸ್ತಿಗಳು ಶಾಲೆಗೆ ಲಭಿಸಿವೆ.

ಎ.ವಿ ನಂಜಯ್ಯ ನಿಧನ

ಎ.ವಿ ನಂಜಯ್ಯ
ಭದ್ರಾವತಿ, ಸೆ. ೪: ಎಂಪಿಎಂ ಕಾರ್ಖಾನೆಯ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ಸಿದ್ದಾರೂಢ ನಗರದ ನಿವಾಸಿ ಎ.ವಿ ನಂಜಯ್ಯ(೬೪) ಶುಕ್ರವಾರ ನಿಧನ ಹೊಂದಿದರು.
        ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹೊಂದಿದ್ದರು. ಶನಿವಾರ ಬೆಳಿಗ್ಗೆ ತಾಲೂಕಿನ ಗುಡ್ಡದ ನೇರಳೆಕೆರೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮೃತರ ನಿಧನಕ್ಕೆ ಎಂಪಿಎಂ ಕಾರ್ಖಾನೆಯ ಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ತಾಲೂಕು ಬೋರ್ಡ್ ಮಾಜಿ ಅಧ್ಯಕ್ಷ ಪಟೇಲ್ ಸಿದ್ದಲಿಂಗಪ್ಪ ನಿಧನ

ಪಟೇಲ್ ಸಿದ್ದಲಿಂಗಪ್ಪ
ಭದ್ರಾವತಿ, ಸೆ. ೪: ತಾಲೂಕು ಬೋರ್ಡ್ ಮಾಜಿ ಅಧ್ಯಕ್ಷರಾದ ಸಿಂಗನ ಮನೆ ಗ್ರಾಮದ ನಿವಾಸಿ ಪಟೇಲ್ ಸಿದ್ದಲಿಂಗಪ್ಪ(೯೦) ಶುಕ್ರವಾರ ನಿಧನ ಹೊಂದಿದರು.
   ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದಲಿಂಗಪ್ಪನವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದು, ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ಸಿಂಗನಮನೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ, ಗ್ರಾಮದ ಮೊದಲ ಪ್ರಧಾನರಾಗಿ ಸೇವೆ ಸಲ್ಲಿಸಿದ್ದರು.
     ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ, ಕುವೆಂಪು ವಿ.ವಿ ಆರಂಭಕ್ಕೆ ಹೆಚ್ಚಿನ ಶ್ರಮ ವಹಿಸಿದ್ದರು. ಅಂದಿನ ಶಿಕ್ಷಣ ಸಚಿವರಾಗಿದ್ದ ಎ.ಆರ್ ಬದರಿನಾರಾಯಣ್‌ರವರ ಒಡನಾಡಿಯಾಗಿದ್ದರು.
    ಸಿದ್ದಲಿಂಗಪ್ಪನವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಸಿಂಗನಮನೆ ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಟಿ.ಡಿ ಶಶಿಕುಮಾರ್, ಜಿಲ್ಲಾ ಗೌರವಾಧ್ಯಕ್ಷ ಜಿ.ಆರ್ ತ್ಯಾಗರಾಜ್, ಸಾಧನ ಮಹಿಳಾ ವೇದಿಕೆ ಅಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು, ಸಿಂಗನಮನೆ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗು ಗ್ರಾಮದ ಹಿರಿಯರು, ಮುಖಂಡರು, ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

Thursday, September 3, 2020

ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಗಳ ಕಣ್ಣಂಚಿನಲ್ಲಿ ಲೀನವಾದ ಮಾಜಿ ಶಾಸಕ

ಬುಧವಾರ ರಾತ್ರಿ ನಿಧನ ಹೊಂದಿದ ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿರುವ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು.
ಭದ್ರಾವತಿ, ಸೆ. ೩: ಬುಧವಾರ ರಾತ್ರಿ ನಿಧನ ಹೊಂದಿದ ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳ ಕಣ್ಣಂಚಿನಲ್ಲಿ ಲೀನವಾಗಿದ್ದು, ಗುರುವಾರ ಸಂಜೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿತು.
    ಅಪ್ಪಾಜಿಯವರ ಅಂತಿಮ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡ ಕಾರಣ ಬೆಳಿಗ್ಗೆ ೧೧ ಗಂಟೆಗೆ ನಡೆಯಬೇಕಿದ್ದ ಅಂತ್ಯಕ್ರಿಯೆ ವಿಳಂಬವಾಗಿದ್ದು, ತಾಲೂಕಿನ ಗೋಣಿಬೀಡು ಗ್ರಾಮದಲ್ಲಿರುವ ಅಪ್ಪಾಜಿಯವರ ತೋಟ ತಲುಪುವಲ್ಲಿ ಸಂಜೆಯಾಯಿತು. ಈ ನಡುವೆ ಬಾರಿ ಮಳೆಯಿಂದಾಗಿ ಮತ್ತಷ್ಟು ವಿಳಂಬವಾಯಿತು. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಗಿದ್ದು, ಪುತ್ರ, ನಗರಸಭೆ ಸದಸ್ಯ ಎಂ.ಎ ಅಜಿತ್ ಅಗ್ನಿ ಸ್ಪರ್ಶ ನೆರವೇರಿಸಿದರು.
       ಅಪ್ಪಾಜಿ ಮೃತಪಟ್ಟ ನಂತರ ಅವರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಆದರೂ ಸಹ ಮುನ್ನಚ್ಚರಿಕೆ ಕ್ರಮಗಳೊಂದಿಗೆ ಬೆಳಿಗ್ಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವರ ನಿವಾಸದಲ್ಲಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕೊರೋನಾ ಭೀತಿ ನಡುವೆಯೂ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ತಾಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಹೆಚ್ಚಿನ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.