Tuesday, September 15, 2020

ತಾ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಎಂ. ನಾಗರಾಜ್

ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಕಲ್ಲಿಹಾಳು ಕ್ಷೇತ್ರದ ಸದಸ್ಯ ಎಂ. ನಾಗರಾಜ್ ಆಯ್ಕೆಯಾಗಿದ್ದು, ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರನ್ನು ಅಭಿನಂದಿಸಲಾಯಿತು.  
ಭದ್ರಾವತಿ, ಸೆ. ೧೫: ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಕಲ್ಲಿಹಾಳು ಕ್ಷೇತ್ರದ ಸದಸ್ಯ ಎಂ. ನಾಗರಾಜ್ ಆಯ್ಕೆಯಾದರು.
       ತಾಲೂಕು ಪಂಚಾಯಿತಿಯಲ್ಲಿ ಪ್ರಸ್ತುತ ಚುನಾಯಿತ ಸದಸ್ಯರ ಅಧಿಕಾರ ಅವಧಿ ಸುಮಾರು ೮ ತಿಂಗಳು ಬಾಕಿ ಉಳಿದಿದ್ದು, ಈ ಅವಧಿಗೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಎಂ. ನಾಗರಾಜ್‌ರವರು ಆಯ್ಕೆಯಾಗಿರುವುದನ್ನು ಅಧ್ಯಕ್ಷೆ ಡಿ. ಲಕ್ಷ್ಮೀದೇವಿ ಘೋಷಿಸಿದರು.
      ತಾಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಧಿಕಾರ ಹಂಚಿಕೊಂಡಿದ್ದು, ಪ್ರಸ್ತುತ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ೨ ಸ್ಥಾನಗಳು ಜೆಡಿಎಸ್ ಸದಸ್ಯರ ಪಾಲಾಗಿವೆ. ಸ್ಥಾಯಿ ಸಮಿತಿ ಸ್ಥಾನ ಮಾತ್ರ ಈ ಹಿಂದೆ ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿ ಮತ್ತು ಕರಿಯಣ್ಣರವರು ಮಾಡಿಕೊಂಡಿದ್ದ ಹಂಚಿಕೆ ಸೂತ್ರದಂತೆ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ.
      ಉಪಾಧ್ಯಕ್ಷೆ ನೇತ್ರಾಬಾಯಿ, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಕಾರ್ಯನಿರ್ವಾಹಣಾಧಿಕಾರಿ ಡಾ. ಜಿ. ಮಂಜುನಾಥ್, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ, ಸದಸ್ಯರಾದ ಧರ್ಮೇಗೌಡ, ಆರ್. ತಿಪ್ಪೇಶ್‌ರಾವ್, ಅಣ್ಣಾಮಲೈ, ಗೀತಾ ಜಗದೀಶ್, ಎಚ್.ಎಂ. ಪ್ರೇಮ್‌ಕುಮಾರ್, ಯಶೋದಮ್ಮ, ಎಂ.ಜಿ ದಿನೇಶ್, ಕೆ.ವಿ ರುದ್ರಪ್ಪ ಮತ್ತು ಆಶಾ ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿವಿಧೆಡೆ ನಗರದ ನಿರ್ಮಾತೃ, ಅನ್ನದಾತ ಸರ್‌ಎಂವಿ ದಿನಾಚರಣೆ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಆಡಳಿತ ಕಛೇರಿ ಮುಂಭಾಗದಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
ಭದ್ರಾವತಿ, ಸೆ. ೧೫: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಭಾರತರತ್ನ, ನಗರದ ನಿರ್ಮಾತೃ, ಅನ್ನದಾತ  ಸರ್.ಎಂ. ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
      ಕಾರ್ಖಾನೆ ಆಡಳಿತ ಕಛೇರಿ ಮುಂಭಾಗದಲ್ಲಿರುವ ಸರ್.ಎಂ.ವಿ ಪ್ರತಿಮೆಗೆ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್ ಮಾಲಾರ್ಪಣೆ ನೆರವೇರಿಸಿ ಗೌರವ ಸಲ್ಲಿಸಿದರು.
        ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಸುರಜೀತ್ ಮಿಶ್ರ,  ಮಹಾಪ್ರಬಂಧಕರು ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರವರ್ತಿ,  ಕಾರ್ಮಿಕ ಸಂಘದ ಅಧ್ಯಕ್ಷ  ಜೆ. ಜಗದೀಶ್, ಅಧ್ಯಕ್ಷರು,  ಅಧಿಕಾರಿಗಳ ಸಂಘದ ಅಧ್ಯಕ್ಷ ಏ.ಆರ್ ವೀರಣ್ಣ ಹಾಗೂ ವಿವಿಧ ಇಲಾಖೆಗಳು ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.  


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಅತಿಥಿ ಗೃಹದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಿದರು.  
       ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಜನ್ಮ ದಿನಾಚರಣೆ:
    ನ್ಯೂಟೌನ್ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಅತಿಥಿ ಗೃಹದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಿದರು.  
ಕಾರ್ಯಕ್ರಮವನ್ನು ಮಹಾಪ್ರಬಂಧಕರು ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರವರ್ತಿ, ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯ್ಕ, ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜನಾಥ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಅತಿಥಿಗೃಹದ ಅಧಿಕಾರಿಗಳಾದ ಚಂದ್ರಕಾಂತ, ಉಮೇಶ್ ಹುಕ್ಕೆ, ಸಿಬ್ಬಂದಿಗಳಾದ ಮೋಹನ್, ಪ್ರಭಾಕರ್, ಅಸ್ಲಾಂ, ಆದಿನಾರಾಯಣ, ಅಖಿಲ, ಪ್ರತಾಪ್, ರವಿ, ವಿಲ್ಸನ್, ಸೋಮಶೇಖರ್, ಪದ್ಮಮ್ಮ, ಸುಜಾತಮ್ಮ, ಸಾವಿತ್ರಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಸರ್.ಎಂ. ವಿಶ್ವೇಶ್ವರಾಯ ಅಭಿಮಾನ ಬಳಗದಿಂದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
        ರೈಲ್ವೆ ನಿಲ್ದಾಣದ ಬಳಿ ಸರ್.ಎಂ.ವಿ ದಿನಾಚರಣೆ:
    ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಸರ್.ಎಂ. ವಿಶ್ವೇಶ್ವರಾಯ ಅಭಿಮಾನ ಬಳಗದಿಂದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
       ಸರ್.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಿ ಸಿಹಿ ಹಂಚಲಾಯಿತು. ಅಭಿಮಾನಿ ಬಳಗದ ಪ್ರಮುಖರಾದ ಎನ್. ಕೃಷ್ಣಮೂರ್ತಿ, ಎಂ.ಎಸ್ ಮುರುಳಿ, ಆರ್.ಜಿ ಶ್ರೀನಿವಾಸಶೆಟ್ಟಿ, ಬಿ.ಎಂ ಮಹಾದೇವಯ್ಯ, ರಮೇಶ್, ತಿಮ್ಮಯ್ಯ, ಮಹಾದೇವ, ನಾರಾಯಣ, ಬಿ.ಎಸ್ ಮಂಜುನಾಥ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಯ್ಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
       ವಿಜ್ಞಾನ ಕಾಲೇಜಿನಲ್ಲಿ ಸರ್.ಎಂ.ವಿ ದಿನಾಚರಣೆ:
      ನಗರದ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಯ್ಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
    ಕಾಲೇಜಿನಲ್ಲಿ ಪ್ರತಿಷ್ಠಾಪಿಸಲಾಗಿರುವ ಸರ್.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎ ವಿಷ್ಣುಮೂರ್ತಿ, ಹಿರಿಯ ಪತ್ರಕರ್ತ ಕೆ.ಎನ್ ರವೀಂದ್ರನಾಥ್(ಬ್ರದರ್), ಎನ್‌ಎಸ್‌ಎಸ್ ಅಧಿಕಾರಿ ಸೋಮಶೇಖರ್, ರೇಂಜರ‍್ಸ್ ಅಂಡ್ ರೋವರ‍್ಸ್ ಅಧಿಕಾರಿಗಳಾದ ವಿ. ಅನಿತಾ, ಕೆ.ಎಸ್ ಗಂಧರ್ವ, ಟಿ.ಎಸ್. ರಶ್ಮಿ, ವಸಂತಕುಮಾರ್ ಹಾಗು ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಭದ್ರಾವತಿ ಎಂಪಿಎಂ ಕಾರ್ಖಾನೆಯಲ್ಲಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
          ಎಂಪಿಎಂ ಕಾರ್ಖಾನೆಯಲ್ಲಿ ಸರ್‌ಎಂವಿ ದಿನಾಚರಣೆ:
      ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
      ಕಾರ್ಖಾನೆಯಲ್ಲಿರುವ ಸರ್‌ಎಂವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನಾಥ್, ಆಡಳಿತಾಧಿಕಾರಿ ಶ್ರೀನಿವಾಸ್, ಕಾರ್ಖಾನೆಯ ಅರಣ್ಯ ವಿಭಾಗದ ಅರಣ್ಯಾಧಿಕಾರಿ ಆರ್. ರಘುನಾಥ್, ನಗರಾಡಳಿತಾಧಿಕಾರಿ ಸತೀಶ್,  ಕಾರ್ಮಿಕ ಸಂಘದ ಅಧ್ಯಕ್ಷ ಧರ್ಮಲಿಂಗ ಸ್ವಾಮಿ, ಕಾರ್ಯದರ್ಶಿ ದಿನೇಶ್, ಕಾರ್ಮಿಕ ಮುಖಂಡ ಎಸ್. ಚಂದ್ರಶೇಖರ್ ಸೇರಿದಂತೆ ಕಾರ್ಮಿಕರು ಉಪಸ್ಥಿತರಿದ್ದರು.

Monday, September 14, 2020

ಎಲ್ಲಾ ಭಾಷೆಗಳಿಗೂ ಅಧಿಕೃತ ಸ್ಥಾನಮಾನ ನೀಡಿ

ಕರಾವೇ ವತಿಯಿಂದ ತಹಸೀಲ್ದಾರ್‌ಗೆ ಮನವಿ

ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವಂತೆ ಎಲ್ಲಾ ಭಾಷೆಗಳಿಗೂ ಅಧಿಕೃತ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೪: ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಬಲವಂತವಾಗಿ ಹಿಂದಿಯೇತರ ಭಾಷೆಗಳ ರಾಜ್ಯಗಳ ಮೇಲೆ ಹೇರುತ್ತಿರುವ ಕ್ರಮ ಖಂಡನೀಯವಾಗಿದ್ದು, ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವಂತೆ ಎಲ್ಲಾ ಭಾಷೆಗಳಿಗೂ ಅಧಿಕೃತ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
      ಸಂವಿಧಾನದಲ್ಲಿ ಎಲ್ಲಿಯೂ ಯಾವ ಭಾಷೆಯನ್ನು ಸಹ ರಾಷ್ಟ್ರ ಭಾಷೆಯನ್ನಾಗಿ ಅನುಮೋದಿಸಿಲ್ಲ. ಆದರೂ ಸಹ ಸ್ವಾತಂತ್ರ್ಯ ಬಂದಾನಿಂದಲೂ ಹಿಂದಿ ಭಾಷೆಯನ್ನು  ನಿರಂತರವಾಗಿ ಹಿಂದಿಯೇತರ ಭಾಷೆಗಳ ರಾಜ್ಯಗಳ ಮೇಲೆ ಹೇರುವ ಪ್ರಯತ್ನ ನಡೆಸಲಾಗುತ್ತಿದೆ. ಭಾರತ ಭಾಷಾವಾರು ಪ್ರಾಂತ್ಯಗಳ ದೇಶವಾಗಿದ್ದು, ಪ್ರತಿಯೊಂದು ಭಾಷೆ ತನ್ನದೇ ಆದ ಪರಂಪರೆಯನ್ನು ಹೊಂದಿವೆ. ಪ್ರಸ್ತುತ ಈ ಭಾಷೆಗಳು ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿ ಬಂದು ತಲುಪಿವೆ. ಈ ನಡುವೆ ಕೇಂದ್ರ ಸರ್ಕಾರ ಆಡಳಿತ ಭಾಷೆ ಎನ್ನುವ ನೆಪದಲ್ಲಿ ಹಿಂಬಾಗಿಲ ಮೂಲಕ ಹಿಂದಿಯೇತರ ಭಾಷೆಗಳ ರಾಜ್ಯಗಳ ಮೇಲೆ ಹೇರುತ್ತಿರುವುದು ಖಂಡನೀಯ.  ತಕ್ಷಣ 'ಹಿಂದಿ ಸಪ್ತಾಹ' ಆಚರಣೆಯನ್ನು ಕೈ ಬಿಡಬೇಕೆಂದು ಆಗ್ರಹಿಸಿದರು.
        ಹಿಂದಿಯೇತರ ಭಾಷೆಗಳ ಉಳಿವಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತಂದು ೮ನೇ ಪರಿಚ್ಛೇದದಲ್ಲಿರುವ ಎಲ್ಲಾ ೨೨ ಭಾಷೆಗಳಿಗೂ ಅಧಿಕೃತ ಸ್ಥಾನಮಾನ ಸಿಗುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವ ಜೊತೆಗೆ ಸೆ.೧೪ ಭಾರತೀಯ ಭಾಷಾ ದಿನವಾಗಿಸಬೇಕೆಂದು ಒತ್ತಾಯಿಸಲಾಯಿತು.
ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್, ಯುವ ಘಟಕದ ಅಧ್ಯಕ್ಷ ಮನು, ಗೌರವಾಧ್ಯಕ್ಷ ವೀರಲಾಲ್, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಸದಸ್ಯರಾದ ಪ್ರವೀಣ್ ಕುಮಾರ್, ಪವನ್ ಕುಮಾರ್, ಜೆ. ಯೋಗೇಶ್, ಗೋಪಿನಾಥ್, ದಿಲೀಪ್, ನರಸಿಂಹಮೂರ್ತಿ, ವಡಿವೇಲು, ಕುಮಾರ್ ಮತ್ತು ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೌರಾಯುಕ್ತ ಮನೋಹರ್ ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿ ವಿಶೇಷ ಪೂಜೆ

ಭದ್ರಾವತಿ ನಗರಸಭೆ ಪೌರಾಯುಕ್ತ ಮನೋಹರ್ ಹಾಗು ಕುಟುಂಬ ವರ್ಗ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೪: ಸದಾ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜನರ ಮೆಚ್ಚುಗೆಗೆ ಪಾತ್ರರಾಗಿರುವ ನಗರಸಭೆ ಪೌರಾಯುಕ್ತ ಮನೋಹರ್ ಹಾಗು ಕುಟುಂಬ ವರ್ಗ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
     ನಗರಸಭೆ ಪೌರಾಯುಕ್ತರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದು, ನಗರದ ಬೆಳವಣಿಗೆಗೆ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಅದರಲ್ಲೂ ಜಿಲ್ಲೆಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಹಗಲಿರುಳು ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು.  ಅಲ್ಲದೆ ಇತ್ತೀಚೆಗೆ ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಅವರೊಂದಿಗೆ ನಗರಸಭೆ ವ್ಯಾಪ್ತಿಯ ಸುಮಾರು ೭೦ ಕೆರೆಗಳ ಬೌಂಡರಿ ನಿಗದಿಪಡಿಸುವ ಕಾರ್ಯದಲ್ಲೂ ತೊಡಗಿದ್ದರು.
      ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿರುವ ಮನೋಹರ್ ಹಾಗು ಕುಟುಂಬ ವರ್ಗ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಎನ್.ಎಸ್ ಕೃಷ್ಣಮೂರ್ತಿ ಸೋಮಯಾಜಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.
       ಪ್ರಮುಖರಾದ ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ರಮಾವೆಂಕಟೇಶ್, ಶೈಲಜ ರಾಮಕೃಷ್ಣ, ದೇವಿಕಾ ನಗರಾಜ್, ಹೇಮಾ ಕೃಷ್ಣಮೂರ್ತಿ, ಶ್ರೀಲಕ್ಷ್ಮಿ ಚಿದಂಬರ, ಗ್ಸೇವಿಯರ್, ಮಹಮ್ಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೆ.ಎಲ್ ಅಶೋಕ್ ಮೇಲಿನ ದೌರ್ಜನ್ಯ ಪ್ರಕರಣ : ಪೊಲೀಸರ ಅಮಾನತಿಗೆ ಆಗ್ರಹ

ಪ್ರಗತಿಪರ ಸಂಘಟನೆಗಳಿಂದ ತಹಸೀಲ್ದಾರ್‌ಗೆ ಮನವಿ

ಭದ್ರಾವತಿಯಲ್ಲಿ ಸೋಮವಾರ ಸಾಮಾಜಿಕ ಹೋರಾಟಗಾರ  ಕೆ.ಎಲ್ ಅಶೋಕ್‌ರವರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ಪೊಲೀಸರನ್ನು ತಕ್ಷಣ ಅಮಾನತುಗೊಳಿಸುವಂತೆ ಆಗ್ರಹಿಸಿ  ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೪: ಸಾಮಾಜಿಕ ಹೋರಾಟಗಾರ, ಕೋಮು ಸೌಹಾರ್ದ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್‌ರವರನ್ನು ವಿನಾಕಾರಣ ನಿಂದಿಸಿ ದೌರ್ಜನ್ಯ ನಡೆಸಿರುವ ಕೊಪ್ಪ ಪೊಲೀಸರನ್ನು ತಕ್ಷಣ ಅಮಾನತುಗೊಳಿಸುವಂತೆ ಆಗ್ರಹಿಸಿ ಸೋಮವಾರ ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
        ಅಶೋಕ್‌ರವರು ಕುಟುಂಬ ಸಮೇತ ಕೊಪ್ಪ ತಾಲೂಕಿಗೆ ತೆರಳಿದ್ದಾಗ ಅಲ್ಲಿನ ಪೊಲೀಸರು ವಾಹನ ನಿಲುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿನಾಕಾರಣ ನಿಂದಿಸಿ ದೌರ್ಜನ್ಯ ನಡೆಸಿದ್ದಾರೆ. ಅಶೋಕ್‌ರವರು ಯಾರೆಂಬುದು ತಿಳಿದಿದ್ದರೂ ಸಹ ಈ ರೀತಿ ದೌರ್ಜನ್ಯ ನಡೆಸಿರುವುದು ಸರಿಯಲ್ಲ. ಉದ್ದೇಶಪೂರ್ವಕವಾಗಿ ಈ ಘಟನೆ ನಡೆದಿದ್ದು, ಈ ಹಿನ್ನಲೆಯಲ್ಲಿ ಘಟನೆಗೆ ಕಾರಣಕರ್ತರಾದ ಪೊಲೀಸರನ್ನು ತಕ್ಷಣ ಅಮಾನತುಗೊಳಿಸುವಂತೆ ಆಗ್ರಹಿಸಿದರು.
     ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ ನೇತೃತ್ವ ವಹಿಸಿದ್ದರು. ಮುಖಂಡರಾದ ಜಿ. ರಾಜು, ಫೀರ್ ಷರೀಫ್, ಎಚ್. ರವಿಕುಮಾರ್, ಮುನೀರ್ ಅಹಮದ್, ರಾಜೇಂದ್ರ, ನಾಗವೇಣಿ, ಜೆ.ಬಿ.ಟಿ ಬಾಬು, ಇಬ್ರಾಹಿಂ ಖಾನ್, ಲಿಂಗೋಜಿರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡಿ : ವೈ.ಎಸ್.ವಿ ದತ್ತಾ

ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರಿಡಲು ಆಗ್ರಹಿಸಿ ಸೋಮವಾರ ಸತ್ಯಾಗ್ರಹ ನಡೆಸುವ ಮೂಲಕ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೪: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರು ನಾಮಕರಣ ಮಾಡಲು ಕ್ಷೇತ್ರದ ಎಲ್ಲರೂ ಸಹಕಾರ ನೀಡಬೇಕೆಂದು ಮಾಜಿ ಶಾಸಕ ವೈಎಸ್‌ವಿ ದತ್ತಾ ಮನವಿ ಮಾಡಿದರು.
       ಅವರು ಸೋಮವಾರ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಮತ್ತು ಎಂ.ಜೆ ಅಪ್ಪಾಜಿ ಅಭಿಮಾನಿಗಳ ಸಂಘದ ವತಿಯಿಂದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರು ನಾಮಕರಣಗೊಳಿಸಲು ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಸತ್ಯಾಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
      ಅಪ್ಪಾಜಿ ಅವರೊಂದಿಗೆ ಸುಮಾರು ೨ ದಶಕಗಳಿಗೂ ಹೆಚ್ಚು ಕಾಲದ ಒಡನಾಟ ಹೊಂದಿದ್ದು, ಅಪ್ಪಾಜಿ ಕೇವಲ ರಾಜಕಾರಣಿಯಾಗಿರಲಿಲ್ಲ. ಭದ್ರಾವತಿ ಕ್ಷೇತ್ರದ ಜನನಾಯಕರಾಗಿದ್ದ ಅವರು ಎಂದೆಂದಿಗೂ ಜನರ ಮನಸ್ಸಿನಲ್ಲಿ ಉಳಿದುಕೊಳ್ಳುವ ವ್ಯಕ್ತಿಯಾಗಿದ್ದಾರೆ. ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಅವರ ಶ್ರಮ ಹೆಚ್ಚಿನದ್ದಾಗಿದ್ದು, ಈ ಹಿನ್ನಲೆಯಲ್ಲಿ ಅವರ ಹೆಸರು ನಾಮಕರಣಗೊಳಿಸುವಲ್ಲಿ ಯಾವುದೇ ತಪ್ಪಿಲ್ಲ ಎಂದರು.
     ಪ್ರಸ್ತುತ ನಡೆಯುತ್ತಿರುವ ಹೋರಾಟ ಸದ್ಯಕ್ಕೆ ಯಶಸ್ವಿಯಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ. ಇದೊಂದು ಪಕ್ಷಾತೀತ ಹೋರಾಟವಾಗಿದ್ದು, ಈ ಹೋರಾಟಕ್ಕೆ ಕ್ಷೇತ್ರದ ಎಲ್ಲರೂ ಸಹಕಾರ ನೀಡುತ್ತಾರೆಂಬ ವಿಶ್ವಾಸವಿದೆ. ಒಂದು ವೇಳೆ ಇದು ರಾಜಕೀಯ ತಿರುವು ಪಡೆದುಕೊಂಡಲ್ಲಿ ನಮ್ಮ ಹೋರಾಟ ಸಹ ಬೇರೆ ರೀತಿಯಲ್ಲಿ ಸಾಗಲಿದೆ. ಸರ್ಕಾರ ಸಹ ಈ ನಿಟ್ಟಿನಲ್ಲಿ ಸಹಕಾರ ನೀಡುವ ಜೊತೆಗೆ ಈ ಕ್ಷೇತ್ರದ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕೆಂದರು.
       ಅಪ್ಪಾಜಿ ಒಡನಾಡಿ, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಮಾತನಾಡಿ, ಅಪ್ಪಾಜಿ ಅಂದು ಈ ಬಸ್ ನಿಲ್ದಾಣ ನಿರ್ಮಾಣಕ್ಕೆ ಕೈಗೊಂಡ ಶ್ರಮ ಯಾರು ಸಹ ಮರೆಯುವಂತಿಲ್ಲ. ಯಾವುದೇ ಸ್ವಾರ್ಥವಿಲ್ಲದೆ, ಜನರ ಕಲ್ಯಾಣಕ್ಕಾಗಿ ಅನೇಕ ಸವಾಲುಗಳನ್ನು ಸ್ವೀಕರಿಸಿ ಬಸ್ ನಿಲ್ದಾಣ ನಿರ್ಮಾಣಗೊಳ್ಳುವಲ್ಲಿ  ಪ್ರಮುಖ ಪಾತ್ರವಹಿಸಿದ್ದರು. ಈ ಹಿನ್ನಲೆಯಲ್ಲಿ ಕೇವಲ ಅಪ್ಪಾಜಿ ಹೆಸರನ್ನು ನಾಮಕರಣಗೊಳಿಸಿದರೆ ಸಾಲದು ಅವರ ಪುತ್ಥಳಿಯನ್ನು ನಿರ್ಮಿಸಬೇಕು. ಆ ಮೂಲಕ ಈ ಬಸ್ ನಿಲ್ದಾಣದ ರೂವಾರಿ ಯಾರು ಎಂಬುದು ಭವಿಷ್ಯದ ಜನರಿಗೆ ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ ಎಂದರು.


ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರಿಡಲು  ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸತ್ಯಾಗ್ರಹದಲ್ಲಿ ಆಗ್ರಹಿಸಲಾಯಿತು.
       ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿ, ಅಪ್ಪಾಜಿಯವರು ತಮ್ಮ ೩ ದಶಕಗಳ ರಾಜಕೀಯ ಜೀವನದಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುವ ಮೂಲಕ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆ. ನಗರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಬಸ್ ನಿಲ್ದಾಣ ನಿರ್ಮಿಸಿದ್ದು, ಇದೊಂದು ಸವಾಲಿನ ಕೆಲಸವಾಗಿದೆ. ಈ ಹಿನ್ನಲೆಯಲ್ಲಿ ಅವರ ಸ್ಮರಣಾರ್ಥ, ಅವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ನಿಲ್ದಾಣಕ್ಕೆ ಅವರ ಹೆಸರನ್ನು ನಾಮಕರಣಗೊಳಿಸಬೇಕು. ಇದಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
       ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್  ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಶಿವಮೊಗ್ಗ ಹಾಲು ಒಕ್ಕೂಟ(ಶಿಮೂಲ್) ಅಧ್ಯಕ್ಷ ಆನಂದ್, ಮುಖಂಡರಾದ ಬದರಿನಾರಾಯಣ, ಎಚ್.ಬಿ ರವಿಕುಮಾರ್, ಕರಿಯಪ್ಪ, ಫೀರ್ ಷರೀಫ್, ಎಸ್. ಮಂಜುನಾಥ್, ಜೆ.ಎನ್ ಚಂದ್ರಹಾಸ, ಬಿ.ವಿ ಗಿರೀಶ್, ಸಂದೇಶ್‌ಕುಮಾರ್, ಎನ್. ರಾಮಕೃಷ್ಣ, ಮೋಹನ್ ರಾವ್, ವಿಶಾಲಾಕ್ಷಿ, ಪುಷ್ಪಾವತಿ, ನೀಲಮ್ಮ, ಪಾರ್ವತಮ್ಮ, ಸರಸ್ವತಿ, ಟಿ.ಎನ್ ಲಕ್ಷ್ಮಮ್ಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕೊನೆಯಲ್ಲಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Sunday, September 13, 2020

ಸಂವಿಧಾನದ ಆಶಯ ಅರಿತರೆ ಅದೇ ಬಹಿರಂಗ ಶುದ್ಧಿ, ಅದೇ ಅಂತರಂಗದ ಶುದ್ಧಿ : ಶ್ರೀ ಬಸವನಾಗಿದೇವ ಶರಣರು

ಭದ್ರಾವತಿಯಲ್ಲಿ ಭಾನುವಾರ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ (ಪರಿಶಿಷ್ಟ ಜಾತಿ) ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಛಲವಾದಿ ಜಗದ್ಗುರು ಶ್ರೀ ಬಸವನಾಗಿದೇವ ಶರಣರು  ಪಾಲ್ಗೊಂಡಿದ್ದರು.
ಭದ್ರಾವತಿ, ಸೆ. ೧೩: ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಂವಿಧಾನವನ್ನು ಕೇವಲ ಅಸ್ಪೃಶ್ಯರು, ದಲಿತರು, ಶೋಷಿತರಿಗಾಗಿ ರಚಿಸಿಲ್ಲ. ಅವರು ಬರೆದಿರುವ ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಗೂ ಅನ್ವಯವಾಗುತ್ತದೆ. ಇದನ್ನು ಎಲ್ಲರೂ ಅರಿತುಕೊಂಡಾಗ ಮಾತ್ರ ಸಂವಿಧಾನದ ರಕ್ಷಣೆ ಸಾಧ್ಯ ಎಂದು ಚಿತ್ರದುರ್ಗದ ಛಲವಾದಿ ಜಗದ್ಗುರು ಶ್ರೀ ಬಸವನಾಗಿದೇವ ಶರಣರು ತಿಳಿಸಿದರು.
      ಅವರು ಭಾನುವಾರ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ (ಪರಿಶಿಷ್ಟ ಜಾತಿ) ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
      ಜಗಜ್ಯೋತಿ ಬಸವಣ್ಣನವರ ಆದರ್ಶಗಳು ಸಂವಿಧಾನದಲ್ಲಿ ಅಡಗಿವೆ. ಸಮಾಜದಲ್ಲಿ ಪ್ರತಿಯೊಂದು ಸಮುದಾಯಗಳಿಗೂ ಒಂದೊಂದು ಇತಿಹಾಸ, ಗುರು ಪರಂಪರೆ ಇದೆ. ಆ ಸಮುದಾಯಗಳನ್ನು ಅವುಗಳ ನೆಲೆಗಟ್ಟಿನಲ್ಲಿ ಮಠಾಧೀಶರುಗಳು ನೋಡುತ್ತಿದ್ದಾರೆ. ಆದರೆ ಸಂವಿಧಾನದ ಆಶಯವನ್ನು ತಾಳಿ ಮಾಡಿ ನೋಡುತ್ತಿಲ್ಲ. ಈ ಹಿನ್ನಲೆಯಲ್ಲಿ ಚಿತ್ರದುರ್ಗದ ಮುರುಘ ಶರಣರ ಮಾರ್ಗಸೂಚಿಯಂತೆ ಸಂವಿಧಾನದ ಆಶಯಗಳನ್ನು ಅರಿಯುವ ನಿಟ್ಟಿನಲ್ಲಿ ಪರಿವರ್ತನ ಮಠಾಧೀಶರ ಒಕ್ಕೂಟ ರಚಿಸಲಾಗಿದೆ. ಈ ಒಕ್ಕೂಟ ಅಂಬೇಡ್ಕರ್‌ರವರ ಸಂವಿಧಾನದ ಆಶಯಗಳ ಈಡೇರಿಕೆಗಾಗಿ ಹೋರಾಟ ನಡೆಸಲಿದೆ. ಸಂವಿಧಾನದ ಆಶಯಗಳನ್ನು ಸಮುದಾಯಗಳು ಅರಿತು ಮುನ್ನಡೆದಾಗ ಬಸವಣ್ಣನವರ ವಚನದಂತೆ ಅದೇ ಬಹಿರಂಗ ಶುದ್ಧಿ, ಅದೇ ಅಂತರಂಗದ ಶುದ್ಧಿ ಎಂದರು.
     ಛಲವಾದಿ ಗುರುಪೀಠ ೨೦೦೨ರಲ್ಲಿ ಅಸ್ತಿತ್ವಕ್ಕೆ ಬಂದ ನಂತರ ಸಮುದಾಯವನ್ನು ಸಂಘಟಿಸುವ ಕಾರ್ಯದಲ್ಲಿ ಮಠ ತೊಡಗಿದ್ದು,  ಯಾವುದೇ ಅಸ್ಪೃಶ್ಯ ಸಮುದಾಯ ಶೋಷಣೆಗೆ ಒಳಗಾದಲ್ಲಿ ತಕ್ಷಣ ಸ್ಪಂದಿಸುತ್ತಿದೆ. ಸಮುದಾಯದಿಂದ ಎಂದಿಗೂ ಪೀಠ ದೂರ ಉಳಿದಿಲ್ಲ. ತಾಲೂಕಿನಲ್ಲಿ ಸಮುದಾಯದಲ್ಲಿ ಯಾವುದೇ ಭಿನ್ನಾಭಿಪ್ರಾಯ ಮೂಡಬಾರದು. ಎಲ್ಲರೂ ಒಗ್ಗಟ್ಟಾಗಿ ಸಂಘಟನೆಗೆ ಮುಂದಾಗಬೇಕು. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಸಂವಿಧಾನದ ಆಶಯಗಳನ್ನು ಅರಿತು ಮುನ್ನಡೆಯಬೇಕೆಂದರು.
      ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ, ಸಮಾಜದ ಪ್ರಮುಖರಾದ ಸುರೇಶ್, ಎಸ್.ಎಸ್ ಭೈರಪ್ಪ, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್, ಬದರಿನಾರಾಯಣ, ಜಯರಾಜ್, ಮಹಾದೇವಯ್ಯ, ಹುಚ್ಚಯ್ಯ, ಈ.ಪಿ ಬಸವರಾಜ್, ಲೋಕೇಶ್, ಮಹೇಶ್, ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಸಿದ್ದರು. ಸಮಾಜದ ಮಾಜಿ ಅಧ್ಯಕ್ಷ ಡಿ. ನರಸಿಂಹಮೂರ್ತಿ ಸ್ವಾಗತಿಸಿದರು. ಶಿಕ್ಷಕ ಎ. ತಿಪ್ಪೇಸ್ವಾಮಿ ನಿರೂಪಿಸಿದರು.