Thursday, September 24, 2020

ಸೆ.೨೭ರಂದು ‘ಎಂ.ಜೆ ಅಪ್ಪಾಜಿ ಒಂದು ನೆನಪು’ ಶ್ರದ್ದಾಂಜಲಿ ಕಾರ್ಯಕ್ರಮ

ಭದ್ರಾವತಿ, ಸೆ. ೨೪: ಲೋಯರ್ ಹುತ್ತಾ, ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ ವತಿಯಿಂದ ಸೆ.೨೭ರಂದು ಬೆಳಿಗ್ಗೆ ೧೧ ಗಂಟೆಗೆ ಲೋಯರ್ ಹುತ್ತಾ ಬಿ.ಎಚ್ ರಸ್ತೆ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ 'ಎಂ.ಜೆ ಅಪ್ಪಾಜಿ ಒಂದು ನೆನಪು' ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
       ಮಾಜಿ ಶಾಸಕ ವೈ.ಎಸ್.ವಿ ದತ್ತಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕಿ ಶಾರದಾಪೂರ್‍ಯಾನಾಯ್ಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥಗೌಡ, ಜೆಡಿಎಸ್ ರಾಜ್ಯ ಮುಖಂಡ ಎಂ. ಶ್ರೀಕಾಂತ್, ಹಿರಿಯ ಮುಖಂಡರಾದ ಕೆ. ಕರಿಯಪ್ಪ, ಆರ್. ಕರುಣಾಮೂರ್ತಿ, ಅಪ್ಪಾಜಿ ಪುತ್ರ ಎಂ.ಎ ಅಜಿತ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
      ಕಾರ್ಯಕ್ರಮಕ್ಕೆ ಅಭಿಮಾನಿಗಳು, ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು, ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮಾಜಿ ನಗರಸಭಾ ಸದಸ್ಯ ಎಸ್.ಪಿ ಮೋಹನ್‌ರಾವ್ ಕೋರಿದ್ದಾರೆ.

ಕೇಂದ್ರ ಸರ್ಕಾರದ ವರ್ತನೆಗೆ ಆಮ್ ಆದ್ಮಿ ಆಕೋಶ


ಭದ್ರಾವತಿಯಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಮಂಡನೆ ಹಾಗು ೮ ಜನ ಸಂಸದರನ್ನು ಅಮಾನತುಗೊಳಿಸಿರುವ ಕೇಂದ್ರ ಸರ್ಕಾರದ ವರ್ತನೆ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಗುರುವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೨೪: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಮಂಡನೆ ಹಾಗು ೮ ಜನ ಸಂಸದರನ್ನು ಅಮಾನತುಗೊಳಿಸಿರುವ ಕೇಂದ್ರ ಸರ್ಕಾರದ ವರ್ತನೆ ವಿರುದ್ಧ ಆಮ್ ಆದ್ಮಿ ಪಾರ್ಟಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿದೆ.
      ಲೋಕಸಭೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ ರಾಜ್ಯಸಭೆಯಲ್ಲಿ ಬಹುಮತವಿಲ್ಲದ ಕಾರಣ ಸಂಸತ್ತಿನ ಸಂಪ್ರದಾಯಗಳನ್ನು ಮುರಿದು, ರೈತ ವಿರೋಧಿ ಮಸೂದೆಗಳನ್ನು ಅಸಂವಿಧಾನಿಕವಾಗಿ ಅಂಗೀಕರಿಸಿದೆ. ಅಸಂವಿಧಾನಿಕ ಪ್ರಕ್ರಿಯೆಯಿಂದಾಗಿ ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆಗೆ ಧಕ್ಕೆ ಬಂದಿದೆ ಎಂದು ವಿಷಾದಿಸಲಾಗಿದೆ.
       ಅಲ್ಲದೆ ಈ ಅಸಂವಿಧಾನಿಕ ನಡೆಯನ್ನು ವಿರೋಧಿಸಿದ ಆಮ್ ಆದ್ಮಿ ಪಕ್ಷದ ಸಂಸದ ಸೇರಿದಂತೆ ೮ ಮಂದಿ ಸಂಸದರನ್ನು ಒಂದು ವಾರದವರೆಗೆ ಅಮಾನತು ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಇದು ವಿರೋಧಿಗಳ ಬಾಯಿ ಮುಚ್ಚಿಸಲು ಸರ್ಕಾರದ ಸರ್ವಾಧಿಕಾರಿ ವರ್ತನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
        ಯಾವುದೇ ಕಾರಣಕ್ಕೂ ಮಸೂದೆ ಕಾನೂನು ರೂಪ ಪಡೆಯಲು ಅವಕಾಶ ನೀಡಬಾರದು. ಪ್ರಜಾ ಪ್ರಭುತ್ವ, ಸಂವಿಧಾನ ಮೌಲ್ಯ ಎತ್ತಿ ಹಿಡಿಯಬೇಕೆಂದು ಮನವಿ ಮಾಡಲಾಗಿದೆ.
       ಪಕ್ಷದ ತಾಲೂಕು ಅಧ್ಯಕ್ಷ ಡಿ.ಎಂ ಚಂದ್ರಪ್ಪ, ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪ್ರಮುಖರಾದ ಮುಳ್ಕೆರೆ ಲೋಕೇಶ್, ಪ್ರದೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಗೆ ಖಂಡನೆ

ಸೆ.೨೮ರ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಬೆಂಬಲ

ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಸೆ.೨೮ರಂದು ಕರೆ ನೀಡಲಾಗಿರುವ ಬಂದ್‌ಗೆ ಪೂರಕ ಬೆಂಬಲ ನೀಡುವ ಸಂಬಂಧ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಪತ್ರಿಕಾಗೋಷ್ಠಿ ನಡೆಯಿತು.
ಭದ್ರಾವತಿ, ಸೆ. ೨೪: ಜನ ವಿರೋಧಿ, ರೈತ ವಿರೋಧಿ ಧೋರಣೆಗಳನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸೆ.೨೮ರಂದು ಹಮ್ಮಿಕೊಳ್ಳಲಾಗಿರುವ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಸ್ಪಷ್ಟಪಡಿಸಿದರು.
      ಅವರು ಗುರುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರಲು ಮುಂದಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.
      ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುಚ್ಛಕ್ತಿ ಕಾಯ್ದೆ ತಿದ್ದುಪಡಿ ೩ ಮಸೂದೆಗಳನ್ನು ಚರ್ಚೆಗೆ ಅವಕಾಶ ನೀಡದೇ ಸುಗ್ರೀವಾಜ್ಞೆ ಮೂಲಕ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಈ ಮಸೂದೆಗಳ ವಿರುದ್ಧ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ. ಹೋರಾಟಕ್ಕೆ ಪೂರಕವಾಗಿ ಕಾಂಗ್ರೆಸ್ ಸಹ ಬೆಂಬಲ ನೀಡಲಿದೆ ಎಂದರು.
       ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಬಡವರ ಜಮೀನು ಶ್ರೀಮಂತರ ಪಾಲಾಗುವಂತೆ ಮಾಡಲಾಗುತ್ತಿದೆ. ರೆಸಾರ್ಟ್, ಲೇಔಟ್, ಬಡಾವಣೆ ಸೇರಿದಂತೆ ಇನ್ನಿತರ ವಾಣಿಜ್ಯ ಕೇಂದ್ರಗಳಾಗಿ ರೈತರ ಕೃಷಿ ಭೂಮಿಯನ್ನು ಮಾರ್ಪಾಡು ಮಾಡಲಾಗುತ್ತಿದೆ.  ಆಹಾರ ಭದ್ರತೆ ಕಾಯ್ದೆಯಡಿಯಲ್ಲಿ ಜಾರಿಗೆ ತರಲಾಗಿದ್ದ ಪಡಿತರ ವ್ಯವಸ್ಥೆಯನ್ನೂ ಸಹ ಸರ್ಕಾರ ಕಿತ್ತುಕೊಂಡು ಬಡವರು ಹಾಗು ರೈತರನ್ನು ನಿರ್ನಾಮ ಮಾಡಲು ಹೊರಟಿದೆ ಎಂದು ಆರೋಪಿಸಿದರು.
       ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರೈತರ ಹಿತಕಾಯುವಲ್ಲಿ ಮುಂದಾಗಿದೆ. ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿ ಪಡಿಸಿ ಉತ್ತಮ ಬೆಲೆಗೆ ಮಾರಾಟ ಮಾಡುವಂತೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಪ್ರಸ್ತುತ ತಿದ್ದುಪಡಿ ಕಾಯ್ದೆಯಿಂದಾಗಿ ರೈತರು ಸಮಿತಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ ತಪ್ಪಿಹೋಗಿದೆ. ಬಂಡವಾಳ ಶಾಯಿಗಳು ನಿಗದಿಪಡಿಸಿದ ಬೆಲೆಗೆ ರೈತರು ಉತ್ಪನ್ನಗಳನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ರೈತರು ಪ್ರಶ್ನಿಸುವ ಅಧಿಕಾರ ಕಳೆದುಕೊಂಡಂತಾಗಿದೆ ಎಂದು ದೂರಿದರು.
      ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್. ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಎಪಿಎಂಸಿ ಅಧ್ಯಕ್ಷ ಲವೇಶ್‌ಗೌಡ, ಮುಖಂಡರಾದ ಮಹಮದ್ ಸನಾವುಲ್ಲಾ, ರಾಘವೇಂದ್ರ, ಆಂಜನಪ್ಪ, ಪುಟ್ಟೇಗೌಡ, ಜಯರಾಜ್, ಅಮೀರ್‌ಜಾನ್, ಚನ್ನಪ್ಪ, ಅರುಣ್, ರೂಪಾ ನಾರಾಯಣ, ಅಣ್ಣೋಜಿರಾವ್, ಗೋಪಿ, ನಂಜಪ್ಪ, ರಾಜು, ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, September 23, 2020

ಮನೆಗಳ್ಳತನ ಪ್ರಕರಣ ಇಬ್ಬರ ಬಂಧನ : ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶ

ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿರುವುದು.
ಭದ್ರಾವತಿ, ಸೆ. ೨೩:  ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ಬುಧವಾರ ನಡೆದಿದೆ.
     ದಾವಣಗೆರೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿಗಳಾದ ನಾಗರಾಜನಾಯ್ಕ(೨೪) ಮತ್ತು ಗಣೇಶನಾಯ್ಕ(೩೧) ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ೫೦ ಗ್ರಾಂ. ತೂಕದ ಬಂಗಾರದ ಆಭರಣಗಳು, ೨೪೦ ಗ್ರಾಂ. ತೂಕದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಚಿನ್ನಾಭರಣಗಳ ಒಟ್ಟು ಅಂದಾಜು ಮೌಲ್ಯ ೨,೩೨,೫೦೦ ರು. ಗಳಾಗಿವೆ.
    ಈ ಇಬ್ಬರು ಬಂಧಿತರು ಹೊಳೆಹೊನ್ನೂರು ಅಶೋಕನಗರದ ಮನೆಯೊಂದರಲ್ಲಿ ೨೦ ಫೆಬ್ರವರಿ ೨೦೧೯ರಂದು ಹಾಗೂ ಬೆಳ್ಳಿಗೆರೆ ಗ್ರಾಮದ ಮನೆಯೊಂದರಲ್ಲಿ ೧೯ ಮೇ ೨೦೨೦ರಂದು ನಡೆದಿದ್ದ ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.
     ಕಳವು ಪ್ರಕರಣ ಬೇಧಿಸಲು ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯಕ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್ ನೇತೃತ್ವದ ತಂಡ ರಚಿಸಲಾಗಿತ್ತು.

ಸಂಗಮೇಶ್ವರ್ ಅಭಿಮಾನಿಗಳಿಂದ ವಿಶೇಷ ಪೂಜೆ

ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೨೩: ಕೊರೋನಾ ಸೋಂಕಿಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್‌ಗೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ವಿವಿಧ ದೇವಾಲಯಗಳಲ್ಲಿ ಸಂಗಮೇಶ್ವರ್ ಅಭಿಮಾನಿಗಳ ಬಳಗದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
       ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಹೊಸಮನೆ ಭಾಗದ ಸಂಗಮೇಶ್ವರ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥಿಸಿದರು.
      ಪ್ರಮುಖರಾದ ಸುಂದರ್‌ಬಾಬು, ಪುಟ್ಟೇಗೌಡ, ವೈ. ನಟರಾಜ್, ಕೆ. ಸುದೀಪ್ ಕುಮಾರ್, ನಾಗೇಶ್, ಎಚ್.ಎಸ್ ಮಂಜು, ಶಿವಾಜಿ, ಭೈರಣ್ಣ, ರಾಜೇಶ್, ಹನುಮಂತ, ಅಜಯ್, ಕೇಶವ, ಪ್ರದೀಪ್, ಲೋಕೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಇದೆ ರೀತಿ ನ್ಯೂಟೌನ್ ಭಾಗದಲ್ಲಿ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳು ಮತ್ತು ಹಿರಿಯ ನಾಗರೀಕರು ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಭದ್ರಾವತಿ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
      ಕೇರಳ ಸಮಾಜಂ ವತಿಯಿಂದ ವಿಶೇಷ ಪೂಜೆ:
ತಾಲೂಕು ಕೇರಳ ಸಮಾಜಂ ವತಿಯಿಂದ ನ್ಯೂಟೌನ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೇರಳ ಸಮಾಜಂ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಆನ್‌ಲೈನ್‌ನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ

ಭದ್ರಾವತಿ, ಸೆ. ೨೩: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಬಾರಿ ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಆನ್‌ಲೈನ್‌ನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
       ತಾಲೂಕಿನ ಪ್ರಾಥಮಿಕ, ಪ್ರೌಢ ಹಾಗು ಪದವಿ ಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಮತ್ತು ಫೇಸ್‌ಬುಕ್ ತಂತ್ರಜ್ಞಾನ ಬಳಸಿ ಸಮ್ಮೇಳನ ನಡೆಸಲಾಗುತ್ತಿದೆ. ಸಮ್ಮೇಳನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸ್ವರಚಿತ ಕಥೆ, ಕವನ, ಹನಿಗವನ, ಪ್ರಬಂಧ, ಜಾನಪದ ಮತ್ತು ಭಾವಗೀತೆ ಆನಾವರಣಕ್ಕೆ ಅವಕಾಶ ಕಲ್ಪಿಸಲಾಗಿದೆ.
      ಪ್ರಬಂಧ ಬರೆಯುವವರು ೧. ಸ್ವಾಭಾವಿಕ ಅರಣ್ಯ ಉಳಿಸಲು, ಪರಿಸರ ನಾಶ ತಡೆಯಲು ನಿಮ್ಮ ಚಿಂತನೆಗಳು, ೨. ಕರ್ನಾಟಕ ರಾಜ್ಯ ಸರ್ಕಾರದ ವಿದ್ಯಾಗಮ ಯೋಜನೆಯ ಸಾಧಕ-ಭಾದಕಗಳು, ೩. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ೪. ಶಾಲಾ ಶಿಕ್ಷಣದಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವ ಇತ್ಯಾದಿ ವಿಚಾರಗಳನ್ನು ಅನಾವರಣಗೊಳಿಸುವಂತಿರಬೇಕು.
      ಆಸಕ್ತ ಪ್ರತಿಭಾವಂತ ವಿದ್ಯಾರ್ಥಿಗಳು ಸೆ.೩೦ರೊಳಗೆ ಸಮ್ಮೇಳನದಲ್ಲಿ ಭಾವಹಿಸುವ ಕುರಿತು ವಾಟ್ಸ್‌ಪ್ ಸಂಖ್ಯೆ ಕೋಗಲೂರು ತಿಪ್ಪೇಸ್ವಾಮಿ : ೯೦೦೮೫೧೫೪೩೨, ಎಂ.ಆರ್ ಮಂಜುನಾಥ್ : ೯೭೪೦೫೫೯೨೩೯, ಬಿ. ಮಂಜಪ್ಪ: ೯೯೦೦೮೩೦೨೮೫ ಮತ್ತು ಎಸ್.ಎನ್ ಶಶಿಕುಮಾರ್ : ೮೦೭೩೬೩೩೩೫೩ ಮಾಹಿತಿ ನೀಡಬಹುದಾಗಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ಕೋಗಲೂರು ತಿಪೇಸ್ವಾಮಿ ತಿಳಿಸಿದ್ದಾರೆ.

ಪೌರಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ನಾಗೇಂದ್ರ ಹೊನ್ನಾಳಿ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಾಳಿ ಮಾತನಾಡಿದರು.
ಭದ್ರಾವತಿ, ಸೆ. ೨೩: ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕೆಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಾಳಿ ತಿಳಿಸಿದರು.
ಅವರು ಬುಧವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
         ಪ್ರಸ್ತುತ ಬಹುತೇಕ ಪೌರಕಾರ್ಮಿಕರು ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದನ್ನು ಗಮನಿಸಿದಾಗ ಪೌರಕಾರ್ಮಿಕರು ತಮ್ಮ ಕರ್ತವ್ಯದ ಅವಧಿ ಮುಕ್ತಾಯಗೊಳ್ಳುವ ಮೊದಲೇ ಮರಣ ಹೊಂದುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸುವ ಜೊತೆಗೆ ಪೌರಕಾರ್ಮಿಕರ ಆರೋಗ್ಯ ಸುಧಾರಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಹಿನ್ನಲೆಯಲ್ಲಿ ಮೊದಲು ಪೌರಕಾರ್ಮಿಕರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
      ಜಿಲ್ಲೆಯಲ್ಲಿ ಭದ್ರಾವತಿ ನಗರಸಭೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲೂ ಕೊರೋನಾ ಸಂದರ್ಭದಲ್ಲೂ ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವೇತನ, ಪಡಿತರ ವಿತರಣೆ ಸೇರಿದಂತೆ ಇನ್ನಿತರ ಸೌಲಭ್ಯಗಳು ಸಕಾಲದಲ್ಲಿ ತಲುಪಬೇಕು. ಈ ನಿಟ್ಟಿನಲ್ಲಿ ಆಡಳಿತ ನಡೆಸುವ ಸರ್ಕಾರ, ಅಧಿಕಾರಿಗಳ ವರ್ಗ ಸೇರಿದಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.  


ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
     ನಗರಸಭೆ ಆಡಳಿತಾಧಿಕಾರಿ, ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಮಾತನಾಡಿ, ಪ್ರಸ್ತುತ ನಗರಸಭೆಯಲ್ಲಿ ಪೌರಕಾರ್ಮಿಕರು ಮತ್ತು ಅಧಿಕಾರಿ ವರ್ಗದವರು ಸರಿಸಮಾನವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಲ್ಲಿನ ನಿವಾಸಿಗಳು ಎಲ್ಲರನ್ನು ಗೌರವಪೂರ್ವಕವಾಗಿ ಕಾಣುತ್ತಿದ್ದಾರೆ. ಪೌರಕಾರ್ಮಿಕರಿಂದ ಹೆಚ್ಚಿನ ಸೇವೆ ಬಯಸುವ ನಾವು ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸಹ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದರು.
       ನಗರಸಭೆ ಪೌರಾಯುಕ್ತ ಮನೋಹರ್ ಮಾತನಾಡಿ, ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಸಹ ಸರಿ ಸಮಾನವಾಗಿ ಕಾಣಲಾಗುತ್ತಿದೆ. ಎಲ್ಲರಿಗೂ ಸಹ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸಮಪರ್ಕವಾಗಿ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮೊದಲು ಪೌರಕಾರ್ಮಿಕರ ಜೀವನ ಮಟ್ಟ ಸುಧಾರಣೆಯಾಗಬೇಕು. ಆಗ ಮಾತ್ರ ಇತರರು ನೆಮ್ಮದಿಯಾಗಿರಲು ಸಾಧ್ಯ ಎಂದರು.
     ಕಂದಾಯಾಧಿಕಾರಿ ರಾಜ್‌ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಇಂಜಿನಿಯರ್ ರಂಗನಾಥಪುರೆ, ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ನಿಟ್ಟಿನಲ್ಲಿ ಶಾಲಾ ದಾಖಲಾತಿ ಶುಲ್ಕ ವಿತರಿಸಲಾಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರಿಗೆ ವಿಶೇಷ ಭತ್ಯೆ ವಿತರಿಸಲಾಯಿತು. ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.