Tuesday, October 6, 2020

ವಿಐಎಸ್‌ಎಲ್ ನಿವೃತ್ತ ನೌಕರ ಎಚ್.ಜಿ ಉಮಾಪತಿ ನಿಧನ

ಎಚ್.ಜಿ ಉಮಾಪತಿ
ಭದ್ರಾವತಿ, ಅ. ೬: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ಎಚ್.ಜಿ ಉಮಾಪತಿ(೭೨) ಬೆಂಗಳೂರಿನಲ್ಲಿ ನಿಧನ ಹೊಂದಿದರು.
      ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ ಹಾಗು ಮೊಕ್ಕಳನ್ನು ಹೊಂದಿದ್ದರು. ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಸಾಮಾನ್ಯ ಕಾರ್ಮಿಕನಾಗಿ ವೃತ್ತಿ ಆರಂಭಿಸಿದ ಉಮಾಪತಿಯವರು ಪೋರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಕಾರ್ಮಿಕ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಐಎಸ್‌ಎಲ್ ಕಾರ್ಖಾನೆಯನ್ನು ಉಕ್ಕು ಪ್ರಾಧಿಕಾರದ ಅಂಗ ಸಂಸ್ಥೆಯ ಅಧೀನಕ್ಕೆ ಸೇರ್ಪಡೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
    ಮೂಲತಃ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿದ್ದ ಉಮಾಪತಿಯವರು ಹಲವು ಹುದ್ದೆಗಳನ್ನು ಸಹ ಅಲಂಕರಿಸಿದ್ದರು. ಅಲ್ಲದೆ ಸೇವಾದಳದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ೨೦೦೯ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ನಂತರ ಪುನಃ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದರು. ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಸದಸ್ಯರಾಗಿದ್ದರು. ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.
      ಉಮಾಪತಿಯವರ ನಿಧನಕ್ಕೆ ಸೂಡಾ ಸದಸ್ಯ ರಾಮಲಿಂಗಯ್ಯ, ನಿವೃತ್ತ ಕಾರ್ಮಿಕರ ಸಂಘದ ನರಸಿಂಹಚಾರ್, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಸಿ ದಾಸೇಗೌಡ, ಮಾಜಿ ಉಪಮೇಯರ್ ಮಹಮ್ಮದ್ ಸನಾವುಲ್ಲಾ, ಕಸಾಪ ತಾಲೂಕು ಅಧ್ಯಕ್ಷ ಅಪೇಕ್ಷ ಮಂಜುನಾಥ್ ಸೇರಿದಂತೆ ಇನ್ನಿತರ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.


ಕೊಲೆ ಪ್ರಕರಣ : ೬ ಜನರ ಸೆರೆ

ಭದ್ರಾವತಿ ಹೊಸಮನೆ ಹನುಮಂತ ನಗರದಲ್ಲಿ ಇತ್ತೀಚಿಗೆ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಹೊಸಮನೆ ಠಾಣೆ ಪೊಲೀಸರು ಯಶಸ್ವಿಯಾಗಿರುವುದು.
ಭದ್ರಾವತಿ, ಅ. ೧೦: ನಗರದ ಹೊಸಮನೆ ಹನುಮಂತ ನಗರದಲ್ಲಿ ಇತ್ತೀಚಿಗೆ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಹೊಸಮನೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
        ಹೊಸಮನೆ ಹನುಮಂತನಗರದ ನಿವಾಸಿಗಳಾದ ರಮೇಶ್ ಅಲಿಯಾಸ್ ಹಂದಿ ರಮೇಶ(೪೪), ವೆಂಕಟರಾಮ(೩೫), ಚಂದ್ರ ಅಲಿಯಾಸ್ ಚಾಣ(೩೭), ಹೊಸಮನೆ ಸತ್ಯಸಾಯಿ ನಗರದ ನಿವಾಸಿಗಳಾದ ಕಾರ್ತಿಕ್(೨೪), ಮಧುಸೂಧನ್ ಅಲಿಯಾಸ್ ಗುಂಡ ಮಂಜುನಾಥ(೨೮) ಮತ್ತು ರಮೇಶ್ ಅಲಿಯಾಸ್ ಕೆಳವಿ ರಮೇಶ(೩೭) ಎಂಬುವರನ್ನು ಬಂಧಿಸಲಾಗಿದೆ.
ಘಟನೆ ವಿವರ:
       ಹೊಸಮನೆ ಹನುಮಂತ ನಗರದ ನಿವಾಸಿ ಮಹಮದ್ ಅಕ್ತರ್ ಎಂಬುವರ ಪುತ್ರ ಶಾರೂಖ್ ಖಾನ್‌ನನ್ನು ಸೆ.೩೦ರ ರಾತ್ರಿ ಕೊಲೆ ಮಾಡಲಾಗಿತ್ತು. ಈತನ ಮೃತದೇಹ ಹೊಸಮನೆ ನೂರಾನಿ ಮಸೀದಿ ಹಿಂಭಾಗದ ಖಾಲಿ ಜಾಗದಲ್ಲಿ ಅ.೧ರಂದು ಬೆಳಿಗ್ಗೆ ಪತ್ತೆಯಾಗಿತ್ತು.
     ಈ ಸಂಬಂಧ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಕೊಲೆ ಪ್ರಕರಣ ಬೇಧಿಸಲು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಡಾ. ಎಚ್.ಟಿ ಶೇಖರ್ ಹಾಗು ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯಕ್ ಮಾರ್ಗದರ್ಶನದಲ್ಲಿ ನಗರದ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
       ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾಧಿಕಾರಿ ಜಯಪ್ಪ, ಸಿಬ್ಬಂದಿಗಳಾದ ವೆಂಕಟೇಶ್, ಕುಮಾರ್, ಮಂಜುನಾಥ್, ಮಖ್ಸೂದ್‌ಖಾನ್, ಸಂತೋಷ್‌ಕುಮಾರ್, ಅಂಬರೀಷ್, ವಿಶಾಲಾಕ್ಷಿ, ವಿಜಯಕಲಾ, ನವೀನ್ ಪವಾರ್, ಪ್ರಸನ್ನಸ್ವಾಮಿ, ಸುನಿಲ್‌ಕುಮಾರ್ ಹಾಗು ಚಾಲಕರಾದ ಮಧುಸೂಧನ್ ಮತ್ತು ರವಿಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿರುವ ತಂಡವನ್ನು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತಕುಮಾರ್ ಅಭಿನಂದಿಸಿದ್ದಾರೆ.

ಸಾಗುವಳಿ ಚೀಟಿ, ಖಾತೆ ಪಹಣಿ ನೀಡಲು ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಆರ್‌ಟಿಸಿಯಲ್ಲಿ ಅರಣ್ಯ ಭೂಮಿ ನಮೂದು, ಗ್ರಾಮಸ್ಥರಲ್ಲಿ ಆತಂಕ

ಸಾಗುವಳಿ ಚೀಟಿ ಹಾಗು ಖಾತೆ ಪಹಣಿ ನೀಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅನುಕೂಲ ಕಲ್ಪಿಸಿಕೊಡಬೇಕೆಂದು ಭದ್ರಾವತಿ ತಾಲೂಕಿನ ದಾನವಾಡಿ ಮತ್ತು ಕೋಡಿ ಹೊಸೂರು ಗ್ರಾಮಸ್ಥರು ಮಂಗಳವಾರ ತಹಸೀಲ್ದಾರ್‌ಗೆ ಮನವಿ ಮಾಡಿದರು.
ಭದ್ರಾವತಿ, ಅ. ೬: ಸಾಗುವಳಿ ಚೀಟಿ ಹಾಗು ಖಾತೆ ಪಹಣಿ ನೀಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅನುಕೂಲ ಕಲ್ಪಿಸಿಕೊಡಬೇಕೆಂದು ತಾಲೂಕಿನ ದಾನವಾಡಿ ಗ್ರಾಮಸ್ಥರು ಮಂಗಳವಾರ ತಹಸೀಲ್ದಾರ್‌ಗೆ ಮನವಿ ಮಾಡಿದ್ದಾರೆ.
        ಹೊಳೆಹೊನ್ನೂರು ಹೋಬಳಿ, ಅರಕೆರೆ ಅಂಚೆ, ದಾನವಾಡಿ ಗ್ರಾಮದ ಸರ್ವೆ ನಂ. ೩೩ರಲ್ಲಿ ಒಟ್ಟು ೪೬೯ ಎಕರೆ ಗೋಮಾಳ ಜಮೀನು ಇದ್ದು, ೨೦೧೨-೧೩ನೇ ಸಾಲಿನಲ್ಲಿ ಅರಣ್ಯ ಎಂದು ಗಣಕೀಕೃತ ಆರ್‌ಟಿಸಿ ದಾಖಲೆಯಲ್ಲಿ ತಪ್ಪಾಗಿ ನಮೂದಾಗಿದೆ.
        ಈ ಜಮೀನಿನಲ್ಲಿ ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕುಟುಂಬದ ರೈತರು ಸುಮಾರು ೬೦-೭೦ ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಜೀವನ ಸಾಗುತ್ತಿದ್ದಾರೆ. ಒಟ್ಟು ೯೦ ರಿಂದ ೯೫ ಕುಟುಂಬಗಳು ವಾಸಿಸುತ್ತಿದ್ದು, ಇದುವರೆಗೂ ಯಾವುದೇ ದಾಖಲೆಗಳನ್ನು ನೀಡಿರುವುದಿಲ್ಲ. ರೈತರು ಹಲವಾರು ಬಾರಿ ತಾಲೂಕು ಕಛೇರಿಗೆ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ೨೦೧೨-೧೩ರವರೆಗೆ ಜಮೀನಿನ ಆರ್‌ಟಿಸಿ ದಾಖಲೆಯಲ್ಲಿ ಗೋಮಾಳ ಜಮೀನು ಎಂದು ನಮೂದಾಗಿರುತ್ತದೆ. ನಂತರ ಯಾವುದೇ ದಾಖಲಾತಿ ಇಲ್ಲದೆ ಅರಣ್ಯ ಇಲಾಖೆ ಜಮೀನು ಎಂದು ತಪ್ಪಾಗಿ ನಮೂದಿಸಲಾಗಿರುತ್ತದೆ.
       ತಕ್ಷಣ ಆರ್‌ಟಿಸಿ ದಾಖಲೆಯಲ್ಲಿ ನಮೂದಾಗಿರುವ ತಪ್ಪನ್ನು ಸರಿಪಡಿಸಿಕೊಂಡು ರೈತರಿಗೆ ೫೦, ೫೩ ಮತ್ತು ೫೭ ಅಡಿಯಲ್ಲಿ ಸಲ್ಲಿಸಲಾಗಿರುವ ಅರ್ಜಿಗಳನ್ನು  ಪರಿಗಣಿಸಿ ಸಾಗುವಳಿ ಚೀಟಿ ಹಾಗು ಖಾತೆ ಪಹಣಿಯನ್ನು ನೀಡುವ ಮೂಲಕ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲ ಕಲ್ಪಿಸಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
     ಇದೆ ರೀತಿ ಹೊಳೆಹೊನ್ನೂರು ಹೋಬಳಿ, ಅರಕೆರೆ ಅಂಚೆ, ಕೋಡಿ ಹೊಸೂರು ಗ್ರಾಮದ ಗ್ರಾಮಸ್ಥರು ಸಹ ಮನವಿ ಸಲ್ಲಿಸಿದ್ದು, ಸರ್ವೆ ನಂ. ೧೨ ಮತ್ತು ೨೨ರಲ್ಲಿ ಒಟ್ಟು ೨೩ ಎಕರೆ ೨೬ ಗುಂಟೆ ಹಾಗು ಸರ್ವೆ ನಂ. ೨೨ರಲ್ಲಿ ೧೪೫ ಎಕರೆ ೨೮ ಗುಂಟೆ ಗೋಮಾಳ ಮತ್ತು ದನಗಳ ಮುಫತ್ತು ಜಮೀನು ಇದ್ದು, ೧೯೮೪-೮೫ರ ನಂತರ ಈ ಎರಡು ಜಮೀನು ಸಹ ದಾನವಾಡಿ ಮೈನರ್ ಫಾರೆಸ್ಟ್ ಎಂದು ಆರ್‌ಟಿಸಿ ದಾಖಲೆಯಲ್ಲಿ ತಪ್ಪಾಗಿ ನಮೂದಾಗಿರುತ್ತದೆ. ಈ ಹಿನ್ನಲೆಯಲ್ಲಿ ಎರಡು ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿರುವವರಿಗೆ ತಕ್ಷಣ ಸಾಗುವಳಿ ಚೀಟಿ ಹಾಗು ಖಾತೆ ಪಹಣಿ ನೀಡಿ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಕಲ್ಪಿಸಿಕೊಡುವಂತೆ ಮನವಿ ಮಾಡಲಾಗಿದೆ.
       ಮನವಿಯನ್ನು ಶಿರಸ್ತೇದಾರ್ ಮಲ್ಲಿಕಾರ್ಜುನಯ್ಯ ಸ್ವೀಕರಿಸಿದರು. ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕರ್ನಾಟಕ ಜನ ಸೈನ್ಯ ಅಧ್ಯಕ್ಷ ಕೆ. ಮಂಜುನಾಥ್, ಗ್ರಾಮಸ್ಥರಾದ ನಾಗಪ್ಪ, ಕೃಷ್ಣಪ್ಪ, ಬಸಪ್ಪ, ಎಂ. ಚಂದ್ರಪ್ಪ, ಎಚ್. ಬಸ ವರಾಜ, ಚಂದ್ರಮ್ಮ, ಶೋಭ, ಜಯಮ್ಮ, ರವಿ, ರತ್ನಮ್ಮ, ನಂಜಮ್ಮ, ನರಸಿಂಹಪ್ಪ, ಕಮಲಮ್ಮ, ಜಯಮ್ಮ, ಬಿ.ಆರ್ ಬಸವರಾಜಪ್ಪ, ಟಿ.ಎಲ್ ಶೇಖರಪ್ಪ, ದೇವಮ್ಮ, ಶಾಂತಮ್ಮ, ಎಸ್.ಎಂ ನಾಗರಾಜಪ್ಪ, ಕರಿಯಮ್ಮ, ರತ್ನಾಬಾಯಿ, ಆರ್. ರವಿಚಂದ್ರ, ಶರಣಪ್ಪ, ಎಂ. ಚಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, October 5, 2020

ವಿದ್ಯುತ್ ಕ್ಷೇತ್ರ ಖಾಸಗಿಕರಣ, ಕಾಯ್ದೆ ತಿದ್ದುಪಡಿ ವಿರೋಧಿಸಿ ಸಾಂಕೇತಿಕ ಪ್ರತಿಭಟನೆ

ವಿದ್ಯುತ್ ಕ್ಷೇತ್ರ ಖಾಸಗಿಕರಣ ಹಾಗು ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಭದ್ರಾವತಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಅ. ೫: ವಿದ್ಯುತ್ ಕ್ಷೇತ್ರ ಖಾಸಗಿಕರಣ ಹಾಗು ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
     ಕೆಪಿಟಿಸಿಎಲ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಅಧಿಕಾರಿಗಳು, ನೌಕರರು ಕಪ್ಪುಪಟ್ಟಿ ಧರಿಸಿ ಖಾಸಗಿಕರಣ ಹಾಗು ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದರು.
       ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಕುಮಾರ್, ಲೆಕ್ಕಾಧಿಕಾರಿ ರಾಮಾಚಂದ್ರಪ್ಪ, ಯೂನಿಯನ್ ಕೇಂದ್ರ ಸಮಿತಿ ಸದಸ್ಯ ಹೇಮಣ್ಣ ಸೇರಿದಂತೆ ಇನ್ನಿತರರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
      ಯೂನಿಯನ್ ಅಧ್ಯಕ್ಷ  ಆನಂದ್, ಪರಿಶಿಷ್ಟ ಜಾತಿ, ಪಂಗಡ ಕಲ್ಯಾಣ ಸಮಿತಿ ಅಧ್ಯಕ್ಷ ಲೋಕೇಶ್, ಅಬ್ದುಲ್ ಮುನಾಫ್,  ಎಲ್ಲಾ ಕಚೇರಿಗಳ ಸಹಾಯಕ ಇಂಜಿನಿಯರ್‌ಗಳು, ಶಾಖಾಧಿಕಾರಿಗಳು, ನೌಕರರು ಪಾಲ್ಗೊಂಡಿದ್ದರು.


ದ್ವಿಚಕ್ರ ವಾಹನ ಕಾಲುವೆಗೆ ಬಿದ್ದು ಮಹಿಳೆ ಸಾವು

ಭದ್ರಾವತಿ, ಅ. ೫: ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
        ತಾಲೂಕಿನ ಎರೆಹಳ್ಳಿ ಗ್ರಾಮದ ಗೀತಾ(೩೩) ಎಂಬುವರು ಮೃತಪಟ್ಟಿದ್ದು, ಅಂತರಗಂಗೆ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಇವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾಲುವೆಗೆ ಬಿದ್ದಿದ್ದಾರೆ. ತೀವ್ರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸ್ಥಾಪಕರ ಆಶಯದಂತೆ ಜಯ ಕರ್ನಾಟಕ ಸಂಘಟನೆ ಬಲವರ್ಧನೆ

ಯುವಕರಿಗೆ ಹೆಚ್ಚಿನ ಆದ್ಯತೆ, ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ನೂತನ ಪದಾಧಿಕಾರಿಗಳ ನೇಮಕ : ಜಗದೀಶ್


ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಭದ್ರಾವತಿಗೆ ಆಗಮಿಸಿದ ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್‌ರವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ, ಅಭಿನಂದಿಸಿದರು.
ಭದ್ರಾವತಿ, ಅ. ೫: ರಾಜ್ಯಾದ್ಯಂತ ಜಯ ಕರ್ನಾಟಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಸಂಘಟನೆಯ ಸಂಸ್ಥಾಪಕರ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಎಲ್ಲರೂ ಮುನ್ನಡೆಯಬೇಕೆಂದು ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್ ಕರೆ ನೀಡಿದರು.
      ಅವರು ಅಧ್ಯಕ್ಷರಾದ ನಂತರ ಸೋಮವಾರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿ ಸಂಘಟನೆಯ ಪ್ರಮುಖರು ಹಾಗು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.  ಮುತ್ತಪ್ಪ ರೈರವರು ಸಮಾಜಮುಖಿ ಚಿಂತನೆಗಳೊಂದಿಗೆ, ಜನಪರ ಕಾಳಜಿಯಿಂದ ಸಂಘಟನೆಯನ್ನು ಹುಟ್ಟು ಹಾಕಿದರು. ಇದೀಗ ಅವರು ನಮ್ಮೊಂದಿಗಿಲ್ಲ. ಆದರೆ ಅವರು ಬಿಟ್ಟು ಹೋಗಿರುವ ಸಂಘಟನೆ ನಮ್ಮೊಂದಿಗಿದೆ. ಈ ಹಿನ್ನಲೆಯಲ್ಲಿ ಆ ಮೂಲಕ ಅವರನ್ನು ಕಾಣುವ ಪ್ರಯತ್ನ ಸಂಘಟನೆಯ ಎಲ್ಲರೂ ಮಾಡಬೇಕಾಗಿದೆ.
      ಜಯ ಕರ್ನಾಟಕ ಸಂಘಟನೆ ಕೇವಲ ನೆಲ, ಜಲ, ಭಾಷೆ ಹೋರಾಟಕ್ಕೆ ಸೀಮಿತವಾಗಿರದೆ ಜನರ ಮಾನವೀಯ ಮೌಲ್ಯಗಳಿಗೆ ಸ್ಪಂದಿಸಲಿದೆ ಎಂಬುದನ್ನು ಕಳೆದ ೫-೬ ತಿಂಗಳುಗಳಿಂದ ಕೈಗೊಳ್ಳುತ್ತಿರುವ ಸಮಾಜಮುಖಿ ಸೇವಾ ಕಾರ್ಯಗಳಿಂದ ಎಲ್ಲರೂ ತಿಳಿದುಕೊಳ್ಳಬಹುದಾಗಿದೆ. ಪ್ರಸ್ತುತ ಮಾದಕ ವ್ಯಸನ ವಿರುದ್ಧ ಸಂಘಟನೆ ಹೋರಾಟ ಇಳಿದಿದ್ದು, ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯದಲ್ಲಿ ಹಿಂದಿ ಭಾಷೆ ಏರಿಕೆ ಮಾಡಲು ಯತ್ನಿಸಿದ್ದು, ಇದರ ವಿರುದ್ಧ ಸಹ ಹೋರಾಟ ನಡೆಸಿ ಕನ್ನಡ ನೆಲದಲ್ಲಿ ಕನ್ನಡಕ್ಕೆ ಮಾತ್ರ ಮೊದಲ ಆದ್ಯತೆ ಎಂಬುದನ್ನು ತಿಳಿಸಲಾಗಿದೆ. ಇದೆ ರೀತಿ ಹಲವಾರು ಜನಪರ ಹೋರಾಟಗಳಲ್ಲಿ ಸಂಘಟನೆ ಮುಂಚೂಣಿಯಲ್ಲಿದ್ದು, ರಾಜ್ಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ೩೦ ಮಂದಿ ರಾಜ್ಯ ಪದಾಧಿಕಾರಿಗಳು ಕಾರ್ಯನಿರತರಾಗಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ. ಸಂಘಟನೆಯಲ್ಲಿ ಯುವಕರು ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ಅವರಿಗೆ ತರಬೇತಿ ಸಹ ನೀಡಲಾಗುತ್ತಿದೆ. ಎಲ್ಲಾ ಜಿಲ್ಲೆ ಹಾಗು ತಾಲೂಕುಗಳಲ್ಲಿ ನೂತನ ಪದಾಧಿಕಾರಿಗಳನ್ನು ರಚಿಸಲಾಗುತ್ತಿದೆ ಎಂದರು.
      ಇದಕ್ಕೂ ಮೊದಲು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೂತನ ಅಧ್ಯಕ್ಷರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.
        ಪ್ರಧಾನ ಕಾರ್ಯದಶಿ ರಾಮಚಂದ್ರಯ್ಯ, ರಾಜ್ಯ ಉಪಾಧ್ಯಕ್ಷ ಮುನಿಸ್ವಾಮಿ, ಜಿಲ್ಲಾ ಉಸ್ತುವಾರಿ ಹರೀಶ್, ತಾಲೂಕು ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪ್ರಮುಖರಾದ ಪ್ರಾನ್ಸಿಸ್, ಮುಕುಂದಪ್ಪ, ಪ್ರಸನ್ನ, ಜ್ಯೋತಿ ಪ್ರಸಾದ್, ಕಿರಣ್, ರಾಖಿ, ಗಾಂಧಿ ಅಶೋಕ, ಚಂದ್ರು, ದಾಸ್, ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಉತ್ತರ ಪ್ರದೇಶ ಸಾಮೂಹಿಕ ಅತ್ಯಾಚಾರ ಘಟನೆಗೆ ಖಂಡನೆ

ಪ್ರಗತಿಪರ ಸಂಘಟನೆಗಳಿಂದ ಸಿ.ಎಂ ಆದಿತ್ಯನಾಥ ಪ್ರತಿಕೃತಿ ದಹಿಸಿ ಆಕ್ರೋಶ

ಭದ್ರಾವತಿಯಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿರುವ ದಲಿತ ಯುವತಿ 'ಮನೀಷಾ ವಾಲ್ಮೀಕಿ' ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಪ್ರಗತಿ ಸಂಘಟನೆಗಳ ಒಕ್ಕೂಟ ಖಂಡಿಸಿದ್ದು, ಸೋಮವಾರ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಭದ್ರಾವತಿ, ಅ. ೫: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿರುವ ದಲಿತ ಯುವತಿ 'ಮನೀಷಾ ವಾಲ್ಮೀಕಿ' ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ನಗರದ ಪ್ರಗತಿ ಸಂಘಟನೆಗಳ ಒಕ್ಕೂಟ ಖಂಡಿಸಿದ್ದು, ಸೋಮವಾರ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
       ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ರವರ ಪ್ರತಿಕೃತಿ ದಹಿಸುವ ಮೂಲಕ ಸಾಮೂಹಿಕ ಅತ್ಯಾಚಾರ ಘಟನೆಗೆ ಕಾರಣರಾದವರನ್ನು ತಕ್ಷಣ ಬಂಧಿಸುವ ಜೊತೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ಆರೋಪಿಗಳನ್ನು ರಕ್ಷಿಸಲು ಸಾಕ್ಷಿಗಳನ್ನು ನಾಶಮಾಡಿದ ಉತ್ತರ ಪ್ರದೇಶ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಲಾಯಿತು.
       ಒಕ್ಕೂಟದ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಮುಖರಾದ ನಗರಸಭೆ ಮಾಜಿ ಬಿ.ಕೆ ಮೋಹನ್, ಛಲವಾದಿ ಮಹಾಸಭಾ ಅಧ್ಯಕ್ಷ ಸುರೇಶ್, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ  ಬಸವರಾಜ್ ಬಿ. ಆನೇಕೊಪ್ಪ, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್ ಕರುಣಾಮೂರ್ತಿ, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪಕ್ಷದ ಪ್ರಮುಖರಾದ ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಜೋಸೆಫ್, ಜಾವಿದ್, ಡಿಎಸ್‌ಎಸ್ ಮುಖಂಡರಾದ ಚಿನ್ನಯ್ಯ, ಕುಬೇಂದ್ರಪ್ಪ,  ಜೆಬಿಟಿ ಬಾಬು, ರಾಜೇಂದ್ರ, ಬದರಿನಾರಾಯಣ, ಚನ್ನಪ್ಪ, ಎಂ. ಶಿವಕುಮಾರ್, ಕರಿಯಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.