Monday, November 2, 2020

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ೬೫ನೇ ಕನ್ನಡ ರಾಜ್ಯೋತ್ಸವ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಸೋಮವಾರ ೬೫ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭದ್ರಾವತಿ, ನ. ೨: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಸೋಮವಾರ ೬೫ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ಕಾರ್ಖಾನೆ ಒಳಭಾಗದಲ್ಲಿರುವ ಮಹಾತ್ಮ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್, ಮುಖ್ಯ ಮಹಾಪ್ರಬಂಧಕ (ಸ್ಥಾವರ) ಸುರಜೀತ್ ಮಿಶ್ರಾ, ಮಹಾಪ್ರಬಂಧಕ ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಪಾರ್ಥ ಚರ್ಕಬರ್ತಿ, ಕಾರ್ಮಿಕ ಸಂಘದ ಅಧ್ಯಕ್ಷ   ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ  ಎ.ಆರ್ ವೀರಣ್ಣ ಸೇರಿದಂತೆ ಇತರರು ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
   ಮಂಜುಶ್ರೀ, ತ್ರಿವೇಣಿ, ಉನ್ನೀಕೃಷ್ಣನ್, ವಸಂತ್, ಶಿವಮಾದು ಹಾಗೂ ಫ್ರಾನ್ಸಿಸ್ ಸೇರಿದಂತೆ ಇನ್ನಿತರನ್ನೊಳಗೊಂಡ ತಂಡದಿಂದ ಕನ್ನಡ ನಾಡಿನ ಪರಂಪರೆ, ಸಂಸ್ಕೃತಿ, ಕಲೆ, ಸಾಹಿತ್ಯ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
    ಕೃಷ್ಣ ಮತ್ತು ನಾಗೇಶ್‌ರವರಿಂದ ಕನ್ನಡ ನಾಡು-ನುಡಿ ಕುರಿತಾದ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಮಂಜುಶ್ರೀ ಮತ್ತು ವಸಂತ್ ನಿರೂಪಿಸಿದರು.  ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
   ಅಧಿಕಾರಿಗಳು ಹಾಗು ಕಾರ್ಮಿಕ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.




ಡಿಎಸ್‌ಎಸ್ ನಗರ ಸಂಚಾಲಕರಾಗಿ ಆರ್. ತಮ್ಮಯ್ಯ

ಆರ್. ತಮ್ಮಯ್ಯ
ಭದ್ರಾವತಿ, ನ. ೨: ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ನಗರ ಸಂಚಾಲಕರಾಗಿ ನಗರದ ಹೊಸಮನೆ ಭೋವಿ ಕಾಲೋನಿ ನಿವಾಸಿ ಆರ್. ತಮ್ಮಯ್ಯ ನೇಮಕಗೊಂಡಿದ್ದಾರೆ.
     ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೇಮಕ ಆದೇಶ ಹೊರಡಿಸಲಾಗಿದ್ದು, ಜಿಲ್ಲಾ ಸಂಚಾಲಕ ಎ. ಅರ್ಜುನ್, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಬಸಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ನೂತನ ನಗರ ಸಂಚಾಲಕರಾಗಿ ನೇಮಕಗೊಂಡಿರುವ ಆರ್. ತಮ್ಮಯ್ಯ ಎಂ. ಗುರುಮೂರ್ತಿ ಸೇರಿದಂತೆ ಜಿಲ್ಲಾ ಹಾಗು ತಾಲೂಕು ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.  

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರು ನಾಮಕರಣಗೊಳಿಸುವವರೆಗೂ ಹೋರಾಟ : ಬಿ.ಎನ್ ರಾಜು

ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರು ನಾಮಕರಣಗೊಳಿಸುವ ಸಂಬಂಧ ಬಿ.ಎಚ್ ರಸ್ತೆ ಪದ್ಮ ನಿಲಯ ಹೋಟೆಲ್ ಸಭಾಂಗಣದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸಭೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ನ. ೨: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರು ನಾಮಕರಣಗೊಳಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟ ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ತಿಳಿಸಿದರು.
    ಅವರು ಸೋಮವಾರ ನಗರದ ಬಿ.ಎಚ್ ರಸ್ತೆ ಪದ್ಮ ನಿಲಯ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. ಈ ಹಿಂದೆ ನಿಲ್ದಾಣಕ್ಕೆ ಅಪ್ಪಾಜಿ ಹೆಸರು ನಾಮಕರಣಗೊಳಿಸಲು ಮಾಜಿ ಶಾಸಕ ವೈಎಸ್‌ವಿ ದತ್ತಾ ನೇತೃತ್ವದಲ್ಲಿ ಹೋರಾಟ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ತಾಲೂಕು ಆಡಳಿತ ಸಹ ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಮುಂದಿನ ಹಂತದ ಹೋರಾಟ ನಡೆಸುವ ಅಗತ್ಯವಿದ್ದು, ಈ ಹಿನ್ನಲೆಯಲ್ಲಿ ಎಲ್ಲರ ಸಹಕಾರ ಅಗತ್ಯವಿದೆ ಎಂದರು.
     ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಅಪ್ಪಾಜಿಯವರು ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅವಿಸ್ಮರಣೀಯವಾಗಿದೆ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕಾದರೆ ಅವರ ಹೆಸರನ್ನು ಬಸ್ ನಿಲ್ದಾಣಕ್ಕೆ ನಾಮಕರಣಗೊಳಿಸುವುದು ಸೂಕ್ತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
    ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ಶಿಮೂಲ್ ಅಧ್ಯಕ್ಷ ಆನಂದ್, ಅಪ್ಪಾಜಿ ಅಭಿಮಾನಿಗಳ ಬಳಗದ ಅಧ್ಯಕ್ಷ ಆರ್. ಕರುಣಾಮೂರ್ತಿ, ತಾ.ಪಂ ಸದಸ್ಯರಾದ ಧರ್ಮೇಗೌಡ, ಯಶೋಧಮ್ಮ, ನಗರಸಭೆ ಮಾಜಿ ಅಧ್ಯಕ್ಷರಾದ ಎಂ.ಎಸ್ ಸುಧಾಮಣಿ, ವಿಶಾಲಾಕ್ಷಿ, ಮುಖಂಡರಾದ ಕರಿಯಪ್ಪ, ಗುಣಶೇಖರ್, ಬದರಿನಾರಾಯಣ, ಗಿರಿನಾಯ್ಡು, ಉಮೇಶ್, ಚಂದ್ರಶೇಖರ್, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಮುಳ್ಕೆರೆ ಲೋಕೇಶ್, ಇಬ್ರಾಹಿಂ ಖಾನ್, ಜಾವಿದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸವಿತಾ ಸಮಾಜ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ


೨೦೨೦-೨೦೨೫ನೇ ಸಾಲಿನ ಭದ್ರಾವತಿ ಸವಿತಾ ಸಮಾಜದ ವಿವಿದ್ಧೋದ್ಧೇಶ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾದವರನ್ನು ಅಭಿನಂದಿಸಲಾಯಿತು.
ಭದ್ರಾವತಿ, ನ. ೨: ೨೦೨೦-೨೦೨೫ನೇ ಸಾಲಿನ ನಗರದ ಸವಿತಾ ಸಮಾಜದ ವಿವಿದ್ಧೋದ್ಧೇಶ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ಯಶಸ್ವಿಯಾಗಿ ನಡೆಯಿತು.
     ಚುನಾವಣೆಯಲ್ಲಿ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಎನ್ ಜಯರಾಂ, ಟಿ. ತಿಪ್ಪೆಸ್ವಾಮಿ, ನರಸಿಂಹಮೂರ್ತಿ, ರಾಮ್‌ದಾಸ್, ಲೀಲಾವತಿ, ಪರಮೇಶ್, ಎಸ್. ವಿಶ್ವನಾಥ್, ಜಿ. ಹೀರಾಲಾಲ್ ಮತ್ತು ವೆಂಕಟೇಶ್ ಅತಿ ಹೆಚ್ಚಿನ ಮತಗಳಿಂದ ಆಯ್ಕೆಯಾದ್ದು, ಉಳಿದಂತೆ ಹಿಂದುಳಿದ ಎ ಸ್ಥಾನಕ್ಕೆ  ಎನ್.ಎಸ್ ರಮೇಶ್ ಹಾಗು ಮಹಿಳಾ ಸ್ಥಾನಗಳಿಗೆ ಲತಾ ರಮೇಶ್ ಮತ್ತು ಆರ್ ನಾಗವೇಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ೧೪೩ ಮತಗಳು ಚಲಾವಣೆಯಾಗಿದ್ದು, ಈ ಪೈಕಿ ೬ ಮತಗಳು ತಿರಸ್ಕೃತಗೊಂಡವು.

ಬಾರಂದೂರು ಗ್ರಾಮದಲ್ಲಿ ೬೫ನೇ ಕನ್ನಡ ರಾಜ್ಯೋತ್ಸವ

ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದ ಬಸ್ ನಿಲ್ದಾಣದ ಬಳಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಗ್ರಾಮಸ್ಥರು ೬೫ನೇ ಕನ್ನಡ ರಾಜ್ಯೋತ್ಸವ ಆಚರಿಸಿದರು.
ಭದ್ರಾವತಿ, ನ. ೨: ತಾಲೂಕಿನ ಬಾರಂದೂರು ಗ್ರಾಮದ ಬಸ್ ನಿಲ್ದಾಣದ ಬಳಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಗ್ರಾಮಸ್ಥರು ೬೫ನೇ ಕನ್ನಡ ರಾಜ್ಯೋತ್ಸವ ಆಚರಿಸಿದರು.
      ಧ್ವಜಾರೋಹಣ ನೆರವೇರಿಸಿ ರಾಜರಾಜೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶ್ರೀ ವಿನಾಯಕ ಆಟೋ ಚಾಲಕರ ಹಾಗು ಮಾಲೀಕರ ಸಂಘ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಸುಧಾಕರ್, ಖಜಾಂಚಿ ಕೇಶವ, ಪ್ರಧಾನ ಕಾರ್ಯದರ್ಶಿ ಮಂಜು, ಕಾರ್ಯದರ್ಶಿ ಕುಮಾರ್, ಸಹಕಾರ್ಯದರ್ಶಿಗಳಾದ ಗೋಪಿ, ರಾಕೇಶ್, ಮಂಜು, ಶಿವಲಿಂಗಣ್ಣ, ಸಂದೀಪ, ಪ್ರದೀಪ, ನಾಗ, ಶಂಕರ್, ಸುರೇಶ ಹಾಗೂ ಪ್ರವೀಣ, ಬಿ.ವಿ. ರಮೇಶ್, ವೈದ್ಯ ನರಸಿಂಹ ಭಟ್,  ಗುರುಕೃಪಾ ಹೋಟೆಲ್ ಮಾಲೀಕ ಶಿವಣ್ಣ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ತಾಲೂಕು ಅಧ್ಯಕ್ಷ ಡಾ.ಸಿ.ರಾಮಾಚಾರಿ, ಕರ್ನಾಟಕ ರಕ್ಷಣಾ ಪಡೆ ಹಾವೇರಿ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
   ಆಟೋ ಚಾಲಕರು, ಅಂಗಡಿಮುಂಗಟ್ಟುಗಳ ವ್ಯಾಪರಸ್ಥರು, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Sunday, November 1, 2020

೬೫ನೇ ಕನ್ನಡ ರಾಜ್ಯೋತ್ಸವ : ಆರೋಗ್ಯ ಇಲಾಖೆ ಸಿಬ್ಬಂದಿಗೆ ಸನ್ಮಾನ

ಭದ್ರಾವತಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವೀಣಾರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ನ. ೧: ನಗರದ ಆಮ್ ಆದ್ಮಿ ಪಾರ್ಟಿ ಕಛೇರಿಯಲ್ಲಿ ಭಾನುವಾರ ೬೫ನೇ ವರ್ಷದ ಕನ್ನಡ ರಾಜ್ಯೋತ್ಸವ ಸರಳವಾಗಿ ಆಚರಿಸಲಾಯಿತು.
     ಧ್ವಜಾರೋಹಣದೊಂದಿಗೆ ತಾಯಿ ರಾಜರಾಜೇಶ್ವರಿ ಪೂಜೆ ಸಲ್ಲಿಸಲಾಯಿತು. ಪ್ರಸ್ತುತ ವಿಶ್ವದಾದ್ಯಂತ ವ್ಯಾಪಿಸಿರುವ ಕೋವಿಡ್-೧೯ ನಿಯಂತ್ರಿಸುವಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಪ್ರಮುಖ ಪಾತ್ರ ವಹಿಸುತ್ತಿರುವ ಆರೋಗ್ಯ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಎಲ್ಲೆಡೆ ನಡೆಯುತ್ತಿದ್ದು, ಈ ಬಾರಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೀಣಾರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
   ಪಕ್ಷದ ಪ್ರಮುಖರಾದ ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಶೈಲಜಾ, ಪರಮೇಶ್ವರನಾಯ್ಕ್, ಪ್ರದೀಪ್, ಲೋಕೇಶ್, ಬಿ.ಕೆ ರಮೇಶ್, ರೇಷ್ಮ, ಎಚ್. ರವಿಕುಮಾರ್, ಜಾವೇದ್, ಮುಳ್ಕೆರೆಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.  ಇದೆ ಸಂದರ್ಭದಲ್ಲಿ ಸುಮಾರು ೧೫ಕ್ಕೂ ಹೆಚ್ಚು ಮಂದಿ ಯುವಕರು ಪಕ್ಷಕ್ಕೆ ಸೇರ್ಪಡೆಗೊಂಡರು.

ಕನ್ನಡ ನಾಡಿನ ಮೇಲಿನ ಅಭಿಮಾನ ಸಹಜವಾಗಿ ಬೆಳೆಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್


ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಧ್ವಜಾರೋಹಣ ನೆರವೇರಿಸಿದರು.
ಭದ್ರಾವತಿ, ನ. ೧: ಕನ್ನಡ ರಾಜ್ಯೋತ್ಸವ ಒಂದು ದಿನಕ್ಕೆ ಸೀಮಿತವಲ್ಲ. ಇದು ನಿತ್ಯೋತ್ಸವ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು. ಕನ್ನಡ ನಾಡಿನ ಮೇಲಿನ ಅಭಿಮಾನ ಸಹಜವಾಗಿ ಬೆಳೆಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
     ಅವರು ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
   ಪ್ರಸ್ತುತ ಕನ್ನಡ ನಾಡಿನಲ್ಲಿ ನೆಲ, ಜಲ ಮತ್ತು ಭಾಷೆ ಉಳಿವಿಗಾಗಿ ಹೋರಾಟಗಳು ನಿರಂತರವಾಗಿ ನಡೆಯುತ್ತಿದ್ದು, ನಾಡಿನಲ್ಲಿ ಹುಟ್ಟಿ ಬೆಳೆದಿರುವ ನಾವುಗಳು ನೆಲ, ಜಲ ಮತ್ತು ಭಾಷೆ ಮೇಲಿನ ಅಭಿಮಾನಿ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಕನ್ನಡ ನಾಡಿನಲ್ಲಿ ಹುಟ್ಟಿ, ಬೆಳೆದು, ಕನ್ನಡದಲ್ಲಿಯೇ ಓದಿ ನಾಡಿಗೆ, ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿರುವ ಮಹಾನ್ ವ್ಯಕ್ತಿಗಳು ನಮ್ಮ ಮುಂದಿದ್ದು, ಅವರ ದಾರಿಯಲ್ಲಿ ನಾವುಗಳು ಸಾಗಬೇಕಾಗಿದೆ ಎಂದರು.


ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.
   ಪ್ರಸ್ತುತ ಕೋವಿಡ್ ಹಿನ್ನಲೆಯಲ್ಲಿ ರಾಜ್ಯೋತ್ಸವ ಸಂಭ್ರಮ ಕ್ಷೀಣಿಸಿರುವುದು ವಿಷಾದನೀಯ ಸಂಗತಿಯಾಗಿದ್ದು, ಮಹಾಮಾರಿಯಿಂದ ತಾಯಿ ರಾಜರಾಜೇಶ್ವರಿ ಎಲ್ಲರನ್ನು ರಕ್ಷಿಸಿ ನಾಡಿನಲ್ಲಿ ಸಮೃದ್ಧಿ ನೆಲೆಸುವಂತೆ ಮಾಡಲಿ ಎಂದು ಪ್ರಾರ್ಥಿಸುತ್ತೇನೆ. ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
   ನಾಡ ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮಾತನಾಡಿ, ಕನ್ನಡ ಭಾಷೆ ಶ್ರೀಮಂತಿಕೆಯಿಂದ ಕೂಡಿದೆ. ತನ್ನದೇ ಆದ ಪರಂಪರೆಯನ್ನು ಹೊಂದಿರುವ ಪ್ರಪಂಚದಲ್ಲಿಯಲ್ಲಿಯೇ ವಿಶಿಷ್ಟತೆಯನ್ನು ಕಾಯ್ದುಕೊಂಡಿರುವ ನಾಡು ನಮ್ಮದಾಗಿದೆ. ಇಂತಹ ನಾಡಿನ ನೆಲ, ಜಲ, ಭಾಷೆ ಮೇಲಿನ ಅಭಿಮಾನ ಹೆಚ್ಚಿಸಿಕೊಳ್ಳುವ ಜೊತೆಗೆ ನಾಡಿನ ಸರ್ವತೋರ್ಮುಖ ಬೆಳವಣಿಗೆಗೆ ಪ್ರತಿಯೊಬ್ಬರು ಶ್ರಮಿಸಬೇಕೆಂದರು.
   ಸಶಸ್ತ್ರ ಮೀಸಲುಪಡೆ ಅಧಿಕಾರಿ ರಂಗಸ್ವಾಮಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಥವಂದನೆ ಗೌರವ ಸ್ವೀಕರಿಸಿದರು. ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಕನ್ನಡದಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ. ಲಕ್ಷ್ಮೀದೇವಿ, ನಗರಸಭೆ ಪೌರಾಯುಕ್ತ ಮನೋಹರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ನಗರವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
   ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ನಿರೂಪಿಸಿದರು.