Monday, December 7, 2020

ಭಾರತ್ ಬಂದ್‌ಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಬಲ

ಸೋಮವಾರ ಸಂಜೆ ಭದ್ರಾವತಿ ಮಿಲಿಟರಿ ಕ್ಯಾಂಪ್ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಭೆ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ನೇತೃತ್ವದಲ್ಲಿ ನಡೆಯಿತು.
    ಭದ್ರಾವತಿ, ಡಿ. ೭: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರೆ ನೀಡಲಾಗಿರುವ ಭಾರತ್ ಬಂದ್‌ಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.
    ಸೋಮವಾರ ಸಂಜೆ ಮಿಲಿಟರಿ ಕ್ಯಾಂಪ್ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭದ್ರಾವತಿಯಲ್ಲೂ ಸಂಪೂರ್ಣ ಬಂದ್ ನಡೆಸುವ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಬೆಳಿಗ್ಗೆ ೧೦ ಗಂಟೆಗೆ ನಗರದ ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ, ನಂತರ ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು.
    ಸಭೆಯಲ್ಲಿ ರೈತ ಮುಖಂಡರಾದ ಎಚ್ ಆರ್ ಬಸವರಾಜಪ್ಪ, ಯಶವಂತರಾವ್ ಘೋರ್ಪಡೆ, ಹಿರಿಯಣ್ಣಯ್ಯ, ರಾಮಚಂದ್ರ, ಡಿ ವಿ ವೀರೇಶ್, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ಪೇಪರ್ ಸುರೇಶ್, ಎಎಪಿ ಪಕ್ಷದ ಎಚ್ ರವಿಕುಮಾರ್, ಇಬ್ರಾಹಿಂ ಖಾನ್, ಭಾಸ್ಕರ್,  ಕರವೇ ಅಧ್ಯಕ್ಷ ಎಂ ಪರಮೇಶ್, ರಾಜೇಂದ್ರ, ಜನಶಕ್ತಿ ಜಿ ರಾಜು, ಪೀರ್ ಶರೀಫ್, ಬಸವರಾಜ ಬಿ ಆನೇಕೊಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಒಕ್ಕಲಿಗರ ನಿಗಮ ಮಂಡಳಿ ಸ್ಥಾಪಿಸಲು ಆಗ್ರಹಿಸಿ ಮನವಿ

ರಾಜ್ಯದಲ್ಲಿ ಒಕ್ಕಲಿಗರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನಿಗಮ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ತಾಲೂಕು ಒಕ್ಕಲಿಗರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೭: ರಾಜ್ಯದಲ್ಲಿ ಒಕ್ಕಲಿಗರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನಿಗಮ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ತಾಲೂಕು ಒಕ್ಕಲಿಗರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
     ಒಕ್ಕಲಿಗ ಸಮುದಾಯದಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿದ್ದು, ಎಲ್ಲರನ್ನೂ ಸಮಾನತೆ ತಳಹದಿಯಲ್ಲಿ ನೋಡುವಂತಾಗಬೇಕು. ಈ ಹಿನ್ನಲೆಯಲ್ಲಿ ನಿಗಮ ಮಂಡಳಿ ಸ್ಥಾಪಿಸಿ ಸಮುದಾಯ ಅಭಿವೃದ್ಧಿಗೆ ಮುಂದಾಗಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
     ಸಂಘದ ಕಾರ್ಯದರ್ಶಿ ಪ್ರಶಾಂತ್, ಪ್ರಮುಖರಾದ ಶಾರದ ಅಪ್ಪಾಜಿ, ಟಿ. ವೆಂಟಕೇಶ್, ಧರ್ಮೇಗೌಡ, ಟಿ. ಚಂದ್ರೇಗೌಡ, ಗೊಂದಿ ಜಯರಾಮ್, ರಾಮಕೃಷ್ಣ, ಕರೀಗೌಡ, ಶಶಿಕುಮಾರ್ ಗೌಡ, ಸತೀಶ್‌ಗೌಡ, ಎಂ.ಎಸ್ ಸುಧಾಮಣಿ, ಅನ್ನಪೂರ್ಣ ಸತೀಶ್, ರಾಧಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಹಾಲಿ ಗ್ರಾ.ಪಂ. ಸದಸ್ಯೆ ಹೆಸರೇ ನಾಪತ್ತೆ : ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಜಯಕರ್ನಾಟಕ ಜನಪರ ವೇದಿಕೆ ಮೂಲಕ ತಹಸೀಲ್ದಾರ್‌ಗೆ ಮನವಿ

ಭದ್ರಾವತಿ ತಾಲೂಕಿನ ಕೊರಲಕೊಪ್ಪ ಗ್ರಾಮ ಪಂಚಾಯಿತಿ ಹಾಲಿ ಸದಸ್ಯೆಯೊಬ್ಬರ ಹೆಸರನ್ನು ರಾಜಕೀಯ ದುರುದ್ದೇಶದಿಂದ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಾಲೂಕು ಕಛೇರಿ ಮುಂಭಾಗ ಸೋಮವಾರ ಪತ್ರಿಭಟನೆ ನಡೆಸಲಾಯಿತು.
    ಭದ್ರಾವತಿ, ಡಿ. ೭: ತಾಲೂಕಿನ ಕೊರಲಕೊಪ್ಪ ಗ್ರಾಮ ಪಂಚಾಯಿತಿ ಹಾಲಿ ಸದಸ್ಯೆಯೊಬ್ಬರ ಹೆಸರನ್ನು ರಾಜಕೀಯ ದುರುದ್ದೇಶದಿಂದ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಾಲೂಕು ಕಛೇರಿ ಮುಂಭಾಗ ಸೋಮವಾರ ಪತ್ರಿಭಟನೆ ನಡೆಸಲಾಯಿತು.
    ಈ ಬಾರಿ ಚುನಾವಣೆಗೆ ಸ್ಪರ್ಧಿಸಬಾರದೆಂಬ ದುರುದ್ದೇಶದಿಂದ ಹಾಲಿ ಸದಸ್ಯೆ ಬಿ.ಆರ್ ಸಿಂಧುರವರ ಹೆಸರನ್ನು ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಟ್ಟು ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಕೀಳುಮಟ್ಟದ ಕುತಂತ್ರ ರಾಜಕಾರಣದ ಅಮಿಷಕ್ಕೆ ಬಲಿಯಾಗಿ ಬಿಎಲ್‌ಓ ಹಾಗು ಸಂಬಂಧಪಟ್ಟ ಅಧಿಕಾರಿಗಳು ಈ ಕೃತ್ಯನಡೆಸಿದ್ದಾರೆಂದು ಆರೋಪಿಸಲಾಯಿತು.
ಇಂದೊಂದು ಸಂವಿಧಾನದ ಕಗ್ಗೊಲೆಯಾಗಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ ತಕ್ಷಣ ನಡೆದಿರುವ ತಪ್ಪನ್ನು ಸರಿಪಡಿಸಿ ಚುನಾವಣೆಗೆ ಸ್ಪಧಿಸಲು ಅವಕಾಶ ಕೊಡಬೇಕೆಂದು ಆಗ್ರಹಿಸಲಾಯಿತು.
   ಜನಪರ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುದೀಪ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಹುಲಗಿ ಕೃಷ್ಣ, ಕಾರ್ಯಾಧ್ಯಕ್ಷ ಮಹಮದ್ ಶಫಿ, ಅಬಿದ್, ಸದಸ್ಯೆ ಬಿ.ಅರ್ ಸಿಂಧು ಹಾಗು ಕೊರಲಕೊಪ್ಪ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಬಾಲಕಿ ಮೇಲೆ ಅತ್ಯಚಾರ ಎಸಗಿ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ

ಬಂಜಾರ ಯುವಕರ ಸಂಘದಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ಹುರುಗಲುವಾಡಿಯಲ್ಲಿ ವಲಸೆ ಕಾರ್ಮಿಕ ಕುಟುಂಬದ ೧೨ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಹಾಗೂ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾವತಿ ತಾಲ್ಲೂಕು ಬಂಜಾರ ಯುವಕರ ಸಂಘ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಡಿ. ೭: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ಹುರುಗಲುವಾಡಿಯಲ್ಲಿ ವಲಸೆ ಕಾರ್ಮಿಕ ಕುಟುಂಬದ ೧೨  ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಹಾಗೂ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲ್ಲೂಕು ಬಂಜಾರ ಯುವಕರ ಸಂಘ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ತಾಳೆಬಸವಾಪುರ ತಾಂಡದ ದಿವಂಗತ ಪಾಂಡುನಾಯ್ಕ ಶಕುಂತಲ ಬಾಯಿ ದಂಪತಿಯ ಪುತ್ರಿ ಹೊಟ್ಟೆಪಾಡಿಗಾಗಿ ಕೂಲಿ ಕೆಲಸಕ್ಕೆ ಕಬ್ಬು ಕಡಿಯಲು ಹೋಗಿದ್ದಾಗ ಆಅತ್ಯಾಚಾರವೆಸಗಿ ಭೀಕರವಾಗಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಬಾಲಕಿಯ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡುವ ಜೊತೆಗೆ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಲಾಯಿತು.   
      ಬಂಜಾರ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ  ಕೃಷ್ಣನಾಯ್ಕ, ಪ್ರಮುಖರಾದ ಬಿ. ಪ್ರವೀಣ್ ಕುಮಾರ್, ರವಿನಾಯ್ಕ, ಕೇಶವನಾಯ್ಕ, ಚಂದ್ರನಾಯ್ಕ, ಕುಮಾರ್ ನಾಯ್ಕ, ನಿತಿನ್ ನಾಯ್ಕ, ಸೋಮನಾಯ್ಕ, ರಮೇಶ್ ನಾಯ್ಕ, ಟಿ ಚಂದ್ರೇಗೌಡ, ಎಚ್ ರವಿಕುಮಾರ್, ಬಿ.ವಿ ಗಿರೀಶ್, ಶಶಿಕುಮಾರ್ ಎಸ್ ಗೌಡ, ಸತೀಶ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Sunday, December 6, 2020

ಛಲವಾದಿ ಮಹಾಸಭಾದಿಂದ ಪರಿನಿರ್ವಾಣ ದಿನ : ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಭದ್ರಾವತಿಯಲ್ಲಿ ಅಂಬೇಡ್ಕರ್‌ರವರ ಪರಿನಿರ್ವಾಣ ದಿನದ ಅಂಗವಾಗಿ ಭಾನುವಾರ ನಗರದ ಬಿ ಎಚ್ ರಸ್ತೆ ಅಂಡರ್ ಬ್ರಿಡ್ಜ್  ಬಳಿಯಿರುವ ಡಾ. ಬಿ ಆರ್ ಅಂಬೇಡ್ಕರ್ ಅಂಬೇಡ್ಕರ್ ಪ್ರತಿಮೆಗೆ ಛಲವಾದಿ ಮಹಾಸಭಾ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.
ಭದ್ರಾವತಿ, ಡಿ. ೬: ಅಂಬೇಡ್ಕರ್‌ರವರ ಪರಿನಿರ್ವಾಣ ದಿನದ ಅಂಗವಾಗಿ ಭಾನುವಾರ ನಗರದ ಬಿ ಎಚ್ ರಸ್ತೆ ಅಂಡರ್ ಬ್ರಿಡ್ಜ್  ಬಳಿಯಿರುವ ಡಾ. ಬಿ ಆರ್ ಅಂಬೇಡ್ಕರ್ ಅಂಬೇಡ್ಕರ್ ಪ್ರತಿಮೆಗೆ ಛಲವಾದಿ ಮಹಾಸಭಾ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.
     ಮಹಾಸಭಾ ಅಧ್ಯಕ್ಷ ಸುರೇಶ್, ಪ್ರಮುಖರಾದ ಜಯರಾಜ್, ಈ ಬಿ ಬಸವರಾಜ್, ಛಲವಾದಿ ಕೃಷ್ಣ, ಮಹೇಶ್ ಲೋಕೇಶ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಖಾಸಗಿಕರಣ ಬೇಡ, ಕಾಯಂ, ಗುತ್ತಿಗೆ, ನಿವೃತ್ತ ಕಾರ್ಮಿಕರ ಹಿತ ಕಾಪಾಡಿ

ವಿಐಎಸ್‌ಎಲ್ ಉಳಿಸಿ ಹೋರಾಟ ಸಮಿತಿಯಿಂದ ಸಂಸದ ರಾಘವೇಂದ್ರಗೆ ಮನವಿ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಕರಣಗೊಳಿಸಬಾರದು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಮತ್ತು ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ಸಂಸದ ಬಿ.ವೈ ರಾಘವೇಂದ್ರರವರಿಗೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ವಿಐಎಸ್‌ಎಲ್ ಉಳಿಸಿ ಹೋರಾಟ ಸಮಿತಿ ಮನವಿ ಮಾಡಿತು.
    ಭದ್ರಾವತಿ, ಡಿ. ೬: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಕರಣಗೊಳಿಸಬಾರದು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಮತ್ತು ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ಸಂಸದ ಬಿ.ವೈ ರಾಘವೇಂದ್ರರವರಿಗೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ವಿಐಎಸ್‌ಎಲ್ ಉಳಿಸಿ ಹೋರಾಟ ಸಮಿತಿ ಮನವಿ ಮಾಡಿತು.
      ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಖಾಸಗಿಕರಣಗೊಳಿಸಲು ಮುಂದಾಗಿರುವುದು ವಿಷಾದನೀಯ ಬೆಳವಣಿಗೆಯಾಗಿದ್ದು, ಇದಕ್ಕೆ ಅವಕಾಶ ನೀಡಬಾರದು.  ಪ್ರಸ್ತುತ ಕಾರ್ಖಾನೆಯಲ್ಲಿರುವ ಗುತ್ತಿಗೆ ಕಾರ್ಮಿಕರಿಗೆ ಪೂರ್ಣಾವಧಿ ಕೆಲಸ ನೀಡಬೇಕು. ನಿವೃತ್ತ ಕಾರ್ಮಿಕರು ವಾಸಿಸುತ್ತಿರುವ ಮನೆಗಳನ್ನು ಮುಂದುವರೆಸುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಯಿತು.
ಸಮಿತಿ ಮನವಿಗೆ ಸ್ಪಂದಿಸಿದ ಸಂಸದರು, ಉಕ್ಕು ಪ್ರಾಧಿಕಾರದ ಎಎಸ್‌ಪಿ ಮತ್ತು ಎಸ್‌ಎಸ್‌ಪಿ ಕಾರ್ಖಾನೆಗಳಲ್ಲಿ ಯಾವುದಾದರೊಂದು ಕಾರ್ಖಾನೆಯನ್ನು ಖಾಸಗಿಕರಣ ಪ್ರಕ್ರಿಯೆಯಿಂದ ಒಂದು ವೇಳೆ ಕೈಬಿಟ್ಟಲ್ಲಿ ವಿಐಎಸ್‌ಎಲ್‌ಯನ್ನು ಸಹ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿಕೊಳ್ಳಲು ಪ್ರಯತ್ನಿಸಲಾಗುವುದು. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರೊಂದಿಗೆ ಕಾರ್ಖಾನೆ ಸಮಸ್ಯೆಗಳನ್ನು ಚರ್ಚಿಸಲು ಸಮಯ ನಿಗದಿಪಡಿಸಿಕೊಡುವುದಾಗಿ ಭರವಸೆ ನೀಡಿದರು.
     ಮುಖ್ಯಮಂತ್ರಿಗಳ ಭೇಟಿ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೋರಾಟ ಸಮಿತಿ ಅಧ್ಯಕ್ಷ ಎಸ್ ಎನ್ ಬಾಲಕೃಷ್ಣ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಜೆಡಿಎಸ್ ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿ ಶೇಖರ್, ಮುಖಂಡರಾದ ಎಂ.ಎ ಅಜಿತ್ ಅಪ್ಪಾಜಿ, ಬಾಲಕೃಷ್ಣ, ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್, ಮಂಗೋಟೆ ರುದ್ರೇಶ್, ವೆಂಕಟೇಶ್, ಕಾರ್ಮಿಕ ಸಂಘದ ಪದಾಧಿಕಾರಿಗಳಾದ ಬಸಂತ ಕುಮಾರ್, ಅಮೃತ್ ಕುಮಾರ್, ಗುತ್ತಿಗೆ ಕಾರ್ಮಿಕರ ಸಂಘದ ಸುರೇಶ್, ರಾಕೇಶ್, ಶ್ರೀನಿವಾಸ್ ಮತ್ತು ನರಸಿಂಹಾಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರತಿಯೊಂದು ಮನೆಯಲ್ಲೂ ಬಾಬಾ ಸಾಹೇಬ್ ಅಂಬೇಡ್ಕರ್ ಆರಾಧಕರಾಗಿ ರಾರಾಜಿಸಲಿ : ಶಾಸಕ ಬಿ.ಕೆ ಸಂಗಮೇಶ್ವರ್

ಭದ್ರಾವತಿ, ಡಿ. ೬: ಈ ದೇಶದ ಪ್ರತಿಯೊಬ್ಬರ ಮನೆಯಲ್ಲಿ ಪ್ರತಿ ದಿನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರನ್ನು ನೆನಪು ಮಾಡಿಕೊಳ್ಳಬೇಕು. ಆಗ ಮಾತ್ರ ಅವರು ಈ ದೇಶಕ್ಕೆ ಸಲ್ಲಿಸಿರುವ ಸೇವೆಗೆ ನಾವೆಲ್ಲರೂ ಗೌರವ ನೀಡಿದಂತಾಗುತ್ತದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಭಾನುವಾರ ನಗರಸಭೆ ವ್ಯಾಪ್ತಿಯ ಎನ್‌ಡಿಬಿ ರಸ್ತೆಯಲ್ಲಿರುವ ಎ.ಕೆ ಕಾಲೋನಿಯಲ್ಲಿ ನೂತನವಾಗಿ ಸುಮಾರು ೯.೨೫ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್‌ರವರು ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ ಮಾಡುವ ಮೂಲಕ ಜಾತಿ, ಜನಾಂಗ, ಧರ್ಮಗಳನ್ನು ಮೀರಿ ಎಲ್ಲರನ್ನು ಸಮಾನತೆ ತತ್ವದಡಿ ಬದುಕುವ ವ್ಯವಸ್ಥೆಯನ್ನು ರೂಪಿಸಿಕೊಟ್ಟಿದ್ದಾರೆ. ಈ ದೇಶದಲ್ಲಿ ಅಂಬೇಡ್ಕರ್‌ರವರ ಹುಟ್ಟು ಈ ದೇಶದ ಜನರ ಸೌಭಾಗ್ಯವಾಗಿದೆ ಎಂದರೆ ತಪ್ಪಾಗಲಾರದು. ಒಂದು ವೇಳೆ ಇಂತಹ ಮಹಾನ್ ವ್ಯಕ್ತಿ ಪ್ರಪಂಚದ ಇತರೆ ಯಾವುದೇ ರಾಷ್ಟ್ರದಲ್ಲಿ ಉದಯಿಸಿದ್ದರೇ ಆ ದೇಶದ ಪ್ರತಿಯೊಂದು ಮನೆಯಲ್ಲಿ ಅಂಬೇಡ್ಕರ್‌ರವರು ರಾರಾಜಿಸುವ ಜೊತೆಗೆ ಪ್ರತಿದಿನ ಆರಾಧನೆಗೆ ಒಳಗಾಗುತ್ತಿದ್ದರು. ಆದರೆ ನಾವುಗಳು ಈ ದೇಶದಲ್ಲಿ  ಅಂಬೇಡ್ಕರ್‌ರವರನ್ನು ಪ್ರತಿದಿನ ನೆನಪುಮಾಡಿಕೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ. ನಾವುಗಳು ಪ್ರತಿದಿನ ಆರಾಧಿಸುವ ದೇವರ ಸ್ಥಾನದಲ್ಲಿ ಅಂಬೇಡ್ಕರ್‌ರವರಿಗೂ ಒಂದು ಸ್ಥಾನ ಮೀಸಲಿಡಬೇಕೆಂದರು.
ಅಂಬೇಡ್ಕರ್ ಹಾಗು ಸಂವಿಧಾನದ ಬಗ್ಗೆ ಸರಿಯಾಗಿ ಅರಿತುಕೊಳ್ಳದ ಕೆಲವು ಕಿಡಿಗೇಡಿ ರಾಜಕಾರಣಿಗಳು ಸಂವಿಧಾನ ಬದಲಿಸುವ ಹಾಗು ಈ ದೇಶದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. ಎಂದಿಗೂ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಸಹ ಧರ್ಮದ ಹೆಸರಿನಲ್ಲಿ ಎಂದಿಗೂ ರಾಜಕಾರಣ ಮಾಡಬಾರದು. ಈ ದೇಶದಲ್ಲಿ ಅಜ್ಞಾನ, ಅನಕ್ಷರತೆ, ಬಡತನ, ನಿರುದ್ಯೋಗ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆಡಳಿತ ನಡೆಸುವ ಸರ್ಕಾರಗಳು ಇವುಗಳ ಬಗ್ಗೆ ಮೊದಲು ಗಮನ ಹರಿಸಬೇಕೆಂದರು.  
ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಜಿಲ್ಲೆಯಲ್ಲಿಯೇ ಅತಿ ಎತ್ತರದ ಹಾಗು ಅಂಬೇಡ್ಕರ್‌ರವರ ನೈಜತೆಯನ್ನು ಹೊಂದಿರುವ ಸುಂದರವಾದ ಪ್ರತಿಮೆ ನಿರ್ಮಾಣ ಮಾಡಲು ಎಲ್ಲಾ ರೀತಿಯ ಸಹಕಾರ ನೀಡಲು ಬದ್ದನಾಗಿದ್ದು, ಈ ಸಂಬಂಧ ಮುಂದಿನ ದಿನಗಳಲ್ಲಿ ದಲಿತ ಸಂಘಟನೆಗಳ ಮುಖಂಡರ ಸಭೆ ಕರೆಯಲಾಗುವುದು. ಅಲ್ಲದೆ ಅಂಡರ್ ಬ್ರಿಡ್ಜ್‌ನಲ್ಲಿ ಪ್ರತಿಭಟನೆ, ಹೋರಾಟಗಳನ್ನು ನಡೆಸುವವರಿಗೆ ಅನುಕೂಲವಾಗುವಂತೆ ಶೆಲ್ಟರ್ ಸಹ ನಿರ್ಮಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.  
ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕಲಾವಿದ ಸಾಸ್ವೆಹಳ್ಳಿ ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ಮಾತನಾಡಿದರು. ದಲಿತ ನೌಕರರ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ಶಿವಬಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ಕಾರ್ಯಕ್ರಮದ ನೇತೃತ್ವದ ವಹಿಸಿದ್ದರು.
ಭಾರತೀಯ ಸೇನೆಯಲ್ಲಿ ೨೪ ವರ್ಷ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿರುವ ಯೋಧ ಎಂ. ಮುರುಳಿಧರನ್, ಸಮಾಜದ ಹಿರಿಯ ಮುಖಂಡ ರಂಗಪ್ಪ, ಯುವ ಮುಖಂಡ ಬಿ.ಎಸ್ ಗಣೇಶ್, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಸವರಾಜ ಬಿ. ಆನೇಕೊಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರು ಪ್ರಾರ್ಥಿಸಿದರು. ರಾಜೀವ್ ಗಾಂಧಿ ಬಿಇಡಿ ಕಾಲೇಜಿನ ಉಪನ್ಯಾಸಕ ಪ್ರಭಾಕರ್ ಸ್ವಾಗತಿಸಿದರು. ಪ್ರಿನ್ಸಿಪಾಲ್ ಹನುಮಂತಪ್ಪ ನಿರೂಪಿಸಿದರು. ಕಲಾವಿದ ತಮಟೆ ಜಗದೀಶ್ ವಂದಿಸಿದರು.
ಚಿತ್ರ: ಡಿ೬-ಬಿಡಿವಿಟಿ
ಭದ್ರಾವತಿ ನಗರಸಭೆ ವ್ಯಾಪ್ತಿಯ ಎನ್‌ಡಿಬಿ ರಸ್ತೆಯಲ್ಲಿರುವ ಎ.ಕೆ ಕಾಲೋನಿಯಲ್ಲಿ ನೂತನವಾಗಿ ಸುಮಾರು ೯.೨೫ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನವನ್ನು ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.