Saturday, December 26, 2020

ಅನಸೂಯ ನಿಧನ


ಅನಸೂಯ
    ಭದ್ರಾವತಿ, ಡಿ. ೨೬: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸುಬ್ರಮಣ್ಯರವರ ತಾಯಿ ಅನಸೂಯ(೭೦) ಶನಿವಾರ ನಿಧನ ಹೊಂದಿದರು.
    ಪತಿ ಸಿ.ಕೆ ಗೋಪಾಲಸ್ವಾಮಿ, ಪುತ್ರ ಸುಬ್ರಮಣಿ, ಸೊಸೆ ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ನೇತೃತ್ವದಲ್ಲಿ ಹಿರಿಯ ಪತ್ರಕರ್ತರಾದ ಕಣ್ಣಪ್ಪ, ಎನ್. ಬಾಬು, ಟಿ.ಎಸ್ ಆನಂದಕುಮಾರ್, ಸುದರ್ಶನ್, ಬದರಿನಾರಾಯಣ, ಸುಭಾಷ್‌ರಾವ್ ಸಿಂಧ್ಯಾ, ಶೈಲೇಶ್‌ಕೋಠಿ, ಬಸವರಾಜ್, ಅನಂತಕುಮಾರ್ ಸೇರಿದಂತೆ ಇನ್ನಿತರರು ಮೃತರ ಅಂತಿಮ ದರ್ಶನ ಪಡೆದು ನಂತರ ಪತ್ರಿಕಾಭವನದಲ್ಲಿ ನಡೆದ ಸಭೆಯಲ್ಲಿ ಮೌನಾಚರಣೆ ನಡೆಸಿ ಸಂತಾಪ ಸೂಚಿಸಲಾಯಿತು.

Friday, December 25, 2020

ಕೊರೋನಾ ನಡುವೆಯೂ ಸಂಭ್ರಮದ ವೈಕುಂಠ ಏಕಾದಶಿ


ಪುರಾಣ ಪ್ರಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಸಂಭ್ರಮಕ್ಕೆ ಮೊಟಕು



ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ನಡೆಯಿತು.
   ಭದ್ರಾವತಿ, ಡಿ. ೨೫: ಕೋವಿಡ್-೧೯ರ ನಡುವೆಯೂ ತಾಲೂಕಿನ ವಿವಿಧ ದೆವಾಲಯಗಳಲ್ಲಿ ಸಂಪ್ರದಾಯದಂತೆ ಶುಕ್ರವಾರ ವೈಕುಂಠ ಏಕಾದಶಿ ಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಲಾಯಿತು.
      ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ :  
    ಕ್ಷೇತ್ರದ ಪುರಾಣ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಸೇರಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಆಚರಿಸಲಾಯಿತು. ಬೆಳಗಿನ ಜಾವ ೪ ಗಂಟೆಗೆ ದೇವಾಲಯದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ, ಶ್ರೀ ಪರುಷೋತ್ತಮಸ್ವಾಮಿ, ಶ್ರೀ ವೇಣುಗೋಪಾಲಕೃಷ್ಣ ಸೇರಿದಂತೆ ಮೂಲ ವಿಗ್ರಹಗಳಿಗೆ ವಿಶೇಷಲಂಕಾರ ಕೈಗೊಳ್ಳುವ ಮೂಲಕ ವಿಶೇಷ ಪೂಜೆಯೊಂದಿಗೆ ಒಳಪ್ರಾಕಾರದಲ್ಲಿ ಚಂಡೆ, ಮಂಗಳವಾದ್ಯ ಸಹಿತ ಉತ್ಸವ ನಡೆಸಲಾಯಿತು. ೬ ಗಂಟೆಯಿಂದ ಭಕ್ತಾಧಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ತಹಸೀಲ್ದಾರ್ ಜಿ. ಸಂತೋಷ್ ಕುಮಾರ್, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಸೇರಿದಂತೆ ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದರು.  
     ಸಹಾಯಕ ಅರ್ಚಕ ಶ್ರೀನಿವಾಸ್, ನಾರಾಯಣಚಾರ್, ನರಸಿಂಹಚಾರ್, ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಉಪಾಧ್ಯಕ್ಷ ರಮಾಕಾಂತ್, ಇಂದ್ರಸೇನ, ಕೃಷ್ಣಪ್ಪ, ಸರೂ, ವೇದ ಪಾಠಶಾಲೆಯ ರವಿ, ಶ್ರೀನಿಧಿ, ಶ್ರೀಹರಿ, ಅಭಿರಾಮ ಸೇರಿದಂತೆ ಇನ್ನಿತರರನ್ನೊಳಗೊಂಡ ತಂಡ ಪೂಜಾಕೈಂಕರ್ಯಗಳನ್ನು ನೆರವೇರಿಸಿತು.


ಭದ್ರಾವತಿ ಅಪ್ಪರ್ ಹುತ್ತಾ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ತಿರುಮಲ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತೀವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಅದ್ದೂರಿಯಾಗಿ ಆಚರಿಸಲಾಯಿತು. ಮೂಲ ವಿಗ್ರಹಕ್ಕೆ ವಿಶೇಷ ಆಲಂಕಾರ ಕೈಗೊಳ್ಳಲಾಗಿತ್ತು.
        ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯ :
    ನಗರದ ಅಪ್ಪರ್ ಹುತ್ತಾ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ತಿರುಮಲ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತೀವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಅದ್ದೂರಿಯಾಗಿ ಆಚರಿಸಲಾಯಿತು. ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಭಕ್ತಾಧಿಗಳಿಗೆ ತೀರ್ಥಪ್ರಸಾದ, ಲಾಡು, ಬಾದಮಿ ಹಾಲು ವಿತರಣೆ ನಡೆಯಿತು. ಕೋವಿಡ್-೧೯ರ ನಡುವೆಯೂ ಹೆಚ್ಚಿನ ಭಕ್ತಾಧಿಗಳು ಪಾಲ್ಗೊಂಡಿದ್ದರು. ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಆದರೆ ಮಾಸ್ಕ್, ಸಾಮಾಜಿಕ ಅಂತರ ಕಂಡು ಬರಲಿಲ್ಲ.


ಭದ್ರಾವತಿ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪಡೆ ಪೊಲೀಸ್ ಮೈದಾನದಲ್ಲಿರುವ ಶ್ರೀನಿವಾಸಸ್ವಾಮಿ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಆಕರ್ಷಕ ಅಲಂಕಾರ ಕೈಗೊಳ್ಳಲಾಗಿತ್ತು.     
        ಮಿಲ್ಟ್ರಿಕ್ಯಾಂಪ್ ಶ್ರೀನಿವಾಸಸ್ವಾಮಿ ದೇವಾಲಯ :
    ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪಡೆ ಪೊಲೀಸ್ ಮೈದಾನದಲ್ಲಿರುವ ಶ್ರೀನಿವಾಸಸ್ವಾಮಿ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಆಕರ್ಷಕ ಅಲಂಕಾರ ಕೈಗೊಳ್ಳಲಾಗಿತ್ತು. ಭಕ್ತಾದಿಗಳಿಗೆ ತೀರ್ಥಪ್ರಸಾದ, ಲಾಡು ವಿತರಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದರು.


ಭದ್ರಾವತಿ ಹಳೇ ಭಂಡಾರಹಳ್ಳಿ ಗ್ರಾಮದ ಶ್ರೀ ಮೂಲ ರಂಗನಾಥ ಸ್ವಾಮಿ ದೇವಾಲಯದಲ್ಲಿ ಈ ಬಾರಿ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು. ಕಾಗದನಗರದ ಸಂತೋಷ್ ಶಾಮಿಯಾನ ವತಿಯಿಂದ ದೇವಸ್ಥಾನದ ಹೊರಭಾಗದಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಅಲಂಕಾರ ಭಕ್ತಾಧಿಗಳ ಗಮನ ಸೆಳೆಯಿತು.
           ಮೂಲ ರಂಗನಾಥಸ್ವಾಮಿ ದೇವಾಲಯ:
      ಹಳೇ ಭಂಡಾರಹಳ್ಳಿ ಗ್ರಾಮದ ಶ್ರೀ ಮೂಲ ರಂಗನಾಥ ಸ್ವಾಮಿ ದೇವಾಲಯದಲ್ಲಿ ಈ ಬಾರಿ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು. ಮೂಲ ವಿಗ್ರಹಕ್ಕೆ ವಿಶೇಷ ಪೂಜೆ ಅಲಂಕಾರ ಕೈಗೊಳ್ಳಲಾಗಿತ್ತು. ಅಲ್ಲದೆ ಕಾಗದನಗರದ ಸಂತೋಷ್ ಶಾಮಿಯಾನ ವತಿಯಿಂದ ದೇವಸ್ಥಾನದ ಹೊರಭಾಗದಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಅಲಂಕಾರ ಭಕ್ತಾಧಿಗಳ ಗಮನ ಸೆಳೆಯಿತು. ದೇವಸ್ಥಾನದ ಕಿಟ್ಟಣ್ಣ ಸ್ವಾಮೀಜಿ(ಕೃಷ್ಣಮೂರ್ತಿ)ಯವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ತೀರ್ಥಪ್ರಸಾದ, ಅನ್ನಸಂತರ್ಪಣೆ ನೆರವೇರಿತು.


ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿರುವ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿರುವ ತಿರುಮಲ ಸ್ವಾಮಿ ವಿಗ್ರಹಕ್ಕೆ ವೈಕುಂಠ ಏಕಾದಶಿ ಪ್ರಯುಕ್ತ ಈ ಬಾರಿ ವಿಶೇಷ ಆಲಂಕಾರ ಕೈಗೊಳ್ಳಲಾಗಿತ್ತು.
     ದೊಣಬಘಟ್ಟ ತಿರುಮಲ ಸ್ವಾಮಿ ವಿಗ್ರಹಕ್ಕೆ ವಿಶೇಷ ಅಲಂಕಾರ :
    ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿರುವ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿರುವ ತಿರುಮಲ ಸ್ವಾಮಿ ವಿಗ್ರಹಕ್ಕೆ ವೈಕುಂಠ ಏಕಾದಶಿ ಪ್ರಯುಕ್ತ ಈ ಬಾರಿ ವಿಶೇಷ ಆಲಂಕಾರ ಕೈಗೊಳ್ಳಲಾಗಿತ್ತು. ಇದು ಅತಿ ಪ್ರಾಚೀನ ವಿಗ್ರಹವಾಗಿದ್ದು, ಆದರೆ ದೇವಸ್ಥಾನ ನಿರ್ಮಾಣಗೊಂಡಿಲ್ಲ. ಇದೀಗ ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ದೇವಸ್ಥಾನ ನಿರ್ಮಾಣಕ್ಕೆ ಸಿದ್ದತೆ ನಡೆಸಲಾಗುತ್ತಿದೆ. ಆರ್ಚಕರಾದ ನಾಗರಾಜ್, ಆರ್. ರವಿ, ಐತಾಳ್, ಇಮ್ರಾನ್, ಜಯರಾಮ್, ನಿರಂಜನ್, ಅಹಮದ್ ಆಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ೩ನೇ ವರ್ಷದ ವೈಕುಂಠ ಏಕಾದಶಿ ಆಚರಿಸಲಾಯಿತು.
       ಬಾರಂದೂರು ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನ :
    ತಾಲೂಕಿನ ಬಾರಂದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ೩ನೇ ವರ್ಷದ ವೈಕುಂಠ ಏಕಾದಶಿ ಆಚರಿಸಲಾಯಿತು. ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ, ಶ್ರೀ ಸ್ವಾಮಿಯ ವೈಕುಂಠ ದರ್ಶನ ಭಕ್ತರ ಗಮನ ಸೆಳೆಯಿತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನೆರವೇರಿತು. ವಂದೇ ಮಾತರಂ ಟ್ರಸ್ಟ್, ದೇವಸ್ಥಾನ ಸೇವಾ ಸಮಿತಿ ಹಾಗು ಅಯ್ಯಪ್ಪ ಭಕ್ತ ವೃಂದ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಬಾರಂದೂರು ಹಾಗು ಸುತ್ತಮುತ್ತಲ ಗ್ರಾಮಗಳ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.

ಕೃಷಿ ಸನ್ಮಾನ್ ಯೋಜನೆ ರೈತರ ಶ್ರಮಕ್ಕೆ ಸಲ್ಲುವ ಗೌರವ : ಸಂಸದ ಬಿ.ವೈ ರಾಘವೇಂದ್ರ

ಮಾಜಿ ಪ್ರಧಾನಿ, ಭಾರತರತ್ನ ಅಟಲ್‌ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮ

ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
     ಭದ್ರಾವತಿ, ಡಿ. ೨೫: ಕೃಷಿ ಸನ್ಮಾನ್ ಯೋಜನೆ ರೈತರಿಗೆ ಲಂಚ ಕೊಡುವ ಯೋಜನೆಯಲ್ಲ ಬದಲಾಗಿ ರೈತರ ಶ್ರಮ ಗೌರವಿಸುವುದಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಶುಕ್ರವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಸಹ ರೈತರ ಶ್ರಮವಿಲ್ಲದೆ ನಾವುಗಳು ಬದಕಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ನಾವುಗಳು ರೈತರನ್ನು ಪ್ರತಿ ಕ್ಷಣ ನೆನಪು ಮಾಡಿಕೊಳ್ಳಬೇಕಾಗಿದೆ. ರೈತರು ಪ್ರಕೃತಿ ವಿಕೋಪ, ಬೆಲೆ ಕುಸಿತ ಸೇರಿದಂತೆ ಒಂದಲ್ಲ ಒಂದು ಕಾರಣಕ್ಕೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ನಡುವೆಯೂ ಕೃಷಿ ನಂಬಿ ಬದುಕುತ್ತಿರುವ ರೈತರ ಬದುಕು ಅಭಿನಂದನಾರ್ಹವಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.
    ಪ್ರಸ್ತುತ ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಸಹ ಎಲ್ಲರೂ ಜೀವನ ಪರ್ಯಂತ ನೆನಪು ಮಾಡಿಕೊಳ್ಳುವಂತಹ ಯೋಜನೆಗಳಾಗಿವೆ ಎಂಬುದನ್ನು ಯಾರು ಸಹ ಮರೆಯಬಾರದು. ೨೦೧೮ರಲ್ಲಿ ಕೃಷಿ ಸನ್ಮಾನ್ ಯೋಜನೆ ಜಾರಿಗೆ ತಂದ ಆರಂಭದಲ್ಲಿ ಜಿಲ್ಲೆಯಲ್ಲಿ ೧೩,೫೦೦ ಮಂದಿ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದರು. ಪ್ರಸ್ತುತ ಈ ಯೋಜನೆಯಡಿ ಜಿಲ್ಲೆಯಲ್ಲಿ ೧,೫೦,೫೦೭ ಮಂದಿ ರೈತರು ಫಲಾನುಭವಿಗಳಾಗಿದ್ದು, ಜಿಲ್ಲೆಗೆ ೩೦.೫೦ ಕೋ. ರು. ಹಣ ಬಿಡುಗಡೆಯಾಗಿ ತಲಾ ೨,೦೦೦ ರು. ಇಂದು ರೈತರ ಖಾತೆಗಳಿಗೆ ನೇರವಾಗಿ ಜಮಾ ಆಗಿದೆ. ಇದೆ ರೀತಿ ಭದ್ರಾವತಿ ತಾಲೂಕಿನಲ್ಲಿ ೨೨,೮೬೩ ರೈತರು ಫಲಾನುಭವಿಗಳಾಗಿದ್ದು, ಒಟ್ಟು ೪.೭೦ ಕೋ. ರು. ಬಿಡುಗಡೆಯಾಗಿ ರೈತರ ಖಾತೆಗೆ ಹಣ ಜಮಾ ಆಗಿದೆ ಎಂದರು.
    ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿ, ಬಿಜೆಪಿ ಪಕ್ಷ ಸಾಮಾನ್ಯರ ಪಕ್ಷವಾಗಿದೆ. ಇದು ಹಣ, ಜಾತಿ ಆಧಾರದ ಮೇಲೆ ಸಂಘಟಿತಗೊಂಡಿಲ್ಲ ಬದಲಾಗಿ ಪಕ್ಷದ ಹಿರಿಯರ ವೈಚಾರಿಕ ಚಿಂತನೆಗಳು, ಆದರ್ಶ ಗುಣಗಳು, ಭವಿಷ್ಯದ ಆಲೋಚನೆಗಳು ಹಾಗು ಕಾರ್ಯಕರ್ತರ ಶ್ರಮದಿಂದ ಬೆಳೆದು ಬಂದಿದೆ. ಈ ಹಿನ್ನಲೆಯಲ್ಲಿ ಮುಂದಿನ ಎಲ್ಲಾ ಅವಧಿಗೂ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮುಂದುವರೆಯಲಿದ್ದಾರೆಂಬ ವಿಶ್ವಾಸವಿದೆ ಎಂದರು.
    ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಪಕ್ಷದ ತತ್ವ, ಸಿದ್ದಾಂತಗಳು ಮುಖ್ಯ. ಯಾವುದೇ ಅಧಿಕಾರದ ಆಸೆಗಾಗಿ ದುಡಿಯದೆ ಪಕ್ಷ ಸಂಘಟನೆಗಾಗಿ ದುಡಿಯಬೇಕು. ಅಟಲ್ ಬಿಹಾರಿ ವಾಜಪೇಯಿಯವರ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಪಕ್ಷದ ಸಿದ್ದಾಂತ ಹಾಗು ಕಾರ್ಯಕರ್ತರ ಶ್ರಮದಿಂದಾಗಿ ಸಾಮಾನ್ಯ ಕಾರ್ಯಕರ್ತನಾಗಿದ್ದ ನಾನು ಇಂದು ಸಚಿವನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಭದ್ರಾವತಿ ವಿಧಾನಸಭಾ ಕ್ಷೇತ್ರದ ಚಿತ್ರಣ ಸಹ ಬದಲಾಗಲಿದೆ. ಕಾರ್ಯಕರ್ತರು ಇನ್ನೂ ಹೆಚ್ಚಿನ ಉತ್ಸಾಹದಿಂದ ಮುನ್ನಡೆಯಬೇಕೆಂದು ಕರೆ ನೀಡಿದರು.  
    ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಪ್ರಮುಖರಾದ ಎಂ.ಬಿ ಭಾನುಪ್ರಕಾಶ್, ಆರ್.ಕೆ ಸಿದ್ದರಾಮಯ್ಯ, ಗಿರೀಶ್‌ಪಟೇಲ್, ಡಿ.ಎಸ್ ಅರುಣ್, ಸುವರ್ಣಶಂಕರ್, ಪವಿತ್ರ ರಾಮಯ್ಯ, ಚನ್ನಬಸಪ್ಪ, ಜ್ಞಾನೇಶ್ವರ್, ಎಸ್.ಎಸ್ ಜ್ಯೋತಿಪ್ರಕಾಶ್, ಗುರುಮೂರ್ತಿ, ಎಸ್. ದತ್ತಾತ್ರಿ, ಮಂಗೋಟೆ ರುದ್ರೇಶ್, ಜಿ. ಧರ್ಮಪ್ರಸಾದ್, ಬಿ.ಕೆ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕು ಬಿಜೆಪಿ ಅಧ್ಯಕ್ಷ ಎಂ. ಪ್ರಭಾಕರ್ ಸ್ವಾಗತಿಸಿದರು.


ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಇನ್ನಿತರ ಗಣ್ಯರು ಸಾಮಾನ್ಯರಂತೆ ಕಾರ್ಯಕರ್ತರ ನಡುವೆ ಕುಳಿತು ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ರೈತ ಸಂವಾದ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಿದರು.


Thursday, December 24, 2020

ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ಪ್ರಕರಣದಲ್ಲಿ ಬಲಿಪಶು ಮಾಡುವ ಹುನ್ನಾರ

ಎಸ್‌ಡಿಪಿಐ ಕಾರ್ಯಕರ್ತರಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ

ಬೆಂಗಳೂರಿನ ಡಿ.ಜೆ ಹಳ್ಳಿ ಹಾಗು ಕೆ.ಜೆ ಹಳ್ಳಿಯಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆದಿರುವ ಪ್ರಕರಣದಲ್ಲಿ ವಿನಾಕಾರಣ ಎಸ್‌ಡಿಪಿಐ ಕಾರ್ಯಕರ್ತರು ಹಾಗು ಅಲ್ಪಸಂಖ್ಯಾತರಾಗಿರುವ ಮುಸ್ಲಿಮರನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
    ಭದ್ರಾವತಿ, ಡಿ. ೨೪: ಬೆಂಗಳೂರಿನ ಡಿ.ಜೆ ಹಳ್ಳಿ ಹಾಗು ಕೆ.ಜೆ ಹಳ್ಳಿಯಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆದಿರುವ ಪ್ರಕರಣದಲ್ಲಿ ವಿನಾಕಾರಣ ಎಸ್‌ಡಿಪಿಐ ಕಾರ್ಯಕರ್ತರು ಹಾಗು ಅಲ್ಪಸಂಖ್ಯಾತರಾಗಿರುವ ಮುಸ್ಲಿಮರನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ತಾಲೂಕು ಕಛೇರಿ ಮುಂಭಾಗ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
     ಪ್ರವಾದಿ ಮಹಮದ್ ಪೈಗಂಬರ್‌ರವರ ನಿಂದನೆಯಿಂದಾಗಿ ಬೆಂಗಳೂರಿನ ಡಿ.ಜೆ ಹಳ್ಳಿ ಹಾಗು ಕೆ.ಜೆ ಹಳ್ಳಿಯಲ್ಲಿ ಹಿಂಸಾಚಾರ ನಡೆದಿದ್ದು, ಈ ಪ್ರಕರಣ ರಾಜಕೀಯ ದುರುದ್ದೇಶದ ಒಂದು ಭಾಗವಾಗಿರುತ್ತದೆ. ಪ್ರಕರಣಕ್ಕೆ  ಸಂಬಂಧಿಸಿದಂತೆ ಈಗಾಗಲೇ ಕರ್ನಾಟಕ ರಾಜ್ಯ ಪೊಲೀಸ್ ಹಾಗು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆದಿದ್ದು, ಎಸ್‌ಡಿಪಿಐ ಕಾರ್ಯಕರ್ತರು ತನಿಖೆಯಲ್ಲಿ ನಿರಂತವಾಗಿ ಪಾಲ್ಗೊಂಡು ಸಂಪೂರ್ಣವಾಗಿ ಸಹಕಾರ ನೀಡಿದ್ದಾರೆ. ಅಲ್ಲದೆ ತನಿಖೆ ಸಂದರ್ಭದಲ್ಲಿ ಎಸ್‌ಡಿಪಿಐ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭಿಸಿರುವುದಿಲ್ಲ. ಇದೀಗ ಕೇಂದ್ರ ಬಿಜೆಪಿ ನಾಯಕರ ನಿರ್ದೇಶನದ ಮೇರೆಗೆ ಎಸ್‌ಡಿಪಿಐ ಕಾರ್ಯಕರ್ತರನ್ನು ಈ ಪ್ರಕರಣದಲ್ಲಿ ಬಲಿಪಶುಗಳನ್ನಾಗಿ ಮಾಡುವ ಹುನ್ನಾರ ನಡೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
    ವಾಸ್ತವವಾಗಿ ಎಸ್‌ಡಿಪಿಐ ಅಲ್ಪಸಂಖ್ಯಾತರು ಅದರಲ್ಲೂ ವಿಶೇಷವಾಗಿ ಮುಸ್ಲಿಂ, ದಲಿತ ಹಾಗು ಇನ್ನಿತರ ಶೋಷಿತ ಸಮುದಾಯಗಳ ರಾಜಕೀಯ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಅಲ್ಲದೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತೊಡಗಿಸಿಕೊಂಡು ಪ್ರಶಂಸೆಗೆ ಪಾತ್ರವಾಗಿದೆ. ಈ ನಡುವೆ ಕೇಂದ್ರ ಬಿಜೆಪಿ ನಾಯಕರು ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಂಡು ಈ ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ಇತ್ತೀಚೆಗೆ ಎಸ್‌ಡಿಪಿಐ ಬೆಂಗಳೂರು ಜಿಲ್ಲಾಧ್ಯಕ್ಷ ಮಹಮದ್ ಶರೀಫ್ ಹಾಗು ಸ್ಥಳೀಯ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದನ್ನು ಎಸ್‌ಡಿಪಿಐ ಖಂಡಿಸುತ್ತದೆ. ರಾಷ್ಟ್ರೀಯ ತನಿಖಾ ಸಂಸ್ಥೆ ನಿಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕು. ಈಗಾಗಲೇ ಪ್ರಕರಣದಲ್ಲಿ ಬಂಧಿಸಲಾಗಿರುವ ಅಮಾಯಕರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.
   ಎಸ್‌ಡಿಪಿಐ ತಾಲೂಕು ಅಧ್ಯಕ್ಷ ತಹಿರ್, ಕಾರ್ಯದಶಿ ಗೌಸ್ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೊರೋನಾ ಸೋಂಕು ಹರಡುವ ಭೀತಿ : ವೈಕುಂಠ ಏಕಾದಶಿ ಸಂಭ್ರಮ ಮೊಟಕು

   ಭದ್ರಾವತಿ, ಡಿ. ೨೪: ಹೊಸ ರೂಪಾಂತರಗೊಂಡಿರುವ ಕೊರೋನಾ ಸೋಂಕು ವ್ಯಾಪಕವಾಗಿ ಹರಡುವ ಭೀತಿ ಹಿನ್ನಲೆಯಲ್ಲಿ ಈ ಬಾರಿ ನಗರದೆಲ್ಲೆಡೆ ಡಿ.೨೫ರಂದು ನಡೆಯಲಿರುವ ವೈಕುಂಠ ಏಕಾದಶಿ ಸಂಭ್ರಮ ಮೊಟಕುಗೊಳಿಸಲಾಗಿದೆ.
     ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ವೈಕುಂಠ ಏಕಾದಶಿ ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಸಾವಿರ ಭಕ್ತಾಧಿಗಳು ಆಕರ್ಷಕವಾದ ವೈಕುಂಠನಾಥನ ದರ್ಶನ ಪಡೆಯಲು ಬೆಳಿಗ್ಗೆಯಿಂದಲೇ ದೇವಸ್ಥಾನದ ಹೊರಭಾಗದಲ್ಲಿ ಸಾಲುಗಟ್ಟಿ ನಿಲ್ಲುವುದು ಸಾಮಾನ್ಯವಾಗಿ ಕಂಡು ಬರುತ್ತಿತ್ತು. ವಿಶೇಷವಾಗಿ ಸಾವಿರಾರು ಭಕ್ತಾಧಿಗಳಿಗೆ ದೇವಸ್ಥಾನ ಪ್ರಸಾದ ಸಮಿತಿಯಿಂದ ಲಾಡು ವಿತರಣೆ ಮಾಡಲಾಗುತ್ತಿತ್ತು. ಅದ್ದೂರಿಯಾಗಿ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಎಲ್ಲಾ ಸಂಭ್ರಮಗಳಿಗೆ ಕಡಿವಾಣ ಹಾಕಲಾಗಿದೆ.
    ಕೊರೋನಾ ಸೋಂಕಿನ ಭೀತಿ ಹಿನ್ನಲೆಯಲ್ಲಿ ತಾಲೂಕು ಆಡಳಿತ ಹಲವು ನಿರ್ಬಂಧಗಳೊಂದಿಗೆ ವೈಕುಂಠ ಏಕಾದಶಿ ಆಚರಣೆಗೆ ಅವಕಾಶ ಕಲ್ಪಿಸಿದೆ. ಆದರೆ ಹೆಚ್ಚಿನ ಭಕ್ತಾಧಿಗಳು ಸೇರುವಂತಿಲ್ಲ. ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿತರಿಸುವಂತಿಲ್ಲ. ದೇವಸ್ಥಾನಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಬಳಕೆಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರವಹಿಸುವುದು. ದೇವಸ್ಥಾನದ ಆವರಣದಲ್ಲಿಯೇ ಉತ್ಸವ ನಡೆಸುವುದು ಸೇರಿದಂತೆ ಇತ್ಯಾದಿ ನಿರ್ಬಂಧಗಳನ್ನು ವಿಧಿಸಲಾಗಿದೆ.
     ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಮುಜರಾಯಿ ಅಧಿಕಾರಿಯಾಗಿರುವ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ದೇವಸ್ಥಾನಗಳಲ್ಲಿ ಸಂಪ್ರದಾಯದಂತೆ ವೈಕುಂಠ ಏಕಾದಶಿ ನಡೆಸಲು ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ. ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಎಲ್ಲರೂ ಎಚ್ಚರವಹಿಸುವುದು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಭಕ್ತಾಧಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.
      ನಗರದ ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿರುವ ಶ್ರೀನಿವಾಸ ಸ್ವಾಮಿ ದೇವಸ್ಥಾನ, ಕಾಗದನಗರದಲ್ಲಿರುವ ೭ನೇ ವಾರ್ಡಿನಲ್ಲಿರುವ ಅರಳಿಕಟ್ಟೆ ದೇವಸ್ಥಾನ ಹಾಗು ಬಾರಂದೂರಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನ ಹಾಗು ದೊಡ್ಡಗೊಪ್ಪೇನ ಹಳ್ಳಿಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಬಿ.ಎಚ್ ರಸ್ತೆ ಲೋಯರ್ ಹುತ್ತಾದಲ್ಲಿರುವ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಪ್ರತಿ ವರ್ಷ ವೈಕುಂಠ ಏಕಾದರ್ಶಿ ಅದ್ದೂರಿಯಾಗಿ ಅಚರಿಸಿಕೊಂಡು ಬರಲಾಗುತ್ತಿದೆ.

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ರೈತ ದಿನಾಚರಣೆ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ  ಲಕ್ಷ್ಮಿಪುರದ ಪ್ರಗತಿಪರ ರೈತ ರಾಮಲಿಂಗಯ್ಯರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
   ಭದ್ರಾವತಿ, ಡಿ. ೨೪:  ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಸರಳವಾಗಿ ನಡೆಯಿತು.
    ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಲ್. ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಲಕ್ಷ್ಮಿಪುರದ ಪ್ರಗತಿಪರ ರೈತ ರಾಮಲಿಂಗಯ್ಯರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ವಿದ್ಯಾಸಂಸ್ಥೆಯ ಬಿ.ಇಡಿ ವಿಭಾಗದ ಪ್ರಾಂಶುಪಾಲರು, ಪ್ರಭಾರಿ ಆಡಳಿತಾಧಿಕಾರಿಗಳು,  ಸಹಾಯಕ ಆಡಳಿತಾಧಿಕಾರಿಗಳು, ಹಾಗೂ ಎಲ್ಲಾ ವಿಭಾಗಗಳ ಮುಖ್ಯ ಶಿಕ್ಷಕರು, ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  
  ಕಾರ್ಯಕ್ರಮದಲ್ಲಿ ರೇಣುಕಪ್ಪ ನಿರೂಪಣೆ, ಆಶಾ ಪ್ರಾರ್ಥನೆ, ರವಿ ಸ್ವಾಗತ ಮತ್ತು ರೇವತಿ ವಂದನಾರ್ಪಣೆ ನೆರವೇರಿಸಿಕೊಟ್ಟರು.

ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಕೊಡುಗೆಯಾಗಿ ನೀಡುವ ಕಡೆ ಪ್ರತಿಯೊಬ್ಬರು ಗಮನ ಹರಿಸಿ : ಕೆಎಲ್‌ಎಸ್ ರಾವ್

ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಒಂದು ತಿಂಗಳವರೆಗೆ ನಡೆದ ಮಾಸಾಚರಣೆ


ಪರಿಸರ ಮಾಸಾಚರಣೆ ಅಂಗವಾಗಿ ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಆಡಳಿತ ಕಛೇರಿಯಲ್ಲಿರುವ ಮಹಾತ್ಮಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆಎಲ್‌ಎಸ್ ರಾವ್ ಮಾತನಾಡಿದರು.
    ಭದ್ರಾವತಿ, ಡಿ. ೨೩: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ನ.೧೯ ರಿಂದ ಒಂದು ತಿಂಗಳವರೆಗೆ ಪರಿಸರ ಮಾಸಾಚರಣೆ ಹಮ್ಮಿಕೊಳ್ಳಲಾಗಿತ್ತು.
    ಮಾಸಾಚರಣೆ ಅಂಗವಾಗಿ ಕಾರ್ಖಾನೆಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ, ರಸ ಪ್ರಶ್ನೆ ಸೇರಿದಂತೆ ಹಲವಾರು ಸ್ಪರ್ಧೆಗಳನ್ನು ಆಯೋಜಿಸಿ, ಪರಿಸರದ ಬಗ್ಗೆ ಕಾಳಜಿ ಮೂಡಿಸಲಾಯಿತು.  ಪ್ರತಿಯೊಂದು ವಿಭಾಗದಲ್ಲಿಯೂ ೩ ಮೊದಲ ಮಂದಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
    ಕಾರ್ಖಾನೆಯ ಆಡಳಿತ ಕಛೇರಿಯಲ್ಲಿರುವ ಮಹಾತ್ಮಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆಎಲ್‌ಎಸ್ ರಾವ್ ಮಾತನಾಡಿ, ಪ್ರತಿಯೊಬ್ಬರು ತಮ್ಮ ಪ್ರತಿದಿನದ ಚಟುವಟಿಕೆಗಳಲ್ಲಿ, ವಾಸಿಸುವ ಹಾಗು ಕೆಲಸ ಮಾಡುವ ಸ್ಥಳದ ಸುತ್ತಮುತ್ತ, ಪರಿಸರ ಕಾಳಜಿ ವಹಿಸಬೇಕು. ಇದರಿಂದ ಪರಿಸರ ರಕ್ಷಣೆ ಸಾಧ್ಯ. ಅಲ್ಲದೆ ನಾವೆಲ್ಲರೂ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬಹುದಾಗಿದೆ ಎಂದರು.  
    ಮುಖ್ಯ ಮಹಾಪ್ರಬಂಧಕ(ಸ್ಥಾವರ) ಸುರಜೀತ್ ಮಿಶ್ರಾ, ಪ್ರಭಾರಿ ಮಹಾಪ್ರಬಂಧಕ(ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ ಚಕ್ರವರ್ತಿ, ಮಹಾಪ್ರಬಂಧಕ(ಈ.ಎಮ್.ಡಿ) ಡಿ. ಲೋಕೇಶ್ವರ್ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು. ಉನ್ನಿಕೃಷ್ಣನ್ ಪ್ರಾಥಿಸಿದರು. ಆರ್. ಸತೀಶ್ ವಂದಿಸಿದರು.