Sunday, December 27, 2020

ವಿಜೃಂಭಣೆಯಿಂದ ಜರುಗಿದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಕೋವಿಡ್-೧೯ರ ನಡುವೆಯೂ ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಭದ್ರಾವತಿ, ಡಿ. ೨೭: ಕೋವಿಡ್-೧೯ರ ನಡುವೆಯೂ ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಮಧ್ಯಾಹ್ನ ಸುಮಾರು ೧೨.೩೦ಕ್ಕೆ ದೇವಸ್ಥಾನದ ಆವರಣದಿಂದ ಆರಂಭಗೊಂಡ ರಥೋತ್ಸವ ಸರ್.ಎಂ ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ನೂರಾರು ಭಕ್ತಾಧಿಗಳು ರಥೋತ್ಸವ ಆರಂಭವಾಗುತ್ತಿದ್ದಂತೆ ಜೈಕಾರಗಳನ್ನು ಹಾಕಿ ಮುಂದೆ ಸಾಗಿದರು. ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕಾಂಗ್ರೆಸ್ ಮುಖಂಡ ಎಚ್.ಸಿ ದಾಸೇಗೌಡ ಹಲವಾರು ವರ್ಷಗಳಿಂದ ರಥೋತ್ಸವದಲ್ಲಿ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ನೆರವೇರಿಸಿಕೊಂಡು ಬರುತ್ತಿದ್ದು, ಈ ಬಾರಿ ಸಹ ಇವರ ನೇತೃತ್ವದಲ್ಲಿ ಪ್ರಸಾದ ವಿತರಣೆ ನಡೆಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ಸಮಾಜ ಸೇವಕ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್, ನಗರಸಭಾ ಸದಸ್ಯೆ ಎಂ.ಎಸ್ ಸುಧಾಮಣಿ, ಬಿಜೆಪಿ ಮುಖಂಡ ಎಚ್.ಸಿ ರಮೇಶ್, ಮುಖಂಡರಾದ ದೇವಸ್ಥಾನ ಸೇವಾ ಸಮಿತಿ ಪ್ರಮುಖರಾದ ಕರಿಯಪ್ಪ, ಎ.ಟಿ ರವಿ, ಕಬ್ಬಡಿ ಕೃಷ್ಣೇಗೌಡ, ಸತೀಶ್‌ಗೌಡ, ತಿಮ್ಮೇಗೌಡ, ಆರ್. ವೇಣುಗೋಪಾಲ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಕೊವೀಡ್-೧೯ರ ಹಿನ್ನಲೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ಹೆಚ್ಚಿನ ಜಾಗೃತಿ ವಹಿಸಿತ್ತು. ಭಕ್ತಾಧಿಗಳ ಸಂಖ್ಯೆ ನಿಯಂತ್ರಿಸುವ ಹಿನ್ನಲೆಯಲ್ಲಿ ರಥೋತ್ಸವ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡಿರಲಿಲ್ಲ. ಆದರೂ ಸಹ ಈ ಬಾರಿ ಪ್ರತಿ ವರ್ಷಕ್ಕಿಂತ ಹೆಚ್ಚಿನ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಮಾಸ್ಕ್-ಸಾಮಾಜಿಕ ಅಂತರ ಕಂಡು ಬರಲಿಲ್ಲ:
ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತಾಧಿಗಳಲ್ಲಿ ಸಾಮಾಜಿಕ ಅಂತರವಾಗಲಿ, ಮಾಸ್ಕ್ ಬಳಕೆಯಾಗಲಿ ಕಂಡು ಬರಲಿಲ್ಲ. ಒಟ್ಟಾರೆ ಕೋವಿಡ್-೧೯ ನಿಯಮಗಳನ್ನು ಪಾಲಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.

Saturday, December 26, 2020

ಕನ್ನಡ ಕಾಯಕ ಪಡೆಗೆ ಅಪರಂಜಿ ಶಿವರಾಜ್ ನೇಮಕ

ಅಪರಂಜಿ ಶಿವರಾಜ್
ಭದ್ರಾವತಿ, ಡಿ. ೨೬: ಕನ್ನಡ ಅಭಿವೃದ್ಧಿ ಪ್ರಾಧಿಕಾರ ನವಂಬರ್ ೧, ೨೦೨೦ ರಿಂದ ಅಕ್ಟೋಬರ್ ೩೧, ೨೦೨೧ರವರೆಗೆ 'ಕನ್ನಡ ಕಾಯಕ ವರ್ಷ' ಇದರ ಅಂಗವಾಗಿ ಜಾರಿಗೆ ತಂದಿರುವ ಕಾರ್ಯಕ್ರಮದ ಕಾರ್ಯಸೂಚಿಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಚಿಸಿರುವ ಕನ್ನಡ ಕಾಯಕ ಪಡೆಗೆ ಶಿವಮೊಗ್ಗ ಜಿಲ್ಲೆಯಿಂದ ನಗರದ ಚಲನಚಿತ್ರ ನಟ, ರಂಗ ಕಲಾವಿದ ಅಪರಂಜಿ ಶಿವರಾಜ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.
     ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಭರಣ ಆದೇಶಹೊರಡಿಸಿದ್ದು, ಪ್ರಥಮ ಹಂತವಾಗಿ ಡಿ.೨೯ರಂದು ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯದ ಎಲ್ಲಾ ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆ ಮತ್ತು ಶುದ್ಧ ಕನ್ನಡ ನಾಮಫಲಕ ಅಳವಡಿಕೆ ಅಭಿಯಾನ ಯಶಸ್ವಿಗೆ ಹೆಚ್ಚಿನ ರೀತಿಯಲ್ಲಿ ಶ್ರಮಿಸುವಂತೆ ಅಧ್ಯಕ್ಷರು ಅಪರಂಜಿ ಶಿವರಾಜ್‌ರವರಿಗೆ ಸೂಚಿಸಿದ್ದಾರೆ.





ಜ.೨ ಮತ್ತು ೩ರಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ : ಡಿ.ಟಿ ಮೇಘರಾಜ್

ಭದ್ರಾವತಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಮಾತನಾಡಿದರು.
ಭದ್ರಾವತಿ, ಡಿ. ೨೬: ರಾಜ್ಯದಲ್ಲಿ ಬಿಜೆಪಿ ಪಕ್ಷ ನೆಲೆ ಕಂಡುಕೊಳ್ಳಲು ಶಿವಮೊಗ್ಗ ಜಿಲ್ಲೆಯ ಕೊಡುಗೆ ಆಪಾರವಾಗಿದೆ. ತತ್ವ, ಸಿದ್ದಾಂತ, ಹೋರಾಟಗಳ ನೆಲೆಗಟ್ಟಿನಲ್ಲಿ ರೂಪುಗೊಂಡು ಪ್ರಸ್ತುತ ದಕ್ಷಿಣ ಭಾರತದಲ್ಲೂ ಅಧಿಕಾರದ ಚುಕ್ಕಾಣಿ ಹಿಡಿದಿರುವ ಪಕ್ಷ ದೇಶಾದ್ಯಂತ ಜನಮನ್ನಣೆಗೆ ಪಾತ್ರವಾಗಿದೆ. ಇಂತಹ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಪುನಃ ಸಂಘಟನಾತ್ಮಕ ಚಟುವಟಿಕೆ ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಜ.೨ ಮತ್ತು ೩ ರಂದು ಎರಡು ದಿನಗಳ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ತಿಳಿಸಿದರು.
     ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ರಾಜಕಾರಣದ ಪ್ರತಿ ಹಂತದಲ್ಲಿ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅನನ್ಯ ಹಾಗು ಅಪಾರವಾಗಿದೆ. ೧೯೭೧ರಲ್ಲಿ ಜಿಲ್ಲೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ರೂಪುಗೊಂಡ ಪರಿಣಾಮ ಸಾಕಷ್ಟು ಬದಲಾವಣೆಗಳಾದವು. ೧೯೭೬ರಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ, ೧೯೯೨ರಲ್ಲಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಗಳು ಜಿಲ್ಲೆಯಲ್ಲಿ ನಡೆದವು. ಈ ನಡುವೆ ಪಕ್ಷದಿಂದ ಹಲವು ಮಂದಿ ಚುನಾವಣೆಗಳಲ್ಲಿ ಕಣಕ್ಕಿಳಿದು ಸ್ಪರ್ಧಿಸಿದರು. ಸೋಲು-ಗೆಲುವುಗಳಿಗೆ ಎದೆಗುಂದದೆ ನಿರಂತರವಾಗಿ ಪ್ರಯತ್ನಿಸಿದ ಫಲವಾಗಿ ೧೯೭೫ರಲ್ಲಿ ಪಕ್ಷದಿಂದ ೨ ಜನ ಮಾತ್ರ ವಿಧಾನಸಭೆಗೆ ಆಯ್ಕೆಯಾದರು. ಈ ಪೈಕಿ ೧ ಸ್ಥಾನ ಜಿಲ್ಲೆಗೆ ಸೇರಿದ್ದಾಗಿದ್ದು, ನಂತರ ೧೯೭೯ರಲ್ಲಿ ೪ ಜನ ಆಯ್ಕೆಯಾಗಿದ್ದು, ಈ ಪೈಕಿ ೨ ಸ್ಥಾನ ಜಿಲ್ಲೆಗೆ ಸೇರಿದ್ದಾಗಿದೆ. ನಂತರ ೧೯೯೮ರಲ್ಲಿ ನಡೆದ ಚುನಾವಣೆಯಲ್ಲಿ ೪೦ ಜನ ಆಯ್ಕೆಯಾಗಿದ್ದು, ಆ ನಂತರ ಪಕ್ಷ ರಾಜ್ಯದಲ್ಲಿ ನೆಲೆ ಕಂಡುಕೊಂಡಿತು. ೧೯೯೮ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ೧೮ ಜನ ಸಂಸದರು ಆಯ್ಕೆಯಾದರು. ಈ ಪೈಕಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಹ ಕ್ಷೇತ್ರ ಸಹ ಒಂದಾಗಿದೆ. ಅಂದಿನಿಂದ ನಿರಂತರವಾಗಿ ೫ ಬಾರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿ.ವೈ. ರಾಘವೇಂದ್ರರವರು ೩ನೇ ಬಾರಿಗೆ ಸಂಸದರಾಗಿ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.
    ಜಿಲ್ಲೆ ಹಾಗು ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕೊಡುಗೆ ಅಪಾರವಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ೭ ಸ್ಥಾನಗಳ ಪೈಕಿ ೬ ಸ್ಥಾನಗಳಲ್ಲಿ ಬಿಜೆಪಿ ಶಾಸಕರಿದ್ದು, ಮುಂದಿನ ದಿನಗಳಲ್ಲಿ ಭದ್ರಾವತಿ ಸಹ ಸೇರಿ ೭ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದ್ದಾರೆ. ಬಿಜೆಪಿ ಆರಂಭದಿಂದಲೂ ಜನ ಸಾಮಾನ್ಯರ ಪಕ್ಷವಾಗಿ ರೂಪುಗೊಂಡು ಸಮಾಜವಾದಿ ಚಿಂತೆನೆಗಳನ್ನು ಮೈಗೂಡಿಸಿಕೊಂಡು ಬಡವರ, ದಿನದಲಿತರ ಪರವಾಗಿ, ರೈತರ ಪರವಾಗಿ ಹೋರಾಟ ನಡೆಸುತ್ತಿದೆ. ಇವೆಲ್ಲವೂ ಕಾರ್ಯರೂಪಕ್ಕೆ ತಂದಿರುವ ಪರಿಣಾಮವಾಗಿ ಇಂದು ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯ ಪಕ್ಷವಾಗಿ ರೂಪುಗೊಂಡಿದೆ. ಈ ನಿಟ್ಟಿನಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವ ಉದ್ದೇಶದಿಂದ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಸಮಾವೇಶಗಳು, ಈ ಹಿಂದಿನ ಸಭೆಯಲ್ಲಿ ನಡೆದಿರುವ ಬದಲಾವಣೆಗಳು, ಕಂಡು ಕೊಂಡಿರುವ ಫಲಿತಾಂಶಗಳು, ಹೊಸತನಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
    ಸಭೆಯಲ್ಲಿ ಪ್ರಮುಖರಾದ ಪಕ್ಷದ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಕಾರ್ಯದರ್ಶಿ ಚನ್ನೇಶ್, ಮುಖಂಡರಾದ ವಿ. ಕದಿರೇಶ್, ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಅವಿನಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  


ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಟಿ ಮೇಘರಾಜ್‌ರವರನ್ನು ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಸನ್ಮಾನಿಸಿ ಅಭಿನಂದಿಸಿದರು.  


ಪೊಲೀಸ್ ಉಮೇಶ್‌ರವರ ೪೬ನೇ ವರ್ಷದ ಹುಟ್ಟುಹಬ್ಬ : ರಕ್ತದಾನ ಶಿಬಿರ

ಭದ್ರಾವತಿ ಹುತ್ತಾಕಾಲೋನಿ ನಿವಾಸಿ, ಸಮಾಜ ಸೇವಕ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್‌ರವರ ೪೬ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ ನೆರವೇರಿತು.
    ಭದ್ರಾವತಿ, ಡಿ. ೨೬: ನಗರದ ಹುತ್ತಾಕಾಲೋನಿ ನಿವಾಸಿ, ಸಮಾಜ ಸೇವಕ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್‌ರವರ ೪೬ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ರಕ್ತದಾನ ಶಿಬಿರ ನೆರವೇರಿತು.
    ಕಳೆದ ಕೆಲವು ವರ್ಷಗಳಿಂದ ಕ್ಷೇತ್ರದಲ್ಲಿ ಸಂಕಷ್ಟದಲ್ಲಿರುವ ಕಡು ಬಡವರಿಗಾಗಿ ಉಚಿತ ಆಂಬ್ಯುಲೆನ್ಸ್ ಸೇವೆ, ದೇವಸ್ಥಾನಗಳ ಧಾರ್ಮಿಕ ಕಾರ್ಯಗಳಿಗೆ ನೆರವು, ಕೊರೋನಾ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿದ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ಬಡವರಿಗೆ ಲಾಕ್‌ಡೌನ್ ಮುಕ್ತಾಯಗೊಳ್ಳುವವರೆಗೂ ಆಹಾರ ತಯಾರಿಸಿ ವಿತರಣೆ ಮಾಡುವ ಜೊತೆಗೆ ವಿವಿಧ ಸಂಘ-ಸಂಸ್ಥೆಗಳಿಗೆ ದವಸ ಧಾನ್ಯ ಸೇರಿದಂತೆ ದಿನಬಳಕೆ ವಸ್ತುಗಳ ವಿತರಣೆ ಸೇರಿದಂತೆ ವಿವಿಧ ರೀತಿಯ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಪೊಲೀಸ್ ಉಮೇಶ್‌ರವರು ತೊಡಗಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಉಮೇಶ್‌ರವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಅಚರಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಿದರು.
    ರಕ್ತದಾನ ಶಿಬಿರ, ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಕಾರ್ಯಕ್ರಮ ನೆರವೇರಿದವು. ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಹುಟ್ಟುಹಬ್ಬ ಶುಭಾಶಯ ಕೋರಿ ಉಮೇಶ್‌ರವರನ್ನು ಅಭಿನಂದಿಸಿದರು.
    ನಗರಸಭೆ ಹಿರಿಯ ಸದಸ್ಯರಾದ ಕೆ.ಎನ್ ಭೈರಪ್ಪಗೌಡ, ಮಹೇಶ್, ನ್ಯೂಟೌನ್ ಶ್ರೀ ಕರುಮಾರಿಯಮ್ಮ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕುಪ್ಪಸ್ವಾಮಿ, ಸತೀಶ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಅನಸೂಯ ನಿಧನ


ಅನಸೂಯ
    ಭದ್ರಾವತಿ, ಡಿ. ೨೬: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸುಬ್ರಮಣ್ಯರವರ ತಾಯಿ ಅನಸೂಯ(೭೦) ಶನಿವಾರ ನಿಧನ ಹೊಂದಿದರು.
    ಪತಿ ಸಿ.ಕೆ ಗೋಪಾಲಸ್ವಾಮಿ, ಪುತ್ರ ಸುಬ್ರಮಣಿ, ಸೊಸೆ ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ನೇತೃತ್ವದಲ್ಲಿ ಹಿರಿಯ ಪತ್ರಕರ್ತರಾದ ಕಣ್ಣಪ್ಪ, ಎನ್. ಬಾಬು, ಟಿ.ಎಸ್ ಆನಂದಕುಮಾರ್, ಸುದರ್ಶನ್, ಬದರಿನಾರಾಯಣ, ಸುಭಾಷ್‌ರಾವ್ ಸಿಂಧ್ಯಾ, ಶೈಲೇಶ್‌ಕೋಠಿ, ಬಸವರಾಜ್, ಅನಂತಕುಮಾರ್ ಸೇರಿದಂತೆ ಇನ್ನಿತರರು ಮೃತರ ಅಂತಿಮ ದರ್ಶನ ಪಡೆದು ನಂತರ ಪತ್ರಿಕಾಭವನದಲ್ಲಿ ನಡೆದ ಸಭೆಯಲ್ಲಿ ಮೌನಾಚರಣೆ ನಡೆಸಿ ಸಂತಾಪ ಸೂಚಿಸಲಾಯಿತು.

Friday, December 25, 2020

ಕೊರೋನಾ ನಡುವೆಯೂ ಸಂಭ್ರಮದ ವೈಕುಂಠ ಏಕಾದಶಿ


ಪುರಾಣ ಪ್ರಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಸಂಭ್ರಮಕ್ಕೆ ಮೊಟಕು



ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ನಡೆಯಿತು.
   ಭದ್ರಾವತಿ, ಡಿ. ೨೫: ಕೋವಿಡ್-೧೯ರ ನಡುವೆಯೂ ತಾಲೂಕಿನ ವಿವಿಧ ದೆವಾಲಯಗಳಲ್ಲಿ ಸಂಪ್ರದಾಯದಂತೆ ಶುಕ್ರವಾರ ವೈಕುಂಠ ಏಕಾದಶಿ ಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಲಾಯಿತು.
      ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ :  
    ಕ್ಷೇತ್ರದ ಪುರಾಣ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಸೇರಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಆಚರಿಸಲಾಯಿತು. ಬೆಳಗಿನ ಜಾವ ೪ ಗಂಟೆಗೆ ದೇವಾಲಯದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ, ಶ್ರೀ ಪರುಷೋತ್ತಮಸ್ವಾಮಿ, ಶ್ರೀ ವೇಣುಗೋಪಾಲಕೃಷ್ಣ ಸೇರಿದಂತೆ ಮೂಲ ವಿಗ್ರಹಗಳಿಗೆ ವಿಶೇಷಲಂಕಾರ ಕೈಗೊಳ್ಳುವ ಮೂಲಕ ವಿಶೇಷ ಪೂಜೆಯೊಂದಿಗೆ ಒಳಪ್ರಾಕಾರದಲ್ಲಿ ಚಂಡೆ, ಮಂಗಳವಾದ್ಯ ಸಹಿತ ಉತ್ಸವ ನಡೆಸಲಾಯಿತು. ೬ ಗಂಟೆಯಿಂದ ಭಕ್ತಾಧಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ತಹಸೀಲ್ದಾರ್ ಜಿ. ಸಂತೋಷ್ ಕುಮಾರ್, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಸೇರಿದಂತೆ ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದರು.  
     ಸಹಾಯಕ ಅರ್ಚಕ ಶ್ರೀನಿವಾಸ್, ನಾರಾಯಣಚಾರ್, ನರಸಿಂಹಚಾರ್, ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಉಪಾಧ್ಯಕ್ಷ ರಮಾಕಾಂತ್, ಇಂದ್ರಸೇನ, ಕೃಷ್ಣಪ್ಪ, ಸರೂ, ವೇದ ಪಾಠಶಾಲೆಯ ರವಿ, ಶ್ರೀನಿಧಿ, ಶ್ರೀಹರಿ, ಅಭಿರಾಮ ಸೇರಿದಂತೆ ಇನ್ನಿತರರನ್ನೊಳಗೊಂಡ ತಂಡ ಪೂಜಾಕೈಂಕರ್ಯಗಳನ್ನು ನೆರವೇರಿಸಿತು.


ಭದ್ರಾವತಿ ಅಪ್ಪರ್ ಹುತ್ತಾ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ತಿರುಮಲ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತೀವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಅದ್ದೂರಿಯಾಗಿ ಆಚರಿಸಲಾಯಿತು. ಮೂಲ ವಿಗ್ರಹಕ್ಕೆ ವಿಶೇಷ ಆಲಂಕಾರ ಕೈಗೊಳ್ಳಲಾಗಿತ್ತು.
        ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯ :
    ನಗರದ ಅಪ್ಪರ್ ಹುತ್ತಾ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ತಿರುಮಲ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತೀವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಅದ್ದೂರಿಯಾಗಿ ಆಚರಿಸಲಾಯಿತು. ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಭಕ್ತಾಧಿಗಳಿಗೆ ತೀರ್ಥಪ್ರಸಾದ, ಲಾಡು, ಬಾದಮಿ ಹಾಲು ವಿತರಣೆ ನಡೆಯಿತು. ಕೋವಿಡ್-೧೯ರ ನಡುವೆಯೂ ಹೆಚ್ಚಿನ ಭಕ್ತಾಧಿಗಳು ಪಾಲ್ಗೊಂಡಿದ್ದರು. ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಆದರೆ ಮಾಸ್ಕ್, ಸಾಮಾಜಿಕ ಅಂತರ ಕಂಡು ಬರಲಿಲ್ಲ.


ಭದ್ರಾವತಿ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪಡೆ ಪೊಲೀಸ್ ಮೈದಾನದಲ್ಲಿರುವ ಶ್ರೀನಿವಾಸಸ್ವಾಮಿ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಆಕರ್ಷಕ ಅಲಂಕಾರ ಕೈಗೊಳ್ಳಲಾಗಿತ್ತು.     
        ಮಿಲ್ಟ್ರಿಕ್ಯಾಂಪ್ ಶ್ರೀನಿವಾಸಸ್ವಾಮಿ ದೇವಾಲಯ :
    ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪಡೆ ಪೊಲೀಸ್ ಮೈದಾನದಲ್ಲಿರುವ ಶ್ರೀನಿವಾಸಸ್ವಾಮಿ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಆಕರ್ಷಕ ಅಲಂಕಾರ ಕೈಗೊಳ್ಳಲಾಗಿತ್ತು. ಭಕ್ತಾದಿಗಳಿಗೆ ತೀರ್ಥಪ್ರಸಾದ, ಲಾಡು ವಿತರಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದರು.


ಭದ್ರಾವತಿ ಹಳೇ ಭಂಡಾರಹಳ್ಳಿ ಗ್ರಾಮದ ಶ್ರೀ ಮೂಲ ರಂಗನಾಥ ಸ್ವಾಮಿ ದೇವಾಲಯದಲ್ಲಿ ಈ ಬಾರಿ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು. ಕಾಗದನಗರದ ಸಂತೋಷ್ ಶಾಮಿಯಾನ ವತಿಯಿಂದ ದೇವಸ್ಥಾನದ ಹೊರಭಾಗದಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಅಲಂಕಾರ ಭಕ್ತಾಧಿಗಳ ಗಮನ ಸೆಳೆಯಿತು.
           ಮೂಲ ರಂಗನಾಥಸ್ವಾಮಿ ದೇವಾಲಯ:
      ಹಳೇ ಭಂಡಾರಹಳ್ಳಿ ಗ್ರಾಮದ ಶ್ರೀ ಮೂಲ ರಂಗನಾಥ ಸ್ವಾಮಿ ದೇವಾಲಯದಲ್ಲಿ ಈ ಬಾರಿ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು. ಮೂಲ ವಿಗ್ರಹಕ್ಕೆ ವಿಶೇಷ ಪೂಜೆ ಅಲಂಕಾರ ಕೈಗೊಳ್ಳಲಾಗಿತ್ತು. ಅಲ್ಲದೆ ಕಾಗದನಗರದ ಸಂತೋಷ್ ಶಾಮಿಯಾನ ವತಿಯಿಂದ ದೇವಸ್ಥಾನದ ಹೊರಭಾಗದಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಅಲಂಕಾರ ಭಕ್ತಾಧಿಗಳ ಗಮನ ಸೆಳೆಯಿತು. ದೇವಸ್ಥಾನದ ಕಿಟ್ಟಣ್ಣ ಸ್ವಾಮೀಜಿ(ಕೃಷ್ಣಮೂರ್ತಿ)ಯವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ತೀರ್ಥಪ್ರಸಾದ, ಅನ್ನಸಂತರ್ಪಣೆ ನೆರವೇರಿತು.


ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿರುವ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿರುವ ತಿರುಮಲ ಸ್ವಾಮಿ ವಿಗ್ರಹಕ್ಕೆ ವೈಕುಂಠ ಏಕಾದಶಿ ಪ್ರಯುಕ್ತ ಈ ಬಾರಿ ವಿಶೇಷ ಆಲಂಕಾರ ಕೈಗೊಳ್ಳಲಾಗಿತ್ತು.
     ದೊಣಬಘಟ್ಟ ತಿರುಮಲ ಸ್ವಾಮಿ ವಿಗ್ರಹಕ್ಕೆ ವಿಶೇಷ ಅಲಂಕಾರ :
    ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿರುವ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿರುವ ತಿರುಮಲ ಸ್ವಾಮಿ ವಿಗ್ರಹಕ್ಕೆ ವೈಕುಂಠ ಏಕಾದಶಿ ಪ್ರಯುಕ್ತ ಈ ಬಾರಿ ವಿಶೇಷ ಆಲಂಕಾರ ಕೈಗೊಳ್ಳಲಾಗಿತ್ತು. ಇದು ಅತಿ ಪ್ರಾಚೀನ ವಿಗ್ರಹವಾಗಿದ್ದು, ಆದರೆ ದೇವಸ್ಥಾನ ನಿರ್ಮಾಣಗೊಂಡಿಲ್ಲ. ಇದೀಗ ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ದೇವಸ್ಥಾನ ನಿರ್ಮಾಣಕ್ಕೆ ಸಿದ್ದತೆ ನಡೆಸಲಾಗುತ್ತಿದೆ. ಆರ್ಚಕರಾದ ನಾಗರಾಜ್, ಆರ್. ರವಿ, ಐತಾಳ್, ಇಮ್ರಾನ್, ಜಯರಾಮ್, ನಿರಂಜನ್, ಅಹಮದ್ ಆಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ೩ನೇ ವರ್ಷದ ವೈಕುಂಠ ಏಕಾದಶಿ ಆಚರಿಸಲಾಯಿತು.
       ಬಾರಂದೂರು ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನ :
    ತಾಲೂಕಿನ ಬಾರಂದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ೩ನೇ ವರ್ಷದ ವೈಕುಂಠ ಏಕಾದಶಿ ಆಚರಿಸಲಾಯಿತು. ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ, ಶ್ರೀ ಸ್ವಾಮಿಯ ವೈಕುಂಠ ದರ್ಶನ ಭಕ್ತರ ಗಮನ ಸೆಳೆಯಿತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನೆರವೇರಿತು. ವಂದೇ ಮಾತರಂ ಟ್ರಸ್ಟ್, ದೇವಸ್ಥಾನ ಸೇವಾ ಸಮಿತಿ ಹಾಗು ಅಯ್ಯಪ್ಪ ಭಕ್ತ ವೃಂದ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಬಾರಂದೂರು ಹಾಗು ಸುತ್ತಮುತ್ತಲ ಗ್ರಾಮಗಳ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.

ಕೃಷಿ ಸನ್ಮಾನ್ ಯೋಜನೆ ರೈತರ ಶ್ರಮಕ್ಕೆ ಸಲ್ಲುವ ಗೌರವ : ಸಂಸದ ಬಿ.ವೈ ರಾಘವೇಂದ್ರ

ಮಾಜಿ ಪ್ರಧಾನಿ, ಭಾರತರತ್ನ ಅಟಲ್‌ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮ

ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
     ಭದ್ರಾವತಿ, ಡಿ. ೨೫: ಕೃಷಿ ಸನ್ಮಾನ್ ಯೋಜನೆ ರೈತರಿಗೆ ಲಂಚ ಕೊಡುವ ಯೋಜನೆಯಲ್ಲ ಬದಲಾಗಿ ರೈತರ ಶ್ರಮ ಗೌರವಿಸುವುದಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಶುಕ್ರವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಸಹ ರೈತರ ಶ್ರಮವಿಲ್ಲದೆ ನಾವುಗಳು ಬದಕಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ನಾವುಗಳು ರೈತರನ್ನು ಪ್ರತಿ ಕ್ಷಣ ನೆನಪು ಮಾಡಿಕೊಳ್ಳಬೇಕಾಗಿದೆ. ರೈತರು ಪ್ರಕೃತಿ ವಿಕೋಪ, ಬೆಲೆ ಕುಸಿತ ಸೇರಿದಂತೆ ಒಂದಲ್ಲ ಒಂದು ಕಾರಣಕ್ಕೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ನಡುವೆಯೂ ಕೃಷಿ ನಂಬಿ ಬದುಕುತ್ತಿರುವ ರೈತರ ಬದುಕು ಅಭಿನಂದನಾರ್ಹವಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.
    ಪ್ರಸ್ತುತ ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಸಹ ಎಲ್ಲರೂ ಜೀವನ ಪರ್ಯಂತ ನೆನಪು ಮಾಡಿಕೊಳ್ಳುವಂತಹ ಯೋಜನೆಗಳಾಗಿವೆ ಎಂಬುದನ್ನು ಯಾರು ಸಹ ಮರೆಯಬಾರದು. ೨೦೧೮ರಲ್ಲಿ ಕೃಷಿ ಸನ್ಮಾನ್ ಯೋಜನೆ ಜಾರಿಗೆ ತಂದ ಆರಂಭದಲ್ಲಿ ಜಿಲ್ಲೆಯಲ್ಲಿ ೧೩,೫೦೦ ಮಂದಿ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದರು. ಪ್ರಸ್ತುತ ಈ ಯೋಜನೆಯಡಿ ಜಿಲ್ಲೆಯಲ್ಲಿ ೧,೫೦,೫೦೭ ಮಂದಿ ರೈತರು ಫಲಾನುಭವಿಗಳಾಗಿದ್ದು, ಜಿಲ್ಲೆಗೆ ೩೦.೫೦ ಕೋ. ರು. ಹಣ ಬಿಡುಗಡೆಯಾಗಿ ತಲಾ ೨,೦೦೦ ರು. ಇಂದು ರೈತರ ಖಾತೆಗಳಿಗೆ ನೇರವಾಗಿ ಜಮಾ ಆಗಿದೆ. ಇದೆ ರೀತಿ ಭದ್ರಾವತಿ ತಾಲೂಕಿನಲ್ಲಿ ೨೨,೮೬೩ ರೈತರು ಫಲಾನುಭವಿಗಳಾಗಿದ್ದು, ಒಟ್ಟು ೪.೭೦ ಕೋ. ರು. ಬಿಡುಗಡೆಯಾಗಿ ರೈತರ ಖಾತೆಗೆ ಹಣ ಜಮಾ ಆಗಿದೆ ಎಂದರು.
    ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿ, ಬಿಜೆಪಿ ಪಕ್ಷ ಸಾಮಾನ್ಯರ ಪಕ್ಷವಾಗಿದೆ. ಇದು ಹಣ, ಜಾತಿ ಆಧಾರದ ಮೇಲೆ ಸಂಘಟಿತಗೊಂಡಿಲ್ಲ ಬದಲಾಗಿ ಪಕ್ಷದ ಹಿರಿಯರ ವೈಚಾರಿಕ ಚಿಂತನೆಗಳು, ಆದರ್ಶ ಗುಣಗಳು, ಭವಿಷ್ಯದ ಆಲೋಚನೆಗಳು ಹಾಗು ಕಾರ್ಯಕರ್ತರ ಶ್ರಮದಿಂದ ಬೆಳೆದು ಬಂದಿದೆ. ಈ ಹಿನ್ನಲೆಯಲ್ಲಿ ಮುಂದಿನ ಎಲ್ಲಾ ಅವಧಿಗೂ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮುಂದುವರೆಯಲಿದ್ದಾರೆಂಬ ವಿಶ್ವಾಸವಿದೆ ಎಂದರು.
    ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಪಕ್ಷದ ತತ್ವ, ಸಿದ್ದಾಂತಗಳು ಮುಖ್ಯ. ಯಾವುದೇ ಅಧಿಕಾರದ ಆಸೆಗಾಗಿ ದುಡಿಯದೆ ಪಕ್ಷ ಸಂಘಟನೆಗಾಗಿ ದುಡಿಯಬೇಕು. ಅಟಲ್ ಬಿಹಾರಿ ವಾಜಪೇಯಿಯವರ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಪಕ್ಷದ ಸಿದ್ದಾಂತ ಹಾಗು ಕಾರ್ಯಕರ್ತರ ಶ್ರಮದಿಂದಾಗಿ ಸಾಮಾನ್ಯ ಕಾರ್ಯಕರ್ತನಾಗಿದ್ದ ನಾನು ಇಂದು ಸಚಿವನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಭದ್ರಾವತಿ ವಿಧಾನಸಭಾ ಕ್ಷೇತ್ರದ ಚಿತ್ರಣ ಸಹ ಬದಲಾಗಲಿದೆ. ಕಾರ್ಯಕರ್ತರು ಇನ್ನೂ ಹೆಚ್ಚಿನ ಉತ್ಸಾಹದಿಂದ ಮುನ್ನಡೆಯಬೇಕೆಂದು ಕರೆ ನೀಡಿದರು.  
    ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಪ್ರಮುಖರಾದ ಎಂ.ಬಿ ಭಾನುಪ್ರಕಾಶ್, ಆರ್.ಕೆ ಸಿದ್ದರಾಮಯ್ಯ, ಗಿರೀಶ್‌ಪಟೇಲ್, ಡಿ.ಎಸ್ ಅರುಣ್, ಸುವರ್ಣಶಂಕರ್, ಪವಿತ್ರ ರಾಮಯ್ಯ, ಚನ್ನಬಸಪ್ಪ, ಜ್ಞಾನೇಶ್ವರ್, ಎಸ್.ಎಸ್ ಜ್ಯೋತಿಪ್ರಕಾಶ್, ಗುರುಮೂರ್ತಿ, ಎಸ್. ದತ್ತಾತ್ರಿ, ಮಂಗೋಟೆ ರುದ್ರೇಶ್, ಜಿ. ಧರ್ಮಪ್ರಸಾದ್, ಬಿ.ಕೆ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕು ಬಿಜೆಪಿ ಅಧ್ಯಕ್ಷ ಎಂ. ಪ್ರಭಾಕರ್ ಸ್ವಾಗತಿಸಿದರು.


ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಇನ್ನಿತರ ಗಣ್ಯರು ಸಾಮಾನ್ಯರಂತೆ ಕಾರ್ಯಕರ್ತರ ನಡುವೆ ಕುಳಿತು ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ರೈತ ಸಂವಾದ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಿದರು.