Saturday, January 2, 2021

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಅದ್ದೂರಿ ಸ್ವಾಗತ

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಭದ್ರಾವತಿ ನಗರಕ್ಕೆ ಆಗಮಿಸಿದ ಮಾಜಿ ಸಚಿವ ಸಿ.ಟಿ ರವಿಯವರನ್ನು ಶನಿವಾರ ಸಂಜೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
    ಭದ್ರಾವತಿ, ಜ. ೨: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಮಾಜಿ ಸಚಿವ ಸಿ.ಟಿ ರವಿಯವರನ್ನು ಶನಿವಾರ ಸಂಜೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
     ಶಿವಮೊಗ್ಗದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸಿ.ಟಿ ರವಿಯವರನ್ನು ತಾಲೂಕಿನ ಗಡಿ ಭಾಗದ ಬಾರಂದೂರು ಗ್ರಾಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸುವ ಜೊತೆಗೆ ನಗರದ ಹುತ್ತಾ ಕಾಲೋನಿವರೆಗೂ ಬೈಕ್ ರ‍್ಯಾಲಿ ನಡೆಸಿದರು. ಸಿ.ಟಿ ರವಿ ಕೆಲ ಸಮಯ ಮುಖಂಡರು, ಕಾರ್ಯಕರ್ತರೊಂದಿಗೆ ಸಂಭ್ರಮ ಹಂಚಿಕೊಂಡು ನಂತರ ಶಿವಮೊಗ್ಗಕ್ಕೆ ತೆರಳಿದರು.

ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈ ರನ್‌ಗೆ ಚಾಲನೆ

ಈಗಾಗಲೇ ಕೈಗೊಳ್ಳಲಾಗಿರುವ ಕೊರೋನಾ ಲಸಿಕಾ ಪೂರ್ವ ಸಿದ್ದತೆ ಪರಿಶೀಲನೆ(ಡ್ರೈ ರನ್)ಗೆ ಶನಿವಾರ ಭದ್ರಾವತಿ ತಾಲೂಕಿನ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಲಾಗಿದ್ದು, ಡ್ರೈ ರನ್‌ನಲ್ಲಿ ಪಾಲ್ಗೊಂಡಿರುವ ತಂಡ.
ಭದ್ರಾವತಿ, ಜ. ೨:  ಈಗಾಗಲೇ ಕೈಗೊಳ್ಳಲಾಗಿರುವ ಕೊರೋನಾ ಲಸಿಕಾ ಪೂರ್ವ ಸಿದ್ದತೆ ಪರಿಶೀಲನೆ(ಡ್ರೈ ರನ್)ಗೆ ಶನಿವಾರ ತಾಲೂಕಿನ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಲಾಯಿತು.
    ಕೊರೋನಾ ಲಸಿಕೆ ಲಭ್ಯವಾದ ನಂತರ ಲಸಿಕೆ ಹಾಕುವ ವಿಧಾನಗಳು, ಅನುಸರಿಸಬೇಕಾದ ಕ್ರಮಗಳು ಇತ್ಯಾದಿಗಳನ್ನು ವೈದ್ಯರು ಹಾಗೂ ಸಹಾಯಕರು ಮತ್ತು ಸುಮಾರು ೨೫ ಮಂದಿ ಆರೋಗ್ಯ ಇಲಾಖೆ ಕಾರ್ಯಕರ್ತರು ಸೇರಿದಂತೆ ೫೦ ಮಂದಿ ಕೇಂದ್ರದಲ್ಲಿ ಪೂರ್ವ ಸಿದ್ದತೆಗಳ ಪರಿಶೀಲನೆಯಲ್ಲಿ ಭಾಗಿಯಾಗಿದ್ದರು.
    ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಾಗರಾಜ್‌ನಾಯ್ಕ ತಂಡದ ನೇತೃತ್ವ ವಹಿಸಿದ್ದು, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಎಚ್.ಎಸ್ ಗಿರೀಶ್, ಡಾ. ಭರತ್, ಡಾ. ದಿನೇಶ್, ಇವಿಐಎನ್ ವ್ಯವಸ್ಥಾಪಕ ಸುದರ್ಶನ್, ಜಿಲ್ಲಾ ಕ್ಷಯ ರೋಗ ನಿಯಂತ್ರಣ ವಿಭಾಗದ ಮೇಲ್ವಿಚಾರಕ ಗಜೇಂದ್ರ ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದಕ್ಷ, ಪ್ರಾಮಾಣಿಕ ನಗರಸಭೆ ಪೌರಾಯುಕ್ತ ಮನೋಹರ್‌ಗೆ ‘ಜನಸ್ಪಂದಕ ಅಧಿಕಾರಿ’ ಬಿರುದು

ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಪ್ರಶಂಸೆ

ಭದ್ರಾವತಿ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನ್ಯೂಟೌನ್ ನಗರಸಭೆ ಶಾಖಾ ಕಛೇರಿ ಅವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ  'ಜನಸ್ಪಂದಕ ಅಧಿಕಾರಿ' ಬಿರುದು ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜ. ೨: ನಗರದ ಸರ್ವತೋರ್ಮುಖ ಬೆಳವಣಿಗೆಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್‌ರವರ ಸೇವೆ ಅಪಾರವಾಗಿದ್ದು, ಅವರ ಸೇವೆ ಮುಂದಿನ ದಿನಗಳಲ್ಲೂ ಇದೆ ರೀತಿ ಮುಂದುವರೆಯುವಂತಾಗಲಿ ಎಂದು ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಛೇರ‍್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಆಶಯ ವ್ಯಕ್ತಪಡಿಸಿದರು.
     ಕಳೆದ ಸುಮಾರು ೨ ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದ ನಗರಸಭೆ ಆಡಳಿತವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ಜೊತೆಗೆ ಜನ ಮೆಚ್ಚುಗೆಗೆ ಪಾತ್ರರಾಗಿರುವ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನ್ಯೂಟೌನ್ ನಗರಸಭೆ ಶಾಖಾ ಕಛೇರಿ ಅವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ  'ಜನಸ್ಪಂದಕ ಅಧಿಕಾರಿ' ಬಿರುದು ಪ್ರಧಾನ ಹಾಗು ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
     ಮನೋಹರ್‌ರವರು ನಗರಸಭೆ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ನಗರದ ಸರ್ವತೋಮುಖ ಬೆಳವಣಿಗೆಯಾಗುತ್ತಿದ್ದು, ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೦ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸುವ ಜೊತೆಗೆ ತಾಲೂಕು ಆಡಳಿತದ ಸಹಕಾರದಿಂದ ಬೌಂಡರಿ ನಿಗದಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ, ಪ್ಲಾಸ್ಟಿಕ್ ನಿರ್ಮೂಲನೆ, ರಸ್ತೆ, ಚರಂಡಿ ನಿರ್ಮಾಣ, ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿ ಕಲ್ಪಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
     ಅದರಲ್ಲೂ ನ್ಯೂಟೌನ್ ಭಾಗದ ಜನ್ನಾಪುರ ವ್ಯಾಪ್ತಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಪ್ರಮುಖವಾಗಿ ಮುಂದಿನ ೫೦ ವರ್ಷಗಳಿಗೆ ಅನುಗುಣವಾಗಿ ಸಮರ್ಪಕ ಕುಡಿಯುವ ನೀರಿನ ಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು. ನ್ಯೂಟೌನ್ ಶಾಖಾ ಕಛೇರಿ ಆವರಣದಲ್ಲಿ ಆಧಾರ್ ಕೌಂಟರ್ ತೆರೆಯಲು ಅವಕಾಶ ನೀಡಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದು. ಕೆಇಬಿ ಕೌಂಟರ್ ಮತ್ತು ನೆಮ್ಮದಿಕೇಂದ್ರಕ್ಕೆ ಬರುವ ಸಾರ್ವಜನಿಕರಿಗೆ ಬಿಸಿಲು, ಮಳೆ, ಗಾಳಿಯಿಂದ ತೊಂದರೆಯಾಗದಂತೆ ಶೆಲ್ಟರ್ ನಿರ್ಮಿಸಿಕೊಟ್ಟಿರುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ದಕ್ಷ, ಪ್ರಾಮಾಣಿಕ, ಸರಳ ಸಜ್ಜನಿಕೆ ಅಧಿಕಾರಿಯಾಗಿ ಮನೋಹರ್ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
    ಕಾರ್ಯಕ್ರಮದಲ್ಲಿ ಅರ್. ವೇಣುಗೋಪಾಲ್‌ರವರ ೬೩ನೇ ವರ್ಷದ ಜನ್ಮದಿನದ ಅಂಗವಾಗಿ ಅವರನ್ನು ಟ್ರಸ್ಟ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ರಮಾವೆಂಕಟೇಶ್, ಶೈಲಜಾ ರಾಮಕೃಷ್ಣ, ದೇವಿಕಾ ನಾಗರಾಜ್, ಶ್ಯಾಮಲಾ ರಾಜು, ಗ್ಸೇವಿಯರ್, ಸುಬ್ರಮಣ್ಯ, ಗೀತಾರವಿ, ವಿಜಯಲಕ್ಷ್ಮಿ, ಸುಧಾ, ಮುರುಗನ್, ವಿಶ್ವೇಶ್ವರರಾವ್ ಗಾಯಕ್ವಾಡ್, ಕೋಟೆಗೌಡ, ಗಿರಿನಾಯ್ಡು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಜ.೩ರಂದು ಸಮಾಜವಾದದ ಚಿಂತನೆಗಳು ವಿಚಾರ ಸಂಕೀರ್ಣ

ಭದ್ರಾವತಿ, ಜ. ೨: ಜೆ.ಎಚ್ ಪಟೇಲ್‌ರವರ ಅಭಿಮಾನಿಗಳ ಬಳಗದ ವತಿಯಿಂದ ಜ.೩ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಬಿ.ಎಚ್ ರಸ್ತೆ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಜೆ.ಎಚ್ ಪಟೇಲ್‌ರವರ ನೆನಪಿನಲ್ಲಿ ಸಮಾಜವಾದದ ಚಿಂತನೆಗಳು ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ.
     ಬಿಳಿಕಿ ಹಿರೇಮಠದ ಶ್ರೀ ರಾಜೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು, ಜೆ.ಎಚ್ ಪಟೇಲ್‌ರವರ ಪುತ್ರ ಮಾಜಿ ಶಾಸಕ ಮಹಿಮ ಜೆ. ಪಟೇಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಆಯೋಜಕ ಶಶಿಕುಮಾರ್ ಎಸ್. ಗೌಡ ಮತ್ತು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಉಪಸ್ಥಿತರಿರುವರು.
       ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ಪೌರಾಯುಕ್ತ ಮನೋಹರ್, ಮಂಗೋಟೆ ರುದ್ರೇಶ್, ಸ್ನೇಹ ಜೀವಿ ಉಮೇಶ್, ಧನಂಜಯ, ಡಾ.ಕೆ ನಾಗರಾಜ್, ದೀಪಕ್ ನರಾಜ್, ಬಿ.ಆರ್ ದಿನೇಶ್‌ಕುಮಾರ್, ಲಕ್ಕಣ್ಣ, ಎಚ್.ಆರ್ ಲೋಕೇಶ್‌ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

Friday, January 1, 2021

ಕೊರೋನಾ ಸಂಕಷ್ಟದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ : ಶಾಸಕ ಬಿ.ಕೆ ಸಂಗಮೇಶ್ವರ್

ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ವರ್ಷಾಚರಣೆ, ಅಭಿನಂದನೆ ಕಾರ್ಯಕ್ರಮ

ಭದ್ರಾವತಿ ನಗರಸಭೆ ಕಛೇರಿ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ವರ್ಷಾಚರಣೆ ಹಾಗು ಅಭಿನಂದನೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವಂತೆ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಜ. ೧: ಕೊರೋನಾ ಸಂಕಷ್ಟದ ಸಮಯದಲ್ಲೂ ಪೌರ ಕಾರ್ಮಿಕರು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಜೊತೆಗೆ ನಗರದ ಸ್ವಚ್ಚತೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಪೌರಕಾರ್ಮಿಕರೂ ಸಹ ತಮ್ಮ ಆರೋಗ್ಯದ ಕಡೆ  ಹೆಚ್ಚಿನ ಗಮನ ಹರಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
      ಅವರು ಶುಕ್ರವಾರ ನಗರಸಭೆ ಕಛೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ವರ್ಷಾಚರಣೆ ಹಾಗು ಅಭಿನಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
     ಪ್ರತಿಯೊಬ್ಬರು ಆರೋಗ್ಯವಂತರಾಗಿ ಬದುಕಬೇಕು. ಆಗ ಮಾತ್ರ ನಮ್ಮ ಬದುಕಿನಲ್ಲಿ ಏನಾದರೂ ಸಾಧಿಸಲು ಸಾಧ್ಯ. ಈ ಹಿನ್ನಲೆಯಲ್ಲಿ ಪೌರಕಾರ್ಮಿಕರು ಆರೋಗ್ಯಕ್ಕೆ ಹೆಚ್ಚಿನ ಗಮನ ಹರಿಸಬೇಕೆಂದರು.
     ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ ಕೊಡಲು ಸಿದ್ದನಾಗಿದ್ದು, ಅಲ್ಲದೆ ಈಗಾಗಲೇ ಪೌರಕಾರ್ಮಿಕರಿಗೆ ನಗರಸಭೆ ಪೌರಾಯುಕ್ತರ ಸಹಕಾರದೊಂದಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಇವುಗಳ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
    ಶಾಸಕರನ್ನು ಅಭಿನಂದಿಸಿದ ಪೌರಕಾರ್ಮಿಕರು, ಕೆಜಿಐಡಿ, ಜಿಪಿಎಫ್ ಮತ್ತು ಜಿಐಎಸ್ ಸೌಲಭ್ಯ ಕಲ್ಪಿಸಿಕೊಡುವ ಜೊತೆಗೆ ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು,  ಪ್ರಸ್ತುತ ಜಾಲ್ತಿಯಲ್ಲಿರುವ ಎನ್‌ಪಿಎಸ್ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೇಯ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಹಾಗೂ ಕೋವಿಡ್-೧೯ ರಿಂದ ಮೃತಪಟ್ಟ ಪೌರ ಕಾರ್ಮಿಕರಿಗೆ ರು. ೩೦ ಲಕ್ಷ ಪರಿಹಾರ ವಿಮೆ ಜಾರಿಗೊಳಿಸುವಂತೆ ಮತ್ತು ಪೌರ ಕಾರ್ಮಿಕರು ತಮ್ಮ ಸೇವಾ ಅವಧಿಯಲ್ಲಿ ಮೃತಪಟ್ಟಲ್ಲಿ ಅವರ ಶವ ಸಂಸ್ಕಾರಕ್ಕೆ ರು. ೧೫ ಸಾವಿರ ರು. ಭತ್ಯೆ ನೀಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಮನವಿ ಸಲ್ಲಿಸಲಾಯಿತು.
    ಸಂಘದ ಅಧ್ಯಕ್ಷ ಎನ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಪೌರಾಯುಕ್ತ ಮನೋಹರ್, ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಎಸ್ ಹೇಮಂತ್‌ಕುಮಾರ್, ಕಾರ್ಯಾಧ್ಯಕ್ಷ ಎಚ್.ಬಿ ಮಹೇಶ್, ಉಪಾಧ್ಯಕ್ಷ ಅಬ್ಬಯ್ಯ, ಕಂದಾಯಾಧಿಕಾರಿ ರಾಜ್‌ಕುಮಾರ್, ಇಂಜಿನಿಯರ್ ರಂಗನಾಥಪುರೆ, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ, ವ್ಯವಸ್ಥಾಪಕಿ ಎಂ. ಸುನೀತಕುಮಾರಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್, ವಾಲಿಮಹೇಶ, ಆರ್.ಬಿ ಸತೀಶ್ ಸೇರಿದಂತೆ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಮುದಾಯ ಸಂಘಟನಾ ಅಧಿಕಾರಿ ಈಶ್ವರಪ್ಪ ಸ್ವಾಗತಿಸಿದರು.


ಭದ್ರಾವತಿ ನಗರಸಭೆ ಕಛೇರಿ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ವರ್ಷಾಚರಣೆ ಹಾಗು ಅಭಿನಂದನೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರನ್ನು ಅಭಿನಂದಿಸಲಾಯಿತು.



ನೂತನ ವರ್ಷದ ಸಂಭ್ರಮಾಚರಣೆ : ಯುವಕ ಕಾಲು ಜಾರಿ ಕಾಲುವೆಗೆ ಬಿದ್ದು ಮೃತ

ಭದ್ರಾವತಿ, ಜ. ೧: ನೂತನ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಯುವಕನೋರ್ವ ಕಾಲು ಜಾರಿ ಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ರಾತ್ರಿ ನಡೆದಿದೆ.
   ಹೊಸಮನೆ ಹನುಮಂತನಗರದ ನಿವಾಸಿ ಉಮೇಶ್(೨೪) ಮೃತಪಟ್ಟಿದ್ದು, ಈತ ಸ್ನೇಹಿತರೊಂದಿಗೆ ವರ್ಷಾಚರಣೆ ಸಂಭ್ರಮಕ್ಕೆ ಗ್ರಾಮಾಂತರ ವ್ಯಾಪ್ತಿಯಲ್ಲಿ ಭದ್ರಾ ಕಾಲುವೆ ಬಳಿ ಸಂಭ್ರಮಾಚರಣೆಗೆ ತೆರಳಿದ್ದಾನೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಗ್ರಾಮ ಪಂಚಾಯಿತಿ ಅಧಿಕಾರ ಹಿಡಿಯಲು ಪ್ರಮುಖ ರಾಜಕೀಯ ಪಕ್ಷಗಳಿಂದ ತೆರೆಮರೆಯಲ್ಲಿ ಕಸರತ್ತು

ಭದ್ರಾವತಿ, ಜ. ೧: ಕಳೆದ ೨ ದಿನಗಳ ಹಿಂದೆ ತಾಲೂಕಿನ ಗ್ರಾಮ ಪಂಚಾಯಿತಿ ಚುನಾವಣೆ ಮುಕ್ತಾಯಗೊಂಡು ಫಲಿತಾಂಶ ಸಹ ಹೊರಬಿದ್ದಿದೆ. ಇದೀಗ ರಾಜಕೀಯ ಪಕ್ಷಗಳಲ್ಲಿ ಅಧಿಕಾರ ಹಿಡಿಯಲು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಈ ಪೈಕಿ ಎಲ್ಲಾ ಪಕ್ಷಗಳು ಗೆಲುವು ಸಾಧಿಸಿರುವ ಬೆಂಬಲಿಗರ ಸಂಪೂರ್ಣ ಮಾಹಿತಿ ಬಹಿರಂಗಗೊಳಿಸಲು ಹಿಂದೇಟು ಹಾಕುತ್ತಿವೆ.
     ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಮಾಧ್ಯಮ ಪ್ರಕಟಣೆ ನೀಡಿದ್ದು, ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಹಿನ್ನಲೆಯಲ್ಲಿ ೧೫ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಹಿಡಿಯಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
      ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಒಟ್ಟು ೨೦ ಗ್ರಾಮ ಪಂಚಾಯಿತಿಗಳ ಪೈಕಿ ಸಿಂಗನಮನೆ, ಕಂಬದಾಳು ಹೊಸೂರು, ತಾವರಘಟ್ಟ, ಕಲ್ಲಹಳ್ಳಿ, ದೊಣಬಘಟ್ಟ, ತಡಸ, ದೊಡ್ಡೇರಿ, ಅಂತರಗಂಗೆ, ಯರೇಹಳ್ಳಿ, ಮಾವಿನಕೆರೆ, ಕೂಡ್ಲಿಗೆರೆ, ಅತ್ತಿಗುಂದ, ಅರಳಿಹಳ್ಳಿ, ನಾಗತಿಬೆಳಗಲು ಹಾಗು ಕಾಗೇಕೋಡಮಗ್ಗೆ ಸೇರಿದಂತೆ ಒಟ್ಟು ೧೫ ಗ್ರಾಮ ಪಂಚಾಯಿತಿಗಳಲ್ಲಿ ಶೇ.೯೦ರಷ್ಟು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಈ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲಿದ್ದು, ಗೆಲುವು ಸಾಧಿಸಿರುವ ಬೆಂಬಲಿಗರನ್ನು ಅಭಿನಂದಿಸುವ ಜೊತೆಗೆ ಮತದಾನ ಮಾಡಿದ ಕ್ಷೇತ್ರದ ಎಲ್ಲಾ ಮತದಾರರಿಗೂ, ಬೆಂಬಲಿಗರ ಗೆಲುವಿಗೆ ಸಹಕರಿಸಿದ ಕಾರ್ಯಕರ್ತರಿಗೆ, ಚುನಾಯಿತ ಪ್ರತಿನಿಧಿಗಳಿಗೆ, ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
     ಇದೆ ರೀತಿ ಭಾರತೀಯ ಜನತಾ ಪಕ್ಷ ಸಹ ಮಾಧ್ಯಮ ಪ್ರಕಟಣೆ ನೀಡಿದ್ದು, ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ೧೮೩ ಸ್ಥಾನಗಳಲ್ಲಿ ಪಕ್ಷದ ಬೆಂಬಲಿಗರನ್ನು ಕಣಕ್ಕಿಳಿಸಿದ್ದು, ಈ ಪೈಕಿ ೭೪ ಸ್ಥಾನಗಳಲ್ಲಿ ಗೆಲುವು ಸಾಧಿಸಲಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷದ ಬೆಂಬಲಿಗರನ್ನು ಅಭಿನಂದಿಸುವ ಜೊತೆಗೆ ಮತದಾನ ಮಾಡಿದ ಕ್ಷೇತ್ರದ ಎಲ್ಲಾ ಮತದಾರರಿಗೂ, ಬೆಂಬಲಿಗರ ಗೆಲುವಿಗೆ ಸಹಕರಿಸಿದ ಕಾರ್ಯಕರ್ತರಿಗೆ, ಚುನಾಯಿತ ಪ್ರತಿನಿಧಿಗಳಿಗೆ, ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಮಾಧ್ಯi ಪ್ರಮುಖ್ ಬಿ.ಎಸ್ ಶ್ರೀನಾಥ್ ತಿಳಿಸಿದ್ದಾರೆ.
      ಈ ನಡುವೆ ಜಾತ್ಯತೀತ ಜನತಾದಳ ಮಾತ್ರ ಯಾವುದೇ ಪ್ರಕಟಣೆ ನೀಡಿಲ್ಲ. ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಪುತ್ರ ಎಂ.ಎ ಅಜಿತ್ ಚುನಾವಣೆ ಫಲಿತಾಂಶ ಕುರಿತು ಪತ್ರಿಕೆಗೆ ಮಾಹಿತಿ ನೀಡಿ ನಮ್ಮ ಪಕ್ಷದ ಬೆಂಬಲಿಗರ ಕುರಿತು ಕೆಲವರಲ್ಲಿ ಗೊಂದಲವಿದೆ. ಈ ಹಿನ್ನಲೆಯಲ್ಲಿ ಗೊಂದಲ ಬಗೆಹರಿಸಲು ಗೆಲುವು ಸಾಧಿಸಿರುವ ಎಲ್ಲಾ ಬೆಂಬಲಿಗ ಸದಸ್ಯರನ್ನು ಒಂದೆಡೆ ಸೇರಿಸಿ ಪತ್ರಿಕಾಗೋಷ್ಠಿ ನಡೆಸುವುದಾಗಿ ತಿಳಿಸಿದ್ದಾರೆ.