Tuesday, January 19, 2021

ತೆರಿಗೆದಾರರ ಸಂಘದ ಅಧ್ಯಕ್ಷರಾಗಿ ಕೆ.ಎಂ ಸತೀಶ್ ಮರು ಆಯ್ಕೆ

ಕೆ.ಎಂ ಸತೀಶ್
ಭದ್ರಾವತಿ, ಜ. ೧೯: ಜನ್ನಾಪುರ-ಹುತ್ತಾ ತೆರಿಗೆದಾರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಕೆ.ಎಂ ಸತೀಶ್ ಪುನಃ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.
    ಉಪಾಧ್ಯಕ್ಷರಾಗಿ ಬಿ. ಯಲ್ಲಪ್ಪ, ಕಾರ್ಯದರ್ಶಿಯಾಗಿ ಬಿ. ಚಂದ್ರಶೇಖರಯ್ಯ, ಸಹಕಾರ್ಯದರ್ಶಿಯಾಗಿ ಬಿ.ಎ ಚಂದ್ರಪ್ಪ, ಖಜಾಂಚಿಯಾಗಿ ಭದ್ರಯ್ಯ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಬಿ.ಪಿ.ಎನ್ ಚಂದ್ರಶೇಖರ್, ದೇವೇಂದ್ರಪ್ಪ, ಎ.ಬಿ ಭೀಮೋಜಿರಾವ್, ಜಿ.ಬಿ ಚಂದ್ರಶೇಖರ್, ಪಿ. ಶಿವನ್, ಚಾಂದು, ಎನ್. ಕೃಷ್ಣಪ್ಪ ಮತ್ತು ರುದ್ರೇಶ್ ಆಯ್ಕೆಯಾಗಿದ್ದಾರೆ.  
    ಎಂಪಿಎಂ ನಿವೃತ್ತ ಅಧಿಕಾರಿ ಹಾಗು ಹಿರಿಯ ನ್ಯಾಯಾವಾದಿಯಾಗಿರುವ ಕೆ.ಎಂ ಸತೀಶ್ ಕಳೆದ ಸುಮಾರು ೨೫ ವರ್ಷಗಳಿಂದ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಮುನ್ನಡೆಸಿಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದಾರೆ.

ನಗರ ಸಾರಿಗೆಗೆ ಹೆಚ್ಚಿನ ಬಸ್, ಸಿಗ್ನಲ್ ಲೈಟ್ ಅಳವಡಿಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಗೆ ಆಗ್ರಹ

ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ



ಭದ್ರಾವತಿ, ಜ. ೧೯: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
    ಲಕ್ಷಾಂತರ ಜನಸಂಖ್ಯೆ ಹೊಂದಿರುವ ನಗರದಲ್ಲಿ ವಿವಿಧ ವಾರ್ಡ್‌ಗಳ ನಡುವೆ ಸಂಚರಿಸಲು ನಗರ ಸಾರಿಗೆ ಕೊರತೆ ಕಂಡು ಬರುತ್ತಿದ್ದು, ಕೇವಲ ೨ ಬಸ್ಸುಗಳು ಮಾತ್ರ ಸಂಚರಿಸುತ್ತಿವೆ. ಇದರಿಂದಾಗಿ ಪ್ರಯಾಣಿಕರು ಗಂಟೆಗಟ್ಟಲೆ ಕಾಯುವಂತಾಗಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ಸಮರ್ಪಕ ಹಾಗು ತುರ್ತು ಸಾರಿಗೆ ವ್ಯವಸ್ಥೆ ಅಗತ್ಯವಿದೆ. ಅಲ್ಲದೆ ರೈಲಿನ ಮೂಲಕ ನಗರಕ್ಕೆ ಬರುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲುಗಳು ಬರುವ ನಿಗದಿತ ಸಮಯಕ್ಕೆ ಸರಿಯಾಗಿ ಹೆಚ್ಚುವರಿಯಾಗಿ ೨ ಬಸ್ಸುಗಳ ವ್ಯವಸ್ಥೆ ಕಲ್ಪಿಸುವಂತೆ ನಗರದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಿಗೆ ಮನವಿ ಮಾಡಲಾಗಿದೆ.
     ತಾಲೂಕಿನ ನಗರ ಹಾಗು ಗ್ರಾಮೀಣ ಪ್ರದೇಶಗಳಿಂದ ಪ್ರತಿ ದಿನ ನೂರಾರು ಮಂದಿ ಆರೋಗ್ಯ ಸೇವೆ ಪಡೆದುಕೊಳ್ಳಲು ಮಣಿಪಾಲ್ ಆಸ್ಪತ್ರೆ ಅವಲಂಬಿಸಿದ್ದಾರೆ. ಅನಾರೋಗ್ಯಕ್ಕೆ ಒಳಗಾದವರ ಜೊತೆಗೆ ಕುಟುಂಬ ವರ್ಗದವರು ಸಹ ಆಸ್ಪತ್ರೆಗೆ ತೆರಳುತ್ತಿದ್ದು, ಮಣಿಪಾಲ್ ಆಸ್ಪತ್ರೆಗೆ ತರ್ತು ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಭದ್ರಾವತಿ ಘಟಕದಿಂದ ಶಿವಮೊಗ್ಗ-ತೀರ್ಥಹಳ್ಳಿ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ ತೆರಳುವಂತೆ ಹಾಗು ಶಿವಮೊಗ್ಗ-ಆಯನೂರು-ರಿಪ್ಪನ್‌ಪೇಟೆ-ಹುಂಚ-ಕೋಣಂದೂರು-ತೀರ್ಥಹಳ್ಳಿ-ಆಗುಂಬೆ ಮಾರ್ಗವಾಗಿ ತೆರಳುವಂತೆ ಮತ್ತು ಎನ್.ಆರ್ ಪುರ-ಕೊಪ್ಪ-ಹರಿಹರಿಪುರ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ ತೆರಳುವಂತೆ ಬಸ್‌ಗಳ ವ್ಯವಸ್ಥೆ ಕಲ್ಪಿಸಿಕೊಡುವಂತೆ ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ವಿಭಾಗೀಯ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಮಾಡಲಾಗಿದೆ.
    ನಗರದಲ್ಲಿ ದಿನ ದಿಂದ ದಿನಕ್ಕೆ ವಾಹನಗಳ ಸಂಖ್ಯೆ ಅಧಿಕವಾಗುತ್ತಿರುವ ಹಿನ್ನಲೆಯಲ್ಲಿ ಸಂಚಾರಿ ದಟ್ಟಣೆ ಉಂಟಾಗುತ್ತಿದ್ದು, ಈ ನಡುವೆ ನಗರದ ಪ್ರಮುಖ ವೃತ್ತಗಳಾದ ಅಂಬೇಡ್ಕರ್ ವೃತ್ತ, ರಂಗಪ್ಪ ವೃತ್ತ ಮತ್ತು ಮಾಧವಚಾರ್ ವೃತ್ತಗಳಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಳ್ಳುತ್ತಿದ್ದು, ಇದರಿಂದಾಗಿ ವಾಹನ ಸವಾರರು, ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ಅಲ್ಲದೆ ಅಪಘಾತಗಳ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತಿದೆ. ಈ  ಹಿನ್ನಲೆಯಲ್ಲಿ ಈ ವೃತ್ತಗಳಲ್ಲಿ ಆಟೋಮ್ಯಾಟಿಕ್ ಎಲೆಕ್ಟ್ರಿಕಲ್ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸುವುದು ಸೂಕ್ತ ವಾಗಿದೆ. ಅಲ್ಲದೆ ನಗರದ ವಿವಿಧ ಭಾಗಗಳಲ್ಲಿ ಕಳವು ಪ್ರಕರಣಗಳು, ಪುಂಡಪೋಕರಿಗಳ ಹಾವಳಿಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಭಯದ ವಾತಾವರಣದಲ್ಲಲಿ ಬದುಕುವಂತಾಗಿದೆ. ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಕೃತ್ಯಗಳನ್ನು ತಡೆಗಟ್ಟಲು ಅಗತ್ಯವಿರುವ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಗಳನ್ನು ಅಳವಡಿಸುವಂತೆ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳಿಗೆ ಆಗ್ರಹಿಸಲಾಗಿದೆ.
   ಮನವಿ ಸಲ್ಲಿಸುವ ಸಂದರ್ಭದಲ್ಲಿ ವೇದಿಕೆ ಗೌರವಾಧ್ಯಕ್ಷ ಡಿ. ನಂಜಪ್ಪ, ಅಧ್ಯಕ್ಷ ಜಿ.ಟಿ ಬಸವರಾಜ್, ಉಪಾಧ್ಯಕ್ಷ ಎಸ್.ಎಸ್ ಭೈರಪ್ಪ, ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹಮೂರ್ತಿ, ಕಾರ್ಯದರ್ಶಿ ಸಿ.ಎಸ್ ಶಂಕರಯ್ಯ, ಕಾರ್ಯದರ್ಶಿ ರಾಮಪ್ಪ ಮತ್ತು ಖಜಾಂಚಿ ಕೆ.ಜೆ ಹನುಮಂತಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಜ.೨೬ರಂದು ಗಣ ರಾಜ್ಯೋತ್ಸವ



    ಭದ್ರಾವತಿ, ಜ. ೧೯: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.೨೬ರಂದು ಬೆಳಿಗ್ಗೆ ೯ ಗಂಟೆಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ೭೨ನೇ ಗಣರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
     ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಸಿ.ಎಂ ಇಬ್ರಾಹಿಂ, ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್ ಭೋಜೆಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಡಿ. ಲಕ್ಷ್ಮೀ ದೇವಿ, ಉಪಾಧ್ಯಕ್ಷೆ ನೇತ್ರಾಬಾಯಿ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ನಾಗರಾಜ್, ಜಿ.ಪಂ. ಸದಸ್ಯರಾದ ಡಿ.ಆರ್ ರೇಖಾ ಉಮೇಶ್, ಜೆ.ಪಿ ಯೋಗೇಶ್, ಎಸ್. ಮಣಿಶೇಖರ್, ವೀರಭದ್ರಪ್ಪ ಪೂಜಾರಿ, ಎಪಿಎಂಸಿ ಅಧ್ಯಕ್ಷ ಲವೇಶ್‌ಗೌಡ ಮತ್ತು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
    ತಾಲೂಕು ದಂಡಾಧಿಕಾರಿ ಜಿ. ಸಂತೋಷ್‌ಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದು, ತಾಲೂಕು ಪಂಚಾಯಿತಿ ಸದಸ್ಯರು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಜ.೨೧ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ



ಭದ್ರಾವತಿ, ಜ. ೧೯: ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದಲ್ಲಿ ಜ.೨೧ರ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ರ ವರೆಗೆ ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
      ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುತ್ತಿರುವುದು, ಕಣ್ಣು ಉರಿ, ಕಣ್ಣು ಕೆಂಪಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರು ಹಾಗು ದೂರ ದೃಷ್ಠಿ ಮತ್ತು ಸಮೀಪ ದೃಷ್ಠಿ ತೊಂದರೆ ಇರುವವರಿಗೆ ಹೆಚ್ಚಿನ ಅನುಕೂಲವಾಗಲಿದೆ.
   ಪ್ರತಿ ತಿಂಗಳು ದಿನಾಂಕ ೨೧ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಮೊ:೯೪೮೦೨೮೩೦೩೦ ಅಥವಾ ೯೪೪೮೨೫೫೫೪೪ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Monday, January 18, 2021

ಆರ್‌ಎಎಫ್ ಘಟಕ ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿ : ಸಂಸದ ಬಿ.ವೈ ರಾಘವೇಂದ್ರ ಕೃತಜ್ಞತೆ


ಭದ್ರಾವತಿ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
   ಭದ್ರಾವತಿ, ಜ. ೧೮: ನಗರದ ಬುಳ್ಳಾಪುರ ಮಿಲ್ಟ್ರಿಕ್ಯಾಂಪ್‌ನಲ್ಲಿ ಕಳೆದ ೨ ದಿನಗಳ ಹಿಂದೆ ನೂತನವಾಗಿ ಕಾರ್ಯಾರಂಭಗೊಂಡಿರುವ ಕ್ಷಿಪ್ರ ಕಾರ್ಯ ಪಡೆ ಘಟಕದ ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿಸುವಲ್ಲಿ ಸಹಕರಿಸಿದ ಭಾರತೀಯ ಜನತಾ ಪಕ್ಷದ ಜಿಲ್ಲಾ ಹಾಗು ತಾಲೂಕು ಮಟ್ಟದ ಮುಖಂಡರಿಗೆ, ಪದಾಧಿಕಾರಿಗಳಿಗೆ, ಎಲ್ಲಾ ಹಂತದ ಸಂಯೋಜಕರಿಗೆ, ಕಾರ್ಯಕರ್ತರಿಗೆ ಸಂಸದ ಬಿ.ವೈ ರಾಘವೇಂದ್ರ ಕೃತಜ್ಞತೆ ಸಲ್ಲಿಸಿದರು.
    ಸೋಮವಾರ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ವೈ ರಾಘವೇಂದ್ರ ಮಾತನಾಡಿ, ಮುಂದಿನ ದಿನಗಳಲ್ಲೂ ಇದೆ ರೀತಿ ಸಂಘಟಿತವಾಗಿ ಕಾರ್ಯ ನಿರ್ವಹಿಸುವಂತೆ ಕರೆ ನೀಡಿದರು.
    ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ಪಕ್ಷದ ಬೆಂಬಲಿತ ಸದಸ್ಯರನ್ನು ಅಭಿನಂದಿಸಲಾಯಿತು.
    ಪಕ್ಷದ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಭಾನುಪ್ರಕಾಶ್, ವಿಭಾಗ ಪ್ರಮುಖ್ ಗಿರೀಶ್ ಪಟೇಲ್, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಜಿಲ್ಲಾ ಪ್ರಧಾನ ಕರ್ಯದರ್ಶಿಗಳಾದ ಶಿವರಾಜ್, ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ್, ನಿಕಟಪೂರ್ವ ಅಧ್ಯಕ್ಷರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಗೆ ಲಸಿಕೆ


ಕೋವಿಡ್-೧೯ ಲಸಿಕೆ ಹಾಕುವ ಕಾರ್ಯಕ್ರಮ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಸಹ ಮುಂದುವರೆಯಿತು. ಆರೋಗ್ಯ ಇಲಾಖೆ ಹಿರಿಯ ಆರೋಗ್ಯ ಸಹಾಯಕ ನೀಲೇಶ್ ರಾಜ್ ಲಸಿಕೆ ಪಡೆದುಕೊಂಡರು..
    ಭದ್ರಾವತಿ, ಜ. ೧೮: ಕೋವಿಡ್-೧೯ ಲಸಿಕೆ ಹಾಕುವ ಕಾರ್ಯಕ್ರಮ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಸಹ ಮುಂದುವರೆಯಿತು
     ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಆಡಳಿತ ವೈದ್ಯಾಧಿಕಾರಿ ಡಾ. ದೇವಾನಂದ್, ಹಿರಿಯ ಆರೋಗ್ಯ ಸಹಾಯಕರಾದ ನೀಲೇಶ್‌ರಾಜ್, ಹಾಲಸ್ವಾಮಿ, ವೈದ್ಯಾಧಿಕಾರಿ ಡಾ. ದೇವರಾಜ್, ಸಮುದಾಯ ಆರೋಗ್ಯ ಕೇಂದ್ರದ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಕಿರಿಯ ಆರೋಗ್ಯ ಸಹಾಯಕರು ಹಾಗು ಸಿಬ್ಬಂದಿಗಳು ಲಸಿಕೆ ಪಡೆದುಕೊಂಡರು. ಕಿರಿಯ ಫಾರ್ಮಸಿ ಅಧಿಕಾರಿ ದತ್ತಾತ್ರೇಯರವರಿಗೆ ಮೊದಲ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
    ಶನಿವಾರದಿಂದ ಆರಂಭಗೊಂಡಿರುವ ಲಸಿಕೆ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕಲಾಗುತ್ತಿದೆ. ಸ್ಟಾಫ್ ನರ್ಸ್ ಡಯಾನ ಲಸಿಕೆ ಹಾಕಿದರು.

ಉತ್ಸವವಿಲ್ಲದ ೧೦೩ನೇ ಸಂಸ್ಥಾಪನಾ ದಿನ : ಕಾರ್ಮಿಕರ ಬಾಳಿಗೆ ವಿಐಎಸ್‌ಎಲ್ ಉತ್ಸವ ನೆನಪು ಮಾತ್ರ

ಅಂದಿನ ಮೈಸೂರು ರಾಜ್ಯದ ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಾಯ ಮತ್ತು ಮಹಾರಾಜರಾಗಿದ್ದ ಕೃಷ್ಣರಾಜ ಒಡೆಯರ್ ಮಾರ್ಗದರ್ಶನದಲ್ಲಿ ಪ್ರಾಥಮಿಕ ತನಿಖೆಯನ್ನು ೧೯೧೫-೧೯೧೬ರ ನಡುವೆ ನಡೆಸಲಾಯಿತು.     
      * ಅನಂತಕುಮಾರ್
    ಭದ್ರಾವತಿ, ಜ. ೧೮: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೋಮವಾರ ಶಂಕು ಸ್ಥಾಪನೆಗೊಂಡು ೧೦೩ ವರ್ಷ ಕಳೆದಿದ್ದು, ಇದೀಗ ಕಾರ್ಖಾನೆ ವ್ಯಾಪ್ತಿಯಲ್ಲಿ ಸಂಭ್ರಮದ ಬದಲು ಸೂತಕದ ಛಾಯೆ ಆವರಿಸಿಕೊಂಡಿದೆ. ಕೋವಿಡ್-೧೯ರ ಪರಿಣಾಮ ಆಡಳಿತ ಮಂಡಳಿ ಈ ಬಾರಿ ವಿಐಎಸ್‌ಎಲ್ ಉತ್ಸವ ನಡೆಸದಿರುವುದು ಒಂದೆಡೆ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಕಾರ್ಮಿಕರು, ಕುಟುಂಬ ವರ್ಗದವರು ಸೇರಿದಂತೆ ನಗರದ ಜನತೆಯನ್ನು ನಿರಾಸೆಗೊಳಿಸಿದೆ. ಮತ್ತೊಂದೆಡೆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿರುವುದು ಈ ಬಾರಿಯ ಸಂಭ್ರಮವನ್ನು ಮತ್ತಷ್ಟು ಮೊಟಕುಗೊಳಿಸಿದೆ.
    ಸುಮಾರು ೨ ದಶಕಗಳಿಂದ ಕಾರ್ಖಾನೆ ಆಡಳಿತ ಮಂಡಳಿ ಸುಮಾರು ೧ ತಿಂಗಳ ಕಾಲ ವಿಐಎಸ್‌ಎಲ್ ಉತ್ಸವ ನಡೆಸುವ ಮೂಲಕ ಸಂಸ್ಥಾಪನಾ ದಿನ, ಸೈಲ್ ಡೇ ಹಾಗು ಗಣ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ವಿಶೇಷವಾಗಿ ಆಚರಿಸಿಕೊಂಡು ಬರುತ್ತಿದೆ. ವಿಐಎಸ್‌ಎಲ್ ಉತ್ಸವದಲ್ಲಿ ಪ್ರತಿ ದಿನ ಸುಮಾರು ೫ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವುದು ವಿಶೇಷವಾಗಿದೆ. ಪ್ರತಿ ದಿನ ಸಂಜೆ ಮಕ್ಕಳ ವಿವಿಧ ಬಗೆಯ ಆಟಿಕೆಗಳು, ಗೃಹ ಬಳಕೆ ಸಾಮಾಗ್ರಿಗಳ ಮಾರಾಟ, ವಿಐಎಸ್‌ಎಲ್ ವಸ್ತು ಪ್ರದರ್ಶನ ಮಳಿಗೆಗಳು, ಬಗೆ ಬಗೆಯ ಆಹಾರ ಖಾದ್ಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ಸವದಲ್ಲಿ ಕಂಡು ಬರುತ್ತಿತ್ತು. ನಗರದ ಜನತೆ ೧ ತಿಂಗಳ ಕಾಲ ಸಂಭ್ರಮದಲ್ಲಿ ಕಾಲ ಕಳೆಯುತ್ತಿದ್ದರು. ಆದರೆ ಈ ಬಾರಿ ಕೋವಿಡ್-೧೯ರ ಹಿನ್ನಲೆಯಲ್ಲಿ ಉತ್ಸವ ಆಯೋಜಿಸಿಲ್ಲ.  ಈ ಹಿಂದೆ ಸುನಾಮಿ ಪ್ರವಾಹ ಸಂದರ್ಭದಲ್ಲಿ ಉತ್ಸವ ನಡೆಸಿರಲಿಲ್ಲ. ೨ ದಶಕದಲ್ಲಿ ಕೇವಲ ೨ ಬಾರಿ ಮಾತ್ರ ಉತ್ಸವ ನಡೆದಿಲ್ಲ ಎಂಬುದು ಬಿಟ್ಟರೇ ಬೇರೆ ಎಲ್ಲಾ ಸಂದರ್ಭದಲ್ಲೂ ಉತ್ಸವ ನಿಗದಿತ ದಿನಾಂಕದಂದು ಜನವರಿ ಆರಂಭದಿಂದ ಫೆಬ್ರವರಿವರೆಗೆ ನಡೆದಿರುವುದು ಗಮನಾರ್ಹ ಸಂಗತಿಯಾಗಿದೆ.
         ಆಡಳಿತ ಮಂಡಳಿಯಿಂದ ಸರಳವಾಗಿ ಸಂಸ್ಥಾಪನಾ ದಿನ ಆಚರಣೆ:
   ಕಾರ್ಖಾನೆಯ ಒಳಭಾಗದಲ್ಲಿರುವ ಆಡಳಿತ ಕಛೇರಿಯಲ್ಲಿ ಸರಳವಾಗಿ ಸಂಸ್ಥಾಪನಾ ದಿನ ಆಚರಿಸಲಾಯಿತು. ಕಛೇರಿ ಆವರಣದಲ್ಲಿರುವ ಕಾರ್ಖಾನೆಯ ಮೊದಲ ಅಧ್ಯಕ್ಷರು ಹಾಗು ಸಂಸ್ಥಾಪಕರಲ್ಲಿ ಒಬ್ಬರಾದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಕಾರ್ಖಾನೆಯ ಮಹಾಪ್ರಬಂಧಕ(ಸ್ಥಾವರ) ಮತ್ತು ಆಕ್ಟಿಂಗ್ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ೧೦೩ನೇ ಸಂಸ್ಥಾಪನಾ ದಿನ ಸೋಮವಾರ ಕಾರ್ಖಾನೆಯ ಒಳಭಾಗದಲ್ಲಿರುವ ಆಡಳಿತ ಕಛೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ಸರ್.ಎಂ.ವಿ ಪ್ರತಿಮೆಗೆ ಆಕ್ಟಿಂಗ್ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಮಾಲಾರ್ಪಣೆ ಮಾಡಿದರು.
    ಮಹಾಪ್ರಬಂಧಕರು ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಬಿ. ವಿಶ್ವನಾಥ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ, ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಆರ್. ವೀರಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
      ೧೦೩ನೇ ಸಂಸ್ಥಾಪನಾ ದಿನ :
     ನಗರದಲ್ಲಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಲುವಾಗಿ ಅಂದಿನ ಮೈಸೂರು ರಾಜ್ಯದ ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಾಯ ಮತ್ತು ಮಹಾರಾಜರಾಗಿದ್ದ ಕೃಷ್ಣರಾಜ ಒಡೆಯರ್ ಮಾರ್ಗದರ್ಶನದಲ್ಲಿ ಪ್ರಾಥಮಿಕ ತನಿಖೆಯನ್ನು ೧೯೧೫-೧೯೧೬ರ ನಡುವೆ ನಡೆಸಲಾಯಿತು. ಇದ್ದಿಲು ಇಂಧನ ಬಳಸಿ ಗಟ್ಟಿ ಕಬ್ಬಿಣ ತಯಾರಿಸುವ ಸಾಧ್ಯತೆಯನ್ನು ಪರಿಶೋಧಿಸಲಾಯಿತು. ಇದರ ಮುಖ್ಯ ಉದ್ದೇಶ ಬಾಬಾ ಬುಡನ್ ಗಿರಿ ಬೆಟ್ಟಗಳಲ್ಲಿ ಮತ್ತು ಕೆಮ್ಮಣ್ಣುಗುಂಡಿ ಬಳಿ ಇದ್ದ ಶ್ರೀಮಂತ ಕಬ್ಬಿಣದ ಅದಿರು ನಿಕ್ಷೇಪಗಳನ್ನು ಉಪಯೋಗಿಸಿ ಕಬ್ಬಿಣ ಮತ್ತು ಇತರ ಉತ್ಪನ್ನಗಳ ತಯಾರಿಕೆ ಆಗಿತ್ತು .ಈ ತನಿಖೆಯನ್ನು ಒಂದು ನ್ಯೂಯಾರ್ಕ್ ಮೂಲದ ಸಂಸ್ಥೆ ನಿರ್ವಹಿಸಿತು. ಇದರ ಫಲವಾಗಿ ೧೯೧೮ರಲ್ಲಿ ವಿಶ್ವೇಶ್ವರಯ್ಯನವರು ಈ ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಜ.೧೮ರಂದು ಸಂಸ್ಥಾಪನಾ ದಿನ ಆಚರಿಸಿಕೊಂಡು ಬರಲಾಗುತ್ತಿದೆ.