Thursday, January 21, 2021

ಜ.೨೪ರಂದು ೪೩ನೇ ವರ್ಷದ ಸಂಭಮದ ಸಮಾರಂಭ

ಭದ್ರಾವತಿ, ಜ. ೨೧: ನಗರದ ಬೈಪಾಸ್ ರಸ್ತೆ ಉಜ್ಜನಿಪುರದಲ್ಲಿರುವ ಕುರುಹೀನಶೆಟ್ಟಿ ಸಂಘದ ೪೩ನೇ ವರ್ಷದ ಸಂಭ್ರಮ ಸಮಾರಂಭ ಜ.೨೪ರಂದು ನಡೆಯಲಿದೆ.
    ಬೆಳಿಗ್ಗೆ ೧೧ ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಎನ್ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ದೇವಾಂಗ ಸಂಘದ ಅಧ್ಯಕ್ಷ ಎಂ. ಪ್ರಭಾಕರ್, ನಗರಸಭೆ ಸದಸ್ಯೆ ವಿಶಾಲಾಕ್ಷಿ, ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಚಂದ್ರಶೇಖರ್, ಸಂಘದ ಅಧ್ಯಕ್ಷ ಎನ್.ಆರ್ ಜಯರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಜ.೨೩ರಂದು ಶ್ರೀ ಷಹಾಜಿ ರಾಜೆ ಬೋಂಸ್ಲೆ ಪುಣ್ಯರಾಧನೆ

ಭದ್ರಾವತಿ, ಜ. ೨೧: ಶ್ರೀ ಷಹಾಜಿ ರಾಜೆ ಬೋಸ್ಲೇರವರ ೩೫೭ನೇ ಪುಣ್ಯರಾಧನೆ ಜ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿರುವ ಶ್ರೀ ಷಹಾಜಿ ರಾಜೆ ಬೋಂಸ್ಲೆರವರ ಸ್ಮಾರಕದ ಆವರಣದಲ್ಲಿ ನಡೆಯಲಿದೆ.
    ಶ್ರೀ ಮಂಜುನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ತಾಲೂಕಿನ ಮರಾಠ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘ ಕೋರಿದೆ.

ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಅಚರಣೆ

ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಗುರುವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಅಚರಿಸಲಾಯಿತು.
     ಭದ್ರಾವತಿ, ಜ. ೨೧: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಗುರುವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಅಚರಿಸಲಾಯಿತು.
      ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿ ಆಚರಣೆಗೆ ಚಾಲನೆ ನೀಡಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ಗಂಗಾಮತಸ್ಥರ ಸಂಘದ ಪ್ರಮುಖರಾದ ಯಲ್ಲಪ್ಪ ಹಾಗು ಪದಾಧಿಕಾರಿಗಳು ಮತ್ತು ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೊಕ್ಸೋ ಕಾಯಿದೆ ಕುರಿತು ಹೆಚ್ಚಿನ ಅರಿವು ಹೊಂದಿ


ಭದ್ರಾವತಿ : ದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ ಪೊಕ್ಸೋ ಕಾಯಿದೆಯನ್ನು ಜಾರಿಗೆ ತರುವ ಮೂಲಕ ರಕ್ಷಣೆಗೆ ಮುಂದಾಗಿದ್ದು, ಹೆಣ್ಣುಮಕ್ಕಳು ಈ ಕಾಯಿದೆ ಕುರಿತು ಹೆಚ್ಚಿನ ಅರಿವು ಹೊಂದಬೇಕೆಂದು ನ್ಯಾಯವಾದಿ ಟಿ ಚಂದ್ರೇಗೌಡ ತಿಳಿಸಿದರು.
    ಅವರು ಗುರುವಾರ ನ್ಯೂಟೌನ್ ಸರ್ ಎಂ ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ತಾಲೂಕು  ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸರ್ ಎಂ ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು,  ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ  ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
     ದೇಶದಲ್ಲಿ  ಅಪ್ರಾಪ್ತ ಬಾಲಕಿಯರ ಮೇಲಿನ ಪ್ರಕರಣಗಳು  ಹೆಚ್ಚಾಗುತ್ತಿರುವುದು ಒಂದೆಡೆ ವಿಷಾದನೀಯ ಬೆಳವಣಿಗೆಯಾಗಿದೆ. ಅತ್ಯಾಚಾರ ಬಾಲ್ಯ ವಿವಾಹ, ಅಪ್ರಾಪ್ತ ಬಾಲಕಿಯರ ಮಾರಾಟ    ಸೇರಿದಂತೆ ಹಲವು  ಪ್ರಕರಣಗಳಲ್ಲಿ  ಪ್ರತ್ಯಕ್ಷ, ಪರೋಕ್ಷವಾಗಿ ಭಾಗಿಯಾದ ಎಲ್ಲರನ್ನೂ ಕಠಿಣವಾಗಿ ಶಿಕ್ಷಿಸುವ  ವ್ಯವಸ್ಥೆ ರೂಪಿಸಲಾಗಿದ್ದು, ಈ ನಿಟ್ಟಿನಲ್ಲಿ ಪೊಕ್ಸೋ ಕಾಯ್ದೆ ಹೆಚ್ಚು ಪರಿಣಾಮಕಾರಿಯಾಗಿದೆ ಎಂದರು.   
       ಕಾರ್ಯಕ್ರಮವನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಟಿ.ಪಿ ಪುರುಷೋತ್ತಮ್ ಉದ್ಘಾಟಿಸಿದರು.  ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಜಿ ಉಮಾಶಂಕರ್  ಅಧ್ಯಕ್ಷತೆ ವಹಿಸಿದ್ದರು . ತಾಲೂಕು  ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್, ಉಪಾಧ್ಯಕ್ಷ ಜಯರಾಮ್, ಕಾರ್ಯದರ್ಶಿ ಟಿ ಎಸ್ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
     ವಿದ್ಯಾರ್ಥಿನಿ ಸುಪ್ರಿಯಾ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ಡಾ ಬಿ.ಎಂ ನಾಸಿರ್ ಖಾನ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಎಸ್ ವರದರಾಜು ನಿರೂಪಿಸಿದರು. ಡಾ. ದ್ರಾಕ್ಷಾಯಿಣಿ ಎಂ ಡೋಂಗ್ರೆ ವಂದಿಸಿದರು. 
   ಕಾಲೇಜಿನ ವಿವಿಧ ವಿಭಾಗಗಳ ಸಹಾಯಕ  ಪ್ರಾಧ್ಯಾಪಕರಾದ ಡಾ. ಮಂಜುನಾಥ್, ಡಾ. ಸಕ್ರಿ ನಾಯ್ಕ್,  ಫರ್ಹಾನ ಅಂಜುಮ್, ವಿಶ್ವನಾಥ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.  

Wednesday, January 20, 2021

ಜ.೨೧ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಭದ್ರಾವತಿ, ಜ. ೨೦: ಜೆಪಿಎಸ್ ಕಾಲೋನಿಯಲ್ಲಿರುವ ಮೆಸ್ಕಾಂ ೧೧೦/೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.೨೧ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನ್ಯೂಟೌನ್, ನ್ಯೂಕಾಲೋನಿ, ಐಟಿಐ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು ತಾಂಡ್ಯಾ, ಹುತ್ತಾ ಕಾಲೋನಿ, ಜನ್ನಾಪುರ, ಬಿ.ಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಳೆ ಗಂಗೂರು, ಕಾರೇಹಳ್ಳಿ, ಕಂಬದಾಳು ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ತಡಸ, ಬಿಳಿಕಿ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ ಮತ್ತು ಅರಳಿಕೊಪ್ಪ ಸೇರಿದಂತೆ ಇನ್ನಿತರರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

ಶತಾಯುಷಿ ಪುಟ್ಟಮ್ಮ ನಿಧನ

ಶತಾಯುಷಿ ಪುಟ್ಟಮ್ಮ
ಭದ್ರಾವತಿ, ಜ. ೨೦: ನಗರಸಭೆ ವ್ಯಾಪ್ತಿಯ ಜನ್ನಾಪುರ ಫಿಲ್ಟರ್ ಶೆಡ್ ನಿವಾಸಿ, ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡರವರ ಅಜ್ಜಿ, ಶತಾಯುಷಿ ಪುಟ್ಟಮ್ಮ(೧೦೧) ಬುಧವಾರ ನಿಧನ ಹೊಂದಿದರು.
    ಪುಟ್ಟಮ್ಮ ವಿಐಎಸ್‌ಎಲ್ ಕಾರ್ಖಾನೆಯ ಗೆಸ್ಟ್‌ಹೌಸ್ ವಿಭಾಗದಲ್ಲಿ ಸುಮಾರು ೪೦ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೊಮ್ಮಗ ಶಶಿಕುಮಾರ್ ಎಸ್ ಗೌಡ ಹಾಗು ಮರಿಮೊಮ್ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಎಬಿವಿಪಿ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ನಗರದ ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.
ಭದ್ರಾವತಿ, ಜ. ೨೦: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ನಗರದ ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.
    ಕೊರೋನಾ ಮಹಾಮಾರಿಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳು ಕಳೆದ ಸುಮಾರು ೮-೯ ತಿಂಗಳು ಸ್ಥಗಿತಗೊಂಡು ಇದೀಗ ಆರಂಭಗೊಂಡಿವೆ.  ಈ ನಡುವೆ ವಿದ್ಯಾರ್ಥಿಗಳು ಹಲವು ಸಮಸ್ಯೆಗಳು ಎದುರಿಸುವಂತಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸರ್ಕಾರ ನೀಡುತ್ತಿದ್ದ ಕೆಲವು ವಿದ್ಯಾರ್ಥಿ ವೇತನಗಳು ಕೊರೋನಾ ಸಂದರ್ಭದಲ್ಲಿ ಸರಿಯಾಗಿ ಬಿಡುಗಡೆಯಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು.
     ಪ್ರಸ್ತುತ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್‌ಗಳನ್ನು ತೆರೆಯಲಾಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ತಕ್ಷಣ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ಗಳನ್ನು ತೆರೆಯುವುದು.
       ಅನೇಕ ಕಾಲೇಜುಗಳಲ್ಲಿ ಕೆಲವು ವಿಷಯಗಳಿಗೆ ಕಾಯಂ ಉಪನ್ಯಾಸಕರು ಇರುವುದಿಲ್ಲ ಪ್ರಸ್ತುತ ಕಾಲೇಜುಗಳು ಪ್ರಾರಂಭವಾಗಿ  ವಿದ್ಯಾರ್ಥಿಗಳು ತರಗತಿಗಳಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ತರಗತಿಗಳನ್ನು ನಡೆಸಬೇಕು.
       ಪ್ರಸ್ತುತ ಎಲ್ಲಾ ಕಾಲೇಜುಗಳಿಗೆ ಮತ್ತು ಹಾಸ್ಟೆಲ್‌ಗಳಿಗೆ ಸಮರ್ಪಕವಾಗಿ ಬಸ್ ಸೌಲಭ್ಯಗಳು ಇರುವುದಿಲ್ಲ. ಕೊರೋನಾ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಬಸ್‌ಗಳ ಸಂಚಾರ ಇನ್ನೂ ಸರಿಯಾಗಿ ಆರಂಭಗೊಂಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ತಕ್ಷಣ ಬಸ್ ವ್ಯವಸ್ಥೆ ಕಲ್ಪಿಸುವ ಜೊತೆಗೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
    ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಜಯ ಗೌಡರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಜಿಲ್ಲಾ ಸಹ ಸಂಚಾಲಕ ಕುಮಾರಸ್ವಾಮಿ, ಎಸ್.ಎಫ್.ಡಿ ಪ್ರಮುಖ ಹಾಲಸ್ವಾಮಿ, ಮಂಚ್ ಪ್ರಮುಖ ಕಲ್ಪನಾ, ನಿರಂಜನ್, ಆಕಾಶ್, ಅಭಿ, ಮುರುಗೇಶ್, ಹಿಮಾ ಮತ್ತು ಯಶಸ್ವಿನಿ  ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು  ಪಾಲ್ಗೊಂಡಿದ್ದರು.