Sunday, January 31, 2021

ಯಾರಿಗೂ ಅಧಿಕಾರ ಮುಖ್ಯವಲ್ಲ, ಬೆಳೆದು ಬಂದ ದಾರಿ ಮುಖ್ಯ : ಶಿಮೂಲ್ ಅಧ್ಯಕ್ಷ ಆನಂದ್

ಭದ್ರಾವತಿ ಜನ್ನಾಪುರ ಹುತ್ತಾಕಾಲೋನಿ ಚಂದ್ರಾಲಯದಲ್ಲಿ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿ ಒಂದು ನೆನಪು ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಶಾರದ ಅಪ್ಪಾಜಿ ಉದ್ಘಾಟಿಸಿದರು.
   ಭದ್ರಾವತಿ, ಜ. ೩೧: ಯಾರಿಗೂ ಅಧಿಕಾರ ಮುಖ್ಯವಲ್ಲ. ಬೆಳೆದು ಬಂದ ದಾರಿ, ಬೆಳೆಯಲು ಕಾರಣಕರ್ತದವರು ಮುಖ್ಯ ಎಂಬುದನ್ನು ಅರಿತುಕೊಳ್ಳಬೇಕು.  ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ರಾಜಕಾರಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಆನಂದ್ ಹೇಳಿದರು.
   ಅವರು ಭಾನುವಾರ ಜನ್ನಾಪುರ ಹುತ್ತಾಕಾಲೋನಿ ಚಂದ್ರಾಲಯದಲ್ಲಿ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿ ಒಂದು ನೆನಪು ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರ ರಾಜಕೀಯ ಜೀವನ ವೈಶಿಷ್ಟ ಪೂರ್ಣವಾಗಿದ್ದು, ಅವರು ಎಂದಿಗೂ ಕುಟುಂಬ ರಾಜಕಾರಣ ಮಾಡಲಿಲ್ಲ. ಅವರು ನಂಬಿ ಬಂದವರನ್ನು ಅಧಿಕಾರ ಇರಲಿ, ಇಲ್ಲದಿರಲಿ ಕೊನೆಯವರೆಗೂ ಕೈಬಿಡಲಿಲ್ಲ. ತಮ್ಮದೇ ಆದ ವರ್ಚಸ್ಸು, ಅಭಿಮಾನ ಬಳಗ ಹೊಂದಿದ್ದರು. ಅವರು ನಿಧನ ಹೊಂದಿದ ನಂತರ ಕೆಲವು ಹಿಂಬಾಲಕರು ಸುಳ್ಳು ಹೇಳಿಕೆಗಳನ್ನು ನೀಡುವ ಜೊತೆಗೆ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸದಲ್ಲಿ ತೊಡಗಿದ್ದಾರೆಂದು ಹೆಸರು ಹೇಳದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
   ನಾನು ಶಿಮೂಲ್ ಅಧ್ಯಕ್ಷನಾಗಲು ಎಂ.ಜೆ ಅಪ್ಪಾಜಿಯವರು ಕಾರಣಕರ್ತರಾಗಿದ್ದು, ಅವರ ಋಣ ತೀರಿಸಲು ಸಾಧ್ಯವಿಲ್ಲ. ಅವರು ಬದುಕಿರುವಾಗ ಅವರಿಗೆ ನೀಡುತ್ತಿದ್ದ ಗೌರವವನ್ನು ಅವರ ನಿಧನ ಹೊಂದಿದ ನಂತರವೂ ಸಹ ನೀಡುತ್ತಿದ್ದೇನೆ. ಅಭಿಮಾನಿಗಳು, ಕಾರ್ಯಕರ್ತರಲ್ಲೂ ಇದೆ ಭಾವನೆ ಇದೆ ಎಂದು ಭಾವಿಸಿರುತ್ತೇನೆ. ಆದರೆ ಅಪ್ಪಾಜಿಯವರ ನೆರವಿನಿಂದ ಇಂದು ರಾಜಕಾರಣದಲ್ಲಿ ಮುಂದೆ ಬಂದವರು ಅವರನ್ನು ಇಂದು ಅಗೌರವದಿಂದ ಕಾಣುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
  ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್ ಮಾತನಾಡಿ, ಅಪ್ಪಾಜಿಯವರ ಹೆಸರು ಹೇಳಿಕೊಳ್ಳುವುದೇ ಒಂದೇ ದೊಡ್ಡ ಗೌರವವಾಗಿದೆ. ಈ ಗೌರವದ ಮುಂದೆ ಯಾವ ಅಧಿಕಾರವೂ ದೊಡ್ಡದಲ್ಲ. ಅಪ್ಪಾಜಿಯವರು ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಕ್ಷೇತ್ರದ ಜನರು ಕೊನೆಯವರೆಗೂ ಮರೆಯುವುದಿಲ್ಲ. ಯಾರೋ ಕೆಲವು ಬೆಂಬಲಿಗರು ಬಿಟ್ಟು ಹೋಗಬಹುದು. ಅದಕ್ಕೆ ಯಾರು ಸಹ ಚಿಂತಿಸಬೇಕಾದ ಅಗತ್ಯವಿಲ್ಲ. ಬಿಟ್ಟು ಹೋದವರ ಪೈಕಿ ಎರಡರಷ್ಟು ಮಂದಿ ಪುನಃ ಹಿಂದಿರುಗಿ ಬರಲಿದ್ದಾರೆ. ಅಪ್ಪಾಜಿಯವರ ಕುಟುಂಬ ಪುನಃ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದೆ. ಶಾರದ ಅಪ್ಪಾಜಿಯವರು ಎಲ್ಲಾ ಅಭಿಮಾನಿಗಳಿಗೂ, ಕಾರ್ಯಕರ್ತರಿಗೂ ಮಾರ್ಗದರ್ಶಕರಾಗಿ ಮುನ್ನಡೆಸಿಕೊಂಡು ಹೋಗುವ ವಿಶ್ವಾಸವಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾರದ ಅಪ್ಪಾಜಿ, ಅಭಿಮಾನಿಗಳು, ಕಾರ್ಯಕರ್ತರು ಅಪ್ಪಾಜಿಯವರ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚಿರಋಣಿಯಾಗಿರುತ್ತೇನೆ. ಅಪ್ಪಾಜಿಯವರಿಗೆ ನೀಡುತ್ತಿದ್ದ ಸಹಕಾರ, ಪ್ರೋತ್ಸಾಹ ನಾನು ಸಹ ನಿರೀಕ್ಷಿಸುತ್ತೇನೆ. ಕೊನೆಯವರೆಗೂ ಜನರ ಕಷ್ಟಸುಖಗಳಿಗೆ ಸ್ಪಂದಿಸುತ್ತೇನೆಂದು ಭರವಸೆ ನೀಡಿದರು.
   ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಾರದ ಪೂರ‍್ಯಾನಾಯ್ಕ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಹಿರಿಯ ಮುಖಂಡ ಕರಿಯಪ್ಪ, ನ್ಯಾಯವಾದಿ ಎ.ಟಿ ರವಿ ಸೇರಿದಂತೆ ಇನ್ನಿತರರು ಮಾತನಾಡಿದರು.
   ನಗರಸಭಾ ಸದಸ್ಯರಾದ ಎಚ್.ಬಿ ರವಿಕುಮಾರ್, ಆನಂದ್, ಮುಖಂಡರಾದ ಬಸವರಾಜ ಆನೇಕೊಪ್ಪ, ಧರ್ಮರಾಜ್, ಕೆ. ಮಂಜುನಾಥ್, ಉಮೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
   ಜೆಡಿಎಸ್ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಕೃಷ್ಣರಾಜ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನಗರಸಭಾ ಸದಸ್ಯೆ ಎಂ.ಎಸ್ ಸುಧಾಮಣಿ ವಂದಿಸಿದರು.

ಅಂಗವೈಕಲ್ಯದಿಂದ ಮುಕ್ತಿ ಹೊಂದಿ ಆರೋಗ್ಯವಂತರಾಗಿ ಬೆಳೆಯಲು ಪಲ್ಸ್ ಪೋಲಿಯೋ ಸಹಕಾರಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಭಾನುವಾರ ಆರೋಗ್ಯ ಇಲಾಖೆ ವತಿಯಿಂದ ರೋಟರಿ ಕ್ಲಬ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪೊಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.  
   ಭದ್ರಾವತಿ, ಜ. ೩೧: ಅಂಗವೈಕಲ್ಯದಿಂದ ಮುಕ್ತಿಹೊಂದುವ ಜೊತೆಗೆ ಸದೃಢವಾಗಿ ಆರೋಗ್ಯವಂತರಾಗಿ ಬೆಳೆಯಲು ಪಲ್ಸ್ ಪೋಲಿಯೋ ಹೆಚ್ಚು ಸಹಕಾರಿಯಾಗಿದ್ದು, ಪ್ರತಿಯೊಬ್ಬರು ನಿರ್ಲಕ್ಷ್ಯವಹಿಸದೆ ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
   ಅವರು ಭಾನುವಾರ ಆರೋಗ್ಯ ಇಲಾಖೆ ವತಿಯಿಂದ ರೋಟರಿ ಕ್ಲಬ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪೊಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪೋಲಿಯೋ ದುಷ್ಪರಿಣಾಮಗಳು ಎಲ್ಲರಿಗೂ ತಿಳಿದಿದೆ. ಈ ಹಿಂದೆ ದೇಶದಲ್ಲಿ ಸಾಕಷ್ಟು ಜನರು ಅಂಗವೈಕಲ್ಯಕ್ಕೆ ಒಳಗಾಗಿ ಸಂಕಷ್ಟದ ಬದುಕು ನಡೆಸಿದ್ದರು. ಭವಿಷ್ಯದಲ್ಲಿ ಪುನಃ ಪೋಲಿಯೋ ಕಾಣಿಸಿಕೊಳ್ಳಬಾರದೆಂಬ ಧ್ಯೇಯದೊಂದಿಗೆ  ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಸಂಶೋಧನೆಗಳು ನಡೆದು ಪಲ್ಸ್ ಪೋಲಿಯೋ ಕಂಡು ಹಿಡಿಯಲಾಯಿತು. ಆ ನಂತರ ದೇಶಾದ್ಯಂತ ನಿರಂತರವಾಗಿ ೫ ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಲಾಗುತ್ತಿದೆ. ಆರೋಗ್ಯ ಇಲಾಖೆ ವತಿಯಿಂದ ಉಚಿತವಾಗಿ ಹಾಕಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.  
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿ, ತಾಲೂಕಿನಾದ್ಯಂತ ಪಲ್ಸ್ ಪೋಲಿಯೋ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಅಲೆಮಾರಿ ಹಾಗು ವಲಸೆ ಕಾರ್ಮಿಕ ಕುಟುಂಬಗಳನ್ನು ಗುರುತಿಸಿ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹಾಕಲಾಗುತ್ತಿದೆ. ಭಾರತ ದೇಶ ೨೦೧೧ರಲ್ಲಿಯೇ ಪೋಲಿಯೋ ಮುಕ್ತವಾಗಿದ್ದು, ಪಾಕಿಸ್ತಾನ, ಅಪ್ಘಾನಿಸ್ತಾನ ಸೇರಿದಂತೆ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಪೋಲಿಯೋ ಇನ್ನೂ ಜೀವಂತವಾಗಿದ್ದು, ಈ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ದೇಶದಲ್ಲಿ ಪಲ್ಸ್ ಪೋಲಿಯೋ ಹಾಕಲಾಗುತ್ತಿದೆ ಎಂದರು.
  ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಓ. ಮಲ್ಲಪ್ಪ, ರೇವತಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುಂದರ್‌ಬಾಬು, ರಮಾಕಾಂತ, ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್, ಕಾರ್ಯದರ್ಶಿ ಎಂ.ಎನ್ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Saturday, January 30, 2021

ಜ.೩೧ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

ಭದ್ರಾವತಿ, ಜ. ೩೦: ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕಿನಾದ್ಯಂತ ಜ.೩೧ರಂದು ಆರೋಗ್ಯ ಇಲಾಖೆ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಬಾರಿ ತಾಲೂಕಿನಲ್ಲಿ ೫ ವರ್ಷದೊಳಗಿನ ಒಟ್ಟು ೨೬,೯೦೮ ಮಕ್ಕಳನ್ನು ಗುರುತಿಸಲಾಗಿದೆ. ಈ ಪೈಕಿ ಗ್ರಾಮಾಂತರ ಪ್ರದೇಶದಲ್ಲಿ ೧೬,೧೩೫ ಮತ್ತು ನಗರ ಪ್ರದೇಶದಲ್ಲಿ ೧೦,೭೭೩ ಮಕ್ಕಳಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು ೧೦೦ ಮತ್ತು ನಗರ ಪ್ರದೇಶದಲ್ಲಿ ಒಟ್ಟು ೬೭ ಬೂತ್‌ಗಳಲ್ಲಿ ಪೋಲಿಯೋ ಹನಿ ಹಾಕಲಾಗುವುದು. ಒಟ್ಟು ೮ ಟ್ರಾನ್ಸಿಟ್ ತಂಡಗಳು ಕಾರ್ಯ ನಿರ್ವಹಿಸಲಿವೆ.
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ೮ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಕೋರಿದ್ದಾರೆ.

ಕೆಎಸ್‌ಆರ್‌ಟಿಸಿ ಘಟಕದಿಂದ ಮಣಿಪಾಲ್-ಉಡುಪಿ ನಡುವೆ ಬಸ್ ಸಂಚಾರ ಆರಂಭಿಸಿ

ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಭದ್ರಾವತಿ, ಜ. ೩೦: ನಗರದ ಭದ್ರಾವತಿ ಕೆಎಸ್‌ಆರ್‌ಟಿಸಿ ಘಟಕದಿಂದ ಮಣಿಪಾಲ್-ಉಡುಪಿ ನಡುವೆ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಆರೋಗ್ಯ ಸೌಲಭ್ಯ ಪಡೆದುಕೊಳ್ಳಲು ನಗರದಿಂದ ಮಣಿಪಾಲ್ ಆಸ್ಪತ್ರೆಗೆ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದು, ಅಲ್ಲದೆ ಅನಾರೋಗ್ಯಕ್ಕೆ ಒಳಗಾದವರ ಜೊತೆ ಸಹಾಯಕರು, ಕುಟುಂಬಸ್ಥರು ಸಹ ತೆರಳುತ್ತಿದ್ದಾರೆ.  ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅದರಲ್ಲೂ ಗ್ರಾಮೀಣ ಭಾಗದ ಜನರು ತೊಂದರೆ ಅನುಭವಿಸುವಂತಾಗಿದೆ.
ನಗರ ಹಾಗು ಗ್ರಾಮಾಂತರ ಭಾಗದಲ್ಲಿ ವಾಸಿಸುತ್ತಿರುವ ಹೆಚ್ಚಿನ ಜನರು ಕೂಲಿ ಕಾರ್ಮಿಕರು, ಬಡ ವರ್ಗದವರಾಗಿದ್ದು, ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಅಗತ್ಯವಾಗಿದೆ. ಭದ್ರಾವತಿ ಘಟಕದಿಂದ ಶಿವಮೊಗ್ಗ-ತೀರ್ಥಹಳ್ಳಿ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ, ಇದೆ ರೀತಿ ಶಿವಮೊಗ್ಗ-ಆಯನೂರು-ರಿಪ್ಪನ್‌ಪೇಟೆ-ಹುಂಚ-ಕೋಣಂದೂರು-ತೀರ್ಥಹಳ್ಳಿ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ ಹಾಗು ಎನ್.ಆರ್ ಪುರ-ಕೊಪ್ಪ-ಹರಿಹರಪುರ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ ಬಸ್ ಸಂಚಾರ ಆರಂಭಿಸುವಂತೆ ಈಗಾಗಲೇ ಹಲವು ಬಾರಿ ಶಾಸಕರು ಹಾಗು ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಕೆಎಸ್‌ಆರ್‌ಟಿಸಿ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮನವಿಗೆ ಪೂರಕವಾಗಿ ಸ್ಪಂದಿಸಿ ತಕ್ಷಣ ಬಸ್ ಸಂಚಾರ ಆರಂಭಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ವೇದಿಕೆ ಗೌರವಾಧ್ಯಕ್ಷ ಡಿ. ನಂಜಪ್ಪ, ಅಧ್ಯಕ್ಷ ಜಿ.ಟಿ ಬಸವರಾಜ್, ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹಮೂರ್ತಿ ಮತ್ತು ಖಜಾಂಚಿ ಕೆ.ಜೆ ಹನುಮಂತಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಂಪಿಎಂ ನಿವೃತ್ತ ಉದ್ಯೋಗಿ ಟಿ. ನಂಜಪ್ಪ ನಿಧನ

ಟಿ. ನಂಜಪ್ಪ(ಲಂಬೂ)
     ಭದ್ರಾವತಿ, ಜ. ೩೦: ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಉದ್ಯೋಗಿ, ಕಾಂಗ್ರೆಸ್ ಮುಖಂಡ ಟಿ. ನಂಜಪ್ಪ(ಲಂಬೂ)(೮೫) ಶನಿವಾರ ನಿಧನ ಹೊಂದಿದರು.
   ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಎಂಪಿಎಂ ಕಾರ್ಖಾನೆ ಎಲೆಕ್ಟ್ರಿಕಲ್ ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೈಸೂರು ಕಾಗದ ಕಾರ್ಖಾನೆ ನೌಕರರ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಆರಂಭದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಿವೃತ್ತಿ ನಂತರ ಜನ್ನಾಪುರದ ಸ್ವಂತ ಮನೆಯಲ್ಲಿ ವಾಸಿಸುತ್ತಿದ್ದರು.
   ಮೃತರ ನಿಧನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಸಿ ದಾಸೇಗೌಡ ಸೇರಿದಂತೆ ಎಂಪಿಎಂ ನಿವೃತ್ತ ಕಾರ್ಮಿಕರು, ಒಕ್ಕಲಿಗ ಸಮಾಜದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದೇವಾಂಗ ಅಭಿವೃದ್ದಿ ನಿಗಮ ಸ್ಥಾಪಿಸಿ ರು.೫೦೦ ಕೋ. ಅನುದಾನ ನೀಡಿ

ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ

ಭದ್ರಾವತಿಯಲ್ಲಿ ದೇವಾಂಗ ಅಭಿವೃದ್ದಿ ನಿಗಮ ಹೋರಾಟ ಸಮಿತಿ ವತಿಯಿಂದ ಶನಿವಾರ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಜ. ೩೦: ಶಿವನ ತ್ರಿನೇತ್ರದಿಂದ ಉದ್ಭವಿಸಿದ ಶ್ರೀ ದೇವಲ ದೇವಾಂಗ ಮಹರ್ಷಿಯವರು ತ್ರಿಮೂರ್ತಿಗಳಿಗೆ ಹಾಗು ಇತರೆ ದೇವತೆಗಳಿಗೆ ವಸ್ತ್ರವನ್ನು ನೇಯ್ದುಕೊಟ್ಟು ಮೂಲ ನೇಕಾರ ಅನಿಸಿಕೊಂಡಿದ್ದಾರೆ. ಮಾನ ಕಾಪಾಡುವ ದೇವಾಂಗ ಜನಾಂಗಕ್ಕೆ ಪ್ರಸ್ತುತ ಸರ್ಕಾರ ಯಾವುದೇ ರೀತಿಯ ಮೀಸಲಾತಿ ಕಲ್ಪಿಸದೆ ಮೂಲೆ ಗುಂಪಾಗಿಸಿದೆ ಎಂದು ದೇವಾಂಗ ಅಭಿವೃದ್ದಿ ನಿಗಮ ಹೋರಾಟ ಸಮಿತಿ ಅಧ್ಯಕ್ಷ ಧರ್ಮಪಾಲಕ್ಷ ಮತ್ತು ತಾಲೂಕು ದೇವಾಂಗ ಸಮಾಜದ ಅಧ್ಯಕ್ಷ ಎಂ. ಪ್ರಭಾಕರ ಆರೋಪಿಸಿದರು.
  ಅವರು ಶನಿವಾರ ದೇವಾಂಗ ಅಭಿವೃದ್ದಿ ನಿಗಮ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಕಾರ್ಯಕ್ರಮದಲ್ಲಿ ನೇತೃತ್ವವಹಿಸಿ ಮಾತನಾಡಿದರು.
    ಈ ಹಿಂದೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಕಾಲದಲ್ಲಿ ದೇವಾಂಗ ಸಮಾಜವನ್ನು '೨ಎ' ವರ್ಗಕ್ಕೆ ಸೇರಿಸಿ, ದೇವರಾಜ ಅರಸು ಅಭಿವೃದ್ಧಿ ನಿಗಮದ ಮೂಲಕ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಇತ್ತೀಚಿನ ಕೆಲವು ವರ್ಷಗಳಿಂದ ಈ ಸೌಲಭ್ಯಗಳನ್ನು ಪಡೆಯಲು ಸಮಾಜಕ್ಕೆ ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.
     ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಹಿಂದುಳಿದ ವರ್ಗಗಳ ಸಮಾಜಗಳ ಅಭಿವೃದ್ದಿಗೆ ಸಾಕಷ್ಟು ಕಾಳಜಿ ವಹಿಸಿದ್ದು, ಈಗಾಗಲೇ ಹಲವು ಹಿಂದುಳಿದ ವರ್ಗಗಳ ಸಮಾಜಗಳಿಗೆ ನಿಗಮ/ಮಂಡಳಿ/ ಪ್ರಾಧಿಕಾರಗಳನ್ನು ರಚನೆ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ದೇವಾಂಗ ಸಮಾಜಕ್ಕೂ ನಿಗಮ ರಚನೆ ಮಾಡುವ ಮೂಲಕ ರು. ೫೦೦ ಕೋ. ಅನುದಾನ ನೀಡಬೇಕು. ಮಹಾರಾಷ್ಟ್ರ ಸರ್ಕಾರ ವಿದ್ಯಾರ್ಥಿಗಳಿಗೆ ನೀಡಿದಂತೆ ಪ್ರತ್ಯೇಕವಾಗಿ ಶೇ.೨ರಷ್ಟು ಮೀಸಲಾತಿ ನೀಡುವುದು, ಶ್ರೀ ದೇವಲ ಮಹರ್ಷಿಗಳ ಜಯಂತಿಯನ್ನು ಸರ್ಕಾರದಿಂದ ಆಚರಿಸಬೇಕು, ಶ್ರೀ ದೇವಲ ಮಹರ್ಷಿ ಮತ್ತು ಆದ್ಯ ವಚನಕಾರ ಶ್ರೀ  ದೇವರ ದಾಸಿಮಯ್ಯನವರ ಪ್ರತಿಮೆಗಳನ್ನು ಬೆಂಗಳೂರು ಹಾಗು ದೇವಾಂಗ ಸಮಾಜದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಸ್ಥಾಪಿಸುವುದು, ಶ್ರೀ ದೇವರ ದಾಮಯ್ಯನವರ ಜನ್ಮ ಸ್ಥಳ ಅಭಿವೃದ್ಧಿಗೆ ಮುದನೂರು ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
   ಹೋರಾಟ ಸಮಿತಿ ಸಂಚಾಲಕ ಡಿ.ವಿ ವೇಣು, ಕಾರ್ಯದರ್ಶಿ ಡಿ. ನಾಗರಾಜಪ್ಪ, ದೇವಾಂಗ ಸಮಾಜದ ಕಾರ್ಯದರ್ಶಿ ಬಿ. ಆಂಜನೇಯ, ಪ್ರಮುಖರಾದ ಬಿ.ಕೆ ಚಂದ್ರಪ್ಪ, ಎಸ್.ಬಿ ನಿರಂಜನಮೂರ್ತಿ, ಹೊನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, January 29, 2021

ವಿವಿಧ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳ ಪರಿಶೀಲನಾ ಸಭೆ

ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ, ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ

ನಗರದ ವಿವಿಧ ಇಲಾಖೆಗಳ ವಿವಿಧ ಅನುದಾನಗಳಡಿಯಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ನಡೆಯಿತು.
   ಭದ್ರಾವತಿ, ಜ. ೨೯: ನಗರದ ವಿವಿಧ ಇಲಾಖೆಗಳ ವಿವಿಧ ಅನುದಾನಗಳಡಿಯಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆಯಿತು.
   ತಾಲೂಕು ಆಡಳಿತಕ್ಕೆ ಸಂಬಂಧಿಸಿದಂತೆ ಸರ್ಕಾರಿ ನಿವೇಶನಗಳ ಒಟ್ಟು ೨೩ ಎಕರೆ ಜಾಗವನ್ನು ಗುರುತಿಸಿ ಸರ್ವೆ ಮಾಡಿ ಗಡಿ ನಿಗದಿಪಡಿಸುವ ಸಂಬಂಧ ಕೈಗೊಂಡ ಕ್ರಮಗಳ ಕುರಿತು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್‌ರವರು ಸಭೆಗೆ ಮಾಹಿತಿ ನೀಡಿ, ನಗರಸಭೆ ವ್ಯಾಪ್ತಿಯ ತಿಮ್ಲಾಪುರ, ಬೊಮ್ಮನಕಟ್ಟೆ ಮತ್ತು ಉಜ್ಜನಿಪುರದಲ್ಲಿ ಸರ್ಕಾರಿ ಭೂಮಿಯನ್ನು ಗುರುತಿಸಲಾಗಿದೆ. ಈ ಬಾರಿ ಪೂರ್ಣ ಬಂದೋಬಸ್ತ್ ಮಾಡಿಕೊಂಡು ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಇದರಿಂದ ಆಕ್ರೋಶಗೊಂಡ ಶಾಸಕರು,  ನಮಗೆ ಬೇಕಾಗಿರುವುದು ಕೇವಲ ೨೩ ಎಕರೆ ಖಾಲಿ ಜಾಗ ಮಾತ್ರ. ಈ ಸಂಬಂಧ ಸುಮಾರು ಒಂದು ವರ್ಷದಿಂದ ಖಾಲಿ ಇರುವ ಸರ್ಕಾರಿ ಜಾಗ ಗುರುತಿಸುವಂತೆ ತಾಲೂಕು ಆಡಳಿತಕ್ಕೆ ತಿಳಿಸಲಾಗಿದೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ತಾಲೂಕು ಆಡಳಿತ ಮತ್ತು ಕಂದಾಯ ಇಲಾಖೆ ಸತ್ತು ಹೋಗಿರುವಂತೆ ಕಂಡು ಬರುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಾಣುತ್ತಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಗೊತ್ತಾಗುತ್ತಿಲ್ಲ. ಮುಂದಿನ ಒಂದು ವಾರದೊಳಗೆ ಜಾಗವನ್ನು ಗುರುತಿಸಿ ಸರ್ವೆ ಮಾಡಿ ಗಡಿ ನಿಗದಿಪಡಿಸಿ ಕಂದಾಯ ಇಲಾಖೆ ಸ್ವತ್ತು ಎಂದು ಫಲಕ ಹಾಕುವಂತೆ ಎಚ್ಚರಿಸಿದರು.  
   ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಹೊಸಮನೆ ಶಿವಾಜಿ ಸರ್ಕಲ್ ರಸ್ತೆ, ತಾಲೂಕು ಕಚೇರಿ ರಸ್ತೆ ಮತ್ತು ಹೊಸ ಸೇತುವೆ ರಸ್ತೆಗಳ ಅಭಿವೃದ್ಧಿ ಕಾಮಗಾರಿ, ಸೀಗೆಬಾಗಿಯಿಂದ ರಂಗಪ್ಪ ವೃತ್ತದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಬಿಳಕಿ ಕ್ರಾಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಮತ್ತು ಜಯಶ್ರೀ ಸರ್ಕಲ್ ರಸ್ತೆ ಮತ್ತು ವೇಲೂರು ಶೆಡ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಸಾರ್ವಜನಿಕರಿಂದ ಸಾಕಷ್ಟು ದೂರುಗಳಿಗೆ ಕೇಳಿ ಬರುತ್ತಿವೆ. ಜನರು ರಸ್ತೆ ಹಾಳಾಗಿರುವ ಸಂಬಂಧ ಪೌರಾಯುಕ್ತರನ್ನು ಪ್ರಶ್ನಿಸುತ್ತಿದ್ದಾರೆ. ಲೋಕೋಪಯೋಗಿ ಇಲಾಖೆಯವರು ಒಂದು ವರ್ಷ ಕಳೆದರೂ ಸಹ  ಒಂದು ಸಾಮಾನ್ಯ ಸೀಮೆಂಟ್ ರಸ್ತೆ ನಿರ್ಮಾಣ ಮಾಡಿಲ್ಲ. ಶಿವಾಜಿ ಸರ್ಕಲ್‌ನಿಂದ ಕಬಳಿಕಟ್ಟೆ ವರೆಗೆ ರಸ್ತೆಯ ಅಕ್ಕಪಕ್ಕದಲ್ಲಿರುವ ಮರಗಳನ್ನು ಕಡಿತಲೆಗೊಳಿಸಿಲ್ಲ, ವಿದ್ಯುತ್ ಕಂಬಗಳನ್ನು ತೆರವುಗೊಳಿಸಿಲ್ಲ. ಕೆಇಬಿ ಇಲಾಖೆ ಒಂದು ದರಿದ್ರ ಇಲಾಖೆಯಾಗಿದೆ. ವಿದ್ಯುತ್ ಬಿಲ್ ಕಟ್ಟಲಿಲ್ಲ ಎಂದರೆ ವಿದ್ಯುತ್ ಕಡಿತ ಮಾಡುತ್ತಾರೆ. ಆದರೆ ಅವರು ಮಾಡಬೇಕಾಗಿರುವ ಕೆಲಸ ಮಾತ್ರ ಸರಿಯಾಗಿ ಮಾಡುವುದಿಲ್ಲ. ತಕ್ಷಣ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.  
    ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸಂಬಂಧಿಸಿದಂತೆ ಅಮೃತ್ ಯೋಜನೆಯಡಿ ಕೈಗೊಳ್ಳುತ್ತಿರುವ ಕುಡಿಯುವ ನೀರಿನ ಅಭಿವೃದ್ಧಿ ಕಾಮಗಾರಿಗಳು ಹಾಗು ಒಳಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಒಳಚರಂಡಿ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಕಾಮಗಾರಿಗೆ ಅಗತ್ಯವಿರುವ ಸೀಮೆಂಟ್, ಜಲ್ಲಿಕಲ್ಲು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಸರಿಯಾಗಿ ಪೂರೈಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಕಾಮಗಾರಿ ಸಮರ್ಪಕವಾಗಿ ನಡೆಸುವ ಮೂಲಕ ಶೀಘ್ರವಾಗಿ ಮುಕ್ತಾಯಗೊಳಿಸಬೇಕೆಂದರು.
     ಈ ನಡುವೆ ಶಾಸಕರು ಕೆಎಸ್‌ಆರ್‌ಟಿಸಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇಲಾಖೆಗೆ ಹಣ ಮುಖ್ಯ ಅಲ್ಲ. ಜನರಿಗೆ ಸೇವೆ ಕೊಡುವುದು ಮುಖ್ಯ. ಆದಾಯ ಬರುವುದಿಲ್ಲ ಎಂದು ಅಗತ್ಯವಿರುವ ಕಡೆ ಬಸ್‌ಗಳನ್ನು ಬಿಡದಿರುವುದು ಸರಿಯಲ್ಲ. ಶಾಲೆಗಳು ಆರಂಭಗೊಂಡು ಹಲವು ದಿನಗಳು ಕಳೆದಿವೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡಬೇಕು. ವಿದ್ಯಾರ್ಥಿಗಳು ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಪ್ರತಿಭಟನೆ ಮಾಡಿದ ನಂತರ ಇಲಾಖೆಗೆ ಜ್ಞಾನೋದಯವಾಗಿದೆ. ಇಲಾಖೆ ಅಧಿಕಾರಿಗಳು ಇದಕ್ಕೂ ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಸಾರಿಗೆ ವ್ಯವಸ್ಥೆಯನ್ನು ಸೂಕ್ತ ರೀತಿ ಕಲ್ಪಿಸಿಕೊಡಬೇಕೆಂದು ಅಸಮಾಧಾನ ವ್ಯಕ್ತಪಡಿಸಿದರು.
     ಉಳಿದಂತೆ ನಗರಸಭೆವತಿಯಿಂದ ಕೈಗೊಳ್ಳಲಾಗುತ್ತಿರುವ ಕೆಎಂಆರಪಿ ಯೋಜನೆಯಡಿ ರು. ೨೧ ಕೋ. ಅನುದಾನದದ ಒಳಚರಂಡಿ ಅಭಿವೃದ್ಧಿ ಕಾಮಗಾರಿ, ಖಾಸಗಿ ಬಸ್ ನಿಲ್ದಾಣದ ಅಭಿವೃದ್ಧಿ, ನಗರದ ವಿವಿಧ ವೃತ್ತಗಳ ಅಭಿವೃದಧಿ, ನಗರಸಭೆ ಕಛೇರಿಯ ನೂತನ ಕಟ್ಟಡ, ಸ್ಟ್ರೀಟ್ ವೆಂಡಿಂಗ್ ಜೋನ್ ಕಾಮಗಾರಿ, ಮೀನು ಮಾರುಕಟ್ಟೆ ಅಭಿವೃದ್ಧಿ, ಬಸವೇಶ್ವರ ವೃತ್ತದ ಅಭಿವೃದ್ಧಿ, ನಗರೋತ್ಥಾನ ಹಂತ-೩ರ ಉಳಿಕೆ ಅನುದಾನದ ಕಾಮಗಾರಿಗಳು ಮತ್ತು ವಸತಿ ಯೋಜನೆಗಳ ಪ್ರಗತಿ ಹಾಗು ಕೆಆರ್‌ಐಡಿಎಲ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮತ್ತು ಮೆಸ್ಕಾಂ ನಗರ ಉಪ ವಿಭಾಗದ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
     ಸಭೆಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ವಲಯ ಅರಣ್ಯಾಧಿಕಾರಿ ಮಂಜುನಾಥ್, ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಶರತ್ಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.