Tuesday, February 2, 2021

ಮಾದಿಗರ ಚೈತನ್ಯ ರಥ ಯಾತ್ರೆ ಫೆ.೩ರಂದು ನಗರಕ್ಕೆ ಆಗಮನ

ಭದ್ರಾವತಿ, ಜ. ೨: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ೨ನೇ ಹಂತದ ಮಾದಿಗರ ಜೈತನ್ಯ ರಥ ಯಾತ್ರೆ ಫೆ.೩ರಂದು ನಗರಕ್ಕೆ ಆಗಮಿಸಲಿದೆ.
      ಸಂಜೆ ೪ ಗಂಟೆಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತಕ್ಕೆ ರಥ ಯಾತ್ರೆ ಆಗಮಿಸಲಿದ್ದು, ತಾಲೂಕು ಮಾದಿಗ ಒಕ್ಕೂಟದಿಂದ ಈ ರಥ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಈ ಹಿನ್ನಲೆಯಲ್ಲಿ ತಾಲೂಕಿನ ಮಾದಿಗ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಒಕ್ಕೂಟದ ಅಧ್ಯಕ್ಷ ಎಂ. ಶಿವಕುಮಾರ್ ಕೋರಿದ್ದಾರೆ.

ಈ ಬಾರಿ ಬಜೆಟ್‌ನಲ್ಲಿ ಆದಾಯ ಹೆಚ್ಚಿಸಿಕೊಳ್ಳುವ ಯೋಜನೆಗಳನ್ನು ರೂಪಿಸಿಕೊಳ್ಳಿ

ಪೂರ್ವಭಾವಿ ಸಭೆಯಲ್ಲಿ ವಿವಿಧ-ಸಂಸ್ಥೆಗಳ ಮುಖಂಡರಿಂದ ಸಲಹೆ-ಸೂಚನೆ


   ಭದ್ರಾವತಿ, ಫೆ. ೨: ನಗರಸಭೆಯಲ್ಲಿ ಆದಾಯ ಬರುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ನಗರವನ್ನು ಎಲ್ಲಾ ರೀತಿಯಿಂದಲೂ ಅಭಿವೃದ್ಧಿಗೊಳಿಸಲು ಪೂರಕವಾದ ಬಜೆಟ್ ಈ ಬಾರಿ ಸಿದ್ದಪಡಿಸಬೇಕೆಂದು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಲಹೆ ವ್ಯಕ್ತಪಡಿಸಿದರು.
     ಸಭೆ ಆರಂಭದಲ್ಲಿ ಮಾತನಾಡಿದ ನಗರಸಭೆ ಲೆಕ್ಕಾಧೀಕ್ಷಕ ಸೈಯದ್ ಮಹಮೂದ್ ಆಲಿ ಮಾತನಾಡಿ, ಪ್ರತಿ ಬಾರಿ ಸಭೆಯಲ್ಲಿ ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೂಕ್ತ-ಸಲಹೆಗಳನ್ನು ನೀಡುವ ಬಜೆಟ್ ಯಶಸ್ವಿಗೆ ಸಹಕರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿ ಸಹ ಸರ್ಕಾರ ಹಲವು ಅನುದಾನಗಳನ್ನು ಹಾಗು ನಗರಸಭೆ ಆದಾಯಗಳನ್ನು ನಿರೀಕ್ಷಿಸಿ ಬಜೆಟ್ ಸಿದ್ದಪಡಿಸಬೇಕಾಗಿದೆ.  ಪ್ರಸ್ತುತ ನಗರಸಭೆಗೆ ಬರುತ್ತಿರುವ ಆದಾಯಗಳಲ್ಲಿ ಇಳಿಮುಖವಾಗುತ್ತಿದೆ. ಪ್ರಮುಖವಾಗಿ ನೀರಿನ ಶುಲ್ಕ ವಸೂಲಾತಿ ಈ ಬಾರಿ ಶೇ.೫೦ರಷ್ಟು ಮಾತ್ರ ನಡೆದಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಸಹ ಸಹಕರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಬೇಕೆಂದರು.
    ನಂತರ ಮಾತನಾಡಿದ ಪುರಸಭೆ ಮಾಜಿ ಉಪಾಧ್ಯಕ್ಷ ಟಿ. ವೆಂಕಟೇಶ್, ಜನಸಂಖ್ಯೆಗೆ ತಕ್ಕಂತೆ ೧೯೯೫ರಲ್ಲಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಯಿತು. ಆದರೆ ನಿರೀಕ್ಷೆಯಂತೆ ಪ್ರಸ್ತುತ ನಗರಸಭೆ ಬೆಳವಣಿಗೆ ಹೊಂದಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ನಗರಸಭೆ ವತಿಯಿಂದ ಕೇವಲ ವೆಚ್ಚ ಮಾಡಲಾಗುತ್ತಿದೆ ಹೊರತು ಆದಾಯ ಬರುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿಕೊಂಡಿಲ್ಲ. ನಗರಸಭೆಗೆ ಯಾವುದೇ ರೀತಿ ಆದಾಯ ಬರದಿರುವ ಪ್ರದೇಶಗಳನ್ನು ಸಹ ಚುನಾವಣೆಯನ್ನು ಆಧಾರವಾಗಿಟ್ಟುಕೊಂಡು ಅನಗತ್ಯವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಮುಖ್ಯವಾಗಿ ಎಂಪಿಎಂ ಕಾರ್ಖಾನೆ ಸ್ಥಗಿತಗೊಂಡು ೫ ವರ್ಷಗಳು ಕಳೆದಿವೆ. ಕಾರ್ಮಿಕ ಕುಟುಂಬಗಳು ಸಹ ಬೇರೆಡೆಗೆ ಸ್ಥಳಾಂತರಗೊಂಡಿವೆ. ಕಾರ್ಖಾನೆ ಪುನಃ ಆರಂಭಗೊಳ್ಳುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಅಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಯಾವುದೇ ಪ್ರಯೋಜನವಾಗುದಿಲ್ಲ. ಅಲ್ಲದೆ ನಗರಸಭೆಗೆ ಯಾವುದೇ ಆದಾಯ ಸಹ ಬರುವುದಿಲ್ಲ ಎಂದರು.
    ನಗರಸಭೆ ಹೊಂದಿರುವ ಆಸ್ತಿಗಳಿಂದ ಆದಾಯ ಹೆಚ್ಚಿಸಿಕೊಳ್ಳಬೇಕಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಖಾಲಿ ನಿವೇಶನಗಳು ಸುಮಾರು ೫೦-೬೦ ವರ್ಷಗಳಿಂದ ಪಾಳುಬಿದ್ದಿವೆ. ಈ ಜಾಗಗಳನ್ನು ಖಾಲಿ ಬಿಡುವ ಬದಲು ಯಾವುದಾದರೂ ಕಟ್ಟಡಗಳನ್ನು ನಿರ್ಮಿಸಿದ್ದಲ್ಲಿ ಆದಾಯ ಬರಲಿದೆ. ನಗರದಲ್ಲಿ ಸುಮಾರು ೧೦ವರ್ಷಗಳ ಹಿಂದೆ ಆರಂಭಗೊಂಡಿರುವ ಒಳಚರಂಡಿ ಕಾಮಗಾರಿ ಇಂದಿಗೂ ಮುಕ್ತಾಯಗೊಂಡಿಲ್ಲ. ಕಳೆದ ೧೦ ವರ್ಷಗಳಿಂದ ಈ ಯೋಜನೆಯಲ್ಲಿ ಯಾವುದೇ ಆದಾಯ ನಿರೀಕ್ಷಿಸದೆ ಕೇವಲ ವೆಚ್ಚವನ್ನು ಮಾತ್ರ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಕಾಮಗಾರಿ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.


ಭದ್ರಾವತಿ ನಗರಸಭೆ ಬಜೆಟ್ ಪೂರ್ವಭಾವಿ ಸಭೆ ಮಂಗಳವಾರ ಪೌರಾಯುಕ್ತ ಮನೋಹರ್ ನೇತೃತ್ವದಲ್ಲಿ ನಡೆಯಿತು.
   ಪುರಸಭೆ ಮಾಜಿ ಸದಸ್ಯ, ಪತ್ರಕರ್ತ ಎನ್. ಬಾಬು ಮಾತನಾಡಿ, ನಗರಸಭೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ನಗರಸಭೆಯಲ್ಲಿ ನೀರಿನ ಕರ ವಸೂಲಿ ಹಾಗು ಕಂದಾಯ ಪಾವತಿಗೆ ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಬೇಕು. ಜನರು ಶುಲ್ಕ ಪಾವತಿಸಿ ರಶೀದಿ ಪಡೆದಿದ್ದರೂ ಸಹ ಪಾವತಿ ಮಾಹಿತಿ ಖಾತೆಯಲ್ಲಿ ಜಮಾ ಆಗುತ್ತಿಲ್ಲ. ಇದರಿಂದಾಗಿ ಸಮಸ್ಯೆ ಎದುರಾಗುತ್ತಿದೆ. ಖಾತೆಗೆ ಹಣ ಜಮಾ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ಸ್ವೀಕೃತಗೊಂಡ ಹಣದ ಪಾವತಿಗಾಗಿ ಪ್ರತ್ಯೇಕ ವಿಭಾಗ ತೆರೆಯುವುದು ಸೂಕ್ತವಾಗಿದೆ ಎಂದು ಸಲಹೆ ನೀಡಿದರು.
     ನ್ಯಾಯವಾದಿ ಕೆ.ಎಸ್ ಸುಧೀಂದ್ರ ಮಾತನಾಡಿ, ತಾಲೂಕು ಕಛೇರಿ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಅನಗ್ಯತವಾಗಿ ಈ ರಸ್ತೆಯಲ್ಲಿದ್ದ ಮರಗಳನ್ನು ಕಡಿತಲೆ ಮಾಡಲಾಗಿದೆ. ಯಾರನ್ನೋ ರಕ್ಷಿಸಲು ಮತ್ತ್ಯಾರನ್ನೋ ಬಲಿಕೊಡಲು ಹುನ್ನಾರ ನಡೆಸಲಾಗುತ್ತಿದೆ. ಈ ಕುರಿತು ನಗರಸಭೆಗೆ ಹಲವು ಬಾರಿ ಒತ್ತಾಯಿಸಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ  ಅಭಿವೃದ್ಧಿಯಲ್ಲಿ ತಾರತಮ್ಯ ಮಾಡದಿರುವುದು ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.  
    ನರಸಿಂಹಚಾರ್ ಮಾತನಾಡಿ, ಸಿದ್ದರೂಢನಗರದಲ್ಲಿ ಹಲವಾರು ವರ್ಷಗಳಿಂದ ಕುಡಿಯುವ ನೀರಿ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಬಗ್ಗೆ ಗಮನ ಹರಿಸಬೇಕೆಂದರು. ಇದೆ ರೀತಿ ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷ ಎಲ್.ವಿ ರುದ್ರಪ್ಪ, ಜಹೀರ್ ಜಾನ್, ಬಿ. ಗಂಗಾಧರ್, ಬಸವರಾಜಯ್ಯ, ಹರೀಶ್ ಬಾಬು ಸೇರಿದಂತೆ ಇನ್ನಿತರರು ಸಲಹೆ ಸೂಚನೆಗಳನ್ನು ನೀಡಿದರು.  
   ಸಭೆಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ಇಂಜಿನಿಯರ್ ರಂಗರಾಜಪುರೆ, ಪರಿಸರ ಅಭಿಯಂತರ ಪ್ರಭಾಕರ್, ಕಂದಾಯಾಧಿಕಾರಿ ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



Monday, February 1, 2021

೩ ವರ್ಷದ ಮಗುವಿನ ಬುದ್ದಿಮತ್ತೆಗೆ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ಪ್ರಶಸ್ತಿ

ಬೆರಗಾದ ಶಾಸಕ ಬಿ.ಕೆ ಸಂಗಮೇಶ್ವರ್, ಮಗುವಿನ ಮುಂದಿನ ವಿದ್ಯಾಭ್ಯಾಸಕ್ಕೆ ನೆರವಿನ ಭರವಸೆ

 ಭದ್ರಾವತಿ ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಪ್ರದೀಪ್ ಮತ್ತು ಸಿಂಧುರವರ ೩ ವರ್ಷದ ಹೆಣ್ಣು ಮಗು ಪ್ರತೀಕ್ಷ ಬುದ್ದಿಮತ್ತೆ ಸಾಧನೆಗೆ ಲಭಿಸಿರುವ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ವಿತರಿಸಿದರು.
ಭದ್ರಾವತಿ, ಫೆ. ೧: ಕೆಲವು ಮಕ್ಕಳಿಗೆ ೩ ವರ್ಷ ಕಳೆದರೂ ಸಹ ಸರಿಯಾಗಿ ಮಾತು ಬರುವುದಿಲ್ಲ. ಇನ್ನೂ ಕೆಲವು ಮಕ್ಕಳಿಗೆ ದಿನದ ಘಟನೆಗಳನ್ನು ನೆನಪಿನಲ್ಲಿಟ್ಟುಕೊಳ್ಳುವಷ್ಟು ಬುದ್ದಿಮತ್ತೆ  ಸಹ ಇರುವುದಿಲ್ಲ. ಆದರೆ ಇಲ್ಲೊಂದು ೩ ವರ್ಷದ ಮಗುವಿನ ಬುದ್ದಿಮತ್ತೆ ಎಲ್ಲರನ್ನು ಬೆರಗುಗೊಳಿಸಿದೆ. ಹಲವು ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೊಂಡಿರುವ ಈ ಮಗುವಿನ ಸಾಧನೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-೨೦೨೧ ಪ್ರಶಸ್ತಿ ಲಭಿಸಿದೆ.

ಎಲ್ಲಾ ಪೋಷಕರು ಸಹ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಕೇವಲ ೩ ವರ್ಷದ ಮಗುವಿನ ಸಾಧನೆ ನಿಜಕ್ಕೂ ಶ್ಲಾಘನೀಯವಾಗಿದ್ದು, ಈ ಮಗು ಇತರೆ ಮಕ್ಕಳಿಗೆ ಮಾದರಿಯಾಗಿದೆ. ಈ ಮಗುವಿನ ಮುಂದಿನ ವಿದ್ಯಾಭ್ಯಾಸಕ್ಕೆ ಎಲ್ಲಾ ರೀತಿಯ ನೆರವು ನೀಡುತ್ತೇನೆ.
    - ಬಿ.ಕೆ ಸಂಗಮೇಶ್ವರ್, ಶಾಸಕರು, ಭದ್ರಾವತಿ.


ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಪ್ರದೀಪ್ ಮತ್ತು ಸಿಂಧುರವರ ೩ ವರ್ಷದ ಹೆಣ್ಣು ಮಗು ಪ್ರತೀಕ್ಷ ಸಾಧನೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಬೆರಗುಗೊಂಡಿದ್ದಾರೆ. ರಾಷ್ಟ್ರಗೀತೆ, ವಾರದ ೭ ದಿನಗಳ ಹೆಸರು, ೧೨ ತಿಂಗಳುಗಳ ಹೆಸರು, ೪ ರಾಷ್ಟ್ರೀಯ ಚಿಹ್ನೆಗಳು ಮತ್ತು ೧೪ ವಾಹನಗಳು ಹಾಗು ಮನುಷ್ಯನ ದೇಹದ ಅಂಗಾಂಗಗಳ ಗುರುತಿಸುವಿಕೆ, ೯ ರಾಷ್ಟ್ರೀಯ ಆಟಗಳ ಹೆಸರು ಹೀಗೆ ಹಲವು ವಿಷಯಗಳು ಕೇಳಿದ ತಕ್ಷಣ ಪಟ ಪಟನೆ ಪಟಾಕಿಯಂತೆ ಹೊರ ಬರುತ್ತವೆ ಈ ಮಗುವಿನ ಜ್ಞಾನ ಭಂಡಾರದಿಂದ.
ಉಕ್ಕುಂದ ಗ್ರಾಮ ಅರಣ್ಯ ವ್ಯಾಪ್ತಿಯ ಗ್ರಾಮೀಣ ಪ್ರದೇಶವಾಗಿದ್ದು, ನಗರ ಪ್ರದೇಶದಿಂದ ಸುಮಾರು ೧೦ ಕಿ.ಮೀ ದೂರದಲ್ಲಿದೆ. ಈ ಗ್ರಾಮಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಸಹ ಇಲ್ಲ. ಆನೆ, ಕರಡಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಯಿಂದ ಸದಾ ಇಲ್ಲಿನ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ. ಈ ಗ್ರಾಮದಲ್ಲಿಯೇ ಹುಟ್ಟಿ ಬೆಳೆದಿರುವ ತಂದೆ ಪ್ರದೀಪ್ ಪದವಿ ಪೂರೈಸಿದ್ದು, ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆಯಲ್ಲಿ ತೊಡಗಿದ್ದಾರೆ. ಉಳಿದಂತೆ ಪತ್ನಿ ಮನೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ಇಬ್ಬರು ಹೆಣ್ಣು ಮಕ್ಕಳು, ತಾಯಿಯೊಂದಿಗೆ ಬದುಕು ಸಾಗಿಸುತ್ತಿದ್ದಾರೆ. ಒಟ್ಟು ೫ ಜನರನ್ನು ಹೊಂದಿರುವ ಕುಟುಂಬಕ್ಕೆ ಮನೆ ಮನೆಗೆ ಹಾಲು ವಿತರಣೆ ಹಾಗು ಕೂಲಿ ಕೆಲಸವೇ ಆಧಾರವಾಗಿದೆ.

 ಮಗುವಿನ ಸಾಧನೆಯಿಂದ ಗ್ರಾಮಕ್ಕೆ ಮತ್ತಷ್ಟು ಹಿರಿಮೆ ಬಂದಿದ್ದು, ಬಾಲ್ಯದಿಂದಲೂ ಒಡನಾಟ ಹೊಂದಿರುವ ತಂದೆ ಪ್ರದೀಪ್ ಪದವಿ ಓದಿದ್ದರೂ ಸಹ ಕೂಲಿ ಕೆಲಸ ಮಾಡುವ ಮೂಲಕ ಗ್ರಾಮದಲ್ಲಿಯೇ ಉಳಿದುಕೊಂಡಿದ್ದಾರೆ. ಈ ಬಡ ಕುಟುಂಬಕ್ಕೆ ಹೆಚ್ಚಿನ ನೆರವಿನ ಅಗತ್ಯವಿದೆ.
                     - ಶಿವಕುಮಾರ್, ಗ್ರಾಮಸ್ಥ ಹಾಗು ಸಾಮಾಜಿಕ ಹೋರಾಟಗಾರ, ಉಕ್ಕುಂದ.

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿಗೆ ಭಾಜನಳಾಗಿರುವ ಪ್ರತೀಕ್ಷಳ ಮುಂದಿನ ವಿದ್ಯಾಭ್ಯಾಸ ಪೋಷಕರಿಗೆ ದೊಡ್ಡ ಸವಾಲಿನ ಕೆಲಸವಾಗಿದೆ. ಈ ಮಗುವಿನ ಸಾಧನೆ  ಗ್ರಾಮದಲ್ಲಿ ಹಬ್ಬದ ಸಂಭ್ರಮವನ್ನುಂಟು ಮಾಡಿದೆ. ಕೆಲವು ದಿನಗಳ ಹಿಂದೆಯೇ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಪೋಷಕರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮಾಹಿತಿ ನೀಡಿತ್ತು. ಇದೀಗ ಪದಕ ಮತ್ತು ಪ್ರಶಸ್ತಿ ಪತ್ರ ಲಭಿಸಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಮಗುವಿಗೆ ಪದಕ ಮತ್ತು ಪ್ರಶಸ್ತಿ ಪದಕ ವಿತರಿಸಿದರು.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಹಜರತ್ ಸೈಯದ್ ಸಾದತ್ ಷಾ ಖಾದ್ರಿ ದರ್ಗಾ ವತಿಯಿಂದ ಉಚಿತ ಅಂಬ್ಯುಲೆನ್ಸ್ ಸೇವೆ

ಅಂಬ್ಯುಲೆನ್ಸ್ ಜೊತೆಗೆ ೧೧೨ ವಾಹನ ಸದುಪಯೋಗಕ್ಕೆ ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಕರೆ

ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಹಜರತ್ ಸೈಯದ್ ಸಾದತ್ ಷಾ ಖಾದ್ರಿ ದರ್ಗಾ ಕಮಿಟಿ ವತಿಯಿಂದ ಸಾಮಾಜಿಕ ಸೇವಾ ಯೋಜನೆಯಡಿ ಉಚಿತವಾಗಿ 'ತುರ್ತು ಅಂಬ್ಯುಲೆನ್ಸ್ ಸೇವೆಗೆ' ಸೋಮವಾರ ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಚಾಲನೆ ನೀಡಿದರು.  
   ಭದ್ರಾವತಿ, ಫೆ. ೧: ದುರ್ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ತುರ್ತು ಸೇವೆಗಳಿಗೆ ಅಂಬ್ಯುಲೆನ್ಸ್‌ಗಳು ಅಗತ್ಯವಾಗಿದ್ದು, ಸಾರ್ವಜನಿಕರು ಉಚಿತ ಅಂಬ್ಯುಲೆನ್ಸ್ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಹೇಳಿದರು.     
   ಅವರು ಸೋಮವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಹಜರತ್ ಸೈಯದ್ ಸಾದತ್ ಷಾ ಖಾದ್ರಿ ದರ್ಗಾ ಕಮಿಟಿ ವತಿಯಿಂದ ಸಾಮಾಜಿಕ ಸೇವಾ ಯೋಜನೆಯಡಿ ಉಚಿತವಾಗಿ 'ತುರ್ತು ಅಂಬ್ಯುಲೆನ್ಸ್ ಸೇವೆಗೆ' ಚಾಲನೆ ನೀಡಿ ಮಾತನಾಡಿದರು.
     ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಅಂಬ್ಯುಲೆನ್ಸ್‌ಗಳ ಸೇವೆ ಅನಿವಾರ್ಯವಾಗಿದೆ. ಕಮಿಟಿ ವತಿಯಿಂದ ಕೈಗೊಂಡಿರುವ ಕಾರ್ಯ ಅಭಿನಂದನಾರ್ಹವಾಗಿದ್ದು, ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.
ಪೊಲೀಸ್ ಇಲಾಖೆ ವತಿಯಿಂದ ಸಹ ತುರ್ತು ವಾಹನ ಸೌಲಭ್ಯ:
    ಪೊಲೀಸ್ ಇಲಾಖೆ ಸಹ ಎಲ್ಲಾ ರೀತಿಯ ತುರ್ತು ಸಂದರ್ಭಗಳಿಗೆ ನೆರವಾಗುವಂತೆ ನೂತನವಾಗಿ ೧೧೨ ವಾಹನ ಸೇವೆಗೆ ಚಾಲನೆ ನೀಡಿದೆ. ಪ್ರಸ್ತುತ ಭದ್ರಾವತಿ ತಾಲೂಕಿನಲ್ಲಿ ನಗರ, ಗ್ರಾಮಾಂತರ ಹಾಗು ಹೊಳೆಹೊನ್ನೂರು ಭಾಗ ಒಟ್ಟು ೩ ವಾಹನಗಳನ್ನು ಮೀಸಲಿಡಲಾಗಿದೆ. ಈ ವಾಹನಗಳು ದಿನದ ೨೪ ಗಂಟೆ ಕಾರ್ಯ ನಿರ್ವಹಿಸಲಿದೆ. ಯಾವುದೇ ರೀತಿಯ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ೧೧೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದರು.
    ನಗರಸಭೆ ಪೌರಾಯುಕ್ತ ಮನೋಹರ್ ಮಾತನಾಡಿ, ನಗರಸಭೆ ವತಿಯಿಂದ ಕಮಿಟಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಬದ್ದವಾಗಿದ್ದೇನೆ. ಈಗಾಗಲೇ ವಿವಿಧ ಕಾಮಗಾರಿಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಹಜರತ್ ಸೈಯದ್ ಸಾದತ್ ಷಾ ಖಾದ್ರಿ ದರ್ಗಾ ಧರ್ಮಗುರುಗಳು ಕಾರ್ಯಕ್ರಮ ನೇತೃತ್ವ ವಹಿಸಿದ್ದರು. ಕಮಿಟಿ ಅಧ್ಯಕ್ಷ ಮುಕ್ರಂ ಖಾನ್ ಹಾಗು ಪದಾಧಿಕಾರಿಗಳು ಮತ್ತು ಮುಸ್ಲಿಂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Sunday, January 31, 2021

ಬಸವೇಶ್ವರ ವೃತ್ತದಲ್ಲಿ ೧೨ ಅಡಿ ನಂದಿ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ

ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ೧೨ ಅಡಿ ಎತ್ತರದ ನಂದಿ ಪ್ರತಿಮೆ(ಬಸವಣ್ಣ) ನಿರ್ಮಾಣಕ್ಕೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ ಭೂಮಿ ಪೂಜೆ ನೆರವೇರಿಸಿದರು.
   ಭದ್ರಾವತಿ, ಜ. ೩೧: ಹಳೇನಗರದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ೧೨ ಅಡಿ ಎತ್ತರದ ನಂದಿ ಪ್ರತಿಮೆ(ಬಸವಣ್ಣ) ನಿರ್ಮಾಣಕ್ಕೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ ಭೂಮಿ ಪೂಜೆ ನೆರವೇರಿಸಿದರು.
   ಬಸವೇಶ್ವರ ವೃತ್ತವನ್ನು ಸಂಪೂರ್ಣವಾಗಿ ಆಧುನೀಕರಣಗೊಳಿಸಿ ಶಿಥಿಲಗೊಂಡಿರುವ ಪ್ರತಿಮೆಯನ್ನು ತೆರವುಗೊಳಿಸಿ ಹೊಸ ಪ್ರತಿಮೆ ನಿರ್ಮಾಣ ಮಾಡುವಂತೆ ಹಲವು ವರ್ಷಗಳಿಂದ ಬೇಡಿಕೆ ಇದ್ದು, ಈ ಹಿನ್ನಲೆಯಲ್ಲಿ ಶಾಸಕರು ಭೂಮಿ ಪೂಜೆ ನೆರವೇರಿಸಿದರು.
  ಪ್ರಮುಖರಾದ ಬಿ.ಎಸ್ ಗಣೇಶ್, ಪರಶುರಾಮ್, ಮಹೇಶ್, ರಾಜು, ರಮಾಕಾಂತ, ಹಾಲೇಶ್, ರವಿಕುಮಾರ್, ರೇವಣ್ಣ, ಗುರುರಾಜ್, ಶಿವಾನಂದ್, ಬಿ.ಪಿ ರಾಘವೇಂದ್ರ, ಅಣ್ಣೋಜಿರಾವ್, ಗುತ್ತಿಗೆದಾರ ಬಾಲಾಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಫೆ.೨೭, ೨೮ರಂದು ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಮಾದರಿ ಪಂದ್ಯಾವಳಿ

ಫೆ.೨೭, ೨೮ರಂದು ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಮಾದರಿ ಪಂದ್ಯಾವಳಿ ಭದ್ರಾವತಿಯಲ್ಲಿ ಆಯೋಜಿಸಿರುವ ಕುರಿತು ಅಂತರಾಷ್ಟ್ರೀಯ ಕಬಡ್ಡಿ ಆಟಗಾರರಾದ ಕೃಷ್ಣೇಗೌಡ ಮತ್ತು ಎಚ್.ಆರ್ ರಂಗನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
   ಭದ್ರಾವತಿ, ಜ. ೩೧: ತಾಲೂಕಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಭದ್ರಾ ಯೂತ್ ಕಬಡ್ಡಿ(ಬಿವೈಕೆ) ವತಿಯಿಂದ ಕರ್ನಾಟಕ ರಾಜ್ಯ ಅಮೆಚೂರ್ ಅಸೋಸಿಯೇಷನ್ ಹಾಗು ಜಿಲ್ಲಾ ಅಮೆಚೂರ್ ಅಸೋಸಿಯೇಷನ್ ಮತ್ತು ಶಾಸಕ ಬಿ.ಕೆ ಬಿ.ಕೆ ಸಂಗಮೇಶ್ವರ್‌ರವರ ಸಹಕಾರದೊಂದಿಗೆ ಫೆ. ೨೭ ಮತ್ತು ೨೮ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ (ಮ್ಯಾಟ್) ಮಾದರಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಅಂತರಾಷ್ಟ್ರೀಯ ಕಬಡ್ಡಿ ಆಟಗಾರರಾದ ಕೃಷ್ಣೇಗೌಡ ಮತ್ತು ಎಚ್.ಆರ್ ರಂಗನಾಥ್ ತಿಳಿಸಿದರು.
    ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿ ರಾಷ್ಟ್ರ ಮತ್ತು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಕೀರ್ತಿ ತಂದಿರುವ ಕ್ರೀಡಾಪಟುಗಳಿದ್ದು, ಕಬಡ್ಡಿ ಕ್ರೀಡೆ ತನ್ನದೇ ಆದ ಹಿರಿಮೆಯನ್ನು ಹೊಂದಿದೆ.  ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.
    ಈಗಾಗಲೇ ಡಿ.೨೭ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಪಟುಗಳ ಆಯ್ಕೆ ನಡೆಸಲಾಗಿದೆ. ೮ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ.  ಮೊದಲ ೪ ವಿಜೇತ ತಂಡಗಳಿಗೆ ನಗದು ಬಹುಮಾನ ಮತ್ತು ಟ್ರೋಪಿಗಳನ್ನು ವಿತರಿಸಲಾಗುವುದು. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿ ಯಶಸ್ವಿಗೊಳಿಸುವಂತೆ ಕೋರಿದರು.
   ರಾಜ್ಯಮಟ್ಟದ ಆಟಗಾರರಾದ ಶ್ರೀನಿವಾಸ್, ಚಂದ್ರಶೇಖರ್, ಮಾರ್ಕಂಡಯ್ಯ, ವಿಶ್ವನಾಥ್, ಅಂತರಾಷ್ಟ್ರೀಯ ತೀರ್ಪುಗಾರರಾದ ಸಿದ್ದಯ್ಯ, ಬಸವರಾಜ್, ಜಗದೀಶ್, ದಾಸಿ, ಗೋಪಿ, ನಗರಸಭೆ ಮಾಜಿ ಸದಸ್ಯ ಚನ್ನಪ್ಪ, ನಗರ ಆಶ್ರಯ ಸಮಿತಿ ಸದಸ್ಯ ದೇವರಾಜ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.  

ಯಾರಿಗೂ ಅಧಿಕಾರ ಮುಖ್ಯವಲ್ಲ, ಬೆಳೆದು ಬಂದ ದಾರಿ ಮುಖ್ಯ : ಶಿಮೂಲ್ ಅಧ್ಯಕ್ಷ ಆನಂದ್

ಭದ್ರಾವತಿ ಜನ್ನಾಪುರ ಹುತ್ತಾಕಾಲೋನಿ ಚಂದ್ರಾಲಯದಲ್ಲಿ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿ ಒಂದು ನೆನಪು ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಶಾರದ ಅಪ್ಪಾಜಿ ಉದ್ಘಾಟಿಸಿದರು.
   ಭದ್ರಾವತಿ, ಜ. ೩೧: ಯಾರಿಗೂ ಅಧಿಕಾರ ಮುಖ್ಯವಲ್ಲ. ಬೆಳೆದು ಬಂದ ದಾರಿ, ಬೆಳೆಯಲು ಕಾರಣಕರ್ತದವರು ಮುಖ್ಯ ಎಂಬುದನ್ನು ಅರಿತುಕೊಳ್ಳಬೇಕು.  ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ರಾಜಕಾರಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಆನಂದ್ ಹೇಳಿದರು.
   ಅವರು ಭಾನುವಾರ ಜನ್ನಾಪುರ ಹುತ್ತಾಕಾಲೋನಿ ಚಂದ್ರಾಲಯದಲ್ಲಿ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿ ಒಂದು ನೆನಪು ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರ ರಾಜಕೀಯ ಜೀವನ ವೈಶಿಷ್ಟ ಪೂರ್ಣವಾಗಿದ್ದು, ಅವರು ಎಂದಿಗೂ ಕುಟುಂಬ ರಾಜಕಾರಣ ಮಾಡಲಿಲ್ಲ. ಅವರು ನಂಬಿ ಬಂದವರನ್ನು ಅಧಿಕಾರ ಇರಲಿ, ಇಲ್ಲದಿರಲಿ ಕೊನೆಯವರೆಗೂ ಕೈಬಿಡಲಿಲ್ಲ. ತಮ್ಮದೇ ಆದ ವರ್ಚಸ್ಸು, ಅಭಿಮಾನ ಬಳಗ ಹೊಂದಿದ್ದರು. ಅವರು ನಿಧನ ಹೊಂದಿದ ನಂತರ ಕೆಲವು ಹಿಂಬಾಲಕರು ಸುಳ್ಳು ಹೇಳಿಕೆಗಳನ್ನು ನೀಡುವ ಜೊತೆಗೆ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸದಲ್ಲಿ ತೊಡಗಿದ್ದಾರೆಂದು ಹೆಸರು ಹೇಳದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
   ನಾನು ಶಿಮೂಲ್ ಅಧ್ಯಕ್ಷನಾಗಲು ಎಂ.ಜೆ ಅಪ್ಪಾಜಿಯವರು ಕಾರಣಕರ್ತರಾಗಿದ್ದು, ಅವರ ಋಣ ತೀರಿಸಲು ಸಾಧ್ಯವಿಲ್ಲ. ಅವರು ಬದುಕಿರುವಾಗ ಅವರಿಗೆ ನೀಡುತ್ತಿದ್ದ ಗೌರವವನ್ನು ಅವರ ನಿಧನ ಹೊಂದಿದ ನಂತರವೂ ಸಹ ನೀಡುತ್ತಿದ್ದೇನೆ. ಅಭಿಮಾನಿಗಳು, ಕಾರ್ಯಕರ್ತರಲ್ಲೂ ಇದೆ ಭಾವನೆ ಇದೆ ಎಂದು ಭಾವಿಸಿರುತ್ತೇನೆ. ಆದರೆ ಅಪ್ಪಾಜಿಯವರ ನೆರವಿನಿಂದ ಇಂದು ರಾಜಕಾರಣದಲ್ಲಿ ಮುಂದೆ ಬಂದವರು ಅವರನ್ನು ಇಂದು ಅಗೌರವದಿಂದ ಕಾಣುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
  ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್ ಮಾತನಾಡಿ, ಅಪ್ಪಾಜಿಯವರ ಹೆಸರು ಹೇಳಿಕೊಳ್ಳುವುದೇ ಒಂದೇ ದೊಡ್ಡ ಗೌರವವಾಗಿದೆ. ಈ ಗೌರವದ ಮುಂದೆ ಯಾವ ಅಧಿಕಾರವೂ ದೊಡ್ಡದಲ್ಲ. ಅಪ್ಪಾಜಿಯವರು ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಕ್ಷೇತ್ರದ ಜನರು ಕೊನೆಯವರೆಗೂ ಮರೆಯುವುದಿಲ್ಲ. ಯಾರೋ ಕೆಲವು ಬೆಂಬಲಿಗರು ಬಿಟ್ಟು ಹೋಗಬಹುದು. ಅದಕ್ಕೆ ಯಾರು ಸಹ ಚಿಂತಿಸಬೇಕಾದ ಅಗತ್ಯವಿಲ್ಲ. ಬಿಟ್ಟು ಹೋದವರ ಪೈಕಿ ಎರಡರಷ್ಟು ಮಂದಿ ಪುನಃ ಹಿಂದಿರುಗಿ ಬರಲಿದ್ದಾರೆ. ಅಪ್ಪಾಜಿಯವರ ಕುಟುಂಬ ಪುನಃ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದೆ. ಶಾರದ ಅಪ್ಪಾಜಿಯವರು ಎಲ್ಲಾ ಅಭಿಮಾನಿಗಳಿಗೂ, ಕಾರ್ಯಕರ್ತರಿಗೂ ಮಾರ್ಗದರ್ಶಕರಾಗಿ ಮುನ್ನಡೆಸಿಕೊಂಡು ಹೋಗುವ ವಿಶ್ವಾಸವಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾರದ ಅಪ್ಪಾಜಿ, ಅಭಿಮಾನಿಗಳು, ಕಾರ್ಯಕರ್ತರು ಅಪ್ಪಾಜಿಯವರ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚಿರಋಣಿಯಾಗಿರುತ್ತೇನೆ. ಅಪ್ಪಾಜಿಯವರಿಗೆ ನೀಡುತ್ತಿದ್ದ ಸಹಕಾರ, ಪ್ರೋತ್ಸಾಹ ನಾನು ಸಹ ನಿರೀಕ್ಷಿಸುತ್ತೇನೆ. ಕೊನೆಯವರೆಗೂ ಜನರ ಕಷ್ಟಸುಖಗಳಿಗೆ ಸ್ಪಂದಿಸುತ್ತೇನೆಂದು ಭರವಸೆ ನೀಡಿದರು.
   ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಾರದ ಪೂರ‍್ಯಾನಾಯ್ಕ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಹಿರಿಯ ಮುಖಂಡ ಕರಿಯಪ್ಪ, ನ್ಯಾಯವಾದಿ ಎ.ಟಿ ರವಿ ಸೇರಿದಂತೆ ಇನ್ನಿತರರು ಮಾತನಾಡಿದರು.
   ನಗರಸಭಾ ಸದಸ್ಯರಾದ ಎಚ್.ಬಿ ರವಿಕುಮಾರ್, ಆನಂದ್, ಮುಖಂಡರಾದ ಬಸವರಾಜ ಆನೇಕೊಪ್ಪ, ಧರ್ಮರಾಜ್, ಕೆ. ಮಂಜುನಾಥ್, ಉಮೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
   ಜೆಡಿಎಸ್ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಕೃಷ್ಣರಾಜ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನಗರಸಭಾ ಸದಸ್ಯೆ ಎಂ.ಎಸ್ ಸುಧಾಮಣಿ ವಂದಿಸಿದರು.