ಭದ್ರಾವತಿ ತರೀಕೆರೆ ರಸ್ತೆಯಲ್ಲಿ ಹಜರತ್ ಸೈಯದ್ ಸಾದತ್ ದರ್ಗಾ ಮುಂಭಾಗದಲ್ಲಿರುವ ಖಬರ್ಸ್ತಾನ್ ಸುತ್ತ ಸುಮಾರು ೧೦ ಲಕ್ಷ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಚಾಲನೆ ನೀಡಿದರು.
ಭದ್ರಾವತಿ, ಫೆ. ೩: ನಗರದ ತರೀಕೆರೆ ರಸ್ತೆಯ ಹಜರತ್ ಸೈಯದ್ ಸಾದತ್ ದರ್ಗಾ ಮುಂಭಾಗದಲ್ಲಿರುವ ಖಬರ್ಸ್ತಾನ್ ಸುತ್ತ ಸುಮಾರು ೧೦ ಲಕ್ಷ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಚಾಲನೆ ನೀಡಿದರು.
ಖಬರ್ಸ್ತಾನ್ ಸುತ್ತ ಕಾಂಪೌಂಡ್ ಇಲ್ಲದೆ ಇರುವುದರಿಂದ ಸಾಕಷ್ಟು ಸಮಸ್ಯೆಯಾಗಿದ್ದು, ಈ ಹಿನ್ನಲೆಯಲ್ಲಿ ಕಾಂಪೌಂಡ್ ನಿರ್ಮಿಸುವಂತೆ ದರ್ಗಾ ಕಮಿಟಿ ವತಿಯಿಂದ ನಗರಸಭೆಗೆ ಮನವಿ ಸಲ್ಲಿಸಲಾಗಿತ್ತು.
ಧರ್ಮಗುರುಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರಾದ ಸಿ.ಎಂ ಖಾದರ್, ಮಹಮದ್ ಸನಾವುಲ್ಲಾ, ದಿಲ್ದಾರ್, ಬಾಬಾಜಾನ್, ಅಮೀರ್ಜಾನ್, ಅಬ್ದುಲ್ ಖದೀರ್, ಕಮಿಟಿ ಅಧ್ಯಕ್ಷ ಮುಕ್ರಂ ಖಾನ್ ಮತ್ತು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ, ಫೆ. ೩: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ತಾಲೂಕು ದೊಡ್ಡೇರಿ ಗ್ರಾಮದ ಸಮೀಪ ನಡೆದಿದೆ.
ಹೊಸಮನೆ ನಿವಾಸಿಗಳಾದ ಶಿವು(೨೮) ಮತ್ತು ರಾಘವೇಂದ್ರ(೩೦) ಮೃತಪಟ್ಟಿದ್ದಾರೆ. ಭದ್ರಾವತಿಯಿಂದ ಶಿವನಿ ಕಡೆಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಮತ್ತು ಭದ್ರಾವತಿಗೆ ಆಗಮಿಸುತ್ತಿದ್ದ ದ್ವಿಚಕ್ರವಾಹನಗಳ ನಡುವೆ ರಾತ್ರಿ ಸುಮಾರು ೯ ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭದ್ರಾವತಿ, ಫೆ. ೩: ಪರ್ಯಾಯ ವೇದಿಕೆ ಹೆಸರಿನಲ್ಲಿ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ವೇದಿಕೆ ಅಧ್ಯಕ್ಷರಾಗಿ ಬಿ. ಗಂಗಾಧರ ನೇಮಕಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಡಿ. ಶ್ರೀನಿವಾಸ(ಕ್ರೀಡಾಪಟು), ಎಸ್. ಸತೀಶ್, ಪ್ರಧಾನಕಾರ್ಯದರ್ಶಿಯಾಗಿ ಬಿ.ಜಿ ಕಾರ್ತಿಕ್, ಖಜಾಂಚಿಯಾಗಿ ಸಂತೋಷ್, ಪ್ರಧಾನ ಸಂಚಾಲಕರಾಗಿ ಅಬ್ದುಲ್ ಖದೀರ್, ಕಾನೂನು ಸಲಹೆಗಾರರಾಗಿ ಜಿ. ಸತೀಶ್ ಹಾಗು ನಿರ್ದೇಶಕರಾಗಿ ಕಿಶೋರ್, ಕೆ. ಲಕ್ಷ್ಮೀಕಾಂತ ಮತ್ತು ಬಿ. ರಮೇಶ್ ನೇಮಕಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ 'ಬಂಜಾರ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಅಭಿನಂದನಾ' ಕಾರ್ಯಕ್ರಮದಲ್ಲಿ ಭದ್ರಾವತಿ ಹಳ್ಳಿಕೆರೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಎಸ್. ಕೂಬಾನಾಯ್ಕ್ ರವರಿಗೆ 'ಬಂಜಾರ ರತ್ನ' ಪ್ರಶಸ್ತಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಭದ್ರಾವತಿ, ಫೆ. ೨: ತಾಲೂಕಿನ ಹಳ್ಳಿಕೆರೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ, ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಸ್. ಕೂಬಾನಾಯ್ಕ್ 'ಬಂಜಾರ ರತ್ನ' ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ 'ಬಂಜಾರ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಅಭಿನಂದನಾ' ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ರಾಜ್ಯದ ವಿವಿಧ ಭಾಗಗಳಲ್ಲಿರುವ ಬಂಜಾರ ಸಮಾಜದ ಸುಮಾರು ೧೪ ಶಾಖಾ ಮಠಗಳ ಸ್ವಾಮೀಜಿಗಳು, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾವಿಜಯಕುಮಾರ್, ಸಾಮಾಜಿಕ ಕಳಕಳಿ ವೇದಿಕೆ ಸಂಸ್ಥಾಪಕ ಡಾ. ರಾಜಾನಾಯ್ಕ್, ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್ ಗಿರೀಶ್ ಮತ್ತು ಹೃದಯರೋಗ ತಜ್ಞ ಡಾ. ಗಿರೀಶ್ ಮೂಡ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಕನಸು ನನಸಾಗಿದ್ದು, ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
ಭದ್ರಾವತಿ, ಫೆ. ೨: ತಾಲೂಕಿನ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಕನಸು ನನಸಾಗಿದ್ದು, ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ನಗರ ಪ್ರದೇಶದಿಂದ ೧೫ ಕಿ.ಮೀ ದೂರದಲ್ಲಿರುವ ಗ್ರಾಮೀಣ ಪ್ರದೇಶವಾದ ಕಲ್ಪನಹಳ್ಳಿ ಗ್ರಾಮಸ್ಥರು ಅನೇಕ ಬಾರಿ ಕೆಎಸ್ಆರ್ಟಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. ಕಳೆದ ೪ ದಿನಗಳ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಸಭೆಯಲ್ಲಿ ಗ್ರಾಮಾಂತರ ಹಾಗು ನಗರ ವ್ಯಾಪ್ತಿಯಲ್ಲಿ ಬಸ್ ಸಂಚಾರ ಸಮರ್ಪಕವಾಗಿ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಘಟಕದ ಅಧಿಕಾರಿಗಳಿಗೆ ಸೂಚಿಸಿದ್ದರು.
ಈ ಹಿನ್ನಲೆಯಲ್ಲಿ ಇದೀಗ ಕಲ್ಪನಹಳ್ಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಗ್ರಾಮದ ಯುವ ಮುಖಂಡ ಪ್ರವೀಣ್ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ, ಜ. ೨: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ೨ನೇ ಹಂತದ ಮಾದಿಗರ ಜೈತನ್ಯ ರಥ ಯಾತ್ರೆ ಫೆ.೩ರಂದು ನಗರಕ್ಕೆ ಆಗಮಿಸಲಿದೆ.
ಸಂಜೆ ೪ ಗಂಟೆಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತಕ್ಕೆ ರಥ ಯಾತ್ರೆ ಆಗಮಿಸಲಿದ್ದು, ತಾಲೂಕು ಮಾದಿಗ ಒಕ್ಕೂಟದಿಂದ ಈ ರಥ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಈ ಹಿನ್ನಲೆಯಲ್ಲಿ ತಾಲೂಕಿನ ಮಾದಿಗ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಒಕ್ಕೂಟದ ಅಧ್ಯಕ್ಷ ಎಂ. ಶಿವಕುಮಾರ್ ಕೋರಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ವಿವಿಧ-ಸಂಸ್ಥೆಗಳ ಮುಖಂಡರಿಂದ ಸಲಹೆ-ಸೂಚನೆ
ಭದ್ರಾವತಿ, ಫೆ. ೨: ನಗರಸಭೆಯಲ್ಲಿ ಆದಾಯ ಬರುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ನಗರವನ್ನು ಎಲ್ಲಾ ರೀತಿಯಿಂದಲೂ ಅಭಿವೃದ್ಧಿಗೊಳಿಸಲು ಪೂರಕವಾದ ಬಜೆಟ್ ಈ ಬಾರಿ ಸಿದ್ದಪಡಿಸಬೇಕೆಂದು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಲಹೆ ವ್ಯಕ್ತಪಡಿಸಿದರು.
ಸಭೆ ಆರಂಭದಲ್ಲಿ ಮಾತನಾಡಿದ ನಗರಸಭೆ ಲೆಕ್ಕಾಧೀಕ್ಷಕ ಸೈಯದ್ ಮಹಮೂದ್ ಆಲಿ ಮಾತನಾಡಿ, ಪ್ರತಿ ಬಾರಿ ಸಭೆಯಲ್ಲಿ ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೂಕ್ತ-ಸಲಹೆಗಳನ್ನು ನೀಡುವ ಬಜೆಟ್ ಯಶಸ್ವಿಗೆ ಸಹಕರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿ ಸಹ ಸರ್ಕಾರ ಹಲವು ಅನುದಾನಗಳನ್ನು ಹಾಗು ನಗರಸಭೆ ಆದಾಯಗಳನ್ನು ನಿರೀಕ್ಷಿಸಿ ಬಜೆಟ್ ಸಿದ್ದಪಡಿಸಬೇಕಾಗಿದೆ. ಪ್ರಸ್ತುತ ನಗರಸಭೆಗೆ ಬರುತ್ತಿರುವ ಆದಾಯಗಳಲ್ಲಿ ಇಳಿಮುಖವಾಗುತ್ತಿದೆ. ಪ್ರಮುಖವಾಗಿ ನೀರಿನ ಶುಲ್ಕ ವಸೂಲಾತಿ ಈ ಬಾರಿ ಶೇ.೫೦ರಷ್ಟು ಮಾತ್ರ ನಡೆದಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಸಹ ಸಹಕರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಬೇಕೆಂದರು.
ನಂತರ ಮಾತನಾಡಿದ ಪುರಸಭೆ ಮಾಜಿ ಉಪಾಧ್ಯಕ್ಷ ಟಿ. ವೆಂಕಟೇಶ್, ಜನಸಂಖ್ಯೆಗೆ ತಕ್ಕಂತೆ ೧೯೯೫ರಲ್ಲಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಯಿತು. ಆದರೆ ನಿರೀಕ್ಷೆಯಂತೆ ಪ್ರಸ್ತುತ ನಗರಸಭೆ ಬೆಳವಣಿಗೆ ಹೊಂದಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ನಗರಸಭೆ ವತಿಯಿಂದ ಕೇವಲ ವೆಚ್ಚ ಮಾಡಲಾಗುತ್ತಿದೆ ಹೊರತು ಆದಾಯ ಬರುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿಕೊಂಡಿಲ್ಲ. ನಗರಸಭೆಗೆ ಯಾವುದೇ ರೀತಿ ಆದಾಯ ಬರದಿರುವ ಪ್ರದೇಶಗಳನ್ನು ಸಹ ಚುನಾವಣೆಯನ್ನು ಆಧಾರವಾಗಿಟ್ಟುಕೊಂಡು ಅನಗತ್ಯವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಮುಖ್ಯವಾಗಿ ಎಂಪಿಎಂ ಕಾರ್ಖಾನೆ ಸ್ಥಗಿತಗೊಂಡು ೫ ವರ್ಷಗಳು ಕಳೆದಿವೆ. ಕಾರ್ಮಿಕ ಕುಟುಂಬಗಳು ಸಹ ಬೇರೆಡೆಗೆ ಸ್ಥಳಾಂತರಗೊಂಡಿವೆ. ಕಾರ್ಖಾನೆ ಪುನಃ ಆರಂಭಗೊಳ್ಳುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಅಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಯಾವುದೇ ಪ್ರಯೋಜನವಾಗುದಿಲ್ಲ. ಅಲ್ಲದೆ ನಗರಸಭೆಗೆ ಯಾವುದೇ ಆದಾಯ ಸಹ ಬರುವುದಿಲ್ಲ ಎಂದರು.
ನಗರಸಭೆ ಹೊಂದಿರುವ ಆಸ್ತಿಗಳಿಂದ ಆದಾಯ ಹೆಚ್ಚಿಸಿಕೊಳ್ಳಬೇಕಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಖಾಲಿ ನಿವೇಶನಗಳು ಸುಮಾರು ೫೦-೬೦ ವರ್ಷಗಳಿಂದ ಪಾಳುಬಿದ್ದಿವೆ. ಈ ಜಾಗಗಳನ್ನು ಖಾಲಿ ಬಿಡುವ ಬದಲು ಯಾವುದಾದರೂ ಕಟ್ಟಡಗಳನ್ನು ನಿರ್ಮಿಸಿದ್ದಲ್ಲಿ ಆದಾಯ ಬರಲಿದೆ. ನಗರದಲ್ಲಿ ಸುಮಾರು ೧೦ವರ್ಷಗಳ ಹಿಂದೆ ಆರಂಭಗೊಂಡಿರುವ ಒಳಚರಂಡಿ ಕಾಮಗಾರಿ ಇಂದಿಗೂ ಮುಕ್ತಾಯಗೊಂಡಿಲ್ಲ. ಕಳೆದ ೧೦ ವರ್ಷಗಳಿಂದ ಈ ಯೋಜನೆಯಲ್ಲಿ ಯಾವುದೇ ಆದಾಯ ನಿರೀಕ್ಷಿಸದೆ ಕೇವಲ ವೆಚ್ಚವನ್ನು ಮಾತ್ರ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಕಾಮಗಾರಿ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.
ಭದ್ರಾವತಿ ನಗರಸಭೆ ಬಜೆಟ್ ಪೂರ್ವಭಾವಿ ಸಭೆ ಮಂಗಳವಾರ ಪೌರಾಯುಕ್ತ ಮನೋಹರ್ ನೇತೃತ್ವದಲ್ಲಿ ನಡೆಯಿತು.
ಪುರಸಭೆ ಮಾಜಿ ಸದಸ್ಯ, ಪತ್ರಕರ್ತ ಎನ್. ಬಾಬು ಮಾತನಾಡಿ, ನಗರಸಭೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ನಗರಸಭೆಯಲ್ಲಿ ನೀರಿನ ಕರ ವಸೂಲಿ ಹಾಗು ಕಂದಾಯ ಪಾವತಿಗೆ ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಬೇಕು. ಜನರು ಶುಲ್ಕ ಪಾವತಿಸಿ ರಶೀದಿ ಪಡೆದಿದ್ದರೂ ಸಹ ಪಾವತಿ ಮಾಹಿತಿ ಖಾತೆಯಲ್ಲಿ ಜಮಾ ಆಗುತ್ತಿಲ್ಲ. ಇದರಿಂದಾಗಿ ಸಮಸ್ಯೆ ಎದುರಾಗುತ್ತಿದೆ. ಖಾತೆಗೆ ಹಣ ಜಮಾ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ಸ್ವೀಕೃತಗೊಂಡ ಹಣದ ಪಾವತಿಗಾಗಿ ಪ್ರತ್ಯೇಕ ವಿಭಾಗ ತೆರೆಯುವುದು ಸೂಕ್ತವಾಗಿದೆ ಎಂದು ಸಲಹೆ ನೀಡಿದರು.
ನ್ಯಾಯವಾದಿ ಕೆ.ಎಸ್ ಸುಧೀಂದ್ರ ಮಾತನಾಡಿ, ತಾಲೂಕು ಕಛೇರಿ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಅನಗ್ಯತವಾಗಿ ಈ ರಸ್ತೆಯಲ್ಲಿದ್ದ ಮರಗಳನ್ನು ಕಡಿತಲೆ ಮಾಡಲಾಗಿದೆ. ಯಾರನ್ನೋ ರಕ್ಷಿಸಲು ಮತ್ತ್ಯಾರನ್ನೋ ಬಲಿಕೊಡಲು ಹುನ್ನಾರ ನಡೆಸಲಾಗುತ್ತಿದೆ. ಈ ಕುರಿತು ನಗರಸಭೆಗೆ ಹಲವು ಬಾರಿ ಒತ್ತಾಯಿಸಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡದಿರುವುದು ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನರಸಿಂಹಚಾರ್ ಮಾತನಾಡಿ, ಸಿದ್ದರೂಢನಗರದಲ್ಲಿ ಹಲವಾರು ವರ್ಷಗಳಿಂದ ಕುಡಿಯುವ ನೀರಿ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಬಗ್ಗೆ ಗಮನ ಹರಿಸಬೇಕೆಂದರು. ಇದೆ ರೀತಿ ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷ ಎಲ್.ವಿ ರುದ್ರಪ್ಪ, ಜಹೀರ್ ಜಾನ್, ಬಿ. ಗಂಗಾಧರ್, ಬಸವರಾಜಯ್ಯ, ಹರೀಶ್ ಬಾಬು ಸೇರಿದಂತೆ ಇನ್ನಿತರರು ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ಇಂಜಿನಿಯರ್ ರಂಗರಾಜಪುರೆ, ಪರಿಸರ ಅಭಿಯಂತರ ಪ್ರಭಾಕರ್, ಕಂದಾಯಾಧಿಕಾರಿ ರಾಜ್ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.