Wednesday, February 3, 2021

ಕೇಂದ್ರ ಬಜೆಟ್ : ಕರ್ನಾಟಕ ರಾಜ್ಯಕ್ಕೆ ಶೂನ್ಯ ಕೊಡುಗೆ

 ಆಮ್ ಆದ್ಮಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್
    ಭದ್ರಾವತಿ, ಫೆ. ೩: ಈ ಬಾರಿ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಕೊಡುಗೆಗಳಿಲ್ಲ. ರಾಜ್ಯದ ಮಟ್ಟಿಗೆ ಇಂದೊಂದು ಶೂನ್ಯ ಬಜೆಟ್ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಆರೋಪಿಸಿದ್ದಾರೆ.
     ಜನಸಾಮಾನ್ಯರು ಬಳಸುವ ದಿನ ಬಳಕೆ ವಸ್ತುಗಳ ಮೇಲೆ ಸೆಸ್ ಹೆಚ್ಚಳ ಮಾಡಿರುವುದು ಈಗಾಗಲೇ ಕೊರೋನಾ ಸಂಕಷ್ಟದಿಂದ ಬಳಲುತ್ತಿರುವವರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸಿದಂತಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ರೀತಿಯಿಂದಲೂ ಅಭಿವೃದ್ಧಿಪಡಿಸುವುದಾಗಿ ಕೇಂದ್ರ ಸರ್ಕಾರ ಈ ಹಿಂದೆ ಭರವಸೆ ನೀಡಿತ್ತು. ಆದರೆ ಇದೀಗ ಬಜೆಟ್‌ನಲ್ಲಿ ತಮಿಳುನಾಡು, ಕೇರಳ, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳಿಗೆ ಮಾತ್ರ  ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ದೂರಿದ್ದಾರೆ.  
    ಕೃಷಿ ಸೆಸ್ ಹೆಸರಿನಲ್ಲಿ ಕೃಷಿಕರಿಗೆ ಅನುಕೂಲ ಮಾಡುವ ನೆಪದಲ್ಲಿ ಜನಸಾಮಾನ್ಯರನ್ನು ಸುಲಿಗೆ ಮಾಡಲಾಗುತ್ತಿದೆ. ಡೀಸೆಲ್ ಮೇಲಿನ ಸೆಸ್ ಹೆಚ್ಚಳದಿಂದ ಅಗತ್ಯ ವಸ್ತುಗಳು ದುಬಾರಿಯಾಗುತ್ತವೆ.  ಕಳೆದ ವರ್ಷದ ವಿತ್ತೀಯ ಕೊರತೆ ಶೇ.೩ರಷ್ಟಿದ್ದು, ಪ್ರಸ್ತುತ ಶೇ.೯.೫ರಷ್ಟಾಗಿದೆ.  ಮುಂದಿನ ವರ್ಷಕ್ಕೆ ಇದು ಶೇ.೬.೮ರಷ್ಟಾಗಬಹುದೆಂದು ಅಂದಾಜಿಸಲಾಗಿದೆ. ಈ ಕೊರತೆ ತುಂಬಲು ೧೨ ಲಕ್ಷ ಕೋಟಿ ಸಾಲ ಮಾಡಬೇಕಾದ ಅನಿವಾರ್ಯತೆ ಕೇಂದ್ರಕ್ಕೆ ಉಂಟಾಗಲಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ದೇಶದ ಜನರು ಸಾಲದ ಸುಳಿಗೆ ಸಿಲುಕಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
     ಬಜೆಟ್‌ನಲ್ಲಿ ವಿದ್ಯುತ್ ಖಾಸಗಿಕರಣಕ್ಕೆ ಮುನ್ನುಡಿ ಬರೆಯಲಾಗಿದೆ. ಈ ಮೂಲಕ ಜನರ ಅಗತ್ಯತೆಯ ಮೂಲಕ್ಕೆ ಕೈ ಹಾಕಲಾಗಿದೆ. ಅಲ್ಲದೆ ಸರ್ಕಾರದ ಖಾಲಿ ಜಾಗ, ಆಸ್ತಿಗಳ ಮಾರಾಟ ಹೀಗೆ ಹಂತ, ಹಂತವಾಗಿ ದೇಶದ ಭೂಮಿಯನ್ನು, ಅಮೂಲ್ಯ ಸಂಪನ್ಮೂಲಗಳನ್ನು ಖಾಸಗಿಯವರ ತೆಕ್ಕೆಗೆ ವಹಿಸಿಕೊಡುವ ಲಕ್ಷಣಗಳು ಕಂಡು ಬರುತ್ತಿವೆ. ಅತಿ ದೊಡ್ಡ ವಿಮಾ ಕ್ಷೇತ್ರ ಕ್ಷೇತ್ರದಲ್ಲಿ  ಶೇ.೭೪ರಷ್ಟು ವಿದೇಶಿ ಹೂಡಿಕೆಗೆ ಅವಕಾಶ ನೀಡಿರುವುದು, ಸಾರ್ವಜನಿಕ ರಂಗದ ಎರಡು ಬ್ಯಾಂಕುಗಳು ಮತ್ತು  ಒಂದು ಜನರಲ್ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ಮುಂದಾಗಿರುವುದು ವಿಪರ್ಯಾಸದ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.  

ರು.೧೦ ಲಕ್ಷ ವೆಚ್ಚದಲ್ಲಿ ಖಬರ್‌ಸ್ತಾನ್ ಸುತ್ತ ಕಾಂಪೌಂಡ್ ನಿರ್ಮಾಣಕ್ಕೆ ಚಾಲನೆ

ಭದ್ರಾವತಿ ತರೀಕೆರೆ ರಸ್ತೆಯಲ್ಲಿ ಹಜರತ್ ಸೈಯದ್ ಸಾದತ್ ದರ್ಗಾ ಮುಂಭಾಗದಲ್ಲಿರುವ ಖಬರ್‌ಸ್ತಾನ್ ಸುತ್ತ ಸುಮಾರು ೧೦ ಲಕ್ಷ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಚಾಲನೆ ನೀಡಿದರು.
  ಭದ್ರಾವತಿ, ಫೆ. ೩: ನಗರದ ತರೀಕೆರೆ ರಸ್ತೆಯ ಹಜರತ್ ಸೈಯದ್ ಸಾದತ್ ದರ್ಗಾ ಮುಂಭಾಗದಲ್ಲಿರುವ ಖಬರ್‌ಸ್ತಾನ್ ಸುತ್ತ ಸುಮಾರು ೧೦ ಲಕ್ಷ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಚಾಲನೆ ನೀಡಿದರು.
  ಖಬರ್‌ಸ್ತಾನ್ ಸುತ್ತ ಕಾಂಪೌಂಡ್ ಇಲ್ಲದೆ ಇರುವುದರಿಂದ ಸಾಕಷ್ಟು ಸಮಸ್ಯೆಯಾಗಿದ್ದು, ಈ ಹಿನ್ನಲೆಯಲ್ಲಿ ಕಾಂಪೌಂಡ್ ನಿರ್ಮಿಸುವಂತೆ ದರ್ಗಾ ಕಮಿಟಿ ವತಿಯಿಂದ ನಗರಸಭೆಗೆ ಮನವಿ ಸಲ್ಲಿಸಲಾಗಿತ್ತು.
    ಧರ್ಮಗುರುಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರಾದ ಸಿ.ಎಂ ಖಾದರ್, ಮಹಮದ್ ಸನಾವುಲ್ಲಾ, ದಿಲ್‌ದಾರ್, ಬಾಬಾಜಾನ್, ಅಮೀರ್‌ಜಾನ್, ಅಬ್ದುಲ್ ಖದೀರ್, ಕಮಿಟಿ ಅಧ್ಯಕ್ಷ ಮುಕ್ರಂ ಖಾನ್ ಮತ್ತು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಅಪಘಾತ : ಇಬ್ಬರು ಕೂಲಿ ಕಾರ್ಮಿಕರು ಮೃತ

    ಭದ್ರಾವತಿ, ಫೆ. ೩: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ತಾಲೂಕು ದೊಡ್ಡೇರಿ ಗ್ರಾಮದ ಸಮೀಪ ನಡೆದಿದೆ.
    ಹೊಸಮನೆ ನಿವಾಸಿಗಳಾದ ಶಿವು(೨೮) ಮತ್ತು ರಾಘವೇಂದ್ರ(೩೦) ಮೃತಪಟ್ಟಿದ್ದಾರೆ. ಭದ್ರಾವತಿಯಿಂದ ಶಿವನಿ ಕಡೆಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಮತ್ತು ಭದ್ರಾವತಿಗೆ ಆಗಮಿಸುತ್ತಿದ್ದ ದ್ವಿಚಕ್ರವಾಹನಗಳ ನಡುವೆ ರಾತ್ರಿ ಸುಮಾರು ೯ ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪರ್ಯಾಯ ವೇದಿಕೆ ಅಧ್ಯಕ್ಷರಾಗಿ ಬಿ. ಗಂಗಾಧರ

     ಭದ್ರಾವತಿ, ಫೆ. ೩: ಪರ್ಯಾಯ ವೇದಿಕೆ ಹೆಸರಿನಲ್ಲಿ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ವೇದಿಕೆ ಅಧ್ಯಕ್ಷರಾಗಿ ಬಿ. ಗಂಗಾಧರ ನೇಮಕಗೊಂಡಿದ್ದಾರೆ.
    ಉಪಾಧ್ಯಕ್ಷರಾಗಿ ಡಿ. ಶ್ರೀನಿವಾಸ(ಕ್ರೀಡಾಪಟು), ಎಸ್. ಸತೀಶ್, ಪ್ರಧಾನಕಾರ್ಯದರ್ಶಿಯಾಗಿ ಬಿ.ಜಿ ಕಾರ್ತಿಕ್, ಖಜಾಂಚಿಯಾಗಿ ಸಂತೋಷ್, ಪ್ರಧಾನ ಸಂಚಾಲಕರಾಗಿ ಅಬ್ದುಲ್ ಖದೀರ್, ಕಾನೂನು ಸಲಹೆಗಾರರಾಗಿ ಜಿ. ಸತೀಶ್ ಹಾಗು ನಿರ್ದೇಶಕರಾಗಿ ಕಿಶೋರ್, ಕೆ. ಲಕ್ಷ್ಮೀಕಾಂತ ಮತ್ತು ಬಿ. ರಮೇಶ್ ನೇಮಕಗೊಂಡಿದ್ದಾರೆ.

Tuesday, February 2, 2021

ಎಸ್. ಕೂಬಾನಾಯ್ಕ್‌ಗೆ ‘ಬಂಜಾರ ರತ್ನ’ ಪ್ರಶಸ್ತಿ

ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ 'ಬಂಜಾರ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಅಭಿನಂದನಾ' ಕಾರ್ಯಕ್ರಮದಲ್ಲಿ ಭದ್ರಾವತಿ ಹಳ್ಳಿಕೆರೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಎಸ್. ಕೂಬಾನಾಯ್ಕ್ ರವರಿಗೆ 'ಬಂಜಾರ ರತ್ನ' ಪ್ರಶಸ್ತಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಭದ್ರಾವತಿ, ಫೆ. ೨: ತಾಲೂಕಿನ ಹಳ್ಳಿಕೆರೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ, ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಸ್. ಕೂಬಾನಾಯ್ಕ್ 'ಬಂಜಾರ ರತ್ನ' ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ 'ಬಂಜಾರ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಅಭಿನಂದನಾ' ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ರಾಜ್ಯದ ವಿವಿಧ ಭಾಗಗಳಲ್ಲಿರುವ ಬಂಜಾರ ಸಮಾಜದ ಸುಮಾರು ೧೪ ಶಾಖಾ ಮಠಗಳ ಸ್ವಾಮೀಜಿಗಳು, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾವಿಜಯಕುಮಾರ್, ಸಾಮಾಜಿಕ ಕಳಕಳಿ ವೇದಿಕೆ ಸಂಸ್ಥಾಪಕ ಡಾ. ರಾಜಾನಾಯ್ಕ್, ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್ ಗಿರೀಶ್ ಮತ್ತು ಹೃದಯರೋಗ ತಜ್ಞ ಡಾ. ಗಿರೀಶ್ ಮೂಡ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  



ಕೊನೆಗೂ ಕಲ್ಪನಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್

  ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಕನಸು ನನಸಾಗಿದ್ದು, ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
   ಭದ್ರಾವತಿ, ಫೆ. ೨: ತಾಲೂಕಿನ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಕನಸು ನನಸಾಗಿದ್ದು, ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
     ನಗರ ಪ್ರದೇಶದಿಂದ ೧೫ ಕಿ.ಮೀ ದೂರದಲ್ಲಿರುವ ಗ್ರಾಮೀಣ ಪ್ರದೇಶವಾದ ಕಲ್ಪನಹಳ್ಳಿ ಗ್ರಾಮಸ್ಥರು ಅನೇಕ ಬಾರಿ ಕೆಎಸ್‌ಆರ್‌ಟಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. ಕಳೆದ ೪ ದಿನಗಳ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಸಭೆಯಲ್ಲಿ ಗ್ರಾಮಾಂತರ ಹಾಗು ನಗರ ವ್ಯಾಪ್ತಿಯಲ್ಲಿ ಬಸ್ ಸಂಚಾರ ಸಮರ್ಪಕವಾಗಿ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ಘಟಕದ ಅಧಿಕಾರಿಗಳಿಗೆ ಸೂಚಿಸಿದ್ದರು.
    ಈ ಹಿನ್ನಲೆಯಲ್ಲಿ ಇದೀಗ ಕಲ್ಪನಹಳ್ಳಿಗೆ  ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಗ್ರಾಮದ ಯುವ  ಮುಖಂಡ ಪ್ರವೀಣ್ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾದಿಗರ ಚೈತನ್ಯ ರಥ ಯಾತ್ರೆ ಫೆ.೩ರಂದು ನಗರಕ್ಕೆ ಆಗಮನ

ಭದ್ರಾವತಿ, ಜ. ೨: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ೨ನೇ ಹಂತದ ಮಾದಿಗರ ಜೈತನ್ಯ ರಥ ಯಾತ್ರೆ ಫೆ.೩ರಂದು ನಗರಕ್ಕೆ ಆಗಮಿಸಲಿದೆ.
      ಸಂಜೆ ೪ ಗಂಟೆಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತಕ್ಕೆ ರಥ ಯಾತ್ರೆ ಆಗಮಿಸಲಿದ್ದು, ತಾಲೂಕು ಮಾದಿಗ ಒಕ್ಕೂಟದಿಂದ ಈ ರಥ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಈ ಹಿನ್ನಲೆಯಲ್ಲಿ ತಾಲೂಕಿನ ಮಾದಿಗ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಒಕ್ಕೂಟದ ಅಧ್ಯಕ್ಷ ಎಂ. ಶಿವಕುಮಾರ್ ಕೋರಿದ್ದಾರೆ.