Monday, February 15, 2021

ಮಹಿಳಾ ಸೇವಾ ಸಮಾಜದ ಕಟ್ಟಡ ಉದ್ಘಾಟನೆ

ಸುಮಾರು ೫ ದಶಕಗಳಿಗೂ ಹಳೇಯದಾದ ಹಳೇನಗರದ ಮಹಿಳಾ ಸೇವಾ ಸಮಾಜದ ನೂತನ ಕಟ್ಟಡವನ್ನು ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
   ಭದ್ರಾವತಿ, ಫೆ. ೧೫: ಸುಮಾರು ೫ ದಶಕಗಳಿಗೂ ಹಳೇಯದಾದ ಹಳೇನಗರದ ಮಹಿಳಾ ಸೇವಾ ಸಮಾಜದ ನೂತನ ಕಟ್ಟಡವನ್ನು ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
     ಈ ಮಹಿಳಾ ಸೇವಾ ಸಮಾಜ ತನ್ನದೇ ಆದ ವಿಶಿಷ್ಟತೆಯಿಂದ ಗುರುತಿಸಿಕೊಂಡಿದೆ. ಹಳೇಯ ಕಟ್ಟಡ ಶಿಥಿಲಗೊಂಡ ಹಿನ್ನಲೆಯಲ್ಲಿ ಅದನ್ನು ನೆಲಸಮಗೊಳಿಸಿ ನಗರಸಭೆ ಅನುದಾನದಲ್ಲಿ ಸುಮಾರು ೨೦ ಲಕ್ಷ ರು. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ಮೇಲ್ಭಾಗದ ಕಟ್ಟಡಕ್ಕೆ ಸಂಸದರ ನಿಧಿಯಿಂದ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಭೂಮಿ ಪೂಜೆ ಸಹ ನೆರವೇರಿಸಲಾಯಿತು.
    ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಭೋವಿ ನಿಗಮದ ನಿರ್ದೇಶಕ ಜಿ. ಆನಂದಕುಮಾರ್, ಸಮಾಜದ ಹಿರಿಯ ಸದಸ್ಯರು, ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ಮನವಿ

  ಭದ್ರಾವತಿ ತಾಲೂಕಿನ ವಿವಿಧೆಡೆ ಗ್ರಾಮೀಣ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಸೋಮವಾರ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕಿ ಅಮೂಲ್ಯರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
    ಭದ್ರಾವತಿ, ಫೆ. ೧೫: ತಾಲೂಕಿನ ವಿವಿಧೆಡೆ ಗ್ರಾಮೀಣ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಸೋಮವಾರ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕಿ ಅಮೂಲ್ಯರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
   ಕೋವಿಡ್-೧೯ರ ಹಿನ್ನಲೆಯಲ್ಲಿ ಕಡಿತಗೊಳಿಸಲಾಗಿದ್ದ ಬಸ್ ಸಂಚಾರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಇನ್ನೂ ಸರಿಯಾಗಿ ಆರಂಭಗೊಂಡಿಲ್ಲ. ಬಸ್‌ಗಳ ಸಂಚಾರ ಕಡಿಮೆ ಇದ್ದು, ಇದರಿಂದಾಗಿ ಬಹಳಷ್ಟು ಕಡೆ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು, ಸರ್ಕಾರಿ ಹಾಗು ಖಾಸಗಿ ನೌಕರರು, ಕೂಲಿ ಕಾರ್ಮಿಕರು, ವೃದ್ದರು, ಮಹಿಳೆಯರು ನಗರ ಪ್ರದೇಶಗಳಿಗೆ ಬಂದು ಹೋಗುವುದು ಕಷ್ಟಕರವಾಗಿದೆ ಎಂದು ಅಳಲು ವ್ಯಕ್ತಪಡಿಸಲಾಗಿದೆ.
   ತಕ್ಷಣ ಒಂದನೇ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಟಿಪ್ಪು ಸರ್ಕಲ್, ಅನ್ವರ್ ಕಾಲೋನಿ, ಅಮೀರ್ ಜಾನ್ ಕಾಲೋನಿ, ಹೊಳೆಹೊನ್ನೂರು ಮಾರ್ಗವಾಗಿ ದಾಸರಕಲ್ಲಹಳ್ಳಿಯಿಂದ ಹೊಳೆಹೊನ್ನೂರುವರೆಗೆ, ಎರಡನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ಅರಬಿಳಚಿವರೆಗೆ, ಮೂರನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ಹೊಸಮನೆ, ಕಾಚಗೊಂಡನಹಳ್ಳಿ, ದೇವರಹಳ್ಳಿ, ಗುಡ್ಡದ ನೇರಳೆಕೆರೆವರೆಗೆ ಹಾಗು ನಾಲ್ಕನೇ ಮಾರ್ಗವಾಗಿ ತಾಲೂಕಿನ ಹೊಳೆಹೊನ್ನೂರು, ಕೈಮರ, ಕಲ್ಲಿಹಾಳ್, ಮಾರಶೆಟ್ಟಿಹಳ್ಳಿ, ಅರಬಿಳಚಿ, ಅರಬಿಳಚಿ ಕ್ಯಾಂಪ್, ಕೂಡ್ಲಿಗೆರೆ, ಅರಳಿಹಳ್ಳಿ, ಶ್ರೀರಾಮನಗರ, ಸೀಗೆಬಾಗಿ ಮೂಲಕ ಆಲ್ ಮಹಮೂದ್ ಶಾಲೆ, ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಿಂದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ವರೆಗೆ ಮತ್ತು ೫ನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ನ್ಯೂಟೌನ್, ಜಯಶ್ರೀ ಸರ್ಕಲ್, ಮಿಲ್ಟ್ರಿಕ್ಯಾಂಪ್, ಬೊಮ್ಮನಕಟ್ಟೆ, ಹಿರಿಯೂರು, ಗೊಂದಿ, ಹುಣಸೇಕಟ್ಟೆ ಜಂಕ್ಷನ್‌ವರೆಗೆ ಬಸ್ ಸಂಚಾರ ಆರಂಭಿಸುವಂತೆ ಮನವಿ ಮಾಡಲಾಗಿದೆ.
   ಎಸ್‌ಡಿಪಿಐ ತಾಲೂಕು ಘಟಕದ ಅಧ್ಯಕ್ಷ ಮಹಮದ್ ತಾಹೇರ್, ಕಾರ್ಯದರ್ಶಿ ಮಹಮದ್ ಗೌಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

೨ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಭದ್ರಾವತಿ, ಫೆ. ೧೫: ತಾಲೂಕಿನ ೨ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.
    ತಾಲೂಕಿನ ಗುಡುಮಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೮ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎಚ್.ಆರ್ ಪುಟ್ಟಪ್ಪ, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಪುಷ್ಪ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
    ತಾಲೂಕಿನ ಆಗರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಜನ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸಿದ್ದಪ್ಪ ಹಾಗು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳ  ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

Sunday, February 14, 2021

ವಿವಿಧೆಡೆ ಅಂಗಡಿಮುಂಗಟ್ಟು ಮೇಲೆ ದಾಳಿ : ೧೫೨೦ ರು. ದಂಡ ವಸೂಲಾತಿ

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಭದ್ರಾವತಿ ತಾಲೂಕಿನ ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ವೀರಾಪುರ ವ್ಯಾಪ್ತಿಯ ವಿವಿಧೆಡೆ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
   ಭದ್ರಾವತಿ, ಫೆ. ೧೪: ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಾಲೂಕಿನ ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ವೀರಾಪುರ ವ್ಯಾಪ್ತಿಯ ವಿವಿಧೆಡೆ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ೧೫೨೦ ರು. ದಂಡ ವಸೂಲಾತಿ ಮಾಡಲಾಗಿದೆ.
   ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಅಲ್ಲದೆ ತಂಬಾಕು ಉತ್ಪನ್ನಗಳ ಕುರಿತು ಅಂಗಡಿಮುಂಗಟ್ಟುಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
   ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್,   ಹಿರಿಯ ಆರೋಗ್ಯ ಸಹಾಯಕರಾದ ಆನಂದಮೂರ್ತಿ ಮತ್ತು ಹಾಲಸ್ವಾಮಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್, ರವಿರಾಜ್, ಕಿರಿಯ ಆರೋಗ್ಯ ಸಹಾಯಕರಾದ ಮನೋಹರ್, ಚೇತನ್ ಹಾಗೂ ಉಷಾ ಸೇರಿದಂತೆ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.  

ದೇಶಪ್ರೇಮಿ ದಿನಾಚರಣೆ : ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

ರಾಮ್ ಸೇನಾ ವತಿಯಿಂದ ದೇಶಪ್ರೇಮಿ ದಿನಾಚರಣೆ ಅಂಗವಾಗಿ ಭದ್ರಾವತಿ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಭಾನುವಾರ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಭದ್ರಾವತಿ, ಫೆ. ೧೪: ರಾಮ್ ಸೇನಾ ವತಿಯಿಂದ ದೇಶಪ್ರೇಮಿ ದಿನಾಚರಣೆ ಅಂಗವಾಗಿ ನಗರದ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಭಾನುವಾರ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಫೆ.೧೪, ೨೦೧೯ರಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆ ಸಲ್ಲಿಸಿ ಮೌನಾಚರಣೆ ನಡೆಸಲಾಯಿತು. ಅಲ್ಲದೆ ದೇಶ ರಕ್ಷಣೆಯಲ್ಲಿ ಯೋಧರ ಸೇವೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖರಾದ ಉಮೇಶ್‌ಗೌಡ, ಅವಿನಾಶ್, ಮೋಹನ್, ಸಂತೋಷ್, ರಮೆಶ್, ಕೃಷ್ಣ, ಜೋಗಿ, ಪ್ರಕಾಶ್, ಕಾರ್ತಿಕ್, ರೋಹಿತ್, ಸುನಿಲ್ ಮತ್ತು ಪ್ರಭು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿಯಲ್ಲಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಮೇಣದ ಬತ್ತಿ ಹಚ್ಚುವ ಮೂಲಕ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಮಾಜಿ ಸೈನಿಕರ ಸಂಘದಿಂದ ಗೌರವ ನಮನ :
  ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಮೇಣದ ಬತ್ತಿ ಹಚ್ಚುವ ಮೂಲಕ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
  ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ದೇಶ ರಕ್ಷಣೆಯಲ್ಲಿ ಸೈನಿಕರ ಸೇವೆ ಅವಿಸ್ಮರಣೀಯವಾಗಿದೆ. ಸೈನಿಕರು ಎಂದಿಗೂ ಅಮರ. ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
   ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ಸ್ವಯಂ ಸೇವಕ ಕಿರಣ್, ಶಿಕ್ಷಕ ಎ. ತಿಪ್ಪೇಸ್ವಾಮಿ, ಎಎಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಮಾಜಿ ಸೈನಿಕರ ಸಂಘ ಹಾಗು ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

Saturday, February 13, 2021

ಖಾಸಗಿ ಶಾಲೆಗಳನ್ನು ಮೀರಿಸಿದ ಹೊಸಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ

ಶಾಲೆಯನ್ನು ದತ್ತು ಪಡೆದ ಡಿಎಕ್ಸ್‌ಸಿ ಟೆಕ್ನಾಲಜಿ, ಬಾಲ್ ಉತ್ಸವ್ ಕಂಪನಿಗಳು

ಭದ್ರಾವತಿ ಹೊಸಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಡಿಎಕ್ಸ್‌ಸಿ ಟೆಕ್ನಾಲಜಿ ಹಾಗು ಬಾಲ್ ಉತ್ಸವ್ ಕಂಪನಿಯ ಪ್ರಮುಖರು ಉಪಸ್ಥಿತರಿರುವುದು.
* ಅನಂತಕುಮಾರ್
ಭದ್ರಾವತಿ: ಪೂರ್ಣ ಪ್ರಮಾಣದಲ್ಲಿ ನಗರ ಪ್ರದೇಶವೂ ಅಲ್ಲದ, ಗ್ರಾಮೀಣ ಪ್ರದೇಶವೂ ಅಲ್ಲದ ಹೊಸಸಿದ್ದಾಪುರ ಗ್ರಾಮದಲ್ಲಿರುವ ನೇತಾಜಿ ಸುಭಾಷ್ ಚಂದ್ರಬೋಸ್ ಸರ್ಕಾರಿ ಪ್ರೌಢಶಾಲೆ ಇದೀಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ನಗರ ಪ್ರದೇಶದ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಹಂತಕ್ಕೆ ಹೆಮ್ಮರವಾಗಿ ಬೆಳೆದು ನಿಂತಿದೆ.
ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರು ೧೯೯೬ರಲ್ಲಿ ಗ್ರಾಮಸ್ಥರು ಹಾಗು ಶಿಕ್ಷಣ ಪ್ರೇಮಿಗಳ ಬಹುದಿನಗಳ ಬೇಡಿಕೆಯಂತೆ ಗ್ರಾಮಕ್ಕೆ ಸರ್ಕಾರಿ ಪ್ರೌಢಶಾಲೆ ಮಂಜೂರಾತಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.  ಅಂದಿನ ಶಿಕ್ಷಣ ಸಚಿವರಾಗಿದ್ದ ಎಚ್.ಜಿ ಗೋವಿಂದಗೌಡ ನೂತನ ಶಾಲೆಯನ್ನು ಉದ್ಘಾಟಿಸಿದರು. ಅಂದು ಶಾಲೆಯಲ್ಲಿ ಕೇವಲ ೪ ಕೊಠಡಿಗಳು, ೩೩ ವಿದ್ಯಾರ್ಥಿಗಳಿದ್ದು, ೩ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಈ ಶಾಲೆ ೧೧ ಕೊಠಡಿಗಳನ್ನು ಒಳಗೊಂಡು ೨೧೧ ವಿದ್ಯಾರ್ಥಿಗಳಿದ್ದು, ೧೩ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

  ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಂಡು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಿದ್ದಲ್ಲಿ ಕಂಪನಿಯಿಂದ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ಕಂಪನಿಗೆ ವಿದ್ಯಾರ್ಥಿಗಳ ಭವಿಷ್ಯವೇ ಮುಖ್ಯವಾಗಿದೆ.
                                   -ರಮೇಶ್ ಬಾಲಸುಂದರಂ, ಸಂಸ್ಥಾಪಕರು, ಬಾಲ್ ಉತ್ಸವ್ ಕಂಪನಿ.


ಭದ್ರಾವತಿ ಹೊಸಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕೊಠಡಿ.

     ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ:
  ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಇದುವರೆಗೂ ಈ ಶಾಲೆಯಲ್ಲಿ ಒಟ್ಟು ೨೦೨೩ ವಿದ್ಯಾರ್ಥಿಗಳು ಶಿಕ್ಷಣ ಪಡೆದುಕೊಂಡಿದ್ದಾರೆ. ೨೦೧೭-೧೮ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿ. ಹರ್ಷಿತಾ ಎಂಬ ವಿದ್ಯಾರ್ಥಿನಿ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿಯೇ ಅತಿ ಹೆಚ್ಚು ಅಂಕಗಳನ್ನು ಪಡೆದ ಹೆಗ್ಗಳಿಕೆಗೆ ಪಾತ್ರಳಾಗಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೂ ಸಹ ಶಿಕ್ಷಣದಲ್ಲಿ ಹಿಂದೆ ಉಳಿದಿಲ್ಲ ಎಂಬುದನ್ನು ಸಾಬೀತು ಮಾಡಿ ತೋರಿಸಲಾಗಿತ್ತು.
ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಿಗೂ ಸಹ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಕಂಪ್ಯೂಟರ್ ಶಿಕ್ಷಣ, ವೃತ್ತಿ ಶಿಕ್ಷಣ ಮತ್ತು ಕ್ರೀಡಾ ಹಾಗು ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗಿದೆ. ಉಳಿದಂತೆ ಪ್ರಯೋಗಾಲಯ, ಆಟದ ಮೈದಾನ, ಕೈತೋಟ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.


ಭದ್ರಾವತಿ ಹೊಸಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಅಳವಡಿಸಲಾಗಿರುವ ಪ್ಯಾಡ್ ಬರ್ನಿಂಗ್ ಮೆಷಿನ್.

     ಇಂದಿಗೂ ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲ:
   ನಗರದ ಮಧ್ಯ ಭಾಗದಿಂದ ಸುಮಾರು ೫ ಕಿ.ಮೀ ದೂರದಲ್ಲಿರುವ ಹೊಸ ಸಿದ್ದಾಪುರ ಗ್ರಾಮಕ್ಕೆ ಇಂದಿಗೂ ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲವಾಗಿದೆ. ಈ ಮಾರ್ಗದಲ್ಲಿ ಕೇವಲ ಒಂದೇ ಒಂದು ಖಾಸಗಿ ಬಸ್ ಸಂಚರಿಸುತ್ತಿದೆ. ಇದರಿಂದಾಗಿ ಈ ವ್ಯಾಪ್ತಿಯ ರಾಮನಕೊಪ್ಪ, ಹಾಗಲಮನೆ, ಸಿರಿಯೂರು, ಸಂಕ್ಲಿಪುರ, ಕಲ್ಲಹಳ್ಳಿ, ಸಿದ್ದಾಪುರ ತಾಂಡ, ವೀರಾಪುರ, ನಂಜಾಪುರ, ಹೊಸಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ತಮ್ಮ ಮಕ್ಕಳನ್ನು ದೂರದ ಶಾಲೆಗಳಿಗೆ ಅದರಲ್ಲೂ ಹೆಣ್ಣುಮಕ್ಕಳನ್ನು ಸೇರಿಸಲು ಹಿಂಜರಿಯುತ್ತಿದ್ದರು. ಈ ಶಾಲೆ ಆರಂಭಗೊಂಡ ನಂತರ ಈ ಸಮಸ್ಯೆಗೆ ಪರಿಹಾರ ಲಭಿಸಿದೆ. ಬಹುತೇಕ ಎಲ್ಲಾ ಗ್ರಾಮಗಳ ಮಕ್ಕಳು ಈ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.  ಮತ್ತೊಂದು ವಿಶೇಷವೆಂದರೆ ನಗರ ಪ್ರದೇಶದಿಂದಲೂ ಈ ಶಾಲೆಗೆ ಮಕ್ಕಳು ಬರುತ್ತಿದ್ದಾರೆ.

ಈ ಶಾಲೆಯಲ್ಲಿ ೨೦೦೬ರಿಂದ ಗಣಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಅದರಲ್ಲೂ ಹೆಚ್ಚುವರಿ ತರಗತಿಗಳನ್ನು ಆಯೋಜಿಸಲಾಗುತ್ತಿದೆ. ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಶಾಲೆಗೆ ಸರಿಯಾಗಿ ಹಾಜರಾಗುತ್ತಿದ್ದಾರೆ. ೨೦೧೪ರಿಂದ ಆರ್. ಬಸವರಾಜ್‌ರವರು ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಶಾಲಾಭಿವೃದ್ಧಿ ಸಮಿತಿಯೊಂದಿಗೆ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.'
                        - ಮುರಳಿಧರ, ಗಣಿತ ಶಿಕ್ಷಕರು, ಹೊಸಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ
   

ಭದ್ರಾವತಿ ಹೊಸಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆಟದ ಕ್ರೀಡಾಂಗಣ.
          ಶಾಲಾಭಿವೃದ್ಧಿ ಸಮಿತಿಗೆ ಎಲ್ಲೆಡೆಯಿಂದ ನೆರವು:
    ಕೆಲವು ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರದ ಅನುದಾನದಲ್ಲಿ ಕೈಗೊಂಡರೇ, ಉಳಿದಂತೆ ಬಹುತೇಕ ಕಾರ್ಯಗಳನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕೈಗೊಳ್ಳಲಾಗುತ್ತಿದೆ. ಸಮಿತಿಗೆ  ಸ್ವಯಂ ಸೇವಾ ಸಂಸ್ಥೆಗಳು, ದಾನಿಗಳು, ಚುನಾಯಿತ ಜನಪ್ರತಿನಿಧಿಗಳು ಹಾಗು ಹಳೇ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ನೆರವಿನ ಹಸ್ತ ಚಾಚುತ್ತಿದ್ದಾರೆ.  ವಿಐಎಸ್‌ಎಲ್, ರೋಟರಿ ಕ್ಲಬ್, ಕಾರ್ಪೋರೇಷನ್ ಬ್ಯಾಂಕ್ ಮತ್ತು ಸಾಯಿ ಇಂಡಿಯನ್ ಗ್ಯಾಸ್ ಏಜೆನ್ಸಿ ಸಾಮಾಜಿಕ ಯೋಜನೆಯಡಿ ವಿಶೇಷವಾಗಿ ಈ ಶಾಲೆಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿವೆ.
     ೩ ವರ್ಷಗಳ ಅವಧಿಗೆ ಶಾಲೆ ದತ್ತು:
   ಈ ಶಾಲೆಯ ಪ್ರಗತಿಯನ್ನು ಗಮನಿಸಿರುವ ಡಿಎಕ್ಸ್‌ಸಿ ಟೆಕ್ನಾಲಜಿ ಹಾಗು ಬಾಲ್ ಉತ್ಸವ್ ಕಂಪನಿಗಳು ೨೦೧೯-೨೦ನೇ ಶೈಕ್ಷಣಿಕ ಸಾಲಿನಲ್ಲಿ ಸಿಎಸ್‌ಆರ್ ಯೋಜನೆಯಡಿ ೩ ವರ್ಷಗಳ ಅವಧಿಗೆ ಶಾಲೆಯನ್ನು ದತ್ತು ಪಡೆದಿವೆ.
   ಶಾಲೆಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು, ಶಿಕ್ಷಕರ ಬೋಧನಾ ಸಾಮರ್ಥ್ಯ ಹೆಚ್ಚಿಸುವುದು, ಶುದ್ಧ ಕುಡಿಯುವ ನೀರು ಹಾಗು ನೈರ್ಮಲ್ಯೀಕರಣ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವಿಕೆ ಸೇರಿದಂತೆ ಇನ್ನಿತರ ಉದ್ದೇಶಗಳನ್ನು ಕಂಪನಿಗಳು ಹೊಂದಿವೆ.
   ಶಾಲೆಯಲ್ಲಿ ದಾಖಲಾತಿ ಪ್ರಮಾಣ, ವಿದ್ಯಾರ್ಥಿಗಳ ಬೌದ್ಧಿಕ ಗುಣಮಟ್ಟ ಹೆಚ್ಚಿಸುವುದು, ಗುಣಮಟ್ಟದ ಶಿಕ್ಷಣ ನೀಡುವುದು, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಗರೀಕ ಮೌಲ್ಯಗಳನ್ನು ಬೆಳೆಸುವುದು ಹಾಗು ಶಾಲಾಭಿವೃದ್ಧಿಯಲ್ಲಿ ಸಮುದಾಯದ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿರೀಕ್ಷೆಯನ್ನು ಕಂಪನಿಗಳು ಹೊಂದಿವೆ.
  ಡಿಎಕ್ಸ್‌ಸಿ ಟೆಕ್ನಾಲಜಿ ಹಾಗು ಬಾಲ್ ಉತ್ಸವ್ ಕಂಪನಿಗಳಿಂದ ಶಾಲೆಯಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳು:
    ಶುದ್ದ ಕುಡಿಯುವ ನೀರಿನ ಘಟಕ, ೨ ಸ್ಮಾರ್ಟ್ ಟಿ.ವಿ, ಪ್ಯಾಡ್ ಬರ್ನಿಂಗ್ ಮಸಿನ್, ಪ್ರಥಮ ಚಿಕಿತ್ಸಾ ಕಿಟ್, ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಪ್ರತಿ ವಿದ್ಯಾರ್ಥಿಗೆ ೨೦ ನೋಟ್ ಬುಕ್, ಶಾಲಾ ಬ್ಯಾಗ್, ನೀರಿನ ಬಾಟಲ್, ಎರಡು ಜೊತೆ ಶೂ, ಸಾಕ್ಸ್, ಪೆನ್ಸಿಲ್ ಬಾಕ್ಸ್, ಪರೀಕ್ಷಾ ಪ್ಯಾಡ್, ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್, ಗುಣಮಟ್ಟದ ಪೇಂಟಿಂಗ್, ಕಂಪ್ಯೂಟರ್ ಶಿಕ್ಷಕಿ ಹಾಗು ಸ್ಕ್ಯಾವೆಂಜರ್, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಉನ್ನತ ವ್ಯಾಸಂಗ ಕಲ್ಪಿಸಿಕೊಡುವುದು ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಈ ಎರಡು ಕಂಪನಿಗಳ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗಿದೆ.
    ಮುಂದಿನ ದಿನಗಳಲ್ಲಿ ಈ ಶಾಲೆ ತಾಲೂಕಿನಲ್ಲಿಯೇ ಸರ್ಕಾರಿ ಶಾಲೆಗಳ ಪೈಕಿ ಮಾದರಿ ಶಾಲೆಯಾಗಿ ಹೊರಹೊಮ್ಮುವ ಮೂಲಕ ಭವಿಷ್ಯದ ವಿದ್ಯಾರ್ಥಿಗಳ ಆಶಾಕಿರಣವಾಗಲಿದೆ ಎಂದರೆ ತಪ್ಪಾಗಲಾರದು.  

ಎಂಪಿಎಂ ನೌಕರರಿಗೆ ಬಾಕಿ ವೇತನ ಬಾಕಿ ಬಿಡುಗಡೆಗೊಳಿಸಿ : ಶಾಸಕರಿಗೆ ಮನವಿ

ಕೆಲಸ ಖಾತರಿಯೊಂದಿಗೆ ಬಾಕಿ ವೇತನಕ್ಕೆ ವ್ಯವಸ್ಥಾಪಕ ನಿರ್ದೇಶಕರ ಭರವಸೆ

ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಹೊಂದದೆ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೨೨೦ ನೌಕರರ ಪೈಕಿ ೧೦೧ ನೌಕರರಿಗೆ ವೇತನ ಬಾಕಿ ನೀಡಲು ಸರ್ಕಾರಕ್ಕೆ ಆಗ್ರಹಿಸುವಂತೆ ನೌಕರರು ಶಾಸಕ ಬಿ.ಕೆ.ಸಂಗಮೇಶ್ವರ್‌ಗೆ ಮನವಿ ಮಾಡಿದ ಹಿನ್ನಲೆಯಲ್ಲಿ ಶಾಸಕರು ಕಾರ್ಖಾನೆಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು.
    ಭದ್ರಾವತಿ, ಫೆ. ೧೨:  ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಹೊಂದದೆ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೨೨೦ ನೌಕರರ ಪೈಕಿ ೧೦೧ ನೌಕರರಿಗೆ ವೇತನ ಬಾಕಿ ನೀಡಲು ಸರ್ಕಾರಕ್ಕೆ ಆಗ್ರಹಿಸುವಂತೆ ನೌಕರರು ಶಾಸಕ ಬಿ.ಕೆ.ಸಂಗಮೇಶ್ವರ್‌ಗೆ ಮನವಿ ಮಾಡಿದರು.    
       ಈಗಾಗಲೇ ಸರ್ಕಾರ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಹೊಂದದೆ ಬಾಕಿ ಉಳಿದುಕೊಂಡಿರುವ ನೌಕರರಿಗೆ ಸರ್ಕಾರದ ವಿವಿಧ ನಿಗಮ ಮಂಡಳಿಗಳಲ್ಲಿ  ನಿಯೋಜನೆ ಮೇರೆಗೆ ಕರ್ತವ್ಯಕ್ಕೆ ನೇಮಿಸಿಕೊಳ್ಳಲು ತೀರ್ಮಾನಿಸಿದೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ೧೧೯ ನೌಕರರು ಹೊರತುಪಡಿಸಿ ೧೦೧ ನೌಕರರಿಗೆ ಕಳೆದ ಸುಮಾರು ೫ ತಿಂಗಳಿನಿಂದ ವೇತನ ಇಲ್ಲವಾಗಿದೆ. ಮತ್ತೊಂದೆಡೆ ಈ ನೌಕರರಿಗೆ ಇನ್ನೂ ನಿಗಮ ಮಂಡಳಿಗಳಲ್ಲೂ ಸಹ ಕೆಲಸ ಖಾತರಿಯಾಗಿಲ್ಲ. ಈ ಹಿನ್ನಲೆಯಲ್ಲಿ ಅತಂತ್ರರಾಗಿರುವ ನೌಕರರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವೇತನ ಬಾಕಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್ ನೌಕರರ ಸಮಸ್ಯೆಗೆ ಪೂರಕವಾಗಿ ಸ್ಪಂದಿಸಿ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಿದರು. ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ನೌಕರರ ವೇತನ ಬಾಕಿ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು. ಸದ್ಯಕ್ಕೆ ನೌಕರರು ನಿಯೋಜನೆಗೊಳಿಸಿರುವ ನಿಗಮ ಮಂಡಳಿಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವುದು ಸೂಕ್ತ. ಇದರಿಂದ ನೌಕರರ ಕೆಲಸ ಖಾತರಿಯಾಗುವ ವಿಶ್ವಾಸವಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ನೌಕರರನ್ನು ಆಯಾ ನಿಗಮ ಮಂಡಳಿಗಳಲ್ಲಿಯೇ ವಿಲೀನಗೊಳಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ನೌಕರರು ಸಹಕರಿಸುವಂತೆ ಮನವಿ ಮಾಡಿದರು.
    ಜಯಪಾಲ್, ದಿನೇಶ್, ಮಂಜು ಸೇರಿದಂತೆ ಇನ್ನಿತರ ನೌಕರ ವರ್ಗದವರು,  ಪ್ರಗತಿಪರ ಸಂಘಟನೆಗಳ ಮುಖಂಡರಾದ ರಾಜು, ಉಪಸ್ಥಿತರಿದ್ದರು.