Wednesday, February 17, 2021

ಕಾಡುಕೋಣ ದಾಳಿಗೆ ಕಾಲೇಜು ವಿದ್ಯಾರ್ಥಿ ಬಲಿ


    ಭದ್ರಾವತಿ, ಫೆ. ೧೭: ಕಾಡುಕೋಣ ದಾಳಿಗೆ ತುತ್ತಾಗಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತಾಲೂಕಿನ ಅರಣ್ಯ ವ್ಯಾಪ್ತಿಯ ಬಿಸಿಲುಮನೆ ಗ್ರಾಮದಲ್ಲಿ ನಡೆದಿದೆ.
   ಅಂತರಗಂಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಗೌತಮ್ (೧೮) ಎಂಬಾತ ಜಾತ್ರೆ ಪ್ರಯುಕ್ತ ಮಂಗಳವಾರ ದೊಡ್ಡೇರಿ ಚೌಡಮ್ಮ ದೇವಸ್ಥಾನಕ್ಕೆ ಹೂವು ತಲುಪಿಸಲು ದ್ವಿಚಕ್ರವಾಹನದಲ್ಲಿ ಅಂತರಗಂಗೆ ಕ್ಯಾಂಪ್ ರಂಗನಾಥಪುರದಿಂದ ತೆರಳುತ್ತಿದ್ದಾಗ ಮಾರ್ಗಮಧ್ಯೆ ಬಿಸಿಲುಮನೆ ಗ್ರಾಮದ ಸಮೀಪ ಕಾಡುಕೋಣಗಳ ದಾಳಿಗೆ ಒಳಗಾಗಿ ಪ್ರಾಣ ಉಳಿಸಿಕೊಳ್ಳುವ ಜೀವ ಭಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.  
   ಮೃತನ ತಾಯಿ ಮಂಜಮ್ಮ ಹಾಗೂ ತಂದೆ ಕುಮರೇಶ್ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆಯ ಶವಾಗಾರದ ಬಳಿ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.  ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಸ್.ಕುಮಾರ್ ಸೇರಿದಂತೆ ಮುಖಂಡರುಗಳು ಭೇಟಿ ನೀಡಿ ಸ್ವಾಂತನ ಹೇಳಿದರು.
   ಕಾಡಿನಂಚಿನ ದೊಡ್ಡೇರಿ- ಗಂಗೂರು ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು ಕಂಗಲಾಗಿದ್ದು, ರೈತರು ಬೆಳೆ ಹಾನಿ ಜೊತೆಗೆ ಜೀವ ಭಯದಲ್ಲಿ ಬದುಕು ಸಾಗಿಸುವಂತಾಗಿದೆ. ಅರಣ್ಯ ಇಲಾಖೆ ಗ್ರಾಮಸ್ಥರಿಗೆ ರಕ್ಷಣೆ ನೀಡುವ ಜೊತೆಗೆ ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ.

Tuesday, February 16, 2021

ಸೈದರ ಕಲ್ಲಹಳ್ಳಿ, ಸನ್ಯಾಸಿಕೊಡಮಗ್ಗೆ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

   ಭದ್ರಾವತಿ, ಫೆ. ೧೬: ತಾಲೂಕಿನ ಎರಡು ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮಂಗಳವಾರ ನಡೆಯಿತು.
    ಸೈದರ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ  ಒಟ್ಟು ೯ ಸದಸ್ಯರಿದ್ದು, 'ಎ' ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸುಪ್ರಿತ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ಮಲ್ಲೇಶಪ್ಪ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
   ಸನ್ಯಾಸಿಕೊಡಮಗ್ಗೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೦ ಸದಸ್ಯರಿದ್ದು,  ಪರಿಶಿಷ್ಟ ಜಾತಿಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಬಿ. ನಾಗೇಶಪ್ಪ ಹಾಗು 'ಎ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ನೀಲಮ್ಮ ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

Monday, February 15, 2021

ಮಹಿಳಾ ಸೇವಾ ಸಮಾಜದ ಕಟ್ಟಡ ಉದ್ಘಾಟನೆ

ಸುಮಾರು ೫ ದಶಕಗಳಿಗೂ ಹಳೇಯದಾದ ಹಳೇನಗರದ ಮಹಿಳಾ ಸೇವಾ ಸಮಾಜದ ನೂತನ ಕಟ್ಟಡವನ್ನು ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
   ಭದ್ರಾವತಿ, ಫೆ. ೧೫: ಸುಮಾರು ೫ ದಶಕಗಳಿಗೂ ಹಳೇಯದಾದ ಹಳೇನಗರದ ಮಹಿಳಾ ಸೇವಾ ಸಮಾಜದ ನೂತನ ಕಟ್ಟಡವನ್ನು ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
     ಈ ಮಹಿಳಾ ಸೇವಾ ಸಮಾಜ ತನ್ನದೇ ಆದ ವಿಶಿಷ್ಟತೆಯಿಂದ ಗುರುತಿಸಿಕೊಂಡಿದೆ. ಹಳೇಯ ಕಟ್ಟಡ ಶಿಥಿಲಗೊಂಡ ಹಿನ್ನಲೆಯಲ್ಲಿ ಅದನ್ನು ನೆಲಸಮಗೊಳಿಸಿ ನಗರಸಭೆ ಅನುದಾನದಲ್ಲಿ ಸುಮಾರು ೨೦ ಲಕ್ಷ ರು. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ಮೇಲ್ಭಾಗದ ಕಟ್ಟಡಕ್ಕೆ ಸಂಸದರ ನಿಧಿಯಿಂದ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಭೂಮಿ ಪೂಜೆ ಸಹ ನೆರವೇರಿಸಲಾಯಿತು.
    ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಭೋವಿ ನಿಗಮದ ನಿರ್ದೇಶಕ ಜಿ. ಆನಂದಕುಮಾರ್, ಸಮಾಜದ ಹಿರಿಯ ಸದಸ್ಯರು, ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ಮನವಿ

  ಭದ್ರಾವತಿ ತಾಲೂಕಿನ ವಿವಿಧೆಡೆ ಗ್ರಾಮೀಣ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಸೋಮವಾರ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕಿ ಅಮೂಲ್ಯರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
    ಭದ್ರಾವತಿ, ಫೆ. ೧೫: ತಾಲೂಕಿನ ವಿವಿಧೆಡೆ ಗ್ರಾಮೀಣ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಸೋಮವಾರ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕಿ ಅಮೂಲ್ಯರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
   ಕೋವಿಡ್-೧೯ರ ಹಿನ್ನಲೆಯಲ್ಲಿ ಕಡಿತಗೊಳಿಸಲಾಗಿದ್ದ ಬಸ್ ಸಂಚಾರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಇನ್ನೂ ಸರಿಯಾಗಿ ಆರಂಭಗೊಂಡಿಲ್ಲ. ಬಸ್‌ಗಳ ಸಂಚಾರ ಕಡಿಮೆ ಇದ್ದು, ಇದರಿಂದಾಗಿ ಬಹಳಷ್ಟು ಕಡೆ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು, ಸರ್ಕಾರಿ ಹಾಗು ಖಾಸಗಿ ನೌಕರರು, ಕೂಲಿ ಕಾರ್ಮಿಕರು, ವೃದ್ದರು, ಮಹಿಳೆಯರು ನಗರ ಪ್ರದೇಶಗಳಿಗೆ ಬಂದು ಹೋಗುವುದು ಕಷ್ಟಕರವಾಗಿದೆ ಎಂದು ಅಳಲು ವ್ಯಕ್ತಪಡಿಸಲಾಗಿದೆ.
   ತಕ್ಷಣ ಒಂದನೇ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಟಿಪ್ಪು ಸರ್ಕಲ್, ಅನ್ವರ್ ಕಾಲೋನಿ, ಅಮೀರ್ ಜಾನ್ ಕಾಲೋನಿ, ಹೊಳೆಹೊನ್ನೂರು ಮಾರ್ಗವಾಗಿ ದಾಸರಕಲ್ಲಹಳ್ಳಿಯಿಂದ ಹೊಳೆಹೊನ್ನೂರುವರೆಗೆ, ಎರಡನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ಅರಬಿಳಚಿವರೆಗೆ, ಮೂರನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ಹೊಸಮನೆ, ಕಾಚಗೊಂಡನಹಳ್ಳಿ, ದೇವರಹಳ್ಳಿ, ಗುಡ್ಡದ ನೇರಳೆಕೆರೆವರೆಗೆ ಹಾಗು ನಾಲ್ಕನೇ ಮಾರ್ಗವಾಗಿ ತಾಲೂಕಿನ ಹೊಳೆಹೊನ್ನೂರು, ಕೈಮರ, ಕಲ್ಲಿಹಾಳ್, ಮಾರಶೆಟ್ಟಿಹಳ್ಳಿ, ಅರಬಿಳಚಿ, ಅರಬಿಳಚಿ ಕ್ಯಾಂಪ್, ಕೂಡ್ಲಿಗೆರೆ, ಅರಳಿಹಳ್ಳಿ, ಶ್ರೀರಾಮನಗರ, ಸೀಗೆಬಾಗಿ ಮೂಲಕ ಆಲ್ ಮಹಮೂದ್ ಶಾಲೆ, ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಿಂದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ವರೆಗೆ ಮತ್ತು ೫ನೇ ಮಾರ್ಗವಾಗಿ ಮುಖ್ಯ ಬಸ್ ನಿಲ್ದಾಣದಿಂದ ನ್ಯೂಟೌನ್, ಜಯಶ್ರೀ ಸರ್ಕಲ್, ಮಿಲ್ಟ್ರಿಕ್ಯಾಂಪ್, ಬೊಮ್ಮನಕಟ್ಟೆ, ಹಿರಿಯೂರು, ಗೊಂದಿ, ಹುಣಸೇಕಟ್ಟೆ ಜಂಕ್ಷನ್‌ವರೆಗೆ ಬಸ್ ಸಂಚಾರ ಆರಂಭಿಸುವಂತೆ ಮನವಿ ಮಾಡಲಾಗಿದೆ.
   ಎಸ್‌ಡಿಪಿಐ ತಾಲೂಕು ಘಟಕದ ಅಧ್ಯಕ್ಷ ಮಹಮದ್ ತಾಹೇರ್, ಕಾರ್ಯದರ್ಶಿ ಮಹಮದ್ ಗೌಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

೨ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಭದ್ರಾವತಿ, ಫೆ. ೧೫: ತಾಲೂಕಿನ ೨ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.
    ತಾಲೂಕಿನ ಗುಡುಮಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೮ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎಚ್.ಆರ್ ಪುಟ್ಟಪ್ಪ, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಪುಷ್ಪ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
    ತಾಲೂಕಿನ ಆಗರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಜನ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸಿದ್ದಪ್ಪ ಹಾಗು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳ  ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

Sunday, February 14, 2021

ವಿವಿಧೆಡೆ ಅಂಗಡಿಮುಂಗಟ್ಟು ಮೇಲೆ ದಾಳಿ : ೧೫೨೦ ರು. ದಂಡ ವಸೂಲಾತಿ

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಭದ್ರಾವತಿ ತಾಲೂಕಿನ ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ವೀರಾಪುರ ವ್ಯಾಪ್ತಿಯ ವಿವಿಧೆಡೆ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
   ಭದ್ರಾವತಿ, ಫೆ. ೧೪: ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಾಲೂಕಿನ ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ವೀರಾಪುರ ವ್ಯಾಪ್ತಿಯ ವಿವಿಧೆಡೆ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ೧೫೨೦ ರು. ದಂಡ ವಸೂಲಾತಿ ಮಾಡಲಾಗಿದೆ.
   ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಅಲ್ಲದೆ ತಂಬಾಕು ಉತ್ಪನ್ನಗಳ ಕುರಿತು ಅಂಗಡಿಮುಂಗಟ್ಟುಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
   ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್,   ಹಿರಿಯ ಆರೋಗ್ಯ ಸಹಾಯಕರಾದ ಆನಂದಮೂರ್ತಿ ಮತ್ತು ಹಾಲಸ್ವಾಮಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್, ರವಿರಾಜ್, ಕಿರಿಯ ಆರೋಗ್ಯ ಸಹಾಯಕರಾದ ಮನೋಹರ್, ಚೇತನ್ ಹಾಗೂ ಉಷಾ ಸೇರಿದಂತೆ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.  

ದೇಶಪ್ರೇಮಿ ದಿನಾಚರಣೆ : ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

ರಾಮ್ ಸೇನಾ ವತಿಯಿಂದ ದೇಶಪ್ರೇಮಿ ದಿನಾಚರಣೆ ಅಂಗವಾಗಿ ಭದ್ರಾವತಿ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಭಾನುವಾರ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಭದ್ರಾವತಿ, ಫೆ. ೧೪: ರಾಮ್ ಸೇನಾ ವತಿಯಿಂದ ದೇಶಪ್ರೇಮಿ ದಿನಾಚರಣೆ ಅಂಗವಾಗಿ ನಗರದ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಭಾನುವಾರ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಫೆ.೧೪, ೨೦೧೯ರಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆ ಸಲ್ಲಿಸಿ ಮೌನಾಚರಣೆ ನಡೆಸಲಾಯಿತು. ಅಲ್ಲದೆ ದೇಶ ರಕ್ಷಣೆಯಲ್ಲಿ ಯೋಧರ ಸೇವೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖರಾದ ಉಮೇಶ್‌ಗೌಡ, ಅವಿನಾಶ್, ಮೋಹನ್, ಸಂತೋಷ್, ರಮೆಶ್, ಕೃಷ್ಣ, ಜೋಗಿ, ಪ್ರಕಾಶ್, ಕಾರ್ತಿಕ್, ರೋಹಿತ್, ಸುನಿಲ್ ಮತ್ತು ಪ್ರಭು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿಯಲ್ಲಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಮೇಣದ ಬತ್ತಿ ಹಚ್ಚುವ ಮೂಲಕ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
   ಮಾಜಿ ಸೈನಿಕರ ಸಂಘದಿಂದ ಗೌರವ ನಮನ :
  ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಮೇಣದ ಬತ್ತಿ ಹಚ್ಚುವ ಮೂಲಕ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
  ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ದೇಶ ರಕ್ಷಣೆಯಲ್ಲಿ ಸೈನಿಕರ ಸೇವೆ ಅವಿಸ್ಮರಣೀಯವಾಗಿದೆ. ಸೈನಿಕರು ಎಂದಿಗೂ ಅಮರ. ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
   ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ಸ್ವಯಂ ಸೇವಕ ಕಿರಣ್, ಶಿಕ್ಷಕ ಎ. ತಿಪ್ಪೇಸ್ವಾಮಿ, ಎಎಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಮಾಜಿ ಸೈನಿಕರ ಸಂಘ ಹಾಗು ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.