Thursday, February 18, 2021

ಶ್ರೀ ಸಂತ ಸೇವಾಲಾಲ್ ಮರಿಯಮ್ಮ ದೇವಸ್ಥಾನ ಪುನರ್ ನಿರ್ಮಾಣ ಮಾಡಿ

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ : ಗೃಹ ಸಚಿವರಿಗೆ ಮನವಿ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಅರೇಹಳ್ಳಿ ತಾಂಡದ ಗೋಮಾಳ ಜಾಗದಲ್ಲಿ ನಿರ್ಮಿಸಲಾಗಿದ್ದ ಶ್ರೀ ಸಂತ ಸೇವಾಲಾಲ್ ಮರಿಯಮ್ಮ ದೇವಸ್ಥಾನವನ್ನು ಪುನರ್ ನಿರ್ಮಾಣ ಮಾಡುವಂತೆ ಹಾಗು ದೇವಸ್ಥಾನ ನೆಲಸಮಗೊಳಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ಭದ್ರಾವತಿಯಲ್ಲಿ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೧೮: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಅರೇಹಳ್ಳಿ ತಾಂಡದ ಗೋಮಾಳ ಜಾಗದಲ್ಲಿ ನಿರ್ಮಿಸಲಾಗಿದ್ದ ಶ್ರೀ ಸಂತ ಸೇವಾಲಾಲ್ ಮರಿಯಮ್ಮ ದೇವಸ್ಥಾನವನ್ನು ಪುನರ್ ನಿರ್ಮಾಣ ಮಾಡುವಂತೆ ಹಾಗು ದೇವಸ್ಥಾನ ನೆಲಸಮಗೊಳಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
   ಸುಮಾರು ೨೦ ವರ್ಷಗಳಿಂದಲೂ ಶ್ರೀ ಸಂತ ಸೇವಾಲಾಲ್ ಮರಿಯಮ್ಮ ದೇವಸ್ಥಾನವಿದ್ದು, ಈ ದೇವಸ್ಥಾನದಿಂದ ಯಾರಿಗೂ ತೊಂದರೆಯಾಗಿರುವುದಿಲ್ಲ. ಕೆಲವು ಕಿಡಿಗೇಡಿಗಳು ಜಾಗವನ್ನು ಕಬಳಿಸುವ ಹುನ್ನಾರದಿಂದ ಹಾಗು ಬಂಜಾರ ಸಮಾಜಕ್ಕೆ ಮಸಿ ಬಳಿಯ ಬೇಕೆಂಬ ದುರುದ್ದೇಶದಿಂದ ದೇವಸ್ಥಾನವನ್ನು ನೆಲಸಮ ಗೊಳಿಸಿದ್ದಾರೆಂದು ಆರೋಪಿಸಲಾಯಿತು.
   ಈ ಕೃತ್ಯ ಬಂಜಾರ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮೂಲಕ ಗಲಭೆಗೆ ಕಾರಣವಾಗುವ ಮೊದಲು ಕೃತ್ಯಕ್ಕೆ ಕಾರಣರಾದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ದೇವಸ್ಥಾನವನ್ನು ಪುನರ್ ನಿರ್ಮಾಣ ಮಾಡಬೇಕೆಂದು ಆಗ್ರಹಿಸಲಾಯಿತು.
ಬಂಜಾರ ಯುವಕರ ಸಂಘದ ತಾಲೂಕು ಅಧ್ಯಕ್ಷ ಪಿ. ಕೃಷ್ಣನಾಯ್ಕ, ಪ್ರಮುಖರಾದ ಶಂಕರನಾಯ್ಕ, ನಾಗನಾಯ್ಕ, ಮಂಜುನಾಯ್ಕ, ವೆಂಕಟೇಶ್‌ನಾಯ್ಕ ಮತ್ತು ಚಂದ್ರನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, February 17, 2021

ಫೆ.೨೧ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ

ಭದ್ರಾವತಿ, ಫೆ. ೧೭: ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದಲ್ಲಿ ಫೆ.೨೧ರ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ರ ವರೆಗೆ ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
      ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುತ್ತಿರುವುದು, ಕಣ್ಣು ಉರಿ, ಕಣ್ಣು ಕೆಂಪಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರು ಹಾಗು ದೂರ ದೃಷ್ಠಿ ಮತ್ತು ಸಮೀಪ ದೃಷ್ಠಿ ತೊಂದರೆ ಇರುವವರಿಗೆ ಹೆಚ್ಚಿನ ಅನುಕೂಲವಾಗಲಿದೆ.
   ಪ್ರತಿ ತಿಂಗಳು ದಿನಾಂಕ ೨೧ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಮೊ:೯೪೮೦೨೮೩೦೩೦ ಅಥವಾ ೯೪೪೮೨೫೫೫೪೪ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಶ್ರೀ ಮಾತಂಗಮ್ಮ ದೇವಿಯ ಉತ್ಸವ ಮೂರ್ತಿಗೆ ಕಲಾಹೋಮ, ಕುಂಬಾಭಿಷೇಕ

ಭದ್ರಾವತಿ, ಫೆ. ೧೭: ಹಿರಿಯೂರು ಡಾ. ಬಿ.ಆರ್ ಅಂಬೇಡ್ಕರ್ ಕಾಲೋನಿಯಲ್ಲಿರುವ ಶ್ರೀ ಮಾತಂಗಮ್ಮ ದೇವಿ ಮತ್ತು ಶ್ರೀ ದುರ್ಗಮ್ಮ ದೇವಿ ಹಾಗು ಶ್ರೀ ಕಲುಬೆ ರಂಗನಾಥಸ್ವಾಮಿ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಾತಂಗಮ್ಮ ದೇವಿಯ ಉತ್ಸವ ಮೂರ್ತಿಗೆ ಕಲಾಹೋಮ ಮತ್ತು ಕುಂಬಾಭಿಷೇಕ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಹಿರಿಯೂರು ಶ್ರೀ ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ ಮತ್ತು ಚಿತ್ರದುರ್ಗ ಆದಿಜಾಂಬವ ಮಠದ ಶ್ರೀ ಷಡಕ್ಷರ ಮುನಿ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಶ್ರೀ ಮಾತಂಗಮ್ಮ ದೇವಿಯ ಉತ್ಸವ ಮೂರ್ತಿಗೆ ಕಲಾಹೋಮ ಮತ್ತು ಕುಂಬಾಭಿಷೇಕ ಮಹೋತ್ಸವ ಯಶಸ್ವಿಯಾಗಿ ಜರುಗಲು ಕಾರಣಕರ್ತರಾದ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಕರ್ತರು ಹಾಗು ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.
ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್,  ಪ್ರಮುಖರಾದ ಬಾರಂದೂರು ರಂಗಪ್ಪ, ಕೃಷ್ಣಪ್ಪ ವೀರಾಪುರ, ಕೃಷ್ಣ, ಗವಿಸಿದ್ದಪ್ಪ, ಪ್ರಭಾಕರ್, ಮಹೇಶ್, ಹರೀಶ್, ಸಂಪತ್‌ಕುಮಾರ್, ಕೃಷ್ಣ, ಶಿವು, ಸಿದ್ದಪ್ಪ, ಸುನಿಲ್, ಅಣ್ಣಪ್ಪ, ಮಂಜುನಾಥ್ ಸೇರದಿಂತೆ ಇನ್ನಿತರರು ಉಪಸ್ಥಿತರಿದ್ದರು.

ಚಿತ್ರ: ಡಿ೧೭-ಬಿಡಿವಿಟಿ೩
ಹಿರಿಯೂರು ಡಾ. ಬಿ.ಆರ್ ಅಂಬೇಡ್ಕರ್ ಕಾಲೋನಿಯಲ್ಲಿರುವ ಶ್ರೀ ಮಾತಂಗಮ್ಮ ದೇವಿ ಮತ್ತು ಶ್ರೀ ದುರ್ಗಮ್ಮ ದೇವಿ ಹಾಗು ಶ್ರೀ ಕಲುಬೆ ರಂಗನಾಥಸ್ವಾಮಿ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಾತಂಗಮ್ಮ ದೇವಿಯ ಉತ್ಸವ ಮೂರ್ತಿಗೆ ಕಲಾಹೋಮ ಮತ್ತು ಕುಂಬಾಭಿಷೇಕ ಮಹೋತ್ಸವ ಧಾರ್ಮಿಕ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.

ಫೆ.೨೦ರಂದು ಬೃಹತ್ ಪ್ರತಿಭಟನಾ ಮೆರವಣಿಗೆ

   

   ಭದ್ರಾವತಿ, ಫೆ. ೧೭: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಫೆ.೨೦ ರಂದು ಬೆಳಿಗ್ಗೆ ೧೦ ಗಂಟೆಗೆ ನಗರ ಹಾಗು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
    ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕರ್ತರು, ರೈತರು, ಕಾರ್ಮಿಕರು, ಮಹಿಳಾ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು, ವರ್ತಕರು, ವ್ಯಾಪಾರಸ್ಥರು, ಯುವ ಸಮುದಾಯದವರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಫೆ. ೧೯ ಶಿವಾಜಿ ಮಹಾರಾಜರ ೩೯೪ನೇ ಜಯಂತ್ಯೋತ್ಸವ

  

   ಭದ್ರಾವತಿ, ಫೆ. ೧೭: ನಗರದ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ವತಿಯಿಂದ ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ಸಹಯೋಗದೊಂದಿಗೆ ಫೆ. ೧೯ರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಶಿವಾಜಿ ಮಹಾರಾಜರ ೩೯೪ನೇ ಜಯಂತ್ಯೋತ್ಸವ ತಾಲೂಕು ಕಚೇರಿ ಸಭಾಂಗಣದಲ್ಲಿ  ಹಮ್ಮಿಕೊಳ್ಳಲಾಗಿದೆ.
    ಸಂಘದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ ಅಧ್ಯಕ್ಷತೆ ವಹಿಸಲಿದ್ದು, ಕೋವಿಡ್-೧೯ರ ಹಿನ್ನಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ.
  ಸಮಾಜ ಬಂಧುಗಳು, ಸಾರ್ವಜನಿಕರು ಸಹಕರಿಸುವಂತೆ ಕಾರ್ಯದರ್ಶಿ ಪ್ರಕಾಶ್‌ರಾವ್ ದುರೆ ಕೋರಿದ್ದಾರೆ.  

ಕಾಡುಕೋಣ ದಾಳಿಗೆ ಕಾಲೇಜು ವಿದ್ಯಾರ್ಥಿ ಬಲಿ


    ಭದ್ರಾವತಿ, ಫೆ. ೧೭: ಕಾಡುಕೋಣ ದಾಳಿಗೆ ತುತ್ತಾಗಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತಾಲೂಕಿನ ಅರಣ್ಯ ವ್ಯಾಪ್ತಿಯ ಬಿಸಿಲುಮನೆ ಗ್ರಾಮದಲ್ಲಿ ನಡೆದಿದೆ.
   ಅಂತರಗಂಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಗೌತಮ್ (೧೮) ಎಂಬಾತ ಜಾತ್ರೆ ಪ್ರಯುಕ್ತ ಮಂಗಳವಾರ ದೊಡ್ಡೇರಿ ಚೌಡಮ್ಮ ದೇವಸ್ಥಾನಕ್ಕೆ ಹೂವು ತಲುಪಿಸಲು ದ್ವಿಚಕ್ರವಾಹನದಲ್ಲಿ ಅಂತರಗಂಗೆ ಕ್ಯಾಂಪ್ ರಂಗನಾಥಪುರದಿಂದ ತೆರಳುತ್ತಿದ್ದಾಗ ಮಾರ್ಗಮಧ್ಯೆ ಬಿಸಿಲುಮನೆ ಗ್ರಾಮದ ಸಮೀಪ ಕಾಡುಕೋಣಗಳ ದಾಳಿಗೆ ಒಳಗಾಗಿ ಪ್ರಾಣ ಉಳಿಸಿಕೊಳ್ಳುವ ಜೀವ ಭಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.  
   ಮೃತನ ತಾಯಿ ಮಂಜಮ್ಮ ಹಾಗೂ ತಂದೆ ಕುಮರೇಶ್ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆಯ ಶವಾಗಾರದ ಬಳಿ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.  ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಸ್.ಕುಮಾರ್ ಸೇರಿದಂತೆ ಮುಖಂಡರುಗಳು ಭೇಟಿ ನೀಡಿ ಸ್ವಾಂತನ ಹೇಳಿದರು.
   ಕಾಡಿನಂಚಿನ ದೊಡ್ಡೇರಿ- ಗಂಗೂರು ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು ಕಂಗಲಾಗಿದ್ದು, ರೈತರು ಬೆಳೆ ಹಾನಿ ಜೊತೆಗೆ ಜೀವ ಭಯದಲ್ಲಿ ಬದುಕು ಸಾಗಿಸುವಂತಾಗಿದೆ. ಅರಣ್ಯ ಇಲಾಖೆ ಗ್ರಾಮಸ್ಥರಿಗೆ ರಕ್ಷಣೆ ನೀಡುವ ಜೊತೆಗೆ ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ.

Tuesday, February 16, 2021

ಸೈದರ ಕಲ್ಲಹಳ್ಳಿ, ಸನ್ಯಾಸಿಕೊಡಮಗ್ಗೆ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

   ಭದ್ರಾವತಿ, ಫೆ. ೧೬: ತಾಲೂಕಿನ ಎರಡು ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮಂಗಳವಾರ ನಡೆಯಿತು.
    ಸೈದರ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ  ಒಟ್ಟು ೯ ಸದಸ್ಯರಿದ್ದು, 'ಎ' ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸುಪ್ರಿತ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ಮಲ್ಲೇಶಪ್ಪ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
   ಸನ್ಯಾಸಿಕೊಡಮಗ್ಗೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೦ ಸದಸ್ಯರಿದ್ದು,  ಪರಿಶಿಷ್ಟ ಜಾತಿಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಬಿ. ನಾಗೇಶಪ್ಪ ಹಾಗು 'ಎ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ನೀಲಮ್ಮ ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.