ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆ
![](https://blogger.googleusercontent.com/img/b/R29vZ2xl/AVvXsEhwszQj2vr3H7MuAOoRgBmYzvR2m40A0zHHChw6loNwCKtfumjaCecdFIjW2pOeNTzy2elBM2AXuk9SyEgGcWTBpTSWbTxzkzh0tI_fBo55s9fhFwXIK0lC8Fgrzvmve-ZmMM_fzT0c91rz/w640-h304-rw/D20-BDVT-799675.jpg)
ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಭದ್ರಾವತಿಯಲ್ಲಿ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಫೆ. ೨೦: ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ನಗರದಲ್ಲಿ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಹಾಗು ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಮತ್ತು ನಗರದ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಖಾಸಗೀಕರಣಗೊಳಿಸುತ್ತಿರುವುದನ್ನು ಖಂಡಿಸಿ ನಗರ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆ ಹಲವು ವಿಭಿನ್ನತೆಗಳಿಗೆ ಸಾಕ್ಷಿಯಾಯಿತು.
ಪ್ರತಿಭಟನಾ ಮೆರವಣಿಗೆಯಲ್ಲಿ ಎತ್ತಿನ ಗಾಡಿ, ಟ್ರ್ಯಾಕ್ಟರ್ಗಳು ಒಂದೆಡೆ ಕಂಡು ಬಂದರೆ, ಮತ್ತೊಂದೆಡೆ ಕತ್ತೆಗಳನ್ನು ಸಹ ವಿಶೇಷ ಎಂಬಂತೆ ಹೂವಿನ ಹಾರಗಳೊಂದಿಗೆ ಕರೆತರಲಾಗಿತ್ತು. ಜೊತೆಗೆ ಜಾನಪದ ತಂಡಗಳು ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.
ಸರ್ಕಾರದ ಶೋಷಣೆಗಳ ವಿರುದ್ಧ ಎಂದಿಗೂ ನಾನು ಜನರ ಪರವಾಗಿ ಹೋರಾಟ ನಡೆಸುತ್ತೇನೆ. ಕ್ಷೇತ್ರದ ಜನರು ಯಾವುದೇ ರೀತಿ ಆತಂಕಕ್ಕೆ ಒಳಗಾಗದಿರಿ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ತಕ್ಷಣ ಜನವಿರೋಧಿ ಧೋರಣೆಗಳಿಂದ ಹೊರಬರಬೇಕು.
- ಬಿ.ಕೆ ಸಂಗಮೇಶ್ವರ್, ಶಾಸಕರು, ಭದ್ರಾವತಿ.
ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಮಾತನಾಡಿ, ಕೇಂದ್ರ ಹಾಗು ರಾಜ್ಯ ಬಿಜೆಪಿ ಸರ್ಕಾರಗಳು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬರುವ ಮೂಲಕ ಜನಸಾಮಾನ್ಯರನ್ನು ಶೋಷಿಸುತ್ತಿವೆ. ಬಡವರು ಬದುಕುವುದು ದುಸ್ತರವಾಗಿದ್ದು, ಅಗತ್ಯ ವಸ್ತುಗಳಾದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ದಿನ ದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದಾಗಿ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಲ್ಲದೆ ರೈತ ಹಾಗು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಇವರ ಬದುಕು ಸಹ ಅತಂತ್ರವನ್ನಾಗಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡಿಯಬೇಕು. ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಅಭಿವೃದ್ಧಿಪಡಿಸಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬಡವರ, ರೈತರ, ಕಾರ್ಮಿಕರ ವಿರೋಧಿಗಳಾಗಿದ್ದು, ಬಂಡವಾಳ ಶಾಹಿಗಳ ಪರವಾದ ಸರ್ಕಾರಗಳಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ಎರಡು ಸರ್ಕಾರಗಳು ಅಧಿಕಾರದಲ್ಲಿ ಮುಂದುವರೆಯುವುದರಲ್ಲಿ ಯಾವುದೇ ನೈತಿಕತೆ ಇಲ್ಲ.
- ಕಿಮ್ಮನೆ ರತ್ನಾಕರ, ಮಾಜಿ ಸಚಿವರು.
ಪ್ರತಿಭಟನಾ ಮೆರವಣಿಗೆ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಆರಂಭಗೊಂಡು ಬಿ.ಎಚ್ ರಸ್ತೆ ಮೂಲಕ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿವರೆಗೂ ಸಾಗಿತು.
ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ತಾಲೂಕು ಪಂಚಾಯಿತಿ ಹಾಗು ವಿವಿಧ ಗ್ರಾಮ ಪಂಚಾಯಿತಿಗಳ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮಹಿಳಾ ಘಟಕ ಅಧ್ಯಕ್ಷೆ ಶೋಭಾ ರಾಮಚಂದ್ರ, ಯುವ ಘಟಕ ಅಧ್ಯಕ್ಷ ಜಿ. ವಿನೋದ್ಕುಮಾರ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
ಸುಮಾರು ೩ ತಾಸು ಸಂಚಾರ ದಟ್ಟಣೆ:
ಸುಮಾರು ೧೧ ಗಂಟೆಗೆ ಆರಂಭವಾದ ಪ್ರತಿಭಟನೆ ಮಧ್ಯಾಹ್ನ ೨ ಗಂಟೆಗೆ ಮುಕ್ತಾಯಗೊಂಡಿತು. ಪ್ರತಿಭಟನೆ ಆರಂಭಗೊಳ್ಳುತ್ತಿದ್ದಂತೆ ಬಿ.ಎಚ್ ರಸ್ತೆಯಲ್ಲಿ ವಾಹನದಟ್ಟಣೆ ಉಂಟಾಗಿದ್ದು, ಸಂಚಾರಿ ಪೊಲೀಸರು ಸಂಚಾರ ನಿಯಂತ್ರಿಸಲು ಹರಸಾಹಸಪಡುವಂತಾಯಿತು. ಹೊಸ ಸೇತುವೆ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರೂ ಸಹ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ಸುಮಾರು ೩ ತಾಸು ಸಂಚಾರ ದಟ್ಟಣೆ ಕಂಡು ಬಂದಿತು.
ಪ್ರತಿಷ್ಠೆಯ ಮೆರವಣಿಗೆ :
ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನದ ನಂತರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಕೈಗೊಂಡ ಮೊದಲ ಪ್ರತಿಭಟನಾ ಮೆರವಣಿಗೆ ಇದಾಗಿದ್ದು, ಈ ಹಿನ್ನಲೆಯಲ್ಲಿ ಸ್ವತಃ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ವರ್ಗದವರು ಮತ್ತು ಪಕ್ಷದ ಮುಖಂಡರು, ಬೆಂಬಲಿಗರು ಸುಮಾರು ೧೫ ದಿನಗಳ ಹಿಂದೆಯೇ ಪ್ರತಿಭಟನೆ ರೂಪುರೇಷೆ ಸಿದ್ದಪಡಿಸಿಕೊಂಡಿದ್ದರು. ಸಾವಿರಾರು ಮಂದಿ ಪಾಲ್ಗೊಂಡು ಯಶಸ್ವಿಗೊಳಿಸಿರುವುದು ಶಾಸಕರ ಪ್ರತಿಷ್ಠೆಯಂತೆ ಕಂಡು ಬರುತ್ತಿದೆ.