Wednesday, February 24, 2021

ಪೊಗರು ಚಿತ್ರದಲ್ಲಿ ಬ್ರಾಹಣ ಸಮುದಾಯದ ಅವಹೇಳನ

ತಾಲೂಕು ಬ್ರಾಹ್ಮಣ ಸಭಾ ಖಂಡನೆ


ಎಂ.ಎಸ್ ಜನಾರ್ಧನ ಅಯ್ಯಂಗಾರ್
   ಭದ್ರಾವತಿ, ಫೆ. ೨೪: ಇತ್ತೀಚೆಗೆ ಬಿಡುಗಡೆಯಾದ ಪೊಗರು ಕನ್ನಡ ಚಲನಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅತ್ಯಂತ ಅವಮಾನವೀಯವಾಗಿ ಚಿತ್ರಿಸಿ, ಬ್ರಾಹ್ಮಣ ಸಮಾಜಕ್ಕೆ ಹಾಗು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ. ಇದನ್ನು ತಾಲೂಕು ಬ್ರಾಹ್ಮಣ ಸಭಾ ಖಂಡಿಸುತ್ತದೆ ಎಂದು ಸಭಾ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್ ತಿಳಿಸಿದ್ದಾರೆ.
   ಈ ಸಂಬಂಧ ಸಭಾ ಕಛೇರಿಯಲ್ಲಿ ಸಭೆ ನಡೆಸಲಾಗಿದ್ದು,  ಬ್ರಾಹ್ಮಣರು ಪ್ರತಿಭಟಿಸುವುದಿಲ್ಲ ಹಾಗು ಅವರಲ್ಲಿ ಐಕ್ಯತೆ ಇಲ್ಲ ಎಂಬ ಭಾವನೆಯಿಂದ ಪೊಗರು ಚಿತ್ರದಲ್ಲಿ ಅವಮಾನವೀಯವಾಗಿ ಚಿತ್ರಿಸಿ ಕ್ರೌರ ಮೆರೆಯಲಾಗಿದೆ. ಚಲನಚಿತ್ರಗಳು ಮನೋರಂಜನೆಯೊಂದಿಗೆ ಜನರಲ್ಲಿ ಸಾಮಾಜಿಕ ಹಾಗು ಧಾರ್ಮಿಕ ಅರಿವು ಮೂಡಿಸಬೇಕೇ ಹೊರತು ಧಾರ್ಮಿಕ ಮತ್ತು ಜಾತಿ ನಿಂದನೆ ಮಾಡುವುದು, ಅವಮಾನಿಸುವುದು ಸರಿಯಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಚಿತ್ರದ ನಿರ್ಮಾಪಕರು, ನಿರ್ದೇಶಕರು ಚಿತ್ರದಲ್ಲಿರುವ ಅವಮಾನವೀಯ ಭಾಗವನ್ನು ತೆಗೆದು ಹಾಕಬೇಕು. ಇದೆ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಾಹ್ಮಣ ಅರ್ಚಕ ಸಮುದಾಯದವರನ್ನು ಅವಮಾನಿಸಿದ್ದು, ಈ ಹಿನ್ನಲೆಯಲ್ಲಿ ಅವರು ತಕ್ಷಣ ಬಹಿರಂಗವಾಗಿ ಸಮುದಾಯದ ಕ್ಷಮೆಯಾಚಿಸಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
    ಸಭೆಯಲ್ಲಿ ಉಪಾಧ್ಯಕ್ಷ ರಮಾಕಾಂತ್, ಕಾರ್ಯದರ್ಶಿ ಜಿ. ರಮೇಶ್, ಖಜಾಂಚಿ ಮಂಜುನಾಥ್, ಇಂದ್ರಸೇನ್, ಪ್ರಭಾಕರ್ ಜೋಯ್ಸ್, ನರಸಿಂಹಸ್ವಾಮಿ, ನೀಲಕಂಠ ಜೋಯ್ಸ್, ರಾಜಶೇಖರ್, ಎನ್. ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರೆಂದು ಅಯ್ಯಂಗಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಫೆ.೨೫ರಂದು ‘ಸ್ವರ್ಣ ಬಿಂದು ಪ್ರಾಶನ’

   ಭದ್ರಾವತಿ, ಫೆ. ೨೪: ನಗರದ ತರೀಕೆರೆ ರಸ್ತೆಯಲ್ಲಿರುವ ಬಿ.ಜಿ.ಎಂ ಆಯುರ್ವೇದ ಮತ್ತು ಸಿದ್ದ ಚಿಕಿತ್ಸಾಲಯ ಹಾಗು ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದ ವತಿಯಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಲ್ಲಿ ಆರ್ಯುರ್ವೇದದ ಪ್ರತಿರಕ್ಷಣೆ ವಿಧಾನವಾದ 'ಸ್ವರ್ಣ ಬಿಂದು ಪ್ರಾಶನ' ಕಾರ್ಯಕ್ರಮ ಫೆ.೨೫ರಂದು ಹಮ್ಮಿಕೊಳ್ಳಲಾಗಿದೆ.
   ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಹಾಗು ಸಂಜೆ ೬ ಗಂಟೆಯಿಂದ ರಾತ್ರಿ ೮ ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ೧೬ ವರ್ಷದೊಳಗಿನ ಎಲ್ಲಾ ಮಕ್ಕಳು ಪ್ರತಿ ತಿಂಗಳು ಸ್ವರ್ಣ ಬಿಂದು ಪ್ರಾಶನ ಹಾಕಿಸಿಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವ ಜೊತೆಗೆ ಉತ್ತಮವಾದ ದೈಹಿಕ ಹಾಗು ಮಾನಸಿಕ ಬೆಳವಣಿಗೆ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಇದರ ಸದುಪಯೋಗಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಡಾ. ವಿಕ್ರಮ್ ಮೊ: ೯೭೪೧೭೩೫೩೫೯ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Tuesday, February 23, 2021

ಗ್ರಾಮ ಪಂಚಾಯಿತಿ ನೂತನ ಮಹಿಳಾ ಸದಸ್ಯರಿಗೆ ಕಾರ್ಯಾಗಾರ

ದಿ ಹಂಗರ್ ಪ್ರಾಜೆಕ್ಟ್ ಕರ್ನಾಟಕ ಮತ್ತು ತರೀಕೆರೆಯ ವಿಕಸನ ಸಂಸ್ಥೆ ವತಿಯಿಂದ ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ದುರ್ಗಾ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಸದಸ್ಯರಿಗೆ ೨ ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು.
    ಭದ್ರಾವತಿ, ಫೆ. ೨೩: ದಿ ಹಂಗರ್ ಪ್ರಾಜೆಕ್ಟ್ ಕರ್ನಾಟಕ ಮತ್ತು ತರೀಕೆರೆಯ ವಿಕಸನ ಸಂಸ್ಥೆ ವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ದುರ್ಗಾ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಸದಸ್ಯರಿಗೆ ೨ ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು.
  ಸಾಮಾಜಿಕ ನ್ಯಾಯ, ಲಿಂಗ ಅಸಮಾನತೆ, ರಾಜಕೀಯ ಮತ್ತು ನಾಗರೀಕತೆ, ಸಂವಿಧಾನ ತಿದ್ದುಪಡಿಗಳು, ಸಮಾನತೆ, ನಾಯಕತ್ವ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ನೀಡಲಾಯಿತು.
  ಕಾರ್ಯಾಗಾರದಲ್ಲಿ ತಾವರಘಟ್ಟ, ಸಿಂಗನಮನೆ, ಕಂಬದಾಳು ಹೊಸೂರು, ಕಾರೇಹಳ್ಳಿ, ಬಾರಂದೂರು ಮತ್ತು ಹಿರಿಯೂರು ಸೇರಿದಂತೆ ಒಟ್ಟು ೬ ಗ್ರಾಮ ಪಂಚಾಯಿತಿಗಳ ಸುಮಾರು ೪೨ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.
  ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀನಿವಾಸ್, ಎಂ.ಎಚ್ ಲಕ್ಷ್ಮಣ ಸೇರಿದಂತೆ ಇನ್ನಿತರರು ಪಾಲ್ಗೊಂಡು ಮಾಹಿತಿ ನೀಡಿದರು.

ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ : ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಎಬಿವಿಪಿ ಆಗ್ರಹ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಂಗಳವಾರ ಭದ್ರಾವತಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೨೩: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
   ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಈ ಹಿಂದೆ ಆಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಲಾಗಿತ್ತು. ಇದರ ಪರಿಣಾಮ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿಗೆ ತರಲಾಯಿತು. ಆದರೆ ಇದೀಗ ರಾಜ್ಯದ ಪ್ರತಿಷ್ಟಿತ ಮೆಡಿಕಲ್ ಕಾಲೇಜುಗಳಲ್ಲಿ ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ಇಲಾಖೆಯ ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ. ಈ ಹಿನ್ನಲೆಯಲ್ಲಿ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
  ಮನವಿ ಸಲ್ಲಿಸುವ ಸಂದರ್ಭದಲ್ಲಿ ಆಕಾಶ್, ಅವಿನಾಶ್, ಮನು, ದರ್ಶನ್, ಪುನೀತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, February 22, 2021

ಎರಡು ದೇವಾಲಯಗಳಲ್ಲಿ ಚಿನ್ನಾಭರಣ, ಕಾಣಿಕೆ ಹುಂಡಿ ಹಣ ಕಳವು

    ಭದ್ರಾವತಿ, ಫೆ. ೨೨: ನಗರ ಹಾಗು ಗ್ರಾಮಾಂತರ ಪೊಲೀಸ್ ವೃತ್ತ ವ್ಯಾಪ್ತಿಯ ಎರಡು ಕಡೆ ದೇವಾಲಯಗಳಲ್ಲಿ ಹುಂಡಿ ಕಾಣಿಕೆ ಹಣ ಹಾಗು ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆಗಳು ನಡೆದಿವೆ.
    ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆ ಸಮೀಪದ ಹೊಸ ಸಿದ್ಧಾಪುರ ಮಾರ್ಗದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಬೀಗ ಮುರಿದು ದೇವರ ಚಿನ್ನಾಭರಣ ಕಳವು ಮಾಡಲಾಗಿದೆ.
    ಇದೆ ರೀತಿ ಕಾಗದನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆಯ ಶ್ರೀ ಕಾಳಿಂಗೇಶ್ವರ ಸ್ವಾಮಿ ದೇವಾಲಯದಲ್ಲೂ ಸಹ ದೇವರ ಚಿನ್ನಾಭರಣ ಹಾಗು ಕಾಣಿಕೆ ಹುಂಡಿ ಹಣ ಕಳವು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಶೇ.೫ರಷ್ಟು ವಿನಾಯಿತಿ ಅವಧಿ ೧ ತಿಂಗಳು ವಿಸ್ತರಣೆ

   ಭದ್ರಾವತಿ, ಫೆ. ೨೨: ಸರ್ಕಾರದ ಆದೇಶದಂತೆ ನಗರಸಭೆ ಆಡಳಿತ ಆಸ್ತಿ ತೆರಿಗೆ ಪಾವತಿ ಮೇಲೆ ಶೇ.೫ರಷ್ಟು ವಿನಾಯಿತಿ ಅವಧಿಯನ್ನು ಒಂದು ತಿಂಗಳವರೆಗೆ ವಿಸ್ತರಿಸಿದೆ.
  ಫೆ.೧೯ರಿಂದ ಆದೇಶ ಜಾರಿಯಲ್ಲಿದ್ದು, ಈಗಾಗಲೇ ಆಸ್ತಿ ತೆರಿಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿದ್ದಲ್ಲಿ ವಿನಾಯಿತಿಯನ್ನು ಮುಂಬರುವ ವರ್ಷದ ತೆರಿಗೆ ಪಾವತಿಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಪೌರಾಯುಕ್ತ ಮನೋಹರ್ ಕೋರಿದ್ದಾರೆ.

ಫೆ.೨೩ರಂದು ಖಾಸಗಿ ಶಾಲೆಗಳು ಬಂದ್ : ರಾಜ್ಯ ಒಕ್ಕೂಟದ ಹೋರಾಟಕ್ಕೆ ಬೆಂಬಲ

   ಭದ್ರಾವತಿ, ಫೆ. ೨೨: ಸರ್ಕಾರ ಸರ್ವೋಚ್ಛ ನ್ಯಾಯಾಲಯದ ಆದೇಶ ಪಾಲಿಸುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಫೆ.೨೩ರಂದು ನಡೆಸುತ್ತಿರುವ ಹೋರಾಟಕ್ಕೆ ತಾಲೂಕು ಶಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.
   ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಾಲಾ ಶುಲ್ಕ ವಸೂಲಾತಿ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದರಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯಮಟ್ಟದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸರ್ವೋಚ್ಛ ನ್ಯಾಯಾಲಯದ ಮೊರೆಹೋದ ಹಿನ್ನಲೆಯಲ್ಲಿ ನ್ಯಾಯಾಲಯ ಶೇ.೧೦೦ರಷ್ಟು ಶುಲ್ಕ ಪಾವತಿಸಿಕೊಳ್ಳುವಂತೆ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶ ಎತ್ತಿ ಹಿಡಿಯುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ನಡೆಸಲಾಗುತ್ತಿದೆ.
   ಹೋರಾಟದ ಅಂಗವಾಗಿ ಬೆಂಗಳೂರಿನ ಮುಖ್ಯ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಕಾಲುನಡಿಗೆ ನಡೆಯಲಿದ್ದು, ನಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು. ಹೋರಾಟದಲ್ಲಿ ರಾಜ್ಯದ ವಿವಿಧೆಡೆಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದಾರೆ.  ರಾಜ್ಯ ಒಕ್ಕೂಟದ ಕರೆ ಮೇರೆಗೆ ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶಾಲೆಗಳಿಗೆ ರಜೆ ಘೋಷಿಸುವ ಮೂಲಕ ಹೋರಾಟ ಬೆಂಬಲಿಸುತ್ತಿವೆ. ಈ ಹಿನ್ನಲೆಯಲ್ಲಿ ತಾಲೂಕಿನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ಶಾಲೆಗಳಿಗೆ ರಜೆ ಘೋಷಿಸುವ ಮೂಲಕ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಲಿವೆ ಎಂದು ತಾಲೂಕು ಶಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.