Wednesday, March 3, 2021

ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳಿಗೆ ಚಾಲನೆ

ಭದ್ರಾವತಿ ನ್ಯೂಟೌನ್ ರಜತ ಮಹೋತ್ಸವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಸಕ್ತ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ಚಟುವಟಿಕೆಗಳಿಗೆ ಬೆಂಗಳೂರಿನ ಅಕ್ಷರ ದಾಸೋಹ ಆಯುಕ್ತರ ಕಛೇರಿಯ ಸಹನಿರ್ದೇಶಕ ಟಿ. ನಾರಾಯಣಗೌಡ ಚಾಲನೆ ನೀಡಿದರು.
    ಭದ್ರಾವತಿ, ಮಾ. ೩: ನಗರದ ನ್ಯೂಟೌನ್ ರಜತ ಮಹೋತ್ಸವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಸಕ್ತ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
   ಬೆಂಗಳೂರಿನ ಅಕ್ಷರ ದಾಸೋಹ ಆಯುಕ್ತರ ಕಛೇರಿಯ ಸಹನಿರ್ದೇಶಕ ಟಿ. ನಾರಾಯಣಗೌಡ ವಿಶೇಷವಾಗಿ ಆಯುರ್ವೇದಿಕ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಕಲಿಕೆ ಜೊತೆಗೆ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಪ್ರಜೆಯಾಗಿ ಹೊರಹೊಮ್ಮುವಂತೆ ಕರೆ ನೀಡಿದರು.
    ದೈಹಿಕ ಶಿಕ್ಷಕ ಶಿವಲಿಂಗೇಗೌಡ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಉದ್ದೇಶ ಹಾಗು ಬೆಳೆದು ಬಂದ ಹಾದಿಯನ್ನು ವಿವರಿಸಿದರು. ಶಿವಮೊಗ್ಗ ಉದ್ಯಮಿ ಸಮೀರ್ ೮ನೇ ತರಗತಿ ಮಕ್ಕಳಿಗೆ ಕೊಡುಗೆಯಾಗಿ ಶಾಲಾ ಬ್ಯಾಗ್‌ಗಳನ್ನು ನೀಡಿದ್ದು, ಈ ಬ್ಯಾಗ್‌ಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
   ಉಪಪ್ರಾಚಾರ್ಯ ಕೆ.ಎಚ್ ಮೋಹನೇಶ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿಯರಾದ ಮಹಾದೇವಿ ಪ್ರಾರ್ಥಿಸಿದರು. ಸಾವಿತ್ರಿ ಸ್ವಾಗತಿಸಿದರು. ಕಾರ್ಯಕ್ರಮಾಧಿಕಾರಿ ಎನ್.ಕೆ ಪಾಲಾಕ್ಷಪ್ಪ ನಿರೂಪಿಸಿದರು. ಶಿಕ್ಷಕಿ ಛಾಯಶ್ಯಾಮಸುಂದರ್ ವಂದಿಸಿದರು.  

Tuesday, March 2, 2021

ಮಹಿಳಾ ಸೇವಾ ಸಮಾಜದಿಂದ ದಾಸಶ್ರೇಷ್ಠರ ಆರಾಧನೆ

ಪ್ರತಿಭಾವಂತರಿಗೆ 'ವಿದೂಷಿ ಹನುಮಂತಮ್ಮ ಸ್ಮಾರಕ' ಪ್ರಶಸ್ತಿ ಪ್ರದಾನ



ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ದಾಸಶ್ರೇಷ್ಠರಾದ ಪುರಂದರದಾಸರು, ಕನಕದಾಸರು ಹಾಗು ತ್ಯಾಗರಾಜರ ಆರಾಧನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಪ್ರತಿಭಾವಂತರಿಗೆ 'ವಿದೂಷಿ ಹನುಮಂತಮ್ಮ ಸ್ಮಾರಕ' ಪ್ರಶಸ್ತಿ ಪ್ರದಾನ ಮಾಡಿ  ಅಭಿನಂದಿಸಲಾಯಿತು.
    ಭದ್ರಾವತಿ, ಮಾ. ೨: ಪ್ರತಿವರ್ಷದಂತೆ ಈ ಬಾರಿ ಸಹ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ದಾಸಶ್ರೇಷ್ಠರಾದ ಪುರಂದರದಾಸರು, ಕನಕದಾಸರು ಹಾಗು ತ್ಯಾಗರಾಜರ ಆರಾಧನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
    ಸಂಗೀತ ಪರೀಕ್ಷೆ ಜ್ಯೂನಿಯರ್ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಂದನ, ಸೀನಿಯರ್ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಜಿ.ವಿ ಶಾಂತಲಾ, ವೀಣೆ ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಶ್ರಾವಣಿಯವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸುವ ಜೊತೆಗೆ 'ವಿದೂಷಿ ಹನುಮಂತಮ್ಮ ಸ್ಮಾರಕ' ಪ್ರಶಸ್ತಿ ನೀಡಿ ಗೌರವಿಸಲಾಯಿತು.
   ಸಂಗೀತ ಶಿಕ್ಷಕಿಯರಾದ ವಸುಧಮುಕುಂದ್, ಪುಷ್ಪಸುಬ್ರಮಣ್ಯ, ಉಮಾರಾವ್ ಉಪಸ್ಥಿತರಿದ್ದರು. ಸೇವಾ ಸಮಾಜದ ಅಧ್ಯಕ್ಷೆ  ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು.
    ಪದಾಧಿಕಾರಿಗಳಾದ ಉಪಾಧ್ಯಕ್ಷೆ ಕಮಲಕುಮಾರಿ, ಕಾರ್ಯದರ್ಶಿ ಶೋಭಗಂಗರಾಜ್, ಖಜಾಂಚಿ ಜಯಂತಿಶೇಟ್, ಪ್ರಮುಖರಾದ ಶಕುಂತಲ, ಚಂದ್ರಲರಾಜ್, ಭಾಗ್ಯನಿಜಗುಣ, ಕಮಲರಾಯ್ಕರ್, ಇಂದಿರಾ ರಮೇಶ್, ಶಾರದ, ಅನ್ನಪೂರ್ಣ ಸತೀಶ್, ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪರಾವ್, ಮಾಜಿ ಅಧ್ಯಕ್ಷೆ ಯಶೋಧ ವೀರಭದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗಲಭೆ : ಮಾ.೫ರ ವರೆಗೆ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

   ಭದ್ರಾವತಿ, ಮಾ. ೨: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಮಾ.೫ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಆದೇಶ ಹೊರಡಿಸಿದ್ದಾರೆ.
    ಫೆ.೨೭ ಮತ್ತು ೨೮ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ನಡುವೆ ಉಂಟಾದ ಗಲಭೆ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಗುಪ್ತ ವರದಿ ಆಧರಿಸಿ ಮಾ.೨ರ ಮಧ್ಯಾಹ್ನ ೧೧ ಗಂಟೆಯಿಂದ ಮಾ.೫ರ ಮಧ್ಯರಾತ್ರಿ ೧೨ ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಾ.೩ರಂದು ಆಯ-ವ್ಯಯ ಮಂಡನೆ

   ಭದ್ರಾವತಿ, ಮಾ. ೨: ಈ ಬಾರಿ ನಗರಸಭೆ ಆಯ-ವ್ಯಯ ಮಂಡನೆ ಮಾ.೩ರ ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.
  ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದು, ಪೌರಾಯುಕ್ತ ಮನೋಹರ್ ಉಪಸ್ಥಿತರಿರುವರು. ಈಗಾಗಲೇ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ರಾಜಕೀಯ ಮುಖಂಡರು ಸೇರಿದಂತೆ ಇನ್ನಿತರರು ಹಲವಾರು ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ನಗರಸಭೆ ಆದಾಯ ಕ್ರೋಢೀಕರಣದ ಜೊತೆಗೆ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಭರವಸೆ ನೀಡಿತ್ತು. ಈ ಹಿನ್ನಲೆಯಲ್ಲಿ ಈ ಬಾರಿ ಬಜೆಟ್‌ನಲ್ಲಿ ನಗರದ ನಾಗರೀಕರು ಹಲವಾರು ನಿರೀಕ್ಷೆಗಳನ್ನು ಎದುರು ನೋಡುತ್ತಿದ್ದಾರೆ.

ಅಂತರಾಷ್ಟ್ರೀಯ ಯೋಗ ಪಂದ್ಯಾವಳಿಯಲ್ಲಿ ಡಿ. ನಾಗರಾಜ್‌ಗೆ ಚಿನ್ನ, ಬೆಳ್ಳಿ ಪದಕ

ಯೋಗಪಟು ಡಿ. ನಾಗರಾಜ್
   ಭದ್ರಾವತಿ, ಮಾ. ೨: ಆನ್‌ಲೈನ್ ಲೈವ್‌ನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ನಗರದ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್ ಚಿನ್ನ ಹಾಗು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
   ಯುರೋಪ್ ಯೋಗ ಸ್ಪೋಟ್ಸ್ ಅಸೋಷಿಯೇಷನ್ ಮತ್ತು ತಮಿಳುನಾಡಿನ ತಿರುವರೂರ್ ಶ್ರೀ ಸಾಯಿಬಾಬಾ ಇನ್‌ಸ್ಟಿಟ್ಯೂಟ್ ಆಫ್ ಯೋಗ, ಒಹಿರಾವನ್ ಯೋಗ ಆಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯ ೫೧ ವರ್ಷ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ ಸ್ಪರ್ಧಿಸಿ ೧ ಚಿನ್ನ, ೧ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಪಂದ್ಯಾವಳಿಯಲ್ಲಿ ವಿವಿಧ ರಾಷ್ಟ್ರಗಳಿಂದ ಸುಮಾರು ೩೩೧ ಯೋಗ ಪಟುಗಳು ಭಾಗವಹಿಸಿದ್ದರು.
   ಇದೆ ರೀತಿ ಬೆಂಗಳೂರಿನ ಕುಂಡಲಿನಿ ಯೋಗ ಕೇಂದ್ರದವರು ನಡೆಸಿದ ರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲೂ ಭಾಗವಹಿಸಿ ಡಿ. ನಾಗರಾಜ್ ೧ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ ಡಾ. ರಾಮಮೂರ್ತಿ ಹಾಗು ಕಾರ್ಯದರ್ಶಿ ಡಿ. ಪುಟ್ಟೇಗೌಡ ಇವರನ್ನು ಅಭಿನಂದಿಸಿದ್ದಾರೆ.  

ಅಧಿಕಾರ ದುರುಪಯೋಗಪಡಿಸಿಕೊಳ್ಳದೆ ಒಳ್ಳೆಯ ಕಾರ್ಯಕ್ಕೆ ಬಳಸಿ : ಆನಂದ್

ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರ ಗ್ರಾಮದಲ್ಲಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ 'ಎಂ.ಜೆ,ಅಪ್ಪಾಜಿ ಒಂದು ನೆನಪು' ಶ್ರದ್ದಾಂಜಲಿ ಕಾರ್ಯಕ್ರಮ ಶಾರದಾ ಅಪ್ಪಾಜಿ ಉದ್ಘಾಟಿಸಿದರು.
 ಭದ್ರಾವತಿ, ಮಾ. ೨: ರಾಜಕಾರಣದಲ್ಲಿ ನಮಗೆ ಲಭಿಸಿದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದೆ ಒಳ್ಳೆ ಕಾರ್ಯಕ್ಕೆ ಬಳಸಿಕೊಳ್ಳಬೇಕು. ಆಗ ಮಾತ್ರ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಆನಂದ್ ತಿಳಿಸಿದರು.
    ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರ ಗ್ರಾಮಸ್ಥರು ಹಾಗೂ ಎಂ.ಜೆ.ಅಪ್ಪಾಜಿ ಅಭಿಮಾನಿ ಬಳಗದ ವತಿಯಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ 'ಎಂ.ಜೆ ಅಪ್ಪಾಜಿ ಒಂದು ನೆನಪು' ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
   ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರು ಯಾರು ಏನೇ ಮಾಡಿದರೂ ನಾವು ಒಳ್ಳೆಯದನ್ನೇ ಮಾಡಬೇಕು ಹೊರತು ಕೆಟ್ಟದ್ದನ್ನು ಮಾಡಬಾರದು. ಯಾರನ್ನು ಸಹ ದ್ವೇಷಿಸಬಾರದು ಎಂದು ಮಾರ್ಗದರ್ಶನ ನೀಡುತ್ತಿದ್ದರು. ಇದೆ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯಬೇಕು. ಅಪ್ಪಾಜಿಯವರ ಬೆಂಬಲದಿಂದಾಗಿ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷನಾಗಲು ಸಾಧ್ಯವಾಯಿತು. ಇಂದು ಅವರು ನಮ್ಮೊಂದಿಗೆ ಇಲ್ಲದಿರಬಹುದು ಆದರೆ ಅವರ ಆದರ್ಶಗಳು ನಮ್ಮೊಂದಿಗಿವೆ. ಈ ಹಿನ್ನಲೆಯಲ್ಲಿ ಸದಾ ಕಾಲ ಅವರ ಕುಟುಂಬದ ಜೊತೆಗಿದ್ದು, ಅವರ ಬೆಂಬಲವಾಗಿ ನಿಲ್ಲುತ್ತೇನೆ ಎಂದರು.
   ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್ ಮಾತನಾಡಿ, ಅಪ್ಪಾಜಿಯವರು ಎಲ್ಲಾ ವರ್ಗದ ಜನರಿಗೂ ಅಧಿಕಾರ ದೊರಕಿಸಿ ಕೊಡುವ ಮೂಲಕ ಗೌರವದಿಂದ ಕಾಣುತ್ತಿದ್ದರು. ಅವರ ನಾಯಕತ್ವದಲ್ಲಿ ಬೆಳೆದ ಅನೇಕರು ಇಂದು ಬೇರೆಯವರ ಮನೆ ಬಾಗಿಲಿಗೆ ಹೋಗಿದ್ದಾರೆ, ಅಪ್ಪಾಜಿ ಕುಟುಂಬದಲ್ಲಿ ಅಪ್ಪಾಜಿ ಒಬ್ಬರೆ ರಾಜಕಾರಣ ಮಾಡುತ್ತಿದ್ದರು. ಆದರೆ ಅಲ್ಲಿ ಮನೆಯವರೆಲ್ಲರೂ ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ಅವರು ಮನಗಾಣಬೇಕಿದೆ ಎಂದರು.
   ಅಪ್ಪಾಜಿ ಪತ್ನಿ ಶಾರದಾ ಅಪ್ಪಾಜಿ, ಪುತ್ರ ಎಂ.ಎ ಅಜಿತ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ತಾಲೂಕು ಪಂಚಾಯಿತಿ ಸದಸ್ಯ ಧರ್ಮೇಗೌಡ, ಬದರಿನಾರಾಯಣ್, ಬಿ.ಎನ್ ರಾಜು, ಕೃಷ್ಣರಾಜ್, ರಾಮಚಂದ್ರ, ಜವರಪ್ಪ, ವಿಜಯಕುಮಾರ್, ಮಂಜುನಾಥ್, ಅಶೋಕ್‌ಕುಮಾರ್, ಶೋಭಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ನೆಲೆಕಾಣದ ಬಿಜೆಪಿಯಿಂದ ಕ್ಷೇತ್ರದಲ್ಲಿ ಆಶಾಂತಿ ವಾತಾವರಣಕ್ಕೆ ಯತ್ನ

ತಾಲೂಕು ಕಛೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪ

ಭದ್ರಾವತಿಯಲ್ಲಿ ತಾಲೂಕು ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿಯ ಮುಕ್ತಾಯದ ವೇಳೆ ಸ್ಥಳೀಯ ಕೆಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಧರ್ಮದ ಹೆಸರಿನಲ್ಲಿ ಗಲಭೆ ನಡೆಸಿ ಕ್ಷೇತ್ರದಲ್ಲಿ ಆಶಾಂತಿ ವಾತಾವರಣ ಸೃಷ್ಟಿಸಲು ಮುಂದಾಗಿರುವ ಘಟನೆಯನ್ನು ಖಂಡಿಸಿ ಮಂಗಳವಾರ ತಾಲೂಕು ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ನೇತೃತ್ವವಹಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
   ಭದ್ರಾವತಿ, ಮಾ. ೨: ಕ್ಷೇತ್ರದಲ್ಲಿ ಇದುವರೆಗೂ ನೆಲೆಕಾಣದ ಬಿಜೆಪಿ ಪಕ್ಷ ಇದೀಗ ವಿನಾಕಾರಣ ಧರ್ಮದ ಹೆಸರಿನಲ್ಲಿ ಕೋಮು ಗಲಭೆ ಸೃಷ್ಟಿಸಿ ಕ್ಷೇತ್ರದಲ್ಲಿ ಆಶಾಂತಿ ವಾತಾವರಣ ರೂಪುಗೊಳ್ಳಲು ಕಾರಣವಾಗುತ್ತಿದ್ದು, ಒಂದು ವೇಳೆ ಅಹಿತಕರ ಘಟನೆಗಳು ನಡೆದು ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿದ್ದಲ್ಲಿ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಎಚ್ಚರಿಸಿದರು.
  ತಾಲೂಕು ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿಯ ಮುಕ್ತಾಯದ ವೇಳೆ ಸ್ಥಳೀಯ ಕೆಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಧರ್ಮದ ಹೆಸರಿನಲ್ಲಿ ಗಲಭೆ ನಡೆಸಿ ಕ್ಷೇತ್ರದಲ್ಲಿ ಆಶಾಂತಿ ವಾತಾವರಣ ಸೃಷ್ಟಿಸಲು ಮುಂದಾಗಿರುವ ಘಟನೆಯನ್ನು ಖಂಡಿಸಿ ಮಂಗಳವಾರ ತಾಲೂಕು ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ನೇತೃತ್ವವಹಿಸಿ ಅವರು ಮಾತನಾಡಿದರು.
  ಒಂದೇ ದೈವ, ಒಂದೇ ಧರ್ಮ, ಒಂದೇ ಜಾತಿ ಎಂಬ ತತ್ವದಡಿ ನಾವೆಲ್ಲರೂ ಹಿಂದೂಗಳಾಗಿ ಬದುಕುತ್ತಿದ್ದೇವೆ. ಮಾನವ ಕುಲ ಒಂದೇ ಎಂಬ ಭಾವನೆ ನಮ್ಮದಾಗಿದೆ. ನಾನು ರಾಜಕಾರಣವನ್ನು ಈ ನಿಟ್ಟಿನಲ್ಲಿ ನಡೆಸಿಕೊಂಡು ಬಂದಿದ್ದೇನೆ. ಮತದಾರರು ಸಹ ನನ್ನನ್ನು ಕೈಬಿಡದೆ ಬೆಂಬಲಿಸಿಕೊಂಡು ಬಂದಿದ್ದಾರೆ. ಇದೀಗ ಕ್ಷೇತ್ರದಲ್ಲಿ ಧರ್ಮದ ಹೆಸರಿನಲ್ಲಿ ಆಶಾಂತಿ ವಾತಾವರಣ ಸೃಷ್ಟಿಸಿ ಲಾಭ ಪಡೆದುಕೊಳ್ಳಬಹುದೆಂಬ ದುರಾಸೆ ಬಿಜೆಪಿ ಪಕ್ಷಕ್ಕೆ ಬಂದಿರುವಂತೆ ಕಂಡು ಬರುತ್ತಿದೆ. ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ನಮ್ಮ ಮೇಲೆ ದೌರ್ಜನ್ಯ ನಡೆಸಲು ಮುಂದಾಗುತ್ತಿದ್ದಾರೆ. ಆದರೆ ಕ್ಷೇತ್ರದ ಮತದಾರರಿಗೆ ಎಲ್ಲವೂ ತಿಳಿದಿದೆ. ಇದಕ್ಕೆ ಪೂರಕವೆಂಬಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಸಹ ನಡೆದುಕೊಳ್ಳುತ್ತಿದ್ದಾರೆ. ಒಂದು ವೇಳೆ ಕ್ಷೇತ್ರದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾದಲ್ಲಿ ಬಿಜೆಪಿ ಸರ್ಕಾರ ನೇರ ಹೊಣೆಯಾಗಬೇಕಾಗುತ್ತದೆ. ತಕ್ಷಣ ಅಶಾಂತಿ ವಾತಾವರಣ ಸೃಷ್ಟಿಸಲು ಯತ್ನಿಸಿದವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.
   ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಕ್ಷೇತ್ರದಲ್ಲಿ ಸದಾ ಕಾಲ ಶಾಂತಿ ನೆಲೆಗೊಳ್ಳಬೇಕೆಂಬ ಭಾವನೆಯೊಂದಿಗೆ ರಾಜಕಾರಣ ಮಾಡಿಕೊಂಡು ಬರುತ್ತಿರುವ ಸಂಗಮೇಶ್ವರ್ ನಿಜವಾದ ಶಾಂತಿಪ್ರಿಯ ಶಾಸಕರಾಗಿದ್ದಾರೆ. ಇದು ಭದ್ರಾವತಿ ಕ್ಷೇತ್ರದಲ್ಲಿರುವ ಎಲ್ಲರಿಗೂ ತಿಳಿದಿದೆ. ಶ್ರೀರಾಮನ ಬಗ್ಗೆ ಎಲ್ಲರಿಗೂ ಗೌರವವಿದೆ. ಆದರೆ ಬಿಜೆಪಿಯವರು ಶ್ರೀರಾಮನ ಹೆಸರಿನಲ್ಲಿ ನಡೆಸುತ್ತಿರುವ ದೌರ್ಜನ್ಯ, ಅಕ್ರಮಗಳು ನಿಲ್ಲಬೇಕು. ಈ ರೀತಿಯ ಘಟನೆ ಇಲ್ಲಿ ಮಾತ್ರವಲ್ಲ ಎಲ್ಲೆಡೆ ನಡೆಯುತ್ತಿದ್ದು, ಇದರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದರು.
   ಪ್ರತಿಭಟನೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ ಯೋಗೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್, ಅತ್ತಿಗುಂದ ಚಂದ್ರಶೇಖರಪ್ಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ನಗರಸಭೆ ಮಾಜಿ ಅಧ್ಯಕ್ಷರಾದ ವೈ. ರೇಣುಕಮ್ಮ, ಬಿ.ಕೆ ಮೋಹನ್, ಬಿ.ಟಿ ನಾಗರಾಜ್, ಮುಖಂಡರಾದ ಎಸ್.ಪಿ ದಿನೇಶ್, ಸಿ.ಎಂ ಖಾದರ್, ಅಮಿರ್‌ಜಾನ್, ದಿಲ್‌ದಾರ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.