Thursday, March 4, 2021

ಅಧ್ಯಕ್ಷರಾಗಿ ಎಲ್.ಎಸ್ ರೂಪ

ಭದ್ರಾವತಿ, ಮಾ. ೪: ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ಎಲ್.ಎಸ್ ರೂಪ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರೂಪ ಹೆಬ್ಬಂಡಿ, ಎಚ್.ಸಿ ವಿಶಾಲ, ಪುಷ್ಪವತಿ, ಡಿ.ಆರ್ ಕಲಾವತಿ ಮತ್ತು ರಾಜೇಶ್ವರಿ, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಎಸ್ ಕವಿತ, ಸಹಕಾರ್ಯದರ್ಶಿಯಾಗಿ ರೂಪ, ಕೆ.ಪಿ ಪೂರ್ಣಿಮ, ಎಚ್.ಪಿ. ಸುಮಾ, ಖಜಾಂಚಿಯಾಗಿ ಶೋಭಾಪಾಟೀಲ್, ನಿರ್ದೇಶಕರಾಗಿ ಶಾಂಭವಿ, ಕವಿತ, ಪ್ರೇಮ, ಉಷಾ, ಎಚ್.ಎಸ್ ಮಂಜುಳ, ಪ್ರಿಯಾ, ಸ್ಮಿತ, ಎಸ್. ಸಹನ, ಎಂ.ಎಸ್ ಸೌಮ್ಯ ಮತ್ತು ರೂಪ ಆಯ್ಕೆಯಾಗಿದ್ದಾರೆ.

ಏ.೧ರಂದು ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಭದ್ರಾವತಿ, ಮಾ. ೪: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ತುಮಕೂರು ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜಯಂತಿ, ನೂತನ ಗ್ರಾ.ಪಂ. ಸದಸ್ಯರಿಗೆ ಅಭಿನಂದನೆ ಹಾಗು ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪ್ರತಿಭಾವಂತವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಏ.೧ರಂದು ಹಮ್ಮಿಕೊಳ್ಳಲಾಗಿದೆ.
ಹಳೇನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿರುವ ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಯುವ ವೇದಿಕೆ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಹ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಮಾ.೧೫ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ ತಿಳಿಸಿದ್ದಾರೆ.


ದೇವಸ್ಥಾನ ಕುರಿತು ಮಾಹಿತಿ ನೀಡಲು, ಮೂಲ ಸೌಕರ್ಯ ಕಲ್ಪಿಸಲು ಮನವಿ

ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ ಧನಂಜಯ್ಯ ನೇತೃತ್ವದಲ್ಲಿ ತಾಲೂಕು ಆಡಳಿತ ಹಾಗು ತಾಲೂಕು ಪಂಚಾಯಿತಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
     ಭದ್ರಾವತಿ, ಮಾ. ೪: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ ಧನಂಜಯ್ಯ ನೇತೃತ್ವದಲ್ಲಿ ತಾಲೂಕು ಆಡಳಿತ ಹಾಗು ತಾಲೂಕು ಪಂಚಾಯಿತಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
   ಗ್ರಾಮ ಪಂಚಾಯಿತಿ ಸರ್ವೆ ನಂ. ೬೮ರ ಸಿರಿಯೂರು ಗಡಿಗೆ ಹೊಂದಿಕೊಂಡಿರುವಂತಹ ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವಿದ್ದು, ಈ ದೇವಸ್ಥಾನಕ್ಕೆ ಹಬ್ಬಹರಿದಿನಗಳಂದು, ಸಂಕಷ್ಟಹರ ಚತುರ್ಥಿ, ಪ್ರತಿ ಶನಿವಾರ ಹಾಗು ಅಮವಾಸ್ಯೆಗಳಂದು ಹೋಮ-ಹವನ, ವಿಶೇಷ ಪೂಜೆ, ಅನ್ನದಾನ ಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ದೇವಸ್ಥಾನಕ್ಕೆ ಸೂಕ್ತ ರಸ್ತೆಯಾಗಲಿ, ಕುಡಿಯುವ ನೀರಿನ ವ್ಯವಸ್ಥೆಯಾಗಲಿ, ವಿದ್ಯುತ್ ದೀಪವಾಗಲಿ ಯಾವುದೇ ಸೌಕರ್ಯಗಳು ಇರುವುದಿಲ್ಲ. ಸುಮಾರು ೧ ಕಿ.ಮೀ ದೂರ ಮಹಿಳೆಯರು, ಮಕ್ಕಳು, ವಯೋವೃದ್ಧರು ಕಾಲ್ನಡಿಗೆಯಲ್ಲಿ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದಾರೆ.
   ದೇವಸ್ಥಾನಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ಜೊತೆಗೆ ಪುರತತ್ವ ಇಲಾಖೆಯವರು ದೇವಸ್ಥಾನದ ಮೂಲ ವಿಗ್ರಹ ಯಾವ ರಾಜರ ಕಾಲದ್ದು, ಶೈಲಿ ಯಾವುದು, ಶಿಲ್ಪಿ ಯಾರು ಇತ್ಯಾದಿ ಮಾಹಿತಿಗಳನ್ನು ಸಂಗ್ರಹಿಸಿ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.
ಗ್ರಾಮಸ್ಥರಾದ ರಂಗಸ್ವಾಮಿ, ಚೇತನ್‌ಕುಮಾರ್, ಕುಮಾರಸ್ವಾಮಿ, ಚಂದ್ರನಾಯ್ಕ, ರಂಜಿತ್, ಎಂ. ಮಂಜುನಾಥ್, ಕೃಷ್ಣಮೂರ್ತಿ ಮತ್ತು ಶಿವರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Wednesday, March 3, 2021

ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್‌ಗೆ ಸನ್ಮಾನ

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಬಿವೈಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
   ಭದ್ರಾವತಿ, ಮಾ. ೩: ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಬಿವೈಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಡಾ. ನಿಂಗೇಶ್‌ರವರು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಯೋಗ ಕ್ಷೇತ್ರದಲ್ಲಿನ ಉತ್ತಮ ಸಾಧನೆಯನ್ನು ಗುರುತಿಸಿ ಕ್ಲಬ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಇದೆ ರೀತಿ ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಮುನಿರ್ ಬಾಷರನ್ನು ಸಹ ಸನ್ಮಾನಿಸಿ ಅಭಿನಂದಿಸಲಾಯಿತು.
  ಅಂತರಾಷ್ಟ್ರೀಯ ಕ್ರೀಡಾಪಟು, ಕಬ್ಲ್ ಅಧ್ಯಕ್ಷ ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿ ಎಚ್.ಆರ್ ರಂಗನಾಥ್, ಕಾರ್ಯದರ್ಶಿ ಮಾರ್ಕಂಡಯ್ಯ, ಖಜಾಂಚಿ ಎಸ್. ವಿಶ್ವನಾಥ್, ಉಪಾಧ್ಯಕ್ಷರಾದ ಚನ್ನಪ್ಪ, ಉದ್ಯಮಿ ಬಿ.ಕೆ ಜಗನ್ನಾಥ್, ಮುಖಂಡರಾದ ಕೆ. ಸುದೀಪ್‌ಕುಮಾರ್, ನಗರಸಭಾ ಸದಸ್ಯ ಮಣಿ ಎಎನ್‌ಎಸ್, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಮೇಶ್‌ಜಾರಕಿಹೊಳಿ ಸಚಿವ, ಶಾಸಕ ಸ್ಥಾನದಿಂದ ವಜಾಗೊಳಿಸಿ : ವಿವಿಧ ಪಕ್ಷ, ಸಂಘಟನೆಗಳಿಂದ ಆಗ್ರಹ

ರಮೇಶ್ ಲ ಜಾರಕಿಹೊಳಿಯವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಟ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಬುಧವಾರ ಕಾಂಗ್ರೆಸ್ ಯುವ ಘಟಕದಿಂದ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಮಾ. ೩: ಯುವತಿಯೋರ್ವಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯವೆಸಗಿರುವ ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್ ಲ. ಜಾರಕಿಹೊಳಿಯವರನ್ನು ತಕ್ಷಣ ಸಚಿವ ಹಾಗು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ವಿವಿಧ ರಾಜಕೀಯ ಪಕ್ಷಗಳ, ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದಾರೆ.


ಆಮ್ ಆದ್ಮಿ ಪಾರ್ಟಿ ಮಹಿಳಾ ಘಟಕದ ಅಧ್ಯಕ್ಷೆ ರೇಷ್ಮೆ ಜಾವೇದ್.
     ಆಮ್ ಆದ್ಮಿ ಪಾರ್ಟಿ ಮಹಿಳಾ ಘಟಕದ ಅಧ್ಯಕ್ಷೆ ರೇಷ್ಮೆ ಜಾವೇದ್ ಸಚಿವರ ಲೈಂಗಿಕ ದೌರ್ಜನ್ಯವನ್ನು ಖಂಡಿಸಿದ್ದಾರೆ.  ವಿಶ್ವ ಮಹಿಳಾ ದಿನಾಚರಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಯಡಿಯೂರಪ್ಪನವರ ಸರ್ಕಾರಕ್ಕೆ ಮಹಿಳೆಯರ ಮೇಲೆ ಸ್ವಲ್ಪವೂ ಗೌರವವಿಲ್ಲ. ಸದನದಲ್ಲಿ ಆಶ್ಲೀಲ ಚಿತ್ರ ವೀಕ್ಷಣೆ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದು ದೌರ್ಭಾಗ್ಯದ ಸಂಗತಿಯಾಗಿದೆ. ಇದೀಗ ಸಚಿವ ರಮೇಶ್ ಲ ಜಾರಕಿಹೊಳಿಯವರು ಯುವತಿಯೊಬ್ಬರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ನಡೆಸುವ ಮೂಲಕ ವಂಚಿಸಿರುವುದು ನಾಡಿನ ಘನತೆಗೆ ಕಪ್ಪು ಚುಕ್ಕಿಯಾಗಿದೆ. ತಕ್ಷಣ ಯಡಿಯೂರಪ್ಪನವರು ರಮೆಶ್ ಲ ಜಾರಕಿಹೊಳಿ ಸಚಿವ ಸ್ಥಾನ ಹಿಂಪಡೆಯಬೇಕು. ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಕ್ಷಣ ಶಾಸಕ ಸ್ಥಾನದಿಂದಲೂ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
     

    ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್
     ಇದೆ ರೀತಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಸಹ ದೌರ್ಜನ್ಯವನ್ನು ಖಂಡಿಸಿದ್ದಾರೆ. ರಮೇಶ್ ಲ ಜಾರಕಿಹೊಳಿ ಸಚಿವ ಸ್ಥಾನ ಹಾಗು ಶಾಸಕ ಸ್ಥಾನ ವಜಾಗೊಳಿಸುವ ಮೂಲಕ ಸಂತ್ರಸ್ಥ ಯುವತಿ ಹಾಗು ಕುಟುಂಬಕ್ಕೆ ಮತ್ತು ಸಾಮಾಜಿಕ ಕಾರ್ಯಕರ್ತ ದಿನೇಶ್‌ಕಲ್ಲಹಳ್ಳಿಯವರಿಗೆ ಗೃಹ ಸಚಿವ ಬೊಮ್ಮಾಯಿ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸಿದ್ದಾರೆ.
      ಕಾಂಗ್ರೆಸ್ ಯುವ ಘಟಕದಿಂದ ಮುಖ್ಯಮಂತ್ರಿಗಳಿಗೆ ಮನವಿ:
    ಸಚಿವ ರಮೇಶ್ ಜಾರಕಿಹೊಳಿಯವರ ಲೈಂಗಿಕ ದೌರ್ಜನ್ಯದ ದೃಶ್ಯಗಳು ಹೊರಬಿದ್ದಿದ್ದು, ಸಚಿವರ ಈ ನೀಚ ಕೃತ್ಯಕ್ಕೆ ನಾಡಿನ ಜನರು ತಲೆ ತಗ್ಗಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಸಚಿವ ಸಂಪುಟದಿಂದ ಅವರನ್ನು ಕೈಬಿಟ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಬುಧವಾರ ಕಾಂಗ್ರೆಸ್ ಯುವ ಘಟಕದಿಂದ ಮನವಿ ಸಲ್ಲಿಸಲಾಯಿತು.
     ಮುಖ್ಯಮಂತ್ರಿಗಳು ಈ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಯುವ ಘಟಕದ ಅಧ್ಯಕ್ಷ ಜಿ. ವಿನೋದ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹ್ಮದ್, ನಗರ ಕಾರ್ಯದರ್ಶಿ ವರುಣ್‌ಕುಮಾರ್, ಎ.ಪಿ ಭರತ್ ಉಪಸ್ಥಿತರಿದ್ದರು.

ಶಿಕ್ಷಣ ಎಂದರೆ ಕೇವಲ ಉದ್ಯೋಗ್ಯಕ್ಕಾಗಿ ಎಂಬ ಸಂಕುಚಿತ ಭಾವನೆ ದೂರವಾಗಲಿ : ಡಾ. ಬಿ.ಜಿ ಧನಂಜಯ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಉದ್ಘಾಟಿಸಿದರು.
   ಭದ್ರಾವತಿ, ಮಾ. ೩: ಶಿಕ್ಷಣ ಎಂದರೆ ಕೇವಲ ಉದ್ಯೋಗ್ಯಕ್ಕಾಗಿ ಎಂಬ ಸಂಕುಚಿತ ಭಾವನೆ ದೂರವಾಗಿ ಅಭಿವೃದ್ಧಿ ಮತ್ತು ಪ್ರಗತಿಯ ಸಾಧನ ಎಂಬ ಅರಿವು ಮೂಡಬೇಕು ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ತಿಳಿಸಿದರು.
  ಅವರು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
   ಶಿಕ್ಷಣ ಎಂದರೆ ಜ್ಞಾನಸಂಪಾದನೆ ಎಂಬ ಅರಿವು ಸಹ ಮೂಡಬೇಕು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ದೊಡ್ಡಮಟ್ಟದ ಪರಿವರ್ತನೆ ಸಾಧ್ಯ. ಜಗತ್ತಿನ ಎಲ್ಲಾ ಜ್ವಲಂತ ಸಮಸ್ಯೆಗಳಿಗೆ ಶಿಕ್ಷಣದಿಂದ ಪರಿಹಾರ ಸಾಧ್ಯ. ಈ ಹಿನ್ನಲೆಯಲ್ಲಿ ಯುವ ಸಮೂಹ ಶಿಕ್ಷಣವನ್ನು ನಿರ್ಲಕ್ಷಿಸಬಾರದು. ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕೆಂದರು.
     ಕಾರ್ಯಕ್ರಮದಲ್ಲಿ ಪ್ರೊ. ಮಲ್ಲಪ್ಪ, ಡಾ. ಅಮೃತೇಶ್ವರ್, ಪ್ರೊ. ಚಂದ್ರಪ್ಪ, ಪ್ರೊ. ಉಮೇಶ್‌ಕುಮಾರ್, ಪ್ರೊ. ಹೆಗ್ಗಡೆ, ಪ್ರೊ. ವಿಶ್ವನಾಥ್, ಡಾ. ಕಲ್ಪನಾ, ಉಷಾಬೆಳ್ಳಕ್ಕಿ, ರವಿಕುಮಾರ್, ಮನೋಹರ್ ಮತ್ತು ಬೋಧಕೆತರ ವರ್ಗದವರು ಉಪಸ್ಥಿತರಿದ್ದರು.
   ಗಿರೀಶ್ ಪ್ರಾರ್ಥಿಸಿದರು. ಯಶಸ್ವಿನಿ ನಿರೂಪಿಸಿದರು. ಸುಷ್ಮ ವಂದಿಸಿದರು. ಈ ಕಾರ್ಯಕ್ರಮವನ್ನು ದ್ವಿತೀಯ ಹಾಗು ತೃತಿಯ ಪದವಿ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿತ್ತು.

ಅರುಳು ದಾಸ್ ನಿಧನ

ಅರುಳುದಾಸ್
ಭದ್ರಾವತಿ, ಮಾ. ೩: ನಗರದ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಸಂತ ಮದರ್ ತೆರೇಸಾ ಸಮುದಾಯದ ವೇಲೂರುಶೆಡ್ ನಿವಾಸಿ ಅರುಳುದಾಸ್(೪೨) ಮೃತಪಟ್ಟಿದ್ದಾರೆ.
    ಪತ್ನಿ, ಓರ್ವ ಪುತ್ರನನ್ನು ಬಿಟ್ಟಗಲಿದ್ದಾರೆ. ಅರಳುದಾಸ್(ರಾಡ್‌ಬೆಂಡರ್) ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುದುರೆಗಳು ಓಡಿಸಿಕೊಂಡು ಬಂದಿದ್ದರಿಂದ ಕೆಳಗೆ ಬಿದ್ದು ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ನಿಧನಕ್ಕೆ ನಗರದ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.