Saturday, March 13, 2021

ಡಾ. ನರಸಿಂಹಭಟ್ ನಿಧನ

ಡಾ. ನರಸಿಂಹಭಟ್
ಭದ್ರಾವತಿ, ಮಾ. ೧೩: ತಾಲೂಕಿನ ಬಾರಂದೂರು ಗ್ರಾಮದ ನಿವಾಸಿ, ವೈದ್ಯ ಡಾ. ನರಸಿಂಹಭಟ್ ನಿಧನ ಹೊಂದಿದರು.
    ಓರ್ವ ಪುತ್ರ, ಇಬ್ಬರು ಪುತ್ರಿ, ಸೊಸೆ, ಅಳಿಯಂದಿರು ಹಾಗು ಮೊಮ್ಮಕ್ಕಳನ್ನು ಬಿಟ್ಟಗಲಿದ್ದಾರೆ. ಡಾ. ನರಸಿಂಹಭಟ್ ಬಾರಂದೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರಪರಿಚಿತರಾಗಿದ್ದು, ವೈದ್ಯ ವೃತ್ತಿಯಲ್ಲಿ ವಿಶಿಷ್ಟತೆ ಕಾಯ್ದುಕೊಳ್ಳುವ ಜೊತೆಗೆ ಬಡವರಿಗೆ ಉಚಿತ ಸೇವೆ ಸಲ್ಲಿಸುತ್ತಿದ್ದರು. ಇವರ ನಿಧನಕ್ಕೆ ಬಾರಂದೂರು ಗ್ರಾಮಸ್ಥರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.


ಸಿದ್ದಾರ್ಥ ಅಂಧರ ಕೇಂದ್ರದ ೨೩ನೇ ವರ್ಷಾಚರಣೆ

ಕ್ರಿಕೆಟ್ ಪಂದ್ಯಾವಳಿ, ಕುಡಿಯುವ ನೀರು, ಶೌಚಾಲಯ, ಕಂಪ್ಯೂಟರ್ ತರಬೇತಿ ಉದ್ಘಾಟನೆ


ಭದ್ರಾವತಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವತಿಯಿಂದ ಗುರುವಾರ ೨೩ನೇ ವರ್ಷಾಚರಣೆ ಅಂಗವಾಗಿ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೌಚಾಲಯಗಳನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಿದರು.
   ಭದ್ರಾವತಿ, ಮಾ. ೧೩: ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವತಿಯಿಂದ ಗುರುವಾರ ೨೩ನೇ ವರ್ಷಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
   ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಅಂಧರ ತ್ರಿಕೋನ ಕ್ರಿಕೆಟ್ ಪಂದ್ಯಾವಳಿ ಜರುಗಿತು. ಇದಕ್ಕೂ ಮೊದಲು ಅಂಧರ ಕೇಂದ್ರದಲ್ಲಿ ಜಾಸ್ ಕಂಪ್ಯೂಟರ್ ತರಬೇತಿ ಉದ್ಘಾಟನೆಯನ್ನು ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ವಿಭಾಗದ ಹೆಚ್ಚುವರಿ ಹಿರಿಯ ನ್ಯಾಯಾಧೀಶರಾದ ಉಜ್ವಲ ವೀರಣ್ಣ ಸಿದ್ದಣ್ಣನವರ್ ನೆರವೇರಿಸಿದರು. ನಗರಸಭೆ ಪೌರಾಯುಕ್ತ ಮನೋಹರ್ ಶೌಚಾಲಯಗಳನ್ನು ಹಾಗು ಎನ್‌ಟಿಸಿ ರೈಲ್ ಮಿಲ್ ಮಾಲೀಕ ಡಾ. ಎಚ್. ನಾಗೇಶ್ ಅಂಧರ ಕೇಂದ್ರಕ್ಕೆ ಕುಡಿಯುವ ನೀರು ಸರಬರಾಜು ಉದ್ಘಾಟಿಸಿದರು.
     ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎಂ. ಗುರುಮೂರ್ತಿ, ಪ್ರಮುಖರಾದ ಆರ್. ತಮ್ಮಯ್ಯ, ಮುತ್ತು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಜಾಸ್ ಕಂಪ್ಯೂಟರ್ ತರಬೇತಿ ಉದ್ಘಾಟನೆಯನ್ನು ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ವಿಭಾಗದ ಹೆಚ್ಚುವರಿ ಹಿರಿಯ ನ್ಯಾಯಾಧೀಶರಾದ ಉಜ್ವಲ ವೀರಣ್ಣ ಸಿದ್ದಣ್ಣನವರ್ ನೆರವೇರಿಸಿದರು.

ಶಿವಮೊಗ್ಗದಲ್ಲಿ ನಡೆದ ಜನಾಕ್ರೋಶ ಪ್ರತಿಭಟನೆಗೆ ನಿರೀಕ್ಷೆಗೂ ಮೀರಿದ ಕಾರ್ಯಕರ್ತರು, ಅಭಿಮಾನಿಗಳು

ಶಿವಮೊಗ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜನಾಕ್ರೋಶ ಪ್ರತಿಭಟನೆ ಕಾರ್ಯಕ್ರಮಕ್ಕೆ ಭದ್ರಾವತಿಯಿಂದ ಸಾವಿರಾರು ಮಂದಿ ಕಾಂಗ್ರೆಸ್ ಪಕ್ಷದ ಕಾರ್ಯಕತರು, ಅಭಿಮಾನಿಗಳು ಸುಮಾರು ೧೦೦ಕ್ಕೂ ಹೆಚ್ಚು ಬಸ್ಸು, ಮಾಕ್ಸಿ ಕ್ಯಾಬ್ ಸೇರಿದಂತೆ ಇನ್ನಿತರ ವಾಹನಗಳಲ್ಲಿ ತೆರಳಿದರು.
    ಭದ್ರಾವತಿ, ಮಾ. ೧೩: ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ವರ್ಗದವರು ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳನ್ನು ಖಂಡಿಸಿ ಶಿವಮೊಗ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜನಾಕ್ರೋಶ ಪ್ರತಿಭಟನೆ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಕಾಂಗ್ರೆಸ್ ಪಕ್ಷದ ಕಾರ್ಯಕತರು, ಅಭಿಮಾನಿಗಳು ಸುಮಾರು ೧೦೦ಕ್ಕೂ ಹೆಚ್ಚು ಬಸ್ಸು, ಮಾಕ್ಸಿ ಕ್ಯಾಬ್ ಸೇರಿದಂತೆ ಇನ್ನಿತರ ವಾಹನಗಳಲ್ಲಿ ತೆರಳಿದರು.
    ಕಾಂಗ್ರೆಸ್ ಪಕ್ಷದ ನಗರ ಭಾಗದ ಬಹುತೇಕ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ತೆರಳಿದರು. ಅದರಲ್ಲೂ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವುದು ಕಂಡು ಬಂದಿತು.  ತಾಲೂಕಿನ ದೂರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಬಿಳಿಕಿ ಕ್ರಾಸ್ ಬಳಿ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರಿಂದಾಗಿ ಬಿಳಿಕಿ ಕ್ರಾಸ್ ಬಳಿ ಬಿ.ಎಚ್ ರಸ್ತೆಯಲ್ಲಿ ಸುಮಾರು ೨ ತಾಸು ವಾಹನ ದಟ್ಟಣೆ ಕಂಡು ಬಂದಿತು. ಸಂಚಾರ ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು.
    ಕಾಂಗ್ರೆಸ್ ಬಾವುಟ ಹಿಡಿತು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶಿವಮೊಗ್ಗ ನಗರ ತಲುಪಿದರು. ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು ಪಾಲ್ಗೊಂಡಿರುವುದು ಗಮನ ಸೆಳೆಯಿತು. ಕಳೆದ ೪-೫ ದಿನಗಳಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ವರ್ಗದವರು, ಪಕ್ಷದ ರಾಜ್ಯ ಹಾಗು ಜಿಲ್ಲಾ ಮತ್ತು ಸ್ಥಳೀಯ ಮುಖಂಡರು ಹೆಚ್ಚಿನ ಶ್ರಮ ವಹಿಸಿದ್ದರು.


ಶಿವಮೊಗ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜನಾಕ್ರೋಶ ಪ್ರತಿಭಟನೆ ಕಾರ್ಯಕ್ರಮಕ್ಕೆ ಭದ್ರಾವತಿಯಿಂದ ಸಾವಿರಾರು ಮಂದಿ ಕಾಂಗ್ರೆಸ್ ಪಕ್ಷದ ಕಾರ್ಯಕತರು, ಅಭಿಮಾನಿಗಳಿಗೆ ಬಿಳಿಕಿ ಕ್ರಾಸ್ ಬಳಿ ಊಟದ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿತ್ತು.


ಮಾ.೧೬ರಂದು ವಿಧಾನಸೌಧ ಚಲೋ : ಸುಮಾರು ೫೦೦ ವಿಐಎಸ್‌ಎಲ್ ಕಾರ್ಮಿಕರು ಬಾಗಿ

ಕೇಂದ್ರ ಸರ್ಕಾರದ ಉದ್ಯಮ ವಿರೋಧಿ ಧೋರಣೆಗಳ ವಿರುದ್ಧ ಹೋರಾಟ : ಜೆ. ಜಗದೀಶ್

ಭದ್ರಾವತಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮಾತನಾಡಿದರು.
    ಭದ್ರಾವತಿ, ಮಾ. ೧೩: ದೇಶದ ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ವಿರೋಧಿಸಿ ಮಾ.೧೬ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ನಗರದ ವಿಐಎಸ್‌ಎಲ್ ಕಾರ್ಖಾನೆಯ ಸುಮಾರು ೫೦೦ ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆಂದು ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ತಿಳಿಸಿದರು.
      ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಪ್ರಸ್ತುತ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಮುನ್ನಡೆಸುವುದು ಸರ್ಕಾರದ ಕೆಲಸವಲ್ಲ ಎಂಬ ಬಹಿರಂಗ ಹೇಳಿಕೆ ನೀಡುವ ಜೊತೆಗೆ ಜನರ ತೆರಿಗೆ ಹಣದಿಂದ ಸ್ಥಾಪನೆಗೊಂಡಿರುವ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದು, ಇದರ ವಿರುದ್ಧ ಇಂದು ಸರ್ಕಾರಿ ಉದ್ಯಮಗಳ ನೌಕರರು ಸಹ ರೈತರಂತೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
   ೧೯೯೧ರ ನವ ಉದಾರವಾದಿ ನೀತಿಗಳ ಪರಿಣಾಮವಾಗಿ ಸಾರ್ವಜನಿಕ ವಲಯಗಳಲ್ಲಿನ ಬಂಡವಾಳವನ್ನು ಹಂತ ಹಂತವಾಗಿ ಹಿಂಪಡೆಯುತ್ತಾ ಬಂದಿರುವ ಸರ್ಕಾರಗಳು ಇಂದು ಯೋಜನಾ ಆಯೋಗವನ್ನು ರದ್ದುಗೊಳಿಸಿ ನೀತಿ ಆಯೋಗವನ್ನು ರಚಿಸಿವೆ. ಇದರ ಮುಖ್ಯ ಉದ್ದೇಶವೇ ಬಂಡವಾಳ ಹಿಂತೆಗೆತ, ಅಂದರೆ ಒಂದು ಸಾರ್ವಜನಿಕ ಸಂಸ್ಥೆಯ ಬಹುಪಾಲು ಷೇರುಗಳನ್ನು ಒಬ್ಬ ಖಾಸಗೀ ಬಂಡವಾಳಶಾಹಿ ಹೊಂದಲು ಅವಕಾಶ ಮಾಡಿಕೊಡುವುದು. ಇದರಿಂದಾಗಿ ವಿಮೆ, ಬ್ಯಾಂಕು, ಬಿಎಸ್‌ಎನ್‌ಎಲ್, ಬಂದರೂ, ತೈಲ ಸಂಸ್ಕರಣಾ, ಉಕ್ಕು ಉತ್ಪಾದನಾ ಘಟಕಗಳು, ವಿದ್ಯುತ್ ಮುಂತಾದವು ಆಸ್ತಿ ಸಮೇತ ಖಾಸಗೀ ಮತ್ತು ವಿದೇಶಿ ಬಂಡವಾಳಗಾರರ ಪಾಲಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
    ಕೇಂದ್ರ ಸರ್ಕಾರದ ಉದ್ಯಮ ವಿರೋಧಿ ಧೋರಣೆಗಳ ವಿರುದ್ಧ ಎಲ್ಲಾ ಉದ್ಯಮಗಳು ಒಗ್ಗಟ್ಟಾಗಿ ಹೋರಾಟ ನಡೆಸುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಖಾಸಗೀಕರಣ ವಿರೋಧಿ ವೇದಿಕೆ ರಚಿಸಲಾಗಿದ್ದು, ಇದರ ಮೂಲಕ ಹೋರಾಟ ನಡೆಸಲಾಗುತ್ತಿದೆ. ವಿಐಎಸ್‌ಎಲ್ ಕಾರ್ಮಿಕ ಸಂಘ ಸಹ ಇದರ ಒಂದು ಸಂಯೋಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾ.೧೬ರಂದು ಮಧ್ಯಾಹ್ನ ೧ ಗಂಟೆಗೆ ವಿಧಾನಸೌದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ಪ್ರೀಡಂ ಪಾರ್ಕ್ ಬಳಿ ಇರುವ ಕಾಳಿದಾಸ ರಸ್ತೆಯಲ್ಲಿ ಬೃಹತ್ ಸಭೆಯನ್ನು ಏರ್ಪಡಿಸಲಾಗಿದೆ. ನಗರದಿಂದ ಸುಮಾರು ೫೦೦ ಕಾರ್ಮಿಕರು ರೈಲಿನ ಮೂಲಕ ಬೆಂಗಳೂರಿಗೆ ತೆರಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ವಿಐಎಸ್‌ಎಲ್ ಖಾಸಗೀಕರಣಗೊಳ್ಳುವುದು ಅಸಾಧ್ಯ:
    ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗುತ್ತಿದೆ. ಆದರೆ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ್ಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಖಾಸಗೀಯವರು ಮುನ್ನಡೆಸಿಕೊಂಡು ಹೋಗಲು ಮುಂದೆ ಬರುತ್ತಿಲ್ಲ. ಒಂದು ವೇಳೆ ಖಾಸಗೀಯವರು ವಹಿಸಿಕೊಂಡರೂ ಸಹ ನಿರೀಕ್ಷೆಯಂತೆ ಬಂಡವಾಳ ಹೂಡುವುದಿಲ್ಲ. ಕಾರ್ಖಾನೆ ಒಂದು ವೇಳೆ ಸಂಪೂರ್ಣವಾಗಿ ಮುಚ್ಚಲ್ಪಟ್ಟಲ್ಲಿ ಕಾರ್ಮಿಕರು ಬೀದಿಪಾಲಾಗುವ ಮೂಲಕ ನಗರದ ಆರ್ಥಿಕತೆ ಕುಸಿಯಲಿದೆ. ಈ ಹಿನ್ನಲೆಯಲ್ಲಿ ಸರ್ಕಾರವೇ ಕನಿಷ್ಠ ಬಂಡವಾಳ ತೊಡಗಿಸಿ ಮುನ್ನಡೆಸಿಕೊಂಡು ಹೋಗಬೇಕೆಂದು ಆಗ್ರಹಿಸಿದರು.
   ಪತ್ರಿಕಾಗೋಷ್ಠಿಯಲ್ಲಿ ಕಾರ್ಮಿಕ ಸಂಘದ ಪದಾಧಿಕಾರಿಗಳಾದ ಉಪಾಧ್ಯಕ್ಷ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಬಸಂತಕುಮಾರ್, ಕಾರ್ಯದರ್ಶಿ ಅಮೃತ್‌ಕುಮಾರ್, ಖಜಾಂಚಿ ಮೋಹನ್, ಪ್ರದೀಪ್‌ಕುಮಾರ್, ಕುಮಾರ್, ಮನು, ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Friday, March 12, 2021

ಶಾಸಕರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್

ಜನಾಕ್ರೋಶ ಬೃಹತ್ ಪ್ರತಿಭಟನೆ ಯಶಸ್ವಿಗೆ ಕರೆ

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ನಿವಾಸಕ್ಕೆ ಪಕ್ಷದ ಜಿಲ್ಲಾ ಮುಖಂಡರೊಂದಿಗೆ ಖುದ್ದಾಗಿ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು
     ಭದ್ರಾವತಿ, ಮಾ. ೧೨: ನಗರದಲ್ಲಿ ಆಯೋಜಿಸಲಾಗಿದ್ದ ಕಬಡ್ಡಿ ಪಂದ್ಯಾವಳಿಯ ಮುಕ್ತಾಯದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ನಡುವೆ ನಡೆದಿರುವ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ದಾಖಲಿಸಿರುವ ಪ್ರಕರಣಗಳನ್ನು ಖಂಡಿಸಿ ಹಾಗು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಗಳ ವಿರುದ್ಧ ಮಾ.೧೩ರಂದು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ಜನಾಕ್ರೋಶ ಬೃಹತ್ ಪ್ರತಿಭಟನೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
      ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹೆಚ್ಚಿನ ಬೆಂಬಲ ನೀಡಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲೆ ಉಳಿದುಕೊಂಡಿರುವ ದೃವನಾರಾಯಣ್ ಎಲ್ಲಾ ಸಿದ್ದತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್ ನಿವಾಸಕ್ಕೆ ಪಕ್ಷದ ಜಿಲ್ಲಾ ಮುಖಂಡರೊಂದಿಗೆ ಖುದ್ದಾಗಿ ಭೇಟಿ ನೀಡಿ ಗಲಾಟೆಗೆ ಸಂಬಂಧಿಸಿದಂತೆ ಇದುವರೆಗೂ ನಡೆದಿರುವ ಬೆಳವಣಿಗೆಗಳು ಹಾಗು ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಶಾಸಕರು ಹಾಗು ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದ ದೃವನಾರಾಯಣ್ ನಂತರ ಪೂರ್ವಭಾವಿ ಸಭೆ ನಡೆಸುವ ಮೂಲಕ ಜನಾಕ್ರೋಶ ಬೃಹತ್ ಪ್ರತಿಭಟನೆ ಯಶಸ್ವಿಗೊಳಿಸಲು ಮುಂದಾಗುವಂತೆ ಕರೆ ನೀಡಿದರು.
     ಪಕ್ಷದ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ನಗರಸಭೆ ಅಧ್ಯಕ್ಷ ಟಿ. ಚಂದ್ರೇಗೌಡ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಕ್ರೀಡಾ ಮನೋಭಾವನೆಯೊಂದಿಗೆ ಕಬಡ್ಡಿ ಪಂದ್ಯಾವಳಿ ಆಯೋಜನೆ : ಯಾವುದೇ ರಾಜಕೀಯವಿಲ್ಲ

ಪತ್ರಿಕಾ ಹೇಳಿಕೆಯಲ್ಲಿ ಆಯೋಜಕರು, ಮಾಲೀಕರು ಸ್ಪಷ್ಟನೆ

ಭದ್ರಾವತಿ, ಮಾ. ೧೨: ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಬಿವೈಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಫೆ.೨೭ ಮತ್ತು ೨೮ರಂದು ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿಗೆ ಸಂಬಂಧಿಸಿದಂತೆ ಇದೀಗ ಕ್ಲಬ್ ಮೌನ ಮುರಿದಿದ್ದು, ಯಾವುದೇ ರಾಜಕೀಯ ಪಕ್ಷದ ಪರವಾಗಿ ಪಂದ್ಯಾವಳಿ ಆಯೋಜಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದೆ.
   ಪಂದ್ಯಾವಳಿಯ ಬಹುಮಾನ ವಿತರಣೆ ಮುಕ್ತಾಯದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ನಡುವೆ ನಡೆದಿರುವ ಗಲಾಟೆ ಪ್ರಕರಣ ರಾಜ್ಯಮಟ್ಟದಲ್ಲಿ ಸುದ್ದಿಯಾಗುವ ಮೂಲಕ ಇದೀಗ ಇಡೀ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ತಿರುಗಿ ಬಿದ್ದಿದ್ದು, ಶಿವಮೊಗ್ಗದಲ್ಲಿ ಮಾ.೧೩ರ ಶನಿವಾರ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಈ ಹಂತದಲ್ಲಿ ಇದೀಗ ಕ್ಲಬ್ ಮೌನ ಮುರಿದಿದೆ.
    ವಿವಿಧ ತಂಡಗಳ ಮಾಲೀಕರು ಹಾಗು ಆಯೋಜಕರು ಈ ಕುರಿತು ಪತ್ರಿಕಾಹೇಳಿಕೆ ನೀಡಿದ್ದು, ನಗರದಲ್ಲಿ ಕಬಡ್ಡಿ ಕ್ರೀಡೆಯನ್ನು ಉತ್ತೇಜಿಸುವ ಹಾಗು ಪ್ರತಿಭಾವಂತ ಕಬಡ್ಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕ್ರೀಡಾ ಮನೋಭಾವನೆಯೊಂದಿಗೆ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಇಲ್ಲಿ ಯಾವುದೇ ರಾಜಕೀಯವಿಲ್ಲ ಪಕ್ಷಾತೀತವಾಗಿ ಎಲ್ಲರೂ ಸೇರಿ ಪಂದ್ಯಾವಳಿಯನ್ನು ನಡೆಸಲಾಗಿದೆ ಎಂದು ಮಾಲೀಕರು ಹಾಗು ಆಯೋಜಕರಾಗಿರುವ ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ವಿ. ವೆಂಕಟೆಶ್, ಉಮೇಶ್, ಆನಂದ್, ಮಣಿ ಎಎನ್‌ಎಸ್ ಮತ್ತು ಬಿ.ಎಸ್ ಜಗದೀಶ್ ತಿಳಿಸಿದ್ದಾರೆ.

ಮಾ.೧೬ರಂದು ವಿಶ್ವ ಮಹಿಳಾ ದಿನಾಚರಣೆ

ಭದ್ರಾವತಿ, ಮಾ. ೧೨: ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ.೧೬ರಂದು ಬೆಳಿಗ್ಗೆ ೧೦.೩೦ಕ್ಕೆ ಅಪ್ಪರ್‌ಹುತ್ತಾ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
   ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಶಾರದ ಅಪ್ಪಾಜಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.