Monday, March 22, 2021

ದೇಶದೆಲ್ಲೆಡೆ ಎಎಪಿ ವಿಸ್ತರಣೆಗೆ ಚಿಂತನೆ : ಬೇರುಮಟ್ಟದಲ್ಲಿ ಸಂಘಟಿಸಲು ಹೆಚ್ಚಿನ ಗಮನ

ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳು ಸ್ಪರ್ಧೆ : ರೂಮಿಬಾಟಿ


ಮುಂಬರುವ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಹಿನ್ನಲೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪೂರ್ವ ಸಿದ್ದತಾ ಸಭೆಯಲ್ಲಿ ಸುವರ್ಣ ಕರ್ನಾಟಕ ನಿರ್ಮಾಣಕ್ಕಾಗಿ ಮಿಸ್ಡ್ ಕಾಲ್ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.  
    ಭದ್ರಾವತಿ, ಮಾ. ೨೨: ಆಮ್ ಆದ್ಮಿ ಪಾರ್ಟಿ ಕೇವಲ ದೆಹಲಿಗೆ ಮಾತ್ರ ಸೀಮಿತವಾಗದೆ ದೇಶದ ಎಲ್ಲೆಡೆ ವಿಸ್ತರಿಸಿಕೊಳ್ಳುವ  ಉದ್ದೇಶದೊಂದಿಗೆ ಮುನ್ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಕೂಡ ಪಕ್ಷ ಸಂಘಟನೆಗೆ ಹೆಚ್ಚಿನ ಗಮನ ಹರಿಸಿದೆ ಎಂದು ಪಕ್ಷದ ಕರ್ನಾಟಕ ಉಸ್ತುವಾರಿ, ದೆಹಲಿಯ ರೂಮಿಬಾಟಿ ತಿಳಿಸಿದರು.
   ಮುಂಬರುವ ನಗರಸಭೆ ಚುನಾವಣೆಯಲ್ಲಿ ಹಿನ್ನಲೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪೂರ್ವ ಸಿದ್ದತಾ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
    ದೇಶದ ಎಲ್ಲೆಡೆ ಪಕ್ಷಕ್ಕೆ ಹೆಚ್ಚಿನ ಜನಬೆಂಬಲ ವ್ಯಕ್ತವಾಗುತ್ತಿದೆ. ಇದೀಗ ಬೇರುಮಟ್ಟದಿಂದ ಪಕ್ಷವನ್ನು ಸಂಘಟಿಸುವ ಅಗತ್ಯವಿದೆ. ಈ ಹಿನ್ನಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಸ್ಪರ್ಧಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲೂ ಪಕ್ಷ ತನ್ನ ಅಸ್ತಿತ್ವ ಕಂಡುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
   ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಂ.ಪಿ ದರ್ಶನ್ ಜೈನ್ ಮಾತನಾಡಿ, ಒಂದು ರಾಜಕೀಯ ಪಕ್ಷ ದೇಶದ ಆಡಳಿತ ವ್ಯವಸ್ಥೆಯಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬಹುದು, ಜನರ ಸಂಕಷ್ಟಗಳಿಗೆ ಯಾವ ರೀತಿ ಸ್ಪಂದಿಸಬಹುದು. ಪಾರದರ್ಶಕ ಆಡಳಿತ ಯಾವ ರೀತಿ ನೀಡಬಹುದು ಎಂಬುದನ್ನು ಆಮ್ ಆದ್ಮಿ ಪಾರ್ಟಿ ದೆಹಲಿಯಲ್ಲಿ ಕಳೆದ ೧೦ ವರ್ಷಗಳ ಅವಧಿಯಲ್ಲಿ ತೋರಿಸಿಕೊಟ್ಟಿದೆ. ಕೇವಲ ಚುನಾವಣೆಗೆ ಸ್ಪರ್ಧಿಸುವುದು ಮುಖ್ಯವಲ್ಲ. ಗೆಲುವು ಸಾಧಿಸುವುದು, ಪ್ರಬಲ ಪೈಪೋಟಿ ನೀಡುವುದು ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ ಸುವರ್ಣ ಕರ್ನಾಟಕ ನಿರ್ಮಾಣ ಮಾಡುವುದು ಪಕ್ಷದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಸ್ವಇಚ್ಛಿಯಿಂದ ಪಕ್ಷವನ್ನು ಬೆಂಬಲಿಸುವವರು ೭೬೬೯೪೦೦೪೧೦ ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಬಹುದು ಎಂದರು.
   ಭದ್ರಾವತಿಯಲ್ಲಿ ಕಳೆದ ೨ ವರ್ಷಗಳಿಂದ ಪಕ್ಷವನ್ನು ಎಲ್ಲಾ ವಾರ್ಡ್‌ಗಳ ವ್ಯಾಪ್ತಿಯಲ್ಲೂ ಬೇರುಮಟ್ಟದಿಂದ ಸಂಘಟಿಸಲಾಗುತ್ತಿದೆ. ವಿವಿಧ ಸಂಘಟನೆಗಳ ಜೊತೆ ಸೇರಿ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ.  ಈ ನಿಟ್ಟಿನಲ್ಲಿ ಪಕ್ಷದ ಸ್ಥಳೀಯ ಮುಖಂಡರ ಶ್ರಮ ಹೆಚ್ಚಿನದ್ದಾಗಿದೆ.  ಮುಂಬರುವ ಭದ್ರಾವತಿ ನಗರಸಭೆ ಚುನಾವಣೆಗೆ ಎಲ್ಲಾ ವಾರ್ಡ್‌ಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಪಕ್ಷದ ಮಾನದಂಡಗಳಂತೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.
    ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಅಧ್ಯಕ್ಷ ಪರಮೇಶ್ವರಚಾರ್, ಮಹಿಳಾ ಘಟಕದ ಅಧ್ಯಕ್ಷೆ ರೇಷ್ಮಾಬಾನು, ಕರವೇ ತಾಲೂಕು ಅಧ್ಯಕ್ಷ ಎಂ. ಪರಮೇಶ್, ಮುಖಂಡ ವಿ. ಗೋಪಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪಕ್ಷದ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು, ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ತಾಲೂಕು ಕಛೇರಿಯಲ್ಲಿ ಕೆರೆಗಳ ಹಬ್ಬ ಆಚರಣೆಗೆ ಆರ್. ವೇಣುಗೋಪಾಲ್ ಘೋಷಣೆ

ನಗರಸಭೆ, ತಾಲೂಕು ಆಡಳಿತ ಕಾರ್ಯಕ್ಕೆ ಅಭಿನಂದನೆ


ಭದ್ರಾವತಿ ತಾಲೂಕಿನಾದ್ಯಂತ ಕೆರೆಗಳ ಅಭಿವೃದ್ಧಿಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್ ಸೋಮವಾರ ವಿಶ್ವ ಜಲದಿನದ ಅಂಗವಾಗಿ ತಾಲೂಕು ಕಛೇರಿಯಲ್ಲಿ ಕೆರೆಗಳ ಹಬ್ಬ ಆಚರಣೆಗೆ ಘೋಷಿಸಿದರು.
   ಭದ್ರಾವತಿ, ಮಾ. ೨೨: ತಾಲೂಕಿನಾದ್ಯಂತ ಕೆರೆಗಳ ಅಭಿವೃದ್ಧಿಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್ ಸೋಮವಾರ ವಿಶ್ವ ಜಲದಿನದ ಅಂಗವಾಗಿ ತಾಲೂಕು ಕಛೇರಿಯಲ್ಲಿ ಕೆರೆಗಳ ಹಬ್ಬ ಆಚರಣೆಗೆ ಘೋಷಿಸಿದರು.
    ಮಾ.೨೯ರಂದು ತಾಲೂಕಿನ ತಿಮ್ಲಾಪುರ ಗ್ರಾಮದ ಸರ್ವೆ ನಂ.೮ ಹಾಗು ಮಾ.೩೦ರಂದು ಸರ್ವೆ ನಂ.೬೪ರ ಕೆರೆ ಹಾಗು ಏ.೧ರಂದು ಉಜ್ಜನಿಪುರ ಗ್ರಾಮದ ಸರ್ವೆ ನಂ.೫೭ರ ಕೆರೆ ಅಳತೆ ಕಾರ್ಯ ಕೈಗೊಂಡು ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಂತೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ನಗರಸಭೆ ಆಡಳಿತಕ್ಕೆ ಆದೇಶ ಪತ್ರ ವಿತರಿಸಿದ ಸಂದರ್ಭದಲ್ಲಿ ಆರ್. ವೇಣುಗೋಪಾಲ್ ತಾಲೂಕು ಆಡಳಿತ ಹಾಗು ನಗರಸಭೆ ಆಡಳಿತಗಳನ್ನು ಅಭಿನಂದಿಸುವುದರ ಜೊತೆಗೆ ಪ್ರತಿ ವರ್ಷ ಮಾ.೨೨ರಂದು ಕೆರೆಗಳ ಹಬ್ಬ ಆಚರಣೆಗೆ ಮನವಿ ಮಾಡುವ ಮೂಲಕ ಘೋಷಿಸಿದರು.
   ರೈತರಿಗೆ, ಜಾನುವಾರುಗಳಿಗೆ ಅನುಕೂಲ ಕಲ್ಪಿಸಿಕೊಡುವ ಜೊತೆಗೆ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ನಗರಸಭೆಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಆರ್. ವೇಣುಗೋಪಾಲ್ ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಇದರ ಫಲವಾಗಿ ತಾಲೂಕು ಆಡಳಿತದ ನೆರವಿನೊಂದಿಗೆ ನಗರಸಭೆ ಆಡಳಿತ ಕೆರೆಗಳ ಬೌಂಡರಿ ನಿಗದಿ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೭೦ ಕೆರೆಗಳಿದ್ದು, ಈ ಪೈಕಿ ಇದುವರೆಗೂ ೧೮ ಕೆರೆಗಳ ಬೌಂಡರಿ ನಿಗದಿಪಡಿಸಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.
   ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಪ್ರಮುಖರಾದ ಮುರುಗನ್, ಪ್ರಸನ್ನ, ಯೋಗೇಶ್, ಬಿ.ಎನ್ ರಾಜು, ಚಂದ್ರಶೇಖರ್, ಸುಬ್ಬೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗೋಣಿಬೀಡು ಚಾನಲ್‌ನಲ್ಲಿ ಮೃತದೇಹ ಪತ್ತೆ

ಗೌಸ್‌ಪೀರ್
ಭದ್ರಾವತಿ, ಮಾ. ೨೨: ತಾಲೂಕಿನ ಗೋಣಿಬೀಡು ಗ್ರಾಮದ ಚಾನಲ್‌ನಲ್ಲಿ ಸೋಮವಾರ ಮಧ್ಯಾಹ್ನ ಮೃತ ದೇಹವೊಂದು ಪತ್ತೆಯಾಗಿದೆ.
   ಮೃತಪಟ್ಟ ವ್ಯಕ್ತಿಯನ್ನು ಹೊಸಮನೆ ಹನುಮಂತನಗರ ನಿವಾಸಿ ಗೌಸ್‌ಪೀರ್ ಎಂದು ಗುರುತಿಸಲಾಗಿದೆ. ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಶವಪರೀಕ್ಷೆ ನಡೆಸಲಾಗಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಜಮೀನು ವಿಚಾರ : ಮಹಿಳೆಯೊಬ್ಬರ ಕೊಲೆಗೆ ಯತ್ನ

ಭದ್ರಾವತಿ, ಫೆ. ೨೨: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಮೇಲೆ ಕೊಲೆ ಯತ್ನ ನಡೆದಿರುವ ಘಟನೆ ತಾಲೂಕಿನ ಶಂಕರಘಟ್ಟದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
    ಶಂಕರಘಟ್ಟ ನಿವಾಸಿ ಮಮತಾ ಎಂಬುವರು ಹಲ್ಲೆಗೊಳಗಾಗಿದ್ದು, ಮಧ್ಯಾಹ್ನ ೧.೪೫ರ ಸುಮಾರಿನಲ್ಲಿ ಸುಮಾರು ೫ ಜನರು ಏಕಾಏಕಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಮತಾ ಕುಟುಂಬದವರು ೨೦೦೮ರಲ್ಲಿ ಜಮೀನು ಖರೀದಿಸಿದ್ದು, ಆದರೆ ಇದುವರೆಗೂ ಜಮೀನು ನೋಂದಾಣಿ ಮಾಡಿಕೊಡದೆ ಇರುವುದು ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರ ತನಿಖೆ ನಂತರ ನಿಖರವಾದ ಮಾಹಿತಿ ಲಭ್ಯವಾಗಲಿದೆ.


Sunday, March 21, 2021

ಮಾ.೨೮ರಂದು ತಾಲೂಕು ೬ನೇ ಶರಣ ಸಾಹಿತ್ಯ ಸಮ್ಮೇಳನ

ಸರ್ವಾಧ್ಯಕ್ಷೆ ಡಾ. ವೀಣಾ ಎಸ್. ಭಟ್‌ಗೆ ಆಹ್ವಾನ
ಭದ್ರಾವತಿ, ಮಾ. ೨೧: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕು ೬ನೇ ಶರಣ ಸಾಹಿತ್ಯ ಸಮ್ಮೇಳನ ಮಾ.೨೮ರಂದು ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ಸಮ್ಮೇಳನಾಧ್ಯಕ್ಷರಾಗಿ ಸ್ತ್ರೀ ರೋಗ ತಜ್ಞೆ, ವೈದ್ಯ ಸಾಹಿತಿ ಡಾ. ವೀಣಾ ಎಸ್ ಭಟ್‌ರನ್ನು ಆಯ್ಕೆ ಮಾಡಲಾಗಿದೆ.
ತಾಲೂಕಿನಲ್ಲಿ ಶರಣ ಸಾಹಿತ್ಯ ಪರಿಷತ್ ವತಿಯಿಂದ ನಿರಂತರವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಶರಣ ಸಾಹಿತ್ಯ ಸಮ್ಮೇಳನ ಗಮನ ಸೆಳೆಯುತ್ತಿದೆ.
ಈ ಬಾರಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ವಿಶೇಷತೆ ಎಂಬಂತೆ ಸಮ್ಮೇಳನಾಧ್ಯಕ್ಷರಾಗಿ ಡಾ. ವೀಣಾ ಎಸ್ ಭಟ್‌ರನ್ನು ಆಯ್ಕೆ ಮಾಡಿರುವುದು ಮತ್ತಷ್ಟು ವಿಶೇಷತೆಯಿಂದ ಕೂಡಿದೆ. ವೀಣಾ ಎಸ್ ಭಟ್‌ರವರು ವೈದ್ಯಕೀಯ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಯೋಗ ಹಾಗು ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಇವರು ವೈದ್ಯಕೀಯ ಸಾಹಿತ್ಯದ ಹಲವು ಪುಸ್ತಕಗಳನ್ನು ಬಿಡುಗಡೆಗೊಳಿಸಿದ್ದಾರೆ. ಮಾಸ ಪತ್ರಿಕೆ, ವಾರ ಪತ್ರಿಕೆ ಹಾಗು ದಿನಪತ್ರಿಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸಿದ್ದಾರೆ.
ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ :
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರುಪಾಕ್ಷಪ್ಪ ನೇತೃತ್ವದಲ್ಲಿ ಭಾನುವಾರ ಸಮ್ಮೇಳನಾಧ್ಯಕ್ಷೆ ವೀಣಾ ಎಸ್ ಭಟ್‌ರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು.
ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ನೇತ್ರ ತಜ್ಞ ಡಾ. ಕುಮಾರಸ್ವಾಮಿ, ಕತ್ತಲಗೆರೆ ತಿಮ್ಮಪ್ಪ, ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಿತ್ರ: ಡಿ೨೧-ಬಿಡಿವಿಟಿ೨
ಭದ್ರಾವತಿ ತಾಲೂಕು ೬ನೇ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ ಡಾ. ವೀಣಾ ಎಸ್. ಭಟ್‌ರನ್ನು ಭಾನುವಾರ ಅಧಿಕೃತವಾಗಿ ಆಹ್ವಾನಿಸಲಾಯಿತು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಗ್ರಾಮೀಣ ಆಟದೊಂದಿಗೆ ಸಂಭ್ರಮ

ನೆಹರು ಯುವ ಕೇಂದ್ರ, ಸಮೃದ್ಧಿ ಯುವತಿ ಮಂಡಳಿ, ಅರಿವು ಮಹಿಳಾ ಸಂಘ ಹಾಗು ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಮೀಣ ಆಟ ಜರುಗಿತು.

ಭದ್ರಾವತಿ, ಮಾ. ೨೧: ನೆಹರು ಯುವ ಕೇಂದ್ರ, ಸಮೃದ್ಧಿ ಯುವತಿ ಮಂಡಳಿ, ಅರಿವು ಮಹಿಳಾ ಸಂಘ ಹಾಗು ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
    ಮಹಿಳೆಯರಿಗಾಗಿ ಗ್ರಾಮೀಣ ಆಟಗಳ ಸ್ಪರ್ಧೆ ಜರುಗಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಮೃದ್ಧಿ ಯುವತಿ ಮಂಡಳಿ ಅಧ್ಯಕ್ಷೆ ಶಿಲ್ಪ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.
    ಎಂಪಿಎಂಇಎಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಿಎಸ್ ಜಮುನ ಕಾರ್ಯಕ್ರಮ ಉದ್ಘಾಟಿಸಿದರು. ಆಶಾ ಮೇಲ್ವಿಚಾರಕಿ ಬಿ.ಎಂ ವಸಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿಶೇಷವಾಗಿ ಪೌರಕಾರ್ಮಿಕರಾದ ನಂಜಮ್ಮ ಹಾಗು ಸೋಬಾನಪದ ಆಕಾಶವಾಣಿ ಕಲಾವಿದೆ ಗಿರಿಜಮ್ಮ ತಿಮ್ಮಪ್ಪರವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ತಮಟೆ ಜಗದೀಶ್, ಜಿ. ದಿವಾಕರ್, ಜಿ. ರವಿಕುಮಾರ್, ಸೋಮಶೇಖರ್, ಸಹನಾ, ವೀರೇಶ್, ಶಾರದಮ್ಮ, ಟಿ. ರಘುನಾಯ್ಕ್, ಕೆ. ಮಂಜು ಮತ್ತು ಲತಾ ಪ್ರಸಾದ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.


ಮೇ.೩೦ರಂದು ಉಚಿತ ಸಾಮೂಹಿಕ ವಿವಾಹ : ಸದುಪಯೋಗಪಡಿಸಿಕೊಳ್ಳಲು ಕರೆ

ಭದ್ರಾವತಿ, ಮಾ. ೨೧: ವಿಶ್ವ ಹಿಂದು ಪರಿಷತ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಹಾಗು ಶಾಶ್ವತಿ ಮಹಿಳಾ ಸಮಾಜದ ಸಹಯೋಗದೊಂದಿಗೆ ಮೇ.೩೦ರಂದು ೩೮ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
   ವಿಶ್ವ ಹಿಂದು ಪರಿಷತ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಕಳೆದ ೩೭ ವರ್ಷಗಳಿಂದ ನಿರಂತರವಾಗಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದ್ದು, ಇದುವರೆಗೂ ಒಟ್ಟು ೭೭೧ ಜೊತೆ ವಿವಾಹ ನೆರವೇರಿಸಲಾಗಿದೆ. ಈ ಬಾರಿ ಚನ್ನಗಿರಿ ಕೇದಾರ ಶಾಖಾ ಹಿರೇಮಠದ ಶ್ರೀ ಕೇದಾರಲಿಂಗಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಅರ್ಹ ವಧು-ವರರು ಈ ಉಚಿತ ಸಾಮೂಹಿಕ ವಿವಾಹದ ಸದುಪಯೋಗಪಡೆದುಕೊಳ್ಳಬಹುದಾಗಿದೆ.
    ಹೆಚ್ಚಿನ ಮಾಹಿತಿಗೆ ಹಾ. ರಾಮಪ್ಪ, ಮೊ: ೯೮೮೦೭೭೯೨೯೩ ಅಥವಾ ಡಿ.ಆರ್ ಶಿವಕುಮಾರ್, ಮೊ: ೯೯೬೪೨೩೭೦೭೮ ಸಂಖ್ಯೆಗೆ ಕರೆ ಮಾಡಬಹುದಾಗಿದೆ.