Tuesday, April 6, 2021

ತಾಲೂಕು ಕಛೇರಿಗೆ ಬರುವವರಿಗೆ ಅಲೆದಾಡಿಸದಿರಿ, ಸೂಕ್ತ ಮಾಹಿತಿ ನೀಡಿ ಸಹಕರಿಸಿ

ಮಂಗಳವಾರ ತಾ.ಪಂ. ಅಧ್ಯಕ್ಷೆ ಡಿ. ಲಕ್ಷ್ಮೀದೇವಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದಸ್ಯರ ಆಗ್ರಹ


ಭದ್ರಾವತಿಯಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
    ಭದ್ರಾವತಿ, ಏ. ೬: ತಾಲೂಕು ಕಛೇರಿಗೆ ವಿವಿಧ ದಾಖಲೆಗಳನ್ನು ಪಡೆಯಲು ಬರುವವರಿಗೆ ಸರಿಯಾದ ಮಾಹಿತಿ ನೀಡದೆ ಅಲೆದಾಡಿಸುವುದು ಸರಿಯಲ್ಲ. ತಾಲೂಕು ಆಡಳಿತ ವ್ಯಾಪ್ತಿಗೆ ಒಳಪಡುವ ಇಲಾಖೆಗಳ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸುವಂತೆ ತಾಲೂಕು ಪಂಚಾಯಿತಿ ಸದಸ್ಯರು ಆಗ್ರಹಿಸಿದರು.
    ಮಂಗಳವಾರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾಗರಾಜ್, ಕಳೆದ ೬ ತಿಂಗಳುಗಳಿಂದ ಸರಿಯಾಗಿ ಪಿಂಚಣಿ ಬಂದಿಲ್ಲ. ಪಿಂಚಣಿಗಾಗಿ ತಾಲೂಕು ಕಛೇರಿ ಅಲೆದಾಡುವಂತಾಗಿದೆ. ಅಧಿಕಾರಿಗಳನ್ನು ಸಮರ್ಪಕಿಸಿದರೆ ಅದೇನೋ ಎರಡು ಕಡೆ ಲಾಕ್ ಆಗಿದೆ. ಎರಡು ಬಾರಿ ಆದೇಶ ಪತ್ರ ಮಂಜೂರಾಗಿದೆ. ಇತ್ಯಾದಿ ಕಾರಣಗಳನ್ನು ಹೇಳಿ ಕಳುಹಿಸಲಾಗುತ್ತಿದೆ. ಅಲ್ಲದೆ ಹೊದಸಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸುತ್ತಿದ್ದಾರೆ. ಇದರಿಂದಾಗಿ ಪಿಂಚಣಿಯನ್ನು ನಂಬಿರುವ ಬಡವರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಇದಕ್ಕೆ ಉತ್ತರಿಸಿದ ಉಪತಹಸೀಲ್ದಾರ್ ಮಲ್ಲಿಕಾರ್ಜುನಯ್ಯ, ಹೊಸದಾಗಿ ಪಿಂಚಣಿ ಮಾಡಿಸುವ ಅಗತ್ಯವಿಲ್ಲ. ಆಧಾರ್ ಕಾರ್ಡ್, ಬ್ಯಾಂಕ್‌ಪಾಸ್‌ಬುಕ್ ನೀಡಿದರೆ ಸಾಕು ಪಿಂಚಣಿ ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದರು.
     ಹಿರಿಯ ಸದಸ್ಯ ಧರ್ಮೇಗೌಡ ಮಾತನಾಡಿ, ಆಹಾರ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳಿಗಾಗಿ ತಾಲೂಕು ಕಛೇರಿಗೆ ಬರರುವವರಿಗೆ ಸೂಕ್ತ ಮಾಹಿತಿ ನೀಡುವ ಜೊತೆಗೆ ಪೂರಕವಾಗಿ ಸ್ಪಂದಿಸಬೇಕು. ಆದರೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಅಲೆದಾಡುಸುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.
 ಆರಂಭದಲ್ಲಿ ಸದಸ್ಯ ದಿನೇಶ್ ಮಾತನಾಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳನ್ನು ಹೆಚ್ಚು ದಿನ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲಿ. ಇದರ ಹಿಂದೆ ಯಾವುದೋ ವೈಫಲ್ಯವಿರುವಂತೆ ಎದ್ದು ಕಾಣುತ್ತಿದೆ. ತಾಲೂಕು ಪಂಚಾಯಿತಿ ವ್ಯಾಪ್ತಿಯ ಸಮಗ್ರ ಚಿತ್ರಣ ಅರಿತುಕೊಂಡು ಅಭಿವೃದ್ಧಿಗೆ ಪೂರಕವಾಗಿ ಕರ್ತವ್ಯ ನಿರ್ವಹಿಸುವ  ಮೊದಲೇ ವರ್ಗವಣೆಗೊಳ್ಳುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
    ಇದಕ್ಕೆ ಉತ್ತರಿಸಿದ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಅಧಿಕಾರಿಯನ್ನು ಸರ್ಕಾರವೇ ವರ್ಗಾವಣೆಗೊಳಿಸಿದೆ. ಅಧಿಕಾರಿಗಳನ್ನು ಉಳಿಸಿಕೊಳ್ಳುವುದು ನಮ್ಮ ಕೈಯಲ್ಲಿಲ್ಲ ಎಂದರು.
    ನೂತನ ಕಾರ್ಯನಿರ್ವಹಣಾಧಿಕಾರಿ ರಮೇಶ್ ಮಾತನಾಡಿ, ಸರ್ಕಾರದ ಆದೇಶದ ಮೇರೆಗೆ ನನ್ನನ್ನು ನಿಯೋಜನೆಗೊಳಿಸಲಾಗಿದೆ. ನಿಮ್ಮೆಲ್ಲರ ಸಹಕಾರದಿಂದ ಉತ್ತಮವಾಗಿ ಕರ್ತವ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು.
    ಉಪಾಧ್ಯಕ್ಷೆ ನೇತ್ರಾಬಾಯಿ ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಸದಸ್ಯರಾದ ಶಾಮಾಬಾನು, ಆಶಾ ಶ್ರೀಧರ್, ಯಶೋದಮ್ಮ, ಎ.ಎನ್ ಉಷಾಕಿರಣ, ಎಸ್. ರಮೇಶ್, ಕೆ.ವಿ ರುದ್ರಪ್ಪ, ಅಣ್ಣಾಮಲೈ, ತಿಪ್ಪೇಶ್‌ರಾವ್ ಅರಣ್ಯ, ಕೃಷಿ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

Monday, April 5, 2021

ನಗರಸಭೆ ಚುನಾವಣೆ : ವಿವಿಧ ರಾಜಕೀಯ ಪಕ್ಷಗಳಿಂದ ತೆರೆಮರೆಯಲ್ಲಿ ಕಸರಸ್ತು



      * ಅನಂತಕುಮಾರ್
   ಭದ್ರಾವತಿ:  ಸುಮಾರು ೨ ವರ್ಷಗಳ ನಂತರ ನಗರಸಭೆಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಚುನಾವಣಾ ಆಯೋಗ ವೇಳಾಪಟ್ಟಿ ಸಹ ಪ್ರಕಟಿಸಿದೆ. ಏ.೮ರಿಂದ ನೀತಿ ಸಂಹಿತೆ ಜಾರಿಗೆ ಬರಲಿದೆ. ಈ ನಡುವೆ ಕಳೆದ ೪-೫ ದಿನಗಳಿಂದ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ರಾಜಕೀಯ ಪಕ್ಷಗಳಲ್ಲಿ ತೆರೆಮರೆಯಲ್ಲಿ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿವೆ.
     ಪ್ರಮುಖ ಪಕ್ಷಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿದ್ದು, ಏ.೮ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಯಾವುದೇ ಪಕ್ಷಗಳು ಇದುವರೆಗೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಆದರೆ ಕೆಲವು ಆಕಾಂಕ್ಷಿಗಳು ತಾವೇ ಪಕ್ಷದ ಅಧಿಕೃತ ಅಭ್ಯರ್ಥಿ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್‌ಗಳನ್ನು ಹಂಚಿಕೊಳ್ಳುತ್ತಿವುದು ಕಂಡು ಬರುತ್ತಿದೆ. ಅಲ್ಲದೆ ಕೆಲವು ವಾರ್ಡ್‌ಗಳಲ್ಲಿ ಆಕಾಂಕ್ಷಿಗಳು ಕಳೆದ ೨ ವರ್ಷಗಳಿಂದ ಪಕ್ಷದ ಅಧಿಕೃತ ಅಭ್ಯರ್ಥಿ ನಾನೇ ಎಂದು ಹೇಳಿಕೊಳ್ಳುವ ಮೂಲಕ ವಾರ್ಡ್‌ಗಳಲ್ಲಿನ ಸಣ್ಣಪುಟ್ಟ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದು ಗುಟ್ಟಾಗಿ ಉಳಿದಿಲ್ಲ.  
       ಕೆಲವು ರಾಜಕೀಯ ಪಕ್ಷಗಳಿಂದ ಪ್ರಥಮ ಬಾರಿಗೆ ಅಭ್ಯರ್ಥಿಗಳು ಸ್ಪರ್ಧೆ:
   ಈ ಹಿಂದಿನ ಚುನಾವಣೆಗಳಲ್ಲಿ ಪ್ರಮುಖವಾಗಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು ಮಾತ್ರ ಕಂಡು ಬರುತ್ತಿದ್ದರು. ಆದರೆ ಈ ಬಾರಿ ಆಮ್ ಆದ್ಮಿ ಪಾರ್ಟಿ(ಎಎಪಿ), ಜನಾತದಳ(ಸಂಯುಕ್ತ) ಕರ್ನಾಟಕ(ಜೆಡಿಯು) ಪಕ್ಷಗಳು ಸಹ ಅಧಿಕೃತವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿವೆ. ಈಗಾಗಲೇ ಎಎಪಿ ಪಕ್ಷದ ಕರ್ನಾಟಕ ರಾಜ್ಯ ಉಸ್ತುವಾರಿ ದೆಹಲಿಯ ರೂಮಿಬಾಟಿ ನಗರಕ್ಕೆ ಆಗಮಿಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಘೋಷಿಸಿದ್ದಾರೆ. ಇದೆ ರೀತಿ ಜನತಾದಳ(ಸಂಯುಕ್ತ) ಕರ್ನಾಟಕ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಬೇಹಳ್ಳಿ ಡಿ. ನಾಗರಾಜು ಘೋಷಿಸಿದ್ದಾರೆ.
ಉಳಿದಂತೆ ಸ್ನೇಹ ಜೀವಿ ಬಳಗ ಸಹ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಈಗಾಗಲೇ ಸ್ನೇಹ ಜೀವಿ ಬಳಗದಿಂದ ಪ್ರಥಮ ಬಾರಿಗೆ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಪ್ರಥಮ ಪ್ರಯತ್ನದಲ್ಲಿಯೇ ೫ ಅಭ್ಯಥಿಗಳು ಆಯ್ಕೆಯಾಗಿರುವುದು ಗಮನಾರ್ಹ ಸಂಗತಿಯಾಗಿದೆ. ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಈಗಾಗಲೇ ಸ್ಪರ್ಧಿಸುವ ವಾರ್ಡ್‌ಗಳನ್ನು ಘೋಷಿಸಿದೆ.
      ತರಾತುರಿಯಲ್ಲಿ ಕಾಮಗಾರಿಗಳಿಗೆ ಚಾಲನೆ :
     ಏ.೮ರಿಂದ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನಲೆಯಲ್ಲಿ ಬಿಡುವಿಲ್ಲದೆ ಶಾಸಕ ಬಿ.ಕೆ ಸಂಗಮೇಶ್ವರ್ ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ತರಾತುರಿಯಲ್ಲಿ ಚಾಲನೆ ನೀಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಶಾಸಕರ ಈ ನಡೆಯನ್ನು ಬಿಜೆಪಿ ಆಕ್ಷೇಪಿಸಿದ್ದು, ಈ ಸಂಬಂಧ ದೂರು ಸಹ ನೀಡಿದೆ.  
           ಸಂಗಮೇಶ್ವರ್‌ಗೆ ಪ್ರತಿಷ್ಠೆಯ ಚುನಾವಣೆ:
    ಇತ್ತೀಚೆಗೆ ನಗರದಲ್ಲಿ ಆಯೋಜಿಸಲಾಗಿದ್ದ ಕಬ್ಬಡಿ ಪಂದ್ಯಾವಳಿಯೊಂದರಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಇಡೀ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿರುವ ಸಂಗಮೇಶ್ವರ್ ಈ ಬಾರಿ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿಸಿಕೊಂಡಿದ್ದು, ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ರೂಪಿಸಿಕೊಳ್ಳುತ್ತಿದ್ದಾರೆ. ವಿವಿಧ ಜಾತಿ ಸಮುದಾಯಗಳ ಎಲ್ಲಾ ಕಾರ್ಯಕ್ರಮಗಳಲ್ಲೂ ಸಹ ತಪ್ಪದೇ ಪಾಲ್ಗೊಳ್ಳುತ್ತಿದ್ದು, ಅಲ್ಲದೆ ಹಲವಾರು ಭರವಸೆಗಳನ್ನು ನೀಡುತ್ತಿರುವುದು ಕಂಡು ಬರುತ್ತಿದೆ.  
       ಬಿಜೆಪಿಗೆ ಸವಾಲಿನ ಚುನಾವಣೆ:
     ಕಬ್ಬಡಿ ಪಂದ್ಯಾವಳಿಯೊಂದರಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ವಿರುದ್ಧ ತಿರುಗಿ ಬಿದ್ದಿರುವ ಬಿಜೆಪಿ ಪಕ್ಷದ ಸ್ಥಳೀಯ ಘಟಕಕ್ಕೆ ಈ ಚುನಾವಣೆ ಸವಾಲಿನ ಚುನಾವಣೆಯಾಗಿದೆ. ಈ ಬಾರಿ ನಗರಸಭೆ ಅಧಿಕಾರದ ಚುಕ್ಕಾಣಿಯನ್ನು ಹೇಗಾದರೂ ಮಾಡಿ ಹಿಡಿಯಲೇ ಬೇಕಾಗಿದೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ರಾಜ್ಯ ಹಾಗು ಜಿಲ್ಲಾ ಘಟಕ ಸಹ ನೆರವಿಗೆ ಬರಬೇಕಾಗಿದೆ.
       ಜೆಡಿಎಸ್‌ಗೆ ಅಸ್ತಿತ್ವದ ಪ್ರಶ್ನೆ :
    ಕಳೆದ ಬಾರಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ನೇತೃತ್ವದಲ್ಲಿ ೩೫ ವಾರ್ಡ್‌ಗಳ ಪೈಕಿ ೨೩ ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್ ಪಕ್ಷಕ್ಕೆ ಇದೀಗ ಅಸ್ತಿತ್ವ ಉಳಿಸಿಕೊಳ್ಳುವ ಪ್ರಶ್ನೆ ಎದುರಾಗಿದೆ. ಅಪ್ಪಾಜಿ ಇಲ್ಲದೆ ನಡೆಯುತ್ತಿರುವ ಈ ಚುನಾವಣೆಯ ನಾಯಕತ್ವ ವಹಿಸಿಕೊಂಡು ಸಮರ್ಥವಾಗಿ ಎದುರಿಸುವವರು ಯಾರು ಇಲ್ಲದಂತಾಗಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಜೆಡಿಎಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಅಪ್ಪಾಜಿ ಜೊತೆಗಿದ್ದ ಜೆಡಿಎಸ್ ನಾಯಕರೆಲ್ಲರೂ ಒಗ್ಗಟ್ಟಾಗಿ ಚುನಾವಣೆಗೆ ತಂತ್ರಗಾರಿಕೆ ರೂಪಿಸಬೇಕಾಗಿದೆ.

ನಗರಸಭೆ ಚುನಾವಣೆ : ಸಾರ್ವಜನಿಕ ರಜಾದಿನಗಳಂದು ಸಹ ನಾಮಪತ್ರ ಸಲ್ಲಿಕೆಗೆ ಅವಕಾಶ ಕೊಡಿ

ಸರ್ಕಾರಿ ರಜಾ ದಿನಗಳಂದು ಸಹ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಿಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಜನತಾದಳ(ಸಂಯುಕ್ತ) ಕರ್ನಾಟಕ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಭದ್ರಾವತಿಯಲ್ಲಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.
    ಭದ್ರಾವತಿ, ಏ. ೫: ಸರ್ಕಾರಿ ರಜಾ ದಿನಗಳಂದು ಸಹ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಿಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಜನತಾದಳ(ಸಂಯುಕ್ತ) ಕರ್ನಾಟಕ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.
    ಸ್ಥಳೀಯ ಸಂಸ್ಥೆ ನಗರಸಭೆ ಚುನಾವಣೆಗೆ ಏ.೮ ರಿಂದ ೧೫ರ ವರೆಗೆ ನಾಮಪತ್ರ ಸಲ್ಲಿಸಲು ದಿನಾಂಕ ನಿಗದಿಪಡಿಸಲಾಗಿದೆ. ಈ ನಡುವೆ ೪ ಸರ್ಕಾರಿ ರಜಾದಿನಗಳು ಇದ್ದು, ಇದರಿಂದಾಗಿ ಕಡಿಮೆ ಅವಧಿಯಲ್ಲಿ ನಾಮಪತ್ರ ಸಲ್ಲಿಸುವುದು ಅಸಾಧ್ಯವಾಗಿದೆ.  ಅದರಲ್ಲೂ ಹೊಸದಾಗಿ ನಾಮಪತ್ರ ಸಲ್ಲಿಸುವವರಿಗೆ ಹೆಚ್ಚಿನ ತೊಂದರೆಯಾಗಿದೆ. ಎಲ್ಲಾ ಸರ್ಕಾರಿ ಕಛೇರಿಗಳು ರಜೆ ಇರುವುದರಿಂದ ಹೊಸದಾಗಿ ಬ್ಯಾಂಕ್ ಖಾತೆ ತೆರೆಯುವುದು ಹಾಗು ಇನ್ನಿತರ ದಾಖಲಾತಿಗಳನ್ನು ನಿಗದಿತ ಸಮಯದಲ್ಲಿ ಸಲ್ಲಿಸಲು ಸಾಧ್ಯವಾಗುದಿಲ್ಲ. ಈ ಹಿನ್ನಲೆಯಲ್ಲಿ ಏ.೬ರಿಂದ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವುದು ಹಾಗು ೪ ಸಾರ್ವಜನಿಕ ರಜಾದಿನಗಳಂದು ಸಹ ನಾಮಪತ್ರಗಳನ್ನು ಸ್ವೀಕರಿಸುವುದು ಮತ್ತು ಹಳೇಯ ಬ್ಯಾಂಕ್ ಖಾತೆಗಳನ್ನು ಮಾನ್ಯ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಈಡೇರಿಸುವಂತೆ ಒತ್ತಾಯಿಸಿದ್ದಾರೆ.
              ಬಾಣದ ಗುರುತಿನ ಚಿಹ್ನೆ ನೀಡುವುದು:
     ನಗರಸಭೆ ೩೫ ವಾರ್ಡ್‌ಗಳಲ್ಲಿ ಜನತಾದಳ(ಸಂಯುಕ್ತ) ಕರ್ನಾಟಕ ಪಕ್ಷದ ವತಿಯಿಂದ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಅಭ್ಯರ್ಥಿಗಳಿಗೆ ಪಕ್ಷದ ಬಾಣದ ಗುರುತಿನ ಚಿಹ್ನೆ ನೀಡುವುದು. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರಾದ ಮಹಿಮಾ ಜೆ ಪಟೇಲ್‌ರವರು ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳಿಗೆ ಪಕ್ಷದ ಗುರುತಿನ ಚಿಹ್ನೆ ನೀಡುವಂತೆ ಶಶಿಕುಮಾರ್ ಎಸ್ ಗೌಡ ತಹಸೀಲ್ದಾರ್‌ಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.


ಡಿಎಸ್‌ಎಸ್ ಹಿರಿಯೂರು ಗ್ರಾಮ ಶಾಖೆ ಉದ್ಘಾಟನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮ ಶಾಖೆ ಉದ್ಘಾಟನೆ ಸೋಮವಾರ ನಡೆಯಿತು.
    ಭದ್ರಾವತಿ, ಏ. ೫: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ತಾಲೂಕಿನ ಹಿರಿಯೂರು ಗ್ರಾಮ ಶಾಖೆ ಉದ್ಘಾಟನೆ ಸೋಮವಾರ ನಡೆಯಿತು.
    ಗ್ರಾಮದ ಬಯಲು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ರಾಜ್ಯ ಖಜಾಂಚಿ ಸತ್ಯ ಶಾಖೆಯನ್ನು ಉದ್ಘಾಟಿಸಿದರು. ಗ್ರಾಮದ ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.
     ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪವಿತ್ರ ಮಂಜುನಾಥ್, ಹಾಲು ಸಹಕಾರ ಸಂಘದ ಉಪಾಧ್ಯಕ್ಷ ರಾಜಣ್ಣ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ರಾಜ್ಯ ಸಂಘಟನಾ ಸಂಚಾಲಕಿ ಶಾಂತಿ, ತಾಲೂಕು ಸಂಚಾಲಕ ಕೆ. ರಂಗನಾಥ್, ಅಂಗವಿಕಲ ಘಟಕದ ಜಿಲ್ಲಾಧ್ಯಕ್ಷ ಕಾಣಿಕ್‌ರಾಜ್, ಜಿಂಕ್‌ಲೈನ್ ಮಣಿ, ವಿನೋದ್, ರಾಮಲಿಂಗಮ್, ಶಿವಾಜಿರಾವ್, ಸಂದೀಪ್ ಆರ್,  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸೇವೆಗಾಗಿ ಮೀಸಲಾದ ಸ್ನೇಹ ಜೀವಿ ಬಳಗ : ಪೊಲೀಸ್ ಉಮೇಶ್

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಪೊಲೀಸ್ ಉಮೇಶ್ ನೇತೃತ್ವದ ಭದ್ರಾವತಿ ಸ್ನೆಹ ಜೀವಿ ಬಳಗದ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
   ಭದ್ರಾವತಿ, ಏ. ೫: ಯಾವುದೇ ಆಸೆ, ಆಕಾಂಕ್ಷೆಗಳಿಲ್ಲದೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉದಯಿಸಿದ ಸ್ನೇಹಜೀವಿ ಬಳಗ ಇಂದು ಬೃಹತ್‌ದಾಗಿ ಬೆಳೆದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದೆ ಎಂದು ಬಳಗದ ಸಂಸ್ಥಾಪಕ ಪೊಲೀಸ್ ಉಮೇಶ್ ತಿಳಿಸಿದರು.
   ಅವರು ಬಳಗಕ್ಕೆ ಸೇರ್ಪಡೆ ಹಾಗು ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾದ ಬಳಗದ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭದ ನೇತೃತ್ವವಹಿಸಿ ಮಾತನಾಡಿದರು.
    ದೇವಸ್ಥಾನಗಳಲ್ಲಿ ಅನ್ನದಾಸೋಹದಂತಹ ಸೇವಾ ಕಾರ್ಯಗಳನ್ನು ಆಯೋಜಿಸಿಕೊಂಡು ಬರುತ್ತಿದ್ದ ಬಳಗ ನಂತರದ ದಿನಗಳಲ್ಲಿ ಹಲವು ರೀತಿಯ ಸೇವಾಗಳನ್ನು ಮೈಗೂಡಿಸಿಕೊಂಡಿದೆ. ಪ್ರಮುಖವಾಗಿ ಬಡವರ ತುರ್ತು ಆರೋಗ್ಯ ಸೇವೆಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ, ಕೋವಿಡ್-೧೯ರ ಸಂದರ್ಭದಲ್ಲಿ ನಿಗರ್ತಿಕರು, ಕಡು ಬಡವರಿಗೆ ಆಹಾರ ಮತ್ತು ದವಸ ಧಾನ್ಯ ವಿತರಣೆ, ಧಾರ್ಮಿಕ ಕಾರ್ಯಗಳಿಗೆ ನೆರವು ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಇದೀಗ ಬಳಗದ ಸದಸ್ಯರು ಸೇವಾ ಮನೋಭಾವನೆಯೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ ಎಂದರು.
    ಬಳಗದಲ್ಲಿ ಯಾವುದೇ ಪಕ್ಷದ, ಜಾತಿಭೇದವಿಲ್ಲ. ಎಲ್ಲರಿಗೂ ಸೇವೆ ಮಾಡಲು ಅವಕಾಶವಿದೆ. ಸೇವಾ ಮನೋಭಾವನೆ ಹೊಂದಿರುವವರು ಬಳಗಕ್ಕೆ ಸೇರ್ಪಡೆಗೊಳ್ಳಬಹುದು. ಪ್ರಸ್ತುತ ನಗರಸಭೆಗೆ ನಡೆಯುತ್ತಿರುವ ಚುನಾವಣೆಗೂ ಬಳಗದ ಸದಸ್ಯರು ಸ್ಪರ್ಧಿಸಲಿದ್ದಾರೆ. ಕೆಲವೇ ದಿನಗಳಲ್ಲಿ ಹೆಸರುಗಳನ್ನು ಪ್ರಕಟಿಸಲಾಗುವುದು ಎಂದರು.
    ಪ್ರಮುಖರಾದ ಮುಳ್ಕೆರೆ ಲೋಕೇಶ್, ವಿನೋದ್, ಪ್ರದೀಪ್‌ಕುಮಾರ್, ಕಾಂತ ದಿನೇಶ್ ಸೇರಿದಂತೆ ಇನ್ನಿತರರು ಬಳಗಕ್ಕೆ ಸೇರ್ಪಡೆಗೊಂಡರು.
    ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಗದ ನಂದಿನಿ ಬಾಯಿ, ಲಕ್ಷ್ಮಮ್ಮ, ಮಂಜುಳ, ಕೆ.ವಿ ಧನಂಜಯ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಬಳಗದ ಸತೀಶ್‌ಗೌಡ, ಮೇಘರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಪ್ಪಾಜಿ ಮಾರ್ಗದರ್ಶನದಲ್ಲಿ ಜೆಡಿಎಸ್ ಪುನಃ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ : ಆರ್. ಕರುಣಾಮೂರ್ತಿ

ಭದ್ರಾವತಿ ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪತ್ನಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಸೋಮವಾರ ಜೆಡಿಎಸ್ ಪಕ್ಷದ ಮುಖಂಡರು ಸುದ್ದಿಗೋಷ್ಠಿ ನಡೆಸಿದರು.
   ಭದ್ರಾವತಿ, ಏ. ೫: ಈ ಬಾರಿಯ ನಗರಸಭೆ ಚುನಾವಣೆಯಲ್ಲೂ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.
    ಅವರು ಸೋಮವಾರ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪತ್ನಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಅಪ್ಪಾಜಿ ನಮ್ಮೊಂದಿಗೆ ಇಲ್ಲದಿರಬಹುದು. ಆದರೆ ರಾಜಕೀಯವಾಗಿ ಅವರು ನಡೆದು ಬಂದ ದಾರಿಯಲ್ಲಿ ಇಂದು ನಾವೆಲ್ಲರೂ ಒಗ್ಗಟ್ಟಾಗಿ ಸಾಗಬೇಕಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ೩೫ ವಾರ್ಡ್‌ಗಳ ಪೈಕಿ ೨೩ ವಾರ್ಡ್‌ಗಳಲ್ಲಿ ಗೆಲುವು ಸಾಧಿಸುವ ಮೂಲಕ ನಗರಸಭೆ ಚುಕ್ಕಾಣಿ ಹಿಡಿಯಲಾಗಿತ್ತು. ಈ ಬಾರಿ ಚುನಾವಣೆಯಲ್ಲೂ ಜೆಡಿಎಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವ ವಿಶ್ವಾಸವಿದೆ ಎಂದರು.
    ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್, ಮಾಜಿ ಶಾಸಕಿ ಶಾರದಪೂರ್‍ಯಾನಾಯ್ಕ, ಜಿ.ಪಂ. ಸದಸ್ಯ ಎಸ್. ಮಣಿಶೇಖರ್, ಮಾಜಿ ಸದಸ್ಯ ಎಸ್. ಕುಮಾರ್, ಸೇರಿದಂತೆ ಇನ್ನಿತರರು ಮಾತನಾಡಿ, ಅಪ್ಪಾಜಿಯವರು ನಮ್ಮೊಂದಿಗೆ ಇಲ್ಲದಿರುವ ಸಂದರ್ಭದಲ್ಲಿ ಚುನಾವಣೆ ಎದುರಾಗಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವುದು ಅನಿವಾರ್ಯವಾಗಿದೆ. ಅಪ್ಪಾಜಿಯವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಗೆಲುವಿಗೆ ಸಹಕಾರಿಯಾಗಲಿವೆ. ಅಪ್ಪಾಜಿಯವರ ಅಭಿಮಾನಿಗಳು, ಪಕ್ಷದ  ಕಾರ್ಯಕರ್ತರು ಆತ್ಮವಿಶ್ವಾಸದಿಂದ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಮನವಿ ಮಾಡಿದರು.
   ಎಲ್ಲಾ ೩೫ ವಾರ್ಡ್‌ಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಮುಂದಿನ ೨-೩ ದಿನಗಳಲ್ಲಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.
     ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಸದಸ್ಯ ಜೆ.ಪಿ ಯೋಗೇಶ್, ಎಂ.ಎ ಅಜಿತ್, ಕರಿಯಪ್ಪ, ಡಿ.ಟಿ ಶ್ರೀಧರ್, ಪೀರ್‌ಷರೀಫ್, ಮೈಲಾರಪ್ಪ, ಸುಕನ್ಯ, ಕುಮಾರ್, ಬದರಿನಾರಾಯಣ, ಗುಣಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಮಳೆಗಾಲ ಆರಂಭಕ್ಕೂ ಮೊದಲು ಖಾಸಗಿ ಬಸ್ ನಿಲ್ದಾಣ ನಿರ್ಮಾಣ : ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ

ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಸುಮಾರು ೨.೧೭ ಕೋ. ರು. ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.
      ಭದ್ರಾವತಿ, ಏ. ೫: ನಗರಸಭೆ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ತರಾತುರಿಯಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಸೋಮವಾರ ಖಾಸಗಿ ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಏ.೮ರಿಂದ ನೀತಿ ಸಂಹಿತೆ ಜಾರಿಗೆ ಬರಲಿದೆ. ಏ.೧೦ರಂದು ಖಾಸಗಿ ಬಸ್ ನಿಲ್ದಾಣ ಕಾಮಗಾರಿಯ ಟೆಂಡರ್ ತೆರೆಯಲಿದ್ದು, ಏ.೧೫ರಿಂದ ಕಾಮಗಾರಿ ಆರಂಭಗೊಳ್ಳಲಿದೆ. ಮಳೆಗಾಲ ಆರಂಭಗೊಳ್ಳುವ ಮೊದಲು ಕಾಮಗಾರಿ ಮುಕ್ತಾಯಗೊಳ್ಳಬೇಕು. ಈ ಹಿನ್ನಲೆಯಲ್ಲಿ ಕಾಮಗಾರಿಗೆ ಯಾವುದೇ ರೀತಿ ತೊಂದರೆಯಾಗಬಾರದೆಂಬ ಉದ್ದೇಶದೊಂದಿಗೆ ತರಾತುರಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ ಎಂದರು.
     ಹಲವಾರು ವರ್ಷಗಳಿಂದ ನಗರದಲ್ಲಿ ಖಾಸಗಿ ಬಸ್‌ನಿಲ್ದಾಣ ನಿರ್ಮಿಸಬೇಕೆಂಬ ಬೇಡಿಕೆ ಇದ್ದು, ಈ ಹಿಂದೆ ೨೦೧೨ರ ನನ್ನ ಅವಧಿಯಲ್ಲಿ ನಿಲ್ದಾಣಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಿಸಿಕೊಡಲಾಗಿತ್ತು. ನಂತರ ೨೦೧೮ರಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿ ೨.೧೭ ಕೋ. ರು. ವೆಚ್ಚದಲ್ಲಿ ಬಸ್ ನಿಲ್ದಾಣಕ್ಕೆ ಅನುಮೋದನೆ ನೀಡಿದೆ ಎಂದರು.
     ಇದೆ ರೀತಿ ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಸುಮಾರು ೪ ಕೋ.ರು ವೆಚ್ಚದಲ್ಲಿ ಹೈಟೆಕ್ ಮುಖ್ಯ ಬಸ್ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ. ಉಳಿದಂತೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಹೊಸ ಸೇತುವೆ ನಿರ್ಮಾಣ ಸೇರಿದಂತೆ ಹಲವರು ಅಭಿವೃದ್ಧಿ ಕಾರ್ಯಗಳಿಗೆ ಮಂಜೂರಾತಿ ದೊರೆತ್ತಿದೆ ಎಂದರು.
    ವೇದಿಕೆಯಲ್ಲಿ ಖಾಸಗಿ ಬಸ್ ಏಜೆಂಟರ್‌ಗಳ ಸಂಘದ ಅಧ್ಯಕ್ಷ ಶ್ರೀನಿವಾಸ್, ಉದ್ಯಮಿ ಎ. ಮಾಧು, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್, ಲೋಕೇಶ್, ಪ್ರಕಾಶ್‌ರಾವ್, ಬಾಬಾಜಾನ್, ಶಿವಣ್ಣ, ಮಂಜು, ಜಾರ್ಜ್, ವೆಂಕಟೇಶ್, ಮುರುಗನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.