Monday, May 24, 2021

ಕೊರೋನಾದಿಂದ ಸ್ಮೈಲ್ ಪ್ಲೀಸ್ ಎಂದವರ ಬದುಕು ಅತಂತ್ರ

     
ಭದ್ರಾವತಿ ತಾಲೂಕು ಛಾಯಾಗ್ರಾಹಕರ ತಂಡ.
  * ಅನಂತಕುಮಾರ್
      ಭದ್ರಾವತಿ, ಮೇ. ೨೪: ಸಮಾಜದಲ್ಲಿ ಛಾಯಾಗ್ರಾಹಕ ವೃತ್ತಿಗೂ ಒಂದು ವಿಶಿಷ್ಟ ಪರಂಪರೆ ಇದೆ. ಛಾಯಾಗ್ರಾಹಕರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. ರಾಜ್ಯಾದ್ಯಂತ ಲಕ್ಷಾಂತರ ಮಂದಿ ಈ ವೃತ್ತಿಯನ್ನು ನಂಬಿ ಬದುಕುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಇವರ ಬದುಕು ತೀರ ಸಂಕಷ್ಟಕ್ಕೆ ತಳ್ಳಲ್ಪಟ್ಟಿದೆ. ಈ ನಡುವೆ ಸರ್ಕಾರ ಸಹ ನಿರ್ಲಕ್ಷ್ಯತನ ವಹಿಸಿರುವುದು ಛಾಯಾಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
      ರಾಜ್ಯಾದ್ಯಂತ ಸುಮಾರು ೨ ಲಕ್ಷಕ್ಕೂ ಅಧಿಕ ಮಂದಿ ಛಾಯಾಗ್ರಾಹಕ ವೃತ್ತಿಯನ್ನು ನಂಬಿಕೊಂಡು ಬದುಕುತ್ತಿದ್ದು, ತಾಲೂಕಿನಾದ್ಯಂತ ಛಾಯಾಗ್ರಾಹಕ ವೃತ್ತಿಯಲ್ಲಿ ಪೋಟೋಗ್ರಾಫರ್ ಹಾಗು ವಿಡಿಯೋಗ್ರಾಫರ್ ಮತ್ತು ಸ್ಟುಡಿಯೋಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಒಳಗೊಂಡಂತೆ ಸುಮಾರು ೨೭೦ ಮಂದಿ ಬದುಕು ಕಟ್ಟಿಕೊಂಡಿದ್ದಾರೆ.  ಇತರೆ ವೃತ್ತಿಗಳಿಗೆ ಹೋಲಿಕೆ ಮಾಡಿಕೊಂಡಲ್ಲಿ ಛಾಯಾಗ್ರಾಹಕ ವೃತ್ತಿಯೇ ವಿಭಿನ್ನವಾಗಿದ್ದು, ಈ ವೃತ್ತಿಯಲ್ಲಿ ನಿರೀಕ್ಷೆಗೆ ತಕ್ಕಂತೆ ಕೆಲಸವೂ ಇಲ್ಲ, ಆದಾಯವೂ ಇಲ್ಲ. ವರ್ಷದಲ್ಲಿ ೫-೬ ತಿಂಗಳು ಮಾತ್ರ ಆದಾಯ ಎದುರು ನೋಡುವಂತಾಗಿದೆ.  ಮದುವೆ, ಆರಕ್ಷತೆ, ನಾಮಕರಣ ಸೇರಿದಂತೆ ಶುಭಾ ಸಮಾರಂಭಗಳು, ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರರ ಸಭೆ, ಸಮಾರಂಭಗಳನ್ನು ನಂಬಿಕೊಂಡು ಬದುಕುತ್ತಿರುವ ಛಾಯಾಗ್ರಾಹಕರು ಇದೀಗ ತೀರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
      ಹಲವು ಸವಾಲು:
    ತಂತ್ರಜ್ಞಾನ ಬೆಳವಣಿಗೆಯಾದಂತೆ ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ತೀವ್ರ ಪೈಪೋಟಿ ನಡುವೆ ಹಲವು ಸವಾಲುಗಳು ಎದುರಾಗುತ್ತಿದ್ದು, ಛಾಯಾಗ್ರಾಹಕರ ವೃತ್ತಿಯಲ್ಲೂ ಸಹ ಹಲವು ಸವಾಲುಗಳು ಎದುರಾಗಿವೆ. ಬಹುಮುಖ್ಯವಾಗಿ ಸ್ಮಾರ್ಟ್ ಮೊಬೈಲ್ ಪೋನ್‌ಗಳು ಮಾರುಕಟ್ಟೆಗೆ ಬಿಡುಗಡೆಯಾದ ನಂತರ ಛಾಯಾಗ್ರಾಹಕರ ಅಗತ್ಯ ಬಹುತೇಕ ಕಡಿಮೆಯಾಗಿದೆ. ಸರ್ಕಾರಿ ಹಾಗು ಖಾಸಗಿ ಕಛೇರಿಗಳಲ್ಲಿ ಡಿಜಿಟಲೀಕರಣದ ಪರಿಣಾಮದಿಂದ ಛಾಯಾಗ್ರಾಹಕರನ್ನು ಬಹುತೇಕ ದೂರವೇ ಇಡಲಾಗಿದೆ. ಇವೆಲ್ಲ ಸವಾಲು ಹಾಗು ಪೈಪೋಟಿಗಳ ನಡುವೆ ಛಾಯಾಗ್ರಾಹಕರು ತಮ್ಮ ಅಸ್ತಿತ್ವ ಉಳಿಸಿಕೊಂಡು ಮುಂದೆ ಸಾಗುತ್ತಿದ್ದಾರೆ.


ಎಚ್. ಶ್ರೀನಿವಾಸ್


    ಛಾಯಾಗ್ರಾಹಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಸೌಲಭ್ಯಗಳು ನಮಗೆ ಲಭಿಸಿಲ್ಲ. ಜೊತೆಗೆ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಕಳೆದ ಬಾರಿ ಹಾಗು ಈ ಬಾರಿ ಘೋಷಿಸಿರುವ ಪರಿಹಾರ ಸಹ ಛಾಯಾಗ್ರಾಹಕರಿಗೆ ಲಭಿಸಿಲ್ಲ. ಪ್ರಸ್ತುತ ಛಾಯಾಗ್ರಾಹಕರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಇವರ ನೆರವಿಗೆ ಮುಂದಾಗಬೇಕು.
                                                                      
-ಎಚ್. ಶ್ರೀನಿವಾಸ್, ಅಧ್ಯಕ್ಷರು, ತಾಲೂಕು ಛಾಯಾಗ್ರಾಹಕರ ಸಂಘ, ಭದ್ರಾವತಿ.



        ಸ್ಮೈಲ್ ಪ್ಲೀಸ್ ಎಂದವರ ನಗು ಕಿತ್ತುಕೊಂಡ ಕೊರೋನಾ:
     ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಛಾಯಾಗ್ರಾಹಕರ ಬದುಕು ಅತಂತ್ರವಾಗಿದ್ದು,  ಅದರಲ್ಲೂ ಲಾಕ್‌ಡೌನ್ ಸಂದರ್ಭದಲ್ಲಿ ಅವರ ಸ್ಥಿತಿ ಹೇಳತಿಹದು. ತಾಲೂಕಿನಲ್ಲಿರುವ ಸುಮಾರು ೨೭೦ ಛಾಯಾಗ್ರಾಹಕರ ಪೈಕಿ ಸುಮಾರು ೬೦ ಮಂದಿ ಲಕ್ಷಾಂತರ ರು. ಸಾಲಸೋಲ ಮಾಡಿ ಸ್ವಂತ ಸ್ಟುಡಿಯೋಗಳನ್ನು ನಿರ್ಮಿಸಿಕೊಂಡಿದ್ದಾರೆ. ಸಾಲದ ಬಾಕಿ, ಸ್ಟುಡಿಯೋ ಬಾಡಿಗೆ ಕಟ್ಟಲು ಸಾಧ್ಯವಾಗದೆ ಪರಿತಪ್ಪಿಸುತ್ತಿದ್ದಾರೆ. ಉಳಿದಂತೆ ಛಾಯಾಗ್ರಾಹಕ ವೃತ್ತಿಯನ್ನೇ ನಂಬಿ ಕುಟುಂಬ ನಿರ್ವಹಣೆಯಲ್ಲಿ ತೊಡಗಿರುವವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಕೊರೋನಾ ಮಹಾಮಾರಿ ಸ್ಮೈಲ್ ಪ್ಲೀಸ್ ಎನ್ನುವವರ ನಗು ಕಿತ್ತುಕೊಂಡಿದೆ.
        ಸರ್ಕಾರದ ಯಾವುದೇ ಸೌಲಭ್ಯಗಳಿಲ್ಲ:
     ಛಾಯಾಗ್ರಾಹಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ೨೦೧೦ರಿಂದಲೂ  ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಸರ್ಕಾರದಿಂದ ಇದುವರೆಗೂ ಯಾವುದೇ ಸೌಲಭ್ಯಗಳು ಲಭಿಸಿಲ್ಲ.  ೨೦೧೩ರಲ್ಲಿ ಛಾಯಾಗ್ರಾಹಕರನ್ನು ಕಾರ್ಮಿಕ ಇಲಾಖೆಯ ಅಸಂಘಟಿತ ಕಾರ್ಮಿಕ ವಲಯದ ೪೨ನೇ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಆದರೂ ಸಹ ಯಾವುದೇ ಸೌಲಭ್ಯಗಳು ಛಾಯಾಗ್ರಾಹಕರಿಗೆ ಲಭಿಸುತ್ತಿಲ್ಲ. ಅಲ್ಲದೆ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಘೋಷಿಸಿರುವ ಪರಿಹಾರ ಧನ ಸಹ ಇವರಿಗೆ ಲಭಿಸಿಲ್ಲ. ಉಳಿದಂತೆ ಸ್ಥಳೀಯ ಸಂಸ್ಥೆಗಳಿಂದಲೂ ಯಾವುದೇ ಸೌಲಭ್ಯಗಳಿಲ್ಲ. ಇದರಿಂದಾಗಿ ಕೇವಲ ಹೆಸರಿಗೆ ಮಾತ್ರ ಅಸಂಘಟಿತ ಕಾರ್ಮಿಕರಾಗಿ ಉಳಿದುಕೊಂಡಿದ್ದಾರೆ.


Sunday, May 23, 2021

೨ ದಿನಗಳ ಸಂಪೂರ್ಣ ಲಾಕ್‌ಡೌನ್ ಬಹುತೇಕ ಯಶಸ್ವಿ

ಭದ್ರಾವತಿಯಲ್ಲಿ ಶನಿವಾರ ಮತ್ತು ಭಾನುವಾರ ಜಾರಿಗೊಳಿಸಲಾಗಿದ್ದ ೨ ದಿನಗಳ ಸಂಪೂರ್ಣ ಲಾಕ್‌ಡೌನ್ ಸಂದರ್ಭದಲ್ಲಿ ಕಂಡು ಬಂದ ದೃಶ್ಯ.
    ಭದ್ರಾವತಿ, ಮೇ. ೨೩: ತಾಲೂಕಿನಲ್ಲಿ ಶನಿವಾರ ಮತ್ತು ಭಾನುವಾರ ಜಾರಿಗೊಳಿಸಲಾಗಿದ್ದ ೨ ದಿನಗಳ ಸಂಪೂರ್ಣ ಲಾಕ್‌ಡೌನ್ ಬಹುತೇಕ ಯಶಸ್ವಿಯಾಗಿದ್ದು, ಆದರೂ ಸೋಂಕು ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡು ಬರುತ್ತಿಲ್ಲ. ಈಗಾಗಲೇ ಬಹುತೇಕ ಕಡೆ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನಲೆಯಲ್ಲಿ ಆತಂಕ ಎದುರಾಗಿದೆ.
     ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗು ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ೨ ದಿನಗಳ ಸಂಪೂರ್ಣ ಲಾಕ್‌ಡೌನ್‌ಗೆ ಹೆಚ್ಚಿನ ಶ್ರಮವಹಿಸಿರುವುದು ಕಂಡು ಬಂದಿದ್ದು, ಜನ ಸಂಚಾರ ಹೆಚ್ಚಾಗಿರುವ ಪ್ರದೇಶಗಳಲ್ಲಿ ಒಳಭಾಗದ ರಸ್ತೆಗಳನ್ನು ಸಹ ಬ್ಯಾರಿಗೇಡ್‌ಗಳಿಂದ ಬಂದ್ ಮಾಡಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ತೀವ್ರಗೊಳಿಸಿ ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕ್ರಮ ಕೈಗೊಂಡರು.
    ಹಾಲು ಹಾಗು ಔಷಧ ಅಂಗಡಿಗಳು ಹೊರತುಪಡಿಸಿ ಉಳಿದ ಅಂಗಡಿ, ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು.  ಜನರು ಸಹ ಲಾಕ್‌ಡೌನ್‌ಗೆ ಪೂರಕವಾಗಿ ಸ್ಪಂದಿಸಿದರು. ಸಂಪೂರ್ಣ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಶನಿವಾರ ಕಾರ್ಯಕ್ರಮ ನಿಮಿತ್ತ ನಗರಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು.
    ಸೋಮವಾರ ಬೆಳಿಗ್ಗೆ ಸಂಪೂರ್ಣ ಲಾಕ್‌ಡೌನ್ ಮುಕ್ತಾಯಗೊಳ್ಳಲಿದೆ. ಆದರೆ ಎಂದಿನಂತೆ ಲಾಕ್‌ಡೌನ್ ಮುಂದುವರೆಯಲಿದೆ. ಸರ್ಕಾರ ಪುನಃ ಲಾಕ್‌ಡೌನ್ ಮುಂದುವರೆಸಿರುವ ಕಾರಣ ಜನರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ.



ನಗರಸಭೆ ೧೬ನೇ ವಾರ್ಡ್ ವ್ಯಾಪ್ತಿಯಲ್ಲಿ ಸ್ಯಾನಿಟೈಜರ್ ಸಿಂಪಡಣೆ


ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಗಾಂಧಿನಗರ ವ್ಯಾಪ್ತಿಯನ್ನು ಒಳಗೊಂಡಿರುವ ನಗರಸಭೆ ವಾರ್ಡ್ ನಂ.೧೬ರಲ್ಲಿ ಭಾನುವಾರ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಭದ್ರಾವತಿ, ಮೇ. ೨೩: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಗಾಂಧಿನಗರ ವ್ಯಾಪ್ತಿಯನ್ನು ಒಳಗೊಂಡಿರುವ ನಗರಸಭೆ ವಾರ್ಡ್ ನಂ.೧೬ರಲ್ಲಿ ಭಾನುವಾರ ಸ್ಯಾನಿಟೈಜರ್ ಸಿಂಪಡಿಸಲಾಯಿತು.
     ನಗರ ಪ್ರದೇಶದ ವ್ಯಾಪ್ತಿಯಲ್ಲಿರುವ ಪ್ರಮುಖ ವಾರ್ಡ್‌ಗಳ ಪೈಕಿ ೧೬ನೇ ವಾರ್ಡ್ ಸಹ ಒಂದಾಗಿದ್ದು, ನಗರಸಭೆ ಸಹಕಾರದೊಂದಿಗೆ ಅಗ್ನಿಶಾಮಕ ಇಲಾಖೆವತಿಯಿಂದ ವಾರ್ಡ್‌ನ ಪ್ರತಿಯೊಂದು ರಸ್ತೆಗೂ ಸ್ಯಾನಿಟೈಜರ್ ಸಿಂಪಡಿಸಲಾಯಿತು.
     ವಾರ್ಡ್ ನೂತನ ಸದಸ್ಯ, ಹಿರಿಯ ಬಿಜೆಪಿ ಮುಖಂಡ ವಿ. ಕದಿರೇಶ್, ಅಗ್ನಿಶಾಮಕ ಠಾಣಾಧಿಕಾರಿ ವಸಂತಕುಮಾರ್ ಹಾಗು ಸಿಬ್ಬಂದಿಗಳು ಮತ್ತು  ವಾರ್ಡ್ ಪ್ರಮುಖರು ಉಪಸ್ಥಿತರಿದ್ದರು.

ಹಿರಿಯ ಜೀವಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಮಾಜಿ ಶಾಸಕರ ಪುತ್ರ

ಭದ್ರಾವತಿಯಲ್ಲಿ ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬದ ಹಿರಿಯ ಜೀವಿಗಳ ನೆರವಿಗೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
    ಭದ್ರಾವತಿ, ಮೇ. ೨೩: ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬದ ಹಿರಿಯ ಜೀವಿಗಳ ನೆರವಿಗೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
     ಸಾಮಾಜಿಕ ಜಾಲತಾಣವೊಂದರ ನಿರ್ವಾಹಕರಿಂದ ಹಿರಿಯ ಜೀವಿಗಳು ಸಂಕಷ್ಟದಲ್ಲಿರುವ ಮಾಹಿತಿ ಲಭಿಸಿದ ತಕ್ಷಣ ನಗರಸಭೆ ಮಾಜಿ ಸದಸ್ಯರಾದ ಎಂ.ಎ ಅಜಿತ್ ತಕ್ಷಣ ನೆರವಿಗೆ ಧಾವಿಸಿದ್ದಾರೆ.
    ಕಳೆದ ವರ್ಷ ಲಾಕ್‌ಡೌನ್ ಸಂದರ್ಭದಲ್ಲಿ ಸ್ವತಃ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರೇ ಕ್ಷೇತ್ರದಾದ್ಯಂತ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದರು. ಇದೀಗ ಅವರಿಲ್ಲದ ಸಂದರ್ಭದಲ್ಲಿ ಪುತ್ರ ಎಂ.ಎ ಅಜಿತ್ ತಮ್ಮ ಕೈಲಾದಷ್ಟು ಮಟ್ಟಿಗೆ ನೆರವಿಗೆ ಮುಂದಾಗಿದ್ದಾರೆ.

ನಾಗರತ್ನ ನಿಧನ

ನಾಗರತ್ನ
    ಭದ್ರಾವತಿ, ಮೇ. ೨೩:  ನಗರಸಭೆ ವ್ಯಾಪ್ತಿ ಜನ್ನಾಪುರ ವೇಲೂರ್ ಶೆಡ್ ೭ನೇ ತಿರುವಿನ ನಿವಾಸಿ ಎಸ್.ಎ ರಂಗನಾಥ್‌ರವರ ಪತ್ನಿ ನಾಗರತ್ನ (೬೦) ನಿಧನ ಹೊಂದಿದರು.
    ಇತ್ತೀಚೆಗೆ ನಾಗರತ್ನ ಅವರ ತಾಯಿ ತುಮಕೂರಿನಲ್ಲಿ ನಿಧನ ಹೊಂದಿದ್ದು, ಇದೆ ಕೊರಗಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಅರ್ಯವೈಶ್ಯ ಮಂಡಳಿ ಸಂತಾಪ ಸೂಚಿಸಿದೆ.

ಬಜರಂಗದಳ ಕಾರ್ಯಕರ್ತರ ಸೇವೆಗೆ ಭಾವಸಾರ ವಿಜನ್ ಇಂಡಿಯಾ ಕೃತಜ್ಞತೆ

ಕಾರ್ಯಕರ್ತರಿಗೆ ಸನ್ಮಾನಿಸಿ ಗೌರವ, ಸೇವಾ ಕಾರ್ಯಕ್ಕೆ ಆರ್ಥಿಕ ನೆರವು

ಭದ್ರಾವತಿಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರ ಕಾರ್ಯದಲ್ಲಿ ಪಾಲ್ಗೊಂಡು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಬಜರಂಗದಳ ಕಾರ್ಯಕರ್ತರನ್ನು ಭಾವಸಾರ ವಿಜನ್ ಇಂಡಿಯಾ ವತಿಯಿಂದ ಭಾನುವಾರ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಮೇ. ೨೩: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮತ್ತೊಂದೆಡೆ ಸಾಯುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಕೊರೋನಾ ಸೋಂಕಿತರ ಮೃತದೇಹಗಳ ಅಂತ್ಯ ಸಂಸ್ಕಾರ ಸಹ ಬಹುದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಕೆಲವೆಡೆ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸಹ ಮುಂದೆ ಬರುತ್ತಿಲ್ಲ. ಉಳಿದಂತೆ ಎಲ್ಲದಕ್ಕೂ ಹಣ ನೀಡಬೇಕಾದ ಇಂದಿನ ಸಂದರ್ಭದಲ್ಲಿ ಕಡು ಬಡಕುಟುಂಬಗಳು ಅಂತ್ಯಸಂಸ್ಕಾರ ನಡೆಸಲು ಅಶಕ್ತರಾಗಿದ್ದಾರೆ. ಇಂತಹ ಹಲವು ಸಮಸ್ಯೆಗಳ ನಡುವೆ ಯಾವುದೇ ಸ್ವಾರ್ಥವಿಲ್ಲದೆ ೧೦ ಜನರ ಯುವಕರ ತಂಡ ಸೋಂಕಿತ ಮೃತದೇಹಗಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಮೂಲಕ ಮಾನವೀಯತೆ ಮೆರೆದಿದೆ.
    ಬಜರಂಗದಳ ಪ್ರಮುಖರಾದ ವಡಿವೇಲು, ಸುನಿಲ್‌ಕುಮಾರ್, ಕೃಷ್ಣ, ಶಿವಶಂಕರ್, ಅರಳಿಹಳ್ಳಿ ದೇವರಾಜ್, ಕಿರಣ್, ರಂಗನಾಥ್, ಅಜಿತ್, ಶ್ರೀಕಾಂತ್, ಸವಾಯಿ ಸಿಂಗ್, ಮಣಿಕಂಠ ಮತ್ತು ರಮೇಶ್ ಸೇರಿದಂತೆ ಸುಮಾರು ೧೦ ಮಂದಿಯನ್ನು ಒಳಗೊಂಡಿರುವ ತಂಡ ಈ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ತಂಡದ ಈ ಕಾರ್ಯವನ್ನು ನಗರದ ಭಾವಸಾರ ವಿಜನ್ ಇಂಡಿಯಾ ಅಭಿನಂದಿಸುವ ಮೂಲಕ ಕೃತಜ್ಞತೆ ಸಹ ಸಲ್ಲಿಸಿದೆ.
    ಭಾವಸಾರ ವಿಜನ್ ಇಂಡಿಯಾ ಅಧ್ಯಕ್ಷ ಹಾಗು ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ  ದುಗ್ಗೇಶ್ ತೇಲ್ಕರ್ ನೇತೃತ್ವದಲ್ಲಿ ಭಾನುವಾರ ಸೇವಾ ಕಾರ್ಯದಲ್ಲಿ ತೊಡಗಿರುವ ಬಜರಂಗದಳದ ೮ ಜನ ಕಾರ್ಯಕರ್ತರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಜೊತೆಗೆ ಸೇವಾ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಸದಸ್ಯರಿಂದ ಸಂಗ್ರಹಿಸಲಾದ ಆರ್ಥಿಕ ನೆರವನ್ನು ಸಹ ತಂಡಕ್ಕೆ ನೀಡಲಾಯಿತು. ಅಲ್ಲದೆ ತಂಡಕ್ಕೆ ಪ್ರತಿದಿನ ಊಟದ ವ್ಯವಸ್ಥೆ ಸಹ ಕೈಗೊಳ್ಳಲಾಗಿದೆ. ಯೋಗೇಶ್‌ಕುಮಾರ್, ಲಕ್ಷ್ಮೀಕಾಂತ್ ಸೇರಿದಂತೆ ಭಾವಸಾರ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.  

Saturday, May 22, 2021

ಕೊರೋನಾ ಸಂಕಷ್ಟ : ಹಸಿದವರಿಗೆ ಅನ್ನ, ಸೋಂಕಿತರಿಗೆ ಔಷಧ

ಭದ್ರಾವತಿ ಕಾಗದನಗರದ ನಗರಸಭೆ ವಾರ್ಡ್ ನಂ.೨೧ ಮತ್ತು ೨೨ರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭಾ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಶನಿವಾರ ಉಚಿತ ಔಷಧ ಸಾಮಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ, ಮೇ. ೨೨: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮತ್ತೊಂದೆಡೆ ಲಾಕ್‌ಡೌನ್ ವಿಸ್ತರಣೆಯಾಗಿದೆ. ಈ ನಡುವೆ ಸಾಕಷ್ಟು ಜನರು ತೀರ ಸಂಕಷ್ಟಕ್ಕೆ ಒಳಗಾಗಿದ್ದು, ದಿನದ ಊಟಕ್ಕೂ ಎದುರು ನೋಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ವಿವಿಧ ರೀತಿಯಲ್ಲಿ ನೆರವಿಗೆ ಮುಂದಾಗಿವೆ.
      ಉಚಿತ ಕೊರೋನಾ ಔಷಧ ಸಾಮಗ್ರಿ ವಿತರಣೆ:
   ಕಾಗದನಗರದ ನಗರಸಭೆ ವಾರ್ಡ್ ನಂ.೨೧ ಮತ್ತು ೨೨ರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭಾ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಶನಿವಾರ ಉಚಿತ ಔಷಧ ಸಾಮಗ್ರಿಗಳನ್ನು ವಿತರಿಸಲಾಯಿತು.
    ಒಟ್ಟು ಸುಮಾರು ೧ ಲಕ್ಷ ರು. ಮೌಲ್ಯದ ಔಷಧ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸೋಂಕಿತರ ಸಂಕಷ್ಟಕ್ಕೆ ಸ್ಪಂದಿಸಲಾಯಿತು. ಮಾಜಿ ನಗರಸಭಾ ಸದಸ್ಯ ವೆಂಕಟಯ್ಯ, ಆಶಾ ಕಾರ್ಯಕತೆಯರು ಹಾಗು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
     ಬಂಜಾರ ಸಮುದಾಯದಿಂದ ಉಚಿತ ಔಷಧ ಸಾಮಗ್ರಿ ವಿತರಣೆ:
   ಬಂಜಾರ ಸಮುದಾಯದ ಬಹುತೇಕ ತಾಂಡಗಳು ನಗರ ಪ್ರದೇಶಗಳಿಂದ ಹೊರಭಾಗದಲ್ಲಿದ್ದು, ತಾಂಡಗಳಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯವಿರುವ ಔಷಧ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಸೋಂಕಿನ ಕುರಿತು ಜಾಗೃತಿ ಮೂಡಿಸಲಾಯಿತು.
     ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ್, ರಾಜ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ನಾಯ್ಕ್, ಪ್ರಮುಖರಾದ ಪ್ರವೀಣ್‌ಕುಮಾರ್, ನಾಗರಾಜನಾಯ್ಕ್, ಉಮಾಮಹೇಶ್ವರ, ಚಂದ್ರನಾಯ್ಕ್ ಸೇರಿದಂತೆ ಇನ್ನಿತರರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.


ಬೆಂಗಳೂರಿನಲ್ಲಿ ಐಎಎಸ್ ಪರೀಕ್ಷೆ ತರಬೇತಿ ಪಡೆಯುತ್ತಿರುವ ತುಳಸಿ ಎಂಬುವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಹಸಿದವರಿಗೆ ಅನ್ನಸೇವೆ ಕೈಗೊಳ್ಳಬೇಕೆಂಬ ಹಂಬಲದೊಂದಿಗೆ ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ನೆರವಿನೊಂದಿಗೆ ಒಂದು ದಿನದ ಸೇವಾ ಕಾರ್ಯ ನೆರವೇರಿಸುವ ಮೂಲಕ ಗಮನ ಸೆಳೆದರು.
      ಹುಟ್ಟುಹಬ್ಬದ ಪ್ರಯುಕ್ತ ಅನ್ನಸೇವೆ :
  ಬೆಂಗಳೂರಿನಲ್ಲಿ ಐಎಎಸ್ ಪರೀಕ್ಷೆ ತರಬೇತಿ ಪಡೆಯುತ್ತಿರುವ ತುಳಸಿ ಎಂಬುವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಹಸಿದವರಿಗೆ ಅನ್ನಸೇವೆ ಕೈಗೊಳ್ಳಬೇಕೆಂಬ ಹಂಬಲದೊಂದಿಗೆ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ನೆರವಿನೊಂದಿಗೆ ಒಂದು ದಿನದ ಸೇವಾ ಕಾರ್ಯ ನೆರವೇರಿಸುವ ಮೂಲಕ ಗಮನ ಸೆಳೆದರು.
     ಒಕ್ಕೂಟದ ವತಿಯಿಂದ ೧೧ ದಿನಗಳಿಂದ ಹಸಿದವರಿಗೆ ಅನ್ನ ನೀಡುವ ಸೇವೆ ಕೈಗೊಳ್ಳಲಾಗುತ್ತಿದೆ. ಆರಂಭದಲ್ಲಿ ೧೦೦ ಜನರಿಗೆ ಅನ್ನ ಸೇವೆ ನೀಡಲಾಗುತ್ತಿತ್ತು. ನಂತರ ದಿನದಿಂದ ದಿನಕ್ಕೆ ಹೆಚ್ಚಳವಾಗಿದ್ದು, ಇದೀಗ ೧೮೦ ಮಂದಿಗೆ ಸೇವೆ ಒದಗಿಸಲಾಗುತ್ತಿದೆ.
     ನಗರಸಭಾ ಸದಸ್ಯರಾದ ಕಾಂತರಾಜ್, ಮಾಜಿ ಸದಸ್ಯರಾದ ಆರ್. ವೇಣುಗೋಪಾಲ್, ಪ್ರಾನ್ಸಿಸ್, ಮುಖಂಡರಾದ  ಬ್ರದರ್, ಪ್ರೇಮ್, ಸೆಲ್ವರಾಜ್, ಎಂ.ಜಿ ರಾಮಚಂದ್ರನ್, ವಿಲ್ಸನ್‌ಬಾಬು, ದಾಸ್, ಎಸ್. ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಹಸಿದವರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜಯಕರ್ನಾಟಕ ಸಂಘಟನೆ ಸೇವಾ ಕಾರ್ಯಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲ ವ್ಯಕ್ತಪಡಿಸಿ ಒಂದು ದಿನದ ಸೇವೆಯಲ್ಲಿ ಪಾಲ್ಗೊಂಡಿದ್ದರು.
     ಜಯಕರ್ನಾಟಕ ಸಂಘಟನೆಯಿಂದ ಹಸಿದವರಿಗೆ ಅನ್ನ:
    ಕೊರೋನಾ ಸಂಕಷ್ಟದ ಸಮಯದಲ್ಲಿ ಹಸಿವಿನಿಂದ ಬಳಲುತ್ತಿರುವವರ ನೆರವಿಗೆ ಜಯಕರ್ನಾಟಕ ಸಂಘಟನೆ ಮುಂದಾಗಿದ್ದು, ಸಂಘಟನೆ ತಾಲೂಕು ಅಧ್ಯಕ್ಷ ಅರುಣ್ ನೇತೃತ್ವದಲ್ಲಿ ಕಳೆದ ೭ ದಿನಗಳಿಂದ ನಗರದ ವಿವಿದೆಡೆ ಸೇವಾ ಕಾರ್ಯವನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ.
    ಸಂಘಟನೆ ಸೇವಾ ಕಾರ್ಯಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲ ವ್ಯಕ್ತಪಡಿಸಿ ಒಂದು ದಿನದ ಸೇವೆಯಲ್ಲಿ ಪಾಲ್ಗೊಂಡಿದ್ದರು. ನಗರಸಭಾ ಸದಸ್ಯರಾದ ಮಣಿ ಎಎನ್‌ಎಸ್, ಕೆ. ಸುದೀಪ್‌ಕುಮಾರ್, ಸಂಘಟನೆ ಪ್ರಮುಖರಾದ ಬಿ.ಎಸ್ ಬಸವೇಶ್, ಚರಣ್, ಶರವಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.