Tuesday, May 25, 2021

ವಾಡ್.೨೯ ಬಡಕುಟುಂಬಗಳಿಗೆ ದಿನಸಿ ಸಾಮಗ್ರಿ ವಿತರಣೆ


ಭದ್ರಾವತಿ, ಮೇ. ೨೫: ನಗರಸಭೆ ಜನ್ನಾಪುರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ ಒಳಗೊಂಡಿರುವ ವಾರ್ಡ್ ನಂ.೨೯ರ ವ್ಯಾಪ್ತಿಯ ಬಡ ಕುಟುಂಬಗಳಿಗೆ ವಾರ್ಡ್ ನಿವಾಸಿ, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಎ.ಜಿ ರಾಧಮ್ಮ ಪ್ರಭಾಕರ್ ಕುಟುಂಬದವರು ದಿನಸಿ ಸಾಮಗ್ರಿಗಳನ್ನು ವಿತರಿಸಿದರು.
    ಭದ್ರಾವತಿ, ಮೇ. ೨೫: ನಗರಸಭೆ ಜನ್ನಾಪುರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ ಒಳಗೊಂಡಿರುವ ವಾರ್ಡ್ ನಂ.೨೯ರ ವ್ಯಾಪ್ತಿಯ ಬಡ ಕುಟುಂಬಗಳಿಗೆ ವಾರ್ಡ್ ನಿವಾಸಿ, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಎ.ಜಿ ರಾಧಮ್ಮ ಪ್ರಭಾಕರ್ ಕುಟುಂಬದವರು ದಿನಸಿ ಸಾಮಗ್ರಿಗಳನ್ನು ವಿತರಿಸಿದರು.
    ಕೋವಿಡ್ ಹಿನ್ನಲೆಯಲ್ಲಿ ಸರ್ಕಾರ ಲಾಕ್‌ಡೌನ್ ಜಾರಿಗೊಳಿಸಿರುವ ಪರಿಣಾಮ ವಾರ್ಡ್‌ನಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಇದನ್ನು ಮನಗಂಡು ರಾಧಮ್ಮ ಕುಟುಂಬದವರು ಸುಮಾರು ೭೦ ಕುಟುಂಬಗಳಿಗೆ ವೈಯಕ್ತಿಕವಾಗಿ ದಿನಸಿಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರದಿದ್ದಾರೆ. ಕಳೆದ ಬಾರಿ ಸಹ ಲಾಕ್‌ಡೌನ್ ಸಂದರ್ಭದಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿತ್ತು.

ಮೆಸ್ಕಾಂ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ

ಭದ್ರಾವತಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮಂಗಳವಾರ ಮೆಸ್ಕಾಂ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು.
   ಭದ್ರಾವತಿ, ಮೇ. ೨೫: ಆರೋಗ್ಯ ಇಲಾಖೆ ವತಿಯಿಂದ ಆದ್ಯತೆ ಆಧಾರದ ಮೇಲೆ ಮೆಸ್ಕಾಂ ಸಿಬ್ಬಂದಿಗಳಿಗೆ ಮಂಗಳವಾರ ಕೊರೋನಾ ಲಸಿಕೆ ನೀಡಲಾಯಿತು.
    ಜೆಪಿಎಸ್ ಕಾಲೋನಿಯಲ್ಲಿರುವ ಮೆಸ್ಕಾಂ ಘಟಕ-೧ರ ಕಛೇರಿಯಲ್ಲಿ ೧೮ ರಿಂದ ೪೫ ವರ್ಷದೊಳಗಿನ ಸುಮಾರು ೧೦೦ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು.
     ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಎನ್. ಕೃಷ್ಣಪ್ಪ, ಮೆಸ್ಕಾಂ ಶಿವಮೊಗ್ಗ ವೃತ್ತದ ಅಧೀಕ್ಷಕ ಇಂಜಿನಿಯರ್ ಶಿವಪ್ರಸಾದ್, ಕಾರ್ಯನಿರ್ವಾಹಕ ಇಂಜಿನಿಯರ್ ಕಿಶೋರ್, ನಗರದ ವಿಭಾಗೀಯ ಕಛೇರಿ ಸಹಾಯಕ ಲೆಕ್ಕಾಧಿಕಾರಿ ಅಶ್ವಿನಿಕುಮಾರ್, ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ಆನಂದ, ಹೇಮಣ್ಣ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, May 24, 2021

ಕೊರೋನಾದಿಂದ ಸ್ಮೈಲ್ ಪ್ಲೀಸ್ ಎಂದವರ ಬದುಕು ಅತಂತ್ರ

     
ಭದ್ರಾವತಿ ತಾಲೂಕು ಛಾಯಾಗ್ರಾಹಕರ ತಂಡ.
  * ಅನಂತಕುಮಾರ್
      ಭದ್ರಾವತಿ, ಮೇ. ೨೪: ಸಮಾಜದಲ್ಲಿ ಛಾಯಾಗ್ರಾಹಕ ವೃತ್ತಿಗೂ ಒಂದು ವಿಶಿಷ್ಟ ಪರಂಪರೆ ಇದೆ. ಛಾಯಾಗ್ರಾಹಕರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. ರಾಜ್ಯಾದ್ಯಂತ ಲಕ್ಷಾಂತರ ಮಂದಿ ಈ ವೃತ್ತಿಯನ್ನು ನಂಬಿ ಬದುಕುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಇವರ ಬದುಕು ತೀರ ಸಂಕಷ್ಟಕ್ಕೆ ತಳ್ಳಲ್ಪಟ್ಟಿದೆ. ಈ ನಡುವೆ ಸರ್ಕಾರ ಸಹ ನಿರ್ಲಕ್ಷ್ಯತನ ವಹಿಸಿರುವುದು ಛಾಯಾಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
      ರಾಜ್ಯಾದ್ಯಂತ ಸುಮಾರು ೨ ಲಕ್ಷಕ್ಕೂ ಅಧಿಕ ಮಂದಿ ಛಾಯಾಗ್ರಾಹಕ ವೃತ್ತಿಯನ್ನು ನಂಬಿಕೊಂಡು ಬದುಕುತ್ತಿದ್ದು, ತಾಲೂಕಿನಾದ್ಯಂತ ಛಾಯಾಗ್ರಾಹಕ ವೃತ್ತಿಯಲ್ಲಿ ಪೋಟೋಗ್ರಾಫರ್ ಹಾಗು ವಿಡಿಯೋಗ್ರಾಫರ್ ಮತ್ತು ಸ್ಟುಡಿಯೋಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಒಳಗೊಂಡಂತೆ ಸುಮಾರು ೨೭೦ ಮಂದಿ ಬದುಕು ಕಟ್ಟಿಕೊಂಡಿದ್ದಾರೆ.  ಇತರೆ ವೃತ್ತಿಗಳಿಗೆ ಹೋಲಿಕೆ ಮಾಡಿಕೊಂಡಲ್ಲಿ ಛಾಯಾಗ್ರಾಹಕ ವೃತ್ತಿಯೇ ವಿಭಿನ್ನವಾಗಿದ್ದು, ಈ ವೃತ್ತಿಯಲ್ಲಿ ನಿರೀಕ್ಷೆಗೆ ತಕ್ಕಂತೆ ಕೆಲಸವೂ ಇಲ್ಲ, ಆದಾಯವೂ ಇಲ್ಲ. ವರ್ಷದಲ್ಲಿ ೫-೬ ತಿಂಗಳು ಮಾತ್ರ ಆದಾಯ ಎದುರು ನೋಡುವಂತಾಗಿದೆ.  ಮದುವೆ, ಆರಕ್ಷತೆ, ನಾಮಕರಣ ಸೇರಿದಂತೆ ಶುಭಾ ಸಮಾರಂಭಗಳು, ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರರ ಸಭೆ, ಸಮಾರಂಭಗಳನ್ನು ನಂಬಿಕೊಂಡು ಬದುಕುತ್ತಿರುವ ಛಾಯಾಗ್ರಾಹಕರು ಇದೀಗ ತೀರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
      ಹಲವು ಸವಾಲು:
    ತಂತ್ರಜ್ಞಾನ ಬೆಳವಣಿಗೆಯಾದಂತೆ ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ತೀವ್ರ ಪೈಪೋಟಿ ನಡುವೆ ಹಲವು ಸವಾಲುಗಳು ಎದುರಾಗುತ್ತಿದ್ದು, ಛಾಯಾಗ್ರಾಹಕರ ವೃತ್ತಿಯಲ್ಲೂ ಸಹ ಹಲವು ಸವಾಲುಗಳು ಎದುರಾಗಿವೆ. ಬಹುಮುಖ್ಯವಾಗಿ ಸ್ಮಾರ್ಟ್ ಮೊಬೈಲ್ ಪೋನ್‌ಗಳು ಮಾರುಕಟ್ಟೆಗೆ ಬಿಡುಗಡೆಯಾದ ನಂತರ ಛಾಯಾಗ್ರಾಹಕರ ಅಗತ್ಯ ಬಹುತೇಕ ಕಡಿಮೆಯಾಗಿದೆ. ಸರ್ಕಾರಿ ಹಾಗು ಖಾಸಗಿ ಕಛೇರಿಗಳಲ್ಲಿ ಡಿಜಿಟಲೀಕರಣದ ಪರಿಣಾಮದಿಂದ ಛಾಯಾಗ್ರಾಹಕರನ್ನು ಬಹುತೇಕ ದೂರವೇ ಇಡಲಾಗಿದೆ. ಇವೆಲ್ಲ ಸವಾಲು ಹಾಗು ಪೈಪೋಟಿಗಳ ನಡುವೆ ಛಾಯಾಗ್ರಾಹಕರು ತಮ್ಮ ಅಸ್ತಿತ್ವ ಉಳಿಸಿಕೊಂಡು ಮುಂದೆ ಸಾಗುತ್ತಿದ್ದಾರೆ.


ಎಚ್. ಶ್ರೀನಿವಾಸ್


    ಛಾಯಾಗ್ರಾಹಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಸೌಲಭ್ಯಗಳು ನಮಗೆ ಲಭಿಸಿಲ್ಲ. ಜೊತೆಗೆ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಕಳೆದ ಬಾರಿ ಹಾಗು ಈ ಬಾರಿ ಘೋಷಿಸಿರುವ ಪರಿಹಾರ ಸಹ ಛಾಯಾಗ್ರಾಹಕರಿಗೆ ಲಭಿಸಿಲ್ಲ. ಪ್ರಸ್ತುತ ಛಾಯಾಗ್ರಾಹಕರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಇವರ ನೆರವಿಗೆ ಮುಂದಾಗಬೇಕು.
                                                                      
-ಎಚ್. ಶ್ರೀನಿವಾಸ್, ಅಧ್ಯಕ್ಷರು, ತಾಲೂಕು ಛಾಯಾಗ್ರಾಹಕರ ಸಂಘ, ಭದ್ರಾವತಿ.



        ಸ್ಮೈಲ್ ಪ್ಲೀಸ್ ಎಂದವರ ನಗು ಕಿತ್ತುಕೊಂಡ ಕೊರೋನಾ:
     ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಛಾಯಾಗ್ರಾಹಕರ ಬದುಕು ಅತಂತ್ರವಾಗಿದ್ದು,  ಅದರಲ್ಲೂ ಲಾಕ್‌ಡೌನ್ ಸಂದರ್ಭದಲ್ಲಿ ಅವರ ಸ್ಥಿತಿ ಹೇಳತಿಹದು. ತಾಲೂಕಿನಲ್ಲಿರುವ ಸುಮಾರು ೨೭೦ ಛಾಯಾಗ್ರಾಹಕರ ಪೈಕಿ ಸುಮಾರು ೬೦ ಮಂದಿ ಲಕ್ಷಾಂತರ ರು. ಸಾಲಸೋಲ ಮಾಡಿ ಸ್ವಂತ ಸ್ಟುಡಿಯೋಗಳನ್ನು ನಿರ್ಮಿಸಿಕೊಂಡಿದ್ದಾರೆ. ಸಾಲದ ಬಾಕಿ, ಸ್ಟುಡಿಯೋ ಬಾಡಿಗೆ ಕಟ್ಟಲು ಸಾಧ್ಯವಾಗದೆ ಪರಿತಪ್ಪಿಸುತ್ತಿದ್ದಾರೆ. ಉಳಿದಂತೆ ಛಾಯಾಗ್ರಾಹಕ ವೃತ್ತಿಯನ್ನೇ ನಂಬಿ ಕುಟುಂಬ ನಿರ್ವಹಣೆಯಲ್ಲಿ ತೊಡಗಿರುವವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಕೊರೋನಾ ಮಹಾಮಾರಿ ಸ್ಮೈಲ್ ಪ್ಲೀಸ್ ಎನ್ನುವವರ ನಗು ಕಿತ್ತುಕೊಂಡಿದೆ.
        ಸರ್ಕಾರದ ಯಾವುದೇ ಸೌಲಭ್ಯಗಳಿಲ್ಲ:
     ಛಾಯಾಗ್ರಾಹಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ೨೦೧೦ರಿಂದಲೂ  ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಸರ್ಕಾರದಿಂದ ಇದುವರೆಗೂ ಯಾವುದೇ ಸೌಲಭ್ಯಗಳು ಲಭಿಸಿಲ್ಲ.  ೨೦೧೩ರಲ್ಲಿ ಛಾಯಾಗ್ರಾಹಕರನ್ನು ಕಾರ್ಮಿಕ ಇಲಾಖೆಯ ಅಸಂಘಟಿತ ಕಾರ್ಮಿಕ ವಲಯದ ೪೨ನೇ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಆದರೂ ಸಹ ಯಾವುದೇ ಸೌಲಭ್ಯಗಳು ಛಾಯಾಗ್ರಾಹಕರಿಗೆ ಲಭಿಸುತ್ತಿಲ್ಲ. ಅಲ್ಲದೆ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಘೋಷಿಸಿರುವ ಪರಿಹಾರ ಧನ ಸಹ ಇವರಿಗೆ ಲಭಿಸಿಲ್ಲ. ಉಳಿದಂತೆ ಸ್ಥಳೀಯ ಸಂಸ್ಥೆಗಳಿಂದಲೂ ಯಾವುದೇ ಸೌಲಭ್ಯಗಳಿಲ್ಲ. ಇದರಿಂದಾಗಿ ಕೇವಲ ಹೆಸರಿಗೆ ಮಾತ್ರ ಅಸಂಘಟಿತ ಕಾರ್ಮಿಕರಾಗಿ ಉಳಿದುಕೊಂಡಿದ್ದಾರೆ.


Sunday, May 23, 2021

೨ ದಿನಗಳ ಸಂಪೂರ್ಣ ಲಾಕ್‌ಡೌನ್ ಬಹುತೇಕ ಯಶಸ್ವಿ

ಭದ್ರಾವತಿಯಲ್ಲಿ ಶನಿವಾರ ಮತ್ತು ಭಾನುವಾರ ಜಾರಿಗೊಳಿಸಲಾಗಿದ್ದ ೨ ದಿನಗಳ ಸಂಪೂರ್ಣ ಲಾಕ್‌ಡೌನ್ ಸಂದರ್ಭದಲ್ಲಿ ಕಂಡು ಬಂದ ದೃಶ್ಯ.
    ಭದ್ರಾವತಿ, ಮೇ. ೨೩: ತಾಲೂಕಿನಲ್ಲಿ ಶನಿವಾರ ಮತ್ತು ಭಾನುವಾರ ಜಾರಿಗೊಳಿಸಲಾಗಿದ್ದ ೨ ದಿನಗಳ ಸಂಪೂರ್ಣ ಲಾಕ್‌ಡೌನ್ ಬಹುತೇಕ ಯಶಸ್ವಿಯಾಗಿದ್ದು, ಆದರೂ ಸೋಂಕು ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡು ಬರುತ್ತಿಲ್ಲ. ಈಗಾಗಲೇ ಬಹುತೇಕ ಕಡೆ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನಲೆಯಲ್ಲಿ ಆತಂಕ ಎದುರಾಗಿದೆ.
     ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗು ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ೨ ದಿನಗಳ ಸಂಪೂರ್ಣ ಲಾಕ್‌ಡೌನ್‌ಗೆ ಹೆಚ್ಚಿನ ಶ್ರಮವಹಿಸಿರುವುದು ಕಂಡು ಬಂದಿದ್ದು, ಜನ ಸಂಚಾರ ಹೆಚ್ಚಾಗಿರುವ ಪ್ರದೇಶಗಳಲ್ಲಿ ಒಳಭಾಗದ ರಸ್ತೆಗಳನ್ನು ಸಹ ಬ್ಯಾರಿಗೇಡ್‌ಗಳಿಂದ ಬಂದ್ ಮಾಡಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ತೀವ್ರಗೊಳಿಸಿ ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕ್ರಮ ಕೈಗೊಂಡರು.
    ಹಾಲು ಹಾಗು ಔಷಧ ಅಂಗಡಿಗಳು ಹೊರತುಪಡಿಸಿ ಉಳಿದ ಅಂಗಡಿ, ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು.  ಜನರು ಸಹ ಲಾಕ್‌ಡೌನ್‌ಗೆ ಪೂರಕವಾಗಿ ಸ್ಪಂದಿಸಿದರು. ಸಂಪೂರ್ಣ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಶನಿವಾರ ಕಾರ್ಯಕ್ರಮ ನಿಮಿತ್ತ ನಗರಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು.
    ಸೋಮವಾರ ಬೆಳಿಗ್ಗೆ ಸಂಪೂರ್ಣ ಲಾಕ್‌ಡೌನ್ ಮುಕ್ತಾಯಗೊಳ್ಳಲಿದೆ. ಆದರೆ ಎಂದಿನಂತೆ ಲಾಕ್‌ಡೌನ್ ಮುಂದುವರೆಯಲಿದೆ. ಸರ್ಕಾರ ಪುನಃ ಲಾಕ್‌ಡೌನ್ ಮುಂದುವರೆಸಿರುವ ಕಾರಣ ಜನರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ.



ನಗರಸಭೆ ೧೬ನೇ ವಾರ್ಡ್ ವ್ಯಾಪ್ತಿಯಲ್ಲಿ ಸ್ಯಾನಿಟೈಜರ್ ಸಿಂಪಡಣೆ


ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಗಾಂಧಿನಗರ ವ್ಯಾಪ್ತಿಯನ್ನು ಒಳಗೊಂಡಿರುವ ನಗರಸಭೆ ವಾರ್ಡ್ ನಂ.೧೬ರಲ್ಲಿ ಭಾನುವಾರ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಭದ್ರಾವತಿ, ಮೇ. ೨೩: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಗಾಂಧಿನಗರ ವ್ಯಾಪ್ತಿಯನ್ನು ಒಳಗೊಂಡಿರುವ ನಗರಸಭೆ ವಾರ್ಡ್ ನಂ.೧೬ರಲ್ಲಿ ಭಾನುವಾರ ಸ್ಯಾನಿಟೈಜರ್ ಸಿಂಪಡಿಸಲಾಯಿತು.
     ನಗರ ಪ್ರದೇಶದ ವ್ಯಾಪ್ತಿಯಲ್ಲಿರುವ ಪ್ರಮುಖ ವಾರ್ಡ್‌ಗಳ ಪೈಕಿ ೧೬ನೇ ವಾರ್ಡ್ ಸಹ ಒಂದಾಗಿದ್ದು, ನಗರಸಭೆ ಸಹಕಾರದೊಂದಿಗೆ ಅಗ್ನಿಶಾಮಕ ಇಲಾಖೆವತಿಯಿಂದ ವಾರ್ಡ್‌ನ ಪ್ರತಿಯೊಂದು ರಸ್ತೆಗೂ ಸ್ಯಾನಿಟೈಜರ್ ಸಿಂಪಡಿಸಲಾಯಿತು.
     ವಾರ್ಡ್ ನೂತನ ಸದಸ್ಯ, ಹಿರಿಯ ಬಿಜೆಪಿ ಮುಖಂಡ ವಿ. ಕದಿರೇಶ್, ಅಗ್ನಿಶಾಮಕ ಠಾಣಾಧಿಕಾರಿ ವಸಂತಕುಮಾರ್ ಹಾಗು ಸಿಬ್ಬಂದಿಗಳು ಮತ್ತು  ವಾರ್ಡ್ ಪ್ರಮುಖರು ಉಪಸ್ಥಿತರಿದ್ದರು.

ಹಿರಿಯ ಜೀವಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಮಾಜಿ ಶಾಸಕರ ಪುತ್ರ

ಭದ್ರಾವತಿಯಲ್ಲಿ ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬದ ಹಿರಿಯ ಜೀವಿಗಳ ನೆರವಿಗೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
    ಭದ್ರಾವತಿ, ಮೇ. ೨೩: ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬದ ಹಿರಿಯ ಜೀವಿಗಳ ನೆರವಿಗೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
     ಸಾಮಾಜಿಕ ಜಾಲತಾಣವೊಂದರ ನಿರ್ವಾಹಕರಿಂದ ಹಿರಿಯ ಜೀವಿಗಳು ಸಂಕಷ್ಟದಲ್ಲಿರುವ ಮಾಹಿತಿ ಲಭಿಸಿದ ತಕ್ಷಣ ನಗರಸಭೆ ಮಾಜಿ ಸದಸ್ಯರಾದ ಎಂ.ಎ ಅಜಿತ್ ತಕ್ಷಣ ನೆರವಿಗೆ ಧಾವಿಸಿದ್ದಾರೆ.
    ಕಳೆದ ವರ್ಷ ಲಾಕ್‌ಡೌನ್ ಸಂದರ್ಭದಲ್ಲಿ ಸ್ವತಃ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರೇ ಕ್ಷೇತ್ರದಾದ್ಯಂತ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದರು. ಇದೀಗ ಅವರಿಲ್ಲದ ಸಂದರ್ಭದಲ್ಲಿ ಪುತ್ರ ಎಂ.ಎ ಅಜಿತ್ ತಮ್ಮ ಕೈಲಾದಷ್ಟು ಮಟ್ಟಿಗೆ ನೆರವಿಗೆ ಮುಂದಾಗಿದ್ದಾರೆ.

ನಾಗರತ್ನ ನಿಧನ

ನಾಗರತ್ನ
    ಭದ್ರಾವತಿ, ಮೇ. ೨೩:  ನಗರಸಭೆ ವ್ಯಾಪ್ತಿ ಜನ್ನಾಪುರ ವೇಲೂರ್ ಶೆಡ್ ೭ನೇ ತಿರುವಿನ ನಿವಾಸಿ ಎಸ್.ಎ ರಂಗನಾಥ್‌ರವರ ಪತ್ನಿ ನಾಗರತ್ನ (೬೦) ನಿಧನ ಹೊಂದಿದರು.
    ಇತ್ತೀಚೆಗೆ ನಾಗರತ್ನ ಅವರ ತಾಯಿ ತುಮಕೂರಿನಲ್ಲಿ ನಿಧನ ಹೊಂದಿದ್ದು, ಇದೆ ಕೊರಗಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಅರ್ಯವೈಶ್ಯ ಮಂಡಳಿ ಸಂತಾಪ ಸೂಚಿಸಿದೆ.