Saturday, June 12, 2021

ಎಲ್ಲರಿಗೂ ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡಿ : ಎಚ್. ರವಿಕುಮಾರ್ ಆಗ್ರಹ


ಎಚ್. ರವಿಕುಮಾರ್
   ಭದ್ರಾವತಿ, ಜೂ. ೧೨: ರಾಜ್ಯ ಸರ್ಕಾರ ತಕ್ಷಣ ವಿದ್ಯುತ್ ಬೆಲೆ ಏರಿಕೆ ಹಿಂಪಡೆಯುವ ಮೂಲಕ ಎಲ್ಲರಿಗೂ ಪ್ರತಿ ತಿಂಗಳು ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವಂತೆ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಆಗ್ರಹಿಸಿದ್ದಾರೆ.
    ಕೊರೋನಾ ಪರಿಣಾಮ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದಿಗ್ದ ಪರಿಸ್ಥಿತಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಖಂಡನೀಯ. ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಬಂಡವಾಳ ಶಾಹಿಗಳ ಪರವಾಗಿದ್ದು, ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ದೆಹಲಿ ಸರ್ಕಾರ ಪ್ರತಿ ತಿಂಗಳು ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತಿದೆ. ಇದೆ ಮಾದರಿಯಲ್ಲಿ ಕರ್ನಾಟಕ ಸರ್ಕಾರ ಉಚಿತ ವಿದ್ಯುತ್ ನೀಡಬೇಕು.
   ತಕ್ಷಣ ವಿದ್ಯುತ್ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ದರ ನಿಗದಿಯಲ್ಲಿ ಸೂಕ್ತ ನಿಲುವು ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಬಂಡವಾಳಶಾಹಿಗಳ ಲಾಭಿಗೆ ಮಣಿಯಬಾರದು ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ರವಿಕುಮಾರ್ ಒತ್ತಾಯಿಸಿದ್ದಾರೆ.  

ಶ್ರೀ ಸತ್ಯಸಂದ ತೀರ್ಥ ಶ್ರೀ ಪಾದಂಗಳವರ ಆರಾಧನೆ


ಭದ್ರಾವತಿ ಜನ್ನಾಪುರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶನಿವಾರ ಶ್ರೀ ಸತ್ಯಸಂದ ತೀರ್ಥ ಶ್ರೀ ಪಾದಂಗಳವರ ಆರಾಧನೆ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೧೨: ನಗರದ ಜನ್ನಾಪುರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶನಿವಾರ ಶ್ರೀ ಸತ್ಯಸಂದ ತೀರ್ಥ ಶ್ರೀ ಪಾದಂಗಳವರ ಆರಾಧನೆ ಹಮ್ಮಿಕೊಳ್ಳಲಾಗಿತ್ತು.
     ಆರಾಧನೆ ಹಿನ್ನಲೆಯಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ, ಭಕ್ತರಿಂದ ಪಾರಾಯಣ, ಪಂಡಿತರಾದ ಗಂಟೆ ನಾರಾಯಣಚಾರ್ ಅವರಿಂದ ಉಪನ್ಯಾಸ, ಪಲ್ಲಕ್ಕಿ ಉತ್ಸವ, ಅಲಂಕಾರ ಸೇವೆ ಹಾಗು ಅಷ್ಟಾವಧಾನ ಮತ್ತು ಹಸ್ತೋದಕ ಹಾಗು ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
    ಆನಂದತೀರ್ಥ ಕಲ್ಲಾಪುರ್, ರಾಮಚಂದ್ರ, ಶ್ರೀನಿವಾಸಚಾರ್, ರಘು ರಾಮಾಚಾರ್, ಪ್ರಧಾನ ಅರ್ಚಕ ಮುರುಳಿಧರ್, ರಮಾಕಾಂತ್, ಎಸ್.ಎನ್ ಬಾಲಕೃಷ್ಣ, ಹಳ್ಳಿಕಟ್ಟೆ ನಾಗರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಭಾರತಿ ಭಜನಾ ಮಂಡಳಿ ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.


ಅರುಣ್‌ಕುಮಾರ್ ನಿಧನ

ಅರುಣ್‌ಕುಮಾರ್

   ಭದ್ರಾವತಿ, ಜೂ. ೧೨: ಹಳೇನಗರ ಕುಂಬಾರರ ಬೀದಿ ನಿವಾಸಿ, ಪತ್ರ ಬರಹಗಾರ ಶಾಂತಯ್ಯನವರ ಅಳಿಯ ಅರುಣ್‌ಕುಮಾರ್(೪೫) ಅನಾರೋಗ್ಯದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
   ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು. ಮೃತರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಆಕ್ರೋಶ


ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಖಂಡಿಸಿ ಶನಿವಾರ ಭದ್ರಾವತಿ ಬ್ಲಾಕ್ ಕಾಂಗ್ರೆಸ್ ನಗರ ಹಾಗು ಗ್ರಾಮಾಂತರ ಘಟಕಗಳ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
     ಭದ್ರಾವತಿ, ಜೂ. ೧೨: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಖಂಡಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ನಗರ ಹಾಗು ಗ್ರಾಮಾಂತರ ಘಟಕಗಳ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. 
ನಗರದ ವಿವಿಧೆಡೆ ಪೆಟ್ರೋಲ್ ಬಂಕ್‌ಗಳ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ಬರಬೇಕಾದ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು ಆರೋಪಿಸಿದರು. 
ತಕ್ಷಣ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಕೋವಿಡ್ ಸಂಕಷ್ಟದಲ್ಲಿರುವ ಬಡ ಜನರಿಗೆ ಅಗತ್ಯ ದಿನಸಿ ಸಾಮಗ್ರಿಗಳನ್ನು ವಿತರಿಸಬೇಕು. ಕಾರ್ಮಿಕ ಹಾಗು ರೈತ ವಿರೋಧಿ ಧೋರಣೆಗಳನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿದರು. 
ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್,  ನಗರಸಭಾ ಸದಸ್ಯರಾದ ಬಿ.ಕೆ ಮೋಹನ್,  ಜಾರ್ಜ್, ಲತಾ ಚಂದ್ರಶೇಖರ್, ಚನ್ನಪ್ಪ, ಬಿ.ಟಿ ನಾಗರಾಜ್, ಕಾಂತರಾಜ್, ಮೊಹಮದ್, ಮುಖಂಡರಾದ ವೆಂಕಟೇಶ್ ಸುಬ್ಬಣ್ಣ, ಗಂಗಾಧರ್, ರಾಘವೇಂದ್ರ ಸರಾಟೆ, ಎಂ. ಶಿವಕುಮಾರ್, ಎಸ್.ಎಸ್ ಭೈರಪ್ಪ, ಆಂಜನಪ್ಪ, ದೇವೇಂದ್ರ ಗಿರಿ, ಲಕ್ಷ್ಮೀದೇವಿ, ಸುಮಿತ್ರ ಅಂಬೋರೆ, ಯುವ ಘಟಕದ ಭರತ್, ಶಂಕರ್, ವರುಣ್, ಉದಯ್, ಸುನಿಲ್ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು. 

Friday, June 11, 2021

ಭದ್ರಾವತಿಯಲ್ಲಿ ೧೦೩ ಸೋಂಕು ಪತ್ತೆ

   ಭದ್ರಾವತಿ, ಜೂ. ೧೧:  ಸರ್ಕಾರ ಜಾರಿಗೊಳಿಸಿರುವ ೨ನೇ ಅವಧಿಯ ಸೆಮಿ ಲಾಕ್‌ಡೌನ್ ಮುಕ್ತಾಯಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಆದರೂ ಸಹ ತಾಲೂಕಿನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಶುಕ್ರವಾರ ೧೦೩ ಸೋಂಕು ಪತ್ತೆಯಾಗಿದೆ.
     ಒಟ್ಟು ೭೦೯ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೦೩ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೇವಲ ೮೬ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ಒಟ್ಟು ೬೧೯೪ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೫೨೧೫ ಮಂದಿ ಗುಣಮುಖರಾಗಿದ್ದಾರೆ. ೯೭೯ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿವೆ. ಒಂದೇ ದಿನ ೪ ಮಂದಿ ಬಲಿಯಾಗಿದ್ದು, ಇದುವರೆಗೂ ೧೭೦ ಮಂದಿ ಮೃತಪಟ್ಟಿದ್ದಾರೆ.
    ಒಟ್ಟು ೨೭೬ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ಪ್ರದೇಶದಲ್ಲಿ ಒಟ್ಟು ೪೦ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿವೆ.  ಒಟ್ಟು ೮೪ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು ೨೭ ಜೋನ್‌ಗಳು ಸಕ್ರಿಯಾಗಿದ್ದು, ೧೭ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.

ಜೂ.೧೨, ೧೩ ಎರಡು ದಿನ ಸಂಪೂರ್ಣ ಲಾಕ್‌ಡೌನ್

ಭದ್ರಾವತಿ, ಜೂ. ೧೧: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ತಾಲೂಕಿನಾದ್ಯಂತ ಜೂ.೧೨ ಮತ್ತು ೧೩ ಎರಡು ದಿನ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.
     ಹಾಲು ಮತ್ತು ಔಷಧಿ ಅಂಗಡಿ(ಮೆಡಿಕಲ್ಸ್) ಹೊರತುಪಡಿಸಿ ಮತ್ತು ಪೆಟ್ರೋಲ್ ಬಂಕ್, ರಸಗೊಬ್ಬರ ಅಂಗಡಿಗಳನ್ನು ಬೆಳಿಗ್ಗೆ ೬ ಗಂಟೆಯಿಂದ ೧೦ ಗಂಟೆವರೆಗೆ ಮಾತ್ರ ತೆರೆಯಲು ಅವಕಾಶವಿದ್ದು, ಉಳಿದಂತೆ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಅಲ್ಲದೆ ಅನಾವಶ್ಯಕ ಜನಸಂಚಾರ ಸಹ ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ತಿಳಿಸಿದ್ದಾರೆ.

ಪತ್ರಕರ್ತರ ಹಿತರಕ್ಷಣೆ ಜೊತೆಗೆ ಕುಟುಂಬದವರ ರಕ್ಷಣೆ ಸಹ ಮುಖ್ಯ : ಬಿ.ವೈ ರಾಘವೇಂದ್ರ


ಭದ್ರಾವತಿ ಹಳೇನಗರದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಪತ್ರಕರ್ತರ ಕುಟುಂಬದವರಿಗೆ ಹಮ್ಮಿಕೊಳ್ಳಲಾಗಿದ್ದ ಕೊರೋನಾ ಲಸಿಕೆ ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಕೊರೋನಾ ಸೋಂಕಿನ ರಕ್ಷಣೆಗಾಗಿ ಫೇಸ್ ಶೀಲ್ಡ್, ಸ್ಯಾನಿಟೈಜರ್, ಮಾಸ್ಕ್ ಮತ್ತು ಸ್ಟೀಮ್ ಇನ್‌ಹಲೇರ್ ಸೇರಿದಂತೆ ಇನ್ನಿತರ ವಸ್ತುಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
    ಭದ್ರಾವತಿ, ಜೂ. ೧೧: ಕೊರೋನಾ ಸಂಕಷ್ಟದ ಸಮಯದಲ್ಲೂ ಹಗಲಿರುಳು ಶ್ರಮಿಸುತ್ತಿರುವ ಪತ್ರಕರ್ತರ ಹಿತರಕ್ಷಣೆ ಜೊತೆಗೆ ಕುಟುಂಬದವರ ರಕ್ಷಣೆ ಸಹ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಕುಟುಂಬದವರಿಗೂ ಕೊರೋನಾ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಇದೀಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಹಳೇನಗರದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಕುಟುಂಬದವರಿಗೆ ಹಮ್ಮಿಕೊಳ್ಳಲಾಗಿದ್ದ ಕೊರೋನಾ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
     ಎಲ್ಲರೂ ಲಸಿಕೆ ಹಾಕಿಸಿಕೊಂಡಾಗ ಮಾತ್ರ ೩ನೇ ಅಲೆ ನಿಯಂತ್ರಿಸಲು ಸಾಧ್ಯ. ಈಗಾಗಲೇ ೨ನೇ ಅಲೆ ಪರಿಣಾಮ ಜನರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೊರೋನಾ ಸೋಂಕು ಪುನಃ ಕಾಣಿಸಿಕೊಳ್ಳದಂತೆ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ಎಲ್ಲರ ಪ್ರಯತ್ನ ಬಹಳ ಮುಖ್ಯವಾಗಿದೆ ಎಂದರು.
     ಸಂಕಷ್ಟದ ಸಮಯದಲ್ಲೂ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ನೀಡುತ್ತಿವೆ. ಅಭಿವೃದ್ಧಿ ಕಾರ್ಯಗಳಿಗೂ ಆರ್ಥಿಕ ನೆರವು ಒದಗಿಸುತ್ತಿವೆ. ಈ ನಡುವೆ ಸಂಕಷ್ಟದ ಸಮಯದಲ್ಲೂ ಹಲವು ಸಂಘ ಸಂಸ್ಥೆಗಳು ನೆರವಿಗೆ ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಅದರಲ್ಲೂ ಭದ್ರಾವತಿ ನಗರದಲ್ಲಿ ಹಲವು ಸಂಘ-ಸಂಸ್ಥೆಗಳು ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿವೆ. ವಿಶೇಷವಾಗಿ ಬಜರಂಗದಳ ಕಾರ್ಯಕರ್ತರು ಸುಮಾರು ೫೦ಕ್ಕೂ ಅಧಿಕ ಕೊರೋನಾ ಸೋಂಕಿತ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸಿರುವುದು ಎಲ್ಲರೂ ಮೆಚ್ಚುವ ಕಾರ್ಯವಾಗಿದೆ ಎಂದರು.
ಪತ್ರಿಕಾಭವನ ಕಾಮಗಾರಿ ಶೀಘ್ರವಾಗಿ ಮುಕ್ತಾಯಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಮುಂದಿನ ದಿನಗಳಲ್ಲಿ ಸುಂದರವಾದ ಸಭಾ ಆವರಣದಲ್ಲಿ ಕಾರ್ಯಕ್ರಮಗಳು ನಡೆಯುವಂತಾಗಬೇಕೆಂದರು.
      ಇದೆ ಸಂದರ್ಭದಲ್ಲಿ ಪತ್ರಕರ್ತರಿಗೆ ಕೊರೋನಾ ಸೋಂಕಿನ ರಕ್ಷಣೆಗಾಗಿ ಫೇಸ್ ಶೀಲ್ಡ್, ಸ್ಯಾನಿಟೈಜರ್, ಮಾಸ್ಕ್ ಮತ್ತು ಸ್ಟೀಮ್ ಇನ್‌ಹಲೇರ್ ಸೇರಿದಂತೆ ಇನ್ನಿತರ ವಸ್ತುಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
     ಸೂಡಾ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ಸದಸ್ಯರಾದ ರಾಮಲಿಂಗಯ್ಯ, ವಿ. ಕದಿರೇಶ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಪ್ರಮುಖರಾದ ಎಂ. ಪ್ರಭಾಕರ್, ಬಿ.ಕೆ ಶ್ರೀನಾಥ್, ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್, ಕೆ. ಮಂಜುನಾಥ್, ಅವಿನಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.