Thursday, July 1, 2021

ಸ್ವ ಸಹಾಯ ಸಂಘಗಳಿಗೆ ಪೂರ್ಣ ಲಾಭಾಂಶ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಶ್ಲಾಘನೆ

ಭದ್ರಾವತಿ ಹಳೇನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಛೇರಿಯಲ್ಲಿ ಗುರುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಿಸಿದರು.
   ಭದ್ರಾವತಿ, ಜೂ. ೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೈಗೊಳ್ಳುತ್ತಿರುವ ಸಮಾಜ ಮುಖಿ ಕಾರ್ಯಗಳಿಗೆ ಯಾರಿಂದಲೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಹಿಳಾ ಸದಸ್ಯರಿಗೆ ಸಾಲದ ಜೊತೆಗೆ ಪೂರ್ಣ ಪ್ರಮಾಣದ ಲಾಭಾಂಶ ಸಹ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು.
    ಅವರು ಗುರುವಾರ ಹಳೇನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಲಾಭಾಂಶ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಯಾವುದೇ ಬ್ಯಾಂಕ್ ಸಹ ಸಾಲದ ಜೊತೆಗೆ ಪೂರ್ಣ ಲಾಭಾಂಶವನ್ನು ತನ್ನ ಗ್ರಾಹಕರಿಗೆ ನೀಡುವುದಿಲ್ಲ. ಆದರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಲದ ಜೊತೆಗೆ ಪೂರ್ಣ ಲಾಭಾಂಶ ಸಹ ನೀಡುತ್ತಿರುವುದು ಸದಸ್ಯರ ಅದೃಷ್ಟವಾಗಿದೆ. ಈ ಲಾಭಾಂಶವನ್ನು ಪುನಃ ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಮಹಿಳೆಯರು ಸಾಮಾಜಿಕ ಕಾಳಜಿಯನ್ನು ಹೊಂದಬೇಕು. ಆ ಮೂಲಕ ಸಮಾಜದಲ್ಲಿ ಪರಿವರ್ತನೆಗೆ ನಾಂದಿ ಹಾಡಬೇಕೆಂದು ಕರೆ ನೀಡಿದರು.
    ಯೋಜನಾಧಿಕಾರಿ ಪ್ರಕಾಶ್ ಮಾತನಾಡಿ, ತಾಲೂಕಿನಲ್ಲಿ ಕಳೆದ ೧೪ ವರ್ಷಗಳಿಂದ ಯೋಜನೆ ತನ್ನ ಕಾರ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರನ್ನು ಸ್ವ-ಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಸಬಲೀಕರಣ ಮಾಡಲಾಗುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಂದ ಪ್ರಗತಿನಿಧಿ ಸಾಲ ಪಡೆದು ಶಿಸ್ತು ಬದ್ಧ ವ್ಯವಹಾರದ ಜೊತೆಗೆ ಉಳಿತಾಯದ ಶಿಸ್ತು ತಿಳುವಳಿಕೆಯಡಿಯಲ್ಲಿ ಪ್ರತಿ ಸದಸ್ಯರು ಉಳಿತಾಯವನ್ನು ಮಾಡುತ್ತಿದ್ದಾರೆ. ಉಳಿತಾಯ ಮತ್ತು ಬ್ಯಾಂಕಿನ ಸಾಲ ಸದ್ಬಳಕೆ ಮಾಡಿಕೊಂಡು ಮರುಪಾವತಿ ಮಾಡಿದ್ದಲ್ಲಿ ಸಂಘಗಳಿಗೆ ಲಾಭಾಂಶ ಬರುತ್ತದೆ. ಇದುವರೆಗೂ ಒಟ್ಟು ೩ ಬಾರಿ ಲಾಭಾಂಶ ವಿತರಣೆ ಮಾಡಲಾಗಿದೆ.  ಈ ಬಾರಿ  ೨.೯೪ ಕೋ. ರು. ಒಟ್ಟು ಲಾಭಾಂಶವಾಗಿದ್ದು, ತಾಲೂಕಿನ ಒಟ್ಟು ೨೦೮೪ ಸಂಘಗಳ ೧೭,೭೦೭ ಸದಸ್ಯರು ಲಾಭಾಂಶದ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.
   ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಮಾತನಾಡಿದರು. ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಿಸಲಾಯಿತು.
   ಮೇಲ್ವಿಚಾರಕ ವಿ.ಎನ್ ಪ್ರಶಾಂತ್, ಸೇವಾ ಪ್ರತಿನಿಧಿಗಳಾದ ರಾಜೇಶ್ವರಿ, ಶೃತಿ, ಶಾರದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, June 30, 2021

ಕೇಂದ್ರ, ರಾಜ್ಯ ಸರ್ಕಾರಗಳಿಂದ ಲಸಿಕಾ ರಾಜಕಾರಣ : ಕಾಂಗ್ರೆಸ್ ಆರೋಪ

ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ


ಭದ್ರಾವತಿ ರಂಗಪ್ಪ ವೃತ್ತದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಮನ್ ಕೀ ಬಾತ್ ಸಾಕು ಲಸಿಕೆ ಬೇಕು, ಲಸಿಕೆ ರಾಜಕಾರಣ ನಿಲ್ಲಿಸಿ ಇತ್ಯಾದಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
   ಭದ್ರಾವತಿ, ಜೂ. ೩೦: ಕೋವಿಡ್-೧೯ರ ಸಂಕಷ್ಟದ ಸಮಯದಲ್ಲಿ ಕೇಂದ್ರ ಹಾಗು ರಾಜ್ಯ ಬಿಜೆಪಿ ಸರ್ಕಾರಗಳು ಲಸಿಕಾ ರಾಜಕಾರಣ ನಡೆಸುತ್ತಿದ್ದು, ಪ್ರತಿಯೊಬ್ಬರಿಗೂ ಲಸಿಕೆ ನೀಡುವಲ್ಲಿ ವಿಫಲವಾಗಿವೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಆರೋಪಿಸಿದರು.
   ಬುಧವಾರ ನಗರದ ರಂಗಪ್ಪ ವೃತ್ತದಲ್ಲಿ ಮನ್ ಕೀ ಬಾತ್ ಸಾಕು ಲಸಿಕೆ ಬೇಕು, ಲಸಿಕೆ ರಾಜಕಾರಣ ನಿಲ್ಲಿಸಿ ಇತ್ಯಾದಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಮುಖಂಡರು,  ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಸಹ ಇದುವರೆಗೂ ಕೇಂದ್ರ ಹಾಗು ರಾಜ್ಯ ಬಿಜೆಪಿ ಸರ್ಕಾರಗಳು ಲಸಿಕೆ ನೀಡದೆ ನಿರ್ಲಕ್ಷ್ಯ ವಹಿಸಿವೆ. ತಕ್ಷಣ ಪ್ರತಿಯೊಬ್ಬರು ಲಸಿಕೆ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವ ವಹಿಸಿದ್ದರು. ನಗರಸಭಾ ಸದಸ್ಯರಾದ ಜಾರ್ಜ್, ಆರ್. ಶ್ರೇಯಸ್, ಲತಾ ಚಂದ್ರಶೇಖರ್, ರಿಯಾಜ್ ಅಹಮದ್, ಮುಖಂಡರಾದ ಎಚ್.ಎಸ್ ಶಂಕರ್‌ರಾವ್, ಎಂ. ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಯುವ ಕಾಂಗ್ರೆಸ್ ಗ್ರಾಮಾಂತರ ಘಟಕ ಉಪಾಧ್ಯಕ್ಷ ಪ್ರವೀಣ್ ಕಲ್ಪನಹಳ್ಳಿ  ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಭದ್ರಾವತಿಯಲ್ಲಿ ೪೫ ಕೊರೋನಾ ಸೋಂಕು ಪತ್ತೆ

ಭದ್ರಾವತಿ, ಜೂ. ೩೦: ತಾಲೂಕಿನ ಬುಧವಾರ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದ್ದು, ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.
   ತಾಲೂಕಿನ ಗ್ರಾಮಾಂತರ ಭಾಗದಲ್ಲಿ ೨೨ ಹಾಗು ನಗರ ಭಾಗದಲ್ಲಿ ೨೩ ಸೋಂಕು ಸೇರಿದಂತೆ ಒಟ್ಟು ೪೫ ಸೋಂಕು ಪತ್ತೆಯಾಗಿವೆ. ನಗರ ಭಾಗದಲ್ಲಿ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಸ್ವಲ್ಪ ಮಟ್ಟಿಗೆ ಸೋಂಕು ಏರಿಕೆಯಾಗಿರುವುದು ಪುನಃ ಆತಂಕ ಹೆಚ್ಚು ಮಾಡಿದೆ.  

ಜು.೨ರಂದು ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

ಭದ್ರಾವತಿ, ಜೂ. ೩೦: ತಾಲೂಕಿನ ಶ್ರೀ ವಿನಾಯಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ಶಾಲಾ ಮಕ್ಕಳಿಗೆ ಜು.೨ರಂದು ಮಧ್ಯಾಹ್ನ ೩.೩೦ಕ್ಕೆ ಉಚಿತ ನೋಟ್ ವಿತರಣೆ ನಡೆಯಲಿದೆ.
    ಅರಳಿಹಳ್ಳಿ ಸರ್ಕಾರಿ ಶಾಲೆಯಲ್ಲಿ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಟ್ರಸ್ಟ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ನಿಟ್ಟಿನಲ್ಲಿ ಸೇವಾ ಕಾರ್ಯಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಶಾಲಾ ಮಕ್ಕಳ ಪೋಷಕರು, ಗ್ರಾಮದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಟ್ರಸ್ಟ್ ಅಧ್ಯಕ್ಷ, ಸಮಾಜ ಸೇವಕ ಎ. ಧರ್ಮೇಂದ್ರ ಕೋರಿದ್ದಾರೆ.

ಜು.೧ರಿಂದ ಶೈಕ್ಷಣಿಕ ಚಟುವಟಿಕೆ ಆರಂಭ : ಮಕ್ಕಳು ಶಾಲೆಗಳಿಗೆ ಹಾಜರಾಗದೆ ಮನೆಗಳಲ್ಲಿಯೇ ಇದ್ದು ಕಲಿಯಿರಿ

ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಮಾಹಿತಿ


ಭದ್ರಾವತಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ ಮಾತನಾಡಿದರು.
   ಭದ್ರಾವತಿ, ಜೂ. ೩೦: ತಾಲೂಕಿನಲ್ಲಿ ಜು.೧ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳಲಿದ್ದು, ಮಕ್ಕಳು ಶಾಲೆಗಳಿಗೆ ಹಾಜರಾಗದೆ ಮನೆಗಳಲ್ಲಿಯೇ ಕಲಿಕೆಗೆ ಅಗತ್ಯವಿರುವ ವ್ಯವಸ್ಥೆಗಳನ್ನು ರೂಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ತಿಳಿಸಿದರು.
    ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್-೧೯ರ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳನ್ನು ಆರಂಭಿಸುತ್ತಿಲ್ಲ. ಪೋಷಕರು ದಾಖಲಾತಿ ಪ್ರಕ್ರಿಯೆಗೆ ಮಾತ್ರ ಮಕ್ಕಳನ್ನು ಶಾಲೆಗಳಿಗೆ ಕರೆತರಬೇಕಾಗಿದೆ. ಉಳಿದಂತೆ ಮಕ್ಕಳ ಕಲಿಕೆಗೆ ಸಂಬಂಧಿಸಿದಂತೆ ೨ ಹಂತದ ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ. ಮಕ್ಕಳು ಮನೆಗಳಲ್ಲಿಯೇ ಇದ್ದು ಕಲಿಕೆ ಆರಂಭಿಸಬೇಕಾಗಿದೆ. ಈಗಾಗಲೇ ಕಳೆದ ೧೫ ದಿನಗಳಿಂದ ತಾಲೂಕಿನಾದ್ಯಂತ ಟಿ.ವಿ, ಮೊಬೈಲ್ ಸೌಲಭ್ಯಗಳನ್ನು ಹೊಂದಿರುವ ಹಾಗು ಯಾವುದೇ ಸೌಲಭ್ಯಗಳನ್ನು ಹೊಂದಿಲ್ಲದ ಮಕ್ಕಳನ್ನು ಗುರುತಿಸಲಾಗಿದೆ. ಈ ಮಕ್ಕಳಿಗೆ ೨ ರೀತಿಯ ಯೋಜನೆ ಮೂಲಕ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
   ಯೋಜನೆ-೧ರಲ್ಲಿ ಯಾವುದೇ ಸೌಲಭ್ಯ ಹೊಂದಿಲ್ಲದ ಮಕ್ಕಳಿಗೆ ಕಲಿಕೆಗೆ ಅಗತ್ಯವಿರುವ ಅಭ್ಯಾಸ ಚಟುವಟಿಕೆಗಳ ನಕಲು ಪ್ರತಿಗಳನ್ನು ಆಯಾ ಶಾಲೆಗಳ ಶಿಕ್ಷಕರು ಮಕ್ಕಳ ಮನೆಗಳಿಗೆ ತಲುಪಿಸಲಿದ್ದಾರೆ. ಯೋಜನೆ ೨ರಲ್ಲಿ ಟಿ.ವಿ, ಮೊಬೈಲ್ ಹೊಂದಿರುವ ಮಕ್ಕಳಿಗೆ ಆನ್‌ಲೈನ್ ಮೂಲಕ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ದೂರದರ್ಶನ ಚಂದನ ವಾಹಿನಿಲ್ಲಿ ೧ ರಿಂದ ೧೦ನೇ ತರಗತಿ ವರೆಗಿನ ಮಕ್ಕಳಿಗೆ ಪ್ರತಿದಿನ ಸಂವೇದ ಕಾರ್ಯಕ್ರಮದಡಿ ಪಾಠಗಳು ಪ್ರಸಾರವಾಗಲಿದ್ದು, ಮಕ್ಕಳು ಮನೆಗಳಲ್ಲಿಯೇ ಇದ್ದು ಕಲಿಯಬಹುದಾಗಿದೆ ಎಂದರು.
       ಮಕ್ಕಳ ದಾಖಲಾತಿಗೆ ಮನವಿ :
   ತಾಲೂಕಿನಲ್ಲಿ ಸರ್ಕಾರಿ ಪ್ರಾಥಮಿಕ ಹಾಗು ಪ್ರೌಡಶಾಲೆಗಳಲ್ಲಿ ಕಳೆದ ಬಾರಿಗಿಂತ ಈ ಬಾರಿ ದಾಖಲಾತಿ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಈ ಬಾರಿ ಕೇವಲ ಶೇ.೪೦ರಷ್ಟು ದಾಖಲಾತಿ ನಡೆದಿದೆ. ನಿಗದಿತ ಅವಧಿಯಲ್ಲಿ ಮಕ್ಕಳನ್ನು ಶಾಲೆಗಳಿಗೆ ಕರೆತಂದು ದಾಖಲಾತಿ ಮಾಡುವಂತೆ ಟಿ.ಎನ್ ಸೋಮಶೇಖರಯ್ಯ ಪೋಷಕರಲ್ಲಿ ಮನವಿ ಮಾಡಿದರು.
    ಸುದ್ದಿಗೋಷ್ಠಿಯಲ್ಲಿ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕ ಶಿವಪ್ರಸಾದ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವೈ. ಗಣೇಶ್, ಶಿಕ್ಷಣ ಸಂಯೋಜಕರಾದ ರವಿಕುಮಾರ್, ತಿಪ್ಪಮ್ಮ, ಸಿ.ಆರ್.ಪಿ ಚನ್ನಪ್ಪ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪಂಚಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ : ವಿಐಎಸ್‌ಎಲ್ ಕಾರ್ಮಿಕರಿಂದ ನಡೆದ ೩ ದಿನಗಳ ಹೋರಾಟ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಮುಷ್ಕರ ನಡೆಸಿದರು.
    ಭದ್ರಾವತಿ, ಜೂ. ೩೦: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಮುಷ್ಕರ ನಡೆಸಿದರು.
    ಕಾರ್ಖಾನೆ ಮುಂಭಾಗ ಬೆಳಿಗ್ಗೆ ಮುಷ್ಕರ ಆರಂಭಿಸಿದ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಉಕ್ಕು ಪ್ರಾಧಿಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವೇತನ ಪರಿಷ್ಕರಣೆ ಅವಧಿ ಮುಕ್ತಾಯಗೊಂಡು ಸುಮಾರು ೫ ವರ್ಷಗಳು ಕಳೆದರೂ ಸಹ ಇದುವರೆಗೂ ವೇತನ ಪರಿಷ್ಕರಣೆ ಮಾಡಿರುವುದಿಲ್ಲ.  ತಕ್ಷಣ ಕಾಯಂ ಹಾಗು ಗುತ್ತಿಗೆ ಕಾರ್ಮಿಕರಿಗೆ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿದರು.
   ಕಾರ್ಮಿಕರಿಗೆ ನ್ಯಾಯಸಮ್ಮತವಾಗಿ ಸಿಗಬೇಕಾದ ಶೇ.೧೫ ಎಂಜಿಬಿ, ಶೇ.೩೫ ಪರ್ಕ್ಸ್ ಹಾಗು ಶೇ.೯ ಪೆನ್ಸನ್ ವಂತಿಗೆ ನೀಡುವ ಜೊತೆಗೆ ವೆಲೆಫೇರ್ ಅಲೋಯನ್ಸ್ ಹೆಚ್ಚಿಸುವಂತೆ ಹಾಗು ಕೋವಿಡ್-೧೯ ಸೋಂಕಿಗೆ ಒಳಗಾದ ಕಾರ್ಮಿಕರ ಅವಲಂಬಿತರಿಗೆ ಉದ್ಯೋಗ ಕಲ್ಪಿಸಿಕೊಡುವಂತೆ ಆಗ್ರಹಿಸಿದರು.
    ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಹೋರಾಟದ ನೇತೃತ್ವ ವಹಿಸಿದ್ದರು. ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.  
   ಸೋಮವಾರ ಕಪ್ಪುಪಟ್ಟಿ ಧರಿಸಿ ಹಾಗು ಮಂಗಳವಾರ ಸತ್ಯಾಗ್ರಹ ಮೂಲಕ ಹೋರಾಟ ನಡೆಸಲಾಯಿತು. ಒಟ್ಟು ೩ ದಿನಗಳ ಕಾಲ ನಡೆದ ಹೋರಾಟ ಯಶಸ್ವಿಯಾಗಿ ಮುಕ್ತಾಯಗೊಂಡಿತು.


Tuesday, June 29, 2021

ಕೊರೋನಾ ಲಸಿಕಾ ಕೇಂದ್ರದಲ್ಲಿನ ಗೊಂದಲ ಬಗೆಹರಿಸಿ : ಮನವಿ

    ಭದ್ರಾವತಿ, ಜೂ. ೨೯: ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುವ ಮೂಲಕ ಕೊರೋನಾ ಲಸಿಕೆ ಸಂಬಂಧ ಉಂಟಾಗಿರುವ ಗೊಂದಲ ಬಗೆಹರಿಸುವಂತೆ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ಕೊರೋನಾ ಲಸಿಕೆ ನೀಡುವ ಸಂಬಂಧ ಉಂಟಾಗಿರುವ ಮಾಹಿತಿ ಕೊರತೆಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಲಸಿಕಾ ಕೇಂದ್ರದಲ್ಲಿ ಪ್ರತಿದಿನ ಲಭ್ಯವಿರುವ ಲಸಿಕೆ ಪ್ರಮಾಣ, ಲಸಿಕೆ ನೀಡುವ ದಿನ, ೨ನೇ ಡೋಸ್ ನೀಡುವ ದಿನ, ನಿಗದಿಪಡಿಸಲಾಗಿರುವ ವಯಸ್ಸಿನ ಮಾನದಂಡ ಇತ್ಯಾದಿ ಮಾಹಿತಿ ಸಾರ್ವಜನಿಕರಿಗೆ ತಿಳಿಯುವಂತೆ ಪ್ರಚಾರಪಡಿಸುವ ಮೂಲಕ ಗೊಂದಲ ಬಗೆಹರಿಸುವಂತೆ ಕೋರಿದ್ದಾರೆ.
      ಕೊರೋನಾ ಸೋಂಕು ಇಳಿಮುಖ:
   ತಾಲೂಕಿನ ಸೋಂಕಿನ ಪ್ರಮಾಣ ಬಹುತೇಕ ಇಳಿಮುಖವಾಗಿದ್ದು, ಮಂಗಳವಾರ ಕೇವಲ ೧೮ ಸೋಂಕು ಪತ್ತೆಯಾಗಿದೆ. ಗ್ರಾಮಾಂತರ ಭಾಗದಲ್ಲಿ ೭ ಹಾಗು ನಗರ ಭಾಗದಲ್ಲಿ ೧೧ ಸೋಂಕು ಸೇರಿದಂತೆ ಒಟ್ಟು ೧೮ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಯಾರು ಸಹ ಮೃತಪಟ್ಟಿಲ್ಲ ಎಂಬುದು ಸಮಾಧಾನಕರವಾದ ಸಂಗತಿಯಾಗಿದೆ.