Wednesday, July 7, 2021

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ : ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳಿಗೆ ಆಕ್ರೋಶ

ಸೈಕಲ್ ತುಳಿದು ಚಾಲನೆ ನೀಡಿದ ಶಾಸಕ ಬಿ.ಕೆ ಸಂಗಮೇಶ್ವರ್

ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಬುಧವಾರ ಭದ್ರಾವತಿಯಲ್ಲಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೈಕಲ್ ಜಾಥಾದೊಂದಿಗೆ ಪ್ರತಿಭಟನೆ ನಡೆಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ಸೈಕಲ್ ತುಳಿದು ಚಾಲನೆ ನೀಡಿದರು.
    ಭದ್ರಾವತಿ, ಜು. ೭: ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಬುಧವಾರ ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೈಕಲ್ ಜಾಥಾದೊಂದಿಗೆ ಪ್ರತಿಭಟನೆ ನಡೆಸಲಾಯಿತು.
    ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಮಾಲಾರ್ಪಣೆ ಮಾಡುವ ಜೊತೆಗೆ ಸ್ವತಃ ಸೈಕಲ್ ತುಳಿದು ಚಾಲನೆ ನೀಡಿದರು.
    ಸೈಕಲ್ ಜಾಥಾ ಹಾಲಪ್ಪವೃತ್ತ, ಮಾಧವಚಾರ್ ವೃತ್ತ ಮೂಲಕ ರಂಗಪ್ಪ ವೃತ್ತ ತಲುಪಿತು. ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರಗೌಡ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರಿಂದಾಗಿ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿವೆ. ಅಲ್ಲದೆ ಜನವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತೆ ಮಾಡಿವೆ ಎಂದು ಆರೋಪಿಸಿದರು.
    ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಕಾಂತರಾಜ್, ಚನ್ನಪ್ಪ, ಸೈಯದ್ ರಿಯಾಜ್, ನಗರಸಭೆ ಮಾಜಿ ಸದಸ್ಯೆ ಲಕ್ಷ್ಮೀದೇವಿ, ಕಾಂಗ್ರೆಸ್ ನಗರ ಯುವ ಘಟಕದ ಅಧ್ಯಕ್ಷ ಜಿ. ವಿನೋದ್, ಮುಖಂಡರಾದ ಅಣ್ಣೋಜಿರಾವ್, ದಶರಥಗಿರಿ, ಅಮಿರ್‌ಜಾನ್, ಮುರಳಿಕೃಷ್ಣ, ಜಗದೀಶ್, ಸದಾಶಿವಮೂರ್ತಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Tuesday, July 6, 2021

ಆಶ್ರಯ ಯೋಜನೆಯಡಿ ಬಡವರಿಗೆ ಸೂರು : ಖಾಲಿ ಜಾಗ ಗುರುತಿಸುವಲ್ಲಿ ನಿರ್ಲಕ್ಷ್ಯ

ಶಾಸಕ ಬಿ.ಕೆ ಸಂಗಮೇಶ್ವರ್ ತಹಸೀಲ್ದಾರ್ ಕಚೇರಿ ಅಧಿಕಾರಿಗಳ ವಿರುದ್ಧ ಅಸಮಾಧಾನ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ವಸತಿ ರಹಿತ ಬಡವರಿಗೆ ಮನೆ ನಿರ್ಮಿಸಿಕೊಡುವ ಹಾಗು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ೯೪ಸಿ ಮತ್ತು ೯೪ಸಿಸಿ ಯೋಜನೆಯಡಿ ಹಕ್ಕು ಪತ್ರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
     ಭದ್ರಾವತಿ, ಜು. ೬: ಬಡವರಿಗೆ ಮನೆ ನಿರ್ಮಿಸಿಕೊಡುವ ಸಂಬಂಧ ಖಾಲಿ ಜಾಗ ಸರ್ವೆ ಮಾಡಿ ಆಶ್ರಯ ಸಮಿತಿಗೆ ವರದಿ  ನೀಡುವಂತೆ ಹಲವು ಬಾರಿ ತಿಳಿಸಿದ್ದರೂ ಸಹ ತಹಸೀಲ್ದಾರ್ ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದಾಗಿ ಜನಪ್ರತಿನಿಧಿಗಳು ಕ್ಷೇತ್ರದ ಜನರ ವಿಶ್ವಾಸ ಕಳೆದುಕೊಳ್ಳುವಂತಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
     ಮಂಗಳವಾರ ನಗರಸಭೆ ಕಛೇರಿ ಸಭಾಂಗಣದಲ್ಲಿ ವಸತಿ ರಹಿತ ಬಡವರಿಗೆ ಮನೆ ನಿರ್ಮಿಸಿಕೊಡುವ ಹಾಗು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ೯೪ಸಿ ಮತ್ತು ೯೪ಸಿಸಿ ಯೋಜನೆಯಡಿ ಹಕ್ಕು ಪತ್ರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ನಗರಸಭೆ ವ್ಯಾಪ್ತಿಯ ಬಹುತೇಕ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ಕೆಲವು ಕೊಳಚೆ ಪ್ರದೇಶಗಳಿಗೆ ಇನ್ನೂ ನೀಡಲು ಸಾಧ್ಯವಾಗಿಲ್ಲ. ಕೊಳಚೆ ಪ್ರದೇಶ ಹೊರತುಪಡಿಸಿ ಸರ್ಕಾರಿ ಜಾಗಗಳಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ೯೪ಸಿ ಯೋಜನೆಯಡಿ ಹಾಗು ಗ್ರಾಮಾಂತರ ಪ್ರದೇಶದಲ್ಲಿ ೯೪ಸಿಸಿ ಯೋಜನೆಯಡಿ ಹಕ್ಕು ಪತ್ರ ನೀಡಲಾಗುವುದು. ಈ ಸಂಬಂಧ ಸರ್ವೆ ಮಾಡಿ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
     ನಗರ ವ್ಯಾಪ್ತಿಯಲ್ಲಿ ಆಶಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಖಾಲಿ ಜಾಗ ಗುರುತಿಸುವಲ್ಲಿ ತಹಸೀಲ್ದಾರ್ ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯತನ ವಹಿಸುತ್ತಿರುವುದು ಸರಿಯಲ್ಲ. ಹಲವಾರು ಬಾರಿ ಸಭೆಯಲ್ಲಿ ಈ ಕುರಿತು ಸೂಚಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಜಾಗ ಗುರುತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಸಿದರು.
    ಉಪತಹಸೀಲ್ದಾರ್ ಮಲ್ಲಿಕಾರ್ಜುನಯ್ಯ ಹಾಗು ಕಂದಾಯಾಧಿಕಾರಿ ಪ್ರಶಾಂತ್ ಜಾಗ ಗುರುತಿಸುವಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಸಭೆ ಗಮನಕ್ಕೆ ತಂದರೂ ಸಹ ಸಭೆಯಲ್ಲಿ ಪಾಲ್ಗೊಂಡಿದ್ದ ನಗರಸಭಾ ಸದಸ್ಯರು ಸಹ ಸಮಾಧಾನಗೊಳ್ಳದೆ ಅಸಮಾಧಾನ ವ್ಯಕ್ತಪಡಿಸಿದರು.
     ನಗರಸಭೆ ವತಿಯಿಂದ ನಿರ್ಮಾಣ ಮಾಡಲಾಗುತ್ತಿರುವ ೪೦೦೦ ಗುಂಪು ಮನೆಗಳಿಗೆ ೪೪೦೦ ಅರ್ಜಿಗಳು ಬಂದಿದ್ದು, ಈ ಪೈಕಿ ೨೦೫೦ ಅರ್ಜಿದಾರರು ಆಯ್ಕೆಯಾಗಿ ಶುಲ್ಕ ಪಾವತಿಸಿದ್ದಾರೆ. ಇವರು ಬ್ಯಾಂಕಿನವರೊಂದಿಗೆ ಚರ್ಚಿಸಿ ಮುಂದಿನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕೆಂದರು. ಉಳಿದಂತೆ ೧೯೫೦ ಅರ್ಜಿದಾರರು ಹೊಸದಾಗಿ ಅರ್ಜಿ ಸಲ್ಲಿಸಲು ಇದೀಗ ಅವಕಾಶ ಕಲ್ಪಿಸಲಾಗಿದೆ. ಈ ನಡುವೆ ಈ ಹಿಂದೆ ಅರ್ಜಿ ಸಲ್ಲಿಸದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ತಕ್ಷಣ ಎಲ್ಲೆಡೆ ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳುವಂತೆ ಶಾಸಕರು ಪೌರಾಯುಕ್ತರಿಗೆ ಸೂಚಿಸಿದರು.
   ಸಭೆಯಲ್ಲಿ ಪೌರಾಯುಕ್ತ ಕೆ. ಪರಮೇಶ್, ಇಂಜಿನಿಯರ್ ಪ್ರಸನ್ನಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ, ನಗರಸಭೆ ಇಂಜಿನಿಯರ್ ರಂಗರಾಜಪುರೆ, ನಗರಸಭಾ ಸದಸ್ಯರಾದ ಬಿ.ಟಿ ನಾಗರಾಜ್, ಬಿ.ಕೆ ಮೋಹನ್‌ಕುಮಾರ್, ವಿ. ಕದಿರೇಶ್, ಟಿಪ್ಪುಸುಲ್ತಾನ್, ಸುದೀಪ್‌ಕುಮಾರ್, ಮಣಿ, ಚನ್ನಪ್ಪ, ಜಯಶೀಲ, ಲತಾ ಚಂದ್ರಶೇಖರ್, ಉದಯ್‌ಕುಮಾರ್, ಕಾಂತರಾಜ್, ಜಾರ್ಜ್, ಆರ್. ಮೋಹನ್‌ಕುಮಾರ್, ರಾಜ್‌ಕುಮಾರ್, ಗಂಗಾಧರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Monday, July 5, 2021

ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಭದ್ರಾವತಿಯಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ಖಂಡಿಸಿ  ಜಾತ್ಯಾತೀತ ಜನತಾದಳ ವತಿಯಿಂದ ಶಾರದ ಅಪ್ಪಾಜಿ ನೇತೃತ್ವದಲ್ಲಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜು. ೫: ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ಖಂಡಿಸಿ  ಜಾತ್ಯಾತೀತ ಜನತಾದಳ ವತಿಯಿಂದ ಶಾರದ ಅಪ್ಪಾಜಿ ನೇತೃತ್ವದಲ್ಲಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಮುಖರು, ಕೊರೋನಾ ಪರಿಣಾಮ ಜನರ ಬದುಕು ಅತಂತ್ರವಾಗಿದೆ. ಈ ನಡುವೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಹಾಗು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬದುಕು ಮತ್ತಷ್ಟು ಸಂಕಷ್ಟದಿಂದ ಸಾಗಿಸುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿವೆ ಎಂದು ಆರೋಪಿಸಲಾಯಿತು.
   ತಕ್ಷಣ ಬೆಲೆ ಏರಿಕೆಗೆ ಕಡಿವಾಣ ಹಾಕುವ ಮೂಲಕ ಜನ ಸಾಮಾನ್ಯರು ನೆಮ್ಮದಿಯಾಗಿ ಬದುಕು ಸಾಗಿಸಲು ಅವಕಾಶ ಕಲ್ಪಿಸಿಕೊಡುವಂತೆ ಆಗ್ರಹಿಸುವ ಜೊತೆಗೆ  ಪ್ರಧಾನ ಮಂತ್ರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಪಕ್ಷದ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾ ಸದಸ್ಯರಾದ ಬಸವರಾಜ ಆನೆಕೊಪ್ಪ, ಜಯಶೀಲ, ವಿಜಯ, ಸವಿತ, ಮುಖಂಡರಾದ ಡಿ.ಟಿ ಶ್ರೀಧರ್, ಅಶೋಕ್‌ಕುಮಾರ್, ನಂಜುಂಡೇಗೌಡ, ಗೊಂದಿ ಜಯರಾಂ, ಡಾರ್ವಿನ್, ಬದರಿನಾರಾಯಣ, ಗುಣಶೇಖರ್, ಶಿವರಾಜ್, ವೆಂಕಟೇಶ್ ಉಜ್ಜನಿಪುರ, ಉಮೇಶ್ ಸೇರಿದಂತೆ, ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ  ಪ್ರಮುಖರು ಇನ್ನಿತರರು ಪಾಲ್ಗೊಂಡಿದ್ದರು.

ಪ್ರೀತಿಯಿಂದ ಸಾಕಿದ ಶ್ವಾನ ಅರಣ್ಯ ಇಲಾಖೆಗೆ ನೀಡಿದ ಮಾಲೀಕರು

ಭದ್ರಾವತಿಯಲ್ಲಿ ಪ್ರೀತಿಯಿಂದ ಸಾಕಿದ ೧೬ ತಿಂಗಳ ಲಾಬ್ ಜಾತಿಯ ಶ್ವಾನವನ್ನು ಮಾಲೀಕರು ಉಚಿತವಾಗಿ ಅರಣ್ಯ ಇಲಾಖೆಗೆ ನೀಡುವ ಮೂಲಕ ಮಾನವೀಯತೆ ಮೆರೆದರು.  
    ಭದ್ರಾವತಿ, ಜು. ೫: ಪ್ರೀತಿಯಿಂದ ಸಾಕಿದ ೧೬ ತಿಂಗಳ ಲಾಬ್ ಜಾತಿಯ ಶ್ವಾನವನ್ನು ಮಾಲೀಕರು ಉಚಿತವಾಗಿ ಅರಣ್ಯ ಇಲಾಖೆಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
    ಆಮ್ ಆದ್ಮಿ ಪಾರ್ಟಿ ಪ್ರಮುಖರಾದ ಎಚ್. ರವಿಕುಮಾರ್ ಮತ್ತು ರಮೇಶ್‌ರವರು ಜೊತೆಗೂಡಿ ಸುಮಾರು ೧ ವರ್ಷದ ಶ್ವಾನವನ್ನು ಖರೀದಿಸಿ ಪಾಲನೆ ಮಾಡುತ್ತಿದ್ದರು. ಆದರೆ ಈ ಶ್ವಾನದ ನಿರ್ವಹಣೆ ಕಷ್ಟಕರವಾಗಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.  
   ಶ್ವಾನ ಪಡೆದಿರುವ ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್ ಪತ್ರಿಕೆಗೆ ಮಾಹಿತಿ ನೀಡಿ, ಈ ಶ್ವಾನವನ್ನು ಪೊಲೀಸ್ ಇಲಾಖೆಯ ಶ್ವಾನ ದಳದಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಅರಣ್ಯ ಇಲಾಖೆ ಸಹ ಈ ಶ್ವಾನಕ್ಕೆ ಅಗತ್ಯ ತರಬೇತಿ ನೀಡಿ ಸದ್ಬಳಕೆ ಮಾಡಿಕೊಳ್ಳಲಿದೆ ಎಂದರು.

‘ಡಿ’ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಎಸ್.ಜೆ ಮಹೇಶ್ವರ ನಿಧನ

ಎಸ್.ಜೆ ಮಹೇಶ್ವರ
ಭದ್ರಾವತಿ, ಜು. ೫: ತಾಲೂಕು ಸರ್ಕಾರಿ 'ಡಿ' ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಎಸ್.ಜೆ ಮಹೇಶ್ವರ(೪೩) ಸೋಮವಾರ ನಿಧನ ಹೊಂದಿದರು.
    ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. ಪತ್ನಿ, ಇಬ್ಬರು ಮಕ್ಕಳು ಇದ್ದರು. ಮಹೇಶ್ವರ ತಾಲೂಕಿನ ಅರಬಿಳಚಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 'ಡಿ' ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.
    ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಮಾಜಿ ಅಧ್ಯಕ್ಷ ಎನ್. ಕೃಷ್ಣಪ್ಪ, ನಿಲೇಶ್‌ರಾಜ್ ಹಾಗು ಸರ್ಕಾರಿ ಆಸ್ಪತ್ರೆ 'ಡಿ' ಗ್ರೂಪ್ ನೌಕರರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ನಗರಸಭೆ ನೌಕರ ಶ್ರೀನಿವಾಸ್ ನಿಧನ

ಶ್ರೀನಿವಾಸ್
   ಭದ್ರಾವತಿ, ಜು. ೫: ನಗರಸಭೆ ಕಂದಾಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಶ್ರೀನಿವಾಸ್(೪೬) ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರಿಯರು ಇದ್ದರು. ಇವರ ಅಂತ್ಯಕ್ರಿಯೆ ಶಿವಮೊಗ್ಗ ಶರಾವತಿ ನಗರದಲ್ಲಿರುವ ರುದ್ರಭೂಮಿಯಲ್ಲಿ ನೆರವೇರಿತು. ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್ ಹಾಗು ಕಚೇರಿ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.

ಹೆಣ್ಣು ಚುಕ್ಕೆ ಜಿಂಕೆ ಬೇಟೆಯಾಡಿ ಸಾಗಾಣಿಕೆ : ಓರ್ವನ ಸೆರೆ

ಭದ್ರಾವತಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಾಚರಣೆ


ಹೆಣ್ಣು ಚುಕ್ಕೆ ಜಿಂಕೆ ಬೇಟೆಯಾಡಿ ಸಾಗಾಣಿಕೆ ಮಾಡುತ್ತಿದ್ದ ಓರ್ವನನ್ನು ಭದ್ರಾವತಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವುದು.   
    ಭದ್ರಾವತಿ, ಜು. ೫:  ಹೆಣ್ಣು ಚುಕ್ಕೆ ಜಿಂಕೆ ಬೇಟೆಯಾಡಿ ಸಾಗಾಣಿಕೆ ಮಾಡುತ್ತಿದ್ದ ಓರ್ವನನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವ ಘಟನೆ ನಡೆದಿದೆ.
   ತಾಲೂಕಿನ ತಿಮ್ಲಾಪುರ ಗ್ರಾಮದ ನಿವಾಸಿ ಯೋಗೀಶ್ ನಾಯ್ಕ (೩೪) ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿ ರಬ್ಬರ್‌ಕಾಡು ನಿವಾಸಿ ಷಣ್ಮುಗ(೬೦) ತಲೆಮರೆಸಿಕೊಂಡಿದ್ದಾನೆ.
    ಖಚಿತ ಮಾಹಿತಿ ಆಧಾರದ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಗಟ್ಟಿ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ ಸುಬ್ರಮಣ್ಯ ಹಾಗು ವಲಯ ಅರಣ್ಯಾಧಿಕಾರಿ ಕೆ.ಎಚ್ ಮಂಜುನಾಥ್ ನೇತೃತ್ವದಲ್ಲಿ ಸಿದ್ದಾಪುರ ಶಾಖೆಯ ಅರಣ್ಯ ವ್ಯಾಪ್ತಿಯ ಕಾಳನಕಟ್ಟೆ ಗ್ರಾಮದ ತಮ್ಮಡಿಹಳ್ಳಿ ಎಸ್.ಎಫ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಹೆಣ್ಣು ಚುಕ್ಕೆ ಜಿಂಕೆ ಬೇಟೆಯಾಡಿ ಸಾಗಾಣಿಕೆ ಮಾಡುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ.
    ಮೃತಪಟ್ಟಿರುವ ಹೆಣ್ಣು ಚುಕ್ಕೆ ಜಿಂಕೆ, ಒಂದು ನಾಡ ಬಂದೂಕು ಮತ್ತು ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡು ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
   ಉಪ ವಲಯ ಅರಣ್ಯಾಧಿಕಾರಿಗಳಾದ ವಿಜಯಕುಮಾರ್ ಮಾಳಗಿ, ಬಿ.ಆರ್ ದಿನೇಶ್‌ಕುಮಾರ್, ನವೀನ್‌ಕುಮಾರ್, ಅಣ್ಣನಾಯ್ಕ್ ಮತ್ತು ಅರಣ್ಯ ರಕ್ಷಕರಾದ ನಾಗೇಂದ್ರ, ರಶೀದ್ ಬೇಗ್, ಭಾಸ್ಕರ್, ಅರಣ್ಯ ವೀಕ್ಷಕರಾದ ಸಚಿನ್, ಶಿವು ಮತ್ತು ಸೋನು  ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.