Wednesday, August 4, 2021

ಆಂಧ್ರ ಪ್ರದೇಶದಲ್ಲಿ ಹೆಣ್ಣು ಮಗಳ ಮೇಲೆ ಅತ್ಯಾಚಾರ, ಕೊಲೆ : ಪ್ರತಿಭಟನೆ

ತಪ್ಪಿತಸ್ಥರನ್ನು ಬಂಧಿಸಿ ಗಲ್ಲಿಗೇರಿಸಿ : ಕೃಷ್ಣಾ ನಾಯ್ಕ

ಆಂಧ್ರ ಪ್ರದೇಶದಲ್ಲಿ ಬಣಜಾರ್ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ತಾಲೂಕು ಬಂಜಾರ ಯುವಕರ ಸಂಘದ ಬುಧವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಆಂಧ್ರ ಪ್ರದೇಶದ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
     ಭದ್ರಾವತಿ, ಆ. ೪: ಆಂಧ್ರ ಪ್ರದೇಶದಲ್ಲಿ ಬಣಜಾರ್ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣಾ ನಾಯ್ಕ ಆಗ್ರಹಿಸಿದರು.
    ಬುಧವಾರ ತಾಲೂಕು ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ಆಂಧ್ರ ಪ್ರದೇಶದ ಚಂದ್ರ ಬಾಂಡ್ಯ ತಾಂಡದಲ್ಲಿ ಹೈದ್ರಾಬಾದ್, ಮುಂಬೈಗೆ ವಲಸೆ ಬಂದಂತಹ ಬಣಜಾರ್ ಸಮುದಾಯದ ಹೆಣ್ಣು ಮಗಳನ್ನು ಅಲ್ಲಿನ ಸ್ಥಳೀಯ ಯುವಕರು ಬಲವಂತಾಗಿ ಅರಣ್ಯಕ್ಕೆ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಸುಟ್ಟು ಹಾಕುವ ಮೂಲಕ ಕ್ರೌರ್ಯ ಮೆರೆದಿದ್ದಾರೆ. ಈ ಅತ್ಯಾಚಾರದಲ್ಲಿ ಭಾಗಿಯಾಗಿರುವ ಕಾಮುಕರನ್ನು ತಕ್ಷಣ ಬಂಧಿಸಿ ಗಲ್ಲಿಗೇರಿಸಬೇಕೆಂದರು.
    ಈ ಪ್ರಕರಣವನ್ನು ಆಂಧ್ರ ಪ್ರದೇಶದ ಗೃಹ ಸಚಿವರು ಗಂಭಿರವಾಗಿ ಪರಿಗಣಿಸಬೇಕು. ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಒದಗಿಸುವ ಜೊತೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಹೆಣ್ಣು ಮಗಳ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.
      ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಆಂಧ್ರ ಪ್ರದೇಶದ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ತಾಲೂಕು ಬಣಜಾರ ಸಂಘದ ಅಧ್ಯಕ್ಷ ಪ್ರೇಮ್‌ಕುಮಾರ್, ಪ್ರಮುಖರಾದ ಬಿಜೆಪಿ ಮಂಡಲ ಕಾರ್ಯದರ್ಶಿ ಹನುಮಂತನಾಯ್ಕ, ಚಂದು, ಪ್ರವೀಣಕುಮಾರ್, ಓಂಕಾರನಾಯ್ಕ, ನಾಗಾನಾಯ್ಕ, ಮಂಜುನಾಯ್ಕ, ಶಂಕರನಾಯ್ಕ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Tuesday, August 3, 2021

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ಮನವಿ

    ಭದ್ರಾವತಿ, ಆ. ೩: ವಿವಿಧ ಬೇಡಿಕೆಗಳನ್ನು ಈಡೇರಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
    ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಳೆದ ೪ ತಿಂಗಳಿನಿಂದ ಕಮಿಷನ್ ಹಣ ಬಿಡುಗಡೆ ಮಾಡಿರುವುದಿಲ್ಲ. ಇದರಿಂದಾಗಿ ಅಂಗಡಿ ಮಾಲೀಕರು ತೊಂದರೆ ಅನುಭವಿಸುವಂತಾಗಿದೆ ತಕ್ಷಣ ಬಿಡುಗಡೆ ಮಾಡುವುದು. ಅಲ್ಲದೆ ಕೇರಳ, ಗೋವಾ ಮತ್ತು ಮಹಾರಾಷ್ಟ್ರ ಮಾದರಿಯಂತೆ ಕಮಿಷನ್ ನೀಡುವುದು. ಜೊತೆಗೆ ಇ.ಕೆ.ವೈ.ಸಿ ಮಾಡಿರುವ ಹಣ ಸಹ ಬಿಡುಗಡೆಗೊಳಿಸುವಂತೆ ಮಾನವಿ ಮಾಡಲಾಗಿದೆ.
    ಈ ಹಿಂದೆ ಸಚಿವರಾಗಿದ್ದ ಕೆ. ಗೋಪಾಲಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿರುವಂತೆ ಕೊರೋನಾ ಸೋಂಕಿನಿಂದ ಮೃತಪಟ್ಟ ನ್ಯಾಯಬಲೆ ಅಂಗಡಿ ಮಾಲೀಕರಿಗೆ ೨ ಲಕ್ಷ ರು. ಪರಿಹಾರ ನೀಡುವುದು. ಸಗಟು ಮಳಿಗೆಗಳಿಂದ ತೂಕದಲ್ಲಿ ವಂಚನೆ ನಡೆಯುತ್ತಿದ್ದು, ಇದರಿಂದಾಗಿ ಈ ನ್ಯಾಯಬೆಲೆ ಅಂಗಡಿ ಮಾಲೀಕರು ಬೆಲೆ ತೆರುವಂತಾಗಿದೆ. ಈ ಹಿನ್ನಲೆಯಲ್ಲಿ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಕೋರಲಾಗಿದೆ.
    ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು ಎಂದು ಸಹ ಕಾರ್ಯದರ್ಶಿ ಸಿದ್ದಲಿಂಗಯ್ಯ ತಿಳಿಸಿದ್ದಾರೆ.

ಆ.೪ರಂದು ಅಭಿನಂದನೆ, ಸನ್ಮಾನ ಕಾರ್ಯಕ್ರಮ

ಭದ್ರಾವತಿ, ಆ. ೩: ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಆ.೪ರಂದು ಸಂಜೆ ೪ ಗಂಟೆಗೆ ಅಭಿನಂದನೆ ಮತ್ತು ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಕೊರೋನಾ ವಾರಿಯರ್ಸ್‌ಗಳಿಗೆ ಸನ್ಮಾನ ಹಾಗು ನಗರಸಭೆ ನೂತನ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಅಭಿನಂದನೆ ಮತ್ತು ಸಮಾಜದ ಸಂಸ್ಥಾಪಕಿ ರತ್ನಮ್ಮ ಶ್ರೀನಿವಾಸ ಮೂರ್ತಿ ಹಾಗು ಗೌರವಾಧ್ಯಕ್ಷೆ ವಸುಧಾ ಮುಕುಂದ್ ಅವರಿಗೆ ಶ್ರದ್ದಾಂಜಲಿ ನಡೆಯಲಿದೆ.
ಸಂಘದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯದರ್ಶಿ ಶೋಭಾ ಗಂಗಾರಾಜ್, ಖಜಾಂಚಿ ಜಯಂತಿ ನಾಗರಾಜ್ ಶೇಟ್ ಉಪಸ್ಥಿತರಿರುವರು.

ಭದ್ರೆ ಪ್ರತಿ ಬಾರಿ ಪೂರ್ಣ ಪ್ರಮಾಣದಲ್ಲಿ ತುಂಬಲಿ, ಕೊನೆಯ ಭಾಗದ ರೈತರಿಗೂ ನೀರು ತಲುಪಲಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಕೆ ಸಂಗಮೇಶ್ವರ್ ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲ್ಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗಾ ಪೂಜೆ ನೆರವೇರಿಸಿದರು.
     ಭದ್ರಾವತಿ, ಆ. ೩: ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ ಪ್ರತಿ ವರ್ಷ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಮೂಲಕ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಲಿ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
      ಅವರು ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲ್ಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗಾ ಪೂಜೆ ನೆರವೇರಿಸಿ ಮಾತನಾಡಿದರು.
    ನಾನು ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಪ್ರತಿ ಬಾರಿ ಸಹ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತಿರುವುದು ನನ್ನ ಸೌಭಾಗ್ಯವಾಗಿದೆ. ಜಲಾಶಯದ ಅಚ್ಚಕಟ್ಟು ವ್ಯಾಪ್ತಿಯಲ್ಲಿರುವ ಹಾಗು ಕೊನೆ ಭಾಗದ ರೈತರು ನೆಮ್ಮದಿಯಿಂದ ಬದುಕುವಂತಾಗಬೇಕು.  ಈ ಬಾರಿ ಜಲಾಶಯ ೧೫ ದಿನಗಳ ಮೊದಲೇ ಭರ್ತಿಯಾಗಿರುವುದು ಸಂತಸವನ್ನುಂಟು ಮಾಡಿದೆ. ಇದೆ ರೀತಿ ಪ್ರತಿ ವರ್ಷ ಸಹ ಜಲಾಶಯ ಭರ್ತಿಯಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
     ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ, ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ಸೇರಿದಂತೆ ಸರ್ವಧರ್ಮ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಪ್ರತಿ ಬಾರಿ ಬಾಗಿನ ಸಮರ್ಪಣೆ ಕಾರ್ಯಕ್ರಮ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ಉಂಟು ಮಾಡುತ್ತಿರುವುದು ವಿಶೇಷವಾಗಿದೆ.
     ಶಾಸಕರ ಕುಟುಂಬ ವರ್ಗದವರಾದ ಸಹೋದರರಾದ ಬಿ.ಕೆ ಜಗನ್ನಾಥ್, ಬಿ.ಕೆ ಮೋಹನ್, ಬಿ.ಕೆ ಶಿವಕುಮಾರ್, ಪುತ್ರರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಬಿ.ಎಂ ಮಂಜುನಾಥ್, ಬಿ.ಎಂ ರವಿಕುಮಾರ್, ನಂದೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ತಾಲೂಕು ಛಲವಾದಿ ಸಮಾಜದ ಅಧ್ಯಕ್ಷ ಚನ್ನಪ್ಪ, ನಗರಸಭೆ ಮತ್ತು ತಾಲೂಕು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.

Monday, August 2, 2021

ಮೂರು ಸರ್ಕಾರಗಳು ಬದಲಾದರೂ ಮುಗಿಯದ ಕಾಮಗಾರಿ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಬದಲಿ ಸೇತುವೆ.

* ಅನಂತಕುಮಾರ್
ಭದ್ರಾವತಿ: ಮೂರು ಸರ್ಕಾರಗಳು ಬದಲಾದರೂ ಸಹ ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಬದಲಿ ಸೇತುವೆ ಕಾಮಗಾರಿ ಇಂದಿಗೂ ಮುಕ್ತಾಯಗೊಂಡಿಲ್ಲ.
      ನಗರದ ಹೃದಯ ಭಾಗದಲ್ಲಿರುವ ಸುಮಾರು ೧೬೦ ವರ್ಷಗಳಿಗೂ ಹಳೇಯದಾದ ಭದ್ರಾ ಸೇತುವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಈ ಸೇತುವೆಗೆ ಬದಲಾಗಿ ಹೊಸ ಸೇತುವೆ ನಿರ್ಮಾಣ ಮಾಡುವಂತೆ ಹಲವಾರು ವರ್ಷಗಳಿಂದ ನಿರಂತರವಾದ ಹೋರಾಟಗಳು ನಡೆದ ಪರಿಣಾಮ ಕೊನೆಗೂ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಯಿತು.
      ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಡಾ. ಎಚ್.ಸಿ ಮಹಾದೇವಪ್ಪ ೨೦೧೮ರಲ್ಲಿ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ಅಂದಾಜು ೨೧.೩೪ ಕೋ. ರು. ವೆಚ್ಚದಲ್ಲಿ ೨೪೦.೫ ಮೀಟರ್ ಉದ್ದದ ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.  ಮೆ/. ಎಸ್‌ಪಿಎಲ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್, ಚೆನ್ನೈ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ನಿರ್ವಹಣಾ ಸಲಹೆಗಾರರಾಗಿ ಮೆ/. ಸತ್ರ ಇನ್ಫ್ರಾಸ್ಟ್ರಕ್ಚರ್ ಮ್ಯಾನೇಜ್‌ಮೆಂಟ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಅವರನ್ನು ನೇಮಕಗೊಳಿಸಲಾಗಿದೆ. ಸೇತುವೆ ನಿರ್ಮಾಣಗೊಂಡ ನಂತರ ೫ ವರ್ಷಗಳ ವರೆಗೆ ನಿರ್ವಹಣಾ ಜವಾಬ್ದಾರಿಯನ್ನು ಗುತ್ತಿಗೆದಾರರಿಗೆ ವಹಿಸಲಾಗಿದೆ.
       ವಿಳಂಬ ಕಾಮಗಾರಿ:
    ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಟ್ಟು ೩ ಸರ್ಕಾರಗಳು ಬದಲಾದರೂ ಸಹ ಕಾಮಗಾರಿ ಮುಕ್ತಾಯಗೊಂಡಿಲ್ಲ. ಪ್ರಸ್ತುತ ಶೇ.೮೦ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಸೇತುವೆಯನ್ನು ಕಮಾನು ಮಾದರಿಯಲ್ಲಿ ವಿಶಿಷ್ಟವಾಗಿ ನಿರ್ಮಿಸಲಾಗುತ್ತಿದೆ. ಎರಡು ಬದಿಗೂ ಸಂಪರ್ಕ ಕಲ್ಪಿಸುವ ಕೊನೆಯ ಹಂತದ ಕಾಮಗಾರಿ ಮಾತ್ರ ಬಾಕಿ ಉಳಿದಿದೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಈ ಬಗ್ಗೆ ಗಮನ ಗಮನ ಹರಿಸಬೇಕಾಗಿದೆ. ಕೋವಿಡ್ ೩ನೇ ಅಲೆ ಆರಂಭಗೊಳ್ಳುವಷ್ಟರಲ್ಲಿ ಕಾಮಗಾರಿ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
     ವಾಹನ ದಟ್ಟನೆ ಅಧಿಕಗೊಳ್ಳುವ ಸಾಧ್ಯತೆ:
    ಈಗಾಗಲೇ ನಗರದ ಒಳ ಭಾಗದ ಹಾಗು ಹೊರ ಭಾಗದ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಅಭಿವೃದ್ದಿಗೊಳ್ಳುತ್ತಿದ್ದು, ಅಲ್ಲದೆ ದಿನದಿಂದ ದಿನಕ್ಕೆ ನಗರದ ಬೆಳವಣಿಗೆ ಸಹ ವಿಸ್ತಾರಗೊಳ್ಳುತ್ತಿದೆ. ಇದರಿಂದಾಗಿ ನಗರದಲ್ಲಿ ವಾಹನ ದಟ್ಟನೆ ಮತ್ತಷ್ಟು ಹೆಚ್ಚಾಗಲಿದೆ. ಈ ಹಿನ್ನಲೆಯಲ್ಲಿ ಸೇತುವೆ ಕಾಮಗಾರಿಯನ್ನು ತಕ್ಷಣ ಮುಕ್ತಾಯಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಬೇಕಾಗಿದೆ.

ಕೋವಿಡ್ ಹಿನ್ನಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ. ಕಾಮಗಾರಿ ಟೆಂಡರ್ ಮೊತ್ತದಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ಕಾಮಗಾರಿ ನಡೆಸಲು ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಂಡು ಜಾಗವನ್ನು ಮಾಲೀಕರಿಂದ ಸ್ವಾಧೀನಕ್ಕೆ ಪಡೆಯಬೇಕಾಗಿದೆ. ಇದಕ್ಕೆ ತಗಲುವ ಪರಿಹಾರ ಮೊತ್ತವನ್ನು ಮಾಲೀಕರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ನೀಡಲಾಗುವುದು. ಈಗಾಗಲೇ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ೩-೪ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.
                                                          - ಲಿಂಗರಾಜು, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕೆಆರ್‌ಡಿಸಿಎಲ್
                                                                        (ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ವ್ಯಾಪ್ತಿ)


          ಅದ್ಭುತ ಸಾಮರ್ಥ್ಯದ ಭದ್ರಾ ಸೇತುವೆ :
     ಅಂದಿನ ವೆಂಕಿಪುರ(ಭದ್ರಾವತಿ)ದಲ್ಲಿ ಮೈಸೂರು ರಾಜ್ಯದ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ೧೮೬೦ರಲ್ಲಿ ಸುಮಾರು ೭೪,೯೯೭ ರೂ. ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಾಣ ಮಾಡಲಾಯಿತು. ಈ ಸೇತುವೆ ನಿರ್ಮಾಣ ದಿಂದಾಗಿ ೧೯೧೭ರಲ್ಲಿ ವಿಐಎಸ್‌ಎಲ್ ಮತ್ತು ೧೯೩೭ರಲ್ಲಿ ಎಂಪಿಎಂ ಕಾರ್ಖಾನೆಗಳ ಸ್ಥಾಪನೆಗೆ ಸಾಧ್ಯವಾಯಿತು.
       ಭದ್ರಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಸೇತುವೆಯ ಸಾಮಾರ್ಥ್ಯದ ಬಗ್ಗೆ ಯಾರು ಸಹ ಮಾತಾಡುವಂತಿಲ್ಲ. ಇದರ ಸಾಮಾರ್ಥ್ಯ ಇಂದಿಗೂ ಬೆರಗುಗೊಳಿಸುತ್ತದೆ.  ಈ ಸೇತುವೆಗೆ ಪರ್ಯಾಯವಾಗಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ನಿರ್ಮಿಸಿರುವ ಮತ್ತೊಂದು ಸೇತುವೆ ಪ್ರತಿವರ್ಷ ಮಳೆಗಾಲದಲ್ಲಿ ಭದ್ರಾ ಜಲಾಶಯದಿಂದ ನೀರು ಬಿಟ್ಟಾಗ ಸಂಪೂರ್ಣವಾಗಿ ಮುಳುಗಡೆಯಾಗುತ್ತಿದೆ. ಈ ಸಂದರ್ಭದಲ್ಲಿ ಭದ್ರಾ ಸೇತುವೆ ಮೇಲೆಯೇ ಎಲ್ಲಾ ವಾಹನಗಳು ಸಂಚರಿಸುವುದು ಅನಿವಾರ್ಯವಾಗಿ ಬಿಡುತ್ತದೆ. ಇಂದು ವಾಹನಗಳ ಸಂಖ್ಯೆ ಮಿತಿ ಮೀರಿದೆ. ಕಣ್ಣರಳಿಸಿದಷ್ಟು ಸೇತುವೆ ಮೇಲೆ ವಾಹನಗಳ ದಟ್ಟಣೆ. ಇದನ್ನು ನೋಡಿದಾಗ ಅರ್ಥವಾಗುತ್ತದೆ ಈ ಸೇತುವೆ ಅದೆಷ್ಟು ಸಾಮರ್ಥ್ಯವನ್ನು ತನ್ನೊಳಗೆ ಅಡಗಿಸಿಟ್ಟುಕೊಂಡಿದೆ ಎಂಬುದು. ಅಂದಿನ ಕಲ್ಪನೆಯೇ ಬೇರೆ, ಇಂದಿನ ಕಲ್ಪನೆಯೇ ಬೇರೆ ಭವಿಷ್ಯದಲ್ಲಿ ಇಂದಿನವರಿಗೆ ಈ ರೀತಿಯ ಸೇತುವೆ ನಿರ್ಮಾಣದ ಕಲ್ಪನೆಯೂ ಸಹ ಬರುವುದಿಲ್ಲ ಎಂದರೆ ತಪ್ಪಾಗಲಾರದು.  

ವಿಜಯಲಕ್ಷ್ಮೀ ನಿಧನ

ವಿಜಯಲಕ್ಷ್ಮೀ
ಭದ್ರಾವತಿ, ಆ. ೨:   ಹಳೇನಗರದ ಒಎಸ್‌ಎಂ ರಸ್ತೆ ನಿವಾಸಿ ವಿಜಯಲಕ್ಷ್ಮೀ(೭೫) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
ಓರ್ವ ಪುತ್ರನನ್ನು ಹೊಂದಿದ್ದರು. ಇವರ ನಿಧನಕ್ಕೆ ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಇವರ ಅಂತ್ಯಕ್ರಿಯೆ ಮಧ್ಯಾಹ್ನ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.

ಬಿ.ವಿ ಗಿರೀಶ್ ಸ್ಮರಣಾರ್ಥ ನೆನಪು ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ

ಭದ್ರಾವತಿ ಪದ್ಮನಿಲಯ ಹೋಟೆಲ್ ಸುನಂದ ಹಾಲ್‌ನಲ್ಲಿ ಬಿ.ವಿ ಗಿರೀಶ್ ಅಭಿಮಾನಿಗಳ ಬಳಗದಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಾಮಾಜಿಕ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸ್ಮರಣಾರ್ಥ ಸವಿ ನೆನಪಿನ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.  
     ಭದ್ರಾವತಿ, ಆ. ೧: ನಗರದ ಪದ್ಮನಿಲಯ ಹೋಟೆಲ್ ಸುನಂದ ಹಾಲ್‌ನಲ್ಲಿ ಬಿ.ವಿ ಗಿರೀಶ್ ಅಭಿಮಾನಿಗಳ ಬಳಗದಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಾಮಾಜಿಕ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸ್ಮರಣಾರ್ಥ ಸವಿ ನೆನಪಿನ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.  
    ಬಿ.ವಿ ಗಿರೀಶ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಶಾಸಕರು, ಗಿರೀಶ್ ಅವರ ಹೋರಾಟದ ಸ್ಮರಿಸಿದರು.
     ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಸಿದ್ದಾಂತ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಬಸವರಾಜ ಬಿ. ಆನೇಕೊಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಕಸಾಪ ತಾಲೂಕು ಅಧ್ಯಕ್ಷ ಅಪೇಕ್ಷ ಮಂಜುನಾಥ್, ಕರ್ನಾಟಕ ಭೋವಿ ನಿಗಮದ ನಿರ್ದೇಶಕ ಜಿ. ಆನಂದಕುಮಾರ್, ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ, ಮುಖಂಡರಾದ ಧರ್ಮರಾಜ್, ಕೆ. ಮಂಜುನಾಥ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಬಿ.ವಿ ಗಿರೀಶ್ ಕುಟುಂಬಸ್ಥರಾದ ತಂದೆ ವೆಂಕಟೇಶ್, ತಾಯಿ ಲಕ್ಷ್ಮಮ್ಮ, ದೇವಿಕಾ ಗಿರೀಶ್, ಅಂಕಿತ ಮತ್ತು ಧನುಷ್,  ಬಿ.ವಿ ಗಿರೀಶ್ ಅಭಿಮಾನಿಗಳ ಬಳಗ ಗೌರವಾಧ್ಯಕ್ಷ ಶಿವಕುಮಾರ್, ಅಧ್ಯಕ್ಷ ವಿವೇಕ್ ಪ್ರಶಾಂತ್, ಕಾರ್ಯಾಧ್ಯಕ್ಷರಾದ ರಾಘವೇಂದ್ರ, ಸಂದೇಶ್, ಪ್ರಧಾನ ಕಾರ್ಯದರ್ಶಿ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.