Wednesday, August 11, 2021

ಭದ್ರಾವತಿಯಲ್ಲಿ ಒಂದೇ ದಿನ ೧೪ ಸೋಂಕು : ಇಬ್ಬರು ಬಲಿ

     ಭದ್ರಾವತಿ, ಆ. ೧೧: ತಾಲೂಕಿನಲ್ಲಿ ಕೊರೋನಾ ಸೋಂಕು ಪುನಃ ಏರಿಕೆಯಾಗುತ್ತಿದ್ದು, ಒಂದೇ ದಿನ ೧೪ ಸೋಂಕು ಪತ್ತೆಯಾಗುವುದರೊಂದಿಗೆ ಇಬ್ಬರು ಬಲಿಯಾಗಿದ್ದಾರೆ.
     ಮಂಗಳವಾರ ಕೇವಲ ೪ ಸೋಂಕು ಪತ್ತೆಯಾಗಿದ್ದು, ಬುಧವಾರ ನಗರ ಹಾಗು ಗ್ರಾಮಾಂತರ ಭಾಗದಲ್ಲಿ ತಲಾ ೭ ರಂತೆ ಒಟ್ಟು ೧೪ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಇದರಿಂದಾಗಿ ಕೊರೋನಾ ೩ನೇ ಅಲೆ ವ್ಯಾಪಿಸಿರುವ ಆತಂಕ ಎದುರಾಗಿದ್ದು, ತಾಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕು. ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ.  

ಬೋರಮ್ಮ ಹೊನ್ನಯ್ಯ ನಿಧನ

ಬೋರಮ್ಮ ಹೊನ್ನಯ್ಯ
     ಭದ್ರಾವತಿ, ಆ. ೧೧: ನಗರಸಭೆ ೨೮ನೇ ವಾರ್ಡ್ ನಗರಸಭಾ ಸದಸ್ಯ, ಸಂಗೊಳ್ಳಿ ರಾಯಣ್ಣ ಯುವ ವೇದಿಕೆ ಅಧ್ಯಕ್ಷ ಕಾಂತರಾಜ್‌ರವರ ತಾಯಿ ಬೋರಮ್ಮ ಹೊನ್ನಯ್ಯ(೭೨) ಬುಧವಾರ ನಿಧನ ಹೊಂದಿದರು.
     ಮೃತರು ಕಾಂತರಾಜ್ ಸೇರಿದಂತೆ ೩ ಗಂಡು ಹಾಗು ೫ ಹೆಣ್ಣು ಮಕ್ಕಳು, ಸೊಸೆ, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
     ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹಾಗು ನಗರಸಭಾ ಸದಸ್ಯರು ಮತ್ತು ಕುರುಬ ಸಮಾಜದ ಮುಖಂಡರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Tuesday, August 10, 2021

ಅಳಿವಿನಂಚಿನಲ್ಲಿರುವ ಓತಿಕ್ಯಾತ : ಆಕರ್ಷಕ ಚಿತ್ರಗಳು

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಲ್ಲಿ ಕಂಡು ಬಂದ ಹಸಿರು ಬಣ್ಣದ ಓತಿಕ್ಯಾತ ಚಲನವಲನಗಳನ್ನು ಆಕರ್ಷಕವಾಗಿ ಸೆರೆ ಹಿಡಿದಿರುವ ಮಂಜುನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಚಿತ್ರ.
     ಭದ್ರಾವತಿ, ಆ. ೧೦: ಇತ್ತೀಚಿನ ಕೆಲವು ವರ್ಷಗಳಿಂದ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಅಳಿವಿನಂಚಿನಲ್ಲಿರುವ ಜೀವಿಗಳ ಪೈಕಿ ಓತಿಕ್ಯಾತ ಸಹ ಒಂದಾಗಿದೆ. ಇಂತಹ ಅಪರೂಪದ ಜೀವಿಯ ಚಲನವಲನಗಳನ್ನು ಆಕರ್ಷಕವಾಗಿ ಸೆರೆ ಹಿಡಿಯುವ ಮೂಲಕ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ  ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ಇಲಾಖೆಯ ನೌಕರ ಮಂಜುನಾಥ್ ಗಮನ ಸೆಳೆದಿದ್ದಾರೆ.
     ಬಯಲು ಸೀಮೆಯಲ್ಲಿ ಹೆಚ್ಚಾಗಿ ಕಂಡು ಬರುವ ಸರಿಸೃಪಗಳ ಜಾತಿಗೆ ಸೇರಿದ ಓತಿಕ್ಯಾತ ಕುರಿತು ಇಂದಿನ ಯುವ ಪೀಳಿಗೆಗೆ ಸರಿಯಾದ ಮಾಹಿತಿಯೇ ಇಲ್ಲ. ಇದಕ್ಕೆ ಕಾರಣ ಓತಿಕ್ಯಾತಗಳು ಅಳಿವಿನಂಚಿನಲ್ಲಿವೆ. ಅದರಲ್ಲೂ ನಗರ ಪ್ರದೇಶದಲ್ಲಿ ಅಪರೂಪವಾಗಿ ಕಂಡು ಬರುವ ಇವುಗಳನ್ನು ವೀಕ್ಷಿಸುವುದೇ ಒಂದು ರೀತಿಯ ವಿಸ್ಮಯವಾಗಿದೆ.
     ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಲ್ಲಿ ಕಂಡು ಬಂದ ಹಸಿರು ಬಣ್ಣದ ಓತಿಕ್ಯಾತ ಚಲನವಲನಗಳನ್ನು ಆಕರ್ಷಕವಾಗಿ ಸೆರೆ ಹಿಡಿದಿರುವ ಮಂಜುನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್‌ಕುಮಾರ್ ಸೇರಿದಂತೆ ಇನ್ನಿತರರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸುನಿಲ್ ನಿವಾಸಕ್ಕೆ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆಯಾದ ಭದ್ರಾವತಿ ಜೈಭೀಮಾ ನಗರದ ನಿವಾಸಿ, ನಗರಸಭೆ ಗುತ್ತಿಗೆ ಪೌರ ಕಾರ್ಮಿಕ ಸುನಿಲ್ ನಿವಾಸಕ್ಕೆ ಭಾರತೀಯ ಜನತಾ ಪಕ್ಷದ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
     ಭದ್ರಾವತಿ, ಆ. ೧೦: ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆಯಾದ ಜೈಭೀಮಾ ನಗರದ ನಿವಾಸಿ, ನಗರಸಭೆ ಗುತ್ತಿಗೆ ಪೌರ ಕಾರ್ಮಿಕ ಸುನಿಲ್ ನಿವಾಸಕ್ಕೆ ಭಾರತೀಯ ಜನತಾ ಪಕ್ಷದ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
    ಕೋವಿಡ್-೧೯ರ ಹಿನ್ನಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಗೊಳಿಸಿದ್ದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಗುತ್ತಿಗೆ ಪೌರ ಕಾರ್ಮಿಕ ಸುನಿಲ್ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ಎಲ್ಲೆಡೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು.
ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜನಪ್ರತಿನಿಧಿಗಳು ಸುನಿಲ್ ನಿವಾಸಕ್ಕೆ ಆಗಮಿಸಿ ಸಾಂತ್ವನ ಹೇಳುವ ಮೂಲಕ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು. ಇದೀಗ ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ಭೇಟಿ ನೀಡಿ ಸಾಂತ್ವನ ಹೇಳಿದರು.
    ಬಿಜೆಪಿ ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಗಣೇಶ್‌ರಾವ್ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ೨೦೦ ಮಂದಿಗೆ ಕೋವಿಡ್ ಲಸಿಕೆ

ಕರ್ನಾಟಕ ರಾಜ್ಯ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಧರ್ಮಶಾಸ್ತ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸುಮಾರು ೨೦೦ ಮಂದಿಗೆ ಕೋವಿಡ್-೧೯ ಲಸಿಕೆ ಹಾಕಿಸಲಾಯಿತು. ಕಾರ್ಯಕ್ರಮವನ್ನು ನಗರಸಭಾ ಸದಸ್ಯ ಜಾರ್ಜ್ ಮತ್ತು ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಆ. ೧೦: ಕರ್ನಾಟಕ ರಾಜ್ಯ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ನಗರದ ತರೀಕೆರೆ ರಸ್ತೆಯಲ್ಲಿರುವ ಧರ್ಮಶಾಸ್ತ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸುಮಾರು ೨೦೦ ಮಂದಿಗೆ ಕೋವಿಡ್-೧೯ ಲಸಿಕೆ ಹಾಕಿಸಲಾಯಿತು.
    ನಗರಸಭಾ ಸದಸ್ಯ ಜಾರ್ಜ್, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಗೌರವಾಧ್ಯಕ್ಷ ಜಿ. ಸುರೇಶ್, ಸಲಹೆಗಾರ ಶಿವಣ್ಣಗೌಡ, ನಿರ್ದೇಶಕ ಅಂತೋಣಿ ಕ್ರೂಸ್, ಕಾರ್ಯದರ್ಶಿ ನಾರಾಯಣಸ್ವಾಮಿ, ಸಹ ಕಾರ್ಯದರ್ಶಿ ಮಂಜುನಾಥ್, ವಿಭಾಗೀಯ ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಮಂಜುನಾಥ್, ಶ್ರೀ ಧರ್ಮಶಾಸ್ತ್ರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಆರ್. ಮುನಿರಾಜು ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, August 9, 2021

ಕೆಪಿಸಿಸಿ ಸಾಮಾಜಿಕ ಜಾಲತಾಣಕ್ಕೆ ನೂತನ ಪದಾಧಿಕಾರಿಗಳ ನೇಮಕ

ಶಿವಮೊಗ್ಗ ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣದ ಭದ್ರಾವತಿ ತಾಲೂಕು ಪದಾಧಿಕಾರಿಗಳು ನೇಮಕಗೊಂಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.
   ಭದ್ರಾವತಿ, ಆ. ೯: ಶಿವಮೊಗ್ಗ ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣದ ನೂತನ ತಾಲೂಕು ಪದಾಧಿಕಾರಿಗಳು ನೇಮಕಗೊಂಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.
   ತಾಲೂಕು ಅಧ್ಯಕ್ಷರಾಗಿ ಸದಾಶಿವಮೂರ್ತಿ, ಉಪಾಧ್ಯಕ್ಷರಾಗಿ ವಿನೋದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತಬ್ರೇಶ್ ಖಾನ್ ನೇಮಕಗೊಂಡಿದ್ದಾರೆ.
    ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೇಮಕಾತಿ ಆದೇಶ ಪತ್ರ ನೀಡಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.  ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣ ಅಧ್ಯಕ್ಷ ಎನ್.ಡಿ ಪ್ರವೀಣ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ವಿವಿಧ ಬೇಡಿಕೆ ಈಡೇರಿಕೆಗೆ ನಗರಸಭೆ ಪೌರಾಯುಕ್ತರಿಗೆ ಮನವಿ

ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಭದ್ರಾವತಿ ನಗರಸಭೆ ಪೌರಾಯುಕ್ತ ಕೆ. ಪರಮೇಶ್‌ರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  
    ಭದ್ರಾವತಿ, ಆ. ೯:  ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಪೌರಾಯುಕ್ತ ಕೆ. ಪರಮೇಶ್‌ರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  
     ಜಿಲ್ಲಾಧಿಕಾರಿಗಳ ವಿಶೇಷ ಅನುದಾನದಲ್ಲಿ ೧ ಕೋ. ರು. ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಬಡವರಿಗೆ ನ್ಯಾಯಬೆಲೆ ಅಂಗಡಿ ಮೂಲಕ ಉಚಿತ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದ್ದು, ಇದುವರೆಗೂ ಶೇ.೪೦ರಷ್ಟು ಮಾತ್ರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. ಉಳಿದ ಶೇ.೬೦ರಷ್ಟು ಆಹಾರ ಸಾಮಗ್ರಿಗಳನ್ನು ತಕ್ಷಣ ವಿತರಿಸುವಂತೆ ಒತ್ತಾಯಿಸಿದ್ದಾರೆ.
    ವಾರ್ಡ್ ನಂ. ೩೨ರ ಫಿಲ್ಟರ್‌ಶೆಡ್‌ನಲ್ಲಿ ಚರಂಡಿ, ರಸ್ತೆ  ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿದ್ದು ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗು ಇದೆ ವಾರ್ಡ್‌ನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಮಂದಿ ಬರುತ್ತಿದ್ದು, ಆರೋಗ್ಯ ಕೇಂದ್ರದ ಮುಂಭಾಗ ಮಳೆ, ಬಿಸಿಲಿನಿಂದ ರಕ್ಷಣೆ ಪಡೆಯಲು ಮತ್ತು ಕುಳಿತುಕೊಳ್ಳಲು ಯಾವುದೇ ಸೌಲರ್ಭ್ಯಗಳು ಇಲ್ಲದ ಕಾರಣ ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಈ ಹಿನ್ನಲೆಯಲ್ಲಿ ಮೇಲ್ಛಾವಣಿ ವ್ಯವಸ್ಥೆ ಮತ್ತು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿದ್ದಾರೆ.