Sunday, August 22, 2021

ವಾರ್ಡ್ ನಂ.೨೯ರ ಚುನಾವಣೆ : ಆ.೨೩ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

೩ ಪಕ್ಷಗಳಿಂದ ಅಭ್ಯರ್ಥಿಗಳು ಘೋಷಣೆ, ಬಿಜೆಪಿ ಅಭ್ಯರ್ಥಿಯಾಗಿ ರಮಾ ವೆಂಕಟೇಶ್

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮಾ ವೆಂಕಟೇಶ್ ಆಯ್ಕೆಯಾಗಿದ್ದು, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಸೋಮವಾರ ಅಭ್ಯರ್ಥಿಯನ್ನು ಅಭಿನಂದಿಸುವ ಮೂಲಕ ಅಧಿಕೃತವಾಗಿ ಘೋಷಿಸಿದರು.
    ಭದ್ರಾವತಿ, ಆ. ೨೨: ನಗರಸಭೆ ವಾರ್ಡ್ ನಂ.೨೯ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಆ.೨೩ರ ಸೋಮವಾರ ಕೊನೆಯ ದಿನವಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ೩ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿವೆ.
    ಕಾಂಗ್ರೆಸ್ ಪಕ್ಷದಿಂದ ನ್ಯಾಯವಾದಿ ಲೋಯಿತಾ ನಂಜಪ್ಪ, ಜೆಡಿಎಸ್ ಪಕ್ಷದಿಂದ ಹಾಲಿ ನಗರಸಭಾ ಸದಸ್ಯ ಅನಿಲ್‌ಕುಮಾರ್ ಅವರ ಪತ್ನಿ ಅರ್. ನಾಗರತ್ನ ಹಾಗು ಬಿಜೆಪಿ ಪಕ್ಷದಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ರಮಾ ವೆಂಕಟೇಶ್ ಅವರನ್ನು ಕಣಕ್ಕಿಳಿಸಲು ಮುಂದಾಗಿವೆ. ೩ ಪಕ್ಷಗಳು ಸಹ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿರುವುದು ವಿಶೇಷವಾಗಿದೆ.
    ಭಾನುವಾರ ಸಂಜೆ ಜನ್ನಾಪುರ ಬಬ್ಬೂರು ಕಮ್ಮೆ ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಸಮ್ಮುಖದಲ್ಲಿ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎಂ. ಪ್ರಭಾಕರ್, ಪ್ರಮುಖರಾದ ಆರ್.ಎಸ್. ಶೋಭಾ, ಎಂ. ಮಂಜುನಾಥ್, ಚಂದ್ರಪ್ಪ ಸೇರಿದಂತೆ ಇನ್ನಿತರರು ವಾರ್ಡ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ. ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶಕ್ತಿಮೀರಿ ಶ್ರಮಿಸಬೇಕೆಂದು ಕರೆ ನೀಡಿದರು.
    ಅಭ್ಯರ್ಥಿ ರಮಾ ವೆಂಕಟೇಶ್ ಮಾತನಾಡಿ, ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ಆತ್ಮ ವಿಶ್ವಾಸ ಹೊಂದಿದ್ದೇನೆ. ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.
    ಶಕ್ತಿ ಕೇಂದ್ರದ ಅಧ್ಯಕ್ಷ ನವೀನ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಹನುಮಂತನಾಯ್ಕ, ರೂಪನಾಗರಾಜ್, ಶೈಲಜಾ ರಾಮಕೃಷ್ಣ, ಗಾಯತ್ರಿ ಹಾಗು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
    ಜೆಡಿಎಸ್ ಅಭ್ಯರ್ಥಿಯಿಂದ ಆರ್. ನಾಗರತ್ನ ಈಗಾಗಲೇ ವಾರ್ಡ್ ವ್ಯಾಪ್ತಿಯಲ್ಲಿ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ರಾಷ್ಟ್ರೀಯ ನಾಯಕರ ಚಿಂತನೆ, ಆದರ್ಶಗಳು ಒಂದು ಪಕ್ಷಕ್ಕೆ ಸೀಮಿತವಾಗಬಾರದು

ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯಲ್ಲಿ ಡಾ. ಬಿ.ಜಿ ಧನಂಜಯ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸದ್ಭಾವನಾ ದಿನದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.
    ಭದ್ರಾವತಿ : ಉದಾತ್ತ ಮತ್ತು ಒಳ್ಳೆಯ ಚಿಂತನೆಗಳು ಯಾವ ಮೂಲದಿಂದ ಬಂದರೂ ಸಹ ಅದನ್ನು ಸ್ವೀಕರಿಸುವುದೇ ಭಾರತೀಯತೆ. ಇದು ಭಾರತೀಯರ ಉದಾತ್ತ ಗುಣ ಎಂಬುದನ್ನು ಮಾಜಿ ಪ್ರಧಾನಿ ದಿವಂಗತ ರಾಜೀವ್‌ಗಾಂಧಿ ಅವರು ತೋರಿಸಿಕೊಟ್ಟಿದ್ದರು ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಹೇಳಿದರು.
    ಅವರು ಕಾಲೇಜಿನಲ್ಲಿ ರಾಷ್ಟ್ರೀಯ ಸದ್ಭಾವನಾ ದಿನದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
    ಏಕತೆ ಮತ್ತು ಸಮಗ್ರತೆಗೆ ವಿಶೇಷ ಒತ್ತುನೀಡಿ ಮಾದರಿ ಆಡಳಿತ ನೀಡುವ ಜೊತೆಗೆ ರಾಷ್ಟ್ರೀಯ ನಾಯಕರ ಚಿಂತನೆ ಮತ್ತು ಆದರ್ಶಗಳು ಒಂದು ಪಕ್ಷಕ್ಕೆ ಸೀಮಿತವಾಗಿರಬಾರದು ಎಂಬುದನ್ನು ತೋರಿಸಿಕೊಟ್ಟಿದ್ದರು.
    ಡಿಜಿಟಲ್ ತಂತ್ರಜ್ಞಾನದತ್ತ ಯುವಕರನ್ನು ಆಕರ್ಷಿಸುವಲ್ಲಿ ಕಾರಣಕರ್ತರಾಗುವ ಜೊತೆಗೆ ಅಲ್ಪ ಕಾಲದಲ್ಲಿಯೇ ಎಲ್ಲಾ ನಾಯಕರನ್ನು ಆಕರ್ಷಿಸಿ ದೇಶಕ್ಕೆ ತಾಂತ್ರಿಕ ಸ್ಪರ್ಶನೀಡಿದ ಅಪರೂಪದ ರಾಜಕೀಯ ಮುತ್ಸದ್ದಿ ಯಾಗಿದ್ದರು. ವೈಜ್ಞಾನಿಕ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಆತ್ಮವಿಶ್ವಾಸ ಮತ್ತು ಭರವಸೆಯ ಕನಸ ಬಿತ್ತಿದ್ದರು. ಇಂತಹ ಮಹಾನ್ ಪುರುಷರ ಆದರ್ಶಗಳನ್ನು ಪಾಲಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
    ರೋವರ‍್ಸ್ ಮತ್ತು ರೇಜರ‍್ಸ್ ಸಂಚಾಲಕ ಕೆ.ಬಿ ರೇವಣ ಸಿದ್ದಪ್ಪ, ಉಪನ್ಯಾಸಕ ಡಾ. ತಿಪ್ಪೇಶ್ ಸೇರಿದಂತೆ ಕಾಲೇಜಿನ ಉಪನ್ಯಾಸಕ ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೊದಲ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

    ಭದ್ರಾವತಿ, ಆ. ೨೨: ನಗರದ ನ್ಯೂಟೌನ್ ಸರ್ಕಾರಿ ವಿಐಎಸ್‌ಎಸ್‌ಜೆ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿನ ಮೊದಲನೇ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
    ೩ ವರ್ಷ ಅವಧಿಯ ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಮತ್ತು ಮೆಟಲರ್ಜಿಕಲ್ ಇಂಜಿನಿಯರಿಂಗ್ ವೃತ್ತಿ ವಿಷಯಗಳಿಗೆ ತಲಾ ೬೦+೩ ಸ್ಥಾನಗಳು ಮೀಸಲಿವೆ.
    ಎಸ್‌ಎಸ್‌ಎಲ್‌ಸಿ/ಸಿಬಿಎಸ್‌ಇ/ಐಸಿಎಸ್‌ಇ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ೩೫ ಅಂಕಗಳೊಂದಿಗೆ ತೇರ್ಗಡೆ ಹೊಂದಿರುವವರು ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಪಡೆಯಲು ಅರ್ಹರಾಗಿದ್ದು, ಐಟಿಐ ಹಾಗು ಪಿಯುಸಿ(ವಿಜ್ಞಾನ) ಪಾಸ್ ಆದ ವಿದ್ಯಾರ್ಥಿಗಳಿಗೆ ನೇರವಾಗಿ ೩ನೇ ಸೆಮಿಸ್ಟರ್ ಪ್ರವೇಶಕ್ಕೆ ಅವಕಾಶವಿದೆ.
    ಅರ್ಜಿ ಸಲ್ಲಿಸಲು ಆ. ೨೫ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೯೯೮೬೦೭೨೬೯೭ ಅಥವಾ ೮೨೭೭೪೯೮೪೭೧ ಸಂಖ್ಯೆ ಕರೆ ಮಾಡಬಹುದಾಗಿದೆ.

Saturday, August 21, 2021

ಪ್ರವೇಶಾತಿ


ಭದ್ರಾವತಿ ವಿಐಎಸ್‌ಎಸ್‌ಜೆ ಪಾಲಿಟೆಕ್ನಿಕ್‌ನಲ್ಲಿ ಪ್ರವೇಶಾತಿ ಅವಧಿ ವಿಸ್ತರಣೆ


ಹೆಚ್ಚುವರಿ ಶುಲ್ಕ ವಸೂಲಾತಿ ನಿಲ್ಲಿಸಿ : ಖಾಸಗಿ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ಚರಿಕೆ

ಸಾರ್ವಜನಿಕರ ದೂರು, ಎಎಪಿ ಪಕ್ಷದ ಹೋರಾಟಕ್ಕೆ ಸ್ಪಂದನೆ

ಭದ್ರಾವತಿಯಲ್ಲಿ ಅನುದಾನ ಹಾಗು ಅನುದಾನ ರಹಿತ ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ಪಡೆಯದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶಿಸಿರುವುದು.
    ಭದ್ರಾವತಿ, ಆ. ೨೧: ಶಿಕ್ಷಣ ಸಂವಿಧಾನ ಬದ್ಧವಾದ ಮೂಲಭೂತ ಹಕ್ಕು,  ಸಮಾಜದ ಎಲ್ಲಾ ವರ್ಗದವರಿಗೂ ಸುಲಭವಾಗಿ ಲಭಿಸುವಂತಾಗಬೇಕೆಂಬ ಆಶಯದೊಂದಿಗೆ ಹೋರಾಟ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ ಈ ನಿಟ್ಟಿನಲ್ಲಿ ಒಂದು ಹಂತದಲ್ಲಿ ಯಶಸ್ಸು ಸಾಧಿಸಿದೆ.
    ಖಾಸಗಿ ಶಾಲೆಗಳು ಶಾಲಾ ಶುಲ್ಕದ ನೆಪದಲ್ಲಿ ನಡೆಸುತ್ತಿರುವ ಅಕ್ರಮಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಎಎಪಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಕೋವಿಡ್-೧೯ರ ಪರಿಣಾಮ ಸಮಾಜದಲ್ಲಿ ಉಂಟಾಗಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.
    ಕಳೆದ ಸುಮಾರು ೨ ವರ್ಷಗಳಿಂದ ಕೋವಿಡ್-೧೯ ಮಹಾಮಾರಿಯಿಂದಾಗಿ ಪ್ರಪಂಚದಾದ್ಯಂತ ಜನರ ಬದುಕು ಅದರಲ್ಲೂ ಬಡ ಹಾಗು ಮಧ್ಯಮ ವರ್ಗದವರ ಬದುಕು ತೀರ ಸಂಕಷ್ಟಕ್ಕೆ ಒಳಗಾಗಿದೆ. ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಖಾಸಗಿ ಶಾಲೆಗಳು ಶಾಲಾ ಶುಲ್ಕದ ನೆಪದಲ್ಲಿ ಹೆಚ್ಚುವರಿ ಹಣ ವಸೂಲಾತಿ ಮಾಡುವ ಮೂಲಕ ಶೋಷಣೆ ನಡೆಸುತ್ತಿವೆ. ಈ ನಡುವೆ ಕೇವಲ ಬೋಧನಾ ಶುಲ್ಕ ಮಾತ್ರ ಶೇ.೭೦ರಷ್ಟು ಮಾತ್ರ ಪಡೆದುಕೊಳ್ಳಲು ಸರ್ಕಾರವೇ ಆದೇಶಿಸಿದ್ದರೂ ಸಹ ಖಾಸಗಿ ಶಾಲೆಗಳು ವಸೂಲಾತಿಯಲ್ಲಿ ತೊಡಗಿವೆ. ಆನ್‌ಲೈನ್ ತರಗತಿ ನೆಪದಲ್ಲಿ ಹೆಚ್ಚುವರಿ ಹಣ ಪಡೆಯುವುದು. ಬಾಕಿ ಹಣ ಪಾವತಿಸಿದ ನಂತರ ವರ್ಗಾವಣೆ ಪತ್ರ ಕೊಡುವುದಾಗಿ ಬೆದರಿಕೆ ಹಾಕುವುದು ಇತ್ಯಾದಿ ಶೋಷಣೆಗಳು ನಡೆಯುತ್ತಿವೆ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದ್ದವು. ಅಲ್ಲದೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹಾಗು ತಹಸೀಲ್ದಾರ್ ಅವರಿಗೆ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಮನವಿಗಳು ಸಹ ಸಲ್ಲಿಕೆಯಾಗಿದ್ದವು.
    ಈ ನಡುವೆ ಎಎಪಿ ಸಹ ನಿರಂತರವಾಗಿ ಹೋರಾಟ ನಡೆಸಿದ ಪರಿಣಾಮ ಇದೀಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುದಾನ ಹಾಗು ಅನುದಾನ ರಹಿತ ಖಾಸಗಿ ಶಾಲೆಗಳು ಸರ್ಕಾರ ನಿಗದಿಪಡಿಸಿರುವ ಶುಲ್ಕ ಹೊರತುಪಡಿಸಿ ಹೆಚ್ಚುವರಿ ಶುಲ್ಕ ಪಡೆಯದೆ ಕೇವಲ ಬೋಧನಾ ಶುಲ್ಕ ಶೇ.೭೦ರಷ್ಟು ಮಾತ್ರ ಪಡೆದುಕೊಳ್ಳುವಂತೆ ಆದೇಶಿಸಿದ್ದಾರೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ವಿಐಎಸ್‌ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ಕೇಂದ್ರ ಉಕ್ಕು ಸಚಿವರಿಗೆ ಜೆಡಿಯು ಮನವಿ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಕೇಂದ್ರ ಉಕ್ಕು ಸಚಿವ ಆರ್.ಪಿ.ಸಿ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ಭದ್ರಾವತಿ, ಆ. ೨೧: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಕೇಂದ್ರ ಉಕ್ಕು ಸಚಿವ ಆರ್.ಪಿ.ಸಿ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ನಗರದ ನಿವಾಸಿಗಳಾದ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಹಾಗು ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಾಬು ದೀಪಕ್ ಕುಮಾರ್‌ರವರು ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಸಂಬಂಧ ಕೇಂದ್ರ ಸಚಿವರಿಗೆ ಒತ್ತಾಯಿಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಮಹಿಮ ಜೆ. ಪಟೇಲ್‌ರವರು ಜೆಡಿಯು ಪಕ್ಷದವರೇ ಆದ ಉಕ್ಕು ಸಚಿವ ಆರ್.ಪಿ.ಸಿ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸುವ ಮೂಲಕ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಂತೆ ಆಗ್ರಹಿಸಿದ್ದಾರೆ.
    ಪಕ್ಷದ ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್, ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್, ರಾಜ್ಯ ಸಭಾ ಮಾಜಿ ಸದಸ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ ತ್ಯಾಗಿ, ಕರ್ನಾಟ ರಾಜ್ಯ ಉಸ್ತುವಾರಿ ಸಂಜಯ್ ಝಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಧನಂಜಯ, ಉಪಾಧ್ಯಕ್ಷ ಸುಭಾಷ್ ಕಪಾಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕೇಂದ್ರ ಸಚಿವರು ತಕ್ಷಣ ಮನವಿಗೆ ಪೂರಕವಾಗಿ ಸ್ಪಂದಿಸಿ ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೆ ಮುಂದಾಗಬೇಕು. ಯುವ ಘಟಕದ ನೇತೃತ್ವದಲ್ಲಿ ಪುನಃ ಸಚಿವರನ್ನು ಭೇಟಿ ಮಾಡಿ ಕಾರ್ಖಾನೆ ವಾಸ್ತವಾಂಶಗಳನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಹಾಗು ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಾಬು ದೀಪಕ್ ಕುಮಾರ್‌ರವರು ತಿಳಿಸಿದ್ದಾರೆ.