Sunday, September 5, 2021

ವಾರ್ಡ್ ನಂ.೨೯ ಚುನಾವಣೆ : ಸೆ.೬ರಂದು ಮತ ಎಣಿಕೆ

ಭದ್ರಾವತಿ, ಸೆ. ೫: ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಮತ ಎಣಿಕೆ ಸೋಮವಾರ ಬೆಳಿಗ್ಗೆ ೮ ಗಂಟೆಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
    ನಗರಸಭೆ ೩೫ ವಾರ್ಡ್‌ಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದ ಸಂದರ್ಭದಲ್ಲಿ ವಾರ್ಡ್ ನಂ.೨೯ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಹೃದಯಾಘಾತದಿಂದ ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ಉಳಿದ ೩೪ ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. ಫಲಿತಾಂಶ ಸಹ ಪ್ರಕಟಗೊಂಡಿದೆ. ಉಳಿದಂತೆ ವಾರ್ಡ್ ನಂ.೨೯ಕ್ಕೆ ಸೆ.೩ರಂದು ಮತದಾನ ನಡೆದಿದೆ. ಸೆ.೬ರ ಸೋಮವಾರ ಮತ ಎಣಿಕೆ ನಡೆಯಲಿದೆ.
    ಈಗಾಗಲೇ ಮತ ಎಣಿಕೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಬಿ.ಜಿ ಲೋಯಿತಾ ನಂಜಪ್ಪ, ಜೆಡಿಎಸ್ ಪಕ್ಷದಿಂದ ಆರ್. ನಾಗರತ್ನ ಮತ್ತು ಬಿಜೆಪಿ ಪಕ್ಷದಿಂದ ರಮಾ ವೆಂಕಟೇಶ್ ಸ್ಪರ್ಧಿಸಿದ್ದು, ೩ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳಿಗ್ಗೆ ೧೦ ಗಂಟೆಯೊಳಗೆ ಫಲಿತಾಂಶ ಹೊರಬೀಳಲಿದೆ. ಯಾರಿಗೆ ವಿಜಯ ಮಾಲೆ ಎಂಬುದನ್ನು ಕಾದು ನೋಡಬೇಕಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಪ್ರಬಲ ಸ್ಪರ್ಧೆ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಮಕ್ಕಳ ಉಜ್ವಲ ಭವಿಷ್ಯದಿಂದ ದೇಶದ ಸಂವಿಧಾನ ಉಳಿವು ಸಾಧ್ಯ : ಶಾಸಕ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು.
    ಭದ್ರಾವತಿ, ಸೆ. ೫: ಅಮೂಲ್ಯವಾದ ಸೇವೆ ನೀಡುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು.  ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಶಿಕ್ಷಕರು ಸಮರ್ಪಕವಾಗಿ ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಭಾನುವಾರ ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.  
    ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ ದೇವರುಗಳಾಗಿದ್ದಾರೆ. ಜ್ಞಾನ ಸಂಪತ್ತು ಎಂಬುದು ಅಂಗಡಿಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ವಸ್ತು ಅಲ್ಲ. ಬದಲಾಗಿ ಶ್ರದ್ಧೆ, ಶ್ರಮದಿಂದ ಪಡೆಯುವುದಾಗಿದೆ ಎಂದರು.
ಸಮಾಜ ಸುಧಾರಣೆಯಲ್ಲಿ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದಾಗಿದ್ದು, ಶಿಕ್ಷಕರಿಗೆ ನಿವೃತ್ತಿ ಎಂಬುದಿಲ್ಲ. ಶಿಕ್ಷಕರು ಎಂದಿಗೂ ಅಮರ. ತಮ್ಮ ಜವಾಬ್ದಾರಿಗಳನ್ನು ಅರಿತು ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಹಾದಿಯಲ್ಲಿ ಎಲ್ಲರೂ ಸಾಗಿ ಶಿಕ್ಷಕ ವೃತ್ತಿಯ ಘನತೆ, ಗೌರವಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳಬೇಕೆಂದು ಕರೆ ನೀಡಿದರು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಮೇಶ್,  ಕೃಷ್ಣ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ, ನಗರಸಭಾ ಸದಸ್ಯರಾದ ಸರ್ವಮಂಗಳ, ರಿಯಾಜ್ ಅಹ್ಮದ್, ಮುಖಂಡರಾದ ಎಸ್.ಎಸ್ ಭೈರಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹರಿಬಾಬು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಕಾರ್ಯದರ್ಶಿ ಎಸ್.ಪಿ ಮೋಹನ್, ನಗರಸಭೆ ಪರಿಸರ ಇಂಜಿನಿಯರ್ ಪ್ರಭಾಕರ್, ಶಿಕ್ಷಕರ ಸಂಘದ ಮುಖಂಡರಾದ ಹನುಮಂತು, ಸುಮತಿ ಕಾರಂತ್, ಎಂ.ಸಿ ಆನಂದ್, ಸಿ. ಜಯಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು. ಸುಮತಿ ಕಾರಂತ್ ಸಂಗಡಿಗರು ಪ್ರಾರ್ಥಿಸಿದರು. ಬಿಆರ್‌ಸಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವೈ.ಗಣೇಶ್ ವಂದಿಸಿದರು.  ತಾಲೂಕು ಕ್ರೀಡಾಧಿಕಾರಿ ಪ್ರಭು ಕಾರ್ಯಕ್ರಮ ನಿರೂಪಿಸಿದರು.  ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಒಟ್ಟು ೮೦ ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಯಿತು

ಅಂತರಂಗದ ಶುದ್ದಿಯಿಂದ ಒಳ್ಳೆಯ ಸಮಾಜ : ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

ಭದ್ರಾವತಿ ತಾಲೂಕಿನ ಸುಕ್ಷೇತ್ರ ಶೀ ಶೀಲಸಂಪಾದನಾಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಹಾ ತಪಸ್ವಿ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ ೨೩ ತಿಂಗಳ ತಪೋನುಷ್ಠಾನ ಸಮಾರೋಪ ಹಾಗು ದಾಸೋಹ ಮಂದಿರದ ಉದ್ಘಾಟನಾ ವೇದಿಕೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನೆರವೇರಿಸಿದರು.
    ಭದ್ರಾವತಿ, ಸೆ. ೫: ಲೋಕಾ ಕಲ್ಯಾಣಾರ್ಥವಾಗಿ ಸ್ವಾಮೀಜಿಗಳು ಕೈಗೊಳ್ಳುವ ತಪಸ್ಸಿನಲ್ಲಿ ಅದ್ಭುತವಾದ ಶಕ್ತಿ ಅಡಗಿದ್ದು, ಇದನ್ನು ಭಕ್ತರು ಮನಗಾಣಬೇಕು. ಪ್ರತಿಯೊಬ್ಬರಲ್ಲೂ ಅಂತರಂಗದ ಶುದ್ದಿಯಾಗಬೇಕಾಗಿದೆ. ಆಗ ಮಾತ್ರ ಒಳ್ಳೆಯ ಕುಟುಂಬದೊಂದಿಗೆ ಒಳ್ಳೆಯ ಸಮಾಜ ರೂಪುಗೊಳ್ಳಲು ಸಾಧ್ಯ ಎಂದು ತುಮಕೂರು ಸುಕ್ಷೇತ್ರ ಶ್ರೀ ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದರು.
    ಶ್ರೀಗಳು ಭಾನುವಾರ ತಾಲೂಕಿನ ಸುಕ್ಷೇತ್ರ ಶೀ ಶೀಲಸಂಪಾದನಾಮಠದಲ್ಲಿ ಮಹಾ ತಪಸ್ವಿ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ ೨೩ ತಿಂಗಳ ತಪೋನುಷ್ಠಾನ ಸಮಾರೋಪ ಹಾಗು ದಾಸೋಹ ಮಂದಿರದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.
    ನಮ್ಮಲ್ಲಿನ ಅಂತರಂಗ ಹಾಗು ಬಹಿರಂಗ ಎರಡರಲ್ಲೂ ಶುದ್ಧತೆ ಕಾಣಬೇಕು. ಆದರೆ ಅಂತರಂಗದ ಶುದ್ಧತೆಯಲ್ಲಿ ನಾವು ಹಿನ್ನಡೆಯನ್ನು ಕಾಣುತ್ತಿದ್ದೇವೆ. ಅಂತರಂಗದ ಶುದ್ದತೆಗೆ ಉತ್ತಮ ಪರಿಸರ ಅಗತ್ಯವಾಗಿದೆ. ಇಂತಹ ಪರಿಸರ ನಾಡಿನ ಮಠ ಮಂದಿರಗಳು ಹೊಂದಿವೆ ಎಂಬುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ದೇಶದಲ್ಲಿ ಮಠ-ಮಂದಿರಗಳ ಕೊಡುಗೆ ಬಹುದೊಡ್ಡಾಗಿದೆ. ಮಠ-ಮಂದಿರಗಳ ಪರಂಪರೆ ದೇಶದ ಭದ್ರಾ ಬುನಾದಿಗೆ ನಾಂದಿಯಾಗಿದೆ. ಭಾರತ ಪ್ರಪಂಚದ ಇತರೆ ರಾಷ್ಟ್ರಗಳೊಂದಿಗೆ ವಿಶಿಷ್ಟವಾಗಿ ಗುರುತಿಸಿಕೊಳ್ಳಲು ಈ ಪರಂಪರೆ ಕಾರಣವಾಗಿದೆ ಎಂಬುದನ್ನು ಯಾರು ಮರೆಯಬಾರದು. ಜಗಜ್ಯೋತಿ ಬಸವಣ್ಣನವರ ಆದರ್ಶಗಳಂತೆ ಅಕ್ಕ ನಾಗಮ್ಮನವರು ನೆಲೆಸಿರುವ ಶ್ರೀ ಕ್ಷೇತ್ರದಲ್ಲಿ ಶೀಲ ಸಂಪಾದನೆ ಮಹತ್ವ ಸಾರುತ್ತಿರುವ ೧೯ನೇ ಪೀಠಾಧಿಪತಿಗಳಾದ ಸಿದ್ದಲಿಂಗ ಸ್ವಾಮೀಜಿಯವರು ಚಿಕ್ಕ ವಯಸ್ಸಿನಲ್ಲಿಯೇ ಆಧ್ಯಾತ್ಮಿಕ ಗುಣಗಳನ್ನು ಮೈಗೂಡಿಸಿಕೊಂಡು ನಾಡಿನ ಮಹಾನ್ ತಪ್ಪಸ್ವಿಗಳ ಅನುಗ್ರಹದೊಂದಿಗೆ ಲೋಕ ಕಲ್ಯಾಣಾರ್ಥವಾಗಿ ಹಲವು ಬಾರಿ ತಪೋನುಷ್ಠಾನ ಕೈಗೊಳ್ಳುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಇಂತಹ ಶ್ರೀಗಳ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕಾಗಿದೆ ಎಂದರು.
    ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಮಠ-ಮಂದಿರಗಳ ಮಹತ್ವವನ್ನು ಅಂದಿನ ಕಾಲದಲ್ಲಿಯೇ ಸ್ವಾಮಿ ವಿವೇಕಾನಂದರು ಜಗತ್ತಿಗೆ ತಿಳಿಸಿಕೊಟ್ಟಿದ್ದರು. ಎಲ್ಲಿಯವರೆಗೆ ಮಠ-ಮಂದಿರಗಳು ಇರುತ್ತವೆಯೋ ಅಲ್ಲಿಯವರೆಗೂ ಈ ದೇಶ ಸುಭದ್ರವಾಗಿರುತ್ತದೆ. ಸಮಾಜಕ್ಕೆ ಮಠ-ಮಂದಿಗಳ ಕೊಡುಗೆ ಅನನ್ಯವಾಗಿದೆ. ಇಂತಹ ಮಠ-ಮಂದಿರಗಳ ಅಭಿವೃದ್ಧಿಗೆ ನಾವೆಲ್ಲರೂ ಕೈಜೋಡಿಸಬೇಕು. ಶ್ರೀ ಕ್ಷೇತ್ರದ ಸಿದ್ದಲಿಂಗಸ್ವಾಮೀಜಿಯವರು ಮಠದ ಬೆಳವಣಿಗೆಗೆ ಹೆಚ್ಚಿನ ಶ್ರಮ ವಹಿಸಿದ್ದು, ಅಲ್ಲದೆ ಶಿಕಾರಿಪುರದ ಮಠದ ಜವಾಬ್ದಾರಿಯನ್ನು ಸಹ ವಹಿಸಿಕೊಂಡಿದ್ದಾರೆ. ಶ್ರೀಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು.
    ತಾವರೆಕೆರೆ ಶಿಲಾಮಠ ಹಾಗು ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಹುಣಸಘಟ್ಟ ಶ್ರೀ ಗುರು ಹಾಲಸ್ವಾಮಿ ಮಠದ ಶ್ರೀ ಗುರು ಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶಿವಮೊಗ್ಗ ಶ್ರೀ ಬಸವ ಕೇಂದ್ರ ಹಾಗು ಚಿಕ್ಕಮಗಳೂರು ಬಸವ ಮಂದಿರದ ಡಾ. ಬಸವ ಮರುಳಸಿದ್ದ ಸ್ವಾಮೀಜಿ, ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಾಲಸ್ವಾಮಿ ವಿರಕ್ತಮಠದ ಡಾ. ಶ್ರೀ ಬಸವ ಜಯಚಂದ್ರ ಸ್ವಾಮೀಜಿ, ತಾವರೆಕೆರೆ ಶ್ರೀ ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ ಮತ್ತು ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ಕೈಗಾರಿಕೋದ್ಯಮಿ ಬಿ.ಕೆ ನಂಜುಂಡಶೆಟ್ಟರ್, ನಿವೃತ್ತ ಐಎಎಸ್ ಅಧಿಕಾರಿ ಎಸ್. ದಯಾಶಂಕರ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್, ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ ವೀರಭದ್ರಪ್ಪ, ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ ಯೋಗೇಶ್ ಉಪಸ್ಥಿತರಿದ್ದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಡೈರಿ ಆಯುವೇರ್ದಿಕ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಹಿರೇಮಠ್ ಸ್ವಾಗತಿಸಿದರು. ಸಮನ್ವಯ ಕಾಶಿ ನಿರೂಪಿಸಿದರು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಮಂಗೋಟೆ ರುದ್ರೇಶ್, ಜಯಕರ್ನಾಟಕ ಸಂಘಟನೆಯ ತ್ಯಾಗರಾಜ್, ಗ್ರಾ.ಪಂ. ಮಾಜಿ ಸದಸ್ಯ ಡಿ.ಟಿ ಶಶಿಕುಮಾರ್, ತಾವರಘಟ್ಟ, ಸಿಂಗನಮನೆ ಸೇರಿದಂತೆ ಸುತ್ತಮುತ್ತಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗು ಗ್ರಾಮಸ್ಥರು, ರಾಜ್ಯದ ವಿವಿಧೆಡೆಗಳಿಂದ ನೂರಾರು ಭಾಗವಹಿಸಿದ್ದರು.  


ಭದ್ರಾವತಿ ತಾಲೂಕಿನ ಸುಕ್ಷೇತ್ರ ಶೀ ಶೀಲಸಂಪಾದನಾಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಹಾ ತಪಸ್ವಿ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ ೨೩ ತಿಂಗಳ ತಪೋನುಷ್ಠಾನ ಸಮಾರೋಪದಲ್ಲಿ ತುಮಕೂರು ಸುಕ್ಷೇತ್ರ ಶ್ರೀ ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಶ್ರೀಗಳಿಗೆ ಗೌರವ ಸಮರ್ಪನೆ ಸಲ್ಲಿಸಿದರು.

Saturday, September 4, 2021

ಮರಗಳ್ಳತನ ಪ್ರಕರಣ : ವಲಯ ಅರಣ್ಯಾಧಿಕಾರಿ ವಿರುದ್ಧ ದೂರು

ಭದ್ರಾವತಿ ಚನ್ನಗಿರಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿರುವ ಮರಗಳ್ಳತನ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಿ, ನಿರ್ಲಕ್ಷ್ಯ ವಹಿಸಿರುವ ವಲಯ ಅರಣ್ಯಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಾಮನಗಟ್ಟಿ ಅವರಿಗೆ ದೂರು ಸಲ್ಲಿಸಿದ್ದಾರೆ.
    ಭದ್ರಾವತಿ, ಸೆ. ೪: ಚನ್ನಗಿರಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿರುವ ಮರಗಳ್ಳತನ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಿ, ನಿರ್ಲಕ್ಷ್ಯ ವಹಿಸಿರುವ ವಲಯ ಅರಣ್ಯಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಾಮನಗಟ್ಟಿ ಅವರಿಗೆ ದೂರು ಸಲ್ಲಿಸಿದ್ದಾರೆ.
    ಚನ್ನಗಿರಿ ವಲಯ ವ್ಯಾಪ್ತಿಗೆ ಬರುವ ಅರಣ್ಯದಲ್ಲಿ ಭದ್ರಾವತಿ-ಚನ್ನಗಿರಿ ಹೆದ್ದಾರಿ ಪಕ್ಕದಲ್ಲಿಯೇ ಲಕ್ಷಾಂತರ ರು. ಬೆಲೆಬಾಳುವ ೧೩ ಸಾಗುವಾನಿ ಮರಗಳನ್ನು ಆ.೨೫ರಂದು ರಾತ್ರಿ ಕಡಿತಲೆ ಮಾಡಿ ಕಳವು ಮಾಡಲಾಗಿದೆ. ಈ ವಿಚಾರ ಆ.೨೭ರಂದು ತಮ್ಮ ಗಮನಕ್ಕೂ ತರಲಾಗಿದೆ. ಆದರೆ ಈ ಭಾಗದ ವಲಯ ಅರಣ್ಯಾಧಿಕಾರಿ ಸತೀಶ್ ಅವರು ನಿರ್ಲಕ್ಷ್ಯತನದಿಂದ ವರ್ತಿಸುತ್ತಿದ್ದು, ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸದಿರುವುದು ಕಂಡು ಬರುತ್ತಿದೆ. ಹೆದ್ದಾರಿ ಪಕ್ಕದಲ್ಲಿಯೇ ಈ ರೀತಿಯ ಘಟನೆ ನಡೆದಿರುವಾಗ ಸುಮಾರು ೪೫ ಸಾವಿರ ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಅರಣ್ಯದಲ್ಲಿರುವ ಬೆಲೆಬಾಳಲುವ ಮರಗಳ ರಕ್ಷಣೆ ಇವರಿಂದ ಅಸಾಧ್ಯ ಎಂಬುದು ಕಂಡು ಬರುತ್ತಿದೆ.
    ಸತೀಶ್ ಅವರು ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸದಿರುವ ಬಗ್ಗೆ ಸಾಕಷ್ಟು ಲೋಪಗಳಿದ್ದು, ಅಲ್ಲದೆ ಇವರ ವರ್ತನೆ ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಈ ಹಿನ್ನಲೆಯಲ್ಲಿ ಸತೀಶ್ ಅವರನ್ನು ತಕ್ಷಣ ಅಮಾನತುಗೊಳಿಸಿ ಈ ಮರಗಳ್ಳತನ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.    

ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಭದ್ರಾವತಿ ತಾಲೂಕಿನ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಪೊಲೀಸ್ ಹಾಗು ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸುತ್ತಿರುವುದು.
    ಭದ್ರಾವತಿ, ಸೆ. ೪: ತಾಲೂಕಿನ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
    ಶಿವಮೊಗ್ಗ ಮಂಜುನಾಥ ಬಡಾವಣೆ ನಿವಾಸಿಗಳಾದ ಕಿರಣ್(೧೯) ಮತ್ತು ಶಶಾಂಕ್(೧೯) ಮೃತಪಟ್ಟಿದ್ದಾರೆ. ಈ ಇಬ್ಬರು ಯುವಕರು ಶಿವಮೊಗ್ಗ ಎಜ್ಯುಕೇರ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದು, ೫ ವಿದ್ಯಾರ್ಥಿಗಳನ್ನೊಳಗೊಂಡ ತಂಡ ಗೊಂದಿ ಅಣೆಕಟ್ಟು ವೀಕ್ಷಿಸಲು ಬಂದಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಆಳವಿರುವ ಸ್ಥಳದಲ್ಲಿ ಕಿರಣ್ ಮತ್ತು ಶಶಾಂಕ್ ಈಜಲು ನೀರಿಗೆ ಇಳಿದಿದ್ದು, ಇಬ್ಬರು ನೀರಿನ ಸೆಳೆತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
    ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಧಾವಿಸಿ ಇಬ್ಬರು ವಿದ್ಯಾರ್ಥಿಗಳ ಮೃತ ದೇಹ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಶವ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಅನಿತಾ ಮೇರಿ ಸೇರಿ ೪ ಶಿಕ್ಷಕರಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ

ಭದ್ರಾವತಿ ಹುಣಸೇಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕಿ ಅನಿತಾ ಮೇರಿ
    ಭದ್ರಾವತಿ, ಸೆ. ೪: ಶಿಕ್ಷಕ ವೃತ್ತಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅನಿತಾ ಮೇರಿ ಸೇರಿದಂತೆ ತಾಲೂಕಿನ ೪ ಶಿಕ್ಷಕರಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ ಲಭಿಸಿದೆ.
    ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೨ ವರ್ಷಗಳಿಂದ ಶಿಕ್ಷಕರ ದಿನಾಚರಣೆ ಸರಳವಾಗಿ ಆಚರಿಸಲಾಗುತ್ತಿದ್ದು, ಈ ನಡುವೆ ಸಾಧಕ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಎಲೆಮರೆ ಕಾಯಿಯಂತೆ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಾದ ಅನಿತಾಮೇರಿ, ಆರ್. ಬಸವರಾಜ್, ವಿರೂಪಾಕ್ಷಪ್ಪ ಹಿರೇಮಠ್ ಮತ್ತು ಸುಶೀಲಾ ಮಾರ್ಗರೇಟ್ ಅವರಿಗೆ ಪ್ರಶಸ್ತಿ ಲಭಿಸಿರುವುದು ಶಿಕ್ಷಕರ ವರ್ಗಕ್ಕೆ ಸಂತಸವನ್ನುಂಟು ಮಾಡಿದೆ.
    ಅನಿತಾ ಮೇರಿ:
    ಅನಿತಾ ಮೇರಿ ಅವರು ೧೯೯೮ರಲ್ಲಿ ದೈಹಿಕ ಶಿಕ್ಷಕಿಯಾಗಿ ನೇಮಕಗೊಂಡು ತೀರ್ಥಹಳ್ಳಿ ತಾಲೂಕಿನಲ್ಲಿ ಕರ್ತವ್ಯ ಆರಂಭಿಸಿದ್ದು, ನಂತರ ತಾಲೂಕಿನ ತಡಸ ಸರ್ಕಾರಿ ಉರ್ದು ಶಾಲೆ, ಭದ್ರಾ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ ೨ ವರ್ಷ ದೊಣಬಘಟ್ಟ ಸರ್ಕಾರಿ ಕನ್ನಡ ಶಾಲೆಯಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ಹುಣಸೇಕಟ್ಟೆ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
    ಸರ್ಕಾರಿ ಕೆಲಸಕ್ಕೆ ಸೇರುವ ಮೊದಲು ೧೯೮೭ರಿಂದಲೇ ವಿವಿಧೆಡೆ ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಇದೆ ಮೊದಲ ಬಾರಿಗೆ ಶಿಕ್ಷಣ ಇಲಾಖೆ ವತಿಯಿಂದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾಮಟ್ಟದ ಪ್ರಶಸ್ತಿಗೆ ಅನಿತಾ ಮೇರಿ ಭಾಜನರಾಗಿದ್ದಾರೆ.
    ಅನಿತಾ ಮೇರಿಯವರು  ಸರ್ಕಾರಿ ವೃತ್ತಿಯೊಂದಿಗೆ ಪ್ರಮುಖವಾಗಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದು, ನಾಡಿನಾದ್ಯಂತ ಚಿರಪರಿಚಿತರಾಗಿದ್ದಾರೆ. ಸ್ವಂತ ಖರ್ಚಿನಲ್ಲಿ ಸುಮಾರು ೪೧೫ ಬಡ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಯನ್ನು ನೆರವೇರಿಸಿರುವುದು ಗಮನಾರ್ಹ ಸಾಧನೆಯಾಗಿದೆ. ಜಿಲ್ಲಾಡಳಿತ, ತಾಲೂಕು ಆಡಳಿತ, ವಿವಿಧ ಸಂಘ-ಸಂಸ್ಥೆಗಳು ಮಾತ್ರವಲ್ಲದೆ ವಿವಿಧ ಮಾಧ್ಯಮ ಸಂಸ್ಥೆಗಳು ಸಹ ಹಲವಾರು ಪ್ರಶಸ್ತಿ, ಬಿರುದುಗಳನ್ನು ನೀಡಿ ಗೌರವಿಸಿವೆ.


ಭದ್ರಾವತಿ ಹೊಸಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆರ್. ಬಸವರಾಜ್

       ಆರ್. ಬಸವರಾಜ್:
    ನಗರಸಭೆ ವಾರ್ಡ್ ನಂ.೩೦ರ ವ್ಯಾಪ್ತಿಯಲ್ಲಿರುವ ಹೊಸಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಸುಮಾರು ೬ ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್. ಬಸವರಾಜ್ ಅವರಿಗೆ ಈ ಬಾರಿ ಪ್ರೌಢ ಶಾಲೆ ವಿಭಾಗದ ಜಿಲ್ಲಾಮಟ್ಟದ ಶಿಕ್ಷಕರ ಪ್ರಶಸ್ತಿ ಲಭಿಸಿದೆ.
    ೧೯೯೯ರಲ್ಲಿ ಮುಖ್ಯ ಶಿಕ್ಷಕರ ಹುದ್ದೆಗೆ ನೇಮಕಗೊಂಡ ಬಸವರಾಜ್ ಅವರು ರಾಯಚೂರಿನಲ್ಲಿ ಕರ್ತವ್ಯ ಆರಂಭಿಸಿದರು. ನಂತರ ಚಿತ್ರದುರ್ಗದಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ನಂತರ ತಾಲೂಕಿನ ಎಡೇಹಳ್ಳಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಹೊಸಸಿದ್ದಾಪುರ ಪ್ರೌಢಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಶಾಲೆಯ ಬೆಳವಣಿಗೆಯಲ್ಲಿ ಬಸವರಾಜ್ ಅವರು ಹೆಚ್ಚಿನ ಶ್ರಮ ವಹಿಸಿದ್ದು, ತಾಲೂಕಿನಲ್ಲಿ ಮಾದರಿ ಶಾಲೆಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುವಲ್ಲಿ ಕಾರಣಕರ್ತರಾಗಿದ್ದಾರೆ.
    ವಿರೂಪಾಕ್ಷಪ್ಪ ಹಿರೇಮಠ :
ತಾಲೂಕಿನ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ೪ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ವಿರೂಪಾಕ್ಷಪ್ಪ ಹಿರೇಮಠ ಅವರಿಗೆ ಜಿಲ್ಲಾಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಹಿರೇಮಠ ಅವರು ೧೯೯೨ರಲ್ಲಿ ವೃತ್ತಿಗೆ ಸೇರ್ಪಡೆಗೊಂಡಿದ್ದು, ಶಾಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ ಹಿರೇಮಠ್ ಅವರು ರಂಗಕಲಾವಿದರಾಗಿದ್ದು, ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಈ ನಡುವೆ ಕಳೆದ ೨ ವರ್ಷಗಳಿಂದ ಎದುರಾಗಿರುವ ಕೋವಿಡ್-೧೯ರ ಸಂಕಷ್ಟದ ಸಮಯದಲ್ಲಿ ಮಕ್ಕಳಿಗೆ ಶಿಕ್ಷಣ ಕಲಿಕೆ ಕುರಿತು ಜಾಗೃತಿ ಮೂಡಿಸುವಲ್ಲಿ ಗಮನ ಸೆಳೆದಿದ್ದರು.


ಭದ್ರಾವತಿ ಕಲ್ಲಿಹಾಳ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಶೀಲಾ ಮಾರ್ಗರೇಟ್
        ಸುಶೀಲಾ ಮಾರ್ಗರೇಟ್:
    ತಾಲೂಕಿನ ಕಲ್ಲಿಹಾಳ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವರ್ಹಿಸುತ್ತಿರುವ ಸುಶೀಲಾ ಮಾರ್ಗರೇಟ್ ಅವರಿಗೆ ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ ಪ್ರಶಸ್ತಿ ಲಭಿಸಿದೆ.  
    ೧೯೯೪ರಲ್ಲಿ ಚಿಕ್ಕಮಗಳೂರು ಲಕ್ಕವಳ್ಳಿಯಲ್ಲಿ ವೃತ್ತಿ ಆರಂಭಿಸಿದ ಇವರು ನಂತರ ತಾಲೂಕಿನ ದೊಣಬಘಟ್ಟ, ಭದ್ರಾ ಕಾಲೋನಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಮಕ್ಕಳ ಕಲಿಕಾ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪರಿಣತಿ ಹೊಂದಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದಾರೆ. ಅಲ್ಲದೆ ಮಕ್ಕಳಿಗೆ ಆಂಗ್ಲ ವಿಷಯ ಕಲಿಕೆಗೆ ಸಂಬಂಧಿಸಿದಂತೆ ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಇವರ ಸಾಧನೆಗೆ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಇವರಲ್ಲಿನ ಪ್ರತಿಭೆಯನ್ನು ಗುರುತಿಸಿ ಇದೀಗ ಪ್ರಶಸ್ತಿಯನ್ನು ನೀಡಿದೆ.

ಸೆ.೫ರಂದು ಶ್ರೀಗಳ ತಪೋನುಷ್ಠಾನ ಸಮಾರೋಪ, ದಾಸೋಹ ಮಂದಿರ ಉದ್ಘಾಟನೆ

ಶ್ರೀ ಸಿದ್ದಲಿಂಗಮಹಾಸ್ವಾಮೀಜಿ
    ಭದ್ರಾವತಿ, ಏ. ೯: ತಾಲೂಕಿನ ಸುಕ್ಷೇತ್ರ ಗೋಣಿಬೀಡಿನ ಶ್ರೀ ಶೀಲಸಂಪಾದನಾಮಠದಲ್ಲಿ ಸೆ.೫ರ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ ೨೩ ತಿಂಗಳ ತಪೋನುಷ್ಠಾನ ಸಮಾರೋಪ ಹಾಗು ದಾಸೋಹ ಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ.
    ತುಮಕೂರು ಸುಕ್ಷೇತ್ರ ಶ್ರೀ ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ತಾವರೆಕೆರೆ ಶಿಲಾಮಠ ಹಾಗು ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ತಿಪಟೂರು ಶ್ರೀ ಸಿಡ್ಗೇಹಳ್ಳಿ ಮಹಾಸಂಸ್ಥಾನಮಠದ ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ, ಹರಪನಹಳ್ಳಿ ಮಹಾ ಸಂಸ್ಥಾನ ತೆಗ್ಗಿನಮಠದ ಶ್ರೀ ವರ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ಹುಣಸಘಟ್ಟ ಶ್ರೀ ಗುರು ಹಾಲಸ್ವಾಮಿ ಮಠದ ಶ್ರೀ ಗುರು ಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶಿವಮೊಗ್ಗ ಶ್ರೀ ಬಸವ ಕೇಂದ್ರ ಹಾಗು ಚಿಕ್ಕಮಗಳೂರು ಬಸವ ಮಂದಿರದ ಡಾ. ಬಸವ ಮರುಳಸಿದ್ದ ಸ್ವಾಮೀಜಿ, ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಾಲಸ್ವಾಮಿ ವಿರಕ್ತಮಠದ ಡಾ. ಶ್ರೀ ಬಸವ ಜಯಚಂದ್ರ ಸ್ವಾಮೀಜಿ, ತಿಪ್ಪಾಯಿಕೊಪ್ಪ ಜಂಗಮ ಕ್ಷೇತ್ರದ ಶ್ರೀ ಮೂಕಪ್ಪ ಶಿವಯೋಗಿಗಳ ಮಠದ ಶ್ರೀ ಮಹಾಂತ ಸ್ವಾಮೀಜಿ, ತಾವರೆಕೆರೆ ಶ್ರೀ ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ ಮತ್ತು ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ ಉಪಸ್ಥಿತರಿರುವರು.
    ಸಂಸದ ಬಿ.ವೈ ರಾಘವೇಂದ್ರ ದಾಸೋಹ ಮಂದಿರ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸುವರು. ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಅಧ್ಯಕ್ಷತೆ ವಹಿಸಲಿದ್ದು, ಕೈಗಾರಿಕೋದ್ಯಮಿ ಬಿ.ಕೆ ನಂಜುಂಡಶೆಟ್ಟರ್, ನಿವೃತ್ತ ಐಎಎಸ್ ಅಧಿಕಾರಿ ಎಸ್. ದಯಾಶಂಕರ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.