Saturday, September 11, 2021

ತರಾತುರಿಯಲ್ಲಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಗೌರಿ-ಗಣೇಶ ಹಬ್ಬ ಆಚರಣೆ

ಭದ್ರಾವತಿ ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದ ಬಳಿ ಹೊಸಸಿದ್ದಾಪುರ ಮಾರ್ಗದ ರಸ್ತೆಯಲ್ಲಿ ನಿರ್ಮಿಸಲಾಗಿರುವ ಬಸ್ ತಂಗುದಾಣದಲ್ಲಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು.
    ಭದ್ರಾವತಿ, ಸೆ. ೧೧: ಕೊರೋನಾ ೩ನೇ ಅಲೆ ಭೀತಿ ನಡುವೆಯೂ ಸರ್ಕಾರ ಈ ಬಾರಿ ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ಹಿನ್ನಲೆಯಲ್ಲಿ ನಗರದ ವಿವಿಧೆಡೆ ಕೆಲವು ಸಂಘಟನೆಗಳ ಯುವಕರು ತರಾತುರಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿ ಸಂಜೆಯೇ ವಿಸರ್ಜನೆ ಮಾಡಿದರೆ, ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಹೊರತುಪಡಿಸಿ ಕೆಲವು ಸಂಘಟನೆಗಳು ೩ ರಿಂದ ೫ ದಿನಗಳ ವರೆಗೆ ಪ್ರತಿಷ್ಠಾಪನೆಗೆ ಮುಂದಾಗಿವೆ.
    ಈ ಬಾರಿ ಗೌರಿ-ಗಣೇಶ ಹಬ್ಬ ತಾಲೂಕಿನಾದ್ಯಂತ ಸಂಭ್ರಮ-ಸಡಗರದಿಂದ ನಡೆಯಿತು. ಸರ್ಕಾರ ಸಾರ್ವಜನಿಕವಾಗಿ ಮೂರ್ತಿ ಪ್ರತಿಷ್ಠಾಪನೆಗೆ ವಿಳಂಬವಾಗಿ ತಿರ್ಮಾನ ಕೈಗೊಂಡ ಹಿನ್ನಲೆಯಲ್ಲಿ ಹೆಚ್ಚಾಗಿ ಯುವ ಸಮುದಾಯ ಮೂರ್ತಿಗಳ ಪ್ರತಿಷ್ಠಾಪನೆಗೆ ಮುಂದಾಗಿರುವುದು ಕಂಡು ಬಂದಿತು.


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಶ್ರೀ ಕರುಮಾಯಮ್ಮ ದೇವಸ್ಥಾನದ ಪಕ್ಕದಲ್ಲಿ ಶ್ರೀ ಕರುಮಾಯಮ್ಮ ದೇವಸ್ಥಾನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ವಿನಾಯಕ ಮೂರ್ತಿ.
    ಪೆಂಡಾಲ್‌ಗಳ ನಿರ್ಮಾಣಕ್ಕೆ ಹೆಚ್ಚಿನ ಸಮಯ ಹಾಗು ಹಣ ಅಧಿಕವಾಗುವ ಹಿನ್ನಲೆಯಲ್ಲಿ ಕೇವಲ ಶಾಮೀಯಾನ ಬಳಸಿ, ಬಯಲು ಶಾಲಾ ರಂಗ ಮಂಟಪ, ಬಸ್ ಶೆಲ್ಟರ್ ಸೇರಿದಂತೆ ಇನ್ನಿತರೆಡೆ ಪೆಂಡಾಲ್ ನಿರ್ಮಾಣ ಮಾಡದೆ ಸರಳವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಕೆಲವು ಸಂಘಟನೆಗಳು ಗಮನ ಸೆಳೆದವು.


ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ ೪೯ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಮೂರ್ತಿಯನ್ನು ಮೆರವಣಿಗೆ ಮೂಲಕ ತರಲಾಯಿತು.
    ಹಿಂದೂ ಮಹಾಸಭಾ ವಿನಾಯಕ ಮೂರ್ತಿ ಪ್ರತಿಷ್ಠಾಪನೆ :
    ಪ್ರತಿ ವರ್ಷದಂತೆ ಈ ಬಾರಿ ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾಗಿರುವ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ ೪೯ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ ನಡೆಯಿತು.
ಹಳೇನಗರದ ಶಿಲ್ಪಿ ರುದ್ರಪ್ಪ ಅವರಿಂದ ನಿರ್ಮಾಣಗೊಂಡ ಮೂರ್ತಿಯನ್ನು ಸಂಜೆ ಮೆರವಣಿಗೆ ಮೂಲಕ ಸಿ.ಎನ್ ರಸ್ತೆ ಹಾಗು ಹೊಸಮನೆ ಮುಖ್ಯ ರಸ್ತೆ ಮೂಲಕ ಪ್ರತಿಷ್ಠಾಪನಾ ಸ್ಥಳಕ್ಕೆ ತರಲಾಯಿತು. ಮೆರವಣೆಗೆಯಲ್ಲಿ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಹಿಂದೂ ಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
    ಮಾಧವಚಾರ್ ವೃತ್ತದಲ್ಲಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆ :
    ಶ್ರೀ ವರಸಿದದಿ ವಿನಾಯಕ ಭಕ್ತ ಮಂಡಳಿ ಸ್ವಾತಂತ್ರ್ಯ ಪೂರ್ವದ ಸಂಘಟನೆಯಾಗಿದ್ದು, ಹಳೇನಗರದ ಮಾಧವಚಾರ್ ವೃತ್ತದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿಕೊಂಡು ಬರುತ್ತಿದೆ. ಈ ಬಾರಿ ಸಹ ೮೮ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಲಾಗಿದೆ. ವಿವಿಧ ಕಾರ್ಯಕ್ರಮಗಳೊಂದಿಗೆ ಸೆ.೧೪ರಂದು ಮೂರ್ತಿಯ ವಿಸರ್ಜನೆ ನಡೆಯಲಿದೆ.
    ಕೋವಿಡ್ ೩ನೇ ಅಲೆ ಭೀತಿ ನಡುವೆಯೂ ಹಬ್ಬ ಆಚರಣೆಗೆ ಒಂದೆಡೆ ಸರ್ಕಾರ ಅನುಮತಿ ನೀಡಿರುವುದನ್ನು ಕೆಲವು ಸಂಘಟನೆಗಳು ದುರ್ಬಳಕೆ ಮಾಡಿಕೊಂಡಿವೆ. ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದಿರುವುದು ಕಂಡು ಬಂದಿತು. ಭಕ್ತರು ಸಹ ಸಾಮಾಜಿಕ ಅಂತರ, ಮಾಸ್ಕ್ ಬಳಸದಿರುವುದು ಸೋಂಕು ಹೆಚ್ಚಳವಾಗುವ ಆತಂಕವನ್ನುಂಟು ಮಾಡಿದೆ.


ಭದ್ರಾವತಿ ಜನ್ನಾಪುರ ಭಾಗದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾಗಿರುವ ರಾಮ ರಾಜ್ಯ ಸಂಘಟನೆ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ವಿನಾಯಕ ಮೂರ್ತಿ

Thursday, September 9, 2021

ನಾಯಿಗಳ ಮಾರಾಣ ಹೋಮ ಘಟನೆ ಸ್ಥಳಕ್ಕೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭೇಟಿ : ಪರಿಶೀಲನೆ

ಭದ್ರಾವತಿ ಎಂಪಿಎಂ ಅರಣ್ಯ ವ್ಯಾಪ್ತಿಯ ತಮ್ಮಡಿ ಹಳ್ಳಿಯ ಎಸ್‌ಎಲ್ ನಂ.೮೬೩, ೮೬೪, ೮೬೫ ಮತ್ತು ೮೬೬ರ ಭೂಮಿಯಲ್ಲಿ ನಾಯಿಗಳನ್ನು ಜೀವಂತವಾಗಿ ಹೂತಿಟ್ಟ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಭದ್ರಾವತಿ, ಸೆ. ೯: ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಾಣ ಹೋಮಕ್ಕೆ ಕಾರಣವಾಗಿರುವ ಘಟನೆಗೆ ಸಂಬಂಧಿಸಿದಂತೆ ನಾಯಿಗಳ ಮೃತದೇಹಗಳ ಮಾದರಿಯನ್ನು ಸಂಗ್ರಹಿಸಿ ಪ್ರಾಣಿಶಾಸ್ತ್ರಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ವರದಿ ಬಂದ ನಂತರ ಕೃತ್ಯದ ಬಗ್ಗೆ ನಿಖರವಾದ ಮಾಹಿತಿ ಲಭಿಸಲಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ತಿಳಿಸಿದ್ದಾರೆ.  
    ಅವರು ಪತ್ರಿಕೆಯೊಂದಿಗೆ ಮಾತನಾಡಿ, ಕೃತ್ಯ ನಡೆದಿರುವ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ನಾಯಿಗಳ ಮೃತ ದೇಹಗಳ ಸಂಖ್ಯೆ ಸಹ ನಿಖರವಾಗಿ ತಿಳಿದು ಬಂದಿಲ್ಲ. ನಾಯಿಗಳು ಯಾವ ರೀತಿ ಸಾವನ್ನಪ್ಪಿವೆ ಎಂಬುದು ಸಹ ತಿಳಿದುಬಂದಿಲ್ಲ. ಈ ಹಿನ್ನಲೆಯಲ್ಲಿ ನಾಯಿಗಳ ಮೃತದೇಹಗಳ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದರು.
    ಅಲ್ಲದೆ ಈ ಕುರಿತು ಉತ್ತರಿಸುವಂತೆ ಕಂಬದಾಳಲು-ಹೊಸೂರು ಗ್ರಾಮ ಪಂಚಾಯಿತಿಗೂ ನೋಟಿಸ್ ನೀಡಲಾಗಿದೆ. ಅಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವರದಿ ನೀಡಲಿದ್ದಾರೆ. ಅಲ್ಲದೆ ಪ್ರಯೋಗಾಲಯದ ವರದಿ ಸಹ ಬರಲಿದೆ. ನಂತರ ಸತ್ಯಾಂಶ ಏನೆಂಬುದು ತಿಳಿಯಲಿದೆ ಎಂದರು.

ಹೊಸ ಶಿಕ್ಷಣ ನೀತಿಗೆ ಹೊಂದಿಕೊಳ್ಳಿ, ಭವಿಷ್ಯದಲ್ಲಿ ಉತ್ತಮ ಪ್ರತಿಫಲ ಎದುರು ನೋಡಿ : ಡಾ. ಬಿ.ಜಿ ಧನಂಜಯ


ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗು ಐಸಿಟಿ ವಿಭಾಗಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ-೨೦೨೦ ವಿಷಯ ಕುರಿತ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಮಾತನಾಡಿದರು.
    ಭದ್ರಾವತಿ, ಸೆ. ೯: ಸರ್ಕಾರ ಪ್ರಸ್ತುತ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳು ಹೊಂದಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರತಿಫಲ ಪಡೆಯಲು ಸಾಧ್ಯ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಹೇಳಿದರು.
    ಅವರು ಕಾಲೇಜಿನಲ್ಲಿ ಐಕ್ಯೂಎಸಿ ಹಾಗು ಐಸಿಟಿ ವಿಭಾಗಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ-೨೦೨೦ ವಿಷಯ ಕುರಿತ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಯಾವುದೇ ಹೊಸ ವಿಷಯಗಳಿಗೆ ಹೊಂದಿಕೊಳ್ಳುವುದು ಸ್ವಲ್ಪಮಟ್ಟಿಗೆ ಕಷ್ಟವಾದರೂ ಅದಕ್ಕೆ ಹೊಂದಿಕೊಳ್ಳುವುದರಿಂದ ನಮಗೆ ಅದರಿಂದ ಸಿಗುವ ಪ್ರತಿಫಲ ಹೆಚ್ಚು. ಹಾಗಾಗಿ ಈ ಶಿಕ್ಷಣ ನೀತಿಯನ್ನು ಅರ್ಥಮಾಡಿಕೊಂಡು ಅನುಷ್ಠಾನಗೊಳಿಸಿ ದೇಶದ ಸರ್ವಾಂಗೀಣ ಪ್ರಗತಿಗೆ ನಮ್ಮದೇ ಆದ ಕೊಡುಗೆಯನ್ನು ಸಲ್ಲಿಸಬೇಕೆಂದರು.
    ಡಾ. ಕಸ್ತೂರಿ ರಂಗನ್‌ರವರ ವರದಿ ಆಧರಿಸಿ ಎಲ್ಲಾ ಹಂತಗಳಲ್ಲೂ ಚರ್ಚಿಸಿ ಕೂಲಂಕುಶವಾಗಿ ಅಧ್ಯಯನ ನಡೆಸಿ ಈ ನೀತಿಯನ್ನು ಜಾರಿಗೆ ತರಲಾಯಿತು. ಶಾಲಾ ಶಿಕ್ಷಣ, ಉನ್ನತ ಶಿಕ್ಷಣದಲ್ಲಿ ಪಠ್ಯಕ್ರಮ ಸುಧಾರಣೆ, ಆಡಳಿತ ಮತ್ತು ನಿಯಂತ್ರಣ, ವಿದ್ಯಾರ್ಥಿಯ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಪೋಷಿಸುವುದು. ನಮ್ಯತೆ ಹಾಗು ಸರ್ವಾಂಗೀಣ ಪ್ರಗತಿ ಹೊಸ ಶಿಕ್ಷಣ ನೀತಿಯ ಗುರಿಗಳಾಗಿವೆ ಎಂದರು.
    ಶಿವಮೊಗ್ಗ ಪ್ರಾದೇಶಿಕ ಜಂಟಿ ನಿರ್ದೇಶಕ ಕಚೇರಿಯ ಅಧಿಕಾರಿ ವಿದ್ಯಾಮರಿಯಾ ಜೋಸೆಫ್, ಪ್ರೊ. ಉಮೇಶ್‌ಕುಮಾರ್, ಡಾ. ಬಿ.ಜಿ ಅಮೃತೇಶ್ವರ್, ಪ್ರೊ. ಮಲ್ಲಪ್ಪ, ಡಾ. ಬಿ. ಬಸವರಾಜಪ್ಪ, ಡಾ. ರಾಜಶೇಖರ್, ಪ್ರೊ. ಎನ್.ಯು.ಆರ್ ಹೆಗ್ಗಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಿಂದೂ ಮಹಾಸಭಾ ಗಣಪತಿ ೯ ದಿನ ಪ್ರತಿಷ್ಠಾಪನೆ : ಜಿಲ್ಲಾಡಳಿತಕ್ಕೆ ಸಮಿತಿ ಮನವಿ

ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ.
    ಭದ್ರಾವತಿ, ಸೆ. ೯: ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಈ ಬಾರಿ ೯ ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪಿಸಲು ಸಮಿತಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ ಎಂದು ಸಮಿತಿ ಅಧ್ಯಕ್ಷ ವಿ. ಕದಿರೇಶ್ ತಿಳಿಸಿದ್ದಾರೆ.
    ಸಮಿತಿ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿದ್ದು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಈ ಬಾರಿ ಸಹ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಗೆ ಶಿವಮೊಗ್ಗದಲ್ಲಿ ೧೦ ದಿನಗಳ ಕಾಲ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ಸಂದರ್ಭದಲ್ಲಿ ಇಲ್ಲಿಯೂ ೯ ದಿನಗಳ ಕಾಲ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಕೋರಲಾಗಿದೆ.
    ಸರ್ಕಾರ ರಾಜ್ಯದ ಎಲ್ಲಾ ಕಡೆ ಪ್ರತಿಷ್ಠಾಪನೆಗೆ ಒಂದೇ ರೀತಿಯ ಅವಕಾಶ ನೀಡಿದ್ದಲ್ಲಿ ಅದಕ್ಕೂ ಬದ್ಧವಾಗಿರುವುದಾಗಿ ತಿಳಿಸಿದರು.

Wednesday, September 8, 2021

ವಿನಾಯಕ ಮೂರ್ತಿ ತಯಾರಕರ ಬದುಕಿಗೆ ಕತ್ತರಿ : ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಪೆಂಡಾಲ್ ನಿರ್ಮಾಣಕ್ಕೆ ಚಾಲನೆ

ಭದ್ರಾವತಿ ಹಳೇನಗರದ ಕುಂಬಾರರ ಬೀದಿ ನಿವಾಸಿ ಬಸವರಾಜ್ ವಿನಾಯಕ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿರುವುದು.
    ಭದ್ರಾವತಿ, ಸೆ. ೮: ಈ ಬಾರಿ ಕೊರೋನಾ ಸಂಕಷ್ಟದ ನಡುವೆಯೂ ಸರ್ಕಾರ ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ  ಅವಕಾಶ ಕಲ್ಪಿಸಿಕೊಟ್ಟಿದೆ. ಆದರೆ ಸರ್ಕಾರ ವಿಳಂಬವಾಗಿ ಕೈಗೊಂಡ ನಿರ್ಧಾರದಿಂದಾಗಿ ವಿನಾಯಕ ಮೂರ್ತಿ ತಯಾರಕರು ಅತಂತ್ರರಾಗಿದ್ದಾರೆ.
    ವಿನಾಯಕ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಹಲವಾರು ಷರತ್ತುಗಳನ್ನು ವಿಧಿಸಿರುವುದು ಮೂರ್ತಿ ತಯಾರಕರ ಸಂಕಷ್ಟಕ್ಕೆ ಕಾರಣವಾಗಿದೆ. ಕೇವಲ ೩ ಅಡಿ ಮೂರ್ತಿ ಪ್ರತಿಷ್ಠಾಪನೆಗೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರ ನಿರ್ಧಾರ ಕೈಗೊಳ್ಳುವ ಮೊದಲೇ ಗ್ರಾಹಕರ ಬೇಡಿಕೆಯಂತೆ ೬ ರಿಂದ ೫ ಅಡಿ ಎತ್ತರದ ಮೂರ್ತಿಗಳನ್ನು ತಯಾರಿಸಿದ್ದಾರೆ. ಈ ಮೂರ್ತಿಗಳ ಪ್ರತಿಷ್ಠಾಪನೆಗೆ ಸರ್ಕಾರ ಕೈಗೊಂಡಿರುವ ನಿರ್ಧಾರ ಇದೀಗ ಅಡ್ಡಿಯನ್ನುಂಟು ಮಾಡಿದೆ. ಮತ್ತೊಂದೆಡೆ ಸರ್ಕಾರದ ವಿಳಂಬ ನಿರ್ಧಾರದಿಂದಾಗಿ ಮೂರ್ತಿ ತಯಾರಕರಿಗೆ ಸೂಕ್ತ ಮಾರುಕಟ್ಟೆ ಇಲ್ಲವಾಗಿದೆ.


ಭದ್ರಾವತಿ ಹಳೇನಗರದ ಕುಂಬಾರರ ಬೀದಿ ನಿವಾಸಿ ಬಸವರಾಜ್ ಅವರ ಇಬ್ಬರು ಸಹೋದರರು ತಯಾರಿಸಿರುವ ವಿನಾಯಕ ಮೂರ್ತಿಗಳು.
    ಹಳೇನಗರದ ಕುಂಬಾರರ ಬೀದಿಯಲ್ಲಿ ಸುಮಾರು ೬ ಕುಟುಂಬಗಳು ಮೂಲ ಕಸುಬನ್ನು ಇಂದಿಗೂ ರೂಢಿಸಿಕೊಂಡು ಬಂದಿದ್ದು, ವಿನಾಯಕ ಚತುರ್ಥಿ ಸಂದರ್ಭದಲ್ಲಿ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿವೆ. ಉಳಿದ ಅವಧಿಯಲ್ಲಿ ೬ ಕುಟುಂಬಗಳ ಪೈಕಿ ೩ ಕುಟುಂಬಗಳು ಮಾತ್ರ ಮಡಿಕೆ ತಯಾರಿಕೆಯಲ್ಲಿ ತೊಡಗಿವೆ. ಉಳಿದ ಕುಟುಂಬಗಳು ಮದುವೆ ಕಾರ್ಯಗಳಲ್ಲಿ ಬಳಸುವ ಪೇಟ, ಬೀಸಣಿಗೆ ಸೇರಿದಂತೆ ಇನ್ನಿತರ ವಸ್ತುಗಳ ತಯಾರಿಕೆಯಲ್ಲಿ ತೊಡಗಿವೆ.
    ಕಳೆದ ಕೆಲವು ವರ್ಷಗಳಿಂದ ಸರ್ಕಾರ ರೂಪಿಸುತ್ತಿರುವ ಹೊಸ ಹೊಸ ಕಾಯ್ದೆಗಳು ಸಹ ಮೂರ್ತಿ ತಯಾರಕರನ್ನು ಅತಂತ್ರರನ್ನಾಗಿಸುತ್ತಿವೆ. ಈ ನಡುವೆ ಕಳೆದ ೨ ವರ್ಷಗಳಿಂದ ಕೋವಿಡ್-೧೯ ಮಹಾಮಾರಿಯಿಂದಾಗಿ ಇವರ ವೃತ್ತಿ ಬದುಕು ಸಂಪೂರ್ಣವಾಗಿ ಅಸ್ತಿತ್ವ ಕಳೆದುಕೊಳ್ಳುವಂತಾಗಿದೆ. ಈ ನಡುವೆಯೂ ಮೂಲ ವೃತ್ತಿಯಿಂದ ಹಿಂದೆ ಸರಿಯಬಾರದೆಂಬ ಉದ್ದೇಶದೊಂದಿಗೆ ಮುನ್ನಡೆಯುತ್ತಿವೆ. ಮೂಲ ವೃತ್ತಿಯನ್ನು ನಂಬಿರುವ ಬಸವರಾಜ್ ಹಾಗು ಇವರ ಇಬ್ಬರು ಸಹೋದರರು ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿಗಳನ್ನು ತಯಾರಿಸಿದ್ದಾರೆ. ಬಸವೇಶ್ವರ ವೃತ್ತದ ಬಳಿ ಇರುವ ಭಾರತೀಯ ಸಂಚಾರ್ ನಿಗಮ್ ಲಿಮಿಟೆಡ್(ಬಿಎಸ್‌ಎನ್‌ಎಲ್) ಕಛೇರಿ ಪಕ್ಕದ ಖಾಲಿ ಜಾಗದಲ್ಲಿ ತಗಡಿನ ಶೆಡ್ ನಿರ್ಮಿಸಿಕೊಂಡು ಸುಮಾರು ೨-೩ ತಿಂಗಳಿನಿಂದ ಮೂರ್ತಿಗಳ ತಯಾರಿಕೆಯಲ್ಲಿ ಈ ಮೂರು ಸಹೋದರರು ತೊಡಗಿಸಿಕೊಂಡಿದ್ದಾರೆ.
    ಪತ್ರಿಕೆ ಜೊತೆಗೆ ಮಾತನಾಡಿದ ಬಸವರಾಜ್, ಈ ಹಿಂದೆ ಸುಮಾರು ೪೦ ಮೂರ್ತಿಗಳನ್ನು ತಯಾರಿಸಲಾಗುತ್ತಿತ್ತು. ಗ್ರಾಹಕರ ಬೇಡಿಕೆಯಂತೆ ಈ ಬಾರಿ ೫ ರಿಂದ ೬ ಅಡಿ ಎತ್ತರದ ಕೇವಲ ೮ ಮೂರ್ತಿಗಳನ್ನು ಮಾತ್ರ ತಯಾರಿಸಲಾಗಿದೆ. ಇದೀಗ ಈ ಮೂರ್ತಿಗಳ ಪ್ರತಿಷ್ಠಾಪನೆಯೇ ಆಯೋಜಕರಿಗೆ ತಲೆ ನೋವಾಗಿದೆ. ಉಳಿದಂತೆ ಇಬ್ಬರು ಸಹೋದರರು ೩ ಅಡಿ ಎತ್ತರದ ಸುಮಾರು ೩೦ ಮೂರ್ತಿಗಳನ್ನು ಹಾಗು ಉಳಿದಂತೆ ೩ ಅಡಿಗಿಂತ ಕಡಿಮೆ ಎತ್ತರದ ಸುಮಾರು ೩೦೦ ಮೂರ್ತಿಗಳನ್ನು ತಯಾರಿಸಿದ್ದಾರೆ. ಈ ನಡುವೆ ವರ್ಷದಿಂದ ವರ್ಷಕ್ಕೆ ಮೂರ್ತಿಗಳ ಬೇಡಿಕೆಗಳು ಕಡಿಮೆಯಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ ಎಂದರು.


ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ನಡೆಯುತ್ತಿದ್ದು, ಬುಧವಾರ ಪೆಂಡಾಲ್ ನಿರ್ಮಾಣಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
       ಪೆಂಡಾಲ್ ನಿರ್ಮಾಣ :
    ಸರ್ಕಾರ ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುತ್ತಿದ್ದಂತೆ ನಗರದ ವಿವಿಧೆಡೆ ವಿವಿಧ ಸಂಘಟನೆಗಳಿಂದ ಪೆಂಡಾಲ್‌ಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
    ಪ್ರತಿ ವರ್ಷದಂತೆ ಈ ಬಾರಿ ಸಹ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ನಡೆಯುತ್ತಿದ್ದು, ಬುಧವಾರ ಪೆಂಡಾಲ್ ನಿರ್ಮಾಣಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
    ಸಮಿತಿ ಅಧ್ಯಕ್ಷ, ಹಿರಿಯ ನಗರಸಭಾ ಸಭಾ ಸದಸ್ಯ ವಿ. ಕದಿರೇಶ್, ಸಮಿತಿಯ ಪದಾಧಿಕಾರಿಗಳಾದ ಚನ್ನಪ್ಪ, ಮಣಿ ಎಎನ್‌ಎಸ್, ಕೆ. ಮಂಜುನಾಥ್, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಕೇಸರಿಪಡೆ ಗಿರೀಶ್, ಮಂಜುನಾಥ್ ಕೊಯ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಮಾರುಕಟ್ಟೆಗಳಲ್ಲಿ ಜನ ಸಂದಣಿ:
    ಗುರುವಾರ ಮತ್ತು ಶುಕ್ರವಾರ ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಬುಧವಾರ ನಗರದ ವಿವಿಧೆದೆ ಮಾರುಕಟ್ಟೆಗಳಲ್ಲಿ ಜನ ಸಂದಣಿ ಹೆಚ್ಚಾಗಿರುವುದು ಕಂಡು ಬಂದಿತು. ವ್ಯಾಪಾರ ವಹಿವಾಟಿ ಭರ್ಜರಿಯಾಗಿ ನಡೆಯುತ್ತಿದ್ದು, ಈ ನಡುವೆ ಅಗತ್ಯಗಳ ವಸ್ತುಗಳ ಬೆಲೆ ಏರಿಕೆಯಿಂದಾಗಿ ಗ್ರಾಹಕರು ತತ್ತರಿಸಿದ್ದಾರೆ.
    ಈ ನಡುವೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆ ಗೌರಿ-ಗಣೇಶ ಹಬ್ಬ ಯಶಸ್ವಿಗಾಗಿ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿವೆ.


ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಬುಧವಾರ ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದ ಬಳಿಇರುವ ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿರುವುದು.

Tuesday, September 7, 2021

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ತುರ್ತು ಕಾಳಜಿ ವಹಿಸಿದ ಜಿಲ್ಲಾಧಿಕಾರಿಗಳಿಗೆ ಮೆಚ್ಚುಗೆ ಪತ್ರ

ಭದ್ರಾವತಿ ಹುಣಸೇಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತುರ್ತು ಕಾಳಜಿ ವಹಿಸಿರುವ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿಗಳು ಬರೆದಿರುವ ಮೆಚ್ಚುಗೆ ಪತ್ರ.
    ಭದ್ರಾವತಿ, ಸೆ. ೭: ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತುರ್ತು ಕಾಳಜಿ ವಹಿಸಿರುವುದು ತಿಳಿದು ಬಂದಿದ್ದು, ಅಲ್ಲದೆ ಜಿಲ್ಲಾಧಿಕಾರಿಗಳ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಎನ್. ನಾಗಾಂಬಿಕಾ ದೇವಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸೆ.೪ರಂದು ಮಂದಗತಿಯ ಶೀತ ಕಾಣಿಸಿಕೊಂಡಿದ್ದು,  ಸ್ಥಳೀಯರು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಡಾ.ಎನ್. ನಾಗಾಂಬಿಕಾ ದೇವಿಯವರು ಕೋರಿದ ಹಿನ್ನಲೆಯಲ್ಲಿ ತಕ್ಷಣ ಖುದ್ದಾಗಿ ವಸತಿ ಶಾಲೆಗೆ ಭೇಟಿ ನೀಡಿದ ಕೆ.ಬಿ ಶಿವಕುಮಾರ್ ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್-೧೯ ಪರೀಕ್ಷೆ ಕ್ಷಿಪ್ರಗತಿಯಲ್ಲಿ ನಡೆಸಿದ್ದು, ವಿದ್ಯಾರ್ಥಿಗಳಲ್ಲಿ ನೆಗಟಿವ್ ವರದಿ ಬಂದಿದೆ. ಈ ನಡುವೆಯೂ ವಿದ್ಯಾರ್ಥಿಗಳೊಂದಿಗೆ ವೈಯಕ್ತಿಕ ಸಮಾಲೋಚನೆ ನಡೆಸುವ ಜೊತೆಗೆ ಆತ್ಮಸ್ಥೈರ್ಯ ತುಂಬುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನಲೆಯಲ್ಲಿ ಡಾ. ಎನ್. ನಾಗಾಂಬಿಕಾ ಅವರು ಸೆ.೬ರಂದು ಮೆಚ್ಚುಗೆ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರಕ್ಕೆ ಒಳಪಟ್ಟಿದೆ.
    ಜಿಲ್ಲಾಧಿಕಾರಿಗಳ ಮೆಚ್ಚುಗೆ ಪತ್ರಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಕಾರ್ಮಿಕರನ್ನು ಕಡೆ ಗಣಿಸಿದ್ದಾರೆ. ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಳೆದ ಸುಮಾರು ೬ ತಿಂಗಳಿನಿಂದ ವೇತನ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಮನವಿ ಮಾಡಲಾಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಜಿಲ್ಲಾಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನೂರಾರು ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಾಣ ಹೋಮ

ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ


ಭದ್ರಾವತಿ ಎಂಪಿಎಂ ಅರಣ್ಯ ವ್ಯಾಪ್ತಿಯ ತಮ್ಮಡಿ ಹಳ್ಳಿಯ ಎಸ್‌ಎಲ್ ನಂ.೮೬೩, ೮೬೪, ೮೬೫ ಮತ್ತು ೮೬೬ರ ಭೂಮಿಯಲ್ಲಿ ಸುಮಾರು ೧೫೦ಕ್ಕೂ ಹೆಚ್ಚಿನ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿದ್ದು, ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಹೂತಿಟ್ಟ ನಾಯಿಗಳನ್ನು ಹೊರ ತೆಗೆಯುತ್ತಿರುವುದು.
    ಭದ್ರಾವತಿ, ಸೆ. ೭: ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಾಣ ಹೋಮಕ್ಕೆ ಕಾರಣವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ತಾಲೂಕಿನ ಸಿಂಗನಮನೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಂಬದಾಳಲು-ಹೊಸೂರು ಗ್ರಾಮ ಪಂಚಾಯಿತಿಗೆ ಒಳಪಡುವ ರಂಗನಾಥಪುರದಲ್ಲಿ ಕಳೆದ ಸುಮಾರು ೪ ದಿನಗಳ ಹಿಂದೆ ಘಟನೆ ನಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
    ಎಂಪಿಎಂ ಅರಣ್ಯ ವ್ಯಾಪ್ತಿಯ ತಮ್ಮಡಿ ಹಳ್ಳಿಯ ಎಸ್‌ಎಲ್ ನಂ.೮೬೩, ೮೬೪, ೮೬೫ ಮತ್ತು ೮೬೬ರ ಭೂಮಿಯಲ್ಲಿ ಸುಮಾರು ೧೫೦ಕ್ಕೂ ಹೆಚ್ಚಿನ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿದ್ದು, ನಾಯಿಗಳನ್ನು ಹೂತಿಡುವಾಗ ಈ ಭಾಗದಲ್ಲಿ ನಾಯಿಗಳು ಬೊಗಳುವ ಶಬ್ದ ಸ್ಥಳೀಯರಿಗೆ ಕೇಳಿಸಿದೆ. ನಂತರ ಈ ಭಾಗದಲ್ಲಿ ನಿಶಬ್ದ ಕಂಡು ಬಂದಿದ್ದು, ಇದರಿಂದ ಅನುಮಾನಗೊಂಡ ಸ್ಥಳೀಯರು ಮಾಹಿತಿಯನ್ನು ಶಿವಮೊಗ್ಗ ಪ್ರಾಣಿ ದಯಾ ಸಂಘದವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
    ಪ್ರಾಣಿ ದಯಾ ಸಂಘದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿರುವುದು ಬೆಳಕಿಗೆ ಬಂದಿದೆ. ಇದೀಗ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
    ನಾಯಿಗಳನ್ನು ಜೀವಂತವಾಗಿ ಹೂತಿಡಲು ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಇದಕ್ಕೆ ಕಂಬದಾಳಲು-ಹೊಸೂರು ಗ್ರಾಮಚಾಯಿತಿ ಆಡಳಿತ ಸ್ಪಷ್ಟನೆ ನೀಡಬೇಕಾಗಿದೆ.
    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಈ ಭಾಗದ ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ ಯೋಗೇಶ್ ನಾಯಿಗಳನ್ನು ಹೂತಿಟ್ಟಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಗ್ರಾಮ ಪಂಚಾಯಿತಿ ಮಾಹಿತಿ ಪ್ರಕಾರ ನಾಯಿಗಳನ್ನು ಜನವಸತಿ ಪ್ರದೇಶಗಳಿಂದ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವುದು ವಾಡಿಕೆಯಾಗಿದೆ. ಆದರೆ ನಾಯಿಗಳನ್ನು ಕೊಲ್ಲುವ ಬಗ್ಗೆ ಎಲ್ಲೂ ಸೂಚಿಸಲಾಗಿಲ್ಲ ಎಂದರು.
    ಮತ್ತೊಂದೆಡೆ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ ಪುನಃ ಅವುಗಳನ್ನು ವಾಸಿಸುತ್ತಿದ್ದ ಸ್ಥಳದಲ್ಲಿಯೇ ಬಿಡಲಾಗುತ್ತದೆ. ಈ ಸಂಬಂಧ ಗ್ರಾಮ ಪಂಚಾಯಿತಿ ವತಿಯಿಂದ ಟೆಂಡರ್ ಸಹ ನೀಡಲಾಗಿತ್ತು ಎನ್ನಲಾಗುತ್ತಿದೆ. ಟೆಂಡರ್‌ದಾರರು ಶಸ್ತ್ರಚಿಕಿತ್ಸೆ ಹಣ ಉಳಿಸುವ ಉದ್ದೇಶದಿಂದ ಈ ರೀತಿಯ ಕೃತ್ಯ ನಡೆಸಿರಬಹುದೆಂಬ ಆರೋಪ ಸಹ ಸ್ಥಳೀಯರಿಂದ ಕೇಳಿ ಬರುತ್ತಿವೆ. ಯಾವುದಕ್ಕೂ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.