Sunday, September 12, 2021

ಶಿಕ್ಷಕ ಸಿ. ವೆಂಕಟೇಶ್ ನಿಧನ

ಸಿ. ವೆಂಕಟೇಶ್
ಭದ್ರಾವತಿ, ಸೆ. ೧೨: ತಾಲೂಕಿನ ನವಿಲೆ ಬಸಾಪುರ ಸರ್ಕಾರಿ ಪ್ರೌಢಶಾಲೆ ಶಿಕ್ಷಕ, ಹುತ್ತಾಕಾಲೋನಿ ನಿವಾಸಿ ಸಿ. ವೆಂಕಟೇಶ್(೫೮) ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಕ್ರಾಫ್ಟ್ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನಕ್ಕೆ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು, ಕಸ್ಟರ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.  

ಸೆ.೧೩ರಂದು ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ

ಭದ್ರಾವತಿ, ಸೆ. ೧೨: ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಸೆ.೧೩ರಂದು ಬೆಳಿಗ್ಗೆ ೧೦.೩೦ಕ್ಕೆ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿ ಹಮ್ಮಿಕೊಳ್ಳಲಾಗಿದೆ.
    ಕಳೆದ ವಾರ ದೆಹಲಿಯ ಪೊಲೀಸ್ ಅಧಿಕಾರಿ ರಾಬೀಯಾ ಸೈಫಿ ಅವರನ್ನು ಅತ್ಯಾಚಾರ ನಡೆಸಿ ಭೀಕರವಾಗಿ  ಕೊಲೆ ಮಾಡಿರುವ ಘಟನೆ ನಡೆದಿದ್ದು, ಅಲ್ಲದೆ ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವ ಜೊತೆಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನಾ ಹೋರಾಟ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗು  ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ವತಿಯಿಂದ ಹಮ್ಮಿಕೊಳ್ಳಲಾಗಿದೆ.
    ಮಾಧವಚಾರ್ ವೃತ್ತದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು ವಿವಿಧ ಸಂಘ-ಸಂಸ್ಥೆಗಳು, ಕಾರ್ಮಿಕರು, ರೈತರು, ವ್ಯಾಪರಸ್ಥರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ  ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ನಾಯಿಗಳ ಮಾರಣ ಹೋಮ : ೧೨ ಮಂದಿ ಬಂಧನ

    ಭದ್ರಾವತಿ, ಸೆ. ೧೨: ತಾಲೂಕಿನ ಕಂಬದಾಳ್-ಹೊಸೂರಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಾಣ ಹೋಮಕ್ಕೆ ಕಾರಣವಾಗಿರುವ ಘಟನೆಗೆ ಸಂಬಂಧಿಸಿದಂತೆ ಒಟ್ಟು ೧೨ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
    ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಇಬ್ಬರು ಸದಸ್ಯರು ಹಾಗೂ ಓರ್ವ ಕರವಸೂಲಿಗಾರ ಸೇರಿದಂತೆ ೧೨ ಮಂದಿಯನ್ನು ಬಂಧಿಸಲಾಗಿದೆ. ಆರಂಭದಲ್ಲಿಯೇ ಈ ಪ್ರಕರಣದಲ್ಲಿ ಗ್ರಾಮ ಪಂಚಾಯಿತಿ ಕೈವಾಡವಿದೆ ಎಂಬ ಅನುಮಾನ ಸ್ಥಳೀಯರಿಂದ ವ್ಯಕ್ತವಾಗಿತ್ತು.
    ಸೆ.೩ರಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳನ್ನು ಹಿಡಿದು ನಂತರ ಅವುಗಳನ್ನು ಟಾಟಾ ಏಸ್ ವಾಹನದ ಮೂಲಕ ತಮ್ಮಡಿಹಳ್ಳಿಯ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ಜೆಸಿಬಿ ಬಳಸಿ ಎರಡು ಗುಂಡಿಗಳನ್ನು ತೆಗೆದು ಜೀವಂತವಾಗಿ ಹೂತು ಹಾಕಲಾಗಿತ್ತು. ಈ ವಿಚಾರ ಸ್ಥಳೀಯ ಗ್ರಾಮಸ್ಥರ ಗಮನಕ್ಕೆ ಬಂದಿದ್ದು, ತಕ್ಷಣ ಗ್ರಾಮಸ್ಥರು ಶಿವಮೊಗ್ಗ ಪ್ರಾಣಿದಯಾ ಸಂಘದವರಿಗೆ ಈ ವಿಚಾರ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ್ದ ಪ್ರಾಣಿದಯಾ ಸಂಘದವರು ಹೂತು ಹಾಕಲಾಗಿದ್ದ ನಾಯಿಗಳ ಮೃತದೇಹಗಳನ್ನು ಪತ್ತೆ ಹಚ್ಚಿ ಹೊರತೆಗೆಯುವ ಮೂಲಕ ಪ್ರಕರಣ ಬೆಳಕಿಗೆ ಬರಲು ಕಾರಣಕರ್ತರಾಗಿದ್ದರು.
    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಗ್ರಾಮಾಂತರ ಠಾಣೆ ಪೊಲೀಸರು ಇದೀಗ ೧೨ ಮಂದಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು ೧೫ ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಉಳಿದ ಮೂವರ ಬಂಧನಕ್ಕಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
    ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಯಿಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಸ್ವತಃ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮೈಸೂರಿನಿಂದ ನಾಯಿ ಹಿಡಿಯುವವರನ್ನು ಕರೆಸಿದ್ದಾರೆ ಎನ್ನಲಾಗಿದೆ. ಹಿಡಿದ ನಾಯಿಗಳಿಗೆ ವಿಷದ ಚುಚ್ಚುಮದ್ದು ನೀಡಿ ಕೊಲ್ಲಲಾಗಿದೆ ಎಂಬ ಆರೋಪಗಳು ಇದೀಗ ಕೇಳಿ ಬರುತ್ತಿದ್ದು, ಈ ನಡುವೆ ಹೂತು ಹಾಕಲಾಗಿದ್ದ ಒಂದು ಗುಂಡಿಯಲ್ಲಿನ ಸುಮಾರು ೬೦ ನಾಯಿಗಳ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಪಶುಸಂಗೋಪನೆ ಇಲಾಖೆಯ ವೈದ್ಯರಿಂದ ನಾಯಿಗಳ ಮೃತದೇಹಗಳ ಮರುಣೋತ್ತರ ಪರೀಕ್ಷೆ ನಡೆಸಲಾಗಿದೆ.  ಅಲ್ಲದೆ ಮೃತದೇಹದ ಮಾದರಿಗಳನ್ನು ಸಂಗ್ರಹಿಸಿ (ಮೂಳೆ, ಚರ್ಮ, ಕೂದಲು ಹಾಗೂ ಕಿಡ್ನಿ) ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ವರದಿ ಬಂದ ನಂತರ ಪ್ರಕರಣ ಸಂಪೂರ್ಣವಾಗಿ ತೆರೆ ಕಾಣಲಿದೆ.

ದುರ್ಗಾಂಬ ದೇವಸ್ಥಾನ, ಬೋವಿ ಕಾಲೋನಿ ವಿನಾಯಕ ಮೂರ್ತಿ ವಿಸರ್ಜನೆ

ಭದ್ರಾವತಿ ಕಂಚಿನಬಾಗಿಲು ಬಳಿ ಇರುವ ಅಂಬೇಡ್ಕರ್ ನಗರದ ಶ್ರೀ ದುರ್ಗಾಂಬ ದೇವಸ್ಥಾನದಲ್ಲಿ ಈ ಬಾರಿ ಪ್ರತಿಷ್ಠಾಪಿಸಲಾಗಿರುವ ಆಕರ್ಷಕವಾದ ಶೇಷವಾಹನ ವಿನಾಯಕ ಮೂರ್ತಿ.
    ಭದ್ರಾವತಿ, ಸೆ. ೧೨: ನಗರದ ಕಂಚಿನಬಾಗಿಲು ಬಳಿ ಇರುವ ಅಂಬೇಡ್ಕರ್ ನಗರದ ಶ್ರೀ ದುರ್ಗಾಂಬ ದೇವಸ್ಥಾನದಲ್ಲಿ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಭಾನುವಾರ ವಿಸರ್ಜಿಸಲಾಯಿತು.
    ಆಕರ್ಷಕವಾದ ಶೇಷವಾಹನ ವಿನಾಯಕ ಮೂರ್ತಿಯನ್ನು ಈ ಬಾರಿ ಪ್ರತಿಷ್ಠಾಪಿಸಲಾಗಿದೆ. ೩ ದಿನಗಳ ಕಾಲ ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು. ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೨ ವರ್ಷಗಳಿಂದ ವಿನಾಯಕ ಮೂರ್ತಿಯನ್ನು ದೇವ್ಥಾನದಲ್ಲಿಯೇ ಪ್ರತಿಷ್ಠಾಪಿಸಲಾಗುತ್ತಿದೆ.
    ಬೋವಿ ಕಾಲೋನಿ ವಿನಾಯಕ ಮೂರ್ತಿ ವಿಸರ್ಜನೆ :
    ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾಗಿರುವ ಬೋವಿ ಕಾಲೋನಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ.
    ನಗರಸಭೆ ವಾರ್ಡ್.೧೨ರ ಹೊಸಮನೆ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಮೂರ್ತಿಯನ್ನು ಭಾನುವಾರ ವಿಸರ್ಜಿಸಲಾಯಿತು. ಈ ಸಂಘಟನೆ ವತಿಯಿಂದ ಹೆಚ್ಚು ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನೆ ನಡೆಯುತ್ತಿತ್ತು. ಈ ಬಾರಿ ಕೋವಿಡ್-೧೯ರ ಹಿನ್ನಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ೩ ದಿನಗಳ ಆಚರಣೆಗೆ ಮೊಟಕು ಗೊಳಿಸಿದೆ.

Saturday, September 11, 2021

ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಲೇಖನ ಸಾಮಗ್ರಿ ವಿತರಣೆ

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಗಣೇಶ್‌ರವರ ಹುಟ್ಟುಹಬ್ಬದ ಅಂಗವಾಗಿ ನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಆಲ್ ಮೊಹಮದ್ ಕಾಲೇಜಿನ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ, ಸೆ. ೧೧: ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಗಣೇಶ್‌ರವರ ಹುಟ್ಟುಹಬ್ಬದ ಅಂಗವಾಗಿ ನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಆಲ್ ಮೊಹಮದ್ ಕಾಲೇಜಿನ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
    ಬಿ.ಎಸ್ ಗಣೇಶ್‌ರವರ ಹುಟ್ಟುಹಬ್ಬವನ್ನು ಬಿ.ಕೆ ಸಂಗಮೇಶ್ವರ್ ಅಭಿಮಾನಿಗಳು ಹಾಗು ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು, ಮುಖಂಡರು ಹಾಗು ಕಾರ್ಯಕರ್ತರು ನಗರದ ವಿವಿಧೆಡೆ ವಿಭಿನ್ನ ರೀತಿಯಲ್ಲಿ ಆಚರಿಸುವ ಮೂಲಕ ಸಂಭ್ರಮ ಹಂಚಿಕೊಂಡರು.
    ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಆರ್. ಶ್ರೇಯಸ್, ಬಷೀರ್ ಅಹಮದ್, ಸೈಯದ್ ರಿಯಾಜ್, ಮುಖಂಡರಾದ ಜೆಬಿಟಿ ಬಾಬು, ಮುಸ್ವೀರ್ ಬಾಷಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕುಮರಿ ನಾರಾಯಣಪುರದ ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಭದ್ರಾವತಿ ತಾಲೂಕಿನ ಕುಮರಿ ನಾರಾಯಣಪುರದ ಜೆಡಿಎಸ್ ಮುಖಂಡರು ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಭದ್ರಾವತಿ, ಸೆ. ೧೧: ತಾಲೂಕಿನ ಕುಮರಿ ನಾರಾಯಣಪುರದ ಜೆಡಿಎಸ್ ಮುಖಂಡರು ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷವನ್ನು ಸಂಘಟಿಸುವ ಉದ್ದೇಶದೊಂದಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಮುಂದಾಗಿದ್ದು, ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.
    ಕುಮರಿ ನಾರಾಯಣಪುರದ ಜೆಡಿಎಸ್ ಮುಖಂಡರಾದ ವೆಂಕಟೇಶ್ ಗೌಡ, ಪುಟ್ಟಸ್ವಾಮಿ ಗೌಡ ಸೇರಿದಂತೆ ಇನ್ನಿತರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
    ಮುಖಂಡರಾದ ಇಸ್ಮಾಯಿಲ್ ಖಾನ್, ಬಾಬಳ್ಳಿ ಲೋಕೇಶ್, ತಳ್ಳಿಕಟ್ಟೆ ಪ್ರಕಾಶ್, ತಳ್ಳಿಕಟ್ಟೆ ದಿನೇಶ್ ಸೇರದಿಂತೆ ಇನ್ನಿತರರು ಉಪಸ್ಥಿತರಿದ್ದರು.

ತರಾತುರಿಯಲ್ಲಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಗೌರಿ-ಗಣೇಶ ಹಬ್ಬ ಆಚರಣೆ

ಭದ್ರಾವತಿ ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದ ಬಳಿ ಹೊಸಸಿದ್ದಾಪುರ ಮಾರ್ಗದ ರಸ್ತೆಯಲ್ಲಿ ನಿರ್ಮಿಸಲಾಗಿರುವ ಬಸ್ ತಂಗುದಾಣದಲ್ಲಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು.
    ಭದ್ರಾವತಿ, ಸೆ. ೧೧: ಕೊರೋನಾ ೩ನೇ ಅಲೆ ಭೀತಿ ನಡುವೆಯೂ ಸರ್ಕಾರ ಈ ಬಾರಿ ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ಹಿನ್ನಲೆಯಲ್ಲಿ ನಗರದ ವಿವಿಧೆಡೆ ಕೆಲವು ಸಂಘಟನೆಗಳ ಯುವಕರು ತರಾತುರಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿ ಸಂಜೆಯೇ ವಿಸರ್ಜನೆ ಮಾಡಿದರೆ, ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಹೊರತುಪಡಿಸಿ ಕೆಲವು ಸಂಘಟನೆಗಳು ೩ ರಿಂದ ೫ ದಿನಗಳ ವರೆಗೆ ಪ್ರತಿಷ್ಠಾಪನೆಗೆ ಮುಂದಾಗಿವೆ.
    ಈ ಬಾರಿ ಗೌರಿ-ಗಣೇಶ ಹಬ್ಬ ತಾಲೂಕಿನಾದ್ಯಂತ ಸಂಭ್ರಮ-ಸಡಗರದಿಂದ ನಡೆಯಿತು. ಸರ್ಕಾರ ಸಾರ್ವಜನಿಕವಾಗಿ ಮೂರ್ತಿ ಪ್ರತಿಷ್ಠಾಪನೆಗೆ ವಿಳಂಬವಾಗಿ ತಿರ್ಮಾನ ಕೈಗೊಂಡ ಹಿನ್ನಲೆಯಲ್ಲಿ ಹೆಚ್ಚಾಗಿ ಯುವ ಸಮುದಾಯ ಮೂರ್ತಿಗಳ ಪ್ರತಿಷ್ಠಾಪನೆಗೆ ಮುಂದಾಗಿರುವುದು ಕಂಡು ಬಂದಿತು.


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಶ್ರೀ ಕರುಮಾಯಮ್ಮ ದೇವಸ್ಥಾನದ ಪಕ್ಕದಲ್ಲಿ ಶ್ರೀ ಕರುಮಾಯಮ್ಮ ದೇವಸ್ಥಾನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ವಿನಾಯಕ ಮೂರ್ತಿ.
    ಪೆಂಡಾಲ್‌ಗಳ ನಿರ್ಮಾಣಕ್ಕೆ ಹೆಚ್ಚಿನ ಸಮಯ ಹಾಗು ಹಣ ಅಧಿಕವಾಗುವ ಹಿನ್ನಲೆಯಲ್ಲಿ ಕೇವಲ ಶಾಮೀಯಾನ ಬಳಸಿ, ಬಯಲು ಶಾಲಾ ರಂಗ ಮಂಟಪ, ಬಸ್ ಶೆಲ್ಟರ್ ಸೇರಿದಂತೆ ಇನ್ನಿತರೆಡೆ ಪೆಂಡಾಲ್ ನಿರ್ಮಾಣ ಮಾಡದೆ ಸರಳವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಕೆಲವು ಸಂಘಟನೆಗಳು ಗಮನ ಸೆಳೆದವು.


ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ ೪೯ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಮೂರ್ತಿಯನ್ನು ಮೆರವಣಿಗೆ ಮೂಲಕ ತರಲಾಯಿತು.
    ಹಿಂದೂ ಮಹಾಸಭಾ ವಿನಾಯಕ ಮೂರ್ತಿ ಪ್ರತಿಷ್ಠಾಪನೆ :
    ಪ್ರತಿ ವರ್ಷದಂತೆ ಈ ಬಾರಿ ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾಗಿರುವ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ ೪೯ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ ನಡೆಯಿತು.
ಹಳೇನಗರದ ಶಿಲ್ಪಿ ರುದ್ರಪ್ಪ ಅವರಿಂದ ನಿರ್ಮಾಣಗೊಂಡ ಮೂರ್ತಿಯನ್ನು ಸಂಜೆ ಮೆರವಣಿಗೆ ಮೂಲಕ ಸಿ.ಎನ್ ರಸ್ತೆ ಹಾಗು ಹೊಸಮನೆ ಮುಖ್ಯ ರಸ್ತೆ ಮೂಲಕ ಪ್ರತಿಷ್ಠಾಪನಾ ಸ್ಥಳಕ್ಕೆ ತರಲಾಯಿತು. ಮೆರವಣೆಗೆಯಲ್ಲಿ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಹಿಂದೂ ಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
    ಮಾಧವಚಾರ್ ವೃತ್ತದಲ್ಲಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆ :
    ಶ್ರೀ ವರಸಿದದಿ ವಿನಾಯಕ ಭಕ್ತ ಮಂಡಳಿ ಸ್ವಾತಂತ್ರ್ಯ ಪೂರ್ವದ ಸಂಘಟನೆಯಾಗಿದ್ದು, ಹಳೇನಗರದ ಮಾಧವಚಾರ್ ವೃತ್ತದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿಕೊಂಡು ಬರುತ್ತಿದೆ. ಈ ಬಾರಿ ಸಹ ೮೮ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಲಾಗಿದೆ. ವಿವಿಧ ಕಾರ್ಯಕ್ರಮಗಳೊಂದಿಗೆ ಸೆ.೧೪ರಂದು ಮೂರ್ತಿಯ ವಿಸರ್ಜನೆ ನಡೆಯಲಿದೆ.
    ಕೋವಿಡ್ ೩ನೇ ಅಲೆ ಭೀತಿ ನಡುವೆಯೂ ಹಬ್ಬ ಆಚರಣೆಗೆ ಒಂದೆಡೆ ಸರ್ಕಾರ ಅನುಮತಿ ನೀಡಿರುವುದನ್ನು ಕೆಲವು ಸಂಘಟನೆಗಳು ದುರ್ಬಳಕೆ ಮಾಡಿಕೊಂಡಿವೆ. ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದಿರುವುದು ಕಂಡು ಬಂದಿತು. ಭಕ್ತರು ಸಹ ಸಾಮಾಜಿಕ ಅಂತರ, ಮಾಸ್ಕ್ ಬಳಸದಿರುವುದು ಸೋಂಕು ಹೆಚ್ಚಳವಾಗುವ ಆತಂಕವನ್ನುಂಟು ಮಾಡಿದೆ.


ಭದ್ರಾವತಿ ಜನ್ನಾಪುರ ಭಾಗದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾಗಿರುವ ರಾಮ ರಾಜ್ಯ ಸಂಘಟನೆ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ವಿನಾಯಕ ಮೂರ್ತಿ