Monday, September 20, 2021

ಮಾಧ್ಯಮ ಆಕಾಡೆಮಿಯಿಂದ ವಾರ್ಷಿಕ ೪೦ ಲಕ್ಷ ರು. ಆರ್ಥಿಕ ನೆರವು : ಕೆ.ವಿ ಶಿವಕುಮಾರ್

ಭದ್ರಾವತಿಯಲ್ಲಿ ರಾಜ್ಯ ಮಾಧ್ಯಮ ಆಕಾಡೆಮಿ ಸದಸ್ಯ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ ಶಿವಕುಮಾರ್ ಅವರನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಸೆ. ೨೦: ರಾಜ್ಯ ಮಾಧ್ಯಮ ಆಕಾಡೆಮಿಗೆ ರಾಜ್ಯ ಸರ್ಕಾರ ೩ ಕೋ. ರು. ಅನುದಾನ ಮೀಸಲಿಟ್ಟಿದ್ದು, ಈ ಅನುದಾನದಲ್ಲಿ ದತ್ತಿ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ವರ್ಷಕ್ಕೆ ೪೦ ಲಕ್ಷ ರು. ಗಳನ್ನು ನೀಡಲು ಆಕಾಡೆಮಿ ತೀರ್ಮಾನಿಸಿದೆ ಎಂದು ರಾಜ್ಯ ಮಾಧ್ಯಮ ಆಕಾಡೆಮಿ ಸದಸ್ಯ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ ಶಿವಕುಮಾರ್ ತಿಳಿಸಿದರು.
    ಅವರು ರಾಜ್ಯ ಮಾಧ್ಯಮ ಆಕಾಡೆಮಿ ಸದಸ್ಯರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿಐಎಸ್‌ಎಲ್ ಅತಿಥಿಗೃಹದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
    ಮುಂದಿನ ದಿನಗಳಲ್ಲಿ ಈ ಅನುದಾನ ಬಳಸಿಕೊಂಡು ಸಂಘದ ಕ್ರಿಯಾಶೀಲ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದ್ದು,  ಕಳೆದ ಎರಡು ವರ್ಷಗಳಿಂದ ಸಂಘದ ಚಟುವಟಿಕೆಗಳು ಕೆಲ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ನಡೆಸಲು ಆಗದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಮಾಧ್ಯಮ ಆಕಾಡೆಮಿ ಸದಸ್ಯರಾಗಿರುವುದು ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ. ಪತ್ರಕರ್ತರ ಹಿತ ಕಾಪಾಡುವುದು ನನ್ನ ಕರ್ತವ್ಯವಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ಶಿವಮೊಗ್ಗದಲ್ಲಿ ಬೃಹತ್ ದತ್ತಿ ಪ್ರಶಸ್ತಿ ವಿತರಣೆ ಸಮಾರಂಭ ಆಯೋಜಿಸಲಾಗಿದೆ ಎಂದರು.
    ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾಭವನ ಕಟ್ಟಡ ಸಮಿತಿ ಅಧ್ಯಕ್ಷರಾದ ಕಣ್ಣಪ್ಪ, ರಾಜ್ಯ ಸಂಘದ ಸದಸ್ಯ ಎನ್.ರವಿಕುಮಾರ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ, ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಅನಂತ ಕುಮಾರ್, ಹಿರಿಯ ಪತ್ರಕರ್ತರಾದ ಎನ್.ಬಾಬು, ಬಿ.ಆರ್.ಬದರಿನಾಯಣ ಶೆಟ್ಟಿ, ಟಿ.ಎಸ್.ಆನಂದ ಕುಮಾರ್, ಹೆಚ್.ಕೆ. ಶಿವಶಂಕರ್, ಕೆ.ಎನ್.ರವೀದ್ರನಾಥ್, ಗಂಗಾನಾಯ್ಕ್, ಸುಭಾಷ್‌ರಾವ್ ಸಿಂದ್ಯಾ, ಸುದರ್ಶನ್, ಶೈಲೇಶ್‌ಕೋಠಿ, ಪ್ರಶಾಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Sunday, September 19, 2021

ಸ್ಕೌಟ್ಸ್ ಮತ್ತು ಗೈಡ್ಸ್ ಒಂದು ದಿನದ ಕಾರ್ಯಾಗಾರ

 


  ಭದ್ರಾವತಿ : ನಗರದ ನ್ಯೂಟೌನ್  ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜ್ ನಲ್ಲಿ ರೋವರ್ಸ್ ಮತ್ತು  ರೇಂಜರ್ಸ್ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸಂಪನ್ಮೂಲ ವ್ಯಕ್ತಿ ಭಾರತಿ ಡಾಯಸ್ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜೆ. ಉಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ವರದರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಡಾ. ದ್ರಾಕ್ಷಾಹಿಣಿ  ಎಂ ಡೊಂಗ್ರೆ ನಿರೂಪಿಸಿದರು. ಡಾ. ಷಣ್ಮುಖಪ್ಪ ವಂದಿಸಿದರು. ಸುಮಾರು 35 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಿರಿಯ ಪತ್ರಕರ್ತ ಕೆ. ನಾರಾಯಣ ನಿಧನ

ಕೆ. ನಾರಾಯಣ
    ಭದ್ರಾವತಿ, ಸೆ. ೧೯: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು, ಹಿರಿಯ ಪತ್ರಕರ್ತರಾದ ಕೆ. ನಾರಾಯಣ(೭೮) ಭಾನುವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರರನ್ನು ಹೊಂದಿದ್ದರು. ಕೆ. ನಾರಾಯಣ ಅವರು ಭುವನವಾರ್ತೆ ಪತ್ರಿಕೆ ಸಂಸ್ಥಾಪಕರ ಸಂಪಾದಕರಾಗಿದ್ದು, ನಂತರ ವಿವಿಧ ದಿನ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಹಿರಿಯ ಸದಸ್ಯರಾಗಿ ಮಾರ್ಗದರ್ಶಕರಾಗಿದ್ದರು. ಇವರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೌನಾಚರಣೆ ನಡೆಸಿ ಸಂತಾಪ ಸೂಚಿಸಿತು.

Saturday, September 18, 2021

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಪಾಲ್ಗೊಂಡ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಗಣಪತಿ ಹಬ್ಬ ಯಾರಿಗೂ ಸೀಮಿತ ಅಲ್ಲ, ಎಲ್ಲರೂ ಸೇರಿ ಆಚರಿಸುವ ಹಬ್ಬ  

ಭದ್ರಾವತಿಯಲ್ಲಿ ಶನಿವಾರ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಪಿ.ವಿ ಶ್ರೀನಿವಾಸ್ ಪಾಲ್ಗೊಂಡಿದ್ದರು.
    ಭದ್ರಾವತಿ, ಸೆ. ೧೮: ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಾಗಿದ್ದ ವಿನಾಯಕ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಪಾಲ್ಗೊಂಡಿದ್ದರು.
    ಮೂಲತಃ ನಗರದವರೇ ಆದ ಪಿ.ವಿ ಶ್ರೀನಿವಾಸ್ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು.
    ಪತ್ರಿಕೆಯೊಂದಿಗೆ ಮಾತನಾಡಿದ ಪಿ.ವಿ ಶ್ರೀನಿವಾಸ್, ರಾಷ್ಟ್ರೀಯ ಅಧ್ಯಕ್ಷರಾಗಿ ಮೊದಲ ಬಾರಿಗೆ ಪಾಲ್ಗೊಂಡಿದ್ದೇನೆ. ಈ ಹಿಂದೆ ಪ್ರತಿ ವರ್ಷ ನಗರದಲ್ಲಿ ಎಲ್ಲಾ ಗಣಪತಿಗಳ ವಿಸರ್ಜನೆ ಸಂಧರ್ಭದಲ್ಲಿ ಪಾಲ್ಗೊಳ್ಳುತ್ತಿದ್ದೆನು. ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ರಾಜಬೀದಿ ಉತ್ಸವ ರದ್ದು ಮಾಡಿರುವುದು ಬೇಸರ ತಂದಿದೆ. ಸಾವಿರಾರು ಜನರು ಒಂದೆಡೆ ಸಂಭ್ರಮಿಸುವ ಕ್ಷಣ ಕಣ್ಮರೆಯಾಗಿರುವುದು ನೋವುಂಟು ಮಾಡಿದೆ ಎಂದರು.
    ಗಣಪತಿ ಹಬ್ಬ ಯಾರಿಗೂ ಸೀಮಿತವಾಗಿಲ್ಲ. ಎಲ್ಲರೂ ಸೇರಿ ಆಚರಿಸುವಂತದ್ದಾಗಿದೆ. ಆದರೆ ಕೆಲವು ಸಂಘಟನೆಗಳು ನಮಗೆ ಮಾತ್ರ ಸೀಮಿತ ಎಂಬ ಭಾವನೆ ಮೂಡಿಸುತ್ತಿರುವುದು ಸರಿಯಲ್ಲ. ದೇಶದಲ್ಲಿರುವ ಎಲ್ಲರೂ ಗಣಪತಿ ಹಬ್ಬ ಆಚರಿಸಬೇಕು. ಯುವ ಕಾಂಗ್ರೆಸ್ ವತಿಯಿಂದ ಪ್ರತಿ ವರ್ಷ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ಈ ಮೂಲಕ ಎಲ್ಲರಲ್ಲೂ ಒಗ್ಗಟ್ಟನ್ನು ಮೂಡಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
    ಯುವ ಮುಖಂಡ ಬಿ.ಎಸ್ ಗಣೇಶ್, ಸ್ಥಳೀಯ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಡಾ.ವಿಷ್ಣವರ್ಧನ್ ೭೧ನೇ ಜನ್ಮದಿನ : ಪ್ರಶಸ್ತಿ ಪ್ರದಾನ

 ಡಾ. ವಿಷ್ಣುವರ್ಧನ್‌ರವರ ೭೧ನೇ ಜನ್ಮ ದಿನೋತ್ಸವ ಅಂಗವಾಗಿ ಅಪೇಕ್ಷ ನೃತ್ಯ ಕಲಾವೃಂದ ಹಾಗು ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಶನಿವಾರ  ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ವಿಷ್ಣು ಗಾನ ನೃತ್ಯ ಸಂಭ್ರಮ, ವಿಶೇಷ ಸಾಧಕರು ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಸೆ. ೧೮: ಡಾ. ವಿಷ್ಣುವರ್ಧನ್‌ರವರ ೭೧ನೇ ಜನ್ಮ ದಿನೋತ್ಸವ ಅಂಗವಾಗಿ ನಗರದ ಅಪೇಕ್ಷ ನೃತ್ಯ ಕಲಾವೃಂದ ಹಾಗು ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಶನಿವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ವಿಷ್ಣು ಗಾನ ನೃತ್ಯ ಸಂಭ್ರಮ, ವಿಶೇಷ ಸಾಧಕರು ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
    ಅಪೇಕ್ಷ ನೃತ್ಯ ಕಲಾವೃಂದದ ಅಧ್ಯಕ್ಷೆ ಭಾರತಿಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ತಹಸೀಲ್ದಾರ್ ಆರ್. ಪ್ರದೀಪ್ ವಿಷ್ಣುಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಪ್ರಶಸ್ತಿ ಪ್ರಧಾನ ನೆರವೇರಿಸಿಕೊಟ್ಟರು.  
    ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಕಸಾಪ ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಯು. ಮಹಾದೇವಪ್ಪ, ಅರಳಿಹಳ್ಳಿ ಶಾಲೆ ಹಿಂದಿ ಶಿಕ್ಷಕ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಡಾ. ವಿಷ್ಣು ಸೇನಾ ಸಮಿತಿ ಜಿಲ್ಲಾಧ್ಯಕ್ಷ ಅಪೇಕ್ಷ ಮಂಜುನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಹಳೇನಗರದ ಸರ್ಕಾರಿ ಸಂಚಿ ಹೊನ್ನಮ್ಮ ಬಾಲಕಿಯರ ಪ್ರೌಢಶಾಲೆ ಸಹ ಶಿಕ್ಷಕ ಎಂ. ದಿವಾಕರ್, ಅರಹತೊಳಲು ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅರಳೆಹಳ್ಳಿ ಅಣ್ಣಪ್ಪ, ಬಿಆರ್‌ಪಿ ಲೇಖಕ ಹೊಸಹಳ್ಳಿ ದಾಳೇಗೌಡ, ಶಿವಮೊಗ್ಗ ರಾಗಿಗುಡ್ಡ ಡಾ. ಬಿ.ಆರ್ ಅಂಬೇಡ್ಕರ್ ಪ್ರೌಢಶಾಲೆ ಕ್ರಾಫ್ಟ್ ಶಿಕ್ಷಕಿ ಮೇರಿ ಎಂ. ಡಿಸೋಜ, ಕೂಡ್ಲಿಗೆರೆ ಹರಿಹರೇಶ್ವರ ಪ್ರೌಢಶಾಲೆ ದೈಹಿಕ ಶಿಕ್ಷಕ ಬಿ.ಆರ್ ಶ್ರೀಧರ್ ಸಾವಂತ್, ಬಿಆರ್‌ಸಿ ಸಿ. ಚನ್ನಪ್ಪ ಮತ್ತು ಶಿವಮೊಗ್ಗ ಜ್ಯೂನಿಯರ್ ರಾಜ್‌ಕುಮಾರ್ ಎಚ್. ದೇವರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿಂದೂ ಮಹಾಸಭಾ ಗಣಪತಿ ಶಾಂತಿಯುತ ವಿಸರ್ಜನೆ

ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಈ ಬಾರಿ ಪ್ರತಿಸ್ಥಾಪಿಸಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನೆ ಶನಿವಾರ ಶಾಂತಿಯುತವಾಗಿ ಮುಕ್ತಾಯಗೊಂಡಿತು.
    ಭದ್ರಾವತಿ, ಸೆ. ೧೮: ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಈ ಬಾರಿ ಪ್ರತಿಸ್ಥಾಪಿಸಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನೆ ಶನಿವಾರ ಶಾಂತಿಯುತವಾಗಿ ಮುಕ್ತಾಯಗೊಂಡಿತು.
    ಕೋವಿಡ್-೧೯ರ ಹಿನ್ನಲೆಯಲ್ಲಿ ಈ ಬಾರಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ನಿಷೇಧಿಸಿದ ಪರಿಣಾಮ ಸಂಜೆ ೬ ಗಂಟೆಗೆ ಮೂರ್ತಿಯನ್ನು ಪ್ರತಿಷ್ಠಾಪನಾ ಸ್ಥಳದಿಂದ ಮೆರವಣಿಗೆ ಮೂಲಕ ಹೊಸಮನೆ ರಸ್ತೆ, ರಂಗಪ್ಪ ವೃತ್ತ,  ಸಿ.ಎನ್ ರಸ್ತೆ, ಮಾಧವಚಾರ್ ವೃತ್ತ ಮೂಲಕ ತರೀಕೆರೆ ರಸ್ತೆಯಲ್ಲಿ ಸಾಗಿ ಸಂಜೆ ೭  ಗಂಟೆಗೆ ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು.
    ರಾಜಬೀದಿ ಉತ್ಸವ ಮೆರವಣಿಗೆ ರದ್ದು ಮಾಡಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಂಡಿರಲಿಲ್ಲ. ಆದರೂ ಸಹ ಮುನ್ನಚ್ಚರಿಕೆ ಕ್ರಮವಾಗಿ ಗೃಹ ರಕ್ಷಕ ದಳ, ಎಲ್ಲಾ ಠಾಣೆಗಳ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗಿತ್ತು. ಈ ನಡುವೆ ರಾಜ ಬೀದಿ ಉತ್ಸವ ಮೆರವಣಿಗೆ ರದ್ದು ಮಾಡಿದ್ದರೂ ಸಹ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸುತ್ತಮುತ್ತಲ ನಿವಾಸಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
    ಈ ಬಾರಿ ಜಿಲ್ಲಾಡಳಿತ ಕೇವಲ ೫ ದಿನಗಳ ಕಾಲ ಪ್ರತಿಷ್ಠಾಪನೆಗೆ ಮಾತ್ರ ಅವಕಾಶ ನೀಡಿತ್ತು. ಆದರೆ ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ೯ ದಿನಗಳ ಪ್ರತಿಷ್ಠಾಪನೆಗೆ ಸಮ್ಮತಿಸಿತ್ತು.
    ಮೆರವಣಿಗೆ ನೇತೃತ್ವವನ್ನು ಸಮಿತಿ ಅಧ್ಯಕ್ಷ, ಹಿರಿಯ ಮುಖಂಡ ವಿ. ಕದಿರೇಶ್ ವಹಿಸಿದ್ದರು. ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.  

ಆಜಾದಿ ಕ ಅಮೃತ್ ಮಹೋತ್ಸವ ಆಚರಣೆ : ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ

ವಿಐಎಸ್‌ಎಲ್ ವತಿಯಿಂದ ಆಯೋಜನೆ : ೧೫ ಶಾಲೆಗಳ ಒಟ್ಟು ೨೭ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿ

'ಆಜಾದಿ ಕ ಅಮೃತ್ ಮಹೋತ್ಸವ' ಆಚರಣೆಯ ಅಂಗವಾಗಿ ಭಾರತೀಯ ಉಕ್ಕು ಪ್ರಾಧಿಕಾರದ ಅಂಗ ಸಂಸ್ಥೆಯಾದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ವತಿಯಿಂದ ಆಂಗ್ಲ ಭಾಷೆಯಲ್ಲಿ ``75 years of India’s Independence – What Does Fredom Mean to Me ?''  ವಿಷಯವಾಗಿ ಭಾಷಣ ಸ್ಪರ್ಧೆ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ  ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು.
    ಭದ್ರಾವತಿ, ಸೆ. ೧೮: 'ಆಜಾದಿ ಕ ಅಮೃತ್ ಮಹೋತ್ಸವ' ಆಚರಣೆಯ ಅಂಗವಾಗಿ ಭಾರತೀಯ ಉಕ್ಕು ಪ್ರಾಧಿಕಾರದ ಅಂಗ ಸಂಸ್ಥೆಯಾದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ವತಿಯಿಂದ ಆಂಗ್ಲ ಭಾಷೆಯಲ್ಲಿ ``75 years of India’s Independence – What Does Fredom Mean to Me ?'' ವಿಷಯವಾಗಿ ಭಾಷಣ ಸ್ಪರ್ಧೆ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ  ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು.
    ಸ್ಪರ್ಧೆಯಲ್ಲಿ ೧೫ ಶಾಲೆಗಳ ಒಟ್ಟು ೨೭ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಖಾನೆಯ ಮುಖ್ಯ ಮಹಾಪ್ರಬಂಧಕ (ಆಪರೇಷನ್) ಕೆ.ಎಸ್. ಸುರೇಶ್ ಸ್ಪರ್ಧೆಯನ್ನು ಉದ್ಘಾಟಿಸಿದರು. ಮಹಾ ಪ್ರಬಂಧಕ ಪ್ರಬಾರಿ (ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರವರ್ತಿ, ಪ್ರಾಂಶುಪಾಲ ಬಿ.ಎನ್ ಗಿರೀಶ್ ಉಪಸ್ಥಿತರಿದ್ದರು.
    ಇಂಚರ ತಂಡದವರು ಪ್ರಾರ್ಥಿಸಿದರು. ಮಹಾಪ್ರಬಂಧಕ (ಸಿಬ್ಬಂದಿ, ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಸ್ವಾಗತಿಸಿದರು. ವಿದ್ಯಾರ್ಥಿನಿ ಸಂಜನಾ ಕಾರ್ಯಕ್ರಮ ನಿರೂಪಿಸಿದರು.
    ಸಮಾಜ ವಿಜ್ಞಾನ ಶಿಕ್ಷಕಿ ಮಮತ, 'ಇಂದಿನ ಜನಾಂಗಕ್ಕೆ ಭಾರತ ಸ್ವಾತಂತ್ರ್ಯ ಸಂಗ್ರಾಮದಿಂದ ಕಲಿಯಬೇಕಾದ ಪಾಠಗಳು' ಎಂಬ ವಿಷಯದ ಬಗ್ಗೆ ಭಾಷಣ ಮಾಡಿದರು. ವಿಜೇತರಿಗೆ ಬಹುಮಾನದ ರೂಪದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮ ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಕುರಿತು ಪುಸ್ತಕಗಳನ್ನು ನೀಡಲಾಗಿದೆ.
        ವಿಜೇತ ವಿದ್ಯಾರ್ಥಿಗಳು:
     ೧. ಯಶಸ್ವಿನಿ ಚಿಕ್ಕಮಠ್, ಎಸ್‌ಎವಿ ಶಾಲೆ(ಪ್ರಥಮ) ೨. ಪತೀಕ್ಷಾ ದಯಾನಂದ್, ಪೂರ್ಣಪ್ರಜ್ಞ ಶಾಲೆ, (ದ್ವಿತೀಯ), ೩. ಎಚ್.ವೈ ಚಂದನ, ಬಿಜಿಎಸ್ ಶಾಲೆ (ತೃತೀಯ), ೪. ಸ್ಪೂರ್ತಿ, ಪಿಟಿಇಎಸ್ ಶಾಲೆ (ತೃತೀಯ), ೫. ಆರ್. ಹೇಮಾಲತಾ, ಶ್ರೀ ಸತ್ಯಸಾಯಿ ಬಾಬಾ ಶಾಲೆ(ಸಮಾಧಾನಕರ), ೬. ನೈಯೋಲ್ ಕ್ವಾಡ್ರಸ್, ಸೇಂಟ್ ಚಾರ್ಲ್ಸ್ ಶಾಲೆ,(ಸಮಾಧಾನಕರ) ಮತ್ತು ೭. ಜಿ. ಯಶಸ್ವಿ, ಸೇಂಟ್ ಚಾರ್ಲ್ಸ್ ಶಾಲೆ(ಸಮಾಧಾನಕರ) ಬಹುಮಾನಗಳನ್ನು ಪಡೆದುಕೊಂಡರು.