Thursday, September 23, 2021

ಪೌರಕಾರ್ಮಿಕರು ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶ್ರಮಿಸಿ : ಟಿ.ವಿ ಪ್ರಕಾಶ್

    

ಭದ್ರಾವತಿ ನಗರಸಭೆ ಹಾಗು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಉದ್ಘಾಟಿಸಿದರು.

    ಭದ್ರಾವತಿ, ಸೆ. ೨೩: ಪೌರ ಕಾರ್ಮಿಕರು ತಮ್ಮ ಮಕ್ಕಳ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗು ಶೈಕ್ಷಣಿಕವಾಗಿ ಬೆಳವಣಿಗೆ ಹೊಂದಬೇಕೆಂದು ಉಪವಿಭಾಗಾಧಿಕಾರಿ, ನಗಸಭೆ ಆಡಳಿತಾಧಿಕಾರಿ ಟಿ.ವಿ ಪ್ರಕಾಶ್ ಹೇಳಿದರು.
    ಅವರು ಗುರುವಾರ ನಗರಸಭೆ ಹಾಗು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ಪೌರ ಕಾರ್ಮಿಕರು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಅವರ ಮಕ್ಕಳು ಸಹ ಉನ್ನತ ಸ್ಥಾನಗಳನ್ನು ಅಲಂಕರಿಸುವಂತಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಬೇಕೆಂದರು.
    ಪೌರ ಕಾರ್ಮಿಕರ ಸೇವೆ ಸಮಾಜದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಪೌರಕಾರ್ಮಿಕರು ತಮ್ಮ ಕರ್ತವ್ಯದಲ್ಲಿ ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕು. ಸುರಕ್ಷತಾ ಸಲಕರಣೆಗಳನ್ನು ಕಡ್ಡಾಯವಾಗಿ ಬಳಸಬೇಕು. ಆರೋಗ್ಯದ ಕಡೆ ಹೆಚ್ಚಿನ ಹರಿಸಬೇಕೆಂದರು.
    ನಗರಸಭಾ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ದೇಶದಲ್ಲಿ ಸೈನಿಕರು ಮತ್ತು ಪೌರಕಾರ್ಮಿಕರಿಗೆ ಸಮಾನವಾದ ಗೌರವ ನೀಡಬೇಕು. ಸೈನಿಕರು ದೇಶ ರಕ್ಷಣೆ ಮೂಲಕ ನಮ್ಮನ್ನು ರಕ್ಷಣೆ ಮಾಡುತ್ತಿದ್ದಾರೆ. ಪೌರಕಾರ್ಮಿಕರು ಸ್ವಚ್ಛ ಪರಿಸರ ನಿರ್ಮಾಣ ಮಾಡುವ ಮೂಲಕ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತಿದ್ದಾರೆ. ಇವರಿಬ್ಬರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇವರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಪ್ರಾಮಾಣಿಕವಾಗಿ ತಲುಪಬೇಕು. ಗುತ್ತಿಗೆದಾರರು ಸಹ ಪೌರಕಾರ್ಮಿಕರಿಗೆ ನೀಡಬೇಕಾದ ಪಿ.ಎಫ್, ಇಎಸ್‌ಐ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡಬೇಕು. ಸರ್ಕಾರ ಪೌರಕಾರ್ಮಿಕರಿಗೆ ಇನ್ನೂ ಹೆಚ್ಚಿನ ವೇತನ ನೀಡಬೇಕೆಂದು ಆಗ್ರಹಿಸಿದರು.
    ಮುಂದಿನ ದಿನಗಳಲ್ಲಿ ಪೌರಕಾರ್ಮಿಕರ ದಿನಾಚರಣೆಗೆ ಶಾಸಕರು ವೈಯಕ್ತಿಕವಾಗಿ ೨೫ ಸಾವಿರ ರು. ಧನ ಸಹಾಯ ನೀಡಲಿದ್ದಾರೆ. ಉಳಿದಂತೆ ಎಲ್ಲಾ ನಗರಸಭಾ ಸದಸ್ಯರು ಸಹ ಎಲ್ಲಾ ರೀತಿಯ ಸಹಕಾರ ನೀಡಲಿದ್ದಾರೆ. ಪೌರಕಾರ್ಮಿಕರ ದಿನಾಚರಣೆ ಇನ್ನೂ ಅದ್ದೂರಿಯಾಗಿ ಆಚರಿಸುವಂತಾಗಬೇಕೆಂದರು.
    ನಗರಸಭೆ ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಪೌರಕಾರ್ಮಿಕರು ಸಹ ವೈದ್ಯರಂತೆ ದೇವರಿಗೆ ಸಮಾನ ಎಂದರೆ ತಪ್ಪಿಲ್ಲ. ಇಂತಹ ಪೌರಕಾರ್ಮಿಕರಿಗೆ ಸಮಾಜದಲ್ಲಿ ಗೌರವ ಸಿಗಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದೆ ಬರುವಂತಹ ವಾತಾವರಣ ನಿರ್ಮಾಣ ಮಾಡಿಕೊಡಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.
    ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್,  ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು, ನಗರಸಭಾ ಸದಸ್ಯರಾದ ಗೀತಾ ರಾಜ್‌ಕುಮಾರ್, ಶೃತಿ ವಂಸತ್, ಜಾರ್ಜ್, ಆರ್. ಶ್ರೇಯಶ್, ಬಿ.ಎಂ ಮಂಜುನಾಥ್, ಚನ್ನಪ್ಪ, ರಿಯಾಜ್ ಅಹಮದ್, ಅನುಸುಧಾ ಮೋಹನ್, ಮಂಜುಳ ಸುಬ್ಬಣ್ಣ, ಟಪ್ಪು ಸುಲ್ತಾನ್, ಬಸವರಾಜ ಬಿ. ಆನೆಕೊಪ್ಪ, ಜಯಶೀಲ‌ ಸುರೇಶ್, ಕೋಟೇಶ್ವರರಾವ್, ಉದಯ್‌ಕುಮಾರ್, ಕಾಂತರಾಜ್, ಸೈಯದ್ ರಿಯಾಜ್, ಪಲ್ಲವಿ ದಿಲೀಪ್ , ಸವಿತಾ ಉಮೇಶ್, ಆರ್. ಮೋಹನ್‌ಕುಮಾರ್ ಮತ್ತು ಲತಾ ಚಂದ್ರಶೇಖರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿದರು. ಶಾಂತಕುಮಾರಿ ಪ್ರಾರ್ಥಿಸಿದರು. ನರಸಿಂಹಮೂರ್ತಿ ನಿರೂಪಿಸಿದರು. ಸಹಾಯಕ ಅಭಿಯಂತರ ಶ್ರೀರಂಗರಾಜಪುರೆ, ಸಮುದಾಯ ಸಂಘಟನಾಧಿಕಾರಿ ಎಂ. ಸುಹಾಸಿನಿ, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಕಿರಿಯ ಅಭಿಯಂತರ ಎಸ್.ಆರ್. ಸತೀಶ್ ಸೇರಿದಂತೆ ನಗರಸಭೆ ಅಧಿಕಾರಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಇದಕ್ಕೂ ಮೊದಲು ರಂಗಪ್ಪ ವೃತ್ತದಿಂದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದ ವರೆಗೂ ಜಾಗೃತಿ ಜಾಥಾ ನಡೆಸಲಾಯಿತು.


ಭದ್ರಾವತಿ ನಗರಸಭೆ ಹಾಗು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜನಾರ್ಧನ ನಿಧನ

ಜನಾರ್ಧನ
ಭದ್ರಾವತಿ, ಸೆ. ೨೩: ನಗರಸಭೆ ವ್ಯವಸ್ಥಾಪಕಿ ಸುನಿತಾಕುಮಾರಿ ಅವರ ಪತಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯ ಕ್ಷೇಮಾಭಿವೃದ್ಧಿ ನೌಕರ ಜನಾರ್ಧನ(೫೪) ಬುಧವಾರ ರಾತ್ರಿ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ ಹಾಗು ಓರ್ವ ಪುತ್ರಿಯನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
    ಮೃತರ ನಿಧನಕ್ಕೆ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಹಾಗು ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು, ನಗರಸಭಾ ಸದಸ್ಯರು, ತಾಲೂಕು ಬಲಿಜ ಸಂಘ, ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

Wednesday, September 22, 2021

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಚನ್ನಪ್ಪ

ಭದ್ರಾವತಿ ನಗರಸಭೆ ವಾರ್ಡ್ ನಂ.೮ರ ಸೀಗೆಬಾಗಿಯಲ್ಲಿ  ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕೋವಿಡ್-೧೯ ಎದುರಿಸುವ ನಿಟ್ಟಿನಲ್ಲಿ ಅಗತ್ಯವಿರುವ ಸುರಕ್ಷಾ ಹಾಗು ಪ್ರತಿರಕ್ಷಣಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಸೆ. ೨೨: ಕಟ್ಟಡ ಹಾಗು ಇತರೆ ನಿರ್ಮಾಣ ಕಾರ್ಮಿಕರು ಕೇಂದ್ರ ಹಾಗು ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಭವಿಷ್ಯದ ಬದುಕಿನ ಕಡೆ ಹೆಚ್ಚು ಗಮನ ಹರಿಸಬೇಕೆಂದು ನಗರಸಭಾ ಸದಸ್ಯ ಚನ್ನಪ್ಪ ಹೇಳಿದರು.
    ಅವರು ಬುಧವಾರ ನಗರಸಭೆ ವಾರ್ಡ್ ನಂ.೮ರ ಸೀಗೆಬಾಗಿಯಲ್ಲಿ  ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕೋವಿಡ್-೧೯ ಎದುರಿಸುವ ನಿಟ್ಟಿನಲ್ಲಿ ಅಗತ್ಯವಿರುವ ಸುರಕ್ಷಾ ಹಾಗು ಪ್ರತಿರಕ್ಷಣಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಕಟ್ಟಡ ಹಾಗು ಇತರೆ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಬಹಳ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕಡ್ಡಾಯವಾಗಿ ಗುರುತಿನ ಚೀಟಿ ಪಡೆದುಕೊಂಡು ಕೇಂದ್ರ ಹಾಗು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ಕೊಡಿಸುವ ಜೊತೆಗೆ ಕುಟುಂಬದ ಆರೋಗ್ಯ ರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕು. ತಮ್ಮ ಮಕ್ಕಳು ಸಹ ಉತ್ತಮ ಭವಿಷ್ಯ ಕಾಣುವಂತಾಗಬೇಕೆಂದರು.
    ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು ಪ್ರಾಸ್ತಾವಿಕ ನುಡಿಗಳನ್ನಾಡಿ, ಸರ್ಕಾರ ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ ಕಾರ್ಮಿಕರಿಗೆ ಶಾಶ್ವತವಾದ ಯೋಜನೆಗಳು ಲಭಿಸುತ್ತಿಲ್ಲ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದರೂ ಸಹ ನಿಜವಾದ ಫಲಾನುಭವಿಗಳಿಗೆ ಲಭಿಸುತ್ತಿಲ್ಲ. ಅಲ್ಲದೆ ಕಾರ್ಮಿಕರ ಹಲವಾರು ಬೇಡಿಕೆಗಳಿದ್ದು, ನಾವುಗಳು ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಂಘಟನೆ ಹೆಚ್ಚು ಬಲಬೇಕಾಗಿದೆ ಎಂದರು.
    ಯೂನಿಯನ್ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಅಧ್ಯಕ್ಷತೆವಹಿಸಿದ್ದರು. ನಗರಸಭಾ ಸದಸ್ಯರಾದ ಮಣಿ ಎಎನ್‌ಎಸ್, ಜಾರ್ಜ್, ಬಷೀರ್ ಅಹಮದ್, ಯೂನಿಯನ್ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಸೀಗೆಬಾಗಿ ಭಾಗದ ಅಧ್ಯಕ್ಷ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸೆ.೨೩ರಂದು ಪೌರ ಕಾರ್ಮಿಕರ ದಿನಾಚರಣೆ : ಸ್ವಚ್ಛತಾ ಕಾರ್ಯಕ್ಕೆ ಒಂದು ದಿನ ವಿರಾಮ

ಭದ್ರಾವತಿ ನಗರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಪೌರಕಾರ್ಮಿಕರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು.
    ಭದ್ರಾವತಿ, ಸೆ. ೨೨: ನಗರಸಭೆ ವತಿಯಿಂದ ಸೆ.೨೩ರಂದು ಬೆಳಿಗ್ಗೆ ೯ ಗಂಟೆಗೆ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ಕೋವಿಡ್-೧೯ರ ಹಿನ್ನಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ರಂಗಪ್ಪ ವೃತ್ತದಿಂದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದ ವರೆಗೂ ಜಾಗೃತಿ ಜಾಥಾ ನಡೆಯಲಿದೆ.
    ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಕ್ರೀಡಾಕೂಟ:
    ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕಮಂಟಪ ಮೈದಾನದಲ್ಲಿ ಪೌರಕಾರ್ಮಿಕರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು. ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಎನ್. ಮಂಜುನಾಥ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.
    ಕ್ರೀಡಾಕೂಟದ ವಿಜೇತರು :
    ಪುರುಷರ ವಿಭಾಗದಲ್ಲಿ ಶಾಟ್‌ಪುಟ್ ಸ್ಪರ್ಧೆಯಲ್ಲಿ ಸುರೇಶ್ ಮೊದಲನೇ, ಹೊರ ಗುತ್ತಿಗೆ ಚಾಲಕ ಕರೀಗೌಡ ಎರಡನೇ ಹಾಗು ಮನೆ ಮನೆ ಕಸ ಸಂಗ್ರಹಣೆ ಆಟೋ ಸಹಾಯಕ ಕಿರಣ್ ಮೂರನೇ ಮತ್ತು ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಪಿ. ರವಿ ಮೊದಲನೇ, ಮನೆ ಮನೆ ಕಸ ಸಂಗ್ರಹಣೆ ಆಟೋ ಸಹಾಯಕ ಅರವಿಂದ ಎರಡನೇ ಹಾಗು ಚಾಲಕ ಕುಮಾರ್ ಮೂರನೇ ಮತ್ತು ೧೦೦ ಮೀಟರ್ ಓಟ ಸ್ಪರ್ಧೆಯಲ್ಲಿ ಸಹಾಯಕ ಎಸ್. ಶ್ರೀನಿವಾಸ್ ಮೊದಲನೇ, ಅರುಣ್ ಕುಮಾರ್ ಎರಡನೇ ಹಾಗು ಸಹಾಯಕ ಎಸ್. ನಾಗರಾಜ್ ಮೂರನೇ ಬಹುಮಾನ ಪಡೆದುಕೊಂಡರು.
    ಮಹಿಳೆಯರ ವಿಭಾಗದಲ್ಲಿ ಮ್ಯೂಜಿಕಲ್ ಛೇರ್ ಸ್ಪರ್ಧೆಯಲ್ಲಿ ಶಾಂತ ಮೊದಲನೇ, ಸತ್ಯಮ್ಮ ಎರಡನೇ ಮತ್ತು ಶಾರದ ಮೂರನೇ, ಶಾಟ್‌ಪುಟ್ ಸ್ಪರ್ಧೆಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಆಟೋ ಸಹಾಯಕಿ ಸತ್ಯಮ್ಮ ಮೊದಲನೇ, ನಾಗರತ್ನ ಎರಡನೇ ಹಾಗು ಶೌಚಾಲಯ ಸ್ವಚ್ಚತೆಯ ನೇತ್ರಾವತಿ ಮೂರನೇ ಮತ್ತು ಬಾಂಬ್ ಇನ್ ದಿ ಸಿಟಿ ಸ್ಪರ್ಧೆಯಲ್ಲಿ ಇಂದಿರಾ ಮೊದಲನೇ, ಮರಿಯಮ್ಮ ಎರಡನೇ ಮತ್ತು ಶಾಂತಕುಮಾರಿ ಮೂರನೇ ಹಾಗು ೧೦೦ ಮೀಟರ್ ಓಟ ಸ್ಪರ್ಧೆಯಲ್ಲಿ ರಾಜೇಶ್ವರಿ ಮೊದಲನೇ, ಮನೆ ಮನೆ ಕಸ ಸಂಗ್ರಹಣೆ ಆಟೋ ಹೊರ ಗುತ್ತಿಗೆ ಸಹಾಯಕಿ ರೇಣುಕಾ ಎರಡನೇ ಮತ್ತು ನಾಗವೇಣಿ ಮೂರನೇ ಬಹುಮಾನ ಪಡೆದುಕೊಂಡರು.
    ಪೌರ ಕಾರ್ಮಿಕರಿಗೆ ರಜೆ : ಸ್ವಚ್ಛತಾ ಕಾರ್ಯ ಇರುವುದಿಲ್ಲ
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಸರ್ಕಾರ ಸೆ.೨೩ರಂದು ರಜೆ ಘೋಷಿಸಿರುವ ಹಿನ್ನಲೆಯಲ್ಲಿ ಅಂದು ಸ್ವಚ್ಛತಾ ಕಾರ್ಯ ನಡೆಯುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತ ಕೆ. ಪರಮೇಶ್ ಕೋರಿದ್ದಾರೆ.

Tuesday, September 21, 2021

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ

ಭದ್ರಾವತಿಗೆ ಮಂಗಳವಾರ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿ ಸ್ವಾಗತಿಸಲಾಯಿತು.
    ಭದ್ರಾವತಿ, ಸೆ. ೨೧: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಮೊದಲ ವರ್ಷದ ಪುಣ್ಯಸ್ಮರಣೆ, ಶಕ್ತಿಧಾಮ ಉದ್ಘಾಟನೆ ಹಾಗು ಪ್ರತಿಮೆ ಅನಾವರಣ ಕಾರ್ಯಕ್ರಮ ನಿಮಿತ್ತ ಮಂಗಳವಾರ ನಗರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
    ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಕುಮಾರಸ್ವಾಮಿಯವರು ನಗರಕ್ಕೆ ಆಗಮಿಸುತ್ತಿದ್ದಂತೆ ಘೋಷಣೆಗಳನ್ನು ಕೂಗಿ ಜೈಕಾರ ಹಾಕುವ ಮೂಲಕ ಪಟಾಕಿ ಸಿಡಿಸಿ ಸಂಭ್ರಮಿಸಿದರು.
    ನಗರಸಭಾ ಸದಸ್ಯೆ ವಿಜಯ ಹಾಗು ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಧುಕುಮಾರ್ ನೇತೃತ್ವದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.


ಕಬಡ್ಡಿ ತರಬೇತಿದಾರ ಚಿನ್ನರಾಜು ನಿಧನ

ಚಿನ್ನರಾಜು
    ಭದ್ರಾವತಿ, ಸೆ. ೨೧: ನಗರದ ಬುಳ್ಳಾಪುರ ನಿವಾಸಿ, ಕಬಡ್ಡಿ ತರಬೇತಿದಾರ ಚಿನ್ನರಾಜು(೫೫) ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಫೆ.೨೭ ಮತ್ತು ೨೮ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ. ಕಬಡ್ಡಿ(ಮಾಟ್) ಪಂದ್ಯಾವಳಿಯಲ್ಲಿ ಸ್ನೇಹಜೀವಿ ಬಳಗದ ತಂಡ ಮೊದಲ ಬಹುಮಾನ ಪಡೆದುಕೊಳ್ಳಲು ಕಾರಣಕರ್ತರಾಗಿದ್ದರು.
    ಇವರ ನಿಧನಕ್ಕೆ ಸ್ನೇಹ ಬಳಗದ ಪೊಲೀಸ್ ಉಮೇಶ್, ಕರ್ನಾಟಕ ರಾಜ್ಯ ಅಮೆಚೂರ್ ಅಸೋಸಿಯೇಷನ್ ಹಾಗು ಕಬಡ್ಡಿ ಕ್ರೀಡಾಪಟುಗಳು ಮತ್ತು ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಪ್ಪಾಜಿ ಆದರ್ಶತನ ಇಂದಿನ ರಾಜಕಾರಣಿಗಳಿಗೆ ಅವಶ್ಯಕ : ಎಚ್.ಡಿ ಕುಮಾರಸ್ವಾಮಿ

ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಮೊದಲ ವರ್ಷದ ಪುಣ್ಯಸ್ಮರಣೆ, ಶಕ್ತಿಧಾಮ ಉದ್ಘಾಟನೆ ಹಾಗು ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಘಾಟಿಸಿ ಮಾತನಾಡಿದರು.    
    ಭದ್ರಾವತಿ, ಸೆ. ೨೧: ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿ ಅವರು ನೇರ ನುಡಿ ವ್ಯಕ್ತಿತ್ವದ ಧೀಮಂತ ರಾಜಕಾರಣಿಯಾಗಿದ್ದು, ನಾಡಿನ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರಾಗಿ ನಮ್ಮಿಂದ ಕಣ್ಮರೆಯಾಗಿರುವುದು ನೋವುಂಟು ಮಾಡಿದೆ. ಇಂತಹ ನಾಯಕನ ಆದರ್ಶತನ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಬಣ್ಣಿಸಿದರು.
    ಅವರು ಮಂಗಳವಾರ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಮೊದಲ ವರ್ಷದ ಪುಣ್ಯಸ್ಮರಣೆ, ಶಕ್ತಿಧಾಮ ಉದ್ಘಾಟನೆ ಹಾಗು ಪ್ರತಿಮೆ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಪ್ಪಾಜಿಯವರು ಹಿರಿಯ ರಾಜಕಾರಣಿಯಾಗಿದ್ದು, ದೇವೇಗೌಡರ ಅಭಿಮಾನಿಯಾಗಿ, ಜೆಡಿಎಸ್ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ನಂತರ ಶಾಸಕರಾಗಿ ಆಯ್ಕೆಯಾದವರು. ಅವರು ಶ್ರೀಮಂತ ಕುಟುಂಬದಿಂದ ಬಂದವರಲ್ಲ. ಹಣ ಸಂಪಾದನೆಗಾಗಿ ರಾಜಕಾರಣ ಮಾಡಲಿಲ್ಲ. ಬದಲಿಗೆ ಬಡವರ ಧ್ವನಿಯಾಗಿ ನಿಂತವರು. ಅವರು ನಮ್ಮಿಂದ ದೂರವಾಗಿ ೧ ವರ್ಷ ಕಳೆದರೂ ಸಹ ಕ್ಷೇತ್ರದಲ್ಲಿ ಅವರ ಮೇಲಿನ ಅಭಿಮಾನ ಕಡಿಮೆಯಾಗಿಲ್ಲದಿರುವುದು ಅಪ್ಪಾಜಿಯವರು ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಗೆ ಸಾಕ್ಷಿಯಾಗಿದೆ ಎಂದರು.
    ಎಚ್.ಡಿ ದೇವೇಗೌಡರವರು ದೇಶದ ಪ್ರಧಾನಿಯಾಗಿದ್ದಾಗ ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಪ್ಪಾಜಿ ಅವರು ನಡೆಸಿದ ಪ್ರಯತ್ನ ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಅಲ್ಲದೆ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜನಮೆಚ್ಚಿದ ನಾಯಕರಾಗಿದ್ದಾರೆ. ಇಂತಹ ನಾಯಕನಿಗೆ ಗೌರವ ನೀಡುವ ನಿಟ್ಟಿನಲ್ಲಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಸರ್ಕಾರ ಅಪ್ಪಾಜಿ ಹೆಸರನ್ನು ನಾಮಕರಣಗೊಳಿಸಬೇಕೆಂದು ಆಗ್ರಹಿಸಿದರು.
      ೨೦೨೩ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ :
    ಜೆಡಿಎಸ್ ಬಲವರ್ಧನೆಗೆ ಅಂದು ಭದ್ರಾವತಿ ನಗರದಲ್ಲಿ ಎಚ್.ಡಿ ದೇವೇಗೌಡರು, ವೀರೇಂದ್ರ ಪಾಟೀಲ್ ಹಾಗು ಸಿಂ.ಎಂ ಇಬ್ರಾಹಿಂ ಸೇರಿದಂತೆ ಹಿರಿಯರು ಕೈಗೊಂಡ ಸಂಕಲ್ಪದಿಂದಾಗಿ ದೇವೇಗೌಡರು ಈ ದೇಶದ ಪ್ರಧಾನಿಯಾಗಲು ನಾಂದಿಯಾಯಿತು. ಇಂತಹ ನೆಲದಲ್ಲಿ ಇದೀಗ ಮತ್ತೊಮ್ಮೆ ರಾಜಕೀಯದ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಸಮ್ಮಿಶ್ರ ಸರ್ಕಾರದ ಮೂಲಕ ರಾಜ್ಯದ ಅಭಿವೃದ್ಧಿ, ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷಕ್ಕೆ ಜನರ ಬೆಂಬಲವಿದೆ. ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಜ್ಯದಲ್ಲಿ ೨೦೨೩ರಲ್ಲಿ ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬರುವ ವಿಶ್ವಾಸ ನನಗಿದೆ ಎಂದರು.
    ಶಾರದ ಅಪ್ಪಾಜಿ ಬೆಂಬಲಿಸಿ :
    ಮಾಜಿ ಶಾಸಕರಾದ ಎಂ.ಜೆ ಅಪ್ಪಾಜಿ ಅವರ ಸ್ಥಾನ ತುಂಬಲು ಮುಂದಿನ ವಿಧಾನಸಭಾ ಚುನಾವಣೆಗೆ ಅವರ ಪತ್ನಿ ಶಾರದ ಅಪ್ಪಾಜಿ ಅವರನ್ನು ಎಲ್ಲರೂ ಬೆಂಬಲಿಸಬೇಕು. ಈ ನಿಟ್ಟಿನಲ್ಲಿ ರಾಜ್ಯಮಟ್ಟದಲ್ಲಿ ಜೆಡಿಎಸ್ ಬಲವರ್ಧನೆಗೆ ಕ್ಷೇತ್ರದ ಮತದಾರರು ಕಾರಣಕರ್ತರಾಗಬೇಕೆಂದು ಮನವಿ ಮಾಡಿದರು.
    ಅಕ್ಟೋಬರ್ ೨ರಂದು ರಾಜಕೀಯ ಪ್ರವೇಶ:
    ಶಾರದ ಅಪ್ಪಾಜಿ ಮಾತನಾಡಿ, ಜನರ ಅಪೇಕ್ಷೆಯಂತೆ ಅಪ್ಪಾಜಿ ಅವರ ಸ್ಥಾನ ತುಂಬಲು ನಾನು ಸಿದ್ದವಾಗಿದ್ದೇನೆ. ನಾನು ಯಾರಿಗೂ ಹೆದರಬೇಕಾದ ಅವಶ್ಯಕತೆ ಇಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಮುಖ್ಯವಾಗಿ ಕ್ಷೇತ್ರದ ಮತದಾರರು ನನ್ನ ಪರವಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಕ್ಟೋಬರ್ ೨ ರಂದು ಗಾಂಧಿ ಜಯಂತಿಯಂದು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನನ್ನ ರಾಜಕೀಯ ಜೀವನ ಆರಂಭಿಸುವುದಾಗಿ ಘೋಷಿಸಿದರು.
    ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ,  ಕಡೂರು ಮಾಜಿ ಶಾಸಕ ವೈಎಸ್‌ವಿ ದತ್ತ, ಜೆಡಿಎಸ್ ಮುಖಂಡ ಎಂ. ಶ್ರೀಕಾಂತ್, ಅಪ್ಪಾಜಿ ಪತ್ನಿ ಶಾರದ ಅಪ್ಪಾಜಿ, ಪುತ್ರ ಎಂ.ಎ ಅಜಿತ್ ಮತ್ತು ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.