Sunday, September 26, 2021

ಕಟ್ಟಡ ಕಾರ್ಮಿಕರು ಇನ್ನೂ ಹೆಚ್ಚು ಸಂಘಟನೆಯಾಗಲಿ : ಬಿ.ಕೆ ಸಂಗಮೇಶ್ವರ್



ಭದ್ರಾವತಿ ಕಂಚಿನಬಾಗಿಲು ವೃತ್ತದ ಸಮೀಪದ ಅಂಬೇಡ್ಕರ್ ನಗರದ ದುರ್ಗಾಂಬ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ನೂತನ ಶಾಖೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಸೆ. ೨೬: ಕಟ್ಟಡ ಕಾರ್ಮಿಕರ ಸಂಘಟನೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟನೆಯಾಗುವ ಅಗತ್ಯವಿದ್ದು, ಸಂಘಟನೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
     ಅವರು ಭಾನುವಾರ ನಗರದ ಕಂಚಿನಬಾಗಿಲು ವೃತ್ತದ ಸಮೀಪದ ಅಂಬೇಡ್ಕರ್ ನಗರದ ದುರ್ಗಾಂಬ ದೇವಸ್ಥಾನ ಆವರಣದಲ್ಲಿ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದರು.      ಕ್ಷೇತ್ರದಲ್ಲಿ ಯೂನಿಯನ್ ಹೆಚ್ಚು ಕ್ರಿಯಾಶೀಲವಾಗಿದ್ದು, ಪ್ರಸ್ತುತ ಯೂನಿಯನ್ ಮುನ್ನಡೆಸಿಕೊಂಡು ಹೋಗುತ್ತಿರುವವರು ಕಟ್ಟಡ ಕಾರ್ಮಿಕರ ಪರವಾಗಿ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಾರೆ. ಸರ್ಕಾರದಿಂದ ಲಭ್ಯವಾಗುವ ಎಲ್ಲಾ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕಟ್ಟಡ ಕಾರ್ಮಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಕೈಗೊಂಡಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು. 
     ಯೂನಿಯನ್ ಇನ್ನೂ ಹೆಚ್ಚು ಸಂಘಟನೆಯಾಗಬೇಕು. ಇದರಿಂದ ನಮ್ಮ ಬೇಡಿಕೆಗಳನ್ನು ತ್ವರಿತಗತಿಯಲ್ಲಿ ಈಡೇರಿಸಿಕೊಳ್ಳಲು ಸಾಧ್ಯ. ಯೂನಿಯನ್ ಕಾರ್ಯನಿರ್ವಹಿಸಲು ಸ್ವಂತ ಕಟ್ಟಡ ಅವಶ್ಯಕತೆ ಇದ್ದು, ಅಲ್ಲದೆ ಕಟ್ಟಡ ಕಾರ್ಮಿಕರ ಹಲವಾರು ಬೇಡಿಕೆಗಳಿದ್ದು, ಮುಂದಿನ ದಿನಗಳಲ್ಲಿ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 
     ಪ್ರಾಸ್ತಾವಿಕವಾಗಿ ಮಾತನಾಡಿದ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ಯೂನಿಯನ್ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಆರಂಭಿಕ ಹಂತದಿಂದ ಇಲ್ಲಿಯವರೆಗೂ ಯೂನಿಯನ್ ಬೆಳೆದುಬರಲು ಪ್ರಮುಖ ಕಾರಣಕರ್ತರಾಗಿದ್ದಾರೆ. ನೂತನ ಶಾಖೆ ಆರಂಭಿಸಿದರೆ ಸಾಲದು ಅದನ್ನು ಮುಂದಿನ ದಿನಗಳಲ್ಲಿ ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವಂತಾಗಬೇಕು. ಈ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಹೆಚ್ಚು ಗಮನ ಹರಿಸಬೇಕೆಂದರು. 
    ಯೂನಿಯನ್ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಅಧ್ಯಕ್ಷತೆವಹಿಸಿದ್ದರು. ನಗರಸಭಾ ಸದಸ್ಯರಾದ ಮಣಿ ಎಎನ್‌ಎಸ್, ಜಾರ್ಜ್, ಬಿ.ಎಂ ಮಂಜುನಾಥ್, ಆರ್. ಶ್ರೇಯಸ್(ಚಿಟ್ಟೆ), ಸುದೀಪ್‌ಕುಮಾರ್, ಯೂನಿಯನ್ ತಾಲೂಕು ತಾಂತ್ರಿಕ ಸಲಹೆಗಾರ ಮನೋಹರ್, ಗೌರವ ಸಲಹೆಗಾರ ಶಿವಣ್ಣಗೌಡ, ನೂತನ ಶಾಖೆಯ ಅಧ್ಯಕ್ಷ ಹನುಮಂತಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷ ಅಭಿಲಾಷ್ ಸ್ವಾಗತಿಸಿದರು. ನ್ಯಾಯವಾದಿ ಎಂ. ಶಿವಕುಮಾರ್ ನಿರೂಪಿಸಿದರು. ನೂತನ ಶಾಖೆಯ ಪದಾಧಿಕಾರಿಗಳು, ಅಂಬೇಡ್ಕರ್ ನಗರದ ಮುಖಂಡರು, ನಿವಾಸಿಗಳು ಪಾಲ್ಗೊಂಡಿದ್ದರು. 

Saturday, September 25, 2021

ರಾಜೀವ್‌ಗಾಂಧಿ ಮೆಮೆರಿಯಲ್ ಪ್ರೌಢಶಾಲೆಯಲ್ಲಿ ಪೋಷಣ್ ಅಭಿಯಾನ್

ಭದ್ರಾವತಿ, ಸೆ. ೨೫ : ನಗರಸಭೆ ವ್ಯಾಪ್ತಿಯ ಹಳೇಸೀಗೆಬಾಗಿ ರಾಜೀವ್‌ಗಾಂಧಿ ಮೆಮೊರಿಯಲ್ ಪ್ರೌಢಶಾಲೆಯಲ್ಲಿ ಶನಿವಾರ 'ಪೋಷಣ್  ಅಭಿಯಾನ್' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ 'ಪೋಷಣ್ ಅಭಿಯಾನ್' ಮಹತ್ವ ಕುರಿತು ವಿವರಿಸಲಾಯಿತು. ಪೋಷಕಾಂಶ, ಖನಿಜ ಲವಣಗಳು, ನಾರುಪದಾರ್ಥ ಸೇರಿದಂತೆ ಮನುಷ್ಯನ ಆರೋಗ್ಯಕ್ಕೆ ಪೂರಕವಾದ ಅಂಶಗಳನ್ನು ಹೊಂದಿರುವ ಬಗೆ ಬಗೆಯ ಸೊಪ್ಪು, ತರಕಾರಿ, ಹಣ್ಣುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಹೊಸಮನೆ ಭಾಗದ ಸಂಪನ್ಮೂಲ ವ್ಯಕ್ತಿ ಕೃಷ್ಣಮೂರ್ತಿ, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಹನುಮಂತಪ್ಪ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಗಂಗಾಧರಪ್ಪ, ಎಚ್.ಎನ್ ಪವಾರ್,  ಎಸ್. ಶ್ರೀನಿವಾಸಪ್ಪ, ಶಿವಕುಮಾರ್, ಡಾ. ಶಕೀಲ್ ಮಹಮದ್, ಚಂದ್ರಪ್ಪ, ಶಿವಕುಮಾರ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಪಿ.ಎಸ್ ನಾಗಲಕ್ಷ್ಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಸ್  ನಿರ್ಮಲ, ಗೀತಾಬಾಯಿ, ಅಂಗನವಾಡಿ ಹಾಗು  ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ರಸ್ತೆ ಬದಿ ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ

ಭದ್ರಾವತಿ, ಸೆ. ೨೫:  ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನದ ಬಳಿ ಭದ್ರಾವತಿ ಕಡೆಯಿಂದ ಚನ್ನಗಿರಿ ಮಾರ್ಗವಾಗಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದು ಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.  
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನ ಚಾಲಕ ಸೀಟ್‌ಬೆಲ್ಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಸ್ಥಳೀಯರು ಜಮಾಸಿದ್ದು, ಘಟನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಲಿತ ಮುಖಂಡ ಕೆ. ರಂಗನಾಥ್, ಲೋಕೋಪಯೋಗಿ ಇಲಾಖೆಗೆ ಸೇರಿದ ಸ್ಥಳದಲ್ಲಿ ಯಾವುದೇ ಅನುಮತಿ ಇಲ್ಲದೆ ವಿದ್ಯುತ್ ಕಂಬಗಳನ್ನು ಅಳವಡಿಸಿರುವುದು ಅಪಘಾತಕ್ಕೆ ಕಾರಣವಾಗಿದೆ. ತಕ್ಷಣ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಂಡು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿ ಸಾರ್ವಜನಿಕರು, ಶಾಲಾ ಮಕ್ಕಳು ಮತ್ತು ವಾಹನಗಳ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.  


ಸೆ.೨೭ರಂದು ಭಾರತ್ ಬಂದ್‌ಗೆ ಬಂಬಲ : ಬೃಹತ್ ಪ್ರತಿಭಟನಾ ಮೆರವಣಿಗೆ

    ಭದ್ರಾವತಿ, ಸೆ. ೨೫: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ದಲಿತ, ಕಾರ್ಮಿಕ ಹಾಗು ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೆ.೨೭ರಂದು ಕರೆ ನೀಡಲಾಗಿರುವ ಭರತ್ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ತಾಲೂಕು ಬೆಂಬಲ ವ್ಯಕ್ತಪಡಿಸಿದೆ.
    ರೈತ, ದಲಿತ, ಕಾರ್ಮಿಕ, ಮಹಿಳಾ, ಕನ್ನಡಪರ ಹಾಗು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಅಂದು ಬೆಳಿಗೆ ೧೦.೩೦ಕ್ಕೆ ನಗರದ ಬಿ.ಎಚ್ ರಸ್ತೆ ಅಂಡ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿ ವರೆಗೂ ಹಮ್ಮಿಕೊಳ್ಳಲಾಗಿದೆ.
ಸಮಸ್ತ ನಾಗರೀಕರು ಪ್ರತಿಭಟನಾ ಮೆರವಣಿಗೆ ಬೆಂಬಲಿಸುವ ಮೂಲಕ ಯಶಸ್ವಿಗೊಳಿಸುವಂತೆ ರೈತ  ಮುಖಂಡರಾದ ಯಶವಂತರಾವ್ ಘೋರ್ಪಡೆ, ಎಚ್.ಪಿ ಹಿರಿಯಣ್ಣಯ್ಯ ಮತ್ತು ಡಿ.ವಿ ವೀರೇಶ್ ಕೋರಿದ್ದಾರೆ.
        ರೈತ ಹೋರಾಟಕ್ಕೆ ಎಎಪಿ ಬೆಂಬಲ:
    ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ಖಂಡಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಸೆ. ೨೭ರ ಹೋರಾಟಕ್ಕೆ  ಆಮ್ ಆದ್ಮಿ ಪಾರ್ಟಿ ಬೆಂಬಲ ನೀಡಲಿದೆ ಎಂದು ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ತಿಳಿಸಿದ್ದಾರೆ.
    ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮಸೂದೆಗಳಿಗೆ ತಿದ್ದುಪಡಿ ತಂದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಹೋರಾಟಕ್ಕೆ ಎಎಪಿ ಸಂಪೂರ್ಣ ಬೆಂಬಲ ನೀಡಲಿದ್ದು, ಜಿಲ್ಲಾ ಹಾಗು ತಾಲೂಕು ಮಟ್ಟದಲ್ಲಿ ನಡೆಯುವ ಹೋರಾಟಕ್ಕೆ ಎಎಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ನಿಧನಕ್ಕೆ ಸಂತಾಪ

ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ    
ಭದ್ರಾವತಿ, ಸೆ. ೨೫: ಕುಪ್ಪೂರು ಗದ್ದಿಗೆ ಮಠದ ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಯವರ ನಿಧನಕ್ಕೆ ತಾಲೂಕಿನ ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಸಂತಾಪ ಸೂಚಿಸಿದ್ದಾರೆ.
    ಶ್ರೀಗಳು ರಾಜ್ಯಾದ್ಯಂತ ಹೆಚ್ಚಿನ ಭಕ್ತರನ್ನು ಹೊಂದಿದ್ದು, ಕುಪ್ಪೂರು ಗದ್ದಿಗೆ ಮಠದ ಅಭಿವೃದ್ಧಿಯಲ್ಲಿ ಹೆಚ್ಚಿನ ಗಮನ ಹರಿಸುವ ಜೊತೆಗೆ ಆಧ್ಯಾತ್ಮಿಕ ಕಾರ್ಯಗಳಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದರು. ಶ್ರೀಗಳು ಲಿಂಗೈಕ್ಯರಾಗಿರುವುದು ಭಕ್ತ ಸಮೂಹಕ್ಕೆ ನೋವುಂಟು ಮಾಡಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಕೊಮಾರನಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ಸಾಂದರ್ಭಿಕ ಚಿತ್ರ
    ಭದ್ರಾವತಿ, ಸೆ. ೨೫: ತಾಲೂಕಿನ ಕೊಮಾರನಹಳ್ಳಿ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಎದುರಾಗಿದೆ.
    ಕೊಮಾರನಹಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಬಂದು ಹೋಗಿರುವ ಮಾಹಿತಿಗಳಿದ್ದು, ಗ್ರಾಮದಲ್ಲಿ ನಾಯಿಗಳನ್ನು ಭೇಟೆಯಾಡಿರುವುದು ಗ್ರಾಮಸ್ಥರಿಗೆ ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಆತಂಕ ಎದುರಾಗಿದೆ. ಮಾಹಿತಿ ತಿಳಿದ ತಕ್ಷಣ ಶುಕ್ರವಾರ ರಾತ್ರಿಯೇ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕಾಡಂಚಿನ ಗ್ರಾಮವಾಗಿರುವ ಹಿನ್ನಲೆಯಲ್ಲಿ ಚಿರತೆ ಸೇರಿದಂತೆ ಕಾಡು ಪ್ರಾಣಿಗಳು ಬಂದು ಹೋಗುವುದು ಸಹಜವಾಗಿದ್ದು, ಈ ಭಾಗದಲ್ಲಿ ಸಿಬ್ಬಂದಿಗಳು ಪ್ರತಿದಿನ ರಾತ್ರಿ ವೇಳೆ ಗಸ್ತು ತಿರುಗುತ್ತಾರೆ. ಮುನ್ನಚ್ಚರಿಕೆ ಕ್ರಮವಾಗಿ ಕೊಮಾರನಹಳ್ಳಿ ಗ್ರಾಮಕ್ಕೆ ಬೆಳಿಗ್ಗೆ ಸಹ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದು ವೇಳೆ ಚಿರತೆ ಹಾವಳಿ ಹೆಚ್ಚಾದ್ದಲ್ಲಿ ಹಿಡಿಯಲು ಬೋನ್ ಅಳವಡಿಸಲಾಗುವುದು ಎಂದರು.

Friday, September 24, 2021

ಸೆ.೨೬ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ಸೆ. ೨೪: ಮೆಸ್ಕಾಂ ಸೀಗೆಬಾಗಿ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಸ್.ಎಫ್-೧, ಭದ್ರಾ ಕಾಲೋನಿ ಮತ್ತು ಎಸ್.ಎಫ್-೨, ವೀರಾಪುರ ಫೀಡರ್‌ನ ೧೧ ಕೆ.ವಿ ಮಾರ್ಗ ಮತ್ತು ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾಮಗಾರಿ ಸೆ.೨೬ರಂದು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಕಣಕಟ್ಟೆ, ಭದ್ರಾ ಕಾಲೋನಿ, ಮಜ್ಜಿಗೇನಹಳ್ಳಿ, ಬಾಬಳ್ಳಿ, ಗೌಡರಹಳ್ಳಿ, ಲಕ್ಷ್ಮೀಪುರ, ವೀರಾಪುರ, ಶ್ರೀರಾಮನಗರ, ಸೈಯ್ಯದ್ ಕಾಲೋನಿ, ಸೀಗೆಬಾಗಿ, ಶ್ರೀ ಸತ್ಯಸಾಯಿ ನಗರ ಇತ್ಯಾದಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.