Tuesday, October 5, 2021

ಹಿರಿಯೂರು ಗ್ರಾಮ ಪಂಚಾಯಿತಿ ಹಾಲಿ ಸದಸ್ಯರ ಮೇಲಿನ ಆರೋಪ ಸತ್ಯಕ್ಕೆ ದೂರ

ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಪವಿತ್ರ ಜಿ. ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ


ಭದ್ರಾವತಿ ಹಿರಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು ಹಾಗು ಗ್ರಾಮದ ಕೆಲವು ಮುಖಂಡರು ಹಾಲಿ ಸದಸ್ಯರ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಪವಿತ್ರ ಜಿ ಮಂಜುನಾಥ್ ಹಾಗು ಸದಸ್ಯರು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
    ಭದ್ರಾವತಿ, ಅ. ೫: ಹಿರಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು ಹಾಗು ಗ್ರಾಮದ ಕೆಲವು ಮುಖಂಡರು ಹಾಲಿ ಸದಸ್ಯರ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಪವಿತ್ರ ಜಿ ಮಂಜುನಾಥ್ ಹಾಗು ಸದಸ್ಯರು ಸ್ಪಷ್ಟಪಡಿಸಿದರು.
    ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಮಧುಸೂದನ್‌ರವರು ನಮ್ಮ ಅವಧಿಯಲ್ಲಿ ಕೇವಲ ೫ ರಿಂದ ೬ ತಿಂಗಳು  ಮಾತ್ರ ಕರ್ತವ್ಯ  ನಿರ್ವಸಿದ್ದು, ಹಿಂದಿನ ಸದಸ್ಯರ ಅವಧಿಯಲ್ಲಿಯೇ ಸುಮಾರು ೩ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿರುತ್ತಾರೆ. ಅಂದು ಮಧುಸೂದನ್ ಅವರ ಬಗ್ಗೆ ಭ್ರಷ್ಟಾಚಾರ ಆರೋಪ ಮಾಡದೆ ಇದೀಗ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದರು.
    ನಾವು ಗ್ರಾಮ ಪಂಚಾಯಿತಿ ಆಡಳಿತ ಯಾವ ರೀತಿ ನಡೆಸಬೇಕು. ನಡವಳಿ ಹೇಗೆ ಸಿದ್ದಪಡಿಸಬೇಕು. ಇತ್ಯಾದಿ ವಿಚಾರಗಳ ಬಗ್ಗೆ ತರಬೇತಿ ಪಡೆದಿದ್ದೇವೆ. ನಾವು ನಮ್ಮ ಗಂಡಂದಿರು ಅಥವಾ ಬೇರೆಯವರ ನೆರವಿಲ್ಲದೆ ಸಮರ್ಥವಾಗಿ ಆಡಳಿತ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದೇವೆ. ಈ ಹಿಂದಿನ ಸದಸ್ಯರು ಮಾಡಿರುವ ಆರೋಪದಂತೆ ನಮ್ಮ ಗಂಡಂದಿರು ಪಂಚಾಯಿತಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.
    ೧೪ನೇ ಹಣಕಾಸು ಯೋಜನೆ ಮತ್ತು ವರ್ಗ-೧ರಲ್ಲಿ ಅವರ ಅವಧಿಯಲ್ಲಿಯೇ ಅನುದಾನ ಬಿಡುಗಡೆಗೊಂಡಿದ್ದು, ಈ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಹಾಲಿ ಸದಸ್ಯರ ಮೇಲೆ ಮಾಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಅಲ್ಲದೆ ಅಕ್ರಮ ಖಾತೆ ಸಂಬಂಧ ಮಾಡಿರುವ ಆರೋಪ ಸಹ ಇವರ ಅವಧಿಯಲ್ಲಿಯೇ ನಡೆದಿದ್ದು, ಅವರ ಅವಧಿಯಲ್ಲಿ ಪ್ರಶ್ನಿಸದೆ ಇದೀಗ ಆರೋಪ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
    ಸದಸ್ಯರಾದ ಅನಿತ ಚಂದ್ರ, ರಾಮಮೂರ್ತಿ, ನಾಗವೇಣಿ, ಎಲ್. ಕೃಷ್ಣೇಗೌಡ, ಪಲ್ಲವಿ ಎಚ್.ಎಸ್ ಮಲ್ಲಿಕಾರ್ಜುನ , ಕಿರಣ್ ರಾಜ್ ಮತ್ತು ಸಂತೋಷ್ ಉಪಸ್ಥಿತರಿದ್ದರು.

Monday, October 4, 2021

ಇಬ್ರಾಹಿಂ ಮಾತೃಪಕ್ಷಕ್ಕೆ ಮರಳಿ ಬಂದಲ್ಲಿ ಕ್ಷೇತ್ರದ ಮಟ್ಟಿಗೆ ಶಾರದ ಅಪ್ಪಾಜಿಗೆ ಸಂಕಷ್ಟ

ಸಿ.ಎಂ ಇಬ್ರಾಹಿಂ ಮತ್ತು ಕುಮಾರಸ್ವಾಮಿ
    * ಅನಂತಕುಮಾರ್
    ಭದ್ರಾವತಿ: ಮೂಲತಃ ಭದ್ರಾವತಿ ವಿಧಾನಸಭಾ ಕ್ಷೇತ್ರದವರಾದ ವಿಧಾನ ಪರಿಷತ್ ಸದಸ್ಯ, ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಇತ್ತೀಚೆಗೆ ಪುನಃ ತಮ್ಮ ಮಾತೃಪಕ್ಷಕ್ಕೆ ಮರಳುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಈ ರೀತಿಯ ಹೇಳಿಕೆಗಳನ್ನು ಈ ಹಿಂದೆ ಸಹ ನೀಡಿದ್ದರು ಎಂಬುದನ್ನು ಗಮನಿಸಬೇಕಾದ ಸಂಗತಿಯಾಗಿದೆ. ಇಬ್ರಾಹಿಂ ಇದುವರೆಗೂ ಕಾಂಗ್ರೆಸ್ ಬಿಟ್ಟು ಹೊರಬಂದಿಲ್ಲ. ಮುಂದೆ ಸಹ ಬರುವ ನಿರೀಕ್ಷೆ ಇಲ್ಲ. ಆದರೂ ಕ್ಷೇತ್ರದ ಮಟ್ಟಿಗೆ ಅವರ ಹೇಳಿಕೆಗಳು ಇದೀಗ ಸಕ್ರಿಯ ರಾಜಕಾರಣಕ್ಕೆ ಮರಳಿರುವ ಶಾರದ ಅಪ್ಪಾಜಿ ಅವರಿಗೆ ಹಿನ್ನಡೆಯನ್ನುಂಟು ಮಾಡುವುದು ಮಾತ್ರ ಖಚಿತವಾಗಿದೆ.
    ಇಬ್ರಾಹಿಂ ಅವರು ಭದ್ರಾವತಿ ವಿಧಾನಸಭಾ ಕ್ಷೇತ್ರದವರೇ ಆದರೂ ಸಹ ಇದುವರೆಗೂ ಕ್ಷೇತ್ರದಲ್ಲಿ ನೆಲೆಕಾಣಲು ಸಾಧ್ಯವಾಗಿಲ್ಲ. ಈ ನಡುವೆ ಅವರ ಮಾತೃಪಕ್ಷ ಜಾತ್ಯಾತೀತ ಜನತಾದಳ ಅವರನ್ನು ಎಂದಿಗೂ ಕೈಬಿಟ್ಟಿಲ್ಲ ಎಂಬುದು ಸಹ ನೂರಕ್ಕೆ ನೂರರಷ್ಟು ಸತ್ಯ. ಇದಕ್ಕೆ ಉದಾಹರಣೆ ಪಕ್ಷದ ವರಿಷ್ಠ ಎಚ್.ಡಿ ದೇವೇಗೌಡರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಇಬ್ರಾಹಿಂ ಕೇಂದ್ರ ಸಚಿವರಾಗಲು ಸಾಧ್ಯವಾಯಿತು. ಈಗಲೂ ಸಹ ಅವರ ಮೇಲೆ ಪಕ್ಷ ಅಷ್ಟೆ ಪ್ರೀತಿ, ವಿಶ್ವಾಸವನ್ನು ಹೊಂದಿದೆ ಎಂದರೆ ತಪ್ಪಾಗಲಾರದು. ಇದಕ್ಕೆ ಪೂರಕವೆಂಬಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಇತ್ತೀಚೆಗೆ ಇಬ್ರಾಹಿಂ ಕುರಿತು ನೀಡುತ್ತಿರುವ ಹೇಳಿಕೆಗಳು ಹೆಚ್ಚು ಗಮನ ಸೆಳೆಯುತ್ತಿವೆ.


ಶಾರದ ಅಪ್ಪಾಜಿ
    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಆತ್ಮೀಯ ಸ್ನೇಹ ಬಾಂಧವ್ಯ ಇಬ್ರಾಹಿಂ ಮಾತೃಪಕ್ಷದಿಂದ ಕಳಚಿಕೊಳ್ಳುವಂತೆ ಮಾಡಿತ್ತು. ಸಿದ್ದಾರಾಮಯ್ಯ ಸಹ ಇಬ್ರಾಹಿಂ ಅವರನ್ನು ಎಂದಿಗೂ ಕಡೆಗಣಿಸಿಲ್ಲ. ಹಲವು ಬಾರಿ ಕಾಂಗ್ರೆಸ್ ಪಕ್ಷದಲ್ಲಿನ ಅಹಿತಕರ ಬೆಳವಣಿಗಳಿಂದ ಇಬ್ರಾಹಿಂ ಮನನೊಂದಿದ್ದರು. ಜೊತೆಗೆ ಪುನಃ ಮಾತೃಪಕ್ಷಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದರು. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲೂ ಸೂಕ್ತ ಸ್ಥಾನಮಾನಗಳನ್ನು ಕಲ್ಪಿಸಿಕೊಡುವ ಜೊತೆಗೆ ಈ ಹಿಂದಿನ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪ್ರಬಲವಾಗಿ, ರಾಜಕೀಯವಾಗಿ ಅಸ್ತಿತ್ವ ಕಂಡುಕೊಂಡಿರುವ ಬಿ.ಕೆ ಸಂಗಮೇಶ್ವರ್ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಿ ಇಬ್ರಾಹಿಂ ಸ್ಪರ್ದಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಆದರೆ ಇಬ್ರಾಹಿಂ ಚುನಾವಣೆಯಲ್ಲಿ ೩ನೇ ಸ್ಥಾನ ಕಾಯ್ದುಕೊಂಡಿದ್ದರು. ಇಬ್ರಾಹಿಂ ಇಂತಹ ಪರಿಸ್ಥಿತಿಯಲ್ಲೂ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ಈ ಮೂಲಕ ಸಿದ್ದರಾಮಯ್ಯ ಸ್ನೇಹ ಬಾಂಧವ್ಯ ಮತ್ತಷ್ಟು ಗಟ್ಟಿ ಮಾಡಿಕೊಂಡಿದ್ದರು.
    ಕ್ಷೇತ್ರದಲ್ಲಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ತಮ್ಮದೇ ಆದ ವರ್ಚಸ್ಸಿನ ಮತಗಳನ್ನು ಹೊಂದಿದ್ದರು. ಅವರ ನಿಧನದ ನಂತರ ಅವರ ಸ್ಥಾನವನ್ನು ತುಂಬಬಹುದಾದ ಸಮರ್ಥ ನಾಯಕನ ಹುಡುಕಾಟದಲ್ಲಿ ತೊಡಗಿದ್ದ ಜೆಡಿಎಸ್ ಒಂದು ವರ್ಷದ ಬಳಿಕೆ ಅಪ್ಪಾಜಿಯವರ ವರ್ಚಸ್ಸಿನ ಮತ ಹಾಗು ಅನುಕಂಪದ ಮತಗಳನ್ನು ಸೆಳೆಯಲು ಅಪ್ಪಾಜಿ ಅವರ ಪತ್ನಿ ಶಾರದ ಅಪ್ಪಾಜಿಗೆ ನಾಯಕತ್ವ ವಹಿಸಿಕೊಡುವ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕ್ಷೇತ್ರದಲ್ಲಿ  ಇಬ್ರಾಹಿಂ ಅಗತ್ಯವಿಲ್ಲದೆ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲುವ ಲಕ್ಷಣದ ವಾತಾವರಣ ಇದೀಗ ಕಂಡು ಬರುತ್ತಿದೆ. ಇಂತಹ ಸಂದರ್ಭದಲ್ಲಿ ಒಂದು ವೇಳೆ ಇಬ್ರಾಹಿಂ ಮಾತೃಪಕ್ಷಕ್ಕೆ ಮರಳಿ ಬಂದಲ್ಲಿ ಕ್ಷೇತ್ರದ ಮಟ್ಟಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ. ಅದರಲ್ಲೂ ಶಾರದ ಅಪ್ಪಾಜಿಗೆ ಹಿನ್ನಡೆಯಾಗುವುದು ಬಹುತೇಕ ಖಚಿತವಾಗಿದೆ ಎಂಬ ಲೆಕ್ಕಚಾರಗಳ ರಾಜಕೀಯ ವಿಶ್ಲೇಷಣೆಗಳು ನಡೆಯುತ್ತಿವೆ. ಇಷ್ಟಕ್ಕೂ ಕಾಂಗ್ರೆಸ್ ಯಾವುದೇ ರೀತಿ ದ್ರೋಹ ಬಗೆದಿಲ್ಲ. ಆದರೂ ಇಬ್ರಾಹಿಂ ಮಾತೃಪಕ್ಷಕ್ಕೆ ಮರಳುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಇಂದೊಂದು ರೀತಿಯ  ಅಪರೇಷನ್ ಕಾಂಗ್ರೆಸ್ ರೀತಿಯಲ್ಲಿ ಕಂಡು ಬರುತ್ತಿದೆ.

ಸುಲ್ತಾನ್‌ಮಟ್ಟಿ ಸರ್ಕಾರಿ ಶಾಲೆಯಲ್ಲಿ ನೂತನ ಪ್ರಯೋಗಾಲಯ ಉದ್ಘಾಟನೆ

ಭದ್ರಾವತಿ ತಾಲೂಕಿನ ಸುಲ್ತಾನ್‌ಮಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೋಮವಾರ ವಿಜ್ಞಾನ ಶಾಸ್ತ್ರ ಮತ್ತು ಗಣಿತ ಶಾಸ್ತ್ರದ ನೂತನ ಪ್ರಯೋಗಾಲಯವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
    ಭದ್ರಾವತಿ, ಅ. ೪: ತಾಲೂಕಿನ ಸುಲ್ತಾನ್‌ಮಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೋಮವಾರ ವಿಜ್ಞಾನ ಶಾಸ್ತ್ರ ಮತ್ತು ಗಣಿತ ಶಾಸ್ತ್ರದ ನೂತನ ಪ್ರಯೋಗಾಲಯವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಪ್ರಯೋಗಾಲಯ ನಿರ್ಮಾಣಕ್ಕೆ ಸುಮಾರು ೪೦ ಸಾವಿರ ರು. ಸ್ವಂತ ಹಣ ವ್ಯಯ ಮಾಡಿರುವ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರೇವಣಪ್ಪ ಮತ್ತು ಸಹ ಶಿಕ್ಷಕ ಆನಂದ್‌ರವರನ್ನು ಅಭಿನಂದಿಸಿದರು.
    ಶಾಲೆಯ ಮುಖ್ಯ ಶಿಕ್ಷಕರು ಹಾಗು ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಮಾತನಾಡಿ, ಮುಂಬರುವ ಶೈಕ್ಷಣಿಕ ಸಾಲಿನಿಂದ ಪ್ರತಿ ವರ್ಷ ಶಾಲೆಗೆ ಹೊಸದಾಗಿ ದಾಖಲಾಗುವ ಪ್ರತಿ ಮಗುವಿಗೆ ೨೦೦೦ ರು. ಉಚಿತ ಬಾಂಡ್ ನೀಡುವ ವಿನೂತನ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.
    ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್, ಸಿಆರ್‌ಪಿ ಲಿಂಗರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಉತ್ತರೇಶ್ ಹಾಗು ಸದಸ್ಯರು, ಕಾಂಗ್ರೆಸ್ ಯುವ ಮುಖಂಡ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಮಹಾತ್ಮಗಾಂಧಿ, ಲಾಲ್‌ಬಹದ್ದೂರು ಶಾಸ್ತ್ರಿ ಜಯಂತಿ


ಭದ್ರಾವತಿ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಮತ್ತು 'ಲೋಕ್ ಅದಾಲತ್' ಉಪಯೋಗಗಳ ಕುರಿತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಇ .ಮೋಹನ್ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ, ಅ. ೪: ನಗರದ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಮತ್ತು 'ಲೋಕ್ ಅದಾಲತ್' ಉಪಯೋಗಗಳ ಕುರಿತ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಇ .ಮೋಹನ್ ಗೌಡ ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, 'ಲೋಕ್ ಅದಾಲತ್' ಉಪಯೋಗಗಳ ಕುರಿತು ಮಾಹಿತಿ ನೀಡುವ ಜೊತೆಗೆ ಉಚಿತ ಕಾನೂನು ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
    ಬಿ.ಇಡಿ ವಿಭಾಗದ ಉಪನ್ಯಾಸಕಿ ಚೈತ್ರರವರು ಮಹಾತ್ಮ ಗಾಂಧಿ ಅವರ ತತ್ವ ಮತ್ತು ಆದರ್ಶಗಳನ್ನು ಕುರಿತ ಮಾತನಾಡಿದರು. 
    ವಕೀಲರ ಸಂಘದ ಕಾರ್ಯದರ್ಶಿ ಟಿ.ಎಸ್ ರಾಜು, ಖಜಾಂಚಿ ಎನ್. ರಂಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾಹಿತಿ ನೀಡಿದರು.  ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಶಿವಾಜಿರಾವ್, ಸಿಆರ್‌ಪಿ ಸುನಿತಾ, ಪ್ರತಿಭಾ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ. ರಾಕೇಶ್, ಪಿಯು ವಿಭಾಗಗಳ ಪ್ರಾಂಶುಪಾಲ ವರದರಾಜ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
    ವಿದ್ಯಾ ಸಂಸ್ಥೆಯ ಸಂಸ್ಥಾಪಕ ಛೇರ್ಮನ್ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಆಡಳಿತಧಿಕಾರಿ ಶಿವಲಿಂಗೇಗೌಡ  ಸ್ವಾಗತಿಸಿದರು.  ಆಶಾ ಪ್ರಾರ್ಥಿಸಿದರು. ಉಪನ್ಯಾಸಕಿ ಶೋಭಾ ನಿರೂಪಿಸಿ, ವೀಣಾ ವಂದಿಸಿದರು.

ಹೊಸಸಿದ್ದಾಪುರ ಸರ್ಕಾರಿ ಪ್ರೌಢಶಾಲೆ ಗಾಂಧಿ ಜಯಂತಿ, ಲೋಕ್ ಅದಾಲತ್

ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 'ಅಜಾದಿ ಕಾ ಅಮೃತ್ ಮಹೋತ್ಸವ' ಅಂಗವಾಗಿ ಗಾಂಧಿ ಜಯಂತಿ ಮತ್ತು ʻಲೋಕ್ ಅದಾಲತ್ʼ ಉಪಯೋಗಗಳ ಕುರಿತ ಕಾರ್ಯಕ್ರಮವನ್ನು ಜೆಎಂಎಫ್‌ಸಿ ೨ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಈ ಬಣಕಾರ ಉದ್ಘಾಟಿಸಿದರು.  
    ಭದ್ರಾವತಿ, ಅ. ೪: ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ವತಿಯಿಂದ 'ಅಜಾದಿ ಕಾ ಅಮೃತ್ ಮಹೋತ್ಸವ' ಅಂಗವಾಗಿ ಗಾಂಧಿ ಜಯಂತಿ ಮತ್ತು   ʻಲೋಕ್ ಅದಾಲತ್ʼ ಉಪಯೋಗಗಳ ಕುರಿತ ಕಾ‍ರ್ಯಕ್ರಮವನ್ನು    ಆಯೋಜಿಸಲಾಗಿತ್ತು.
    ಕಾರ್ಯಕ್ರಮವನ್ನು ನಗರದ ಜೆಎಂಎಫ್‌ಸಿ ೨ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಈ ಬಣಕಾರ ಉದ್ಘಾಟಿಸಿದರು.  ವಕೀಲರ ಸಂಘದ ಉಪಾಧ್ಯಕ್ಷ ವೈ. ಜಯರಾಂ, ಕಲ್ಲಹಳ್ಳಿ ಶೈಕ್ಷಣಿಕ ಮಾರ್ಗದರ್ಶಕ ಶೇಖರಪ್ಪ, ನಗರಸಭಾ ಸದಸ್ಯ ಸೈಯದ್ ರಿಯಾಜ್, ಎಸ್.ಡಿ.ಎಸ್.ಸಿ ಕಾರ್ಯಾಧ್ಯಕ್ಷ ರಾಜು ಎಸ್. ರಾಯ್ಕರ್ ಮತ್ತು ಸದಸ್ಯ ಸೋಮಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕಾರ್ಯಕ್ರಮದಲ್ಲಿ ಲೋಕ್ ಆದಾಲತ್ ಪ್ರಯೋಜನಗಳನ್ನು ವಿವರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಆಋ. ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ವಿ. ವರ್ಷಾ ಪ್ರಾರ್ಥಿಸಿದರು. ಡಿ. ಮುರುಳೀಧರ ಸ್ವಾಗತಿಸಿ ಎಚ್.ಎಸ್ ಶಕುಂತಲ ನಿರೂಪಿಸಿದರು. ಎಸ್.ಕೆ ಗೀತಾ ವಂದಿಸಿದರು.


Sunday, October 3, 2021

ವಿಐಎಸ್‌ಎಲ್ ಸೇರಿದಂತೆ ವಿವಿಧೆಡೆ ಮಹಾತ್ಮಗಾಂಧಿ ಜಯಂತಿ

ಕೇಂದ್ರ ಭಾರತೀಯ ಉಕ್ಕು ಪ್ರಾಧಿಕಾರದ  ಅಂಗ ಸಂಸ್ಥೆಯಾಗಿರುವ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ೧೫೨ನೇ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
    ಭದ್ರಾವತಿ, ಅ. ೩: ಕೇಂದ್ರ ಭಾರತೀಯ ಉಕ್ಕು ಪ್ರಾಧಿಕಾರದ  ಅಂಗ ಸಂಸ್ಥೆಯಾಗಿರುವ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೇರಿದಂತೆ ವಿವಿಧೆಡೆ ೧೫೨ನೇ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
    ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ, ಸಿಬ್ಬಂದಿ ಮತ್ತು ಆಡಳಿತ ವಿಭಾಗದ ಪ್ರಭಾರ ಮಹಾ ಪ್ರಬಂಧಕ ಪಿ.ಪಿ ಚಕ್ರವರ್ತಿ, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷ  ಎ.ಆರ್ ವೀರಣ್ಣ ಮಹಾತ್ಮಗಾಂಧಿ  ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಡಾ. ಎಸ್. ಕವಿತ ಭಗದ್ಗೀತೆ, ನೂರಾ ಮೆನೆಜಸ್ ಬೈಬಲ್  ಮತ್ತು ಹಫೀಜ್ ಉರ್ ರಹಮಾನ್ ಕುರಾನ್ ಪವಿತ್ರ ಗ್ರಂಥಗಳ ಸಂದೇಶಗಳನ್ನು ಪಠಿಸಿದರು.
    ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದಿರುವ ರಿತ್ವಿಕ್ ಸುರೇಶ್, ಜಿ. ಪ್ರಿತಿಕಾ ಮತ್ತು ಧನುಷ್ ಶೆಟ್ಟಿ ಹಾಗು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದಿರುವ ಟಿ. ಸಂಗಮಿತ್ರ, ಕೆ. ಶ್ರೇಯಾ ಸುಜಿತ್, ಜಿ. ಹರಿಸಂಜಯ್ ಮತ್ತು ಪನ್ನಗ್ ಕುಮಾರ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
    ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ  'ಭಾರತೀಯ ಸ್ವಾತಂತ್ರ್ಯ ಹೋರಾಟಗಾರರು' ವಿಷಯದ ಬಗ್ಗೆ ಹಮ್ಮಿಕೊಳ್ಳಲಾಗಿದ್ದ  ವೇಷಭೂಷಣ ಸ್ಪರ್ಧೆ ಮತ್ತು ಏಕಪಾತ್ರಾಭಿಯದಲ್ಲಿ ವಿಜೇತರಾದ ಕೆ. ಮೋಹಿತ್(ಪ್ರಥಮ), ಕೆಸರ್ ಡಿ. ಭೋನ್ಸಲೆ(ದ್ವಿತೀಯ) ಮತ್ತು ಡಿ. ನಾಗಲಕ್ಷ್ಮಿ(ತೃತೀಯ) ಹಾಗು ಸಿ. ನಂದಿನಿ, ಬಿ.ಯು ಪೂರ್ವಿಕ, ವಿ.ಎಸ್ ಗೌರಿ, ವೈ. ಭುವನ್, ಬಿಎನ್ ಧೃವನಶ್ರೀ ಮತ್ತು ಬಿ.ಎಸ್ ಜೀವಿತಾ ಅವರಿಗೆ ಬಹುಮಾನಗಳನ್ನು ನೀಡಲಾಯಿತು. ನಿಶ್ಚಿತ್ ಮೌರ್ಯ ಕಾರ್ಯಕ್ರಮ ನಿರೂಪಿಸಿದರು.


ನಗರ ಹಾಗು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ, ಯುವ ಘಟಕ ಹಾಗು ಮಹಿಳಾ ಘಟಕ ವತಿಯಿಂದ ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
       ಬ್ಲಾಕ್ ಕಾಂಗ್ರೆಸ್‌ವತಿಯಿಂದ ಗಾಂಧಿ ಜಯಂತಿ:
    ನಗರ ಹಾಗು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ, ಯುವ ಘಟಕ ಹಾಗು ಮಹಿಳಾ ಘಟಕ ವತಿಯಿಂದ ನಗರದ ತರೀಕೆರೆ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಯುವ ಘಟಕದ ನಗರ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹಮದ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ ಹಾಗು ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.


ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗು ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿ ಆಚರಿಸಲಾಯಿತು.
        ಜಯಕರ್ನಾಟಕ ಸಂಘಟನೆ ವತಿಯಿಂದ ಸ್ವಚ್ಛತಾ ಕಾರ್ಯ:
    ತಾಲೂಕಿನ ಶಂಕರಘಟ್ಟದಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗು ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿ ಆಚರಿಸಲಾಯಿತು.
    ಬಿಸಿಎಂ ವಿದ್ಯಾರ್ಥಿ ನಿಲಯದ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಘಟನೆ ಜಿಲ್ಲಾಧ್ಯಕ್ಷ ಡಿ.ಟಿ ಶಶಿಕುಮಾರ್ ನೇತೃತ್ವ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷ ತ್ಯಾಗರಾಜ್, ನಂದೀಶ್‌ಕುಮಾರ್ ಸೇರಿದಂತೆ ಗ್ರಾಮದ ಮುಖಂಡರು, ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.


ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು.

    ಅಂತರಗಂಗೆ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಕಾರ್ಯ:
ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು.
ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ನಡೆಸುವ ಮೂಲಕ ಜಾಗೃತಿ ಮೂಡಿಸಲಾಯಿತು. ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಆಶಾ ಹಾಗು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ಭದ್ರಾವತಿ ನಗರಸಭೆ ವ್ಯಾಪ್ತಿಯ ಆನೆಕೊಪ್ಪ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನಿ ವೃದ್ಧಾಶ್ರಮದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಮಹಾತ್ಮಗಾಂಧಿ ಜಯಂತಿ ವಿಶೇಷವಾಗಿ ಆಚರಿಸಲಾಯಿತು.
     ಲಯನ್ಸ್ ಕ್ಲಬ್ ವತಿಯಿಂದ ವೃದ್ಧಾಶ್ರಮದಲ್ಲಿ ಗಾಂಧಿ ಜಯಂತಿ:
    ನಗರಸಭೆ ವ್ಯಾಪ್ತಿಯ ಆನೆಕೊಪ್ಪ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನಿ ವೃದ್ಧಾಶ್ರಮದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಮಹಾತ್ಮಗಾಂಧಿ ಜಯಂತಿ ವಿಶೇಷವಾಗಿ ಆಚರಿಸಲಾಯಿತು.
    ಹಿರಿಯ ನಾಗರಿಕರಿಗೆ ಚೈತನ್ಯ ತುಂಬುವ ಜೊತೆಗೆ ಕೊರೋನಾ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ಮಹೇಶ್‌ಕುಮಾರ್, ಬಾರಂದೂರು ಮಂಜುನಾಥ್, ವೃದ್ಧಾಶ್ರಮದ ಮುಖ್ಯಸ್ಥೆ ಸವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಹಾತ್ಮರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಿರದಿರಲಿ : ಡಿ. ಮಂಜುನಾಥ್

ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಕರ್ನಾಟಕ ಜಾನಪದ ಪರಿಷತ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನಾಚರಣೆ, ಗುರುಗಳಿಗೆ ಅಭಿನಂದನೆ ಮತ್ತು ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ಎಸ್.ಎಸ್ ವಿಜಯಾದೇವಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಅ. ೩: ಮಹಾತ್ಮರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಿರದೆ ಅವರ ಆದರ್ಶತನಗಳು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿರಬೇಕೆಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
ಅವರು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಕರ್ನಾಟಕ ಜಾನಪದ ಪರಿಷತ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನಾಚರಣೆ, ಗುರುಗಳಿಗೆ ಅಭಿನಂದನೆ ಮತ್ತು ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಹಿಂದಿನಿಂದಲೂ ನಾವುಗಳು ಮಹಾತ್ಮರ ಜಯಂತಿಗಳನ್ನು ಆಚರಣೆ ಮಾಡುತ್ತಿದ್ದೇವೆ. ಅವರ ಕುರಿತು ಮಾತನಾಡುತ್ತೇವೆ. ಆದರೆ ಅವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಗಮನ ಹರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭೆ ಸದಸ್ಯೆ ಅನುಪಮ ಚನ್ನೇಶ್, ಜಾನಪದ ಸಂಸ್ಕೃತಿಗಳು ನಶಿಸಿ ಹೋಗುತ್ತಿದ್ದು, ಇವುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರುಗಳಿಗೆ ಉಳಿಸಿ ಬೆಳೆಸುವ ಕೆಲಸವಾಗಬೇಕು. ಮಹಿಳೆಯರು ಕೇವಲ ಕುಟುಂಬಕ್ಕೆ ಮಾತ್ರ ಸೀಮಿತವಾಗಿರದೆ ಸಮಾಜದ ಮುಖ್ಯವಾಹಿನಿಯಲ್ಲೂ ಗುರುತಿಸಿಕೊಂಡು ತಮ್ಮ ಸೇವೆಯನ್ನು ಸಲ್ಲಿಸುವ ನಿಟ್ಟಿನಲ್ಲಿ ಮಹಿಳಾ ಸೇವಾ ಸಮಾಜ ವೇದಿಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ಎಸ್.ಎಸ್ ವಿಜಯಾದೇವಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್‌ರಾವ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಟಿ.ಜಿ ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಹಿರಿಯೂರು ಕೆ.ಟಿ ಪ್ರಸನ್ನ, ಸಮಾಜದ ಕಾರ್ಯದರ್ಶಿ ಶೋಭಾ ಗಂಗರಾಜ್, ಖಜಾಂಚಿ ಜಯಂತಿ ನಾಗರಾಜ್ ಶೇಟ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಶೋಭಾ ಮತ್ತು ತಂಡದವರು ಪ್ರಾರ್ಥಿಸಿದರು. ಶಕುಂತಲ, ಇಂದಿರಾ ಆಥಿತಿಗಳನ್ನು ಪರಿಚಯ ಮಾಡಿದರು. ಶಾರದಾ ಶ್ರೀನಿವಾಸ್ ನಿರೂಪಿಸಿದರು. ಕಮಲಾ ಕುಮಾರಿ ವಂದಿಸಿದರು.
    ಸಮಾಜದ ಸದಸ್ಯೆಯರು ಉತ್ತರ ಕನ್ನಡ ಜಾನಪದ ಸೊಗಡಿನ ತವರು ಮನೆ ಜಾನಪದ ರೂಪಕ ಪ್ರಸ್ತುತ ಪಡಿಸುವ ಮೂಲಕ ವಿಶೇಷವಾಗಿ ಗಮನ ಸೆಳೆಯುವ ಜೊತೆಗೆ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟರು.