Wednesday, October 20, 2021

ವಿಐಎಸ್‌ಎಲ್-ಎಂಪಿಎಂ ಉಳಿಸಿ, ಕಾರ್ಮಿಕರಿಗೆ ಸೇವಾ ಭದ್ರತೆ ನೀಡಿ : ಶಾರದ ಅಪ್ಪಾಜಿ ಮನವಿ

ಭದ್ರಾವತಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾರದ ಅಪ್ಪಾಜಿ ಮಾತನಾಡಿದರು.
    ಭದ್ರಾವತಿ, ಅ. ೨೦: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಈ ಎರಡು ಕಾರ್ಖಾನೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಪುನಃ ಅಭಿವೃದ್ದಿಪಡಿಸಿ ಕ್ಷೇತ್ರದ ನಾಗರೀಕರಿಗೆ ಉದ್ಯೋಗ ಒದಗಿಸಿಕೊಡುವಂತೆ ಮುಂಬರುವ ವಿಧಾನಸಭಾ ಚುನಾವಣೆಯ ನಿಯೋಜಿತ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಮನವಿ ಮಾಡಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ರಾಜ್ಯ ಸರ್ಕಾರಿ ಸ್ವಾಮ್ಯದ ಎಂಪಿಎಂ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ಆದೇಶಿಸಿರುವ ಮಾಹಿತಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಕಾರ್ಖಾನೆಯಲ್ಲಿ ಉದ್ಯೋಗವಿಲ್ಲದೆ ಉಳಿದುಕೊಂಡಿರುವ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸಿಕೊಡಬೇಕು. ಸರ್ಕಾರ ಕಾರ್ಖಾನೆ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಸುಮಾರು ೪೦ ವರ್ಷಗಳ ಅವಧಿಗೆ ಈಗಾಗಲೇ ಗುತ್ತಿಗೆ ನೀಡಿದೆ. ಈ ಹಿನ್ನಲೆಯಲ್ಲಿ ಉದ್ಯೋಗವಿಲ್ಲದೆ ಉಳಿದುಕೊಂಡಿರುವ ಕಾರ್ಮಿಕರನ್ನು ಇಲ್ಲಿಗೆ ನಿಯೋಜನೆಗೊಳಿಸಬೇಕು. ಅಲ್ಲದೆ ಈಗಾಗಲೇ ಸರ್ಕಾರದ ವಿವಿಧ ನಿಗಮ ಮಂಡಳಿಗಳಲ್ಲಿ ನಿಯೋಜನೆ ಮೇಲೆ ತೆರಳಿರುವ ನೌಕರರನ್ನು ಅಲ್ಲಿಯೇ ಕಾಯಂಗೊಳಿಸಿ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು. ಸರ್.ಎಂ ವಿಶ್ವೇಶ್ವರಾಯ ಅವರ ಪರಿಶ್ರಮದ ಫಲವಾಗಿ ಆರಂಭಗೊಂಡಿರುವ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳು ಉಳಿಯಬೇಕು. ಈ ನಿಟ್ಟಿನಲ್ಲಿ ಓರ್ವ ಕಾರ್ಮಿಕನ ಪತ್ನಿಯಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಮನವಿ ಮಾಡುತ್ತೇನೆ ಎಂದರು.
    ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ಮಾತನಾಡಿ, ಕಾರ್ಮಿಕ ಇಲಾಖೆ ಇದೀಗ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ಆದೇಶಿಸಿದೆ. ಇದರಿಂದಾಗಿ ಯಾವುದೇ ಉದ್ಯೋಗವಿಲ್ಲದೆ ಉಳಿದುಕೊಂಡಿರುವ ಕಾರ್ಮಿಕರು ಹಾಗು ಕುಟುಂಬ ವರ್ಗದವರಿಗೆ ಆತಂಕ ಉಂಟಾಗಿದೆ. ಈ ನಡುವೆ ಶಾರದ ಅಪ್ಪಾಜಿ ಅವರು ಕಾರ್ಮಿಕರು ಮತ್ತು ಕುಟುಂಬ ವರ್ಗದವರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ನಿಮ್ಮ ಮುಂದಿನ ಹೋರಾಟಗಳಿಗೆ ನಿಮ್ಮ ಜೊತೆ ಇರುವುದಾಗಿ ಭರವಸೆ ನೀಡಿದ್ದಾರೆ. ಅದರಂತೆ ನಡೆದುಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ಎಂಪಿಎಂ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ಅಥವಾ ಖಾಸಗಿಕರಣಗೊಳಿಸಲು ಯಾವುದೇ ರೀತಿ ಅಭ್ಯಂತರವಿಲ್ಲ. ಈ ಕುರಿತು ಉಚ್ಛನ್ಯಾಯಾಲಯದಲ್ಲೂ ಸ್ಪಷ್ಟಪಡಿಸಲಾಗಿದ್ದು, ಆದರೆ ಕಾರ್ಖಾನೆಯಲ್ಲಿ ಪ್ರಸ್ತುತ ಉಳಿದುಕೊಂಡಿರುವ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಸರ್ಕಾರ ನ್ಯಾಯಾಲಯದಲ್ಲಿ ಉಳಿದ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದೆ.  ಅದರಂತೆ ಸರ್ಕಾರದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಗೊಳಿಸುವಂತೆ ಕೋರಲಾಗಿದೆ. ಈಗಾಗಲೇ ಕೆಲವು ಕಾರ್ಮಿಕರನ್ನು ನಿಯೋಜನೆ ಮೇಲೆ ಕಳುಹಿಸಲಾಗಿದೆ. ಇವರನ್ನು ಆಯಾ ನಿಗಮ-ಮಂಡಳಿಗಳಲ್ಲಿ ವಿಲೀನ ಮಾಡಿಕೊಂಡು ಸೂಕ್ತ ವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು. ಉಳಿದಂತೆ ಯಾವುದೇ ಉದ್ಯೋಗವಿಲ್ಲದೆ ಉಳಿದುಕೊಂಡಿರುವ ಕಾರ್ಮಿಕರಿಗೆ ತಕ್ಷಣ ಉದ್ಯೋಗ ನೀಡುವಂತೆ ಒತ್ತಾಯಿಸಲಾಗಿದೆ. ಆ ನಂತರ ಸರ್ಕಾರ ಕಾರ್ಖಾನೆಯನ್ನು ಮುಚ್ಚುವ ಮುಂದಿನ ಪ್ರಕ್ರಿಯೆ ಆರಂಭಿಸಲಿ ಎಂದರು.
    ಪ್ರಸ್ತುತ ಕಾರ್ಮಿಕ ಇಲಾಖೆ ಹೊರಡಿಸಿರುವ ಆದೇಶವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ಈ ಸಂಬಂಧ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ನಡುವೆ ಕಾರ್ಖಾನೆ ಆಡಳಿತ ಮಂಡಳಿ ಕಾರ್ಯದರ್ಶಿ ನ್ಯಾಯಾಲಯದಲ್ಲಿ ಈ ಸಂಬಂಧ ತಡೆಯಾಜ್ಞೆ ತಂದಿದ್ದಾರೆ. ಇದನ್ನು ಗಮನಿಸಿದಾಗ ಆಡಳಿತ ಮಂಡಳಿ ತರಾತರಿಯಲ್ಲಿ ಕಾರ್ಖಾನೆಯನ್ನು ಮುಚ್ಚಲು ಮುಂದಾಗಿರುವುದರ ಹಿಂದೆ ಹಲವು ಅನುಮಾನಗಳು ಮೂಡುತ್ತಿವೆ.  ಈಗಲೂ ಕಾರ್ಖಾನೆಯನ್ನು ಮುಚ್ಚಲು ವಿರೋಧವಿಲ್ಲ. ಆದರೆ ಕಾರ್ಮಿಕರ ಹಿತಾಸಕ್ತಿ ಕಾಪಾಡುವುದು ನಮ್ಮ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ಮಾತನಾಡಿ, ಕಾರ್ಮಿಕರ ಹಿತಾಸಕ್ತಿಯಿಂದ ಅವರ ಹೋರಾಟಕ್ಕೆ ಬೆಂಬಲ ನೀಡಲಿದೆ. ಇಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್. ಕುಮಾರ್, ಜೆ.ಪಿ ಯೋಗೇಶ್, ಕರಿಯಪ್ಪ, ಬದರಿನಾರಾಯಣ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.

Tuesday, October 19, 2021

ಕುವೆಂಪು ವಿ.ವಿ ಎಂಎಸ್‌ಡಬ್ಲ್ಯೂವತಿಯಿಂದ ಯಶಸ್ವಿಯಾಗಿ ಜರುಗಿದ ಆರೋಗ್ಯ ಶಿಬಿರ

ಭದ್ರಾವತಿ ತಾಲೂಕಿನ ಕುವೆಂಪು ವಿಶ್ವ ವಿದ್ಯಾಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ (ಎಂಎಸ್‌ಡಬ್ಲ್ಯೂ)  ವತಿಯಿಂದ ಸಮೀಪದ ತರೀಕೆರೆ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
    ಭದ್ರಾವತಿ, ಆ. ೧೯ : ತಾಲೂಕಿನ ಕುವೆಂಪು ವಿಶ್ವ ವಿದ್ಯಾಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ (ಎಂಎಸ್‌ಡಬ್ಲ್ಯೂ)  ವತಿಯಿಂದ ಸಮೀಪದ ತರೀಕೆರೆ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
    ಶಿವಮೊಗ್ಗ ಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ ಹಾಗು ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ನಡೆದ ಶಿಬಿರದಲ್ಲಿ ಕೆಸರಕೊಪ್ಪ, ಗುಂಡೇನಹಳ್ಳಿ ಹಾಗೂ ಸೋಮಪುರ ಗ್ರಾಮಗಳ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಜೊತೆಗೆ ಅರೋಗ್ಯ ಸುಧಾರಣೆ ಹಾಗೂ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು.
    ಶಿವಮೊಗ್ಗ ಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ ವೈದ್ಯ ಡಾ. ದಿಲೀಪ್ ಕುಮಾರ್, ಡಾ. ಟಿ.ಡಿ ಸುನಿತಾ ಹಾಗು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯರು  ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಹಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಸ್ ಗಂಗಾಧರ್, ಸದಸ್ಯರಾದ ಮಹಮ್ಮದ್, ಇಬ್ರಾಹಿಂ, ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಾಲೆಯ ಸಿಬ್ಬಂದಿವರ್ಗದವರು, ಕುವೆಂಪು ವಿವಿ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗು ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.


ಭದ್ರಾವತಿ ತಾಲೂಕಿನ ಕುವೆಂಪು ವಿಶ್ವ ವಿದ್ಯಾಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ (ಎಂಎಸ್‌ಡಬ್ಲ್ಯೂ)  ವತಿಯಿಂದ ಸಮೀಪದ ತರೀಕೆರೆ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರದಲ್ಲಿ ಕೆಸರಕೊಪ್ಪ, ಗುಂಡೇನಹಳ್ಳಿ ಹಾಗೂ ಸೋಮಪುರ ಗ್ರಾಮಗಳ ಗ್ರಾಮಸ್ಥರಿಗೆ ಕೆಸರಕೊಪ್ಪ, ಗುಂಡೇನಹಳ್ಳಿ ಹಾಗೂ ಸೋಮಪುರ ಗ್ರಾಮಗಳ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.  

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

    ಭದ್ರಾವತಿ, ಅ. ೧೯: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಅ.೨೦ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಶ್ರೀ ವೀರಶೈವ ಸಭಾ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ್ ಉದ್ಘಾಟಿಸುವರು.
    ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಆರ್. ಪ್ರಸನ್ನಕುಮಾರ್, ಸಿ.ಎಂ. ಇಬ್ರಾಹಿಂ, ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಎಸ್.ಎಲ್ ಭೋಜೇಗೌಡ, ಭಾರತಿ ಶೆಟ್ಟಿ, ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕರಾ ಟಿ. ಲೋಕೇಶ್, ಬಿ.ಎಸ್ ನಾಗರಾಜ್, ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಈ ಅಜ್ಜಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ, ವಾಲ್ಮೀಕಿ ನಾಯಕ ಸಮಾಜದ ನಗರ ಅಧ್ಯಕ್ಷ ಬಸವರಾಜ ಬಿ. ಆನೇಕೊಪ್ಪ, ಗ್ರಾಮಾಂತರ ಅಧ್ಯಕ್ಷ ಎಲ್. ರಂಗಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ತಾ.ಪಂ. ಇ.ಓ ಎಸ್. ರಮೇಶ್, ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲಾ, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್. ಗೋಪಿನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ನೂತನ ಅಂಬ್ಯುಲೆನ್ಸ್ ಕಾರ್ಯಾರಂಭಕ್ಕೆ ಚಾಲನೆ

ಭದ್ರಾವತಿ ಅನ್ವರ್ ಕಾಲೋನಿಯ ಉಸ್ಮಾನಿಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕರ ಉಚಿತ ಆರೋಗ್ಯ ಸೇವೆಗಾಗಿ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೂತನ ಅಂಬ್ಯುಲೆನ್ಸ್ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.
    ಭದ್ರಾವತಿ: ನಗರದ ಅನ್ವರ್ ಕಾಲೋನಿಯ ಉಸ್ಮಾನಿಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕರ ಉಚಿತ ಆರೋಗ್ಯ ಸೇವೆಗಾಗಿ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೂತನ ಅಂಬ್ಯುಲೆನ್ಸ್ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.
    ಟ್ರಸ್ಟ್ ವತಿಯಿಂದ ಹಲವಾರು ವರ್ಷಗಳಿಂದ ಸಾರ್ವಜನಿಕರ ಉಚಿತ ಆರೋಗ್ಯ ಸೇವೆಗಾಗಿ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ. ಈ ಹಿಂದೆ ಖರೀದಿಸಲಾಗಿದ್ದ ಅಂಬ್ಯುಲೆನ್ಸ್ ಹಳೇಯದಾಗಿದ್ದು, ಬಳಕೆಗೆ ಉಪಯೋಗಕ್ಕೆ ಬಾರದ ಕಾರಣ ಪುನಃ ಹೊಸ ಅಂಬ್ಯುಲೆನ್ಸ್ ಖರೀದಿಸಲಾಗಿದೆ.
    ಪ್ರವಾದಿ ಮಹಮ್ಮದ್ ಫೈಗಂಬರರ ಜನ್ಮದಿನದ ಅಂಗವಾಗಿ ಟ್ರಸ್ಟ್ ಹೊಸ ಅಂಬ್ಯುಲೆನ್ಸ್ ಸೇವೆಯನ್ನು ಸಮರ್ಪಣೆ ಮಾಡಿಕೊಂಡಿದೆ. ಧರ್ಮಗುರುಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ನಗರಸಭಾ ಸದಸ್ಯ ಆರ್. ಶ್ರೇಯಸ್(ಚಿಟ್ಟೆ), ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಟ್ರಸ್ಟ್ ಅಧ್ಯಕ್ಷ ಹಬಿಬುಲ್ಲಾ ಖಾನ್, ಉಪಾಧ್ಯಕ್ಷ ಮೆಹಬೂಬ್ ಪಾಷ, ಮಾಜಿ ಅಧ್ಯಕ್ಷ ಜೆಬಿಟಿ ಬಾಬು, ಖಜಾಂಚಿ ನೂರುಲ್ಲಾ ಷರೀಫ್, ಕಾರ್ಯದರ್ಶಿ ಮುಸ್ವೀರ್ ಬಾಷಾ, ಟ್ರಸ್ಟಿಗಳಾದ ಅಬ್ದುಲ್ ವಹೀದ್, ಮೊಹಮದ್ ಅನ್ಸರ್ ಪಾಷಾ, ಸೈಯದ್ ಸಮೀವುಲ್ಲಾ, ಎಸ್.ಎಂ ಮುಜೀಬ್‌ಉಲ್ಲಾ, ನೂರ್ ಅಹಮದ್, ಮೊಹಮದ್ ಖಲಂದರ್, ಮೊಹಮದ್ ಜಾಕೀರ್, ಸೈಯದ್ ಅಸ್ಲಂ, ಪ್ರಮುಖರಾದ ಸಿ.ಎಂ ಖಾದರ್, ಪ್ರಕಾಶ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಿರಿಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಲ್ಟಿ ಸರ್ವಿಸ್ ಸೆಂಟರ್ ಕಟ್ಟಡದ ಶಂಕು ಸ್ಥಾಪನೆ

ಭದ್ರಾವತಿ ತಾಲೂಕಿನ ಹಿರಿಯೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಬಾರ್ಡ್ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಮಲ್ಟಿ ಸರ್ವಿಸ್ ಸೆಂಟರ್ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ನೆರವೇರಿಸಿದರು.
    ಭದ್ರಾವತಿ: ತಾಲೂಕಿನ ಹಿರಿಯೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಬಾರ್ಡ್ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಮಲ್ಟಿ ಸರ್ವಿಸ್ ಸೆಂಟರ್ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ನೆರವೇರಿಸಿದರು.
    ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಿರ್ದೇಶಕ ಜೆ.ಪಿ ಯೋಗೇಶ್, ವ್ಯವಸ್ಥಾಪಕ ಮಂಜಪ್ಪ, ಮೋಹನ್, ಸಹಕಾರ ಸಂಘಗಳ ಸಹಾಯಕ ಸೈಯದ್ ಜುನೈದ್ ಪಾಷಾ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಎಚ್.ಬಿ ಮಂಜುನಾಥ್, ಉಪಾಧ್ಯಕ್ಷೆ ಭಾಗ್ಯಮ್ಮ, ನಿರ್ದೇಶಕರಾದ ಗುರುಸ್ವಾಮಿ, ಸಾಲೇರ ಶೇಖರಪ್ಪ, ಎಚ್.ಎಸ್ ಮುರುಗೆಪ್ಪ, ಎಚ್.ಸಿ ಪ್ರಕಾಶ್, ಎಚ್.ಎಸ್ ರಮೇಶ್, ಜಿ.ಕೆ ಹಾಲ್ಯನಾಯ್ಕ, ಜವರೇಗೌಡ, ಕೆ. ಉಮೇಶ್, ಸುಧಾ, ಶ್ರೀನಿವಾಸ್ ಹಾಗೂ ಸಂಘದ ಕಾರ್ಯನಿರ್ವಹಣಾಧಿಕಾರಿ ಎಂ.ಎ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅ.೨೧ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ

    ಭದ್ರಾವತಿ, ಅ. ೧೯ : ನಗರದ ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ಆಶ್ರಮದ ವತಿಯಿಂದ ತಮಿಳುನಾಡು ದಿಂಡಿಕಲ್‌ನ ವಂಶಪಾರಂಪರೆ ಸಿದ್ದ ವೈದ್ಯರಾದ ಕೆ. ಮುತ್ತುಕೃಷ್ಣನ್ ಅವರಿಂದ ಅ.೨೧ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಕಾರ್ಯಕ್ರಮ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ರ ವರೆಗೆ ನಡೆಯಲಿದ್ದು, ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುತ್ತಿರುವುದು, ಕಣ್ಣು ಉರಿ, ಕಣ್ಣು ಕೆಂಪಗಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರು ಹಾಗು ದೂರ ದೃಷ್ಠಿ ಮತ್ತು ಸಮೀಪ ದೃಷ್ಠಿ ತೊಂದರೆ ಇರುವವರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೆಚ್ಚಿನ ಮಾಹಿತಿಗೆ ಮೊ: ೯೪೮೦೨೮೩೦೩೦ ಅಥವಾ ೯೪೪೮೨೫೫೫೪೪ ಸಂಖ್ಯೆಗೆ ಕರೆ ಮಾಡಬಹುದಾಗಿದೆ.


Monday, October 18, 2021

ಡಿಎಸ್‌ಎಸ್ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ ಭದ್ರಾವತಿ ನಗರದ ರಂಗಪ್ಪ ವೃತ್ತ ಸಮೀಪದ ಜೈಭೀಮಾ ನಗರದಲ್ಲಿರುವ ಸಮಿತಿಯ ಕೇಂದ್ರ ಕಛೇರಿಯಲ್ಲಿ ಸೋಮವಾರ ನಡೆಯಿತು.
    ಭದ್ರಾವತಿ, ಅ. ೧೮: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ ನಗರದ ರಂಗಪ್ಪ ವೃತ್ತ ಸಮೀಪದ ಜೈಭೀಮಾ ನಗರದಲ್ಲಿರುವ ಸಮಿತಿಯ ಕೇಂದ್ರ ಕಛೇರಿಯಲ್ಲಿ ಸೋಮವಾರ ನಡೆಯಿತು.
     ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು. 
    ರಾಜ್ಯ ಸಂಘಟನಾ ಸಂಚಾಲಕರಾದ ಹಾಸನದ ಎಸ್.ಎನ್ ಮಲ್ಲಪ್ಲ, ಧಾರವಾಡದ ಮರೀಶ್ ನಾಗಣ್ಣವರ್, ಚಿಕ್ಕಬಳ್ಳಾಪುರದ ವಿಜಯನರಸಿಂಹ, ಕೋಲಾರದ ಸೂಲಿಕುಂಟೆ ರಮೇಶ್, ಗದಗದ ಎಸ್.ಎನ್ ಬಳ್ಳಾರಿ ಹಾಗೂ ದಲಿತ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಮಂಗಳೂರಿನ ಶ್ರೀನಿವಾಸಲು,  ಕಾರ್ಯಾಧ್ಯಕ್ಷ ಸಿ. ಜಯಪ್ಪ, ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಚಿಕ್ಕಮಗಳೂರಿನ ಕೆ.ಸಿ ವಸಂತಕುಮಾರ್, ವಿಭಾಗೀಯ ಸಂಚಾಲಕ ಸೊರಬದ ಗುರುರಾಜ್, ಶಿವಮೊಗ್ಗ ಜಿಲ್ಲಾ ಸಂಚಾಲಕ ಚಿನ್ನಯ್ಯ, ಮಂಡ್ಯದ ನಂಜುಂಡಮೌರ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಂಚಾಲಕ ಮುನಿರಾಜ್, ಪ್ರಮುಖರಾದ ಸತ್ಯ ಭದ್ರಾವತಿ, ತಾಲೂಕು ಸಂಚಾಲಕ ರಂಗನಾಥ್, ಜಿಲ್ಲಾ ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್‌ರಾಜ್, ಈಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.