Saturday, October 23, 2021

ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧಕ್ಕೆ ಖಂಡನೆ : ಪಂಜಿನ ಮೆರವಣಿಗೆ

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಖಂಡಿಸಿ ಶನಿವಾರ ಸಂಜೆ ಯುವ ಬ್ರಿಗೇಡ್ ವತಿಯಿಂದ ಪಂಚಿನ ಪಂಜಿನ ಮೆರವಣಿಗೆ ನಡೆಸಲಾಯಿತು.
    ಭದ್ರಾವತಿ, ಸೆ. ೨೩: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಖಂಡಿಸಿ ಶನಿವಾರ ಸಂಜೆ ಯುವ ಬ್ರಿಗೇಡ್ ವತಿಯಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
    ಕೆಎಸ್‌ಆರ್‌ಸಿ ಮುಖ್ಯ ಬಸ್ ನಿಲ್ದಾಣದಿಂದ ಅಂಬೇಡ್ಕರ್ ವೃತ್ತದ ವರೆಗೂ ಪಂಜಿನ ಮೆರವಣಿಗೆ ನಡೆಸಿ ಹಿಂದೂಗಳ ನೆರಮೇಧವನ್ನು ತೀವ್ರವಾಗಿ ಖಂಡಿಸಲಾಯಿತು. ಅಲ್ಲದೆ ಮೇಣದ ಬತ್ತಿ ಹಚ್ಚಿ ಬಲಿಯಾಗಿರುವ ಅಮಾಯಕ ಹಿಂದೂಗಳ ಆತ್ಮಕ್ಕೆ ಶಾಂತಿ ಕೋರಲಾಯಿತು.
    ಕರ್ನಾಟಕ ರಾಮ್ ಸೇನಾ ಸಂಘಟನೆ ಜಿಲ್ಲಾಧ್ಯಕ್ಷ ಉಮೇಶ್‌ಗೌಡ, ತಾಲೂಕು ಅಧ್ಯಕ್ಷ ಸಚಿನ್ ಎಂ. ವರ್ಣೇಕರ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಧನುಷ್ ಬೋಸ್ಲೆ, ಯುವ ಬ್ರಿಗೇಡ್ ತಾಲೂಕು ಸಂಚಾಲಕ ಮೋಹನ್ ಕುಮಾರ್, ದರ್ಶನ್, ಸಂಜು, ಮಂಜುನಾಥ್, ಶ್ರೇಯಸ್, ಕೃಷ್ಣ, ಜೋಗಿ, ರಮೇಶ್, ಪ್ರಭು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಎಂಪಿಎಂ ಕಾರ್ಮಿಕರಿಂದ ತುರ್ತು ಸಭೆ : ಮುಂದಿನ ಹೋರಾಟಕ್ಕೆ ನಿರ್ಣಯ

    ಭದ್ರಾವತಿ, ಅ. ೨೩: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಪ್ರಸ್ತುತ ಮಸ್ಟರ್ ರೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕರ್ತವ್ಯಕ್ಕೆ ಹಾಜರಾಗದಿರುವಂತೆ ಮುಖ್ಯ ಆಡಳಿತಾಧಿಕಾರಿ ಸೂಚನೆ ಪತ್ರ ಹೊರಡಿಸಿರುವ ಹಿನ್ನಲೆಯಲ್ಲಿ ಶನಿವಾರ ಕಾರ್ಖಾನೆಯ ಎರಡು ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಸಭೆ ನಡೆಸಿದ್ದು, ಮುಂದಿನ ಹೋರಾಟಕ್ಕೆ ಸಂಬಂಧಿಸಿ ಹಲವು ನಿರ್ಣಯಗಳನ್ನು ಕೈಗೊಂಡಿವೆ.
    ದಿ ಮೈಸೂರು ಪೇಪರ್ ಮಿಲ್ಸ್ ಎಂಪ್ಲಾಯಿಸ್ ಅಸೋಸಿಯೇಷನ್ ಮತ್ತು ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘ ಈ ಎರಡು ಕಾರ್ಮಿಕ ಸಂಘಟನೆಗಳು ಸಂಜೆ ತುರ್ತು ಸಭೆ ನಡೆಸಿದ್ದು, ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಆದೇಶ ಹಿಂಪಡೆಯುವವರೆಗೂ ಹಾಗು ಕಾರ್ಮಿಕರಿಗೆ ಉದ್ಯೋಗ ಭದ್ರತೆ ಲಭಿಸುವವರೆಗೂ ಜಂಟಿಯಾಗಿ ಹೋರಾಟ ನಡೆಸಲು ಮುಂದಾಗಿವೆ.
    ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶದ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದು, ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಮಸ್ಟರ್ ರೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೨೧೪ ಕಾರ್ಮಿಕರ ವಿಶೇಷ ತುರ್ತು ಸಭೆ ನಡೆಸುವುದು, ಮಧ್ಯಾಹ್ನ ಶಿವಮೊಗ್ಗದಲ್ಲಿ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸುವುದು ಸೇರಿದಂತೆ ಇತ್ಯಾದಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.  

ವಿವಿಧ ಬೇಡಿಕೆ ಈಡೇರಿಸಲು ಎಬಿವಿಪಿ ಆಗ್ರಹ : ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಭದ್ರಾವತಿ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಅ. ೨೩: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನ ಶುಲ್ಕ ಪಡೆಯುತ್ತಿದ್ದು, ಅಲ್ಲದೆ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ವಸತಿ ನಿಲಯಗಳ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆಂದು ಆರೋಪಿಸಲಾಯಿತು.
    ಗ್ರಾಮಾಂತರ ಭಾಗಗಳಲ್ಲಿ ಸರಿಯಾಗಿ ಬಸ್ ಸೌಲಭ್ಯಗಳಿಲ್ಲದ ಕಾರಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಅಗತ್ಯವಿರುವ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವ್ಯವಸ್ಥೆ ಕಲ್ಪಿಸುವುದು ಹಾಗು ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಇದುವರೆಗೂ ವಿದ್ಯಾರ್ಥಿ ವೇತನ ಮಂಜೂರಾತಿಯಾಗಿರುವುದಿಲ್ಲ. ತಕ್ಷಣ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು.
    ಅಕಾಶ್, ಮನು, ಪ್ರವೀಣ್, ಅಭಿ, ಗಣೇಶ್, ಸ್ಪೂರ್ತಿ, ಸುಚಿತ್ರ ಸೇರಿದಂತೆ ಇನ್ನಿತರ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕರಾವೇ ಶಿವಮೊಗ್ಗ ನಗರ ಪದಾಧಿಕಾರಿಗಳ ನೇಮಕ

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೂತನವಾಗಿ ಶಿವಮೊಗ್ಗ ನಗರ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
    ಭದ್ರಾವತಿ, ಅ. ೨೩:  ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೂತನವಾಗಿ ಶಿವಮೊಗ್ಗ ನಗರ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
    ಉಪಾಧ್ಯಕ್ಷರಾಗಿ ಎನ್. ಶೋಭಾ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಜೆ ಅನಿತಾ, ಸಂಘಟನಾ ಕಾರ್ಯದರ್ಶಿಯಾಗಿ ಕಲಾವತಿ, ನಗರ ಕಾರ್ಯದರ್ಶಿಯಾಗಿ ಭವಾನಿ ಹಾಗು ಸಹ ಕಾರ್ಯದರ್ಶಿಯಾಗಿ ವೀಣಾ ಅವರನ್ನು ನೇಮಕ ಮಾಡಲಾಯಿತು.
ಶಿವಮೊಗ್ಗ ಗಾಂಧಿ ಬಜಾರ್ ಮಹಿಳಾ ಘಟಕದ ಅದ್ಯಕ್ಷರಾಗಿ ಪರಿಮಳ, ಉಪಾಧ್ಯಕ್ಷರಾಗಿ ಶಾಂತ, ಪ್ರಧಾನ ಕಾರ್ಯದರ್ಶಿಯಾಗಿ ಶಕುಂತಳಾ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ರೇಖಾ ಮತ್ತು ಸಹ ಕಾರ್ಯದರ್ಶಿಯಾಗಿ ರಾಧಿಕಾ ರವರನ್ನು ಆಯ್ಕೆ ಮಾಡಲಾಯಿತು.
    ವೇದಿಕೆಯಲ್ಲಿ ಶಿವಮೊಗ್ಗ ನಗರ ಅಧ್ಯಕ್ಷೆ ಜ್ಯೋತಿ ರಂಗನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾರದಾ, ಭದ್ರಾವತಿ ತಾಲೂಕು ಮಹಿಳಾ ಅಧ್ಯಕ್ಷೆ ಮಹೇಶ್ವರಿ, ಕುಮಾರ್, ರೇಖಾ, ನಾಗರತ್ನ, ಶಾಂತಿ, ಅನಿತಾ, ಎನ್. ಭಾಗ್ಯ, ಸುಧಾ, ಸುಜಾತ, ಹರೀಶ್, ಅನಿತಾ, ಪ್ರಸಾದ್, ಕುಸುಮ, ವೀಣಾ, ಎಂ.ಟಿ ರೇಖಾ, ಮಂಜುಳಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, October 22, 2021

ಬೀದಿ ಪಾಲಾದ ಎಂಪಿಎಂ ಕಾರ್ಮಿಕರು : ಕರ್ತವ್ಯಕ್ಕೆ ಹಾಜರಾಗದಂತೆ ಸೂಚನೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಸಂಪೂರ್ಣವಾಗಿ ಮುಚ್ಚಲು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಕಾರ್ಖಾನೆಯಲ್ಲಿ ಮಸ್ಟರ್ ರೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಶುಕ್ರವಾರದಿಂದ ಕರ್ತವ್ಯ ಹಾಜರಾಗದಂತೆ ಮುಖ್ಯ ಆಡಳಿತಾಧಿಕಾರಿ ಪತ್ರದ ಮೂಲಕ ಸೂಚಿಸಿರುವುದು.
    ಭದ್ರಾವತಿ, ಅ. ೨೨: ಪ್ರಸ್ತುತ ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಉಳಿದುಕೊಂಡಿರುವ ಕಾರ್ಮಿಕರು ಕೊನೆಗೂ ಬೀದಿ ಪಾಲಾಗಿದ್ದು, ಶುಕ್ರವಾರದಿಂದ ಕರ್ತವ್ಯಕ್ಕೆ ಹಾಜರಾಗದಂತೆ ಕಾರ್ಖಾನೆಯ ಮುಖ್ಯ ಆಡಳಿತಾಧಿಕಾರಿ ಸೂಚಿಸಿದ್ದಾರೆ.  
    ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಅ.೭ರಂದು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ಕಾರ್ಖಾನೆಯಲ್ಲಿ ಕಾರ್ಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಮಸ್ಟರ್ ರೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಹಾಜರಾಗದಿರುವಂತೆ ಮುಖ್ಯ ಆಡಳಿತಾಧಿಕಾರಿ ಶ್ರೀನಿವಾಸ್ ಈ ಸಂಬಂಧ ಹೊರಡಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. .
    ಪ್ರಸ್ತುತ ಕಾರ್ಖಾನೆಯಲ್ಲಿ ಅಸ್ತಿತ್ವದಲ್ಲಿರುವ ಎರಡು ಕಾರ್ಮಿಕ ಸಂಘಟನೆಗಳು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಅ.೭ರಂದು ಹೊರಡಿಸಿರುವ ಆದೇಶವನ್ನು   ನ್ಯಾಯಾಲಯದಲ್ಲಿ ಪ್ರಶ್ನಿಸಲು ಮುಂದಾಗಿವೆ. ಈ ನಡುವೆ ಕಂಪನಿ ಕಾರ್ಯದರ್ಶಿ ಈಗಾಗಲೇ ಕಾರ್ಯದರ್ಶಿಗಳ ಆದೇಶವನ್ನು ಪ್ರಶ್ನಿಸದಂತೆ ತಡೆಯಾಜ್ಞೆ ಸಹ ತಂದಿದ್ದು, ಇದೀಗ ಕಾರ್ಮಿಕರನ್ನು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಲಾಗಿದೆ. ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಕೈಗೊಳ್ಳುತ್ತಿರುವ ತರಾತುರಿ ನಿರ್ಧಾರಗಳು ಕಾರ್ಮಿಕರು ಹಾಗು ಕುಟುಂಬ ವರ್ಗದವರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಇದೀಗ ಕಾರ್ಮಿಕ ಸಂಘಟನೆಗಳಿಗೆ ಹೋರಾಟ ಮಾತ್ರ ಬಾಕಿ ಉಳಿದಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ.

ವಕೀಲರ ಸಂಘದ ಅಧ್ಯಕ್ಷರಾಗಿ ಕೆ.ಎನ್ ಶ್ರೀಹರ್ಷ


ಭದ್ರಾವತಿ ತಾಲೂಕು ವಕೀಲರ ಸಂಘಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ವಕೀಲರು ಅಭಿನಂದಿಸಿದರು.
    ಭದ್ರಾವತಿ, ಅ. ೨೨: ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಕೆ.ಎನ್ ಶ್ರೀಹರ್ಷ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
    ೨ ವರ್ಷ ಅವಧಿಯ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್ ಶ್ರೀಹರ್ಷ ಹಾಗು ಬಿ.ಸಿ ಕೇಶವಮೂರ್ತಿ ಸ್ಪರ್ಧಿಸಿದ್ದು, ಈ ಪೈಕಿ ಹರ್ಷ ೯೮ ಮತಗಳನ್ನು ಹಾಗು ಕೇಶವಮೂರ್ತಿ ೮೦ ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು ೧೮ ಮತಗಳ ಅಂತರದಿಂದ ಹರ್ಷ ಗೆಲುವು ಸಾಧಿಸಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಡಿ.ಎಂ ವಿಶ್ವನಾಥ್, ಕಾರ್ಯದರ್ಶಿಯಾಗಿ ಉದಯಕುಮಾರ್ ಮತ್ತು ಜಂಟಿ ಕಾರ್ಯದರ್ಶಿಯಾಗಿ ಮಂಜಪ್ಪ ಆಯ್ಕೆಯಾಗಿದ್ದಾರೆ.
    ಒಟ್ಟು ೧೮೫ ಸದಸ್ಯರ ಪೈಕಿ ೧೭೮ ಸದಸ್ಯರು ಮತ ಚಲಾಯಿಸಿದರು. ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಮತದಾನ ನಡೆಯಿತು. ಸೈಯದ್ ನಿಯಾಜ್, ಉಮಾಶಂಕರ್ ಮತ್ತು ಕೂಡ್ಲಿಗೆರೆ ಮಂಜುನಾಥ್ ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.

ಅ.೨೫ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ಅ. ೨೨: ಕುವೆಂಪು ವಿಶ್ವ ವಿದ್ಯಾನಿಲಯದ ಬಳಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.೨೫ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ಲಕ್ಕವಳ್ಳಿ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಗೋಣಿಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿನಗರ, ಶಂಕರಘಟ್ಟ, ತಾವರಘಟ್ಟ, ಎಚ್.ಕೆ ಜಂಕ್ಷನ್, ಕುವೆಂಪು ವಿಶ್ವ ವಿದ್ಯಾನಿಲಯ, ರಂಗನಾಥಪುರ, ತಮ್ಮಡಿಹಳ್ಳಿ, ನಲ್ಲಿಸರ, ಮಲ್ಲಿಗೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.