Thursday, November 11, 2021

ಕೋಟ್ಪಾ ಕಾಯ್ದೆಯಡಿ ಕಾರ್ಯಾಚರಣೆ : ೫,೧೦೦ ರು. ದಂಡ ವಸೂಲಾತಿ


ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಭದ್ರಾವತಿ ತಾಲೂಕಿನ ಆನವೇರಿ, ಮೈದೊಳಲು ಮತ್ತು ಕೈಮರ ಗ್ರಾಮಗಳ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು. 

ಭದ್ರಾವತಿ, ನ. ೧೧: ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲೂಕಿನ ಆನವೇರಿ, ಮೈದೊಳಲು ಮತ್ತು ಕೈಮರ ಗ್ರಾಮಗಳ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. 

ಒಟ್ಟು  ರು. ೫,೧೦೦ ದಂಡ ವಿಧಿಸಲಾಗಿದ್ದು, ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಕ್ಷೇತ್ರ ಆರೋಗ್ಯ  ಶಿಕ್ಷಣಾಧಿಕಾರಿ ಎನ್.ಟಿ ರಾಜೇಗೌಡ, ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯಾಧಿಕಾರಿ ಹಾಲಸ್ವಾಮಿ, ಅಲ್ಲಾಉದ್ಧಿನ್ ತಾಜ್,  ಆರೋಗ್ಯ ನಿರೀಕ್ಷಕರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ ದೇವರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

ವಿಧಾನ ಪರಿಷತ್‌ ಚುನಾವಣೆ : ಪೂರ್ವಭಾವಿ ಸಭೆ

 


 ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. 

    ಭದ್ರಾವತಿ, ನ. ೧೧:  ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. 

ಸಭೆಯಲ್ಲಿ ಟಿ.ವಿ ಪ್ರಕಾಶ್‌ರವರು ಚುನಾವಣಾ ಪೂರ್ವ ಸಿದ್ಧತೆ ವಿವರವಾದ ಮಾಹಿತಿ ನೀಡಿದರು.  ತಹಶೀಲ್ದಾರ್‌ ಆರ್. ಪ್ರದೀಪ್‌ರವರು ಚುನಾವಣಾ ಪ್ರಕ್ರಿಯೆಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿಕೊಡಬಹುದಾದ ಕಾರ್ಯವೈಖರಿಗಳ ಬಗ್ಗೆ ವಿವರಿಸಿದರು. 

ಮತಗಟ್ಟೆ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಾದ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನರು ಹಾಗು ವಯೋವೃದ್ಧರಿಗೆ ಮತಗಟ್ಟೆ ಕೊಠಿಡಿಗೆ ತೆರಳಲು ಸೂಕ್ತ ವ್ಯವಸ್ಥೆ ಸೇರಿದಂತೆ ಅಂಶಗಳ  (ಎ.ಎಂ.ಎಫ್)ಬಗ್ಗೆ ಪರಿಶೀಲಿಸಿ  ವರದಿ ನೀಡುವುದು ಹಾಗು ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. 

ಮಾದರಿ ನೀತಿ ಸಂಹಿತೆ ಜಾರಿಗೆ ಸಂಬಂಧಪಟ್ಟಂತೆ ರಚಿಸಲಾಗುವ ತಂಡಗಳಿಗೆ ಪೊಲೀಸ್ ಇಲಾಖೆಯಿಂದ ಒಬ್ಬ ಎ.ಎಸ್.ಐ ಅಥವಾ ಹೆಚ್.ಸಿ ದರ್ಜೆಯ ಅಧಿಕಾರಿಗಳನ್ನು ನಿಯೋಜಿಸುವಂತೆ ರಕ್ಷಣಾ ಇಲಾಖೆಯವರಿಗೆ ಸೂಚಿಸಲಾಯಿತು. 

ಸಭೆಯಲ್ಲಿ ಪೊಲೀಸ್‌ ಉಪಾಧೀಕ್ಷಕ ಸಾಹಿಲ್ ಬಾಗ್ಲಾ . ನಗರಸಭೆ  ಪೌರಾಯುಕ್ತ ಕೆ. ಪರಮೇಶ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಮೇಶ್ ಹಾಗೂ ವಿವಿಧ ಪೊಲೀಸ್ ಠಾಣೆಗಳ ವೃತ್ತ ನಿರೀಕ್ಷಕರು ಗಳು ಮತ್ತು ಅಬಕಾರಿ ಇಲಾಖೆಯ ವೃತ್ತ ನಿರೀಕ್ಷಕರು, ಎಲ್ಲಾ ಹೋಬಳಿಯ ಉಪತಹಶೀಲ್ದಾರ್‌ಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ರಾಜಸ್ವ ನಿರೀಕ್ಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Wednesday, November 10, 2021

ರಾಜಕೀಯ ಸ್ವಾರ್ಥಕ್ಕಾಗಿ ಟಿಪ್ಪು ಸುಲ್ತಾನ್ ಕುರಿತು ತಪ್ಪು ಸಂದೇಶ : ಶಿವಬಸಪ್ಪ


ಭದ್ರಾವತಿ ಸಿ.ಎನ್ ರಸ್ತೆಯಲ್ಲಿ ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿ ಸಹ ಬಡ ಮಹಿಳೆಯರಿಗೆ ಸೀರೆ ವಿತರಿಸಲಾಯಿತು.
    ಭದ್ರಾವತಿ, ನ. ೧೦: ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ ಸಮಾನತೆ ಪ್ರತಿಪಾದಿಸುವ ಜೊತೆಗೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಮಹಾನ್ ವ್ಯಕ್ತಿಯಾಗಿದ್ದು, ಸ್ವಾರ್ಥ ರಾಜಕಾರಣಕ್ಕಾಗಿ ಕೆಲವರು ಟಿಪ್ಪು ಸುಲ್ತಾನ್‌ನನ್ನು ದೇಶ ದ್ರೋಹಿ ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಹೇಳಿದರು.
    ಅವರು ಬುಧವಾರ ನಗರದ ಸಿ.ಎನ್ ರಸ್ತೆಯಲ್ಲಿ ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿ ಸಹ ಬಡ ಮಹಿಳೆಯರಿಗೆ ಸೀರೆ ಹಾಗು ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಮಾಜದಲ್ಲಿ ದಲಿತರು, ಶೋಷಿತರು ಹಾಗು ಮಹಿಳೆಯರಿಗೂ ಸಮಾನ ಅವಕಾಶ ಕಲ್ಪಿಸಿಕೊಡುವ ಜೊತೆಗೆ ಧರ್ಮ, ಜಾತಿ ರಹಿತ, ಕಂದಚಾರ, ಮೂಡನಂಬಿಕೆಗಳಿಂದ ಮುಕ್ತವಾದ ಆಡಳಿತ ವ್ಯವಸ್ಥೆಯನ್ನು ತನ್ನ ಅವಧಿಯಲ್ಲಿ ರೂಪಿಸಿಕೊಂಡಿದ್ದನು. ಅಲ್ಲದೆ ಹಲವಾರು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದನು. ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆಯನ್ನು ಅಂದಿನ ಕಾಲದಲ್ಲಿಯೇ ಜಾರಿಗೊಳಿಸಿದ್ದನು ಎಂದರು.
    ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಒಂದು ಗೂಡಿಸುವ ಜೊತೆಗೆ ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಮುನ್ನುಡಿ ಬರೆದಿದ್ದನು. ಟಿಪ್ಪು ಆಡಳಿತ ವ್ಯವಸ್ಥೆಯ ಮಾದರಿಯನ್ನು ಇಂದಿಗೂ ಕಾಣಬಹುದಾಗಿದೆ. ಸ್ವಾರ್ಥ ರಾಜಕಾರಣಕ್ಕಾಗಿ ಇಂತಹ ಮಹಾನ್ ವ್ಯಕ್ತಿಯ ಕುರಿತು ಸಮಾಜಕ್ಕೆ ತಪ್ಪು ಸಂದೇಶಗಳನ್ನು ನೀಡುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
ನಗರಸಭೆ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಟಿಪ್ಪು ಸುಲ್ತಾನ್ ಓರ್ವ ಸಮರ್ಥ ಆಡಳಿತಗಾರ, ಈತನ ನಿಸ್ವಾರ್ಥ ಸೇವೆ, ಜಾತಿ ಬೇಧಭಾವವಿಲ್ಲದೆ ನಡೆಸಿದ ಆಡಳಿತವನ್ನು ಸಹಿಸದ ಕೆಲವರು ದೇಶದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಇದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಲ್ಲ ಎಂದರು.
    ಪ್ರಮುಖರಾದ ಮುರ್ತುಜಾಖಾನ್, ಸಿ.ಎಂ ಖಾದರ್, ಜಹೀರ್‌ಜಾನ್, ಇಮ್ರಾನ್, ರಿಯಾಜ್, ಅಸುದಲ್ಲಾ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ಸಿ.ಎನ್ ರಸ್ತೆಯಲ್ಲಿ ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ವತಿಯಿಂದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ ಅಂಗವಾಗಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಿಸಲಾಯಿತು.

ಪವರ್‌ಸ್ಟಾರ್ ಪುನೀತ್‌ರಾಜ್‌ಕುಮಾರ್ ೧೩ನೇ ದಿನದ ಪುಣ್ಯಸ್ಮರಣೆ : ರಕ್ತದಾನ, ನೇತ್ರದಾನ ನೋಂದಾಣಿ, ಅನ್ನಸಂತರ್ಪಣೆ

ನಿರ್ಮಾಣ ಹಂತದಲ್ಲಿರುವ ಸೇತುವೆಗೆ ಪುನೀತ್ ಹೆಸರು ನಾಮಕರಣಕ್ಕೆ ಆಗ್ರಹ


ಭದ್ರಾವತಿ ಬಿ.ಎಚ್ ರಸ್ತೆ ೩ನೇ ವಾರ್ಡ್ ಚಾಮೇಗೌಡ ಏರಿಯಾ ರೈಲ್ವೆ ನಿಲ್ದಾಣದ ಸಮೀಪದ ನೃಪತುಂಗ ಆಟೋ ನಿಲ್ದಾಣದಲ್ಲಿ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾಗಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಬುಧವಾರ ಚಿತ್ರನಟ ಪುನೀತ್‌ರಾಜ್‌ಕುಮಾರ್ ಅವರ ೧೩ನೇ ದಿನದ ಪುಣ್ಯಸ್ಮರಣೆ ಅಂಗವಾಗಿ ರೋಟರಿ ಕ್ಲಬ್ ಹಾಗು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗು ರಕ್ತ ತಪಾಸಣೆ, ಶಿವಮೊಗ್ಗ  ಆದರ್ಶ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ನೇತ್ರದಾನ ನೋಂದಾಣಿ ಹಾಗು ನೇತ್ರ ತಪಾಸಣೆ ಮತ್ತು ಅಭಿಮಾನಿಗಳು, ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರು, ಸ್ಥಳೀಯರು ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸುಮಾರು ೩ ರಿಂದ ೪ ಸಾವಿರ ಮಂದಿಗೆ ಮಾಂಸಾಹಾರ ವಿತರಣೆ ನೆರವೇರಿಸಲಾಯಿತು.



    ಭದ್ರಾವತಿ, ನ. ೧೦: ಚಲನ ಚಿತ್ರ ನಟ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಅವರ ೧೩ನೇ ದಿನದ ಪುಣ್ಯ ಸ್ಮರಣೆ ಅಂಗವಾಗಿ ಬುಧವಾರ ಸಹ ತಾಲೂಕಿನ ವಿವಿಧೆಡೆ ಅಭಿಮಾನಿಗಳು ಹಾಗು ವಿವಿಧ ಸಂಘಟನೆಗಳಿಂದ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು.
    ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ :
    ನಗರದ ಬಿ.ಎಚ್ ರಸ್ತೆ ೩ನೇ ವಾರ್ಡ್ ಚಾಮೇಗೌಡ ಏರಿಯಾ ರೈಲ್ವೆ ನಿಲ್ದಾಣದ ಸಮೀಪದ ನೃಪತುಂಗ ಆಟೋ ನಿಲ್ದಾಣದಲ್ಲಿ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾಗಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರೋಟರಿ ಕ್ಲಬ್ ಹಾಗು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗು ರಕ್ತ ತಪಾಸಣೆ, ಶಿವಮೊಗ್ಗ  ಆದರ್ಶ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ನೇತ್ರದಾನ ನೋಂದಾಣಿ ಹಾಗು ನೇತ್ರ ತಪಾಸಣೆ ಮತ್ತು ಅಭಿಮಾನಿಗಳು, ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರು, , ಸ್ಥಳೀಯರು ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸುಮಾರು ೩ ರಿಂದ ೪ ಸಾವಿರ ಮಂದಿಗೆ ಮಾಂಸಾಹಾರ ವಿತರಣೆ ನೆರವೇರಿಸಲಾಯಿತು.
    ಕಾರ್ಯಕ್ರಮದ ನೇತೃತ್ವ ವಹಿಸಿದ್ದ ವಾರ್ಡಿನ ನಗರಸಭಾ ಸದಸ್ಯ ಜಾರ್ಜ್ ಮಾತನಾಡಿ, ಪವರ್ ಸ್ಟಾರ್ ಪುನೀತ್ ಡಾ. ರಾಜ್‌ಕುಮಾರ್ ಅವರ ಅಗಲಿಕೆ ನಮ್ಮೆಲ್ಲರ ಮನಸ್ಸಿಗೆ ನೋವುಂಟು ಮಾಡಿದೆ. ಅವರ ಸ್ಮರಣಾರ್ಥ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲೆಂದು ಪ್ರಾರ್ಥಿಸುತ್ತೇವೆ ಎಂದರು.
ಸಂಘದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ಬೃಹತ್ ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ನಿಟ್ಟಿನಲ್ಲಿ ಸಂಘ ಹೆಚ್ಚಿನ ಗಮನ ಹರಿಸಲಿದೆ ಎಂದರು.
    ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳಾದ ರವಿಕುಮಾರ್(ಅಪ್ಪು), ಅರ್ಪಿತ್‌ಕುಮಾರ್ ಮತ್ತು ಲಲಿತ್ ಸೇರಿದಂತೆ ಇನ್ನಿತರರು ಮಾತನಾಡಿ, ಪುನೀತ್ ರಾಜ್‌ಕುಮಾರ್ ಅವರು ಓರ್ವ ಶ್ರೇಷ್ಠ ನಟರಾಗಿದ್ದಾರೆ. ಮುಂದಿನ ಪೀಳಿಗೆಗೆ ಅವರ ಸಾಧನೆಯನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ನೆರವಾಗಲು ಅವರ ಹೆಸರನ್ನು ನಗರದ ಹಳೇಸೇತುವೆಗೆ ಬದಲಿಯಾಗಿ ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಹೊಸ ಸೇತುವೆಗೆ ನಾಮಕರಣಗೊಳಿಸುವುದು. ಜೊತೆಗೆ ನಗರಸಭೆ ವತಿಯಿಂದ ನೃಪತುಂಗ ಆಟೋ ನಿಲ್ದಾಣದ ಬಳಿ ವರನಟ ಡಾ. ರಾಜ್‌ಕುಮಾರ್ ಮತ್ತು ಪುನೀತ್‌ರಾಜ್‌ಕುಮಾರ್ ಅವರ ಪ್ರತಿಮೆಗಳನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು.  
    ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ,  ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಯೂನಿಯನ್ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ಬಿಜೆಪಿ ಹಿಂದುಳಿದ ಮೋರ್ಚಾದ ರಾಜಶೇಖರ್ ಉಪ್ಪಾರ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗದ ನವೀನ್‌ಕುಮಾರ್‌ ಸೇರಿದಂತೆ ಪದಾಧಿಕಾರಿಗಳು, ಅಭಿಮಾನಿಗಳು, ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
       ಗೋಣಿಬೀಡು-ಮಲ್ಲಿಗೆನಹಳ್ಳಿಯಲ್ಲಿ ರಕ್ತದಾನ :
    ತಾಲೂಕಿನ ಗೋಣಿಬೀಡು-ಮಲ್ಲಿಗೆನಹಳ್ಳಿ ಕ್ಯಾಂಪ್ ಗ್ರಾಮಸ್ಥರು ಹಾಗು ಅಭಿಮಾನಿಗಳು ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಹಾಗು ಕನ್ನಡ ರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ರಕ್ತನಿಧಿ ಸಹಯೋಗದೊಂದಿಗೆ ವಿಶೇಷ ರಕ್ತದಾನ ಶಿಬಿರ ಆಯೋಜಿಸಿದ್ದರು.
    ಶಿಬಿರ ಮಧ್ಯಾಹ್ನ ೨ ಗಂಟೆವರೆಗೆ ನಡೆಯಿತು. ಜಯಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ತ್ಯಾಗರಾಜ್, ಮಹೇಶ್‌ಗೌಡ, ವಿಜಯಕುಮಾರ್, ಎಸ್. ಚೇತನ್‌ಕುಮಾರ್, ಪಾಪನಾಯಕ ಹಾಗು ಗೋಣಿಬೀಡು-ಮಲ್ಲಿಗೆನಹಳ್ಳಿ ಕ್ಯಾಂಪ್ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ತಾಲೂಕಿನ ಗೋಣಿಬೀಡು-ಮಲ್ಲಿಗೆನಹಳ್ಳಿ ಕ್ಯಾಂಪ್ ಗ್ರಾಮಸ್ಥರು ಹಾಗು ಅಭಿಮಾನಿಗಳು ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಹಾಗು ಕನ್ನಡ ರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ರಕ್ತನಿಧಿ ಸಹಯೋಗದೊಂದಿಗೆ ವಿಶೇಷ ರಕ್ತದಾನ ಶಿಬಿರ ಆಯೋಜಿಸಿದ್ದರು.


Tuesday, November 9, 2021

ರೈಲ್ವೆ ರಸ್ತೆ ಮೇಲ್ಸೇತುವೆ ನಿರ್ಮಾಣ : ಸಂತ್ರಸ್ಥರಿಗೆ ಭೂ ಪರಿಹಾರ ತಿಳುವಳಿಕೆ ಪತ್ರ

ಪರಿಹಾರ ಮೊತ್ತ ಹೆಚ್ಚಿಸದ ಹಿನ್ನಲೆಯಲ್ಲಿ ಆತಂಕ, ಧೈರ್ಯ ತುಂಬಿದ ಎಎಪಿ ಜಿಲ್ಲಾಧ್ಯಕ್ಷ


ಭದ್ರಾವತಿ ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ರೈಲ್ವೆ ರಸ್ತೆ ಮೇಲ್ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ಥರಾಗಿರುವ ಸಮೀಪದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಭೂ ಪರಿಹಾರ ತಿಳುವಳಿಕೆಯೊಂದಿಗೆ ತೆರವಿಗೆ ಜಿಲ್ಲಾಡಳಿತ ಸೂಚಿಸಿದ್ದು, ತಾಲೂಕು ಆಡಳಿತ ಪರವಾಗಿ ಕಂದಾಯಾಧಿಕಾರಿ ಪ್ರಶಾಂತ್ ಮಂಗಳವಾರ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ನೀಡಿದರು.
    ಭದ್ರಾವತಿ, ನ. ೯; ನಗರದ ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ರೈಲ್ವೆ ರಸ್ತೆ ಮೇಲ್ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ಥರಾಗಿರುವ ಸಮೀಪದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಭೂ ಪರಿಹಾರ ತಿಳುವಳಿಕೆಯೊಂದಿಗೆ ತೆರವಿಗೆ ಜಿಲ್ಲಾಡಳಿತ ಸೂಚಿಸಿದ್ದು, ಪರಿಹಾರ ಮೊತ್ತ ಹೆಚ್ಚಳ ಮಾಡದ ಹಿನ್ನಲೆಯಲ್ಲಿ ನಿವಾಸಿಗಳು ಆತಂಕಗೊಂಡಿದ್ದಾರೆ.
    ಸಂಪೂರ್ಣ ಸ್ವತ್ತು ಕಟ್ಟಡದೊಂದಿಗೆ ಭೂಸ್ವಾಧೀನವಾಗುತ್ತಿರುವ ಪ್ರದೇಶದ ಭೂ ಮಾಲೀಕರಿಗೆ ಪರಿಹಾರ ನೀಡುವ ಸಂಬಂಧ ಜುಲೈ ೬ ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ದರ ನಿರ್ಧರಣಾ ಸಮಿತಿ ಮತ್ತು ಭೂ ಮಾಲೀಕರೊಂದಿಗೆ ನಡೆದ ಸಭೆಯಲ್ಲಿ ಸಂತ್ರಸ್ಥರಿಗೆ ಜೇಡಿಕಟ್ಟೆ ಬಳಿ ಬದಲಿ ನಿವೇಶನ ನೀಡುವ ಜೊತೆಗೆ ಒಂದು ಬಾರಿ ಪರಿಹಾರದಂತೆ ೫ ಲಕ್ಷ ರು. ನೀಡಲು ತೀರ್ಮಾನಿಸಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ನ.೨ರಂದು ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ಹೊರಡಿಸಿದ್ದು, ಮಂಗಳವಾರ ತಾಲೂಕು ಆಡಳಿತ ಪರವಾಗಿ ಕಂದಾಯಾಧಿಕಾರಿ ಪ್ರಶಾಂತ್ ತಿಳುವಳಿಗೆ ಪತ್ರ ವಿತರಿಸುವ ಜೊತೆಗೆ ಪರಿಹಾರ ಪಡೆಯಲು ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದರು.
    ಸಂತ್ರಸ್ಥರು ಪರಿಹಾರ ಮೊತ್ತ ಹೆಚ್ಚಿಸುವಂತೆ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ನೇತೃತ್ವದಲ್ಲಿ ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು.
    ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಇಂದು ೫ ಲಕ್ಷ ರು. ಪರಿಹಾರದಲ್ಲಿ ಹೊಸ ಮನೆ ನಿರ್ಮಾಣ ಮಾಡಿಕೊಳ್ಳುವುದು ಅಸಾಧ್ಯವಾಗಿದ್ದು, ಪರಿಹಾರ ಮೊತ್ತ ೧೦ ಲಕ್ಷ ರು. ನಿಗದಿಪಡಿಸುವ ಜೊತೆಗೆ ಅಂಗಡಿಮುಂಗಟ್ಟುಗಳ ವ್ಯಾಪಾರಸ್ಥರನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ಮನವಿ ಮಾಡಿದ್ದರು. ಆದರೂ ಸಹ ಜಿಲ್ಲಾಧಿಕಾರಿಗಳು ಮನವಿಗೆ ಪೂರಕವಾಗಿ ಸ್ಪಂದಿಸದಿರುವ ಹಿನ್ನಲೆಯಲ್ಲಿ ಸಂತ್ರಸ್ಥರು ಆತಂಕಗೊಂಡಿದ್ದಾರೆ.
    ಈ ನಡುವೆ ತಿಳುವಳಿಕೆ ಪತ್ರ ನೀಡುವ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಸಂತ್ರಸ್ಥರಿಗೆ ಆತಂಕಕ್ಕೆ ಒಳಗಾಗದಂತೆ ಧೈರ್ಯ ತುಂಬುವ ಜೊತೆಗೆ ಮತ್ತೊಮ್ಮೆ ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಮನವಿ ಸಲ್ಲಿಸಿ ಒತ್ತಾಯಿಸುವ ಭರವಸೆ ನೀಡಿದರು.

ನಗರದ ವಿವಿಧೆಡೆ ಪುನೀತ್ ರಾಜ್‌ಕುಮಾರ್ ೧೨ನೇ ದಿನದ ಪುಣ್ಯಸ್ಮರಣೆ

ಅಭಿಮಾನಿಗಳು, ಸಂಘಟನೆಗಳಿಂದ ಸುಮಾರು ೧೦೦೦ ಮಂದಿಗೆ ಮಾಂಸಾಹಾರ ವಿತರಣೆ


ಭದ್ರಾವತಿ ತಾಲೂಕು ಪಂಚಾಯಿತಿ ಕಛೇರಿ ಸಮೀಪದ ಕನಕ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು, ಹಿತೈಷಿಗಳು, ಸ್ಥಳೀಯರು ಮಂಗಳವಾರ ಪುನೀತ್‌ರಾಜ್‌ಕುಮಾರ್ ಅವರ ೧೨ನೇ ದಿನದ ಪುಣ್ಯ ಸ್ಮರಣೆಯನ್ನು ಹಲವು ಕಾರ್ಯಕ್ರಮಗಳೊಂದಿಗೆ ನೆರವೇರಿಸಿದರು.
    ಭದ್ರಾವತಿ, ನ. ೯: ಚಲನ ಚಿತ್ರ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಅವರ ೧೨ನೇ ದಿನದ ಪುಣ್ಯ ಸ್ಮರಣೆ ಅಂಗವಾಗಿ ಮಂಗಳವಾರ ನಗರದ ವಿವಿಧೆಡೆ ಅಭಿಮಾನಿಗಳು ಹಾಗು ವಿವಿಧ ಸಂಘಟನೆಗಳಿಂದ ಅನ್ನಸಂತರ್ಪಣೆ ಯಶಸ್ವಿಯಾಗಿ ನೆರವೇರಿತು.
    ಕನಕ ಆಟೋ ನಿಲ್ದಾಣ :
    ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದ ಕನಕ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು, ಹಿತೈಷಿಗಳು, ಸ್ಥಳೀಯರು ಪುಣ್ಯ ಸ್ಮರಣೆಯನ್ನು ಹಲವು ಕಾರ್ಯಕ್ರಮಗಳೊಂದಿಗೆ ನೆರವೇರಿಸಿದರು.
    ಸುಮಾರು ೧೦೦೦ ಮಂದಿಗೆ ಮಾಂಸಹಾರ ವಿತರಣೆ, ಸ್ವರ ಸಂಗೀತ ಹಾಗು ಪುಷ್ಪನಮನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
    ಅಭಿಮಾನಿಗಳು, ಹಿತೈಷಿಗಳು ಹಾಗು ಸ್ಥಳೀಯರ ಸಹಕಾರದಿಂದ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಇದುವರೆಗೂ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಎರಡು ಕಾರ್ಯಕ್ರಮಗಳು ಸಹ ಯಶಸ್ವಿಗೊಂಡಿವೆ. ಪುನೀತ್ ರಾಜ್‌ಕುಮಾರ್ ಅವರ ಆಶಯದಂತೆ ನೇತ್ರದಾನ ನೋಂದಾಣಿ ಕಾರ್ಯಕ್ರಮ ಸಹ ಮುಂದಿನ ದಿನಗಳಲ್ಲಿ ಆಯೋಜಿಸಲಾಗುವುದು ಎಂದು ಕನಕ ಆಟೋ ಚಾಲಕರ ಸಂಘದ ಅಧ್ಯಕ್ಷ ಸುರೇಶ್ ತಿಳಿಸಿದರು.
    ಹೊಸ ಸೀಗೆಬಾಗಿ ಅಂಬೇಡ್ಕರ್ ವೃತ್ತ :
    ನಗರಸಭೆ ವ್ಯಾಪ್ತಿಯ ಹೊಸ ಸೀಗೆಬಾಗಿ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಯುವಕರ ಸಂಘ, ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳು ಹಾಗು ಸ್ಥಳೀಯರು ಶ್ರೀನಿಧಿ ಎಂಟರ್ ಪ್ರೈಸಸ್ ಮಾಲೀಕ ವಿನಯ್ ಹಾಗು ಶಿವಕುಮಾರ್ ನೇತೃತ್ವದಲ್ಲಿ ೧೨ನೇ ದಿನದ  ಪುಣ್ಯಸ್ಮರಣೆಯನ್ನು ಯಶಸ್ವಿಯಾಗಿ ನೆರವೇರಿಸಿದರು.
    ಇಲ್ಲೂ ಸಹ ಸಾವಿರ ಮಂದಿಗೆ ಮಾಂಸಹಾರ ವಿತರಣೆ ನಡೆಯಿತು. ಅಭಿಮಾನಿಗಳು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪುನೀತ್‌ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಗೌರವ ಸಲ್ಲಿಸಿದರು.
    ಶ್ರೀನಿಧಿ ಎಂಟರ್ ಪ್ರೈಸಸ್ ಮಾಲೀಕ, ಪುನೀತ್‌ರಾಜ್‌ಕುಮಾರ್ ಅಭಿಮಾನಿ ವಿನಯ್ ಮಾತನಾಡಿ, ಪುನೀತ್‌ರಾಜ್ ಕುಮಾರ್ ಅವರ ಸೇವಾ ಕಾರ್ಯಗಳು ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿವೆ. ಮುಂದಿನ ದಿನಗಳಗಳಲ್ಲಿ ಅವರ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯುತ್ತೇವೆ ಎಂದರು.



ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸ ಸೀಗೆಬಾಗಿ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಯುವಕರ ಸಂಘ, ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳು ಹಾಗು ಸ್ಥಳೀಯರು ಶ್ರೀನಿಧಿ ಎಂಟರ್ ಪ್ರೈಸಸ್ ಮಾಲೀಕ ವಿನಯ್ ಹಾಗು ಶಿವಕುಮಾರ್ ನೇತೃತ್ವದಲ್ಲಿ ೧೨ನೇ ದಿನದ ಪುಣ್ಯಸ್ಮರಣೆಯನ್ನು ಯಶಸ್ವಿಯಾಗಿ ನೆರವೇರಿಸಿದರು.

Monday, November 8, 2021

ಮಧ್ಯವರ್ತಿಗಳ ಹಾವಳಿ, ಭ್ರಷ್ಟಾಚಾರ, ಸರ್ಕಾರಿ ಸೌಲಭ್ಯಗಳ ವಂಚನೆ ವಿರುದ್ಧ ಪ್ರತಿಭಟನೆ

ಭದ್ರಾವತಿ ತಾಲೂಕು ಪಂಚಾಯಿತಿ ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಮಧ್ಯವರ್ತಿಗಳ ಹಾವಳಿ ಖಂಡಿಸಿ, ರೈತರ ಸಂಕಷ್ಟಕ್ಕೆ ಸ್ಪಂದಿಸದ ಅಧಿಕಾರಿಗಳ ವರ್ತನೆ ವಿರುದ್ಧ ಪ್ರತಿಭಟನೆ ಹಾಗು ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಶ್ರದ್ಧಾಂಜಲಿ ಸಭೆ ಕಾರ್ಯಕ್ರಮದಲ್ಲಿ ಬಿಸಿಯೂಟ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಮ್ಮ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ನ. ೮: ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಮಧ್ಯವರ್ತಿಗಳ ಹಾವಳಿ, ಭ್ರಷ್ಟಾಚಾರ ಹಾಗು ಸರ್ಕಾರಿ ಸೌಲಭ್ಯಗಳ ವಂಚನೆ ಹೆಚ್ಚಾಗಿದ್ದು, ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಈ ಸಂಬಂಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿವೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆರೋಪಿಸಿದರು.
    ಅವರು ಸೋಮವಾರ ಸಮಿತಿ ವತಿಯಿಂದ ತಾಲೂಕು ಪಂಚಾಯಿತಿ ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಮಧ್ಯವರ್ತಿಗಳ ಹಾವಳಿ ಖಂಡಿಸಿ, ರೈತರ ಸಂಕಷ್ಟಕ್ಕೆ ಸ್ಪಂದಿಸದ ಅಧಿಕಾರಿಗಳ ವರ್ತನೆ ವಿರುದ್ಧ ಪ್ರತಿಭಟನೆ ಹಾಗು ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಶ್ರದ್ಧಾಂಜಲಿ ಸಭೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
ದೊಣಬಘಟ್ಟ ಗ್ರಾಮದಲ್ಲಿ ಸುಮಾರು ೧೦ ಸಾವಿರಕ್ಕೂ ಹೆಚ್ಚು ಮುಸ್ಲಿಂ ಸಮುದಾಯದ ಅಲ್ಪಸಂಖ್ಯಾತರು ವಾಸಿಸುತ್ತಿದ್ದು, ಇವರಿಗೆ ಕನ್ನಡ ಭಾಷೆ ಸರಿಯಾಗಿ ಬಾರದ ಹಿನ್ನಲೆಯಲ್ಲಿ ಸರ್ಕಾರಿ ಕಛೇರಿಗಳಲ್ಲಿ ವಂಚನೆ ಹೆಚ್ಚಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಧ್ಯವರ್ತಿಗಳಿಂದ ಮತ್ತಷ್ಟು ವಂಚನೆ ನಡೆಯುತ್ತಿದೆ. ತಮಗೆ ಆಗುತ್ತಿರುವ ವಂಚನೆ, ಅನ್ಯಾಯಗಳನ್ನು ಹೇಳಿಕೊಳ್ಳಲಾಗದ ಅಸಹಾಯಕ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇಲ್ಲಿನ ನಿವಾಸಿಗಳಿಗೆ ಕನ್ನಡ ಭಾಷೆಯನ್ನು ಕಲಿಸಿಕೊಡುವಲ್ಲಿ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತಗಳು ಸೂಕ್ತ ಕ್ರಮ ಕೈಗೊಂಡಿಲ್ಲದಿರುವುದು ವಿಪರ್ಯಾಸದ ಸಂಗತಿಯಾಗಿದೆ. ತಕ್ಷಣ ಕನ್ನಡ ಭಾಷೆ ಕಲಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ಸರ್ಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಅದರಲ್ಲೂ ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರಿ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಕೆಲವು ಭ್ರಷ್ಟ ರಾಜಕಾರಣಿಗಳು, ಮಧ್ಯವರ್ತಿಗಳಿಂದಾಗಿ ವಂಚನೆ ಹೆಚ್ಚಾಗುತ್ತಿದೆ. ನಿಜವಾದ ಬಡವರಿಗೆ, ಶೋಷಿತರಿಗೆ ನ್ಯಾಯ ಸಿಗದಂತಾಗಿರುವುದು ಮತ್ತು ಸಂವಿಧಾನದ ಕಾನೂನುಗಳನ್ನು ಜಾರಿಗೊಳಿಸದಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಮೋಸ ಮಾಡಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ, ಪ್ರಗತಿಪರ ಚಿಂತಕ ಪ್ರೊ. ಜಿ.ಕೆ ಗೋವಿಂದರಾವ್, ದಕ್ಷ ಲೋಕಾಯುಕ್ತ ವೆಂಕಟಾಚಲ ಹಾಗು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಶ್ರದ್ದಾಂಜಲಿ ಸಲ್ಲಿಸಿ ಮೌನಾಚರಣೆ ನಡೆಸಲಾಯಿತು.
ಪ್ರಮುಖರಾದ ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಬಿಸಿಯೂಟ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಮ್ಮ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಹಿಂದುಳಿದ ವರ್ಗ ಮುಖಂಡ ಬಿ. ಗಂಗಾಧರ್ ಸೇರಿದಂತೆ ಇನ್ನಿತರರು ಪಾಲ್ಗೊಂಡು ಮಾತನಾಡಿದರು.
ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ಎಂ.ವಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಸೈದನ್ ಸಾಬ್, ಪೀರ್ ಸಾಬ್, ಮಹಾಲಿಂಗಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.