Wednesday, November 17, 2021

ಜಿಲ್ಲೆಯಲ್ಲಿ ಕಸಾಪ ಚುಟುವಟಿಕೆಗಳು ಸಕ್ರಿಯಗೊಳಿಸಲು ನನ್ನನ್ನು ಬೆಂಬಲಿಸಿ : ಡಿ. ಮಂಜುನಾಥ್

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಾಜಿ ಅಧ್ಯಕ್ಷ ಡಿ. ಮಂಜುನಾಥ್ ಭದ್ರಾವತಿಯಲ್ಲಿ ಬುಧವಾರ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
    ಭದ್ರಾವತಿ, ನ. ೧೭: ಈ ಹಿಂದೆ ನನ್ನ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ ಚಟುವಟಿಕೆಗಳು ಸಕ್ರಿಯವಾಗಿದ್ದು, ಪ್ರಸ್ತುತ ಅಧ್ಯಕ್ಷರ ಅವಧಿಯಲ್ಲಿ ಕ್ರಿಯಾಶೀಲತೆ ಎಂಬುದು ಮರೆಯಾಗಿದೆ. ಈ ಹಿನ್ನಲೆಯಲ್ಲಿ ಹೊಸತನದೊಂದಿಗೆ ಸಾಹಿತ್ಯ ಪರಿಷತ್ ಚಟುವಟಿಕೆಗಳನ್ನು ಮುನ್ನಡೆಸಿಕೊಂಡು ಹೋಗಲು ಈ ಬಾರಿ ಚುನಾವಣೆಗೆ ಸ್ಪರ್ಧಿಸಲಾಗಿದೆ. ಪರಿಷತ್ತಿನ ಮತದಾರರು ನನ್ನನ್ನು ಬೆಂಬಲಿಸಬೇಕೆಂದು ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮನವಿ ಮಾಡಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿರುವ ಡಿ.ಬಿ ಶಂಕರಪ್ಪ ಅವರ ತಂಡ ಅವರ ಅಧಿಕಾರದ ಅವಧಿಯಲ್ಲಿ ಯಾವುದೇ ಸಾಹಿತ್ಯಪರ ಚಟುವಟಿಕೆಗಳನ್ನು ಕೈಗೊಂಡಿಲ್ಲ. ಕೇವಲ ನನ್ನ ವಿರುದ್ಧ ಅಪಪ್ರಚಾರ ಕೈಗೊಂಡಿರುವುದು ಅವರ ಸಾಧನೆಯಾಗಿದೆ ಎಂದು ಆರೋಪಿಸಿದರು.
    ನಾನು ೨ ಬಾರಿ ನನ್ನ ಅಧಿಕಾರದ ಅವಧಿಯಲ್ಲಿ ನಿರಂತರವಾಗಿ ಜಿಲ್ಲಾದ್ಯಂತ ಚಟುವಟಿಕೆಗಳನ್ನು ನಡೆಸಿಕೊಂಡು ಬರುವ ಮೂಲಕ ಸಕ್ರಿಯವಾಗಿರಿಸಿದ್ದು, ಅಲ್ಲದೆ ಸರ್ಕಾರದಿಂದ ಹಲವು ಬಾರಿ ಅನುದಾನಗಳನ್ನು ಮಂಜೂರಾತಿ ಮಾಡಿಸುವ ಮೂಲಕ ಜಿಲ್ಲಾ ಕೇಂದ್ರ ಹಾಗು ತಾಲೂಕು ಕೇಂದ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ.  ನನ್ನ ಅವಧಿಯಲ್ಲಿ ಪೂರ್ಣಗೊಳ್ಳದ ಕೆಲವು ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತುತ ಅವಧಿಯ ಅಧ್ಯಕ್ಷರು ಪೂರ್ಣಗೊಳಿಸದಿರುವುದು ಮಾತ್ರವಲ್ಲದೆ ಯಾವುದೇ ಹೊಸ ಅಭಿವೃದ್ಧಿ ಕಾರ್ಯಗಳನ್ನು ಸಹ ಕೈಗೊಳ್ಳದಿರುವುದು ಅವರ ಅವಧಿಯಲ್ಲಿನ ಕಾರ್ಯ ಕ್ಷಮತೆಯನ್ನು ಎದ್ದು ತೋರಿಸುತ್ತದೆ ಎಂದರು.
    ಇದೀಗ ಪುನಃ ಚುನಾವಣೆಗೆ ನಾನು ಸ್ಪರ್ಧಿಸಿದ್ದು, ನ.೨೧ರ ಭಾನುವಾರ ನಡೆಯಲಿರುವ ಮತದಾನ ಕಾರ್ಯದಲ್ಲಿ ಪರಿಷತ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ನನ್ನನ್ನು ಬೆಂಬಲಿಸಬೇಕೆಂದು ಮನವಿ ಮಾಡಿದ ಅವರು, ಜಿಲ್ಲೆಯಾದ್ಯಂತ ಪ್ರತಿಯೊಬ್ಬ ಮತದಾರರ ಮನೆ ಮನೆಗೆ ಕೈಗೊಂಡಿರುವ ಪ್ರಚಾರ ಕಾರ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಆಯ್ಕೆಯಾಗುವ ವಿಶ್ವಾಸವಿದೆ ಎಂದರು.
    ಪ್ರಮುಖರಾದ ಡಾ. ರಿಯಾಜ್ ಬಾಷಾ, ಕೋಗಲೂರು ತಿಪ್ಪೇಸ್ವಾಮಿ, ತಿಮ್ಮಪ್ಪ, ಕೋಡ್ಲುಯಜ್ಞಯ್ಯ, ಅನ್ನಪೂರ್ಣಸತೀಶ್, ಗುರು, ಚಂದ್ರಪ್ಪ ಸೇರಿದಂತೆ ಇನ್ನಿತರರು ಮಾತನಾಡಿ ಡಿ. ಮಂಜುನಾಥ್ ಅವರು ೨ ಬಾರಿ ಅಧ್ಯಕ್ಷರಾಗಿ ಎಲ್ಲರ ಸಹಕಾರದೊಂದಿಗೆ ಸಾಕಷ್ಟು ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಪರಿಷತ್‌ನಲ್ಲಿ ಕ್ರಿಯಾಶೀಲತೆ ತಂದುಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಮತದಾರರು ಡಿ. ಮಂಜುನಾಥ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಕೆ.ಟಿ ಪ್ರಸನ್ನ, ಪುಷ್ಪಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ದಿವಂಗತ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ : ಕೃತಜ್ಞತೆ

ಪುನೀತ್ ರಾಜ್‌ಕುಮಾರ್ ಜನ್ಮದಿನ 'ನೇತ್ರದಾನ' ದಿನವಾಗಿಸಿ


    ಭದ್ರಾವತಿ, ನ. ೧೬: ಇತ್ತೀಚೆಗೆ ನಿಧನ ಹೊಂದಿದ ಚಲನಚಿತ್ರ ನಟ, ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಣೆ ಮಾಡಿರುವುದಕ್ಕೆ ನಗರದ ಚಾಮೇಗೌಡ ಏರಿಯಾ ಬಿ.ಎಚ್ ರಸ್ತೆ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ ಕೃತಜ್ಞತೆ ಸಲ್ಲಿಸಿದೆ.
    ಪುನೀತ್ ರಾಜ್‌ಕುಮಾರ್‌ರವರ ಸಾಧನೆ ಅಪಾರವಾಗಿದ್ದು, ಪ್ರತಿಯೊಬ್ಬರ ಮನದಾಳದ ವ್ಯಕ್ತಿಯಾಗಿ ನೆಲೆ ನಿಂತಿದ್ದಾರೆ. ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮರಣೋತ್ತರವಾಗಿ ಪ್ರಶಸ್ತಿ ನೀಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಹಿನ್ನಲೆಯಲ್ಲಿ ಬೊಮ್ಮಾಯಿಯವರಿಗೆ ಅಭಿಮಾನಿಗಳು, ಸಮಸ್ತ ನಾಗರೀಕರ ಪರವಾಗಿ ಸಂಘ ಕೃತಜ್ಞತೆ ಸಲ್ಲಿಸುತ್ತದೆ. ಇದರ ಜೊತೆಗೆ ಪುನೀತ್ ರಾಜ್‌ಕುಮಾರ್‌ರವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ೪ ಜನರ ಬದುಕಿನಲ್ಲಿ ಬೆಳಕಾಗಿ ಇತರರಿಗೆ ಸ್ಪೂರ್ತಿದಾಯಕರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಜನ್ಮದಿನವನ್ನು 'ನೇತ್ರದಾನ' ದಿನವಾಗಿ ಘೋಷಿಸಬೇಕೆಂದು ಮನವಿ ಮಾಡುತ್ತದೆ ಎಂದು ಸಂಘದ ಅಧ್ಯಕ್ಷ ವೆಂಕಟೇಶ್, ನಗರಸಭಾ ಸದಸ್ಯ ಜಾರ್ಜ್ ತಿಳಿಸಿದ್ದಾರೆ.

ನ.೧೯ರಂದು ಶಾಂತಿಯುತ ಪ್ರತಿಭಟನೆ

    ಭದ್ರಾವತಿ, ನ. ೧೭: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಿರುವಂತೆ ಹಾಗು ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ನಡೆಯುತ್ತಿರುವ ಅತಿಕ್ರಮ ಪ್ರವೇಶ ಮತ್ತು ಫಾಸ್ಟರ್‌ಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.೧೯ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಕಛೇರಿ ಮುಂಭಾಗ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಹ್ಯೂಮನ್ ರೈಟ್ಸ್ ವತಿಯಿಂದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
    ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ಸಹ ತಕ್ಷಣ ಹಿಂಪಡೆಯಬೇಕೆಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಗುವುದು. ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ಯಶಸ್ವಿಗೊಳಿಸುವಂತೆ ಹಳೇನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಕೇಂದ್ರದ ಗುರು ಫಾದರ್ ಸ್ಟೀವನ್ ಡೇಸಾ ಮತ್ತು ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕೋರಿದ್ದಾರೆ.

Tuesday, November 16, 2021

ಅಸಂಘಟಿತ ಕಾರ್ಮಿಕರು ಬೇಡಿಕೆ ಈಡೇರಿಕೆಗೆ ಹೋರಾಟ ನಡೆಸುವುದು ಅನಿವಾರ್ಯ : ಬಿ.ಎಸ್ ಅಭಿಲಾಷ್

ಭದ್ರಾವತಿ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಬಳಿ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕರ ೫ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ನೇತೃತ್ವವಹಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಬಿ.ಎಸ್ ಅಭಿಲಾಷ್ ಮಾತನಾಡಿದರು.
    ಭದ್ರಾವತಿ, ನ. ೧೬: ಅಸಂಘಟಿತ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಬಿ.ಎಸ್ ಅಭಿಲಾಷ್ ಹೇಳಿದರು.
    ಅವರು ಮಂಗಳವಾರ ನಗರದ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಬಳಿ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕರ ೫ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
    ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದಾಗ ಯುಪಿಎ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆಯವರು ಅಸಂಘಟಿತ ಕಾರ್ಮಿಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಹಿತರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ನಂತರ ಬಂದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದೆ. ಈ ಹಿನ್ನಲೆಯಲ್ಲಿ ಅಸಂಘಟಿತ ಕಾರ್ಮಿಕರ ರಕ್ಷಣೆಗಾಗಿ ಕಾಂಗ್ರೆಸ್ ನಿರಂತರವಾಗಿ ಹೋರಾಟ ನಡೆಸುತ್ತಿದೆ ಎಂದರು.
    ಅಸಂಘಟಿತ ಕಾರ್ಮಿಕರ ವಿಭಾಗದ ನಗರ ಬ್ಲಾಕ್ ಅಧ್ಯಕ್ಷ ಕೆ. ಐಸಾಕ್ ಲಿಂಕನ್ ಮಾತನಾಡಿ, ಅಸಂಘಟಿತ ಕಾರ್ಮಿಕರು ಸೌಲಭ್ಯಗಳನ್ನು ಗುರುತಿನ ಚೀಟಿಗಳನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಅಸಂಘಟಿತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ನಿರಂತವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು.
    ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಯೂನಿಯನ್ ತಾಲೂಕು ಅಧ್ಯಕ್ಷ ಚಂದ್ರಶೇಖರ್, ನಗರಸಭಾ ಸದಸ್ಯರಾದ ಜಾರ್ಜ್, ಸೈಯ್ಯದ್ ರಿಯಾಜ್ ಹಾಗು ಅಸಂಘಟಿತ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಲಂಡನ್‌ನಲ್ಲಿ ಜನಿಸಿದ ಮಗುವಿಗೆ ಲಿಂಗಾಯಿತ ಧರ್ಮದಂತೆ ನಾಮಕರಣ

ಕುಟುಂಬದ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ


ಮೂಲತಃ ಭದ್ರಾವತಿಯವರಾದ ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪುನೀತ್ ಮತ್ತು ರಾಧಿಕಾ ದಂಪತಿ ತಮ್ಮ ಮಗುವಿಗೆ ತವರು ನೆಲದಲ್ಲಿ ಲಿಂಗಾಯಿತ ಧರ್ಮದಂತೆ ನಾಮಕರಣ ಕಾರ್ಯವನ್ನು ಶಿವಮೊಗ್ಗ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದರು.
    ಭದ್ರಾವತಿ, ನ. ೧೬: ಮಗು ವಿದೇಶದಲ್ಲಿ ಜನಿಸಿದರೂ ಸಹ ಲಿಂಗಾಯಿತ ಧರ್ಮದಂತೆ ನಾಮಕರಣ ಶಾಸ್ತ್ರ ನೆರವೇರಿಸುವ ಮೂಲಕ ಹುಟ್ಟಿದ ನೆಲದ ಧರ್ಮಕ್ಕೆ ಚಿರ ಋಣಿಯಾಗಿರುವ ಕುಟುಂಬವೊಂದರ ಕಾರ್ಯ ಇದೀಗ ಎಲ್ಲರ ಗಮನ ಸೆಳೆದಿದೆ.
    ಹೊಸಮನೆ ನಿವಾಸಿ ಪ್ರೇಮಪ್ರಸಾದ್ ಹಾಗೂ ಶಿವಲೀಲಾ ದಂಪತಿ ಪುತ್ರ ಪುನೀತ್ ಮತ್ತು ಸೊಸೆ ರಾಧಿಕಾ ಕಳೆದ ಕೆಲವು ವರ್ಷಗಳಿಂದ ಲಂಡನ್‌ನಲ್ಲಿ ವಾಸವಾಗಿದ್ದು, ೬ ತಿಂಗಳ ಹಿಂದೆ ಹೆಣ್ಣು ಮಗು ಜನಿಸಿದೆ. ಈ ಮಗುವಿಗೆ ಲಿಂಗಾಯಿತ ಧರ್ಮದಂತೆ ನಾಮಕರಣ ಮಾಡಬೇಕೆಂಬ ಬಯಕೆಯೊಂದಿದ್ದ ಈ ದಂಪತಿ ತವರು ದೇಶ ಭಾರತಕ್ಕೆ ಆಗಮಿಸಿ ತಮ್ಮ ಬಯಕೆಯನ್ನು ಈಡೇರಿಸಿಕೊಂಡಿದ್ದಾರೆ.
    ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯಭವನದಲ್ಲಿ ಆಯೋಜಿಸಲಾಗಿದ್ದ ಶುಭ ಸಮಾರಂಭದಲ್ಲಿ ಶಿವಮೊಗ್ಗ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿಯವರು ಲಿಂಗಾಯಿತ ಧರ್ಮದಂತೆ ಲಿಂಗಧಾರಣಾ ಮತ್ತು ನಾಮಕರಣ ನೆರವೇರಿಸಿಕೊಟ್ಟರು. ಲಂಡನ್ ಪ್ರಜೆಯಾಗಿರುವ ಹೆಣ್ಣು ಮಗುವಿಗೆ ನಿಧಿ ಎಂಬ ಹೆಸರನ್ನು ನಾಮಕರಣಗೊಳಿಸಲಾಗಿದ್ದು, ಕುಟುಂಬ ಸಂಬಂಧಿಕರು, ಹಿತೈಷಿಗಳು, ಸ್ನೇಹಿತರು ಸಮಾರಂಭದಲ್ಲಿ ಪಾಲ್ಗೊಂಡು ಮಗುವಿಗೆ ಶುಭ ಹಾರೈಸಿದರು.

ತುಳುಕೂಟದ ನೂತನ ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಆಯ್ಕೆ

ಸುಧಾಕರ ಶೆಟ್ಟಿ
    ಭದ್ರಾವತಿ, ನ. ೧೬: ತಾಲೂಕು ತುಳುಕೂಟದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಜನ್ನಾಪುರ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಪ್ರಕಾಶ್ ಪಿಂಟೋ, ಪ್ರಧಾನ ಕಾರ್ಯದರ್ಶಿಯಾಗಿ ಡಾ. ಹರೀಶ ದೇಲಂತಬೆಟ್ಟು, ಖಜಾಂಚಿಯಾಗಿ ಡಾ. ವೈ. ಆನಂದ್, ಕಾರ್ಯದರ್ಶಿಗಳಾಗಿ ನಾರಾಯಣ ಪೂಜಾರಿ ಮತ್ತು ಬಿ. ಸುಬ್ಬಣ್ಣ ಆಯ್ಕೆಯಾಗಿದ್ದಾರೆ.
    ಆರಂಭದಲ್ಲಿ ನಿಧನ ಹೊಂದಿದ ಸಂಘದ ಸದಸ್ಯರಿಗೆ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು. ವಾರ್ಷಿಕ ವರದಿ ಹಾಗು ಲೆಕ್ಕಪತ್ರ ಮಂಡನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು. ಬಂಟರ ಸಂಘದ ಅಧ್ಯಕ್ಷ ಬಿ. ದಿವಾಕರ ಶೆಟ್ಟಿ, ರೋಟರಿ ಕ್ಲಬ್‌ ಅಧ್ಯಕ್ಷ ಆದರ್ಶ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಪ್ರಕಾಶ್‌ ಪಿಂಟೋ ಅಧ್ಯಕ್ಷತೆ ವಹಿಸಿದ್ದರು.  ಕಳೆದ ಕೆಲವು ತಿಂಗಳು ಹಿಂದೆ ತುಳುಕೂಟದ ಅಧ್ಯಕ್ಷರಾಗಿದ್ದ ಹಿರಿಯ ವೈದ್ಯ ಡಾ. ಯು. ಕರುಣಾಕರ ಶೆಟ್ಟಿಯವರು ನಿಧನ ಹೊಂದಿದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಸುಧಾಕರ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. 

Monday, November 15, 2021

ಕಲ್ಲಂಗಡಿಯಲ್ಲಿ ಅರಳಿದ ಪವರ್ ಸ್ಟಾರ್ : ಪುನೀತ್ ರಾಜ್‌ಕುಮಾರ್ ಗೌರವ ನಮನ

    ಭದ್ರಾವತಿ, ನ. ೧೫: ಇತ್ತೀಚೆಗೆ ನಿಧನ ಹೊಂದಿದ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ನಗರದ ತರೀಕೆರೆ ರಸ್ತೆ ಶಿವಾನಿ ವೃತ್ತದ ಫೈಜಾನ್ ಆರ್ಟ್ಸ್‌ನ ಕಲಾವಿದ ಮಹಮದ್ ಫೈಜಾನ್ ಕಲ್ಲಂಗಡಿ ಹಣ್ಣಿನಲ್ಲಿ ತಮ್ಮ ಕಲಾ ಕೌಶಲ್ಯದ ಮೂಲಕ ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
    ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಅವರಿಗೆ ಗೌರವ ಸಲ್ಲಿಸಲು ಕಲ್ಲಂಗಡಿ ಹಣ್ಣಿನಲ್ಲಿ ಅವರ ಆಕಷರ್ಕ ಕಲಾಕೃತಿಯನ್ನು ರಚಿಸಿದ್ದಾರೆ. ಈ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ. ಇವರ ಈ ಕಲೆಗೆ ಯಾರಿಂದಲೂ ಬೆಲೆ ಕಟ್ಟಲು ಸಾಧ್ಯವಿಲ್ಲ. ವಿಶೇಷ ಎಂದರೆ ಈ ಕಲಾಕೃತಿಗೆ ಬಣ್ಣ ಬಣ್ಣದ ವಿದ್ಯುತ್ ದೀಪ ಸಹ ಅಳವಡಿಕೆ ಮಾಡುವ ಮೂಲಕ ಮತ್ತಷ್ಟು ಆಕರ್ಷಕವಾಗಿ ಕಾಣುವಂತೆ ಮಾಡಲಾಗಿದೆ.
    ಮಹಮದ್ ಫೈಜಾನ್ ಅವರು ಸ್ಟಿಕ್ಕರ್ ಕಟಿಂಗ್ಸ್, ಬಣ್ಣ ಲೇಪನ ವೃತ್ತಿ ಜೊತೆಗೆ ಕುಂಚ ಕಲಾವಿದರಾಗಿ ಸಹ ಗುರುತಿಸಿಕೊಂಡಿದ್ದು, ತಮ್ಮಲ್ಲಿನ ಕೆತ್ತನೆಯ ಕಲಾ ಕೌಶಲ್ಯದ ಮೂಲಕ ಹಲವಾರು ಕಲಾಕೃತಿಗಳನ್ನು ರಚಿಸಿದ್ದಾರೆ. ಗಣ್ಯರ ಹುಟ್ಟುಹಬ್ಬ ಸೇರಿದಂತೆ ವಿಶೇಷ ದಿನಗಳಂದು ಕಲ್ಲಂಗಡಿ ಹಣ್ಣಿನಲ್ಲಿ ಅವರ ಕಲಾಕೃತಿಗಳನ್ನು ರಚಿಸಿಕೊಂಡು ಬರುತ್ತಿದ್ದಾರೆ. ೨೦೧೯ರಲ್ಲಿ ಗಾಂಧಿಜಯಂತಿ ದಿನದಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಕಲಾಕೃತಿ, ೨೦೧೮ರಲ್ಲಿ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬದಂದು ಅವರ ಕಲಾಕೃತಿ, ೨೦೧೯ರಲ್ಲಿ ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಂ ಅವರ ಹುಟ್ಟುಹಬ್ಬದಂದು ಅವರ ಕಲಾಕೃತಿ ಹೀಗೆ ಹಲವಾರು ಗಣ್ಯ ವ್ಯಕ್ತಿಗಳ ಕಲಾಕೃತಿಗಳನ್ನು ರಚಿಸಿ ಗಮನ ಸೆಳೆದಿದ್ದಾರೆ.
    ಫೈಜಾನ್ ಅವರು ಕೇವಲ ಕಲ್ಲಂಗಡಿ ಹಣ್ಣು ಮಾತ್ರವಲ್ಲದೆ ಎಲೆಗಳ ಮೇಲೆ ಕಲಾಕೃತಿಗಳನ್ನು ರಚಿಸಿದ್ದಾರೆ. ಗೋಡೆಗಳ ಮೇಲೆ ಆಕರ್ಷಕವಾದ ಕುಂಚ ಕಲೆ, ವರ್ಣ ಚಿತ್ರ ಕಲೆಗಳಲ್ಲಿಯೂ ಸಹ ಪರಿಣಿತರಾಗಿದ್ದಾರೆ.
ಫೈಜಾನ್ ಅವರು ತಮ್ಮ ಎಲ್ಲಾ ಕಲಾಕೃತಿಗಳನ್ನು ತಮ್ಮದೇ ಯೂ ಟೂಬ್ ಚಾನಲ್‌ನಲ್ಲಿ ಸಂಗ್ರಹಿಸಿಟ್ಟುಕೊಂಡು ಆಸಕ್ತರಿಗೆ ಪರಿಚರಿಸಿಕೊಂಡು ಬರುತ್ತಿದ್ದಾರೆ. ಸುಮಾರು ೧೫ ವರ್ಷಗಳಿಂದ ಯಾವುದೇ ಪ್ರಚಾರದ ಗೀಳು ಹಚ್ಚಿಸಿಕೊಳ್ಳದ ಎಲೆಮರೆ ಕಾಯಿಯಂತೆ ಉಳಿದುಕೊಂಡಿದ್ದಾರೆ.
    ಕಳೆದ ೩ ದಿನಗಳ ಹಿಂದೆ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗು ಪುನೀತ್ ರಾಜ್‌ಕುಮಾರ್ ಅವರ ಪುಣ್ಮಸ್ಮರಣೆ ಕಾರ್ಯಕ್ರಮದಲ್ಲಿ ಪುನೀತ್‌ರಾಜ್‌ಕುಮಾರ್ ಅವರ ಕಲಾಕೃತಿಯನ್ನು ಸಮರ್ಪಿಸಿಕೊಂಡು ತಮ್ಮಲ್ಲಿನ ಕಲಾ ಕೌಶಲ್ಯವನ್ನು ಅನಾವರಣಗೊಳಿಸಿದ್ದಾರೆ.



ಇತ್ತೀಚೆಗೆ ನಿಧನ ಹೊಂದಿದ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಭದ್ರಾವತಿ ತರೀಕೆರೆ ರಸ್ತೆ ಶಿವಾನಿ ವೃತ್ತದ ಫೈಜಾನ್ ಆರ್ಟ್ಸ್‌ನ ಕಲಾವಿದ ಮಹಮದ್ ಫೈಜಾನ್ ಕಲ್ಲಂಗಡಿ ಹಣ್ಣಿನಲ್ಲಿ ತಮ್ಮ ಕಲಾ ಕೌಶಲ್ಯದ ಮೂಲಕ ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.