Monday, November 29, 2021

ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ ಅಂಗವಾಗಿ ನ.೩೦, ಡಿ.೧ರಂದು ಧಾರ್ಮಿಕ ಆಚರಣೆಗಳು

    ಭದ್ರಾವತಿ, ನ. ೨೯: ಜನ್ನಾಪುರ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ ಸಮೀಪ ೧೦೦ ವರ್ಷಗಳ ಇತಿಹಾಸವಿರುವ ಪುನರ್ ನಿರ್ಮಾಣ ಗೊಂಡಿರುವ ಶ್ರೀರಾಮ ಭಜನಾ ಮಂದಿರದ ಲೋಕಾರ್ಪಣೆ ಪೂರ್ವಭಾವಿಯಾಗಿ ಹೋಮ, ಹವನ ಹಾಗು ಶ್ರೀ ಸತ್ಯನಾರಾಯಣ ಪೂಜೆ ಸೇರಿದಂತೆ ಧಾರ್ಮಿಕ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ.
    ೧೯೨೧ರಲ್ಲಿ ಸ್ಥಾಪಿತಗೊಂಡ ಮಂದಿರ ಶಿಥಿಲಗೊಂಡ ಪರಿಣಾಮ ಯಾವುದೇ ಚಟುವಟಿಕೆಗಳು ನಡೆಯದೆ ಸುಮಾರು ೧ ದಶಕದಿಂದ ಪಾಳು ಬಿದ್ದಿದ್ದು, ಸ್ಥಳೀಯ ಸಮಾನ ಮನಸ್ಕರೆಲ್ಲಾ ಸೇರಿ ಮಂದಿರ ಪುನರ್ ನಿರ್ಮಾಣ ಮಾಡಬೇಕೆಂಬ ಧ್ಯೇಯೋದ್ದೇಶದೊಂದಿಗೆ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಸರ್ಕಾರದಿಂದ ಅನುದಾನ ಪಡೆದುಕೊಂಡು ಮಂದಿರನ್ನು ಪುನರ್ ನಿರ್ಮಾಣಗೊಳಿಸಿದ್ದಾರೆ.
    ಮಂದಿರ ಲೋಕಾರ್ಪಣೆ ಅಂಗವಾಗಿ ನ.೩೦ರಂದು ರಾತ್ರಿ ೮ ಗಂಟೆಯಿಂದ ಹೋಮ ಹಾಗು ಡಿ.೧ರ ಬೆಳಿಗ್ಗೆ ೯.೩೦ಕ್ಕೆ ಸತ್ಯ ನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಶ್ರೀರಾಮ ಮಂಡಳಿ ಗೌರವಾಧ್ಯಕ್ಷ ಎಚ್.ಎಸ್ ನಂಜುಂಡಯ್ಯ ಕೋರಿದ್ದಾರೆ.

ಅಶ್ಲೀಲ ನೃತ್ಯ ಪ್ರದರ್ಶನ ನಡೆಸುವ ವಾದ್ಯಗೋಷ್ಠಿ ಕಲಾತಂಡಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ : ಮನವಿ

ಅಶ್ಲೀಲ ನೃತ್ಯ ಪ್ರದರ್ಶನ ಮಾಡಿಸುವ ವಾದ್ಯಗೋಷ್ಠಿ ಕಲಾತಂಡ(ಆರ್ಕೆಸ್ಟ್ರಾ)ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಭದ್ರಾವತಿಯಲ್ಲಿ ವಾದ್ಯಗೋಷ್ಠಿ ಕಲಾವಿದರು ಹಾಗು ದಲಿತ ಸಂಘರ್ಷ ಸಮಿತಿ ಸೇರಿದಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ನ. ೨೯: ಅಶ್ಲೀಲ ನೃತ್ಯ ಪ್ರದರ್ಶನ ಮಾಡಿಸುವ ವಾದ್ಯಗೋಷ್ಠಿ ಕಲಾತಂಡ(ಆರ್ಕೆಸ್ಟ್ರಾ)ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ವಾದ್ಯಗೋಷ್ಠಿ ಕಲಾವಿದರು ಹಾಗು ದಲಿತ ಸಂಘರ್ಷ ಸಮಿತಿ ಸೇರಿದಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ದಲಿತ ಸಂಘರ್ಷ ಸಮಿತಿ ಪ್ರಮುಖರು, ಪ್ರಗತಿಪರರು ಹಾಗು ಕಲಾವಿದರು ಮಾತನಾಡಿ, ನಗರದ ನಿವಾಸಿ ಹರೀಶ್ ಮಾಲೀಕತ್ವದ ಸೋನಿ ಮೆಲೋಡಿ ವಾದ್ಯ ಗೋಷ್ಠಿ ತಂಡ ಇತ್ತೀಚೆಗೆ ತುರುವೇಕೆರೆ ತಾಲೂಕಿನ ಗ್ರಾಮವೊಂದರಲ್ಲಿ ಆಯೋಜಿಸಲಾಗಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಮಹಿಳಾ ಕಲಾವಿದರನ್ನು ಬಳಸಿಕೊಂಡು ತುಂಡು ಉಡುಗೆಯ ಅಶ್ಲೀಲ ನೃತ್ಯ ಪ್ರದರ್ಶನ ನೀಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಾದ್ಯಂತ ವ್ಯಾಪಾಕವಾಗಿ ಪ್ರಸಾರಗೊಳ್ಳುವ ಮೂಲಕ ಗೌರವಯುತವಾಗಿ ಗುರುತಿಸಿಕೊಂಡಿರುವ ಕಲಾವಿದರಿಗೆ ಮಸಿ ಬಳಿದಂತಾಗಿದ್ದು, ಕಲಾವಿದರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಈ ರೀತಿಯ ಘಟನೆ ಈ ಹಿಂದೆ ಸಹ ನಡೆದಿದ್ದು, ಈ ಸಂದರ್ಭದಲ್ಲಿ ಪುನಃ ಮರುಕಳುಹಿಸದಂತೆ ಎಚ್ಚರ ವಹಿಸುವುದಾಗಿ ಕ್ಷಮೆಯಾಚಿಸಲಾಗಿತ್ತು. ಆದರೆ ಇದೀಗ ಪುನಃ ಘಟನೆ ನಡೆದಿರುವುದು ಕಲಾವಿದರಿಗೆ ಅದರಲ್ಲೂ ಮಹಿಳಾ ಕಲಾವಿದರಿಗೆ ಹೆಚ್ಚಿನ ನೋವುಂಟು ಮಾಡಿದೆ. ಕಲೆಯನ್ನು ವೃತ್ತಿಯಾಗಿಸಿಕೊಂಡು ಬದುಕುತ್ತಿರುವ ಬಹಳಷ್ಟು ಕಲಾವಿದರಿಗೆ ಈ ಕೃತ್ಯ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ಕಲಾವಿದರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ಕಲಾತಂಡಗಳಿಗೆ ಬೇಡಿಕೆ ಸಹ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಕೃತ್ಯ ನಡೆಸಿರುವುದು ಗೌರವಯುತವಾಗಿ ಗುರುತಿಸಿಕೊಂಡಿರುವ ಕಲಾವಿದರ ಬದುಕಿನ ಮೇಲೂ ದುಷ್ಪರಿಣಾಮ ಉಂಟುಮಾಡುತ್ತಿದೆ ಎಂದು ಅಳಲು ತೋರ್ಪಡಿಸಿಕೊಂಡರು.
    ಅಶ್ಲೀಲ ನೃತ್ಯ ಮಾಡಿಸುವ ವಾದ್ಯಗೋಷ್ಠಿ ಕಲಾ ತಂಡಗಳನ್ನು ತಕ್ಷಣ ರದ್ದುಗೊಳಿಸಿ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಆಗ್ರಹಿಸುವ ಜೊತೆಗೆ ರಾಜ್ಯದಲ್ಲಿರುವ ವಾದ್ಯಗೋಷ್ಠಿ ಕಲಾವಿದರಿಗೆ ಸರ್ಕಾರ ಪ್ರತಿವರ್ಷ ಸಾಲಸೌಲಭ್ಯ ಕಲ್ಪಿಸಿಕೊಡಬೇಕು. ಹಿರಿಯ ಕಲಾವಿದರಿಗೆ ಸಮರ್ಪಕವಾಗಿ ಮಾಸಾಶನ ವಿತರಿಸಬೇಕು ಮತ್ತು ನಿರ್ಗತಿಕ ಕಲಾವಿದರಿಗೆ ನಿವೇಶನ, ವಸತಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
    ವಾದ್ಯಗೋಷ್ಠಿ ಕಲಾವಿದರಾದ ಶಾಲಿನಿ, ಬಿ.ಆರ್ ಗೋಪಾಲ್, ವಿಜಯ್ ದಯಾಕರ್, ನೂರುಲ್ಲಾ, ಎ. ರಾಜು, ವೆಂಕಟೇಶ್, ಕಣ್ಣಪ್ಪ ಮತ್ತು ದಾಮೋಜಿ, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಕೆ. ರಂಗನಾಥ್, ಸಂಘಟನಾ ಸಂಚಾಲಕ ಸುರೇಶ್, ಜಿಲ್ಲಾ ಸಂಘಟನಾ ಸಂಚಾಲಕ ಈಶ್ವರಪ್ಪ, ಮುಖಂಡರಾದ ಕುಪೇಂದ್ರಪ್ಪ, ಪಳನಿರಾಜ್,  ಹಾಗು ಡಿಎಸ್‌ಎಸ್ ಮುಖಂಡರಾದ ಚಿನ್ನಯ್ಯ, ರಂಗನಾಥ್, ಈಶ್ವರಪ್ಪ, ಎನ್. ಕುಬೇಂದ್ರಪ್ಪ, ನ್ಯಾಷನಲ್ ಹ್ಯೂಮನ್ ರೈಟ್ಸ್ ಪ್ಯಾನಲ್ ಅಧ್ಯಕ್ಷ ಡಿ.ಜೆ ಪ್ರಭು, ಮೋಸಸ್, ದೀಪು, ನೂರುಲ್ಲಾ ಖಾನ್, ಶ್ರಮಿಕ್, ಮಾರ್ಟಿಸ್, ಶೃತಿ ಮೇರಮ್ಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Sunday, November 28, 2021

ಈ ಬಾರಿ ಪರಿಷತ್ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲುವು ಖಚಿತ : ಬಿ.ವೈ ರಾಘವೇಂದ್ರ

ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಶ್ರೀ ವರದರಾಜ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ಭದ್ರಾವತಿ, ನ. ೨೮: ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗಿದ್ದು, ಭದ್ರಾವತಿ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷದ ಶಾಸಕರುಗಳಿದ್ದಾರೆ. ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಭಾನುಬಾರ ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ವರದರಾಜ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಬಿಜೆಪಿ ಪಕ್ಷಕ್ಕೆ ಎಲ್ಲೆಡೆ ಜನಬೆಂಬಲವಿದ್ದು, ಕಳೆದ ವಿಧಾನಪರಿಷತ್ ಚುನಾವಣೆ ನಂತರ ಕ್ಷೇತ್ರದ ಚಿತ್ರಣ ಸಂಪೂರ್ಣವಾಗಿ ಬದಲಾಗಿದೆ. ಎಲ್ಲಾ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗ್ರಾಮ ಪಂಚಾಯಿತಿಯಿಂದ ವಿಧಾನಸಭೆವರೆಗೂ ಪಕ್ಷ ಬಲಿಷ್ಠವಾಗಿದೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಯಾಗಿರುವ ಡಿ.ಎಸ್ ಅರುಣ್‌ರವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
    ಅಭ್ಯರ್ಥಿ ಡಿ.ಎಸ್ ಅರುಣ್ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಎದುರಾಗಿರುವ ವಿಧಾನಪರಿಷತ್ ಚುನಾವಣೆಯಲ್ಲಿ ೨೫ ಸ್ಥಾನಗಳ ಪೈಕಿ ಈಗಾಗಲೇ ೧೫ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಘೋಷಿಸಿದ್ದಾರೆ. ಅಲ್ಲದೆ ನನ್ನ ಪರವಾಗಿ ನಾನೇ ಅಭ್ಯರ್ಥಿ ಎಂದು ಮತಯಾಚನೆ ನಡೆಸುತ್ತಿದ್ದಾರೆ. ಇದರಿಂದಾಗಿ ಈ ಚುನಾವಣೆ ಎಷ್ಟು ಮಹತ್ವ ಪಡೆದುಕೊಂಡಿದೆ ಎಂಬುದು ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು. ಚುನಾವಣೆಯಂದು ಕೇವಲ ಬಿಜೆಪಿ ಅಭ್ಯರ್ಥಿ ಮಾತ್ರ ಕಣದಲ್ಲಿರುವುದು ಎಂಬ ಒಂದೇ ಆಲೋಚನೆಯೊಂದಿಗೆ ನನಗೆ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್, ಪ್ರಮುಖರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಶಿವರಾಜ್, ಜಿ. ಧರ್ಮಪ್ರಸಾದ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್,  ಪ್ರಮುಖರಾದ ವಿ. ಕದಿರೇಶ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪರಿಸರ ಶಿವರಾಮ್ ಆತ್ಮಕಥೆ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ


ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಸಾಹಿತಿ, ಪ್ರಕಾಶಕ ಭದ್ರಾವತಿ ರಾಮಾಚಾರಿ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಪರಿಸರವಾದಿ, ಚಲನಚಿತ್ರ ನಟ, ನಿರ್ದೇಶಕ ಪರಿಸರ ಶಿವರಾಮ್ ಅವರ ಆತ್ಮಕಥೆ 'ಮುಖ ಮುಖಗಳು ಮುಖವಾಡಗಳಂತಿವೆ' ಪುಸ್ತಕ ಹೊರತಂದಿದ್ದಾರೆ. ಚಲನಚಿತ್ರ ನಟ, ನಿರ್ದೇಶಕ, ಪರಿಸರವಾದಿ ಸುರೇಶ್ ಹೆಬ್ಳಿಕರ್ ಪುಸ್ತಕ ಬಿಡುಗಡೆಗೊಳಿಸಿದರು.  
    ಭದ್ರಾವತಿ, ನ. ೨೮: ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಸಾಹಿತಿ, ಪ್ರಕಾಶಕ ಭದ್ರಾವತಿ ರಾಮಾಚಾರಿ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಪರಿಸರವಾದಿ, ಚಲನಚಿತ್ರ ನಟ, ನಿರ್ದೇಶಕ ಪರಿಸರ ಶಿವರಾಮ್ ಅವರ ಆತ್ಮಕಥೆ 'ಮುಖ ಮುಖಗಳು ಮುಖವಾಡಗಳಂತಿವೆ' ಪುಸ್ತಕ ಹೊರತಂದಿದ್ದಾರೆ.
    ಪರಿಸರ ರಾಜ್ಯ ಪ್ರಶಸ್ತಿ ಮತ್ತು ಬಯಲಾಟ ಆಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಪರಿಸರ ಶಿವರಾಮ್ ಉಕ್ಕಿನ ನಗರದ ಜನತೆಗೆ ಬಹುತೇಕ ಚಿರಪರಿಚಿತರಾಗಿದ್ದಾರೆ. ಇವರ ಆತ್ಮಕಥೆಯನ್ನು ಭದ್ರಾವತಿ ರಾಮಾಚಾರಿಯವರು ಅದ್ಭುತವಾಗಿ ಹೊರತಂದಿದ್ದು, ಪರಿಸರ ಶಿವರಾಮ್ ಅವರ ಜೀವನದ ನೈಜತೆಯನ್ನು ಓದುಗರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
    ಚಲನಚಿತ್ರ ನಟ, ನಿರ್ದೇಶಕ, ಪರಿಸರವಾದಿ ಸುರೇಶ್ ಹೆಬ್ಳಿಕರ್ ಪುಸ್ತಕ ಬಿಡುಗಡೆಗೊಳಿಸಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ. ಪುಸ್ತುಕ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿಗೆ ಮೊ: ೮೮೬೧೪೯೫೬೧೦ ಸಂಖ್ಯೆಗೆ ಕರೆ ಮಾಡಬಹುದಾಗಿದೆ.


ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿ.ಎಸ್ ನಾರಾಯಣಪ್ಪ

ಭದ್ರಾವತಿ ಭೂತನಗುಡಿ ಓ.ಎಸ್.ಎಂ ರಸ್ತೆಯಲ್ಲಿರುವ ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಬಿ.ಎಸ್ ನಾರಾಯಣಪ್ಪ ಮತ್ತು ಉಪಾಧ್ಯಕ್ಷರಾಗಿ ಎನ್. ಮಂಜುನಾಥ್ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ನ. ೨೮: ನಗರದ ಭೂತನಗುಡಿ ಓ.ಎಸ್.ಎಂ ರಸ್ತೆಯಲ್ಲಿರುವ ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಬಿ.ಎಸ್ ನಾರಾಯಣಪ್ಪ ಆಯ್ಕೆಯಾಗಿದ್ದಾರೆ.
    ಉಪಾಧ್ಯಕ್ಷರಾಗಿ ಎನ್. ಮಂಜುನಾಥ್ ಆಯ್ಕೆಯಾಗಿದ್ದು, ಚುನಾವಣಾಧಿಕಾರಿಯಾಗಿ ಡಿ. ಮಂಜಪ್ಪ ಕರ್ತವ್ಯ ನಿರ್ವಹಿಸಿದರು. ನಿರ್ದೇಶಕರಾದ ಕೆ.ಎಸ್ ಕೃಷ್ಣಪ್ಪ, ಕೆ. ಮಂಜಪ್ಪ, ಯು. ಸಂದಿಲ್‌ಕುಮಾರ್, ಕೃಷ್ಣಾನಂದ ರಾಯ್ಕರ್, ಆರ್.ಪಿ ವೆಂಕಟೇಶ್, ಜೆ.ಎಂ ರಾಜ, ಬಿ. ಮಂಜುಳಾ, ಕೆ. ವಸಂತಮ್ಮ, ಹೇಮಾವತಿ, ಶಾರದಬಾಯಿ ಮತ್ತು ಬಿ.ಎಚ್ ಮಂಜುನಾಥ್ ಉಪಸ್ಥಿತರಿದ್ದರು.

Saturday, November 27, 2021

ಲಾರಿಗೆ ಬೈಕ್ ಡಿಕ್ಕಿ : ೭ ವರ್ಷದ ಮಗು ಸಾವು



ಭದ್ರಾವತಿ ಬೈಪಾಸ್ ರಸ್ತೆ ಉಜ್ಜನಿಪುರದಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿರುವುದು.
 
ಭದ್ರಾವತಿ, ನ. ೨೭: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುಮಾರು ೭ ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶನಿವಾರ ನಗರದ ಬೈಪಾಸ್ ರಸ್ತೆ ಉಜ್ಜನಿಪುರದಲ್ಲಿ ನಡೆದಿದೆ. 
ಬೈಕ್ ಸವಾರ ಶಿವಮೊಗ್ಗ ಮಿಳ್ಳಘಟ್ಟದ ನಿವಾಸಿ ಎಂದು ಗುರುತಿಸಲಾಗಿದ್ದು, ಈತ ಪತ್ನಿ ಹಾಗು ಇಬ್ಬರು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಕಾರ್ಯ ನಿಮಿತ್ತ ಚಿಕ್ಕಮಗಳೂರಿಗೆ ತೆರಳಿದ್ದು, ಪುನಃ ಹಿಂದಿರುಗಿ ಶಿವಮೊಗ್ಗಕ್ಕೆ ಹೋಗುವಾಗ ಉಜ್ಜನಿಪುರ ಎಂಪಿಎಂ ಬಡಾವಣೆ ಬಳಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಈತನಿಗೆ ಗಂಬೀರ ಗಾಯಗಳಾಗಿದ್ದು, ಉಳಿದಂತೆ ಪತ್ನಿ ಮತ್ತು ಇನ್ನೊಂದು ೩ ವರ್ಷದ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಕಾಗದನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ಪುನಃ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ : ಆರ್. ಪ್ರಸನ್ನಕುಮಾರ್


ಭದ್ರಾವತಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಮಾತನಾಡಿದರು.
    ಭದ್ರಾವತಿ, ನ. ೨೭: ರಾಜ್ಯದಲ್ಲಿ ಮುಂದಿನ ೬ ತಿಂಗಳಲ್ಲಿ ಪುನಃ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವರಾಗುವುದು ಬಹುತೇಕ ಖಚಿತ ಎಂದು ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಹೇಳಿದರು.
    ಅವರು ಶನಿವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರಿಂದ ಆಯ್ಕೆಯಾಗಿ ಸ್ವಾಯತ್ತ ಸಂಸ್ಥೆಗಳಾಗಿರುವ ಗ್ರಾಮ ಪಂಚಾಯಿತಿಗಳನ್ನು ಮುನ್ನಡೆಸಿಕೊಂಡು ಹೋಗುತ್ತಿರುವ ಸದಸ್ಯರು ಸ್ವತಂತ್ರವಾಗಿ ತಮ್ಮದೇ ಆದ ನಿರ್ಣಯಗಳನ್ನು ಕೈಗೊಳ್ಳಲಾಗದಂತಹ ಪರಿಸ್ಥಿತಿಗಳನ್ನು ನಿರ್ಮಾಣ ಮಾಡುವ ಜೊತೆಗೆ ಹಲವಾರು ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿರುವ ಸರ್ಕಾರದ ವಿರುದ್ಧ ಇಂದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ರಾಜ್ಯದಲ್ಲಿರುವ ಸರ್ಕಾರ ಮುಂದಿನ ೬ ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.
    ಸಚಿವ ಕೆ.ಎಸ್ ಈಶ್ವರಪ್ಪ ಅವರು ಗ್ರಾಮ ಪಂಚಾಯಿತಿಗಳಿಗೆ ಅನುದಾನ ನೀಡಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ. ಆದರೆ ವಾಸ್ತವವಾಗಿ ಪಂಚಾಯಿತಿ ಸದಸ್ಯರಿಗೆ ಸೇರಿದ ಹಣವನ್ನು ಕಸಿದುಕೊಂಡು ಆ ಹಣದಲ್ಲಿ ತಮಗೆ ಬೇಕಾದ ವಸ್ತುಗಳನ್ನು ಖರೀದಿಸಿ ಪಂಚಾಯಿತಿಗಳಿಗೆ ನೀಡಿ ಆ ಮೂಲಕ ಕಮೀಷನ್ ಹಣ ಪಡೆದುಕೊಳ್ಳುತ್ತಿದ್ದಾರೆ. ಪಂಚಾಯಿತಿ ಸದಸ್ಯರಿಗೆ ಯಾವುದೇ ನಿರ್ಣಯ ಕೈಗೊಳ್ಳದಂತೆ ಅಧಿಕಾರ ಮೊಟಕುಗೊಳಿಸಿದ್ದಾರೆ. ೧೪ನೇ ಹಣಕಾಸಿನ ಬದಲು ೧೫ನೇ ಹಣಕಾಸಿನಡಿ ಅಲ್ಪ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡಿ ಆ ಹಣದಲ್ಲೂ  ಲೂಟಿ ಹೊಡೆಯುತ್ತಿದ್ದಾರೆ. ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಇದುವರೆಗೂ ತನ್ನ ಹಣದಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
    ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಪುನಃ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಮಾಹಿತಿ ಸಂಗ್ರಹಿಸಿಕೊಂಡು ಮೀಸಲಾತಿ ರಚಿಸುವ ನೆಪದಲ್ಲಿ ಚುನಾವಣೆ ನಡೆಯದಂತೆ ಕುತಂತ್ರ ನಡೆಸಲಾಗುತ್ತಿದೆ. ಇದನ್ನು ವಿಧಾನ ಸಭೆ ಹಾಗು ವಿಧಾನ ಪರಿಷತ್‌ನಲ್ಲಿ ಚರ್ಚಿಸಲು ಮುಂದಾದರೆ ಕಿವಿ ಕೇಳಿಸದಂತೆ, ಸದಸ್ಯರ ಮಾತುಗಳಿಗೆ ಬೆಲೆಕೊಡದಂತೆ ವರ್ತಿಸುವ ಜೊತೆಗೆ ಸರ್ವಾಧಿಕಾರಿ ಧೋರಣೆಯೊಂದಿಗೆ ಈ ಸಂಬಂಧ ನಿರ್ಣಯ ಕೈಗೊಂಡಿದೆ. ಇಂತಹ ಸರ್ಕಾರಕ್ಕೆ ಪಾಠ ಕಲಿಸಬೇಕಾದರೆ ಕೇವಲ ಚುನಾವಣೆಯಿಂದ ಮಾತ್ರ ಸಾಧ್ಯವಾಗಿದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡು ಈ ಬಾರಿ ಚುನಾವಣೆಯಲ್ಲಿ ನನ್ನನ್ನು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
       ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕಾದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವಾಗಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿವೆ. ಬಿಜೆಪಿ ಸರ್ಕಾರ ಸರಿಯಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ನನ್ನನ್ನು ೩ ಬಾರಿ ಆಯ್ಕೆ ಮಾಡಿರುವಂತೆ ಆರ್ ಪ್ರಸನ್ನಕುಮಾರ್ ಅವರನ್ನು ಸಹ ಆಯ್ಕೆ ಮಾಡಬೇಕು. ನಾವಿಬ್ಬರೂ ಜೊತೆಯಲ್ಲಿದ್ದಾಗ ಮಾತ್ರ ಇನ್ನೂ ಹೆಚ್ಚಿನ ಕೆಲಸ ಮಾಡಲು, ಹೆಚ್ಚಿನ ಅನುದಾನ ತರಲು ಸಾಧ್ಯ. ಈ ಹಿನ್ನಲೆಯಲ್ಲಿ ಮತ ನೀಡಿ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.
    ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್, ತಾಲೂಕು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಗರ ಯುವ ಘಟಕದ ಜಿ. ವಿನೋದ್‌ಕುಮಾರ್, ಗ್ರಾಮಾಂತರ ಯುವ ಘಟಕದ ಅಧ್ಯಕ್ಷ ಆಫ್ತಾಬ್ ಅಹಮದ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ಮುಖಂಡರಾದ  ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪ್ರಮುಖರಾದ ಬಿ.ಕೆ ಮೋಹನ್, ಬಿ.ಟಿ ನಾಗರಾಜ್, ಕೆ. ರಂಗನಾಥ್, ಶಾಂತವೀರನಾಯ್ಕ, ರವಿಕುಮಾರ್, ಇಸ್ಮಾಯಿಲ್ ಖಾನ್, ಟಿಪ್ಪುಸುಲ್ತಾನ್, ಮಣಿ ಎಎನ್‌ಎಸ್, ಗಂಗಾಧರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ನಗರಸಭೆ ಮತ್ತು ಪಂಚಾಯಿತಿಗಳ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.