Wednesday, December 1, 2021

ಕನ್ನಡ ನಾಡಿನ ಇತಿಹಾಸ ಅರಿತುಕೊಳ್ಳದ ಹೊರತು ಭಾಷೆಯ ಮಹತ್ವ ತಿಳಿಯದು : ಡಾ. ಎಚ್.ವಿ ನಾಗರಾಜ್


ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಮಹಿಳಾ ಸೇವಾ ಸಮಾಜದವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭದ್ರಾವತಿ, ಡಿ. ೧: ಕನ್ನಡ ನಾಡಿನ ಇತಿಹಾಸ ಅರಿತುಕೊಂಡಾಗ ಮಾತ್ರ ಭಾಷೆಯ ಮಹತ್ವ ತಿಳಿದುಕೊಳ್ಳಲು ಸಾಧ್ಯ ಎಂದು ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ. ಎಚ್.ವಿ ನಾಗರಾಜ್ ಹೇಳಿದರು.
    ಅವರು ಹಳೇನಗರ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಮಹಿಳಾ ಸೇವಾ ಸಮಾಜದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಇತಿಹಾಸವನ್ನು ತಿಳಿಯದಿದ್ದರೆ ಇತಿಹಾಸವನ್ನು ನಿರ್ಮಿಸಲು ಸಾಧ್ಯವಿಲ್ಲ. ಕನ್ನಡ ಭಾಷೆಯ ಬೆಳೆವಣಿಗೆಯಲ್ಲಿ ನಾಡಿನ ವಿದ್ವಾಸಂರು, ಇತಿಹಾಸಕಾರರು, ಲೇಖಕರುಗಳ ಶ್ರಮವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕೆಂದರು.
    ಜಾಗತೀಕರಣದ ಪ್ರಭಾವ ಎಲ್ಲಾ ಭಾಷೆಗಳ ಮೇಲೂ ತನ್ನ ಕರಿನೆರಳನ್ನು ಬೀರಿದೆ. ಕಾರ್ಪೋರೇಟ್ ಸಂಸ್ಕೃತಿ ಭಾಷೆಗೆ ಧಕ್ಕೆಯನ್ನುಂಟು ಮಾಡಿದ್ದು, ಇದರ ಪರಿಣಾಮದಿಂದಾಗಿ ಭಾಷೆಯ ಮೌಲ್ಯ ಕಡಿಮೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಸ್ತುತ ಕನ್ನಡದಲ್ಲಿ ಉತ್ತಮ ಸಾಹಿತ್ಯ ಲೇಖನಗಳು ಹೊರಬರುತ್ತಿಲ್ಲ. ಬೇರೆ ಭಾಷೆಗಳ ಸಾಹಿತ್ಯಗಳು ಕನ್ನಡ ಭಾಷೆಗೆ ಭಾಷಾಂತರವಾಗಬೇಕಿದೆ. ಇಂತಹ ಸಂದರ್ಭದಲ್ಲಿ ಸ್ಪ್ಪರ್ಧತ್ಮಕವಾಗಿ ಭಾಷೆಯನ್ನು ಬೆಳೆಸಬೇಕಿದೆ. ಅಂದು ಕನ್ನಡ ಏಕೀಕರಣಕ್ಕಾಗಿ ಹೋರಾಡಿದ ನಾವು ಇಂದು ಅದೇ ಕನ್ನಡ ಭಾಷೆಯ ಉಳಿವಿಗಾಗಿ, ಬೆಳವಣಿಗೆಗಾಗಿ ಹೋರಾಟ ಮಾಡಬೇಕಾದಂತಹ ಅನಿವಾರ್ಯತೆ ಎದುರಾಗಿದೆ ಎಂದರು.  
    ಕನ್ನಡ ಭಾಷೆ ಉಳಿವು, ಬೆಳವಣಿಗೆಗಾಗಿ ರಾಜ್ಯ ಸರ್ಕಾರ ಸುಮಾರು ೨೦೦ಕ್ಕೂ ಹೆಚ್ಚಿನ ಆದೇಶಗಳನ್ನು ಹೊರಡಿಸಿದೆ. ಆದರೆ ಜನರು ಸ್ವ ಇಚ್ಚೆಯಿಂದ ಭಾಷೆಯನ್ನು ಬಳಸುವಲ್ಲಿ ಪಾಲ್ಗೊಳ್ಳದ ಹೊರತು ಭಾಷೆಯ ಬೆಳವಣಿಗೆ ಅಸಾಧ್ಯ ಎಂದರು.
    ರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕೃತೆ ಅನ್ನಪೂರ್ಣ ಸತೀಶ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
    ಆರಂಭದಲ್ಲಿ ಪುಟಾಣಿ ಮಕ್ಕಳಾದ ಬಿ.ಸಿ ಶಾನ್ವಿರಾವ್, ಬಿ.ಜೆ ರೊಚನಾರಾವ್, ಬಿ.ಜೆ ಕಾಶ್ವಿರಾವ್, ಸಾನ್ವಿ, ಆರೂಷ್ ಹುಲುಮಂಡೇರಿ, ಪಿ. ಧ್ಯಾನ್, ಮೊನಾಲ್ ಕೆ ಗೌಡ, ಕೃತಿ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷೆ ಹೇಮಾವತಿ ವಿಶ್ವನಾಥರಾವ್ ಅಧ್ಯಕ್ಷತೆ ವಹಿಸಿದ್ದರು.  ಕಮಲ ಕುಮಾರಿ, ಲತಾ ಗೋವಿಂದ ಪ್ರಾರ್ಥಿಸಿದರು.  ಶೋಭಾ ಗಂಗರಾಜ್ ಸ್ವಾಗತಿಸಿ ಶಾರದ ಶ್ರೀನಿವಾಸ್ ಅತಿಥಿ ಪರಿಚಯ ಮಾಡಿಕೊಟ್ಟರು. ಜಯಂತಿ ನಾಗರಾಜ್ ಶೇಟ್ ಕಾರ್ಯಕ್ರಮ ನಿರೂಪಿಸಿದರು. ಕಮಲ ಕುಮಾರಿ ವಂದಿಸಿದರು.  

ಡಿ.೨ರಂದು ವಿದ್ಯುತ್ ವ್ಯತ್ಯಯ

ಭದ್ರಾವತಿ, ಡಿ. ೧: ಮೆಸ್ಕಾಂ ಕೂಡ್ಲಿಗೆರೆ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿ ಕೊಂಡಿರುವುದರಿಂದ ನ.೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
     ಬದನೆಹಾಳು, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದ ನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ,  ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಬಿಳಚಿ ತಿಮ್ಲಾಪುರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ಕಟ್ಟಡ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷ ನಾಗರಾಜ್ ನಿಧನ


ನಾಗರಾಜ್
    ಭದ್ರಾವತಿ, ಡಿ. ೧: ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ಮಾಜಿ ಅಧ್ಯಕ್ಷ, ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ ನಾಗರಾಜ್(೬೫) ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರನನ್ನು ಹೊಂದಿದ್ದರು. ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಮೀಪದಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಹಲವಾರು ವರ್ಷಗಳಿಂದ ಯೂನಿಯನ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
    ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಜೊತೆಗೆ ಮಾದರಿ ಸಂಘಟನೆಯಾಗಿ ಯೂನಿಯನ್ ಮುನ್ನಡೆಸಿಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದರು.  ಇವರ ನಿಧನಕ್ಕೆ ಯೂನಿಯನ್ ಜಿಲ್ಲಾ ಹಾಗು ತಾಲೂಕು     ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ಆರ್. ನಾರಾಯಣಸ್ವಾಮಿ ನಾಯ್ಡು


ಆರ್. ನಾರಾಯಣಸ್ವಾಮಿ

    ಭದ್ರಾವತಿ, ಡಿ. ೧: ನಗರದ ನಿವಾಸಿ, ಕೃಷಿಕ ಹಾಗು ಆಲೆಮನೆ ಮಾಲೀಕ ಆರ್. ನಾರಾಯಣಸ್ವಾಮಿ ನಾಯ್ಡು(೬೯) ನಿಧನ ಹೊಂದಿದರು.
    ಕಬ್ಬಿನ ಗಾಣ ಹೊಂದಿರುವ ರೈತರ ಸಹಕಾರ ಸಂಘದ ಪ್ರಧಾನ ಕಾರ್ಯದರ್ಶಿ, ಪುತ್ರ ಎನ್. ಶ್ರೀನಿವಾಸ್ ಹಾಗು ಪತ್ನಿ ಮತ್ತು ಮೂವರು ಪುತ್ರಿಯರನ್ನು ಹೊಂದಿದ್ದರು. ನಾಯ್ಡು ಅವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿ ನೆರವೇರಿಸಲಾಯಿತು.
    ಇವರ ನಿಧನಕ್ಕೆ ಆಲೆಮನೆ ಮಾಲೀಕರು ಹಾಗು ನಾಯ್ಡು ಸಮಾಜದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Tuesday, November 30, 2021

ಛಲವಾದಿ ಮಹಾಸಭಾ ವತಿಯಿಂದ ಸಂವಿಧಾನ ದಿನ ಆಚರಣೆ


ಭದ್ರಾವತಿ ನಗರಸಭೆ ೨೫ನೇ ವಾರ್ಡ್ ವ್ಯಾಪ್ತಿಯ ಹುಡ್ಕೋ ಕಾಲೋನಿ ಮಾರುಕಟ್ಟೆ ಸಂಕೀರ್ಣದಲ್ಲಿರುವ ತಾಲೂಕು ಛಲವಾದಿ ಮಹಾಸಭಾ ಸಂಘದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಹಾಗೂ ಗೌತಮ ಬುದ್ಧನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸಂವಿಧಾನ ಪೀಠಿಕೆ ವಾಚಿಸಲಾಯಿತು.
    ಭದ್ರಾವತಿ, ನ. ೩೦: ತಾಲೂಕು ಛಲವಾದಿ ಮಹಾಸಭಾ ವತಿಯಿಂದ ವಿಶೇಷವಾಗಿ ಸಂವಿಧಾನ ದಿನ ಆಚರಿಸಲಾಯಿತು.
    ನಗರಸಭೆ ೨೫ನೇ ವಾರ್ಡ್ ವ್ಯಾಪ್ತಿಯ ಹುಡ್ಕೋ ಕಾಲೋನಿ ಮಾರುಕಟ್ಟೆ ಸಂಕೀರ್ಣದಲ್ಲಿರುವ ಸಂಘದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಹಾಗೂ ಗೌತಮ ಬುದ್ಧನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸಂವಿಧಾನ ಪೀಠಿಕೆ ವಾಚಿಸಲಾಯಿತು.
    ನ್ಯಾಯವಾದಿ ಟಿ. ಚಂದ್ರೇಗೌಡ ಸಂವಿಧಾನದ ಆಶಯ ಹಾಗು ಮಹತ್ವ ವಿವರಿಸಿದರು. ಸಮಾಜದ ಪ್ರಮುಖರಾದ ಜಯರಾಜ್ ಅಧ್ಯಕ್ಷತೆ ವಹಿಸಿದ್ದು, ಮಹಾಸಭಾ ಅಧ್ಯಕ್ಷ ಸುರೇಶ್, ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಶ್ರೀನಿವಾಸ್, ವಕೀಲೆ ವರಲಕ್ಷ್ಮೀ, ಉದ್ಯಮಿ ಎನ್. ಶ್ರೀನಿವಾಸ್, ಇಂಜಿನಿಯರ್ ಶಿವನಂಜಯ್ಯ, ಮಹೇಶ್, ಈ.ಪಿ ಬಸವರಾಜ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು:
    ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨ ಹಾಗು ಚುನಾವಣಾ ಸಾಕ್ಷರತಾ ಕ್ಲಬ್, ಶಿವಮೊಗ್ಗ ನೆಹರು ಯುವ ಕೇಂದ್ರ ಸಹಯೋಗದೊಂದಿಗೆ ೭೧ನೇ ಸಂವಿಧಾನ ದಿನ ಆಚರಿಸಲಾಯಿತು.
    ನೆಹರು ಯುವ ಕೇಂದ್ರದ ಉಲ್ಲಾಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಿವಮೊಗ್ಗ ಕಲಾ ಕಾಲೇಜಿನ ಸತ್ಯನಾರಾಯಣ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾ ಡಾ.ಎಂ.ಜಿ ಉಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು.
    ಪ್ರಾಧ್ಯಾಪಕರಾದ ಡಾ. ಬಿ.ಎಂ ನಾಸಿರ್‌ಖಾನ್, ಶಿವರುದ್ರಪ್ಪ, ಡಾ. ಆರ್. ಸೀಮಾ ಮತ್ತು ಬಿ. ಗುರುಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.




ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨ ಹಾಗು ಚುನಾವಣಾ ಸಾಕ್ಷರತಾ ಕ್ಲಬ್, ಶಿವಮೊಗ್ಗ ನೆಹರು ಯುವ ಕೇಂದ್ರ ಸಹಯೋಗದೊಂದಿಗೆ ೭೧ನೇ ಸಂವಿಧಾನ ದಿನ ಆಚರಿಸಲಾಯಿತು.

ಪೇಜಾವರ ಶ್ರೀಪಾದಂಗಳವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆಗೆ ಖಂಡನೆ

ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಮಿಸಿ ಮನವಿ


ಸಂಗೀತ ನಿರ್ದೇಶಕ ಹಂಸಲೇಖರವರು ಪೇಜಾವರ ಶ್ರೀಪಾದಂಗಳವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಅಖಿಲ ಭಾರತ ಮಾಧ್ವ ಮಹಾ ಮಂಡಳಿ ನೇತೃತ್ವದಲ್ಲಿ  ಮಂಗಳವಾರ ಭದ್ರಾವತಿಯಲ್ಲಿ ತಹಸೀಲ್ದಾರ್‌ರವರಿಗೆ ಮನವಿ ಸಲ್ಲಿಸಿದವು.
     ಭದ್ರಾವತಿ, ನ. ೩೦: ಸಂಗೀತ ನಿರ್ದೇಶಕ ಹಂಸಲೇಖರವರು ಪೇಜಾವರ ಶ್ರೀಪಾದಂಗಳವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಅಖಿಲ ಭಾರತ ಮಾಧ್ವ ಮಹಾ ಮಂಡಳಿ ನೇತೃತ್ವದಲ್ಲಿ  ಮಂಗಳವಾರ ತಹಸೀಲ್ದಾರ್‌ರವರಿಗೆ ಮನವಿ ಸಲ್ಲಿಸಿದವು.
     ಪ್ರಮುಖರು ಮಾತನಾಡಿ, ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಆಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ಮುಂಚೂಣಿಗೆ ಬಂದು ಸನಾತನ ಹಿಂದೂ ಧರ್ಮದ ಏಳಿಗೆಯ ಕಾರ್ಯವನ್ನು ಕೈಗೊಂಡಿರುತ್ತಾರೆ. ಸಮಾಜದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲು ದಲಿತ ಕೇರಿಗಳಲ್ಲಿ ಸಂಚರಿಸಿ ಧರ್ಮ ಜಾಗೃತಿ ಉಂಟು ಮಾಡುವ ಜೊತೆಗೆ ಅಸ್ಪೃಶ್ಯರು ಸಹ ಮುಖ್ಯವಾಹಿನಿಗೆ ಬರಲು ಶ್ರಮಿಸಿದ್ದ ಸಂತ ಶ್ರೇಷ್ಠರಾಗಿದ್ದಾರೆ ಎಂದರು.
    ಇಂತಹ ಮಹಾನ್ ಚೇತನ ಕುರಿತು ಹಂಸಲೇಖರವರು ಅವಹೇಳನಕಾರಿಯಾಗಿ ಮಾತನಾಡಿರುವುದು ಅಕ್ಷಮ್ಯ. ಇದರಿಂದಾಗಿ ಮಾಧ್ವ ಸಮಾಜ, ಬ್ರಾಹ್ಮಣ ಸಮಾಜ ಹಾಗು ಸಮಸ್ತ ಬಾಂಧವರ ಭಾವನೆಗಳಿಗೆ ನೋವುಂಟು ಮಾಡಿದೆ. ಇಷ್ಟೆ ಅಲ್ಲದೆ ಇತ್ತೀಚೆಗೆ ಕಿಡಿಗೇಡಿಯೋರ್ವ ಶ್ರೀಪಾದಂಗಳವರ ಭಾವಚಿತ್ರವನ್ನು ಪಾದರಕ್ಷೆಯಿಂದ ತುಳಿದು ಅಸಂಖ್ಯಾತ ಭಕ್ತರ ಭಾವನೆಗಳಿಗೆ ದುಃಖವನ್ನುಂಟು ಮಾಡಿರುತ್ತಾನೆ. ಈ ಕಿಡಿಗೇಡಿ ವಿರುದ್ಧ ವಿರುದ್ಧ ಹಾಗು ಅವಹೇಳನಕಾರಿಯಾಗಿ ಮಾತನಾಡಿರುವ ಹಂಸಲೇಖರವರ ವಿರುದ್ದ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
    ಮಾಧ್ವ ಮಹಾ ಮಂಡಳಿ, ಶ್ರೀ ಸಂಕರ್ಷಣ ಧರ್ಮ ಸಂಸ್ಥೆ, ಶ್ರೀ ಸತ್ಯಪ್ರಮೋದ ಸೇವಾ ಸಮಿತಿ, ಶ್ರೀ ಶ್ರೀನಿವಾಸ ಕಲ್ಯಾಣ ಸಮಿತಿ, ಶ್ರೀ ಹರಿದಾಸ ಭಜನಾ ಮಂಡಳಿ, ಕರಾವಳಿ ವಿಪ್ರ ಬಳಗ, ಶ್ರೀ ಗುರುರಾಜ ಸೇವಾ ಸಮಿತಿ, ಜ್ಞಾನವಾಹಿನಿ ಭಜನಾ ಮಂಡಳಿ, ಹರಿಪ್ರಿಯ ಭಜನಾ ಮಂಡಳಿ ಮತ್ತು ವಿಜಯೀಂದ್ರ ಭಕ್ತ ಮಂಡಳಿ ಪ್ರಮುಖರಾದ ವಿ. ಜಯತೀರ್ಥ, ನರಸಿಂಹಚಾರ್, ಗೋಪಾಲಚಾರ್, ಸಿ. ರಾಘವೇಂದ್ರ, ಜಿ. ರಮಾಕಾಂತ್, ಕೆ.ಆರ್ ವೆಂಕಟೇಶ್ ರಾವ್, ಎನ್. ವಂದನಾ, ಪವನ್‌ಕುಮಾರ್ ಉಡುಪ, ನಿರಂಜನಚಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು

ಬಿಳಿಕಿ ಮಠಕ್ಕೆ ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಭೇಟಿ : ಶ್ರೀಗಳಿಂದ ಆಶೀರ್ವಾದ

   
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ಭದ್ರಾವತಿ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
    ಭದ್ರಾವತಿ, ನ. ೩೦: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
    ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ(ಕಾಡಾ) ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೃಷಿಕೇಷ್ ಪೈ, ಮಹಿಳಾ ಪ್ರಮುಖರಾದ ಬಿಜೆಪಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ  ಶೋಭಾ ಪಾಟೀಲ್, ಆರ್.ಎಸ್. ಶೋಭಾ, ಮಾಲಾ ನಾಯ್ಕ್, ದೇವರಾಜ್ ಪಟೇಲ್, ಆನಂದ್, ಅವಿನಾಶ್, ಪ್ರಭಾಕರ್, ಚನ್ನೇಶ್, ಮಂಗೋಟೆ ರುದ್ರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.