Wednesday, January 5, 2022

ಸಾಮಿಲ್‌ನಲ್ಲಿ ಬೆಂಕಿ ಅವಗಡ : ಕೋಟ್ಯಾಂತರ ರು. ನಷ್ಟ

ಅಗ್ನಿಶಾಮಕ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಸುಮಾರು ೯ ಗಂಟೆ ಕಾರ್ಯಾಚರಣೆ




ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಸಾಮಿಲ್‌ನಲ್ಲಿ ರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬೆಂಕಿಯ ಜ್ವಾಲೆಗೆ ವ್ಯಾಪಿಸಿರುವುದು.
       
ಭದ್ರಾವತಿ, ಜ. ೬: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ಸಾಮಿಲ್‌ನಲ್ಲಿ ಬುಧವಾರ ರಾತ್ರಿ ಸುಮಾರು ೧೧ ಗಂಟೆ ಸಮಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಂತರ ರೂ ನಷ್ಟ ಸಂಭವಿಸಿದೆ.
     ರಾತ್ರಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಕ್ಕಪಕ್ಕದವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ಮುಟ್ಟಿಸಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ನಿರಂತರವಾಗಿ ಸುಮಾರು ೯ ಗಂಟೆ ಸಮಯ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕೋಟ್ಯಾಂತರ ರೂ ಬೆಲೆಬಾಳುವ ಮರಮುಟ್ಟುಗಳು, ಅಕ್ಕಪಕ್ಕದಲ್ಲಿರುವ ೩-೪ ಅಂಗಡಿಗಳ ಸಾಮಗ್ರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಅಲ್ಲದೆ ಸಮೀಪದಲ್ಲಿರುವ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಮಾಹಿತಿ ಇದುವರೆಗೂ ತಿಳಿದು ಬಂದಿಲ್ಲ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸೇರಿ ಸುಮಾರು ೫೦ಕ್ಕೂ ಮಂದಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಒಟ್ಟು ೯ ಅಗ್ನಿಶಾಮಕ ವಾಹನಗಳನ್ನು ಬಳಸಿಕೊಳ್ಳಲಾಗಿತ್ತು.
        ಸುರಕ್ಷಿತ ಕಾರ್ಯಾಚರಣೆ:
       ಘಟನೆ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅಗ್ನಿಶಾಮಕ ಇಲಾಖೆಯ ಶಿವಮೊಗ್ಗ ಪ್ರಾದೇಶಿಕ ಅಧಿಕಾರಿ ಲಕ್ಕಪ್ಪ, ಇಲಾಖೆಗೆ ಮಾಹಿತಿ ಬಂದ ತಕ್ಷಣ ಕಾರ್ಯಾಚರಣೆ ನಡೆಸಲಾಯಿತು. ತಕ್ಷಣ ಸ್ಥಳಕ್ಕೆ ಆಗಮಿಸಿ ಸುತ್ತಮುತ್ತಲಿನ ಮನೆಗಳಿಗೆ ಮನೆಗಳಿಗೆ ಹಾಗು ಅಂಗಡಿ ಮುಂಗಟ್ಟುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸದಂತೆ ಎಚ್ಚರವಹಿಸಲಾಯಿತು. ಬೆಂಕಿ ಕೆನ್ನಾಲಿ ಕ್ಷಣ ಕ್ಷಣಕ್ಕೂ ಹೆಚ್ಚಾದ ಹಿನ್ನಲೆಯಲ್ಲಿ ಶಿವಮೊಗ್ಗ-೨, ತರೀಕೆರೆ-೧, ಶಿಕಾರಿಪುರ-೧, ಕಡೂರು-೧ ಹಾಗು ಎಂಪಿಎಂ ಹಾಗು ವಿಐಎಸ್‌ಎಲ್ ತಲಾ ೧ ಒಟ್ಟು ೭ ಹಾಗು ಭದ್ರಾವತಿ ಆಗ್ನಿಶಾಮಕ ಠಾಣೆಯ ೨ ಅಗ್ನಿಶಾಮಕ ವಾಹನಗಳು ಸೇರಿದಂತೆ ಒಟ್ಟು ೯ ವಾಹನಗಳನ್ನು ಕಾರ್ಯಾಚರಣೆ ಬಳಸಿಕೊಳ್ಳಲಾಯಿತು.
        ಯಾವುದೇ ಪ್ರಾಣ ಹಾನಿಯಾಗದಂತೆ, ಬೆಂಕಿ ಜ್ವಾಲೆ ಹೆಚ್ಚು ವ್ಯಾಪಿಸದಂತೆ ಸುರಕ್ಷಿತವಾಗಿ ರಾತ್ರಿ ಸುಮಾರು ೧೧ ಗಂಟೆಯಿಂದ ಅವಿರತ ಪರಿಶ್ರಮದಿಂದ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯಕ್ಕೆ ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ ಎಂದರು.
           ಪರಿಹಾರ ನೀಡಿ :
        ಬೆಂಕಿ ಆವರಿಸಿಕೊಂಡಿರುವ ಬಗ್ಗೆ ರಾತ್ರಿ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಆಗಮಿಸಲಾಯಿತು. ಆದರೆ ಬರುವಷ್ಟರಲ್ಲಿ ಅಂಗಡಿಗೆ ಬೆಂಕಿ ವ್ಯಾಪಿಸಿಕೊಂಡು ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಅಲ್ಲದೆ ಪಕ್ಕದಲ್ಲಿರುವ ಆಟೋ ಮೊಬೈಲ್ಸ್, ಬ್ಯಾಟರಿ ಅಂಗಡಿ ಮತ್ತು ಡಿಜಿಟಲ್ ಫ್ಲೆಕ್ಸ್ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿಕೊಂಡು ಸಾಮಗ್ರಿ, ಪರಿಕರಗಳು ಸುಟ್ಟು ಹೋಗಿವೆ. ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಸ್ಕಂದ ಸ್ಯಾನಿಟರಿ ಅಂಗಡಿ ಮಾಲೀಕ ಮನೋಹರ್ ಗೌಡ ಪತ್ರಿಕೆಯೊಂದಿಗೆ ನೋವು ತೋರ್ಪಡಿಸಿಕೊಂಡು ಸರ್ಕಾರ ತಕ್ಷಣ ನಮ್ಮ ನೋವಿಗೆ ಸ್ಪಂದಿಸಿ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.
 ಇಡೀ ರಾತ್ರಿ ಮನೆಯಿಂದ ಹೊರಗಡೆ  ಉಳಿಯುವಂತಾಯಿತು :
     ಸ್ಥಳೀಯ ನಿವಾಸಿಯೊಬ್ಬರು ಮಾತನಾಡಿ, ಮನೆಯ ಹಿಂದೆ ಬೆಂಕಿ ವ್ಯಾಪಿಸಿಕೊಂಡ ಪರಿಣಾಮ ಮನೆಯರೆಲ್ಲ ಹೆದರಿಕೆಯಿಂದ ಇಡೀ ರಾತ್ರಿ ಮನೆಯಿಂದ ಹೊರಗೆ ಉಳಿಯುವಂತಾಯಿತು. ಬೆಂಕಿ ಕೆನ್ನಾಲಿಗೆಯಿಂದಾಗಿ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ಹೆಚ್ಚಿನ ಅನಾಹುತವಾಗುವ ಆತಂಕ ಕಂಡು ಬಂದಿತು. ಆಗ್ನಿಶಾಮಕ ದಳದವರು ನಿರಂತರವಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಬೆಂಕಿ ಒಂದು ಹಂತದಲ್ಲಿ ನಿಯಂತ್ರಕ್ಕೆ ಬಂದಿತು. ಆಗ ಸ್ವಲ್ಪಮಟ್ಟಿಗೆ ಆತಂಕ ದೂರವಾಯಿತು ಎಂದರು.


ಅತ್ಯಾಚಾರಕ್ಕೆ ಯತ್ನಿಸಿ ಪತಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

    ಭದ್ರಾವತಿ, ಜ. ೫: ಮಧ್ಯ ರಾತ್ರಿ ಮನೆಗೆ ನುಗ್ಗಿ ಗೃಹಿಣಿಯೊಬ್ಬಳ ಮೇಲೆ ಅತ್ಯಾಚಾರವೆಸಗಲು ಮುಂದಾಗಿದ್ದ ವ್ಯಕ್ತಿಯನ್ನು ತಡೆಯಲು ಹೋದ ಪತಿಯ ಮೇಲೆ ತೀವ್ರ ಹಲ್ಲೆ ನಡೆದು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಆರೋಪಿಗೆ ಜೀವಾವಧಿ ಹಾಗು ರು. ೨೦,೦೦೦ ದಂಡ ವಿಧಿಸಿ ತೀರ್ಪು ನೀಡಿದೆ.
ಸುಮಾರು ೩ ವರ್ಷಗಳ ಹಿಂದೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡರಹಳ್ಳಿ ಗ್ರಾಮದಲ್ಲಿ ಪ್ರಕರಣ ನಡೆದಿದ್ದು, ಇದೆ ಗ್ರಾಮದ ನಿವಾಸಿ ಮನ್ಸೂರ್ ಆಲಿಖಾನ್(೨೯) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಮೂಲತಃ ಅಸ್ಸಾಂ ರಾಜ್ಯದ ನಬೀಕುಲ್ ಇಸ್ಲಾಂ(೨೧) ಹತ್ಯೆಯಾಗಿದ್ದು, ಈ ಸಂಬಂಧ ಈತನ ಪತ್ನಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಘಟನೆ ವಿವರ:
    ನಬೀಕುಲ್ ಇಸ್ಲಾಂ ದಂಪತಿ ಗೌಡರಹಳ್ಳಿಯ ಆಲೆಮನೆಯೊಂದರಲ್ಲಿ ಉದ್ಯೋಗಕ್ಕೆ ಬಂದು ಇಲ್ಲಿಯೇ ನೆಲೆಸಿದ್ದು, ದಂಪತಿ ಮನೆಯಲ್ಲಿದ್ದಾಗ ೨೨.೦೭.೨೦೧೯ರಂದು ರಾತ್ರಿ  ಸುಮಾರು ೧.೩೦ರ ಸಮಯದಲ್ಲಿ ಮನ್ಸೂರ್ ಅಲಿಖಾನ್ ಮನೆಯ ಹಂಚನ್ನು ತೆಗೆದು ಒಳಗೆ ನುಗ್ಗಿ ನಬೀಕುಲ್ ಇಸ್ಲಾಂ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ ತಡೆಯಲು ಹೋದಾಗ ನಬೀಕುಲ್ ಇಸ್ಲಾಂ ತಲೆಗೆ ಮರದ ರೀಫರ್‌ನಿಂದ ಹೊಡೆದು ತೀವ್ರ ಗಾಯಗೊಳಿಸಿ ಪರಾರಿಯಾಗಿದ್ದನು.  ನಬೀಕುಲ್ ಇಸ್ಲಾಂ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ೨೩.೦೭.೨೦೧೯ರಂದು ಬೆಳಗಿನ ಸಮಯದಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ದೂರು ದಾಖಲಾದ ಹಿನ್ನಲೆಯಲ್ಲಿ ಅಂದಿನ ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ಕೆ.ಎಂ ಯೋಗೇಶ್ ಪ್ರಕರಣದ ತನಿಖೆ ಕೈಗೊಂಡು ಆರೋಪಿ ಮನ್ಸೂರ್ ಆಲಿಖಾನ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.
    ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಆರ್.ವೈ ಶಶಿಧರ್ ಆರೋಪ ಸಾಭೀತಾದ ಹಿನ್ನಲೆಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರು. ೨೦,೦೦೦ ದಂಡ, ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿಯಾಗಿ ೩ ವರ್ಷ ಸಾದಾ ಸಜೆ ಮತ್ತು ಕಲಂ ೪೫೦ರ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನಲೆಯಲ್ಲಿ ೩ ವರ್ಷ ಕಠಿಣ ಸಜೆ ಮತ್ತು ರು. ೧೦,೦೦೦ ದಂಡ ಹಾಗು ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿಯಾಗಿ ೨ ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪಿ. ರತ್ನಮ್ಮ ವಾದ ಮಂಡಿಸಿದ್ದರು.

ನೂತನ ದಂಪತಿಗೆ ಶುಭ ಹಾರೈಸಿದ ಶಾಸಕ ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಜರುಗಿದ ಆಕ್ಷರತೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ನಗರದ ಅನೇಕ ಗಣ್ಯರು ಜಹೈನುಲ್ ಅಬಿದ್(ಎಬಿಡಿ) ನೂತನ ದಂಪತಿಗೆ ಶುಭ ಹಾರೈಸಿದರು.
    ಭದ್ರಾವತಿ, ಜ. ೫: ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಸಿ.ಎನ್ ರಸ್ತೆಯ, ಎ.ಎಸ್ ಫರ್ನಿಚರ್ ಅಬ್ದುಲ್ ರಶೀದ್ ಅವರ ಪುತ್ರ ಜಹೈನುಲ್ ಅಬಿದ್(ಎಬಿಡಿ) ವಿವಾಹ ಅರಕ್ಷತೆ ಬುಧವಾರ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿ ಹಜರತ್ ಸೈಯದ್ ಸಾದತ್ ಮದರಸ(ದಾರುಲುಲೂಮ್)ನಲ್ಲಿ ನಡೆಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ನಗರದ ಅನೇಕ ಗಣ್ಯರು ಪಾಲ್ಗೊಂಡು ಶುಭ ಹಾರೈಸಿದರು.
    ಅಬಿದ್ ಚಿಕ್ಕಮಗಳೂರಿನ ಅರಣ್ಯ ಗುತ್ತಿಗೆದಾರ ಪಿ.ಕೆ ಸೈಯದ್ ಆಲಿ ಅವರ ಪುತ್ರಿ ಫಾತಿಮಾ ಶಿಫಾನ ಅವರೊಂದಿಗೆ ಜ.೨ರಂದು ಚಿಕ್ಕಮಗಳೂರಿನ ಸಹಾರ ಶಾದಿ ಮಹಲ್‌ನಲ್ಲಿ ವಿವಾಹವಾಗಿದ್ದರು. ಅಬಿದ್ ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗದಲ್ಲಿ ಕೆಲವು ವರ್ಷಗಳಿಂದ ವೃತ್ತಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಜೆಎಂಎಫ್‌ಸಿ ನ್ಯಾಯಾಲಯ ಮುಂಭಾಗ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

೧೦ದಿನದಲ್ಲಿ ಸಮಸ್ಯೆ ಇತ್ಯರ್ಥ : ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿಗೆ ಭರವಸೆ


 ಕಳೆದ ಸುಮಾರು ೨-೩ ವರ್ಷಗಳಿಂದ ಭದ್ರಾವತಿ ತಾಲೂಕು ಕಛೇರಿ ರಸ್ತೆಯ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿ ರಸ್ತೆ ಅಗಲೀಕರಣ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆರೋಪಿಸಿ ಬುಧವಾರ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜ. ೫: ಕಳೆದ ಸುಮಾರು ೨-೩ ವರ್ಷಗಳಿಂದ ತಾಲೂಕು ಕಛೇರಿ ರಸ್ತೆಯ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿ ರಸ್ತೆ ಅಗಲೀಕರಣ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆರೋಪಿಸಿ ಬುಧವಾರ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ರಸ್ತೆ ಅಗಲೀಕರಣ ಕಾರ್ಯ ಅಪೂರ್ಣಗೊಳಿಸಲಾಗಿದ್ದು, ಈಗಾಗಲೇ ತಾಲೂಕು ಕಛೇರಿವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಆದರೆ ನ್ಯಾಯಾಲಯದ ಮುಂಭಾಗದಲ್ಲಿ ಅಗಲೀಕರಣ ಕಾರ್ಯ ಕೈಗೊಂಡಿಲ್ಲ. ಇದರಿಂದಾಗಿ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ, ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ತೊಂದರೆಯಾಗಿದೆ. ಅಲ್ಲದೆ ಪ್ರತಿದಿನ ಹಲವಾರು ಅಪಘಾತಗಳು ಸಂಭವಿಸುತ್ತಿವೆ. ಈ  ಹಿನ್ನಲೆಯಲ್ಲಿ ತಕ್ಷಣ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
    ಈ ಸಂಬಂಧ ಈಗಾಗಲೇ ಹಲವಾರು ಬಾರಿ ಹೋರಾಟ ನಡೆಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಹ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ ಅಗಲೀಕರಣ ಕಾರ್ಯದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅಲ್ಲದೆ ಅಧಿಕಾರಿಗಳು ನಿರ್ಲಕ್ಷ್ಯತನದಿಂದ ವರ್ತಿಸುತ್ತಿದ್ದಾರೆಂದು ಆರೋಪಿಸಲಾಯಿತು.
    ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಜಗದೀಶ್ ಮತ್ತು ಸಹಾಯಕ ಅಭಿಯಂತರರಾದ ಭರ್ಮಪ್ಪ ಮತ್ತು ಸಂಪತ್ ಎದುರಾಗಿರುವ ಸಮಸ್ಯೆಗಳನ್ನು ವಿವರಿಸಿ ಶೀಘ್ರದಲ್ಲಿಯೇ ಕಾಮಗಾರಿ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು ಬಂದು ಸ್ಪಷ್ಟನೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುವರೆಸುವುದಾಗಿ ಎಚ್ಚರಿಸಿದರು.
    ಎ.ಸಿ ಪತ್ರ ರವಾನೆ:
    ಪ್ರತಿಭಟನಾ ಸ್ಥಳಕ್ಕೆ ಆಗಮಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿಗಳು ಲೋಕೋಪಯೋಗಿ ಇಲಾಖೆ ವಿಶೇಷ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಲ್ಲಿಸಿರುವ ವರದಿಯನ್ನು ಕಳುಹಿಸಿಕೊಟ್ಟಿದ್ದು, ನ್ಯಾಯಾಲಯದ ಮುಂಭಾಗದಲ್ಲಿರುವ ಖಾಸಗಿ ಸ್ವತ್ತುಗಳ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳದ ಕಾರಣ ಅಗಲೀಕರಣ ಕಾರ್ಯ ಕೈಗೊಂಡಿಲ್ಲ ಎಂದು ಪತ್ರದಲ್ಲಿ ಸ್ಪಷ್ಟಡಿಸಿದ್ದಾರೆ.
    ಈ ನಡುವೆ ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದ ಇಲಾಖೆ ಅಧಿಕಾರಿಗಳು ಮುಂದಿನ ೧೦ ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
    ಸಮಿತಿ ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಬಾಲಕೃಷ್ಣ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಪ್ರಗತಿಪರ ಸಂಘಟನೆಯ ಸುರೇಶ್, ಹಿರಿಯ ಕಾಂಗ್ರೆಸ್ ಮುಖಂಡ ಟಿ.ವಿ ಗೋವಿಂದಸ್ವಾಮಿ, ನಗರಸಭಾ ಸದಸ್ಯ ಕಾಂತರಾಜ್, ಪ್ರಮುಖರಾದ ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್, ಡಿಎಸ್‌ಎಸ್ ಮುಖಂಡರಾದ ಚಿನ್ನಯ್ಯ, ಕೆ. ರಂಗನಾಥ್, ಕೆ. ಮಂಜುನಾಥ್, ವಿಲ್ಸನ್ ಬಾಬು, ಕೃಷ್ಣನಾಯ್ಕ, ಅಂತೋಣಿ ವಿಲ್ಸನ್, ಬಿ. ಗಂಗಾಧರ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tuesday, January 4, 2022

ಎಎಪಿ ಪುನರ್ ಸಂಘಟನೆ : ಹಂಗಾಮಿ ಸಮಿತಿ ರಚನೆ

ಸಂಚಾಲಕಾಗಿ ಅಬ್ದುಲ್ ಖದೀರ್ ನೇಮಕ

ಭದ್ರಾವತಿಯಲ್ಲಿ ಜರುಗಿದ ಆಮ್ ಆದ್ಮಿ ಪಾರ್ಟಿ ನಗರ ಕಾರ್ಯಕರ್ತರ ಸಭೆಯಲ್ಲಿ ನೂತನ ಸಂಘಟನಾ ಸಂಚಾಲಕ ಮನೋಹರ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜ. ೪: ದೆಹಲಿ ಮೂಲಕ ಹಂತ ಹಂತವಾಗಿ ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸಿಕೊಳ್ಳುತ್ತಿರುವ ಆಮ್ ಆದ್ಮಿ ಪಾರ್ಟಿ ಇದೀಗ ತಾಲೂಕಿನಲ್ಲಿ ಪಕ್ಷವನ್ನು ಪುನರ್ ಸಂಘಟಿಸಲು ಮುಂದಾಗಿದ್ದು, ಪ್ರಸ್ತುತ ೫ ಜನರ ನೂತನ ಹಂಗಾಮಿ ಸಮಿತಿ ರಚಿಸಲಾಗಿದೆ.
    ಜಿಲ್ಲಾ ಸಂಘಟನಾ ಸಂಚಾಲಕ ಮನೋಹರ ಗೌಡ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ನಗರ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಹಿರಿಯರಾದ ಪರಮೇಶ್ವರಚಾರ್, ಎಚ್. ರವಿಕುಮಾರ್, ಪೀಟರ್, ರೇಷ್ಮಬಾನು ಮತ್ತು ಅಬ್ದುಲ್ ಖದೀರ್ ಸೇರಿದಂತೆ ೫ ಜನರನ್ನೊಳಗೊಂಡ ಹಂಗಾಮಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅಬ್ದುಲ್ ಖದೀರ್ ಅವರನ್ನು ತಾಲೂಕು ಸಂಚಾಲಕರಾಗಿ ನೇಮಕಗೊಳಿಸಲಾಗಿದೆ.
    ಸಭೆಯಲ್ಲಿ ನೂತನ ಜಿಲ್ಲಾ ಸಂಘಟನಾ ಸಂಚಾಲಕ ಮನೋಹರ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಸುರೇಶ ಕೋಟೆಕರ್, ಅರವಿಂದ್, ಕಿರಣ್, ಲಕ್ಷ್ಮೀಶ್, ಶಶಿಧರ್, ವಿನಯ್, ರಮೇಶ್, ಬಸವಕುಮಾರ್, ಮಹಮ್ಮದ್ ಪರ್ವೀಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಿಕ್ಷಣ ಕ್ಷೇತ್ರಕ್ಕೆ ಸಾವಿತ್ರಿ ಬಾಯಿ ಪುಲೆ, ಜ್ಯೋತಿ ಬಾಪುಲೆ ಕೊಡುಗೆ ಅಪಾರ : ಜಗನ್ನಾಥ ಡಾಂಗೆ

ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಭದ್ರಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಕ್ಷರದವ್ವ ಶ್ರೀಮಾತೆ ಸಾವಿತ್ರಿ ಬಾಯಿ ಪುಲೆ ಅವರ ೧೯೧ನೇ ಜಯಂತಿ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜ. ೪: ಶಿಕ್ಷಣ ಕ್ಷೇತ್ರಕ್ಕೆ ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಅವರ ಕೊಡುಗೆ ಅಪಾರವಾಗಿದ್ದು, ಈ ದಂಪತಿ ಸಾಧನೆಯನ್ನು ಯಾರು ಮರೆಯುವಂತಿಲ್ಲ ಎಂದು ಕುವೆಂಪು ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕ ಜಗನ್ನಾಥ ಡಾಂಗೆ ಹೇಳಿದರು.
    ಅವರು ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಕ್ಷರದವ್ವ ಶ್ರೀಮಾತೆ ಸಾವಿತ್ರಿ ಬಾಯಿ ಪುಲೆ ಅವರ ೧೯೧ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಹಿಳೆಯರು ಮನೆಯಿಂದ ಹೊರಬರದಿರುವಂತಹ ಕಾಲಘಟ್ಟದಲ್ಲಿ ಶಿಕ್ಷಣವನ್ನು ಕಲಿತು ಶಿಕ್ಷಣದೊಂದಿಗೆ ಜ್ಞಾನದ ಮಹತ್ವವನ್ನು ತಿಳಿಸಿಕೊಟ್ಟ ಮೊದಲ ಮಹಿಳೆ ಸಾವಿತ್ರಿ ಬಾಯಿ ಪುಲೆ ಎಂಬುದನ್ನು ಎಲ್ಲರೂ ನೆನಪಿನಲ್ಲಿಟ್ಟುಕೊಳ್ಳಬೇಕು.
    ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಇಬ್ಬರು ಸಹ ತಮ್ಮ ಬದುಕನ್ನು ಕೇವಲ ಶಿಕ್ಷಣಕ್ಕೆ ಮೀಸಲಿಡದೆ ಜಾತಿ, ಲಿಂಗ ತಾರತಮ್ಯ ಹಾಗು ಅನಿಷ್ಟ ಪದ್ದತಿಗಳ ನಿರ್ಮೂಲನೆ ಸೇರಿದಂತೆ ಸಾಮಾಜಿಕ ಸುಧಾರಣೆಗಾಗಿ ಹೋರಾಟ ನಡೆಸಿರುವುದು ವಿಶೇಷವಾಗಿದೆ. ಪ್ರಸ್ತುತ ಈ ದಂಪತಿಯ ಆದರ್ಶತನವನ್ನು ಸಮಾಜದ ಎಲ್ಲರಿಗೂ ಮೈಗೂಡಿಸಿಕೊಳ್ಳಬೇಕಾಗಿದೆ. ಆಗ ಮಾತ್ರ ಇವರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.
    ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ವಿಶೇಷವಾಗಿ ಸ್ಮರಿಸಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಡಿಎಸ್‌ಎಸ್  ರಾಜ್ಯ ಖಜಾಂಚಿ ಸತ್ಯ, ಜಿಲ್ಲಾ ಸಂಚಾಲಕ ಚಿನ್ನಯ್ಯ ಸೇರಿದಂತೆ ಇನ್ನಿತರರು ಮಾತನಾಡಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ದಲಿತ ನೌಕರರ ಒಕ್ಕೂಟದ ಕಾರ್ಯಾಧ್ಯಕ್ಷ ಸಿ. ಜಯಪ್ಪ, ಡಿಎಸ್‌ಎಸ್ ತಾಲೂಕು ಸಂಚಾಲಕ ಕೆ. ರಂಗನಾಥ್, ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಒಕ್ಕೂಟದ ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಿದ್ದರು. ಈಶ್ವರಪ್ಪ  ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಎ. ತಿಪ್ಪೇಸ್ವಾಮಿ ಸೇರಿದಂತೆ ದಲಿತ ನೌಕರರು, ಮಹಿಳೆಯರು ಪಾಲ್ಗೊಂಡಿದ್ದರು.

ಡಿ.ಕೆ ಸುರೇಶ್ ವಿರುದ್ಧ ಬಿಜೆಪಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಗೂಂಡಾಗಿರಿ ವರ್ತನೆ ಖಂಡಿಸಿ ಮಂಗಳವಾರ ಭದ್ರಾವತಿ ಮಾಧವಚಾರ್ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜ. ೪: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಗೂಂಡಾಗಿರಿ ವರ್ತನೆ ಖಂಡಿಸಿ ಮಂಗಳವಾರ ನಗರದ ಮಾಧವಚಾರ್ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಲಾಯಿತು.
    ಡಿ.ಕೆ ಸುರೇಶ್ ಗೂಂಡಾಗಿರಿತನದಿಂದ ವರ್ತಿಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ತಕ್ಷಣ ನಾಡಿನ ಜನತೆಗೆ ಕ್ಷಮೆಯಾಚಿಸಬೇಕು. ಅಲ್ಲದೆ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವ ಜೊತೆಗೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಲಾಯಿತು.


    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವ ವಹಿಸಿದ್ದರು.  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಬಿ.ಕೆ.ಶ್ರೀನಾಥ್, ಜಿ. ಧರ್ಮಪ್ರಸಾದ್, ಭೋವಿ ನಿಗಮದ ನಿರ್ದೇಶಕ ಜಿ. ಆನಂದ ಕುಮಾರ್, ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ನಗರಸಭಾ ಸದಸ್ಯರಾದ ವಿ. ಕದಿರೇಶ್, ಅನುಪಮ ಚನ್ನೆಶ್, ಮುಖಂಡರಾದ , ಎಂ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಚನ್ನೆಶ್, ಯುವ ಮೋರ್ಚಾ ಅಧ್ಯಕ್ಷ ವಿಜಯ್‌ರಾಜ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ  ಆರ್.ಎಸ್. ಶೋಭಾ, ಮಹಿಳಾ ಮೋರ್ಚಾಅಧ್ಯಕ್ಷೆ ಶೋಭಾ ಪಾಟೀಲ್, ಕಾರ್ಯದರ್ಶಿ ಮಂಜುಳ, ಸುಲೋಚನಾ ಪ್ರಕಾಶ್, ಅನ್ನಪೂರ್ಣ ಸಾವಂತ್, ಹೇಮಾವತಿ ಕುಟ್ಟಿ, ಉಷಾ, ಕರುಣಾಕರ, ಆಟೋ ಮೂರ್ತಿ, ಚಂದ್ರು, ಓಬಿಸಿ ಅಧ್ಯಕ್ಷ ಸುಬ್ರಮಣಿ, ಕೆ.ಆರ್ ಸತೀಶ್, ರಾಮನಾಥ ಬರ್ಗೆ, ಬಿ.ಎಸ್ ಶ್ರೀನಾಥ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
    ಪ್ರತಿಭಟನೆಯಿಂದಾಗಿ ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ವಾಹನ ದಟ್ಟಣೆ ಅಧಿಕಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಗೊಂಡಿತ್ತು.