Tuesday, January 11, 2022

ಲಾಡ್ಜ್‌ಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಪ್ರಕರಣ ದಾಖಲು : ಓರ್ವನ ಬಂಧನ


    ಭದ್ರಾವತಿ, ಜ. ೧೧:  ಅಪ್ರಾಪ್ತ ಬಾಲಕಿಯೊಬ್ಬಳನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎಂಬ ದೂರು ನಗರದ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
    ಕಳೆದ ೨ ದಿನಗಳ ಹಿಂದೆ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಿದಿಗೆ ನಿವಾಸಿ ಉಮೇಶ್(೨೮) ಎಂಬಾತನನ್ನು ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ.
    ಬಾರಂದೂರು ಗ್ರಾಮದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರ ಸುಮಾರು ೧೫ ವರ್ಷದ ಪುತ್ರಿಯನ್ನು ಶಾಲೆಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ತಡೆದು ತರೀಕೆರೆಗೆ ಕರೆದೊಯ್ದು ಲಾಡ್ಜ್ ಒಂದರಲ್ಲಿ ಅತ್ಯಾಚಾರ ನಡೆಸಲಾಗಿದ್ದು, ಅಲ್ಲದೆ ಈ ವಿಚಾರ ಯಾರಿಗಾದರೂ ತಿಳಿಸಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಈ ನಡುವೆ ಪೊಲೀಸರು ಬಾಲಕಿಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಪ್ತ ಸಮಾಲೋಚನೆಗೆ ಒಳಪಡಿಸಿದ್ದು, ಬಾಲಕಿಯಿಂದ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಲೋಕೋಪಯೋಗಿ ಇಲಾಖೆ ಕಛೇರಿಯಲ್ಲಿ ಸುಮಾರು ೭ ಮಂದಿಗೆ ಕೋವಿಡ್ ಸೋಂಕು

ನಗರಸಭೆ ವತಿಯಿಂದ ಸೋಂಕು ನಿವಾರಕ ಸಿಂಪಡಣೆ


    ಭದ್ರಾವತಿ, ಜ. ೧೧: ನಗರದ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ತಿಳಿದು ಬಂದಿದೆ.
    ಕಛೇರಿಯಲ್ಲಿ ಕಾರ್ಯಪಾಲಕ ಇಂಜಿನಿಯರ್(ಎಇಇ) ಸೇರಿದಂತೆ ಸುಮಾರು ೧೧ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಪೈಕಿ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ೭ ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
    ಕಛೇರಿ ಸಿಬ್ಬಂದಿಗಳಲ್ಲಿ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಮಂಗಳವಾರ ಮಧ್ಯಾಹ್ನ ಸೋಂಕು ನಿವಾರಕ ಸಿಂಪಡಿಸಲಾಗಿದೆ. ಒಂದು ದಿನದ ಮಟ್ಟಿಗೆ ಕಛೇರಿಯನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಎಸಿಬಿ ಬಲೆಗೆ ಬಿಳಿಕಿ ಗ್ರಾ.ಪಂ. ಪಿಡಿಓ : ರು.೭೦ ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಡಿ. ಕೇಶವಮೂರ್ತಿ

ಭದ್ರಾವತಿ ಬಿಳಿಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ. ಕೇಶವಮೂರ್ತಿ
    ಭದ್ರಾವತಿ ಜ. ೧೧: ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಓ)ಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಿಕ್ಕಿಬಿದ್ದಿರುವ ಘಟನೆ ತಾಲೂಕಿನ ಬಿಳಕಿ ಗ್ರಾಮ ಪಂಚಾಯತ್‌ಯಲ್ಲಿ ಮಂಗಳವಾರ ನಡೆದಿದೆ.
    ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಕೇಶವಮೂರ್ತಿ ಎಸಿಬಿ ಬಲೆಗೆ  ಬಿದ್ದಿದ್ದು, ಜಮೀನಿಗೆ ಸಂಬಂಧಿಸಿದಂತೆ ಎನ್‌ಓಸಿ ನೀಡಲು ರು. ೧ ಲಕ್ಷ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿಂದೆ ರು. ೫ ಸಾವಿರ ಲಂಚ ಪಡೆದುಕೊಂಡಿದ್ದು, ಉಳಿದಂತೆ ರು. ೭೦ ಸಾವಿರ ಲಂಚ ಸ್ವೀಕರಿಸುವಾಗ ಶಿವಮೊಗ್ಗ ಡಿವೈಎಸ್ಪಿ ಲೋಕೇಶ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  
    ಕೇಶವಮೂರ್ತಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ದಾಳಿಯಲ್ಲಿ ಇನ್ಸ್‌ಪೆಕ್ಟರ್ ವಸಂತ್ ಕುಮಾರ್, ಪಿಎಸ್‌ಐ ಇಮ್ರಾನ್ ಬೇಗ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಮುಗಿಯದ ಶರಾವತಿ ಮುಳುಗಡೆ ಸಂತ್ರಸ್ಥರ ಬವಣೆ : ಜಮೀನು ಮಂಜೂರಾದರೂ ಸ್ವಾಧೀನಕ್ಕೆ ಬಂದಿಲ್ಲ

ಜಮೀನು ಬಿಟ್ಟುಕೊಡಲು ಅರಣ್ಯ ಇಲಾಖೆ ಮೀನಾಮೀಷ : ಹೋರಾಟಕ್ಕೆ ಮುಂದಾದ ಕುಟುಂಬಸ್ಥರು

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಹೋಬಳಿ, ಎಮ್ಮೆದೊಡ್ಡಿ ಗ್ರಾಮದ ಸರ್ವೆ ನಂ.೮ರಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರಾದ ಸೀತಾರಾಮ್ ಬಿನ್ ಮಂಜಪ್ಪ ಕುಟುಂಬಸ್ಥರು ಸರ್ಕಾರದಿಂದ ತಮಗೆ ಮಂಜೂರಾಗಿರುವ ಜಮೀನು ಸ್ವಾಧೀನಕ್ಕೆ ಬಿಟ್ಟುಕೊಡಬೇಕೆಂದು ಆಗ್ರಹಿಸಿ ಅರಣ್ಯ ಇಲಾಖೆ ವಿರುದ್ಧ ಹೋರಾಟ ನಡೆಸುತ್ತಿರುವುದು.
    ಭದ್ರಾವತಿ, ಜ. ೧೧: ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಭೂಮಿಯನ್ನು ಕಳೆದಕೊಂಡ ಶರಾವತಿ ಮುಳುಗಡೆ ಸಂತ್ರಸ್ಥರು ಇಂದಿಗೂ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಸರ್ಕಾರ ಜಮೀನು ಮಂಜೂರು ಮಾಡಿದರೂ ಸಹ ಅನುಭೋಗಕ್ಕೆ ಬಂದಿಲ್ಲ. ಭವಿಷ್ಯದ ಬದುಕಿಗೆ ಎದುರು ನೋಡುತ್ತಿರುವ ಸಂತ್ರಸ್ಥರು ಇದೀಗ ವಿಧಿ ಇಲ್ಲದೆ ಹೋರಾಟದ ಮೊರೆ ಹೋಗಬೇಕಾಗಿದೆ.
    ತಾಲೂಕಿನ ಕೂಡ್ಲಿಗೆರೆ ಹೋಬಳಿ, ಎಮ್ಮೆದೊಡ್ಡಿ ಗ್ರಾಮದ ಸರ್ವೆ ನಂ.೮ರಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರಾದ ಸೀತಾರಾಮ್ ಬಿನ್ ಮಂಜಪ್ಪ ಎಂಬುವರಿಗೆ ೪ ಎಕರೆ ಜಮೀನು ಸರ್ಕಾರದಿಂದ ೨೦೧೮ರಲ್ಲಿ ಮಂಜೂರಾಗಿದೆ. ಆದರೆ ಈ ಜಮೀನು ಅರಣ್ಯ ಇಲಾಖೆ ಸಂತ್ರಸ್ಥರಿಗೆ ನೀಡಲು ಮೀನಾಮೇಷ ಎಣಿಸುತ್ತಿದೆ. ಇದರಿಂದಾಗಿ ಕುಟುಂಬಸ್ಥರು ಕಂಗಲಾಗಿದ್ದು, ಜಮೀನಿನಲ್ಲಿಯೇ ಹೋರಾಟಕ್ಕೆ ಮುಂದಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಮಂಗಳವಾರ ಭೇಟಿ ನೀಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಸ್ಥಳಕ್ಕೆ ಯಾರು ಬಂದಿಲ್ಲ ಎಂದು ಸಂತ್ರಸ್ಥರು ತಮ್ಮ ಅಳಲು ತೋರ್ಪಡಿಸಿಕೊಂಡಿದ್ದಾರೆ.

ನಮ್ಮ ಕುಟುಂಬದಲ್ಲಿ ಒಟ್ಟು ೯ ಜನರಿದ್ದು, ನಮಗೆ ಇರುವುದು ಈ ಜಮೀನು ಮಾತ್ರ. ಇದನ್ನು ನಂಬಿಕೊಂಡಿರುವ ನಮನ್ನು ಇಲ್ಲಿಂದ ಉದ್ದೇಶ ಪೂರ್ವಕವಾಗಿ ಖಾಲಿ ಮಾಡಿಸುವ ಹುನ್ನಾರ ನಡೆಸಲಾಗುತ್ತಿದೆ. ಅಕ್ಕಪಕ್ಕದ ಜಮೀನಿನವರಿಗೆ ಅನ್ವಯವಾಗದ ಕಾಯ್ದೆಯನ್ನು ನಮಗೆ ಮಂಜೂರಾಗಿರುವ ಜಮೀನಿಗೆ ಮಾತ್ರ ಅರಣ್ಯ ಇಲಾಖೆಯವರು ಅನ್ವಯಿಸಲು ಮುಂದಾಗುತ್ತಿದ್ದು, ಜಮೀನು ಕಸಿದು ಕೊಳ್ಳಲು ಕುತಂತ್ರ ನಡೆಸಲಾಗುತ್ತಿದೆ.
                                                                                     - ಮಹಾದೇವಪ್ಪ, ಸಂತ್ರಸ್ಥ ಕುಟುಂಬದ ಹಿರಿಯ ಪುತ್ರ
    ನಮಗೆ ಮಂಜೂರಾಗಿರುವ ೪ ಎಕೆರೆ ಜಮೀನಿನಲ್ಲಿ ಅಕೇಶಿಯಾ ಮರಗಳು ಬೆಳೆದಿದ್ದು, ಅರಣ್ಯ ಇಲಾಖೆಯವರು ಈ ಜಾಗ ದೊಡ್ಡೇರಿ ಮೈನರ್ ಫಾರೆಸ್ಟ್‌ಗೆ ಸೇರಿದೆ ಎಂದು ಹೇಳುವ ಮೂಲಕ ಸ್ವಾಧೀನಕ್ಕೆ ಕೊಡಲು ಮೀನಾಮೇಷ ಮಾಡುತ್ತಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.  ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಫೆಬ್ರವರಿ ೨೦೧೯ರಂದು ಅರಣ್ಯ ಇಲಾಖೆ ಉಪಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಸೀತಾರಾಮ್ ಬಿನ್ ಮಂಜಪ್ಪ ಅವರಿಗೆ ಮಂಜೂರಾಗಿರುವ ಜಮೀನು ಸರ್ಕಾರಿ ಬಂಜರು ಜಮೀನಾಗಿದೆ. ಅಲ್ಲದೆ ಮಂಜೂರಾತಿರಾಗಿರುವುದು ಖಾತೆ ಪಹಣಿಯಲ್ಲಿ ಸಹ ದಾಖಲಾಗಿದೆ ಎಂದು ತಿಳಿಸಿದ್ದಾರೆ.
    ಈ ಹಿನ್ನಲೆಯಲ್ಲಿ ಅರಣ್ಯ ಸಂರಕ್ಷಣಾಧಿಕಾರಿಗಳು ತಹಸೀಲ್ದಾರ್‌ಗೆ ಪತ್ರ ಬರೆದಿದ್ದು, ಸರ್ವೆ ನಂ.೮ರ ಒಟ್ಟು ೪೦೪.೩೪ ಎಕರೆಯಲ್ಲಿ ೩೨೫ ಎಕರೆ ದೊಡ್ಡೇರಿ ಮೈನರ್  ಫಾರಸ್ಟ್‌ಗೆ ಒಳಪಟ್ಟಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಬಂಜರು ಜಮೀನು ಮತ್ತು ಮೈನರ್ ಫಾರೆಸ್ಟ್ ಎರಡನ್ನು ಪ್ರತ್ಯೇಕಿಸಬೇಕಿದ್ದು, ಸರ್ವೆ ಕಾರ್ಯ ನಡೆಸುವಂತೆ ತಿಳಿಸಿದ್ದಾರೆ. ಇದರಂತೆ ತಹಸೀಲ್ದಾರ್‌ರವರು ಸರ್ವೆ ನಡೆಸಿದ್ದು, ಮಂಜೂರಾಗಿರುವ ಜಾಗ ಅರಣ್ಯ ಇಲಾಖೆಗೆ ಸೇರಿಲ್ಲ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿಗಳು ಹಿಂಬರಹ ನೀಡಿದ್ದಾರೆ. ಆದರೂ ಸಹ ಜಮೀನು ಬಿಟ್ಟುಕೊಡಲು ಅರಣ್ಯ ಇಲಾಖೆ ಮೀನಾಮೇಷ ಎಣಿಸುತ್ತಿದೆ. ಈ ಹಿನ್ನಲೆಯಲ್ಲಿ ವಿಧಿ ಇಲ್ಲದೆ ಹೋರಾಟ ನಡೆಸಬೇಕಾಗಿದೆ ಎಂದರು.
    ಸೀತಾರಾಮ್ ಅವರ ಪತ್ನಿ ಲಲಿತಮ್ಮ ಮಾತನಾಡಿ, ಈಗಾಗಲೇ ನಾವು ಎಲ್ಲವನ್ನು ಕಳೆದುಕೊಂಡಿದ್ದೇವೆ. ಸಾಲಸೋಲ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಇಡೀ ಕುಟುಂಬ ಸಂಕಷ್ಟಕ್ಕೆ ಒಳಗಾಗಿದೆ. ನಮ್ಮ ಬೇಡಿಕೆಯನ್ನು ಜಿಲ್ಲಾಧಿಕಾರಿಗಳೇ ಈಡೇರಿಸಿಕೊಡಬೇಕು. ಅವರು ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ ಎಂದರು.

Monday, January 10, 2022

ಕೋವಿಡ್-೧೯ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ

ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-೧೯ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ  ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಲಸಿಕೆ ಪಡೆದುಕೊಂಡರು.
    ಭದ್ರಾವತಿ, ಜ. ೧೦: ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ ೬೦ ವರ್ಷ ಮೇಲ್ಪಟ್ಟವರಿಗೆ ಕೋವಿಡ್-೧೯ ಬೂಸ್ಟರ್ (ಮುನ್ನಚ್ಚರಿಕೆ) ಡೋಸ್ ಲಸಿಕೆ ನೀಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಹೇಳಿದರು.
    ಅವರು ಸೋಮವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-೧೯ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ೨ನೇ ಡೋಸ್ ಲಸಿಕೆ ಪಡೆದ ೯ ತಿಂಗಳು ಅಥವಾ ೩೯ ವಾರಗಳನ್ನು ಪೂರೈಸಿರುವವರು ಮಾತ್ರ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಅರ್ಹರು. ಈ ಹಿಂದೆ ಎರಡು ಡೋಸ್‌ಗಳಲ್ಲಿ ಪಡೆದಿರುವ ಲಸಿಕೆಯನ್ನೇ ಮುನ್ನಚ್ಚರಿಕೆ ಲಸಿಕೆಯಾಗಿ ಉಚಿತವಾಗಿ ನೀಡಲಾಗುವುದು ಎಂದರು.
    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಪ್ರಕಾಶ್ ಮಾತನಾಡಿ, ಕೋವಿಡ್-೧೯ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ಬರದಂತೆ ತಡೆಗಟ್ಟಬಹುದಲ್ಲದೆ ಅದರ ತೀವ್ರತೆಯನ್ನು ಕಡಿಮೆ ಮಾಡಬಹುದಾಗಿದೆ ಎಂದರು.  
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ನಗರ ಸಭೆ ಅಧ್ಯಕ್ಷೆ ಗೀತ ರಾಜ್‌ಕುಮಾರ್ ಮಾತನಾಡಿ, ಸರ್ಕಾರ ಕಲ್ಪಿಸಿರುವ ಈ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆದುಕೊಂಡು ತಮ್ಮ ಆರೋಗ್ಯ ರಕ್ಷಿಸಿಕೊಳ್ಳಬೇಕೆಂದರು.
    ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.
    ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಟಿ ರಾಜೇಗೌಡ ನಿರೂಪಿಸಿದರು. ವಂದಿಸಿದರು. ಹಿರಿಯ ಆರೋಗ್ಯ ಸಹಾಯಕರಾದ ಆನಂದಮೂರ್ತಿ, ಬಿ.ವಿ ರೇವತಿ, ವಸಂತ, ಆಶಾ ಮೆಂಟರ್ ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರೊ. ಚಂದ್ರಶೇಖರ ಪಾಟೀಲ ನಿಧನಕ್ಕೆ ಸಂತಾಪ

ಕನ್ನಡ ಹೋರಾಟಗಾರ, ಹಿರಿಯ ಸಾಹಿತಿ, ಪ್ರೊ. ಚಂದ್ರಶೇಖರ ಪಾಟೀಲ ನಿಧನಕ್ಕೆ ಭದ್ರಾವತಿ ಜಯಶ್ರೀ ವೃತ್ತದ ಹಿರಿಯ ನಾಗರೀಕರ ತಂಗುದಾಣದಲ್ಲಿ ಸೋಮವಾರ ಸಂಜೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
    ಭದ್ರಾವತಿ, ಜ. ೧೦ : ಕನ್ನಡ ಹೋರಾಟಗಾರ, ಹಿರಿಯ ಸಾಹಿತಿ, ಪ್ರೊ. ಚಂದ್ರಶೇಖರ ಪಾಟೀಲ ನಿಧನಕ್ಕೆ ನಗರದ  ಜಯಶ್ರೀ ವೃತ್ತದ ಹಿರಿಯ ನಾಗರೀಕರ ತಂಗುದಾಣದಲ್ಲಿ ಸೋಮವಾರ ಸಂಜೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
    ಪ್ರೊ. ಚಂದ್ರಶೇಖರ ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸೂಚಿಸಿ ಮೌನಾಚರಣೆ ನಡೆಸಿ ಕನ್ನಡ ನಾಡು-ನುಡಿಗಾಗಿ ಅವರು ನಡೆಸಿದ ಹೋರಾಟ, ಭಾಷೆಯ ಮೇಲಿನ ಅಭಿಮಾನ, ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಲಾಯಿತು.
    ಕನ್ನಡ ಸಾಹಿತ್ಯ ಪರಿಷತ್ ಪ್ರಮುಖರಾದ ಎಂ.ಈ ಜಗದೀಶ್, ಸತೀಶ್, ಜಾನಪದ ಪರಿಷತ್ ಪ್ರಮುಖರಾದ ಕೆ.ಟಿ ಪ್ರಸನ್ನ, ಕನ್ನಡ ಸಾಹಿತ್ಯ ಸಾಂಸ್ಕೃತಿ ವೇದಿಕೆ ಪ್ರಮುಖರಾದ ಕೋಗಲೂರು ತಿಪ್ಪೇಸ್ವಾಮಿ, ಸುಮತಿ ಕಾರಂತ್, ಸಾಹಿತ್ಯಾಭಿಮಾನಿಗಳಾದ ಭಾಗ್ಯಮ್ಮ, ಇಂದಿರಾ, ಕೇರಳ ಸಮಾಜಂ ಪ್ರಧಾನ ಕಾರ್ಯದರ್ಶಿ ಸುರೇಶ್, ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹನುಮಂತಪ್ಪ ಸೇರಿದಂತೆ ಹಿರಿಯ ನಾಗರೀಕರು ಪಾಲ್ಗೊಂಡಿದ್ದರು.

ಯಾವುದೇ ಕಾರಣಕ್ಕೂ ಬೀದಿಬದಿ ವ್ಯಾಪಾರಿಗಳಿಗೆ ತೊಂದರೆ ಕೊಡದಿರಿ : ಬಿ.ಕೆ ಮೋಹನ್

ಭದ್ರಾವತಿ ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಗರಸಭೆ ವತಿಯಿಂದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಡೇ ನಲ್ಮ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಮತ್ತು ಪಟ್ಟಣ ವ್ಯಾಪಾರಿಗಳ ಸಮಿತಿ ಸದಸ್ಯರುಗಳಿಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಹಿರಿಯ ನಗರಸಭೆ ಸದಸ್ಯ ಬಿ.ಕೆ ಮೋಹನ್ ಮಾತನಾಡಿದರು.
    ಭದ್ರಾವತಿ, ಜ. ೧೦: ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡದ ರೀತಿಯಲ್ಲಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಅವರಿಗೆ ಸರ್ಕಾರದ ಸೌಲರ್ಭ್ಯಗಳನ್ನು ಕಲ್ಪಿಸಿಕೊಡಲು ಮುಂದಾಗಬೇಕೆಂದು ಹಿರಿಯ ನಗರಸಭಾ ಸದಸ್ಯ ಬಿ.ಕೆ ಮೋಹನ್ ಹೇಳಿದರು.
    ಅವರು ಸೋಮವಾರ ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಗರಸಭೆ ವತಿಯಿಂದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಡೇ ನಲ್ಮ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಮತ್ತು ಪಟ್ಟಣ ವ್ಯಾಪಾರಿಗಳ ಸಮಿತಿ ಸದಸ್ಯರುಗಳಿಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ಬೀದಿಬದಿ ವ್ಯಾಪಾರಿಗಳು ಬದುಕು ಸಾಗಿಸುವುದೇ ಕಷ್ಟಕರವಾಗಿದೆ.  ಈ ನಡುವೆ ಹಲವಾರು ಸಮಸ್ಯೆಗಳು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿವೆ. ಪ್ರಸ್ತುತ ಅವರಿಗೆ ಇನ್ನೂ ಹೆಚ್ಚಿನ ಅರಿವು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಅವರೊಂದಿಗೆ ನೇರವಾಗಿ ಚರ್ಚಿಸುವ ಮೂಲಕ ಅವರ ಸಮಸ್ಯೆಗಳಿಗೆ ಕಾರಣಗಳಿನ್ನು  ಕಂಡು ಕೊಳ್ಳುವ ಜೊತೆಗೆ ಯಾವುದೇ ಅಡೆತಡೆ ಇಲ್ಲದೆ ನೆಮ್ಮದಿಯಿಂದ ವ್ಯಾಪಾರ-ವಹಿವಾಟು ನಡೆಸಿಕೊಂಡು ಹೋಗುವ ವಾತಾವರಣ ನಿರ್ಮಿಸಿಕೊಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ನಡೆದುಕೊಳ್ಳಬೇಕೆಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಚನ್ನಪ್ಪ, ಪೌರಯುಕ್ತ ಕೆ. ಪರಮೇಶ್ ಸೇರಿದಂತೆ ಇನ್ನಿತರರು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಯಿತು.
    ಸದಸ್ಯರಾದ ವಿಜಯಮ್ಮ, ಸರ್ವಮಂಗಳ, ಬಸವರಾಜ ಬಿ. ಆನೇಕೊಪ್ಪ, ಉದಯಕುಮಾರ್, ಅನುಪಮ, ಅನಿತಾ, ಶಶಿಕಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಕಾರ್ಯಕ್ರಮ ನಿರೂಪಿಸಿದರು.